Updated News From Kaup
ಕಾಪು ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಆಯ್ಕೆ
Posted On: 10 Apr 2024, 09:23 AM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರಿನ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುತ್ತಾರೆ.
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನ ಘೋಷಣೆ
Posted On: 09 Apr 2024, 05:21 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿವರ್ಯರು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದರು. ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವ ಧಾನ್ಯಗಳ ಬಿತ್ತನೆ ಮಾಡಲಾಯಿತು. ಗಣ್ಯರು, ದಾನಿಗಳು, ಭಕ್ತರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ ಹಾಗೂ ಸುಸಜ್ಜಿತ ಶೌಚಾಲಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಂಕು ಸ್ಥಾಪನೆ ಮಾಡಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭ ವಾಸ್ತು ತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಮಾತನಾಡಿ ದೇವಸ್ಥಾನ ನಿರ್ಮಾಣ ಕಷ್ಟಕರ ಆದರೆ ಕಷ್ಟದಲ್ಲಿ ಸುಖ, ಸಾರ್ಥಕ್ಯ ಇದೆ. ಶಾಸ್ತ್ರದ ಪ್ರಕಾರ ಊರು ದೇವಸ್ಥಾನ ಕಟ್ಟಬೇಕು. ಅದರ ಫಲ ದೇವಸ್ಥಾನ ಊರನ್ನು ಕಟ್ಟುತ್ತದೆ ಎಂದಿದೆ. ಹಣವಿದ್ದರೆ ದೇವಸ್ಥಾನವಾಗದು, ಇಚ್ಚಾ ಶಕ್ತಿಯು ಅಗತ್ಯ. ಕಾಪುವಿನ ಶ್ರೀ ಮಾರಿಯಮ್ಮ ಯುದ್ಧ ದೇವತೆ, ಕರಾವಳಿಯಲ್ಲಿ ರಕ್ಷಣೆಗಾಗಿ ಸೈನ್ಯದ ನೆಲೆಯ ಭಾಗವಾದ ದೇವತೆ ಶ್ರೀ ಮಾರಿಯಮ್ಮ. ಕಾಪು ಸುತ್ತಮುತ್ತಲ ಸುಮಾರು ಐದು-ಆರು ಕಿಲೋ ಮೀಟರ್ ಕುಂಕುಮ ವರ್ಣ ಅಥವಾ ರಕ್ತವರ್ಣದ ಮಣ್ಣನ್ನು ಕಾಣಬಹುದು. ಇದು ಮಾರಿಯಮ್ಮ ಇರುವ ಸಂಕೇತ ಎಂದು ಹೇಳಿದರು. ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಮಾತನಾಡಿ ಕಾಪು ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ಸಿಕ್ಕಿರುವುದು ಸೌಭಾಗ್ಯ. ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದರು. ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ಕ್ಷೇತ್ರದಲ್ಲಿ ನಡೆದ ಧಾರ್ಮಿಕ ವಿಧಿ ವಿಧಾನಗಳಾದ ಭೂಕರ್ಷಣ ಖನನ, ಹರಣ, ದಾಹ, ಪೂರಣ, ಬೀಜ ವಪನಗಳ ಜೊತೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು 2025 ರ ಮಾಚ್೯ 2ರಂದು ನಡೆಸಲಾಗುವುದು ಎಂದು ಘೋಷಿಸಿದರು. ಈ ಸಂದರ್ಭ ಶಂಖನಾದ ಮೊಳಗಿಸಲಾಯಿತು. ಇದೇ ಸಂದರ್ಭ ಕ್ಷೇತ್ರದ ಬಗೆಗಿನ ಆಲ್ಬಂ ಗೀತೆಯನ್ನು ಲೋಕಾರ್ಪಣೆ ಮಾಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ವೀರಶೈವ ಸಮುದಾಯದ ಸ್ವಾಮಿಗಳಾದ ಶ್ರೀ ರುದ್ರಮುನಿ ಸ್ವಾಮಿಗಳು ಜಂಗಮ ಸಂಸ್ಥಾನ ಮಠ ಗುರುಪುರ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಅದಾನಿ ಮತ್ತು ಯುಪಿಸಿಎಲ್ ನಂದಿಕೂರು ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ನವೀನ್ ಚಂದ್ರ ಶೆಟ್ಟಿ, ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ್ ಆಚಾರ್ಯ, ಕಾಪು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯಕರ ಶೆಟ್ಟಿಗಾರ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಕಟ್ಟಡ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ಶ್ರೀಕರ ಶೆಟ್ಟಿ ಕಲ್ಯ, ಗಣೇಶ್ ಪೂಜಾರಿ ಮೂಡುಬೆಳ್ಳೆ, ಉದ್ಯಮಿಗಳಾದ ಆನಂದ್ ಎಂ ಶೆಟ್ಟಿ, ರವಿ ಸುಂದರ ಶೆಟ್ಟಿ, ರಂಜನಿ ಸುಧಾಕರ್ ಹೆಗ್ಡೆ, ಸುಜಾತ್ ಶೆಟ್ಟಿ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ ಕೋಟ್ಯಾನ್, ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿ, ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಮುಂಬೈ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್, ಅಭಿವೃದ್ಧಿ ಸಮಿತಿಯ ಆಫ್ರಿಕಾ ಘಟಕದ ಅಧ್ಯಕ್ಷ ಮಹೇಶ್ ಕುಮಾರ್,ಯೋಗೀಶ್ ಶೆಟ್ಟಿ ಬಾಲಾಜಿ, ರಮೇಶ್ ಹೆಗ್ಡೆ, ಕಾಪು ದಿವಾಕರ್ ಶೆಟ್ಟಿ, ಮಾಧವ ಪಾಲನ್, ಡಾ. ದೇವಿ ಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು. ರೇಣುಕಾ ಜೋಗಿ ಪ್ರಾರ್ಥಿಸಿದರು. ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಸಮಿತಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ ವಂದಿಸಿದರು.
ಪಡುಬಿದ್ರಿ : ಬಂಜೆತನ ನಿವಾರಣೆ ಸಾಧ್ಯ - ಡಾ. ಪಯಸ್ವಿನಿ ಶೆಟ್ಟಿಗಾರ್
Posted On: 08 Apr 2024, 02:58 PM
ಪಡುಬಿದ್ರಿ : ಆಧುನಿಕ ಯುಗದಲ್ಲಿ ಪ್ರತಿಯೊಂದಕ್ಕೂ ಚಿಕಿತ್ಸೆ ಇರುವ ಕಾರಣ ಬಂಜೆತನವನ್ನು ಕೂಡಾ ನಿವಾರಣೆ ಮಾಡಬಹುದು. ಇಂದಿನ ಜೀವನ ಶೈಲಿ ಹಾಗು ಆಹಾರ ಪದ್ದತಿಯೇ ಬಂಜೆತನಕ್ಕೆ ಮುಖ್ಯ ಕಾರಣ. ಬಂಜೆತನದಿಂದ ಮಾನಸಿಕ ಒತ್ತಡಕ್ಕೆ ಒಳಾಗಾಗುವವರ ಸಂಖ್ಯೆ ಜಾಸ್ತಿ ಆಗುತ್ತಿದೆ ಎಂದು ವ್ಯೆದಾಧಿಕಾರಿ ಡಾ. ಪಯಸ್ವಿನಿ ಶೆಟ್ಟಿಗಾರ್ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ, ರೋಟರಾಕ್ಟ್ ಕ್ಲಬ್ ಮತ್ತು ನೋವಾ ಐ ವಿ.ಎಫ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಬಂಜೆತನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶಿಬಿರದ ಐ.ವಿ.ಎಫ್ ಮಂಗಳೂರು ಕ್ಲಿನಿಕ್ ನ ವ್ಯೆದ್ಯಾಧಿಕಾರಿ ಡಾ. ಶಮೀಝ್ ಫೈಝಿ ಮಾತನಾಡಿ ಆಧುನಿಕ ಜಗತ್ತಿನಲ್ಲಿ ಬಂಜೆತನ ಸಾಮಾನ್ಯವಾಗಿದೆ. ಶೇ.50 ರಷ್ಟು ದಂಪತಿಗಳಲ್ಲಿ ಈ ಸಮಸ್ಯೆ ಇದೆ. ಪುರುಷರು ಹಾಗೂ ಮಹಿಳೆಯರು ಬಂಜೆತನಕ್ಕೆ ಸಮಾನ ಕಾರಣರಾಗಿರುತ್ತಾರೆ. ಇದನ್ನು ನಿವಾರಣೆ ಮಾಡಲು ಹಲವಾರು ಬಗೆಯ ಔಷಧಗಳು ಹಾಗು ಚಿಕಿತ್ಸೆಗೆ ಅವರು ಒಳಾಗಾಗಬೇಕಾಗುತ್ತದೆ. ಇದರ ಬಗ್ಗೆ ಮಾತನಾಡಲು ಹಿಂಜರಿಯ ಬಾರದು ಎಂದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ತೆಂಕ ಗ್ರಾ.ಪಂ ಉಪಾಧ್ಯಕ್ಷೆ ಕಸ್ತೂರಿ ಪ್ರವೀಣ್, ರೋಟರಿ ನಿಯೋಜಿತ ಅಧ್ಯಕ್ಷೆ ತಸ್ನೀನ್ ಅರಾ, ರೋಟರಿ ಸಮುದಾಯದಳ ಅಧ್ಯಕ್ಷ ರಚನ್ ಸಾಲ್ಯಾನ್, ರೋಟರಾಕ್ಟ್ ಕ್ಲಬ್ ಕಾರ್ಯದರ್ಶಿ ಪ್ರತೀಕ್ ಆಚಾರ್ಯ, ನೋವಾ ಐ.ವಿ.ಎಫ್ ಸೇಲ್ಸ್ ಮೆನೇಜರ್ ಹರ್ಷ ಮಂಗಳೂರು ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಅನಿತಾ ಬಿ.ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 46 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಏಪ್ರಿಲ್ 7 (ನಾಳೆ) : ಪಡುಬಿದ್ರಿಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ
Posted On: 06 Apr 2024, 05:21 PM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವ್ಹೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ ಮತ್ತು ರೋಟರಾಕ್ಟ್ ಕ್ಲಬ್ ಪಡುಬಿದ್ರಿ ಸಂಯುಕ್ತ ಆಶ್ರಯದಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ ಓಂಕಾರ ಕಲಾ ಸಂಗಮ ಪಡುಬಿದ್ರಿ ಇಲ್ಲಿ ಏಪ್ರಿಲ್ 7, ಆದಿತ್ಯವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜರಗಲಿದೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8105093102 | 8792144608
ಕೆಪಿಸಿಸಿ ಪ್ರಚಾರ ಸಮಿತಿ ಪದಗ್ರಹಣ ; ನೂತನ ರಾಜ್ಯಾಧ್ಯಕ್ಷರಾಗಿ ವಿನಯ ಕುಮಾರ್ ಸೊರಕೆ
Posted On: 06 Apr 2024, 05:17 PM
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಕೊಂಡ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಘಾಟನೆ ಕಾರ್ಯಕ್ರಮ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಎನ್ ಎಸ್ ಯು ಐ ಘಟಕದ ಅಧ್ಯಕ್ಷ ಸೌರಭ್ ಬಲ್ಲಾಳ್, ಪ್ರಶಾಂತ್ ಜತ್ತನ್ನ, ರಮೀಝ್ ಹುಸೇನ್, ಹಮೀದ್ ಯೂಸುಫ್, ಸಾಹುಲ್ ಹಮೀದ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುತ್ಯಾರು ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಬೇಸಿಗೆ ಶಿಬಿರದಲ್ಲಿ ಗಮನಸೆಳೆದ ತಾಳಮದ್ದಳೆ - ಗುರುದಕ್ಷಿಣೆ
Posted On: 06 Apr 2024, 12:50 PM
ಕುತ್ಯಾರು : ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು. ಭಾಗವತರಾಗಿ ಮೋಹನ ಕಲಂಬಾಡಿ , ಹಿಮ್ಮೆಳದಲ್ಲಿ ಗಣೇಶ ಕಾರಂತ ಪೊಳಲಿ, ವಿಶ್ವನಾಥ್ ಶೆಣೈ,ಮಾ.ಭವಿಷ್ ಕಲಂಬಾಡಿ ಅರ್ಥಧಾರಿಗಳಾಗಿ ಎಂ. ಕೆ ರಮೇಶ ಆಚಾರ್ಯ ತೀರ್ಥಹಳ್ಳಿ (ದ್ರುಪದ) ಕಾಪು ಜನಾರ್ದನ ಆಚಾರ್ಯ ( ಏಕಲವ್ಯ) ರಂಗನಾಥ ಭಟ್ ಕಳತ್ತೂರು (ಅರ್ಜುನ) ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೋಣ) ಭಾಗವಹಿಸಿದ್ದರು. ಅಸೆಟ್ ಸದಸ್ಯರಾದ ಜಿ .ಟಿ ಆಚಾರ್ಯ ಮುಂಬೈ, ಹರೀಶ ಆಚಾರ್ಯ, ಸಂಸ್ಥೆಯ ಮುಖ್ಯಸ್ಥರಾದ ಸಂಗೀತ ರಾವ್ ಕಲಾವಿದರನ್ನು ಗೌರವಿಸಿದರು. ಶಿಕ್ಷಕ ಸುಧೀರ್ ನಾಯ್ಕ್ ಸ್ವಾಗತಿಸಿ ಶಿಕ್ಷಕ ಮಂಜುನಾಥ್ ಶೇಟ್ ಮತ್ತು ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
ಏಪ್ರಿಲ್ 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
Posted On: 05 Apr 2024, 10:00 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಏಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಎಂದು ನಿಶ್ಚಯಿಸಿದ್ದು, ಆ ಪ್ರಯುಕ್ತ ಎಪ್ರಿಲ್ 9ರ ಮಂಗಳವಾರದಂದು ಬೆಳಿಗ್ಗೆ ಗಂಟೆ 8.30 ಕ್ಕೆ ಸರಿಯಾಗಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿಯವರು ಹೇಳಿದರು. ಅವರು ದೇವಳದ ಕಛೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಪುವಿನ ಅಮ್ಮನ ದೇಗುಲದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಎಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಮಾಡಬಹುದೆಂದು ನಿಶ್ಚಯಿಸಿದ್ದರೂ, ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಮಾಡಲು ಹಾಗೂ ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಭಾಗವಹಿಸಲು ತೊಂದರೆಯಾಗುತ್ತದೆ ಎಂದು ತಿಳಿದು ಬಂದಿದೆ. ಅಲ್ಲದೇ ಜೂನ್ 12 ರಿಂದ ದಕ್ಷಿಣಾಯಣ ಪ್ರಾರಂಭವಾಗುವುದರಿಂದ ಪ್ರತಿಷ್ಠೆಗೆ ಸೂಕ್ತವಾದ ದಿನಗಳು ಲಭ್ಯವಾಗಿರುವುದಿಲ್ಲ. ಆದುದರಿಂದ ಅಭಿವೃದ್ಧಿ ಸಮಿತಿಯು ಕ್ಷೇತ್ರದ ಪ್ರಧಾನ ತಂತ್ರಿಗಳಾದ ಶ್ರೀ ಕುಮಾರಗುರು ತಂತ್ರಿಯವರೊಂದಿಗೆ ಗಳೊಂದಿಗೆ ಚರ್ಚಿಸಿ 2025ರ ಜನವರಿ 14ರ ನಂತರ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಪಡಿಸುವುದೆಂದು ನಿರ್ಧರಿಸಲಾಗಿದೆ. ಈ ಬಗ್ಗೆ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನಿರ್ದೇಶನದಂತೆ ಇದೇ ಬರುವ ಏಪ್ರಿಲ್ 9ರ ಮಂಗಳವಾರದಂದು ಬೆಳಿಗ್ಗೆ ಗಂಟೆ 8.30 ಕ್ಕೆ ಸರಿಯಾಗಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡುವುದೆಂದು ತೀರ್ಮಾನಿಸಲಾಗಿದೆ. ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ನೂತನ ಆಲಯದಲ್ಲಿ ಪ್ರತಿಷ್ಠಾ ಪೂರ್ವಭಾವಿಯಾಗಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಾಚೀನ ಶೈಲಿಯಲ್ಲಿ ನಡೆಸುವುದೆಂದು ನಿರ್ಧರಿಸಲಾಗಿದೆ. ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವ ಧಾನ್ಯಗಳ ಬಿತ್ತನೆ ಮಾಡುವುದು. ಮುಂದಿನ 18 ದಿನಗಳಲ್ಲಿ ಧಾನ್ಯಗಳು ಮೊಳಕೆಯೊಡೆದಾಗ ಗೋ ನಿವಾಸಕ್ಕಾಗಿ ಗರ್ಭಗುಡಿಯಲ್ಲಿ 9 ಅಥವಾ 18 ಗೋವುಗಳನ್ನು ಪೂಜಿಸಿ ಅವುಗಳಿಗೆ ಧಾನ್ಯಗಳನ್ನು ಮೇಯಲು ಬಿಡುವುದು. ಗೋವುಗಳು ಸಾನಿಧ್ಯದಲ್ಲಿ 9 ದಿನ ಗೋವಾಸವಿದ್ದು, 9ನೇ ದಿನ ಗೋವುಗಳಿಂದ ಹಾಲನ್ನು ಕರೆದು ಪಂಚಗವ್ಯ ತಯಾರಿಸಿ ಅವುಗಳಿಂದ ದೇವಳದ ಆವರಣವನ್ನು ಸಂಪ್ರೋಕ್ಷಣೆ ಮಾಡಿ ಶುದ್ಧಿಗೊಳಿಸುವುದು. ಏಪ್ರಿಲ್ 9ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ, ಆಡಳಿತ ಕಛೇರಿ ಹಾಗೂ ಸುಸಜ್ಜಿತ ಶೌಚಾಲಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಂಕು ಸ್ಥಾಪನೆ ಮಾಡುವುದೆಂದು ನಿರ್ಧರಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಮುಗಿದ ನಂತರ ಸಭಾ ಕಾರ್ಯಕ್ರಮಗಳು ನೆರವೇರಲಿದೆ. ಈ ಸಭೆಯಲ್ಲಿ 9 ದಿನಗಳ ಪರ್ಯಂತ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ತಂತ್ರಿಗಳು ದಿನ ಹಾಗೂ ಸಮಯವನ್ನು ಘೋಷಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೃಂಭಣೆಯಿಂದ ನಡೆಯುವ ಅಮ್ಮನ ಬ್ರಹ್ಮಕಲಶೋತ್ಸವದ 9 ಜನರ ಪ್ರಧಾನ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಉದ್ಘಾಟನೆಯಾಗಲಿದೆ. ಚರಿತ್ರೆಗೆ ಸೇರಲಿರುವ ಈ ಭವ್ಯ ಸಮಾರಂಭದಲ್ಲಿ ಗಣ್ಯರು, ದಾನಿಗಳು, ಅಮ್ಮನ ಭಕ್ತವೃಂದ, ಎಲ್ಲಾ ಸಮಿತಿಯ ಸದಸ್ಯರು ಹಾಗೂ ಊರ ಪರವೂರ ಮಹನಿಯರೆಲ್ಲರೂ ಭಾಗವಹಿಸಿ ಕಾಪುವಿನ ಅಮ್ಮನ ಕೃಪೆಗೆ ಪಾತ್ರರಾಗಬೇಕೆಂದು ವಾಸುದೇವ ಶೆಟ್ಟಿಯವರು ವಿನಂತಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಧವ ಆರ್ ಪಾಲನ್ ಉಪಸ್ಥಿತರಿದ್ದರು.
ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ - ಬೇಸಿಗೆ ಶಿಬಿರ ಸಮಾರೋಪ
Posted On: 05 Apr 2024, 06:37 PM
ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಏಪ್ರಿಲ್ 5ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಸೆಟ್ ನ ಪದಾಧಿಕಾರಿಗಳಾದ ಜಿ.ಟಿ. ಆಚಾರ್ಯ ವಹಿಸಿ ಮಾತನಾಡಿ ಮಕ್ಕಳಿಗೆ ಬೇಸಿಗೆ ಶಿಬಿರದ ಮಹತ್ವ, ಶಿಬಿರದ ಕಲಿತ ವಿಷಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಕಾಪು ಜನಾರ್ಧನ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ, ಭಾರತಿ ದಿವಾಕರ ಆಚಾರ್ಯ, ಹರೀಶ್ ಆಚಾರ್ಯ, ಪ್ರಾಂಶುಪಾಲೆ ಸಂಗೀತಾ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ವಾಣಿ ವಂದಿಸಿದರು.
ಕಾಪು : ಜೆಡಿಎಸ್ ಪಕ್ಷದ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆ
Posted On: 05 Apr 2024, 01:53 PM
ಕಾಪು : ಜನತಾದಳ(ಜಾತ್ಯಾತೀತ)ಪಕ್ಷದ ಕಾಪು ವಿಧಾನಸಭಾ ಕ್ಷೇತ್ರ ಸಮಿತಿಯ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆಯಾಗಿರುತ್ತಾರೆ. ಕಾಪು ಪಂಚಾಯತ್ ಮಾಜಿ ಸದಸ್ಯ, ಸಾಮಾಜಿಕ, ಧಾರ್ಮಿಕ ಮಂದಾಳು, ಪಕ್ಷ ಸಂಘಟನೆಯಲ್ಲಿ ಸೇವೆಗೈಯುತ್ತಿರುವ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂರವರನ್ನು ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಅವರು ನೇಮಕ ಮಾಡಿರುತ್ತಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಪಿ ಇಂಜಿನಿಯರಿಂಗ್ ವಿಷಯದ ಕುರಿತು ಉಪನ್ಯಾಸ
Posted On: 04 Apr 2024, 03:17 PM
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ ಹ್ಯಾಪಿ ಇಂಜಿನಿಯರಿಂಗ್ ಎಂಬ ವಿಷಯದ ಕುರಿತು ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ತಜ್ಞ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಎದುರಿಸುತ್ತಿರುವ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಇದಕ್ಕಾಗಿ ಅವರು ದಿನನಿತ್ಯದ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಒತ್ತಡವನ್ನು ಕಡಿಮೆ ಮಾಡಲು ಬೇಕಾದ ತಂತ್ರಗಳಾದ ಸಾವಧಾನತೆಯ ತಂತ್ರಗಳು, ಸಮಯ ನಿರ್ವಹಣೆಯ ತಂತ್ರಗಳು ಮತ್ತು ಸಾಮಾಜಿಕ ಬೆಂಬಲವನ್ನು ಪಡೆಯುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮಾತನಾಡಿ ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಯ ಜೀವನದಲ್ಲಿ ಒಳ್ಳೆಯ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರವೀಂದ್ರ ಹೆಚ್ ಜೆ ಕಾರ್ಯಕ್ರಮವನ್ನು ಸಂಯೋಜಿಸಿದರು.
