Updated News From Kaup

ಉಚ್ಚಿಲ ದಸರಾ ವೈಭವ : ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 - ಪೋಸ್ಟರ್ ಬಿಡುಗಡೆ

Thumbnail
Posted On: 12 Oct 2023, 05:01 PM

ಉಚ್ಚಿಲ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ ಆಶ್ರಯದಲ್ಲಿ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ ಸಹಯೋಗದೊಂದಿಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಉಚ್ಚಿಲ ದಸರಾ ವೈಭವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 ಪೋಸ್ಟರನ್ನು ಗುರುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಕ್ಷೇತ್ರ ಆಡಳಿತ ಅಧ್ಯಕ್ಷ ವಾಸುದೇವ ಸಾಲಿಯನ್, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಸತೀಶ್ ಪಡುಕೆರೆ, ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ, ಅರುಲ್ ಡಿಸೋಜಾ, ಅನಂತ್ ರಾಜ್ ಭಟ್, ಕೃಷ್ಣರಾವ್, ಸುಬ್ರಮಣ್ಯ ಐತಲ್, ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ವೀರೇಂದ್ರ ಶಿರ್ವ ಸ್ವಾಗತಿಸಿದರು. ರಾಘವೇಂದ್ರ ಭಟ್ ವಂದಿಸಿದರು.

ಶಿರ್ವ : ಮೂಡುಬೆಳ್ಳೆ ಯುವತಿ ನಾಪತ್ತೆ

Thumbnail
Posted On: 12 Oct 2023, 02:21 PM

ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಆಕೆ ಉಪಯೋಗಿಸುತ್ತಿದ್ದ ಮೊಬೈಲ್‌ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿದ್ದು,ಆಕೆಯ ಸ್ನೇಹಿತರಲ್ಲಿ,ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 13-14 : ದೇಸಿ ಕ್ರ್ಯೂ ಉದ್ಯೋಗ ಮೇಳ

Thumbnail
Posted On: 11 Oct 2023, 07:19 PM

ಕಾಪು : ಇಲ್ಲಿನ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿಯಿರುವ ದೇಸಿ ಕ್ರ್ಯೂ ಸಂಸ್ಥೆಯಿಂದ ಅಕ್ಟೋಬರ್ 13 ಮತ್ತು 14 ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಯಾವುದೇ ಪದವಿ, ಡಿಪ್ಲೊಮಾ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 6361171305

ಕಾಪು : ನೈಋತ್ಯ ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ

Thumbnail
Posted On: 11 Oct 2023, 07:08 PM

ಕಾಪು : ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತು ಬುಧವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ಜರಗಿತು. ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ನೋಂದಾವಣೆ ಹಾಗೂ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿ ಗರಿಷ್ಠ ಮತದಾರ ಪಟ್ಟಿಯನ್ನು ತಯಾರಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಮುರಳಿಧರ್ ಪೈ, ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಕ್ಟೋಬರ್ 24 : ಶಿರ್ವ ಸಾರ್ವಜನಿಕ ಶಾರದೋತ್ಸವ - ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 11 Oct 2023, 06:56 PM

ಶಿರ್ವ : ಸಾರ್ವಜನಿಕ ಶಾರದೋತ್ಸವ ಸೇವಾ ಸಮಿತಿ, ಶಿರ್ವ ಇದರ ವತಿಯಿಂದ ಅಕ್ಟೋಬರ್ 24 ರಂದು ಜರುಗಲಿರುವ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ಕೇಂಜ ಶ್ರೀದರ್ ತಂತ್ರಿ ಮತ್ತು ಭಾರ್ಗವ ತಂತ್ರಿಯವರ ದಿವ್ಯ ಹಸ್ತ ದಿಂದ ಬಿಡುಗಡೆ ಮಾಡಲಾಯಿತು. ಈ ಸಂದರ್ಭ ಸಮಿತಿಯ ಅದ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾಪು : ಬಸ್ ನಿಲ್ದಾಣ ಬಳಿ ಬಿದ್ದುಕೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಆಸೀಫ್ ಆಪತ್ಭಾಂದವ ಮತ್ತು ತಂಡ

Thumbnail
Posted On: 11 Oct 2023, 06:45 PM

ಕಾಪು : ಕಳೆದ ಎರಡು ದಿನದಿಂದ ಹೊಸ ಮಾರಿಗುಡಿ ಬಳಿಯ ಬಸ್ ನಿಲ್ದಾಣದ ಹತ್ತಿರ ಅನಾಥವಾಗಿ ಬಿದ್ದುಕೊಂಡಿದ್ದ ವ್ಯಕ್ತಿಯೋರ್ವರನ್ನು ಮೈಮುನಾ ಫೌಂಡೇಶನ್ (ರಿ.) ಇದರ ಆಸೀಫ್ ಆಪತ್ಭಾಂದವ ಮತ್ತು ತಂಡ ಅವರನ್ನು ಸ್ನಾನ ಮಾಡಿಸಿ, ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿದರು. ವ್ಯಕ್ತಿಯು ಶಂಕರಪುರ ನಿವಾಸಿ ಶಿವಪ್ಪ ಕುಲಾಲ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯೋಗೀಶ್ ಕೈಪುಂಜಾಲು ಉಪಸ್ಥಿತರಿದ್ದರು.

ಅಕ್ಟೋಬರ್ 15 : ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ

Thumbnail
Posted On: 11 Oct 2023, 06:26 PM

ಕಾಪು : ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಯುವ ಸೇನೆಯ ನೇತೃತ್ವದಲ್ಲಿ ಉಡುಪಿಯಲ್ಲಿ ಅಕ್ಟೋಬರ್ 15ರಂದು ಆಚರಿಸಲಿರುವ ಮಹಿಷಾ ದಸರಾ ಆಚರಣೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ ಎಂದು ಸಮಿತಿಯ ವಿಭಾಗೀಯ ಸಂಚಾಲಕ ಶೇಖರ್ ಹೆಜಮಾಡಿಯವರು ಬುಧವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಾವು ಯಾರ ಆಚರಣೆ ವಿರೋಧಿಸುತ್ತಿಲ್ಲ. ನಾವು ಧರ್ಮ ವಿರೋಧಿಗಳಲ್ಲ. ಯಾರ ಭಾವನೆಗಳಿಗೂ ಧಕ್ಕೆ ತರುವುದಿಲ್ಲ. ಸರಕಾರ ಆದೇಶ ನೀಡಿಲ್ಲ. ಆದರೂ ನಾವು ವಿಚಾರ ಸಂಕೀರ್ಣ ನಿಲ್ಲಿಸುವುದಿಲ್ಲ ಎಂದರು. ಉಡುಪಿಯಲ್ಲಿ ಅಂಬೇಡ್ಕರ್ ಯುವ ಸೇನೆಯ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರರು, ಚಿಂತಕರು, ವಿಚಾರವಾದಿಗಳು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಆನಂದ್ ಬ್ರಹ್ಮಾವರ, ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆಯ ಅಧ್ಯಕ್ಷ ಲೋಕೇಶ್ ಪಡುಬಿದ್ರಿ, ಗೌರವಾಧ್ಯಕ್ಷ ಪಿ ಕೃಷ್ಣ ಬಂಗೇರ ಉಪಸ್ಥಿತರಿದ್ದರು.

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದಿಂದ ಕುತ್ಯಾರು ಆನೆಗುಂದಿ ಗೋಶಾಲೆಗೆ ಹಿಂಡಿ, ಹಸಿ ಹುಲ್ಲು ಸಮರ್ಪಣೆ

Thumbnail
Posted On: 10 Oct 2023, 04:32 PM

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಗೆ ಹಿಂಡಿ ಮತ್ತು ಹಸಿ ಹುಲ್ಲನ್ನು ಸಮರ್ಪಿಸಲಾಯಿತು. ಈ ಸಂದರ್ಭ ಆಶೀರ್ವಚನ ನೀಡಿದ ಆನೆಗುಂದಿ ಮಠದ ಶ್ರೀಗಳು ಬದುಕಿನಲ್ಲಿ ಗೋಮಾತೆಯ ಸೇವೆ ಪ್ರತಿ ವರ್ಷ ಮಾಡುವ ನಿಮ್ಮ ಸಂಸ್ಥೆಗೆ ಗೋಮಾತೆಯ ಆಶೀರ್ವಾದದೊಂದಿಗೆ 33 ಕೋಟಿ ದೇವತೆಗಳ ಆಶೀರ್ವಾದ ಇರಲಿ ಎಂದು ಆಶೀರ್ವದಿಸಿದರು. ಗೋಮಾತೆಗಾಗಿ ದಾನ ನೀಡಿದ ಎಲ್ಲರಿಗೂ ಅಧ್ಯಕ್ಷರಾದ ಉಮೇಶ ಆಚಾರ್ಯರು ಪ್ರತಿ ವರ್ಷ ಗೋಮಾತೆಯ ಸೇವೆ ಮಾಡುವ ಭಾಗ್ಯ ನಮಗೆ ದೇವರು ಕರುಣಿಸಲಿ ಎಂದು ದಾನಿಗಳಿಗೆ ಕೃತಜ್ಞತೆ ಅರ್ಪಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ವಂದಿಸಿದರು.

ಉಡುಪಿ : ಯುವ ರೆಡ್‌ಕ್ರಾಸ್ ಘಟಕದ ಕಾಲೇಜು ವಿದ್ಯಾರ್ಥಿ ನಾಯಕರುಗಳಿಗೆ ತರಬೇತಿ

Thumbnail
Posted On: 10 Oct 2023, 04:21 PM

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಜಂಟಿ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಯುವರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವು ರೆಡ್‌ಕ್ರಾಸ್ ಭವನದಲ್ಲಿ ಸೋಮವಾರ ನಡೆಯಿತು. ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್.ಬಿ ವಿಜಯ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಜನರು ಉತ್ತಮ ಪ್ರಜೆಗಳಾಗಿ ಆರೋಗ್ಯಯುತ ಜೀವನ ನಡೆಸಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯೂತ್ ರೆಡ್‌ಕ್ರಾಸ್ ಘಟಕಗಳ ಮೂಲಕ ನಡೆಸಲಾಗುವ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಯುವಜನರು ಒಳ್ಳೆಯ ಕನಸನ್ನು ಕಂಡು ಅದನ್ನು ಈಡೇರಿಸುವ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯ, ಧೋರಣೆ ಹಾಗೂ ಸೇವೆಗಳು ಅತ್ಯಮೂಲವಾಗಿದ್ದು, ಅಂಗಸಂಸ್ಥೆಯಾದ ಯೂತ್ ರೆಡ್‌ಕ್ರಾಸ್ ಸಂಸ್ಥೆಯ ವಿದ್ಯಾರ್ಥಿಗಳು ಇದನ್ನು ಪಾಲಿಸಬೇಕು ಎಂದರು. ದೇಶದಲ್ಲಿ ಯುವ ಜನತೆಯ ಸಂಖ್ಯೆ ಹೆಚ್ಚಿದ್ದು, ಸ್ವಸ್ಥ್ಯ ರಾಷ್ಟ್ರ ನಿರ್ಮಾಣಕ್ಕೆ ಯುವ ಜನರ ಕೊಡುಗೆ ಅಪಾರ. ಸ್ವಯಂ ಶಿಸ್ತು, ಆತ್ಮವಿಶ್ವಾಸ, ಜೀವನದಲ್ಲಿ ಮಾನವೀಯತೆ ನೆಲೆಯಲ್ಲಿ ಸಮಾಜಕ್ಕೆ ಸೇವೆ ಮಾಡುವಂತಹ, ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವ, ಮಾದಕ ದ್ರವ್ಯಗಳನ್ನು ನಾಶಪಡಿಸಲು ಮುಂದಾಗುವುದು, ವಿರ್ಮಶಾತ್ಮಕ ಚಿಂತನೆ, ಗುರಿಯೆಡೆ ಮುನ್ನುಗ್ಗುವುದು, ತಮ್ಮ ಆರೋಗ್ಯದ ಜೊತೆಗೆ ಕುಟುಂಬದ ಆರೋಗ್ಯ ಕಾಪಾಡುವ ಧ್ಯೇಯವನ್ನು ಯುವ ರೆಡ್ ಕ್ರಾಸ್ನ ವಿದ್ಯಾರ್ಥಿಗಳು ದೃಢ ಸಂಕಲ್ಪದಿಂದ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಾರ್ಥಕ ಜೀವನ ಪಡೆಯಬಹುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಹಾಗೂ ಡಿ.ಡಿ.ಆರ್.ಸಿ ಸದಸ್ಯರುಗಳು, 74 ವಿವಿಧ ಕಾಲೇಜುಗಳ ಯೂತ್‌ರೆಡ್ ಕ್ರಾಸ್ ವಿದ್ಯಾರ್ಥಿ ನಾಯಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ, ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿ, ಗೌರವ ಖಜಾಂಜಿ ರಮಾದೇವಿ ವಂದಿಸಿದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಐ.ಆರ್.ಸಿ.ಎಸ್ ಪ್ರಥಮ ಚಿಕಿತ್ಸೆಯ ಟ್ರೈನರ್ ಡಾ. ಕೀರ್ತಿ ಪ್ರಥಮ ಚಿಕಿತ್ಸೆಯ ಬಗ್ಗೆ ಮತ್ತು ಕುಂದಾಪುರ ಐ.ಆರ್.ಸಿ.ಎಸ್ ಬ್ಲಡ್‌ಬ್ಯಾಂಕ್ನ ತಾಂತ್ರಿಕ ಮುಖ್ಯಸ್ಥ ವಿರೇಂದ್ರ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.

ನವೆಂಬರ್ 4 : ಕಾಪು ತಾಲ್ಲೂಕು ಘಟಕದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ - ಶ್ರೀಧರಮೂರ್ತಿ ಶಿರ್ವ ಸರ್ವಾಧ್ಯಕ್ಷತೆ

Thumbnail
Posted On: 10 Oct 2023, 07:12 AM

ಬಂಟಕಲ್ಲು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲ್ಲೂಕು ಘಟಕದ 5ನೇ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 4, ಶನಿವಾರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದೆ. ಈ ಸಮ್ಮೇಳನಕ್ಕೆ ನಿವೃತ್ತ ಉಪನ್ಯಾಸಕರೂ, ಕನ್ನಡ ಸಂಘಟಕರೂ, ಹವ್ಯಾಸಿ ಯಕ್ಷಗಾನ - ರಂಗ ಕಲಾವಿದರೂ ಆಗಿರುವ ಶಿರ್ವ ಪರಿಸರದ ಕನ್ನಡದ ಸಾಕ್ಷಿಪ್ರಜ್ಞೆ ಕೆ.ಎಸ್. ಶ್ರೀಧರಮೂರ್ತಿ ಶಿರ್ವ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ಕು ದಶಕಕ್ಕೂ ಹೆಚ್ಚಿನ ಅವಧಿಯಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದ ವಿದ್ಯಾರ್ಥಿಕೇಂದ್ರಿತ ಪರಿಕಲ್ಪನೆಯಾದ 'ಸಿರಿಗನ್ನಡದ ಸೊಗಸು; ಭಾಷಾ ಶುದ್ಧತೆಯೆಡೆಗೆ ಪುಟ್ಟ ಹೆಜ್ಜೆಗೆ ಪೂರಕವಾಗಿ ವಿದ್ಯಾರ್ಥಿಗಳಲ್ಲಿ ಕನ್ನಡ ಕಲಿಕೆಯ ಆಸಕ್ತಿಯನ್ನು ಹಾಗೂ ಕನ್ನಡತನವನ್ನು ಬೆಳೆಸುವಲ್ಲಿ ಅವಿರತ ಶ್ರಮಿಸಿದವರು. ಬಡಗುತಿಟ್ಟು ಯಕ್ಷಗಾನದಲ್ಲಿ ಹವ್ಯಾಸಿ ವೇಷಧಾರಿ, ಅರ್ಥಧಾರಿ ಆಗಿರುವ ಅವರ ಬರಹಗಳು ಪತ್ರಿಕೆಗಳಲ್ಲಿ (ವಿಡಂಬನೆ, ವ್ಯಕ್ತಿ ಚಿತ್ರಣ, ವೈಚಾರಿಕತೆ) ಪ್ರಕಟವಾಗಿವೆ. ಗಮಕದಲ್ಲಿ ವ್ಯಾಖ್ಯಾನಕಾರರಾಗಿ, ಅಷ್ಟಾವಧಾನದಲ್ಲಿ ಪ್ರಚ್ಛಕರಾಗಿ ಅವರು ಗಮನಸೆಳೆದಿದ್ದಾರೆ. ಕೃಷಿ, ಹೈನುಗಾರಿಕೆಗಳಲ್ಲೂ ಆಸಕ್ತಿ, ಅನುಭವಿ. ಕನ್ನಡ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕನ್ನಡದ ಕಟ್ಟಾಳು ಶ್ರೀಧರ ಮೂರ್ತಿಯವರು, ವಿದ್ಯಾರ್ಥಿಕೇಂದ್ರಿತವಾಗಿ ಕಮ್ಮಟ, ಕಾರ್ಯಕ್ರಮ, ರಂಗಪ್ರಯೋಗಗಳನ್ನು ನಡೆಸುತ್ತಾ ಬಂದಿದ್ದಾರೆ. ಪರಿಸರದಲ್ಲಿ ಕನ್ನಡ ಹಾಗೂ ಸಾಹಿತ್ಯ-ಸಂಸ್ಕೃತಿಗೆ ಪೂರಕ ವಿವಿಧ ಸಂಘಟನೆಗಳ ರೂವಾರಿಗಳೂ ಆಗಿದ್ದಾರೆ. ಈ ಬಾರಿಯ ಸಮ್ಮೇಳನವು ವಿದ್ಯಾರ್ಥಿಗಳನ್ನೇ ಕೇಂದ್ರೀಕರಿಸಿ, ಅವರಲ್ಲಿ ಕನ್ನಡ ಪ್ರೀತಿಯನ್ನು ಹೆಚ್ಚಿಸುವ ಪ್ರಯತ್ನವಾಗಿದ್ದು, ಇದಕ್ಕೆ ಪೂರಕವಾಗಿ ಶಿರ್ವಾ ಪರಿಸರದಲ್ಲಿ ಹಲವಾರು ಕನ್ನಡ ಮನಸ್ಸುಗಳನ್ನು ಪ್ರೇರೇಪಿಸಿದ, ಅಪಾರ ಅಭಿಮಾನಿ ಶಿಷ್ಯವೃಂದ ಹೊಂದಿರುವ ಕೆ.ಎಸ್. ಶ್ರೀಧರಮೂರ್ತಿಗಳು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಕ.ಸಾ.ಪ. ಕಾಪು ತಾಲ್ಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.