Updated News From Kaup
ಕಾಪು : ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ - ಬೋಳ ಸದಾಶಿವ ಶೆಟ್ಟಿ
Posted On: 03 Mar 2024, 02:28 PM
ಕಾಪು : ಕಳೆದ 45 ವರ್ಷಗಳಿಂದ ಸಹಕಾರ ಭಾರತಿ ದೇಶಾದ್ಯಂತ ಸಂಘಟನಾತ್ಮಕವಾಗಿ 28 ರಾಜ್ಯಗಳ 650 ಕ್ಕಿಂತಲೂ ಹೆಚ್ಚಿನ ಜಿಲ್ಲೆಗಳಲ್ಲಿ ನಿರಂತರ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಕ್ರಿಯವಾದ ತಾಲೂಕು ಘಟಕಗಳ ಮೂಲಕ ಗ್ರಾಮೀಣ ಭಾಗದ ಎಲ್ಲಾ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ನಿರಂತರ ಸಂಪರ್ಕದ ಮೂಲಕ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಕಾಯೋನ್ಮುಖವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ತಿಳಿಸಿದರು. ಅವರು ಕಾಪು ಕೆವನ್ ಹೋಟೆಲ್ ಸಭಾಂಗಣದಲ್ಲಿ ಜರುಗಿದ ತಾಲೂಕು ಅಭ್ಯಾಸ ವರ್ಗದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ, ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಮಾತನಾಡಿ ಹೈನುಗಾರರು ಸೊಸೈಟಿಗಳಿಗೆ ಪೂರೈಸುವ ಹಾಲಿಗೆ ವೈಜ್ಞಾನಿಕ ದರ ನಿಗದಿ, ದುಬಾರಿಯಾಗುತ್ತಿರುವ ನಂದಿನಿ ಪಶು ಆಹಾರಕ್ಕೆ ಸಬ್ಸಿಡಿ, ಆರು ತಿಂಗಳಿನಿಂದ ಬಾಕಿ ಇರುವ ಹೈನುಗಾರರ ಸಬ್ಸಿಡಿ ಹಣದ ಬಿಡುಗಡೆ, ಪಶು ವೈದ್ಯರ ಕೊರತೆ ನೀಗಿಸಲು ಖಾಲಿ ಇರುವ ಹುದ್ದೆಗಳ ಭರ್ತಿ, ಹಾಲು ಉತ್ಪಾದಕ ಸಂಘಗಳನ್ನು ವಿವಿಧೋದ್ದೇಶ ಸಂಘಗಳಾಗಿ ಕಾರ್ಯನಿರ್ವಹಿಸಲು ಯೋಜನೆ, ಯಶಸ್ವಿ ಯೋಜನೆ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಪ್ರಮುಖ ಖಾಸಗಿ ಆಸ್ಪತ್ರೆಗಳ ಸೇರ್ಪಡೆ ಮೊದಲಾದ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಹೈನುಗಾರರ ಪರವಾಗಿ ಮುಂದಿನ ದಿನಗಳಲ್ಲಿ ಆಂದೋಲನ, ಚಳವಳಿ ಹಾಗೂ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಕಾಪು ತಾಲೂಕು ಸಹಕಾರ ಭಾರತೀಯ ಕೋಶಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಲ್ಲಾರು ಅಧ್ಯಕ್ಷತೆ ವಹಿಸಿದ್ದರು. ಕಾಪು ತಾಲೂಕಿನ ಪ್ಯಾಕ್ಸ್, ಹಾಲು, ಸೌಹಾರ್ದ ಮತ್ತು ಮೀನುಗಾರಿಕಾ ಸೊಸೈಟಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ಪ್ಯಾಕ್ಸ್ ಪ್ರಕೋಷ್ಠದ ಸಂಚಾಲಕರಾದ ಕುತ್ಯಾರು ಪ್ರಸಾದ್ ಶೆಟ್ಟಿಯವರು ಸ್ವಾಗತಿಸಿದರು. ಅವರಾಲು ಹಾಲು ಉತ್ಪಾದಕರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಕೇಶವ ಮೋಯ್ಲಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮೂಡಬಿದ್ರೆಯ ಸಹಕಾರಿ ಆಡಳಿತ ಕಾಲೇಜಿನ ಉಪನ್ಯಾಸಕಿ ಬಿಂದು ಬಿ. ನಾಯರ್ ಸಹಕಾರಿ ವ್ಯವಸ್ಥಾಪನೆ ಎನ್ನುವ ವಿಚಾರದ ಬಗ್ಗೆ, ಸಹಕಾರ ಭಾರತಿ ಮೈಸೂರು ವಿಭಾಗದ ಸಂಘಟನಾ ಪ್ರಮುಖ ಮೋಹನ್ ಕುಮಾರ್ ಕುಂಬಳೇಕರ್ ಸಹಕಾರ ಭಾರತಿ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು.
ಉಚ್ಚಿಲ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟನೆ
Posted On: 03 Mar 2024, 02:06 PM
ಉಚ್ಚಿಲ : ನಮ್ಮ ದೇಶ, ರಾಜ್ಯಕ್ಕೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸಹಕಾರಿ ಚಳುವಳಿ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಖಾಸಗಿ, ವಾಣಿಜ್ಯ ಬ್ಯಾಂಕುಗಳಲ್ಲಿ ವ್ಯವಹಾರ ತಪ್ಪಲ್ಲ. ನಮ್ಮ ಸಮಾಜ, ಗ್ರಾಹಕರ ಆರೋಗ್ಯದ ಬಗ್ಗೆ ಇವರು ಚಿಂತಿಸಿಲ್ಲ. ಇದು ಸಹಕಾರಿ ಕ್ಷೇತ್ರದ ಮೂಲಕ ಮಾತ್ರ ಸಾಧ್ಯವಾಗಿದೆ. ಸಹಕಾರಿ ಕ್ಷೇತ್ರ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕಾರ್ಯಗಳ ಜೊತೆಗೆ ಉಳಿತಾಯದ ಬಗ್ಗೆಯೂ ಜಾಗೃತಿ ಮೂಡಿಸುತ್ತಿದೆ. ಈ ನಿಟ್ಟಿನಲ್ಲಿ ಬೆಳಪು ವ್ಯವಸಾಯ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಿದ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಚ್ಚಿಲದ ಸೈಯ್ಯದ್ ಅರಬಿ ಜುಮ್ಮಾ ಮಸೀದಿ ಖತೀಬರಾದ ಜನಾಬ್| ಇಸ್ಹಾಕ್ ಫೈಝಿ ಹಾಗೂ ಉಚ್ಚಿಲ ಚರ್ಚ್ ಧರ್ಮಗುರುಗಳಾದ ರೆ|ಫಾ। ಜೋಸ್ವಿ ಫೆರ್ನಾಂಡೀಸ್ ಆಶೀರ್ವಚನ ನೀಡಿದರು. ಈ ಸಂದರ್ಭ ಪಡುಬಿದ್ರಿ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಉಚ್ಚಿಲ ರೋಟರಿ ಕ್ಲಬ್ ಅಧ್ಯಕ್ಷರಾದ ಯು.ಸಿ. ಶೇಖಬ್ಬ ಸಂದರ್ಭೋಚಿತವಾಗಿ ಮಾತನಾಡಿದರು. ಶಿಬಿರದ ಮುಖ್ಯ ವೈದ್ಯೆ ಡಾ. ಶ್ರೀಕೀರ್ತಿ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿದ್ದರು. ಬೆಳಪು ಸಿ.ಎ.ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೋಚನ, ಪ್ರಸಾದ್ ನೇತ್ರಾಲಯದ ಸಂಪರ್ಕಾಧಿಕಾರಿ ಹರ್ಷ, ಬೆಳಪು ಸಿ.ಎ. ಬ್ಯಾಂಕ್ ನಿರ್ದೇಶಕರುಗಳು, ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಪದಾಧಿಕಾರಿಗಳು, ಸಿಬ್ಬಂದಿ, ಪ್ರಸಾದ್ ನೇತ್ರಾಲಯದ ವೈದ್ಯರು ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಮಿಕ್ಕಿ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದರು. ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಸ್ತಾವನೆಗೈದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಾರ್ಚ್ 3: ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ
Posted On: 02 Mar 2024, 08:41 AM
ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಕ್ಷೇತ್ರದ ಉಪ ಸಾನಿಧ್ಯವಾದ ಶ್ರೀ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ ಮಾರ್ಚ್ 3, ಭಾನುವರ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿಕೊಂಡು ಮೃತ್ಯು
Posted On: 01 Mar 2024, 06:59 PM
ಕಾಪು : ಇಲ್ಲಿನ ಪೊಲಿಪುವಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಇಂದು ಸಂಭವಿಸಿದೆ. ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇವರು ದಿನನಿತ್ಯ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಬೇರೆ ಮೀನುಗಾರಿಕಾ ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಮೃತದೇಹವನ್ನು ತಂದಿದ್ದಾರೆ. ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ಕಾಪು ಪೊಲೀಸರು ಭೇಟಿ ನೀಡಿದ್ದಾರೆ.
ಮಾಚ್೯ 3 : ಯುವವಾಹಿನಿ ಉಡುಪಿ ಘಟಕ - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ
Posted On: 01 Mar 2024, 06:46 PM
ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಮಾಚ್೯ 03, ರವಿವಾರ ಬೆಳಿಗ್ಗೆ 10 ಗಂಟೆ ಲಕ್ಷ್ಮೀ ಸಭಾಭವನ ಲಕ್ಷ್ಮೀ ಟ್ರೇಡ್ ಸೆಂಟರ್ ಚಿಟ್ಪಾಡಿ, ಉಡುಪಿ ಇಲ್ಲಿ ಜರಗಲಿದೆ. ಜಾನಪದ ವಿದ್ವಾಂಸರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಕನರಾಡಿ ವಾದಿರಾಜ ಭಟ್ ಇವರಿಗೆ ಜಾನಪದ ವಿದ್ವಾಂಸ ಪ್ರಶಸ್ತಿ, ಹಿರಿಯ ಬೈದೇರುಗಳ ದರುಶನ ಪಾತ್ರಿ ಕೋಟಿ ಪೂಜಾರಿಯವರಿಗೆ ಜಾನಪದ ಕಲಾವಿದ ಪ್ರಶಸ್ತಿ, ಖ್ಯಾತ ಮುಳುಗು ತಜ್ಞರು, ಸಮಾಜ ಸೇವಕ ಈಶ್ವರ ಮಲ್ಪೆ ಇವರು ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮುಕ್ಕ ಶ್ರೀನಿವಾಸ್ ಕಾಲೇಜಿನ ಪ್ರೊಫೆಸರ್ ಪ್ರೊ. ಎಂ.ಎಸ್. ಕೋಟ್ಯಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಎಂಎಸ್ಡಬ್ಲ್ಯು ವಿಭಾಗ ಮುಖ್ಯಸ್ಥರಾದ ಡಾ। ದುಗ್ಗಪ್ಪ ಕಜೆಕಾರ್ ಅಭಿನಂದನಾ ನುಡಿಗಳನ್ನೀಯಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಒಂದನೇ ಉಪಾಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಭಾಗವಹಿಸಲಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿರಲಿದ್ದಾರೆ. ಯುವವಾಹಿನಿ (ರಿ.) ಉಡುಪಿ ಘಟಕದ ಅಧ್ಯಕ್ಷರಾದ ಅಮಿತಾಂಜಲಿ ಕಿರಣ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕ್-ಟೆಕ್ 2.0 ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
Posted On: 01 Mar 2024, 06:09 PM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳು ಹ್ಯಾಕ್-ಟೆಕ್ 2.0 ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಗಣಕಯಂತ್ರ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿಗಳಾದ ಗಣೇಶ್ ಕಾಮತ್, ಮೆಕ್ವಿನ್ ಹರ್ಶೆಲ್ ಡಿಸೋಜಾ, ಡಿವೋನಾ ಥೆಲ್ಮಾ ಪಿಂಟೋ ಮತ್ತು ದಿನೇಶ್ ಶೆಟ್ಟಿ ಇವರು ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಗಣಕಯಂತ್ರ ವಿಭಾಗದ ರಾಘವೇಂದ್ರ ಜಿ ಎಸ್ ಇವರ ಮಾರ್ಗದರ್ಶನದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಗ್ಲೂಕೋಮ ಪತ್ತೆ ಹಚ್ಚುವ ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಒಟ್ಟು ಹನ್ನೆರಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.
ಮಾಚ್೯ 2 - 12 : ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ
Posted On: 01 Mar 2024, 04:38 PM
ಕಟಪಾಡಿ : ಸಿ. ಎಸ್. ಐ ಕ್ರೈಸ್ತ ದೇವಾಲಯ ಅಂಬಾಡಿ ಮತ್ತು ಜೇಸಿಐ ಕಟಪಾಡಿ ಹಾಗೂ ಕೋಟೆ ಗ್ರಾಮ ಪಂಚಾಯತ್, ಸಿ ಎಸ್ ಐ ಲಂಬಾರ್ಡ್ ಸ್ಮಾರಕ (ಮಿಷನ್ ) ಆಸ್ಪತ್ರೆ ಉಡುಪಿ ಹಾಗೂ ಕಂಪಾನಿಯೋ ಇವರ ಸಹಯೋಗದೊಂದಿಗೆ ಮಾರ್ಚ್ 02 ರಿಂದ ಮಾರ್ಚ್ 12ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜೇ ಸಿ ಐ ಭವನ ಕಟಪಾಡಿ ಹಾಗೂ ಸಿ ಎಸ್ ಐ ದೇವಾಲಯದ ಚರ್ಚ್ ಹಾಲ್ ನಲ್ಲಿ ಯಾವುದೇ ಔಷಧವಿಲ್ಲದೆ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ ಸಿಗಲಿದೆ. ಪ್ರತಿದಿನ ಕೇವಲ 30 ನಿಮಿಷಗಳ ಕಾಲ ಈ ಥೆರಪಿ ಉಪಯೋಗಿಸುವುದರಿಂದ ಪಾದದಲ್ಲಿ ಇರುವ ಎಲ್ಲಾ ಎಕ್ಯೂಪ್ರಷರ್ ಪಾಯಿಂಟನ್ನು ಸಕ್ರಿಯ ಗೊಳಿಸುವುದರ ಮೂಲಕ 120 ಕ್ಕೂ ಹೆಚ್ಚು ಕಾಯಿಲೆಗೆ ಉಪಯುಕ್ತವಾಗಿದೆ. ಮುಖ್ಯವಾಗಿ ಶುಗರ್, ನಿದ್ರಾಹೀನತೆ, ಥೈರೋಡ್ , ಪಾದದ ಉರಿ , ಬೆನ್ನು ನೋವು, ಮಂಡಿ ನೋವು, ವೆರಿಕೊಸ್ ಸಮಸ್ಯೆ ಇತ್ಯಾದಿಗಳಿಗೆ ಅನುಕೂಲವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಚ್೯ 3 : ಉಚ್ಚಿಲದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
Posted On: 01 Mar 2024, 02:56 PM
ಉಚ್ಚಿಲ : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಮಾಚ್೯ 3, ಆದಿತ್ಯವಾರ ಬೆಳಿಗ್ಗೆ ಘಂಟೆ 9ರಿಂದ ಮಧ್ಯಾಹ್ನ 1ರ ವರೆಗೆ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಲಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಕಿಲ್ಲದ ಕಾಪು ಫ್ಲೈ ಓವರ್ ಅಂಡರ್ ಪಾಸ್ : ಅಧಿಕಾರಿಗಳ ನಿರ್ಲಕ್ಷ್ಯತನ
Posted On: 01 Mar 2024, 01:48 PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಎನ್ಎಚ್ 66, ಅಂಡರ್ಪಾಸ್ನಲ್ಲಿ ಅಳವಡಿಸಲಾಗಿರುವ ದೀಪವು ಕಳೆದ 18 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ, ಇದು ಕಾಪು ನಗರ ಪ್ರದೇಶಕ್ಕೆ ಪ್ರವೇಶಿಸುವ ಮುಖ್ಯ ರಸ್ತೆಯಾಗಿದ್ದು ಈ ಸಮಸ್ಯೆಯನ್ನು ಮನಗಂಡು ಸ್ಥಳೀಯರಾದ ಜಯರಾಮ್ ಆಚಾರ್ಯ ಇವರು ರಾಷ್ಟ್ರೀಯ ಹೆದ್ದಾರಿ, ಜಿಲ್ಲಾಧಿಕಾರಿ, ತಹಶೀಲ್ದಾರ್, ಕಾಪು ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಅಂಡರ್ ಪಾಸ್ ಮೂಲಕ ಬಹಳಷ್ಟು ವಾಹನಗಳು ಮತ್ತು ಜನರು ಚಲಿಸುತ್ತಾರೆ. ಬೆಳಕಿಲ್ಲದೆ ಅಕ್ಕಪಕ್ಕದಲ್ಲಿ ನಿಂತಿರುವ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಮಾರ್ಚ್ 26 ಮತ್ತು 27 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಪೂಜೆಯನ್ನು ಆಚರಿಸಲಾಗುತ್ತದೆ ಆದ್ದರಿಂದ ಇಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ ಎಂಬುದನ್ನು ಗಮನಿಸಿ ಬೆಳಕಿನ ವ್ಯವಸ್ಥೆ ಮಾಡಬೇಕೆಂದು ನಮ್ಮ ಕಾಪು ವಾಹಿನಿಯ ಮೂಲಕ ಆಗ್ರಹಿಸಿದ್ದಾರೆ.
ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ
Posted On: 01 Mar 2024, 01:44 PM
ಶಂಕರಪುರ : ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02, 03 ಶನಿವಾರದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.
