Updated News From Kaup

ಇನ್ನಂಜೆ : ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆ - ಖಾಸಗಿ ಜಮೀನಿನ ತಡೆಗೋಡೆ ತೆರವು

Thumbnail
Posted On: 06 Jul 2024, 10:35 PM

ಇನ್ನಂಜೆ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆಯ ತೊಂದರೆಗೆ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಉಡುಪಿ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಖಾಸಗಿ ಜಮೀನಿನಲ್ಲಿ ಹಾಕಿದ ತಡೆಗೋಡೆಯನ್ನು ತಾತ್ಕಾಲಿಕವಾಗಿ ಕಾಪು ತಹಸೀಲ್ದಾ‌ರ್ ಡಾ.ಪ್ರತಿಭಾ ಆರ್ ಇವರು ಸ್ಥಳಕ್ಕೆ ಬಂದು ತೆರವುಗೊಳಿಸಿದರು. ಮುಂದಿನ ದಿನದಲ್ಲಿ ಖಾಸಗಿ ಜಮೀನಿನವರ ಜೊತೆಗೆ ಇನ್ನಂಜೆ ಗ್ರಾಮ ಪಂಚಾಯತ್ ನಲ್ಲಿ ನ್ಯಾಯಂಗ ಸಮಿತಿ ಸಭೆಯನ್ನು ತಹಸೀಲ್ದಾರ್ ಮತ್ತು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೊತೆಗೆ ಸಭೆ ನಡೆಸಿ ಇದಕ್ಕೆ ಶಾಶ್ವತ ಪರಿಹಾರ ಮಾಡಲಾಗುವುದು ಎಂದು ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇನ್ನಂಜೆ ತಿಳಿಸಿದರು. ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿ ಸಿಲ್ವಾ, ಕಾಪು ಠಾಣಾಧಿಕಾರಿ ಖಾದ‌ರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಕಾರ್ಯದರ್ಶಿ ಚಂದ್ರಶೇಖರ್, ಕಂದಾಯಾಧಿಕಾರಿ ಶಬೀರ್, ಗ್ರಾಮ ಲೆಕ್ಕಿಗ ಅವಿನಾಶ್‌, ಇನ್ನಂಜೆ ಪಂಚಾಯತ್ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರುಗಳಾದ ಸೋನು ಪಾಂಗಾಳ, ರಾಜೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಸುರೇಶ್ ಶೆಟ್ಟಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಮಾಜಿ ಸದಸ್ಯರಾದ ನಾಗೇಶ್‌ ಭಂಡಾರಿ, ಮಹೇಂದ್ರ ಶೆಟ್ಟಿ ಪಾಂಗಾಳ ಉಪಸ್ಥಿತರಿದ್ದರು. ತಡೆಗೋಡೆ ತೆರವಿಗೆ ದಿನಕರ್ ಪಾಂಗಾಳ, ಲೋಕೇಶ್ ಸಹಕರಿಸಿದರು.

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Thumbnail
Posted On: 06 Jul 2024, 05:43 PM

ಕಾಪು : ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ ಇತರ ವಿಷಯಗಳ ಕಲಿಕೆಗೆ ಪ್ರೋತ್ಸಾಹಿಸುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಇಂತಹ ಸಹಕಾರವನ್ನು ನೀಡಿ ಎಂದು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು. ಅವರು ಶನಿವಾರ ಶಾಲಾ ಸಭಾಂಗಣದಲ್ಲಿ ಜರಗಿದ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನ್ಹಸ್ ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು. ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿದ್ಯಾಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಶಿವಣ್ಣ ಬಾಯಾರ್ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಿದರು. ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘಕ್ಕೆ ಆಯ್ಕೆಯಾದ ಪ್ರೌಢ ಮತ್ತು ಕಾಲೇಜು ವಿಭಾಗದ ಅಧ್ಯಕ್ಷೆ ಮಂಜುಳ ಶೆಟ್ಟಿ ಮತ್ತು ಪ್ರಾಥಮಿಕ ವಿಭಾಗದ ಅಧ್ಯಕ್ಷೆ ಸ್ವಾತಿ, ಆಡಳಿತಾಧಿಕಾರಿಯಾದ ಆಲ್ಬನ್ ರೊಡ್ರಿಗಸ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ನೀಲಾನಂದ್ ನಾಯ್ಕ್ ಸ್ವಾಗತಿಸಿ, ಫಲಿತಾಂಶ ವಿಶ್ಲೇಷಣೆ ಹಾಗೂ ವರದಿಯನ್ನು ವಾಚಿಸಿದರು. ಸಂಘದ ಲೆಕ್ಕಪತ್ರವನ್ನು ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ಮಂಡಿಸಿದರು. ಉಪನ್ಯಾಸಕಿ ಸುಷ್ಮಾ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಉದಯಕುಮಾರ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ ಶೆಟ್ಟಿ ವಂದಿಸಿದರು.

ನಂದಿಕೂರು ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆ : ಪ್ರತಿಭಟನೆಗೆ ನಿರ್ಧಾರ

Thumbnail
Posted On: 06 Jul 2024, 06:35 AM

ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು ತ್ತಿರುವ ಹಿನ್ನೆಲೆಯಲ್ಲಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಪ್ರತಿಭಟನೆಗೂ ಮೊದಲು ಪಲಿಮಾರು ಗ್ರಾಮ ಪಂಚಾಯಿತಿಗೆ ವಿಶೇಷ ಗ್ರಾಮಸಭೆ ಕರೆದು ಕಂಪೆನಿ ವಿರುದ್ಧ ನಿರ್ಣಯ ಕೈಗೊಳ್ಳುವ ಬಗ್ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಅದರೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಾದ ಪಲಿಮಾರು, ಪಡುಬಿದ್ರಿ, ಎಲ್ಲೂರು, ಇನ್ನಾ, ಹೆಜಮಾಡಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಗ್ರಾಮಸಭೆ ಕರೆದು ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಕಂಪೆನಿ ಎದುರು ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು. ಕಾನೂನು ಹೋರಾಟದ ಬಗ್ಗೆ ಊರಿನ ಹಿರಿಯರು, ಅನುಭವಿಗಳು, ವಕೀಲರನ್ನು ಒಳಗೊಂಡಂತೆ ಸಮಿತಿ ರಚಿಸುವುದು ಮತ್ತು ಸರಕಾರದ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಒತ್ತಡ ಹೇರುವ ಬಗ್ಗೆಯೂ ತೀರ್ಮಾನಿಸಲಾಯಿತು. ಈ ಸಂದರ್ಭ ದಿನೇಶ್ ಪಲಿಮಾರ್, ನಂದಿಕೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧ್ವರಾಯ ಭಟ್, ಪ್ರೇಮಾನಂದ ಕಲ್ಮಾಡಿ, ನವೀನ್ ಚಂದ್ರಶೆಟ್ಟಿ, ನವೀನ್ ಚಂದ್ರ ಸುವರ್ಣ, ಗಾಯತ್ರಿ ಪ್ರಭು, ಸಂದೀಪ್ ಪಲಿಮಾರ್, ಲಕ್ಷ್ಮಣ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಧೀರ್ ಕರ್ಕೇರ, ನಾಗೇಶ್ ರಾವ್, ಜಿತೇಂದ್ರ ಶೆಟ್ಟಿ, ಮಧುಕರ ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀನಿವಾಸ ಶರ್ಮ, ರವೀಂದ್ರ ಪ್ರಭು, ಸತೀಶ್ ಗುಡ್ಡೆಚ್ಚಿ, ಚಂದ್ರಹಾಸ್ ಶೆಟ್ಟಿ, ಅಮರನಾಥ್ ಶೆಟ್ಟಿ, ದೀಪಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು ತಾಲ್ಲೂಕಿನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ; ಜಾಗೃತಿ ಮೂಡಿಸಿದ ತಹಶಿಲ್ದಾರ್

Thumbnail
Posted On: 06 Jul 2024, 06:20 AM

ಕಾಪು : ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ "ಡ್ರೈ ಡೇ" ಆಚರಿಸಲು ಸರ್ಕಾರ ಸೂಚಿಸಿದೆ. ಅದರಂತೆ ತಹಶಿಲ್ದಾರ್ ಪ್ರತಿಭಾ ಆರ್ ಮತ್ತು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವಾ ನೇತೃತ್ವದಲ್ಲಿ ಕಾಪು ತಾಲ್ಲೂಕಿನ ಕಟಪಾಡಿ ಪ್ರದೇಶದ ಮನೆಗಳ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಕುರಿತು ಜಾಗೃತಿ ಮೂಡಿಸಲಾಯಿತು. ಮನೆಗಳ ಬಳಿ ಡ್ರಮ್ಗಳಲ್ಲಿ , ಬಕೆಟ್ಗಳಲ್ಲಿ ಸಂಗ್ರಹಿಸಿಟ್ಟಿದ್ದ ನೀರಿನಲ್ಲಿ ಸೊಳ್ಳೆಗಳ ಲಾರ್ವಾ ಬೆಳವಣಿಗೆ ಆಗಿರುವುದನ್ನು ಪತ್ತೆ ಹಚ್ಚಲಾಯಿತು. ತಕ್ಷಣ ಆ ನೀರನ್ನು ಖಾಲಿ ಮಾಡಿ ಆ ಮನೆಗಳವರಿಗೆ ಈ ರೀತಿ ನೀರು ಸಂಗ್ರಹಿಸಿಡದಂತೆ ಜಾಗೃತಿ ಮೂಡಿಸಲಾಯಿತು. ಡೆಂಗ್ಯೂ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಕರಪತ್ರಗಳನ್ನು ಹಂಚಲಾಯಿತು. ಗ್ರಾಮ ಪಂಚಾಯತಿ ಮತ್ತು ಪುರಸಭೆ ಸ್ವಚ್ಚತಾ ಸಿಬ್ಬಂದಿಗಳಿಗೆ ಚರಂಡಿ ಮುಂತಾದೆಡೆ ನೀರು ನಿಲ್ಲದಂತೆ ಸ್ವಚ್ಚಗೊಳಿಸಲು ತಿಳಿಸಲಾಗಿದೆ. ತೆಂಗಿನ ಚಿಪ್ಪು, ಹಳೆಯ ಟೈರು, ಪ್ಲಾಸ್ಟಿಕ್ ಡಬ್ಬ ಎಲ್ಲಿಯೂ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ತಹಶಿಲ್ದಾರ್ ಪ್ರತಿಭಾ ಆರ್ ಸೂಚಿಸಿದ್ದಾರೆ. ಯಾವುದೇ ರೀತಿಯ ಜ್ವರ ಬಂದರೂ ತಕ್ಷಣ ವೈದ್ಯರ ಸಲಹೆಪಡೆಯಲು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸುಲ್ವಾ ಸಲಹೆ ನೀಡಿದ್ದಾರೆ. ಒಟ್ಟಾರೆ ಕಾಪು ತಾಲ್ಲೂಕಿನಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣಕ್ಕಾಗಿ ಸರ್ವ ಸಿದ್ದತೆ ಮಾಡುಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಪ್ರತಿಭಾ ಆರ್ ತಿಳಿಸಿದ್ದಾರೆ. ವೈದ್ಯರಾದ ಡಾ.ಶೈನಿ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಚಂದ್ರಕಲಾ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ

Thumbnail
Posted On: 05 Jul 2024, 11:52 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ.

ನಾಳೆ (ಜು.6) : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Thumbnail
Posted On: 05 Jul 2024, 09:38 PM

ಉಡುಪಿ : ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ6) ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌, ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

ಕಾಪು : ಫೈಝಲ್ ಇಸ್ಲಾಂ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Thumbnail
Posted On: 05 Jul 2024, 09:34 PM

ಕಾಪು : ಇಲ್ಲಿನ ಫೈಝಲ್ ಇಸ್ಲಾಂ ಶಾಲೆಯಲ್ಲಿ ಶುಕ್ರವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕೈರುನಿಸ ಹಾಗೂ ಅರೆಬಿಕ್ ವಿಭಾಗದ ಮುಖ್ಯಸ್ಥ ಪರ್ವೆಜ್ ಮೌಲಾನ ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಶಿಕ್ಷಕ ವೃಂದದವರು, ಮಕ್ಕಳು ಉಪಸ್ಥಿತರಿದ್ದರು.

ಇನ್ನಂಜೆ : ಪಾಂಗಾಳ ಗ್ರಾಮದ ಬೀಡುವಿನ ಗದ್ದೆ ಕೃತಕ ನೆರೆ - ಖಾಸಗಿ ಜಮೀನಿನ ಚರಂಡಿಯಿಂದ ಸಮಸ್ಯೆ ಬಗೆ ಹರಿಯುತ್ತಿಲ್ಲ - ಮಾಲಿನಿ ಶೆಟ್ಟಿ

Thumbnail
Posted On: 05 Jul 2024, 06:54 PM

ಇನ್ನಂಜೆ : ಇಲ್ಲಿನ ಗ್ರಾಮಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಗಳಲ್ಲಿ ಹಾಗೂ ಮನೆಯ ಅಂಗಳದಲ್ಲಿ ಕೃತಕ ನೆರೆಗೆ ಖಾಸಗಿ ಜಮೀನಿನಲ್ಲಿ ಚರಂಡಿ ಇರುವುದರಿಂದ ಸಮಸ್ಯೆ ಬಗೆಹರಿಯದಾಗಿದ್ದು ಖಾಸಗಿ ಜಾಗದವರ ಅನುಮತಿ ಇಲ್ಲದೆ ಗ್ರಾಮ ಪಂಚಾಯತ್ ಗೆ ಅವರ ಗದ್ದೆಯಲ್ಲಿ ಚರಂಡಿ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದು ಸುದ್ದಿ ಹರಡಿದೆ. ಇದು ಸತ್ಯಕ್ಕೆ ದೂರವಾದದ್ದು. ಸುಮಾರು 5 ವರ್ಷದ ಮುಂಚೆ ಉಪಾಧ್ಯಕ್ಷೆಯಾಗಿ ಇದ್ದಾಗ ಮಳೆಗಾಲದಲ್ಲಿ ತುಂಬು ನೆರೆ ಬಂದ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಒಮ್ಮೆ ಒತ್ತಾಯ ಪೂರ್ವಕವಾಗಿ ಚರಂಡಿಗೆ ಅಡ್ಡ ಹಾಕಿದ ತಡೆಗೋಡೆಯನ್ನು ತೆಗೆದು ಹಾಕಿ ಸಮಸ್ಯೆ ಪರಿಹಾರ ಮಾಡಿದ್ದು ಈಗ ಪುನಃ ಖಾಸಗಿ ಜಾಗದವರು ಅಲ್ಲಿ ನೀರು ಹರಿಯಲು ತಡೆಗೋಡೆ ನಿರ್ಮಿಸಿದ್ದಾರೆ. ನಿರಂತರ ನಾವು ಹಲವು ರೀತಿಯಲ್ಲಿ ಪ್ರಯತ್ನ ಮಾಡಿದರೂ ಒಂದು ಮನೆಯವರು ಖಾಸಗಿ ಜಾಗ ಬಿಡಲು ನಿರಾಕರಿಸಿದ್ದಾರೆ. ಮೊನ್ನೆ ತಹಸೀಲ್ದಾರ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟು ಜಾಗದವರಲ್ಲಿ ವಿನಂತಿ ಮಾಡಿದರೂ ಅವರು ಕೇಳುತ್ತಿಲ್ಲ. ಜಿಲ್ಲಾಧಿಕಾರಿಗೆ ಕೂಡ ಪಂಚಾಯತ್ ಮೂಲಕವು ಮನವಿ ಸಲ್ಲಿಸಿದ್ದೇವೆ ಮಾತ್ರವಲ್ಲದೆ ಪಂಚಾಯತ್ ಸದಸ್ಯರು ಖುದ್ದಾಗಿ ಮನೆಯವರನ್ನು ಕರೆದುಕೊಂಡು ಹೋಗಿ ಸಮಸ್ಯೆಯನ್ನು ತಿಳಿಸಿದ್ದಾರೆ. ಶಾಸಕರು ಕೂಡ ನಿರಂತರ ಈ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ನಿರಂತರ ಈ ಸಮಸ್ಯೆಯನ್ನು ಬಗೆ ಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪಡುಬಿದ್ರಿ : ಗಣಪತಿ ಪ್ರೌಢಶಾಲೆ ಮತ್ತು ಎಸ್ ಬಿ ವಿ ಪಿ ಹಿ. ಪ್ರಾ. ಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ ಕಾರ್ಯಕ್ರಮ

Thumbnail
Posted On: 05 Jul 2024, 06:16 PM

ಪಡುಬಿದ್ರಿ : ಇಲ್ಲಿನ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಸ್ಥಾಪಕರಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನ ಕಾರ್ಯಕ್ರಮವನ್ನು ಆಚರಿಸಲಾಯಿತು. ಅತಿಥಿಯಾಗಿ ಆಗಮಿಸಿದ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ನಾರಾಯಣ ಹೆಬ್ಬಾರರು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ವಿಬುಧೇಶತೀರ್ಥರ ಕೊಡುಗೆ ಅನನ್ಯವಾದುದು. ಶಿಸ್ತುಬದ್ಧವಾದ, ದೇಶಪ್ರೇಮವನ್ನು ಬೆಳೆಸುವ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯವೆಂದು ಅವರು ಭಾವಿಸಿದ್ದರು ಎಂದು ನುಡಿದರು. ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗಳ ಸ್ಥಾಪಕರಾದ ಶ್ರೀ ವಿಬುಧೇಶತೀರ್ಥರ ಜೀವನ ಸಾಧನೆಗಳನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಮುಖ್ಯ ಅಭ್ಯಾಗತರು, ಅಧ್ಯಾಪಕರು, ವಿಧ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ನಿಕಟಪೂರ್ವ ಕಾರ್ಯದರ್ಶಿಗಳಾದ ರಾಘವೇಂದ್ರ ನಾವುಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನಾರಾಯಣ ಹೆಬ್ಬಾರರನ್ನು ಗೌರವಿಸಿ, ಸಮ್ಮಾನಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಅನುರಾಧಾ. ಪಿ.ಎಸ್. ಸ್ವಾಗತಿಸಿದರು. ಅಧ್ಯಾಪಕ ಡಾ. ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ ಕೆ. ವಂದಿಸಿದರು.

ಕಾಪು : ಮನೆಯೇ ಗ್ರಂಥಾಲಯ ನಲ್ವತ್ತೈದನೇ ಸರಣಿ ಕಾರ್ಯಕ್ರಮ

Thumbnail
Posted On: 05 Jul 2024, 10:47 AM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಮತ್ತು ಕಾಪು ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಪೊಲಿಪು ನಮಸ್ತೇ ಹೋಂ ಸ್ಟೇ ರೆಸಾರ್ಟ್‌ ನಲ್ಲಿ ಜರಗಿದ ಮನೆಯೇ ಗ್ರಂಥಾಲಯದ ನಲವತ್ತೈದನೇ ಸರಣಿ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಸಿಎ ದೇವ್ ಆನಂದ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾತು ಕಡಿಮೆ‌ ಮಾಡಿ, ಕೃತಿಯ ಮೂಲಕವಾಗಿ ಜನರ ನಡುವೆ ಗುರುತಿಸಿಕೊಳ್ಳುವಲ್ಲಿ ರೋಟರಿ ಸಂಸ್ಥೆ ಹಾಗು ಕಸಾಪ ಪ್ರಯತ್ನ ಶೀಲವಾಗಿದೆ. ಜನರಲ್ಲಿ ವಿಷಯ ಸಂಗ್ರಹಣೆ, ಪುಸ್ತಕ ಓದುವ ಹವ್ಯಾಸದೊಂದಿಗೆ ಜ್ಞಾನ ವೃದ್ಧಿಗೆ ಪೂರಕವಾಗಿ ಸ್ಪಂದಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದ ಸಂಚಾಲಕ ಸಾಹಿತಿ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಜನರಲ್ಲಿ ಸಾಹಿತ್ಯದ ಅಭಿರುಚಿಯನ್ನು ಹೆಚ್ಚಿಸುವಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮ ಸಹಕಾರಿಯಾಗಲಿದೆ. ಸಾಹಿತ್ಯ ಪ್ರೀತಿಯನ್ನು ಎಲ್ಲೆಡೆಗೆ ಪಸರಿಸುವ ಉದ್ದೇಶ ಇದರ ಹಿಂದೆ ಅಡಗಿದೆ. ಸಾಹಿತ್ಯ ಅಭಿರುಚಿ, ಆರೋಗ್ಯ ಮಾಹಿತಿ, ಒತ್ತಡ ನಿವಾರಣೆ, ಪೌರಾಣಿಕ, ಇತಿಹಾಸ ವಿಚಾರಗಳನ್ನೊಳಗೊಂಡ ವಿವಿಧ ಪುಸ್ತಕಗಳನ್ನು ಗ್ರಂಥಾಲಯದಲ್ಲಿ ಒದಗಿಸಲಾಗುತ್ತಿದೆ ಎಂದರು. ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ ಹೆಚ್. ಪಿ ಮಾತನಾಡಿ, ಮನೆಯೇ ಗ್ರಂಥಾಲಯ ಸರಣಿಯ 45 ನೇ ಕಾರ್ಯಕ್ರಮ ಇದಾಗಿದ್ದು ಮನೆಗಳು ಮಾತ್ರವಲ್ಲದೇ, ಸಾರ್ವಜನಿಕ ಪ್ರದೇಶಗಳು, ಬಸ್ ತಂಗುದಾಣ, ರೆಸಾರ್ಟ್, ಅಂಗಡಿಗಳಿಗೂ ವಿಸ್ತರಿಸಲಾಗುತ್ತಿದೆ ಎಂದರು. ಕಾಪು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ಪುಂಡಲೀಕ‌ ಮರಾಠೆ ಮಾತನಾಡಿ, ಮೊಬೈಲ್ ಬದಿಗಿಟ್ಟು, ಪುಸ್ತಕ ಪ್ರೇಮವನ್ನು ಹೆಚ್ಚಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಸಾಹಿತ್ಯದ ಕೆಲಸ ಮಾಡುತ್ತಿರುವ ಕಸಾಪದ ಮುಖ್ಯ ಗುರಿಯಾಗಿರುವ ಮಾತೃಭಾಷೆಯನ್ನು ಬೆಳೆಸುವ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಮೂಲಕವಾಗಿ ಅಂತರಾಷ್ಟ್ರೀಯ ಸಂಸ್ಥೆಯೂ ಕೈ ಜೋಡಿಸಿರುವುದು ಶ್ಲಾಘನೀಯ ಎಂದರು. ಮಣಿಪಾಲ ರೋಟರಿ ಕ್ಲಬ್ ನ‌ ಉಪಾಧ್ಯಕ್ಷೆ ಶಶಿಕಲಾ ರಾಜವರ್ಮ, ರೇಖಾ ದೇವ್ ಆನಂದ್, ಪೊಲಿಪು ಸರಕಾರಿ ಪ.ಪೂ. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ರೇಷ್ಮಾ, ನಮಸ್ತೇ ಹೋಂ ಸ್ಟೇ ರೆಸಾರ್ಟ್ ನ ಪಾಲುದಾರ ವಿನೋದ್ ಕುಮಾರ್, ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್ ಮೊದಲಾದವರು ಉಪಸ್ಥಿತರಿದ್ದರು. ಸಂಚಾಲಕ ರಾಘವೇಂದ್ರ ಪ್ರಭು ವಂದಿಸಿ, ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು.