Updated News From Kaup
ಕಾಪು : ಸತತ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ; ಅಭಿನಂದನಾ ಸಮಾರಂಭ
Posted On: 14 Oct 2023, 12:50 PM
ಕಾಪು : ಸತತ 3 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭವು ಇಂದು ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ, ಸಿಬ್ಬಂದಿವರ್ಗವನ್ನು ಅಭಿನಂದಿಸಿದರು. 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದ್ದು, ಇದಕ್ಕೆ ಕಾರಣಿಕರ್ತರಾದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಆರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಉಡುಪಿ : ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ
Posted On: 14 Oct 2023, 08:31 AM
ಉಡುಪಿ : ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಈ ಅವದಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕಟಪಾಡಿ : ಅಕ್ಟೋಬರ್ 15 ರಿಂದ 24ರ ವರೆಗೆ ಉಚಿತ ಪ್ರಾಣ ಯೋಗ ಶಿಬಿರ
Posted On: 14 Oct 2023, 07:50 AM
ಕಟಪಾಡಿ : ಪತಂಜಲಿ ಯೋಗ ಸಮಿತಿ ಉಡುಪಿ, ಕಟಪಾಡಿ ಕಕ್ಷೆ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅಕ್ಟೋಬರ್ 15 ರಿಂದ 24ರ ವರೆಗೆ 10 ದಿನಗಳ ಕಾಲ ಬೆಳಿಗ್ಗೆ 5.30ರಿಂದ 6.45 ರತನಕ ಉಚಿತ ಪ್ರಾಣ ಯೋಗ ಶಿಬಿರವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತಂಜಲಿ ಯೋಗ ಸಮಿತಿಯ ನುರಿತ ಹಿರಿಯ ಯೋಗ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಕಟಪಾಡಿ ಪತಂಜಲಿ ಯೋಗ ಸಮಿತಿಯ ಮುಖ್ಯ ಯೋಗ ಶಿಕ್ಷಕ ರಾಜೇಶ್ ಕಾಮತ್ ರವರು ಶಿಬಿರವನ್ನು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾಗೇಶ್ ಕಾಮತ್ (9886432197)ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಜಮಾಡಿ : ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿ - ತಪ್ಪಿದ ಅನಾಹುತ
Posted On: 13 Oct 2023, 11:38 PM
ಹೆಜಮಾಡಿ : ದಾರಿಯಲ್ಲಿ ಏನೇ ಆದರು ನಮಗ್ಯಾಕೆ ಎನ್ನುವ ಈ ಕಾಲದಲ್ಲಿ ರಸ್ತೆ ಮೇಲೆ ಬಿದ್ದ ವಿದ್ಯುತ್ ತಂತಿಯನ್ನು ನೋಡಿದ ಕೂಡಲೇ ಸಾಮಾಜಿಕ ಕಾರ್ಯಕರ್ತನೋರ್ವ ಮೆಸ್ಕಾಂಗೆ ಮಾಹಿತಿ ನೀಡಿ, ತಕ್ಷಣ ಕಾರ್ಯಪ್ರವೃತ್ತನಾದ ಇಲಾಖೆ ಸಿಬ್ಬಂದಿ ಆಗಬಹುದಾದ ಅನಾಹುತ ತಪ್ಪಿಸಿದ ಘಟನೆ ಶುಕ್ರವಾರ ತಡರಾತ್ರಿ ಹೆಜಮಾಡಿಯಲ್ಲಿ ನಡೆದಿದೆ. ಗ್ರಾಮದ ಪರಪಟ್ಟ ಪರಿಸರದಲ್ಲಿ ವಿದ್ಯುತ್ ತಂತಿಯು ಕಡಿದು ರಸ್ತೆಯ ಮೇಲೆಯೇ ಬಿದ್ದಿರುವುದನ್ನು ಸಾಮಾಜಿಕ ಕಾರ್ಯಕರ್ತರಾದ ಚಂದ್ರಹಾಸ ನಡಿಕುದ್ರು ಇವರು ಗಮನಿಸಿ ತಕ್ಷಣ ಮೆಸ್ಕಾಂ ಇಲಾಖೆಯ ಸಿಬ್ಬಂದಿಯವರಾದ ಪ್ರವೀಣ್ ಇವರಿಗೆ ವಿಷಯವನ್ನು ತಿಳಿಸಿ ಅನಾಹುತವನ್ನು ತಪ್ಪಿಸಿದ್ದಲ್ಲದೇ ಆದಷ್ಟು ಶೀಘ್ರದಲ್ಲೇ ಸರಿಪಡಿಸಿದ್ದಾರೆ. ಚಂದ್ರಹಾಸ ಮತ್ತು ಪ್ರವೀಣ್ ಇವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಮೊದಲು ಹೆಜಮಾಡಿ ಗ್ರಾಮದಲ್ಲಿ ಇದೇ ರೀತಿ ವಿದ್ಯುತ್ ತಂತಿ ಕಡಿದು ಬಿದ್ದಾಗ ಅದಕ್ಕೆ ಎರಡು ಮಂದಿ ದುರ್ಮರಣಕ್ಕೆ ಬಲಿಯಾಗಿದ್ದನ್ನು ಸ್ಮರಿಸಬಹುದು. ಹೆಜಮಾಡಿ ಗ್ರಾಮದ ಹೆಚ್ಚಿನ ಕಡೆಗಳಲ್ಲಿ ತುಕ್ಕು ಹಿಡಿದಿರುವ ವಿದ್ಯುತ್ ತಂತಿಗಳನ್ನು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ವಿಶೇಷ ಗಮನಹರಿಸಿ ಆದಷ್ಟು ಶೀಘ್ರದಲ್ಲೇ ಸರಿಪಡಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಉಡುಪಿ : ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದೆಂದು ಮನವಿ
Posted On: 13 Oct 2023, 09:06 PM
ಉಡುಪಿ : ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿ ದಿನೇಶ್ ಮೆಂಡನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ಬಜರಂಗದಳ ಸಹ ಸಂಚಾಲಕ ಗುರುರಾಜ್ ಸಂಗಮ್ ಹಾಗೂ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.
ಪಲಿಮಾರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Posted On: 13 Oct 2023, 07:20 PM
ಪಲಿಮಾರು : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ತಂದೆ ತಾಯಿಯ ಪ್ರೀತಿ ಹಾಗೂ ತ್ಯಾಗವನ್ನು ಅರ್ಥ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಶಿರ್ವ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆ ಬೋಧಿಸಲಾಯಿತು. ವಲಯ ಮೇಲ್ವಿಚಾರಕರಾದ ಶ್ರುತಿ, ಸೇವಾ ಪ್ರತಿನಿಧಿಗಳು, ಉಪನ್ಯಾಸಕರಾದ ಜ್ಯೋತಿ, ಚೈತ್ರ, ನಿಶಾ, ಸ್ವಾತಿ, ಅಮೃತ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಪವಿತ್ರ ಸ್ವಾಗತಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರೌಢ ಶಾಲಾ ಹಿರಿಯ ಸಹಶಿಕ್ಷಕರಾದ ಸುನಿತಾ ವಂದಿಸಿದರು.
ಅಕ್ಟೋಬರ್ 15 - 24 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
Posted On: 13 Oct 2023, 06:30 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.15ರಂದು ಭಾನುವಾರ ಬೆಳಿಗ್ಗೆ ಗಂಟೆ 09:09ಕ್ಕೆ ಸರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ನವಶಕ್ತಿ ವೈಭವ ವೇಷ ಭೂಷಣ/ ನೃತ್ಯರೂಪಕ ಸ್ಪರ್ಧೆಯೊಂದಿಗೆ ಮೊದಲ್ಗೊಂಡು ಅ. 24 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವವು ಜರಗಲಿದೆ. ಇದರೊಂದಿಗೆ ಅ. 17ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸಂಪನ್ನಗೊಳ್ಳಲಿದೆ. ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಅ.15ರಿಂದ ಮೊದಲ್ಗೊಂಡು ಅ. 24ರವರೆಗೆ ಪ್ರತೀ ದಿನ ಮಂಗಳ ವಾದ್ಯ, ಉಷಾಃ ಕಾಲ ಕಲ್ಪೋಕ್ತ ಪೂಜೆ, ಗಣಯಾಗ, ಶಕ್ತಿಯಾಗ, ಲಲಿತಾರ್ಚನೆ, ಸುವಾಸಿನಿ ಪೂಜೆ, ರಾತ್ರಿ ಪೂಜೆ ಮತ್ತು ಏಕಾಂತ ಸೇವೆ ನಡೆಯಲಿದೆ. ಹಾಗೂ ಭಜನೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಅ. 15ರಂದು ಪೂರ್ವಾಹ್ನ ಕವಾಟೋದ್ಘಾಟನೆ, ಅ. 16ರಂದು ಬೆಳಗ್ಗೆ 9.9ಕ್ಕೆ ಜೀರ್ಣೋದ್ಧಾರ ಸಮಿತಿಯ ಗ್ರಾಮ ಸಮಿತಿಯ ಮಹಿಳೆಯರ ಪಾಲ್ಗೊಳ್ಳುವಿಕೆಯೊಂದಿಗೆ ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅ. 17ರಂದು ಕದಿರು ಕಟ್ಟುವುದು, ಮಧ್ಯಾಹ್ನ 11.30ಕ್ಕೆ ಚಂಡಿಕಾಯಾಗ, ಪೂರ್ಣಾಹುತಿ, ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಶ್ರೀ ದೇವಿ ದರ್ಶನ, ಕವಾಟ ಪೂರಣ, ಮಧ್ಯಾಹ್ನ ದೇವಿ ದರ್ಶನ ನಡೆಯಲಿದೆ. ಅ. 24 ರಂದು ಸಮಷ್ಠಿ ಪೂಜೆ, ಮಂಗಳ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ಸಮಿತಿಯ ನೇತೃತ್ವದಲ್ಲಿ ಬೆಳಗ್ಗೆ ಗಂಟೆ 9.9 ರಿಂದ ಆಹ್ವಾನಿತ ತಂಡಗಳಿಗೆ ನವಶಕ್ತಿ ವೈಭವ ನೃತ್ಯ ಸ್ಪರ್ಧೆ, ಅ. 19ರಂದು ಸಂಜೆ 7 ಗಂಟೆಯಿಂದ ಆನಿದ ಮನದಾನಿ ತುಳು ನಾಟಕ, ಅ. 21ರಂದು ಸಂಜೆ 7 ಗಂಟೆಗೆ ನೃತ್ಯ ಕಾರ್ಯಕ್ರಮ, ಅ. 22ರಂದು ಸಂಜೆ 7 ಗಂಟೆಯಿಂದ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ತುಳುನಾಡ ಸಿರಿ ತುಳು ಯಕ್ಷಗಾನ ನಡೆಯಲಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿರ್ವ : ಮೂಡುಬೆಳ್ಳೆ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ
Posted On: 13 Oct 2023, 05:09 PM
ಶಿರ್ವ : ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಡುಬೆಳ್ಳೆ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಅ.13ರ ಶುಕ್ರವಾರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ನಾಪತ್ತೆಯಾದ ಬಳಿಕ ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಡಿದ್ದು ಎಲ್ಲೂ ಪತ್ತೆಯಾಗಿರಲಿಲ್ಲ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 16 : ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ
Posted On: 13 Oct 2023, 07:30 AM
ಕಾಪು : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅಕ್ಟೋಬರ್ 16 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾಪು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲು ಅಥವಾ ಅರ್ಜಿಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟಕಲ್ಲು : ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ
Posted On: 12 Oct 2023, 05:58 PM
ಬಂಟಕಲ್ಲು : ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದೇವಿಯ ಸನ್ನಿಧಿಯಲ್ಲಿ ಬಂಟಕಲ್ಲಿನಲ್ಲಿ ನಡೆಯಲಿರುವ ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆಗೊಳಿಸುವುದು ಸಂತಸ ತಂದಿದೆ. ಸಮ್ಮೇಳನವು ನಿರ್ವಿಘ್ನವಾಗಿ ಜರುಗಲಿ ಎಂದು ಶ್ರೀದುರ್ಗಾಪರಮೇಶ್ವರೀ ದೇವಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಲೆ ನುಡಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನವೆಂಬರ್ ೪, ಶನಿವಾರ ಜರುಗಲಿರುವ "ಕಾಪು ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ"ದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮೂಡುಬೆಳ್ಳೆಯಲ್ಲಿ ಜರುಗಿದ ಎರಡನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಹಿರಿಯ ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ ಮಾತನಾಡಿ ಕಾಪು ತಾಲೂಕಿನಲ್ಲಿ ನಿರಂತರವಾಗಿ ಐದನೆಯ ಸಮ್ಮೇಳನ ಜರುಗುತ್ತಿದ್ದು, ಪ್ರತೀಯೊಂದು ಸಮ್ಮೇಳನವು ವಿಶಿಷ್ಟ "ಪರಿಕಲ್ಪನೆ"ಯೊಂದಿಗೆ ಅರ್ಥಪೂರ್ಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದರು. ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ, ಸಮ್ಮೇಳನದ ಆಶಯ ಹಾಗೂ ಹೊಸ ತಾಲೂಕು ಕಾಪುವಿನಲ್ಲಿ ಪ್ರತೀ ವರ್ಷವೂ ಮಾದರಿಯಾಗಿ ಸಮ್ಮೇಳನ ನಡೆಯುತ್ತಿರುವುದು ತಾಲೂಕು ಘಟಕದ ಸಂಘಟನಾ ಕಾರ್ಯತತ್ಪರತೆಗೆ ಸಾಕ್ಷಿಯಾಗಿದೆ ಎಂದರು. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಸಮ್ಮೇಳನದ ಕಾರ್ಯಾಧ್ಯಕ್ಷ ಕೆ.ಆರ್.ಪಾಟ್ಕರ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಟಪಾಡಿಯಲ್ಲಿ ಜರುಗಿದ ನಾಲ್ಕನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಖ್ಯಾತ ಕವಯತ್ರಿ, ಲೇಖಕಿ ಕ್ಯಾಥರಿನ್ ರೊಡ್ರಿಗಸ್, ಜಿಲ್ಲಾ ಸಮಿತಿಯ ಗೌರವ ಕೋಶಾಧ್ಯಕ್ಷರಾದ ಮನೋಹರ ಪಿ, ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿನಾಯಕ ಭಟ್, ಬಂಟಕಲ್ಲು ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಕಾಮತ್, ತಾ.ಪಂ.ಮಾಜಿ ಸದಸ್ಯೆ ಗೀತಾ ವಾಗ್ಲೆ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪ್ರಸಾದ್, ನಿವೃತ್ತ ಅಂಚೆಪಾಲಕ ಬಿ.ಭಾಸ್ಕರ ಶೆಟ್ಟಿ, ಕೃಷ್ಣಕುಮಾರ್ ರಾವ್ ಮಟ್ಟು, ದೇವದಾಸ್ ಪಾಟ್ಕರ್ ಮುದರಂಗಡಿ, ಡಿ.ಆರ್.ನೊರೋನ್ಹಾ ಕುರ್ಕಾಲು, ಸ್ಥಳೀಯ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಸಾಪ ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ಕಾಪು ಘಟಕದ ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿದರು.
