Updated News From Kaup
ಕಾಪು ಮಾರಿಗುಡಿ ಜೀರ್ಣೋದ್ಧಾರ : ಕೋಟೆ ಗ್ರಾಮ ಸಮಿತಿ ರಚನಾ ಸಭೆ ಸಂಪನ್ನ
Posted On: 14 Nov 2023, 03:10 PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಗ್ರಾಮ ಸಮಿತಿ ರಚಿಸಿ, ಪ್ರತಿ ಮನೆಗೂ ಮನವಿ ಪತ್ರ ತಲುಪಿಸಿ ಅಮ್ಮನ ಅಭಯ ವಾಕ್ಯದಂತೆ ದೇವಳ ನಿರ್ಮಾಣದ ವಿಷಯ ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆನ್ನುವುದು ಅಭಿವೃದ್ಧಿ ಸಮಿತಿಯ ಆಶಯದಂತೆ ಶನಿವಾರ ಸಂಜೆ ಕೋಟೆ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ, ಮಂಜ ಶ್ರೀ ನಾಗ ಬ್ರಹ್ಮಾದಿ ಪಂಚದೈವಿಕ ಸನ್ನಿಧಿಯಲ್ಲಿ ಜರಗಿತು. ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ಶಾರದಾ ಡಿ. ಕೆ, ಸ್ಮಿತಾ ಪ್ರವೀಣ್ ಕಾಂಚನ್, ಗೀತಾ ಲಕ್ಷ್ಮಣ್, ಚಂದ್ರಿಕಾ ಚಂದ್ರಹಾಸ್, ಶಶಿಪ್ರಕಾಶ್, ವನಿತಾ ನಾಗೇಶ್, ಬೇಬಿ ಜಿ. ಕರ್ಕೇರ, ಅಶ್ವಿನಿ ಸುನೀಲ್ ಮತ್ತು ಮಾಲತಿ ಶಂಕರ್ ಇವರು ಏಕಕಾಲದಲ್ಲಿ ದೀಪ ಬೆಳಗಿಸಿ ಅಮ್ಮನಿಗೆ ಆರತಿ ಎತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಸುವರ್ಣ ಮಾತನಾಡಿ ಅಮ್ಮನ ಸೇವೆ ಮಾಡುವುದು ನಮ್ಮೆಲ್ಲರ ಭಾಗ್ಯ,ಈ ಅವಕಾಶ ಮತ್ತೆಂದೂ ಸಿಗದು ಗ್ರಾಮ ಸಮಿತಿಯ ಮುಖೇನ ನಾವೆಲ್ಲರೂ ಅಮ್ಮನ ಸೇವೆಯನ್ನು ಮಾಡಲು ಕಾರ್ಯಪ್ರವೃತರಾಗೋಣ ಎಂದರು. ಉಪಾಧ್ಯಕ್ಷರಾದ ಮಾಧವ ಆರ್ ಪಾಲನ್ ಗ್ರಾಮ ಸಮಿತಿಯ ದ್ಯೇಯೋದ್ದೇಶಗಳನ್ನು ತಿಳಿಸುವ ಮೂಲಕ ಗ್ರಾಮದ ಪ್ರತೀ ಮನೆಯಿಂದಲೂ ಕನಿಷ್ಠ ಒಂಬತ್ತು ಶಿಲಾಸೇವೆಯನ್ನು (ರೂಪಾಯಿ 9,999) ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕು ಎಂದು ವಿನಂತಿಸಿದರು. ನಂತರ ಗ್ರಾಮ ಸಮಿತಿಯನ್ನು ರಚನೆ ಮಾಡಿ ಕೋಟೆ ಗ್ರಾಮದ 9 ಜನ ಪುರುಷರ 1 ತಂಡ ಮುಖ್ಯ ಸಂಚಾಲಕರಾಗಿ ಚಂದ್ರಹಾಸ್ ಕೋಟ್ಯಾನ್ ಹಾಗೂ 9 ಜನ ಮಹಿಳೆಯರ 1 ತಂಡ ಮುಖ್ಯ ಸಂಚಾಲಕರಾಗಿ ಶಾರದಾ ಡಿ. ಕೆ ಇವರನ್ನು ಆಯ್ಕೆ ಮಾಡಲಾಯಿತು. ಗ್ರಾಮದ ಪ್ರತಿ ಮನೆ ಮನೆಗೆ ತಲುಪಿಸುವ ಮನವಿ ಪತ್ರವನ್ನು ಮತ್ತು ಸ್ಟಿಕ್ಕರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪ್ರವೀಣ್ ಕಾಂಚನ್ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಭಾತ್ ಶೆಟ್ಟಿ ಮೂಳೂರು, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಕೋಟೆ ಗ್ರಾಮದ ಪ್ರಮುಖರಾದ ಸದಿಯ ಸುವರ್ಣ ಕೋಟೆ, ಸಂಜೀವ ಮೆಂಡನ್, ಜಗನ್ನಾಥ ಕೋಟೆ, ಶೇಖರ್ ಸುವರ್ಣ, ಪಂಡರಿನಾಥ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರವೀಣ್ ಕಾಂಚನ್ ಉಪಸ್ಥಿತರಿದ್ದರು. ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿದರು. ಜೀರ್ಣೋದ್ಧಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಸ್ತಾವನೆಗೈದರು.
ಕಾಪು : ಪೈಯ್ಯಾರು ಹಿಂದೂ ಜಾಗರಣ ವೇದಿಕೆ ವತಿಯಿಂದ 3 ನೇ ವರ್ಷದ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ
Posted On: 14 Nov 2023, 12:07 PM
ಕಾಪು : ಹಿಂದೂ ಜಾಗರಣ ವೇದಿಕೆ ಪೈಯ್ಯಾರು ಘಟಕ ವತಿಯಿಂದ 3 ನೇ ವರ್ಷದ ಸಾರ್ವಜನಿಕ ಗೋಪೂಜೆ ಹಾಗೂ ವಾಹನ ಪೂಜೆಯು ಪೈಯ್ಯಾರು ಕರಿಯಣ್ಣ ಶೆಟ್ಟಿ ಶಾಲೆಯ ಮೈದಾನದಲ್ಲಿ ಜರಗಿತು. ಈ ಸಂದರ್ಭ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಶೆಟ್ಟಿ ಪೈಯ್ಯಾರು, ಕೃತಿ ಮೂಡಬೆಟ್ಟು, ಹಿಂದೂ ಜಾಗರಣ ವೇದಿಕೆ ಪ್ರಮುಖರಾದ ಗುರುಪ್ರಸಾದ್ ಸೂಡ, ರಾಜೇಶ್ ಪೈಯ್ಯಾರು ಉಪಸ್ಥಿತರಿದ್ದರು.
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು - ಸಾಮೂಹಿಕ ಗೋವು ಪೂಜಾ ಕಾರ್ಯಕ್ರಮ
Posted On: 14 Nov 2023, 11:58 AM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇದರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ದೀಪಾವಳಿಯ ಪಾಡ್ಯದಂದು ಸಾಮೂಹಿಕ ಗೋವು ಪೂಜಾ ಕಾರ್ಯಕ್ರಮ ಮಂಗಳವಾರದಂದು ಶ್ರೀ ಪ್ರದೀಪ್ ಶಾಂತಿ ಅವರಾಲು ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಪಲಿಮಾರು ಪಂಚಾಯತ್ ಮಾಜಿ ಅಧ್ಯಕ್ಷರಾದ ಗಾಯತ್ರಿ ಪ್ರಭು, ಪಲಿಮಾರು ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ವರ ಪೈ, ಪ್ರಸಾದ್ ಪಲಿಮಾರು , ಸುರೇಶ್ ಪೂಜಾರಿ ಅವರಾಲು, ತಿಮ್ಮಪ್ಪ ಪೂಜಾರಿ, ಸಂಸ್ಥೆಯ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು : ಸೌಹಾರ್ದ ದೀಪಾವಳಿಯ ಸಂಭ್ರಮ - 2023 ಸಂಪನ್ನ
Posted On: 14 Nov 2023, 08:05 AM
ಮಂಗಳೂರು : ವಾಮಂಜೂರಿನ ಮಂಗಳಜ್ಯೋತಿ ಜಂಕ್ಷನ್ ಬಳಿ ಅಂಧಕಾರದಲ್ಲಿ ಮುಳುಗಿದ ಸಮಾಜವನ್ನು ಬೆಳಕಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಮದರ್ ತೆರೆಸಾ ವಿಚಾರ ವೇದಿಕೆ ,ಮಂಗಳೂರು ಇದರ ನೇತೃತ್ವದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ - 2023ರ ಕಾರ್ಯಕ್ರಮ ಜರಗಿತು. ಸೌಹಾರ್ದ ದೀಪಾವಳಿ ಸಂಭ್ರಮ-2023 ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀಯುತ ಮುಲ್ಲೈ ಮುಹಿಲನ್ ರವರು ದೀಪ ಬೆಳಗಿಸಿ ಉದ್ಘಾಟಿಸಿ, ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿಕೊಂಡು ಈ ಬೆಳಕಿನ ಹಬ್ಬ ಆಚರಿಸಬೇಕು. ಆಗಲೇ ದೀಪಾವಳಿ ಅರ್ಥಪೂರ್ಣವಾಗುವುದು ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂಗಳೂರು ಪ್ರಗತಿಪರ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಡಾ. ವಸಂತ್ ಕುಮಾರ್ ಮಾತನಾಡಿ, ಬೆಳಕು ಎಲ್ಲರಿಗೂ ಬೇಕು. ಹಾಗಾಗಿ ಬೆಳಕಿನ ಹಬ್ಬಕ್ಕೆ ಜಾತಿ-ಧರ್ಮ ಎಂಬುದಿಲ್ಲ. ದಾರಿ ತಪ್ಪುತ್ತಿರುವ ಯುವಕರಿಗೆ ಉತ್ತಮ ಸಂಸ್ಕಾರ ನೀಡಿ ಉತ್ತಮ ಸಮಾಜದ ನಿರ್ಮಿಸಬೇಕು. ಸಮಾಜ ಎಂಬ ಮೂರಕ್ಷರದಲ್ಲಿ `ಸಂಬ೦ಧಗಳು ಮಾನವನಲ್ಲಿ ಜನಿಸಬೇಕು ಎಂಬ ಅರ್ಥ ಅಡಗಿದೆ. ಅದೇ ಸಮಾಜ ಭಾವನೆ. ಸಂಸ್ಕಾರ ಎಂದರೆ ಬರೇ ದೇವಸ್ಥಾನ ಕಟ್ಟುವುದು ಮೂರ್ತಿ ಕೆತ್ತುವುದಲ್ಲ. ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಆರೋಗ್ಯ ನೀಡುವುದು ಎಂದರು. ಮ೦ಗಳೂರಿನ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ. ಸುದೀಪ್ ಪೌಲ್ ಮಾತನಾಡಿ, ಭಾರತದ ಇತಿಹಾಸ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಕಂಡಿದೆ. ಆಗ ಎಲ್ಲರೂ ಪ್ರೀತಿ, ಸಾಮರಸ್ಯ, ಭಾವೈಕ್ಯತೆಯಿಂದ ಜೀವಿಸುತ್ತಿದ್ದೆವು. ಆದರೆ ಈಗ ಎಲ್ಲವೂ ಬದಲಾಗಿದೆ. ದೀಪಾವಳಿ ಎಲ್ಲ ಧರ್ಮದ ಗಡಿ ಮೀರಿ ಆಚರಿಸುವ ಹಬ್ಬವಾಗಲಿ ಎಂದು ಶುಭ ಹಾರೈಸಿದರು. ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ ಅಧ್ಯಕ್ಷತೆ ವಹಿಸಿದ್ದರು. ಕು. ಲತೀಕ್ಷಾ ಸ್ವಾಗತ ನೃತ್ಯ ಮಾಡಿದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ ಪ್ರಸ್ತಾವಿಕ ಮಾತನ್ನಾಡಿದರು. ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್, ಮಂಗಳಜ್ಯೋತಿಯ ಕೊರಗಜ್ಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಲಕ್ಷ್ಮಣ್ ವಾಮಂಜೂರು, ಮಂಗಳೂರು ಬೆಥನಿ ಸಿಸ್ಟರ್ ಪ್ರೊವಿನ್ಸಿಯಲ್ ಸುಪೀರಿಯರ್ ಸಿಸ್ಟರ್ ಸಿಸಿಲಿಯಾ ಮೆಂಡೋನ್ಸಾ,ಮಂಜುಳ ನಾಯಕ್ (ಜಂಟಿ ಕಾರ್ಯದರ್ಶಿ), ಡಾಲ್ಫಿ ಡಿ’ಸೋಜ(ಕೋಶಾಧಿಕಾರಿ) ಹಾಗೂ ಇತರ ಹಿರಿಯ ಗಣ್ಯರು, ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮನೋಜ್ ಕುಮಾರ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಮತ್ತು ಬಳಗದವರು ಸೌಹಾರ್ದ ನೃತ್ಯ ಪ್ರದರ್ಶಿಸಿದರು.
ಉಡುಪಿ ಜಿಲ್ಲೆಯ ನೇಜಾರು ಪ್ರಕರಣ : ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯ ಒದಗಿಸಬೇಕು - ರಮೀಜ್ ಹುಸೇನ್
Posted On: 14 Nov 2023, 07:45 AM
ಉಡುಪಿ : ಜಿಲ್ಲೆಯ ನೇಜಾರುನಲ್ಲಿ ನಡೆದ ಅಮಾನವೀಯ ಕೊಲೆ ಘಟನೆ ಮನುಷ್ಯತ್ವವನ್ನು ಮರೆ ಮಾಚುವಂತಾಗಿದೆ. ಜಿಲ್ಲೆಯಲ್ಲಿ ನಡೆದ ಈ ಕೂಲೆ ಘಟನೆ ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ. ತಾಯಿ ಮಕ್ಕಳನ್ನು ಕೊಂದು ಮರೆಯಾದ ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಆಗ್ರಹಿಸಿದ್ದಾರೆ. ಈ ಘಟನೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರು ನೇತೃತ್ವ ವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ದೇಶ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಳ್ಳಂಬೆಳಿಗ್ಗೆ ಒಂದೇ ಮನೆಯ ತಾಯಿ ಹಾಗು ಮೂರು ಮಕ್ಕಳನ್ನು ಕೊಂದು ಹಾಕಿದ್ದು ದು:ಖಕರವಾಗಿದೆ. ಈ ಘಟನೆಯಿಂದ ಜಿಲ್ಲೆಯ ಜನತೆ ದು:ಖಿಸುವಂತೆ ಮಾಡಿದೆ. ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೊಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸಿ, ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಾಳೆ : ಹಿಂದೂ ಜಾಗರಣ ವೇದಿಕೆ ಪೈಯ್ಯಾರು ಘಟಕ ವತಿಯಿಂದ ಗೋಪೂಜೆ ಹಾಗೂ ವಾಹನ ಪೂಜೆ
Posted On: 13 Nov 2023, 07:09 PM
ಕಾಪು : ಹಿಂದೂ ಜಾಗರಣ ವೇದಿಕೆ ಪೈಯ್ಯಾರು ಘಟಕ ಕಾಪು ತಾಲೂಕು ವತಿಯಿಂದ ಗೋಪೂಜೆ ಹಾಗೂ ವಾಹನ ಪೂಜೆಯು ನವೆಂಬರ್ 14, ಮಂಗಳವಾರದಂದು ಬೆಳಿಗ್ಗೆ 9.30 ರಿಂದ ಪೈಯ್ಯಾರು ಶಾಲೆ ಸಮೀಪ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.
ಮಟ್ಟಾರು : 11 ನೇ ವರ್ಷದ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ
Posted On: 13 Nov 2023, 05:11 PM
ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ 11 ನೇ ವರ್ಷದ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ವಿಷ್ಣುಮೂರ್ತಿ ಉಪಾಧ್ಯಾಯರ ಮುಂದಾಳುತ್ವದಲ್ಲಿ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ನವೆಂಬರ್ 5 ರಂದು ಜರಗಿದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಅಧ್ಯಾಪಕರಾದ ಭಾಸ್ಕರ ಶೆಟ್ಟಿ ಬೆಳೆಂಜಾಲೆ ಸಭಾಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಅರ್ಚಕ ವಿಷ್ಣುಮೂರ್ತಿ ಉಪಾಧ್ಯಾಯ, ಬಜರಂಗದಳ ಕಾಪು ಪ್ರಖಂಡ ಗೋರಕ್ಷಾ ಪ್ರಮುಖ್ ಅಭಿನಂದನ್ ಪಡುಬಿದ್ರಿ, ಶಿರ್ವ ವಲಯ ಸಂಚಾಲಕ ವಿಶ್ವನಾಥ ಆಚಾರ್ಯ, ವಿಶ್ವ ಹಿಂದು ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ, ಕೋಶಾಧಿಕಾರಿ ಅಜಿತ್ ಪೂಜಾರಿ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ಪ್ರಭು ಸ್ವಾಗತಿಸಿ, ವಂದಿಸಿದರು.
ಕಟಪಾಡಿ : ಯೋಗ ದೀಪಾವಳಿ ಸಂಪನ್ನ
Posted On: 13 Nov 2023, 05:03 PM
ಕಟಪಾಡಿ : ಇಲ್ಲಿನ ಪತಂಜಲಿ ಯೋಗ ಸಮಿತಿ ಉಡುಪಿ ಕಟಪಾಡಿ ಕಕ್ಷೆ ವತಿಯಿಂದ ಕಟಪಾಡಿ ಇನ್ವೆಂಜರ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ವಿಶೇಷವಾಗಿ ಹಣತೆ ದೀಪಗಳೊಂದಿಗೆ ಯೋಗ ದೀಪಾವಳಿ ಕಾರ್ಯಕ್ರಮವನ್ನು ಕಟಪಾಡಿ ಮಹಿಳಾ ಮಂಡಲ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು. ಕಟಪಾಡಿ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಸತ್ಯೇಂದ್ರ ಪೈ ದೀಪಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಸನಾತನ ಹಿಂದೂ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ಮಾನ್ಯತೆ ನೀಡಲಾಗಿದೆ. ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವಲ್ಲಿ ಬೆಳಕು ಎಷ್ಟು ಪ್ರಾಮುಖ್ಯವೋ ಆರೋಗ್ಯಕರ ಜೀವನ ಸಾಗಿಸುವಲ್ಲಿ ನಿರಂತರ ಯೋಗಾಭ್ಯಾಸ ಕೂಡಾ ಅತೀ ಅಗತ್ಯ ಎಂದರು. ಪತಂಜಲಿ ಯೋಗ ಸಮಿತಿ ಕಟಪಾಡಿ ಕಕ್ಷೆಯ ಯೋಗಶಿಕ್ಷಕ ರಾಜೇಶ್ ಕಾಮತ್ ಅವರು ದೀಪದ ಬೆಳಕಿನೊಂದಿಗೆ ಮಹತ್ವದ ಯೋಗಾಸನಗಳನ್ನು ಕಲಿಸಿಕೊಟ್ಟರು. ಸಹಶಿಕ್ಷಕ ರಾಮಚಂದ್ರ ಪೈ, ಶಿಬಿರಾರ್ಥಿಗಳಾದ ಪ್ರದೀಪ್ ಆರ್. ಶೆಟ್ಟಿ, ಅನುಪಮ ಪೈ, ಅರುಂಧತಿ ಕಾಮತ್, ನಂದಿನಿ ಶೆಣೈ, ಸುಧೀಂದ್ರ ಶೆಟ್ಟಿ ಪಾಂಗಳ, ಪ್ರವೀಣ್ ಭಕ್ತ, ಸಂಪತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಟಪಾಡಿ ಸೃಷ್ಠಿ ಫೌಂಡೇಶನ್ ಅಧ್ಯಕ್ಷ ಪ್ರಕಾಶ ಸುವರ್ಣ ಕಟಪಾಡಿ ಸ್ವಾಗತಿಸಿದರು. ರಂಗನಟ ನಾಗೇಶ್ ಕಾಮತ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾಪು : ಎಸ್.ಕೆ.ಪಿ.ಎ ವತಿಯಿಂದ ಗೋವುಗಳ ಪೂಜೆ, ಹಿಂಡಿ ವಿತರಣೆ
Posted On: 13 Nov 2023, 12:59 PM
ಕಾಪು : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಕಾಪು ವಲಯದ ವತಿಯಿಂದ ದೀಪಾವಳಿ ಪ್ರಯುಕ್ತ ಕಾಪು ಗೋ ಶಾಲೆಯಲ್ಲಿ ಗೋಪೂಜೆ ಆಚರಿಸಲಾಯಿತು. ಕಾಪು ಶ್ರೀ ಲಕ್ಷ್ಮಿ ಜನಾರ್ದನ ದೇವಳದ ಸಮೀಪದ ಗೋಶಾಲೆಯ ಗೋಪಾಲಕೃಷ್ಣ ಮೂರ್ತಿಗೆ ಪೂಜೆಯನ್ನು ಸಲ್ಲಿಸಿ, ಗೋವುಗಳಿಗೆ ಹಿಂಡಿ, ಫಲ, ದವಸ ಧಾನ್ಯಗಳನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ, ಗೌರವಾಧ್ಯಕ್ಷ ಕರುಣಾಕರ ನಾಯಕ್, ಕಾರ್ಯದರ್ಶಿ ರಾಘವೇಂದ್ರ ಭಟ್, ಉಪಾಧ್ಯಕ್ಷ ಸಂತೋಷ್ ಕಾಪು, ಸತೀಶ್ ಅದಮಾರು, ಪೂರ್ವಾಧ್ಯಕ್ಷರುಗಳಾದ ಸುಬ್ರಹ್ಮಣ್ಯ ಐತಾಳ್, ಅನಂತರಾಜ್ ಭಟ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೃಷ್ಣ ರಾವ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಮುದರಂಗಡಿ : ವಿದ್ಯಾನಗರ ಫ್ರೆಂಡ್ಸ್ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಗಳು
Posted On: 13 Nov 2023, 12:47 PM
ಮುದರಂಗಡಿ : ವಿದ್ಯಾನಗರ ಫ್ರೆಂಡ್ಸ್ ವಿದ್ಯಾನಗರ ಮುದರಂಗಡಿ ಹಾಗೂ ಊರಿನ ಸಹೃದಯಿ ದಾನಿಗಳ ಸಹಯೋಗದೊಂದಿಗೆ ದೀಪಾವಳಿಯಂದು ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಸಾವಿತ್ರಿ ಆಚಾರ್ಯ ಮೈಕೋಡಿ ಇವರ ಮನೆಯ ಟಾಯ್ಲೆಟ್ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಯಲ್ಲಿದ್ದು, ಅದನ್ನು ಸಂಪೂರ್ಣವಾಗಿ ಪುನನಿರ್ಮಿಸಿ ಹಸ್ತಾಂತರಿಸಲಾಯಿತು. ವಿದ್ಯಾನಗರದಲ್ಲಿ ಅಳವಡಿಸಿದ ರೋಡ್ ಮಿರರ್ ಉದ್ಘಾಟನೆ ಹಾಗೂ ಒಂದು ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು, ಒಂದು ವಿದ್ಯಾರ್ಥಿಯ ಶಾಲಾ ಶುಲ್ಕವನ್ನು ಗಣ್ಯರ ಉಪಸ್ಥಿತಿಯಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ದುರ್ಗಾ ಮಂದಿರದ ಅರ್ಚಕರಾದ ಶ್ರೀಧರ ಆಚಾರ್ಯ, ಉದ್ಯಮಿಗಳಾದ ಗಂಗಾಧರ್ ಶೆಟ್ಟಿ ಮತ್ತು ವಿಶ್ವನಾಥ್ ಶೆಟ್ಟಿ, ಹರಿ ಎಚ್ ಮೈಕೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಶಿವರಾಮ್ ಭಂಡಾರಿ ಸ್ಥಳೀಯರಾದ ರಾಮ ಪೂಜಾರಿ ಹಾಗೂ ವಿದ್ಯಾ ನಗರ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.
