Updated News From Kaup

ಕಾಪು : ಕನ್ನಡ ಬಳಕೆ, ಅಭಿರುಚಿಯನ್ನು ಬೆಳೆಸುವ ಕಾರ್ಯ ಕನ್ನಡ ಭಾಷೆ ಕಲಿಸುವ ಶಿಕ್ಷಕರಿಂದ ಆಗಲಿ - ನೀಲಾವರ ಸುರೇಂದ್ರ ಅಡಿಗ

Thumbnail
Posted On: 16 Sep 2023, 12:31 PM

ಕಾಪು : ಬೋಧಿಸುವ ಭಾಷೆಗೆ ನ್ಯಾಯ ಒದಗಿಸುವ ಕಾರ್ಯ ಶಿಕ್ಷಕರು ಮಾಡಬೇಕಾಗಿದೆ. ಕನ್ನಡ ಭಾಷೆಯ ಮೇಲೆ ಆಂಗ್ಲ ಭಾಷೆಯ ಪ್ರಭಾವ ಅಷ್ಟೇನು ಪ್ರಭಾವ ಬೀರದು. ಕನ್ನಡ ಎಲ್ಲೆಲ್ಲೂ ಅದರದೇ ಆದ ಮಹತ್ವ ಹೊಂದಿದೆ. ಪದವಿಯಲ್ಲಿ ಕಲಾ ವಿಷಯದಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯಸಿಸುವವರ ಸಂಖ್ಯೆಗೆ ಕೊರತೆಯಿಲ್ಲ. ಕನ್ನಡ ಬಳಕೆ ಮತ್ತು ಅಭಿರುಚಿಯನ್ನು ಬೆಳೆಸುವ ಕಾರ್ಯ ಕನ್ನಡ ಭಾಷೆ ಕಲಿಸುವ ಶಿಕ್ಷಕರಿಂದ ಆಗಲಿ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ ವತಿಯಿಂದ ಕಾಪು ತಾಲೂಕು ವ್ಯಾಪ್ತಿಯ ಪಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಕನ್ನಡ ಭಾಷಾ ಶಿಕ್ಷಕರು, ಉಪನ್ಯಾಸಕರಿಗೆ ವಿದ್ಯಾರ್ಥಿಗಳಲ್ಲಿ ಕನ್ನಡ ಕಲಿಕೆ, ಶುದ್ಧ ಕನ್ನಡದ ಬಳಕೆ ಮತ್ತು ಕನ್ನಡ ನಾಡಿನ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸುವ ಕುರಿತು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶನಿವಾರ ಜರಗಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಗಾವ್ಕಂಕರ್ ಮಾತನಾಡಿ ಹೆಚ್ಚು ಭಾಷೆ ಕಲಿತಾಗ ತಿಳುವಳಿಕೆ ಮಟ್ಟ ಹೆಚ್ಚು ಎಂದು ಕಲಿತು ಅದರ ಪರಿಣಾಮ ಭಾಷೆ ಸಂಮಿಶ್ರವಾಗುತ್ತಿದೆ. ಕಾರ್ಯಾಗಾರದ ಮೂಲಕ ಮತ್ತಷ್ಟು ಜ್ಞಾನ ತಿಳಿಯಲು ಸಾಧ್ಯ ಎಂದರು. ಉಪನ್ಯಾಸಕಿ ಪಜ್ಞಾ ಮಾರ್ಪಳ್ಳಿ ದಿಕ್ಸೂಚಿ ಭಾಷಣ ಮಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ವಿಶ್ರಾಂತ ಪತ್ರಕರ್ತ ಎಸ್‌.ನಿತ್ಯಾನಂದ ಪಡ್ರೆ ಹಾಗೂ ಶಿಕ್ಷಕ ರಾಘವೇಂದ್ರ ರಾವ್‌ ಕಟಪಾಡಿ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಕನ್ನಡ ಕಲಿಕೆ, ಶುದ್ಧ ಕನ್ನಡದ ಬಳಕೆ ಮತ್ತು ಕನ್ನಡ ನಾಡಿನ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸುವ ಕುರಿತು ತರಬೇತಿ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಘಟಕದ ಪುಂಡಲೀಕ ಮರಾಠೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಶಂಕರ್, ಕಾಪು ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜಕರಾದ ದೀಪಿಕಾ ಸುವರ್ಣ, ಕಾರ್ಯದರ್ಶಿಗಳಾದ ಅಶ್ವಿನ್ ಲಾರೆನ್ಸ್, ನೀಲಾನಂದ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಕಾರ್ಯದರ್ಶಿ ನೀಲಾನಂದ ನಾಯಕ್ ನಿರೂಪಿಸಿದರು. ಅಶ್ವಿನ್ ಲಾರೆನ್ಸ್ ವಂದಿಸಿದರು.

ಉಡುಪಿ : ಮಲ್ಪೆಯ ತೊಟ್ಟಂ ನಲ್ಲಿ ಗ್ರಾನೈಟ್ ಬಿದ್ದು ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪರಿಹಾರ ನೀಡಲು SDTU ಆಗ್ರಹ

Thumbnail
Posted On: 16 Sep 2023, 07:21 AM

ಉಡುಪಿ : ಮಲ್ಪೆಯ ತೊಟ್ಟಂನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ. ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುಡಿಸುವವರು ಅನುಕೂಲಕ್ಕೆ ತಕ್ಕ ಹೊರರಾಜ್ಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಕ್ರಮ ವಹಿಸದೆ ಕಾರ್ಮಿಕರನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಕಾರಣದಿಂದ ಸಾವು ನೋವುಗಳು ಸಂಭವಿಸುವ ಘಟನೆಗಳು ನಡೆಯುತ್ತಿದೆ. ಕಾರ್ಮಿಕರ ಶ್ರಮವನ್ನು ನಮ್ಮ ಅನುಕೂಲಕ್ಕೆ ತಕ್ಕ ಬಳಸುವಾಗ ಅವರ ಕ್ಷೇಮಾಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಾತ್ರಿ ಪಡಿಸುವೂದಕ್ಕಾಗಿ ಅಧಿಕೃತರು ವಿಶೇಷ ಕ್ರಮ ವಹಿಸಬೇಕು ಮಾತ್ರವಲ್ಲ ದುಡಿಮೆಗಾಗಿ ಹೊರ ರಾಜ್ಯದಿಂದ ಬರುವ ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ ವಿಶೇಷ ಕ್ರಮವಹಿಸಲು ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಉಚ್ಚಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿರ್ವ ಸಂತಮೇರಿ ಕಾಲೇಜು - ಕೊಂಕಣಿ ಅಧ್ಯಯನ ಪೀಠದಿಂದ ವಿಶೇಷ ಉಪನ್ಯಾಸ

Thumbnail
Posted On: 15 Sep 2023, 09:49 PM

ಶಿರ್ವ : ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ವತಿಯಿಂದ ಸಂತ ಮೇರಿ ಕಾಲೇಜಿನ ಸಹಯೋಗದಲ್ಲಿ " ಕೊಂಕಣಿ ಮಾತೃಭಾಷೆ -ಒಂದು ಚಿಂತನೆ" ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತರು ಹಾಗೂ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆಯವರು ಕೊಂಕಣಿ ಭಾಷೆಯ ಪರಂಪರೆ, ಬೆಳವಣಿಗೆ ಹಾಗೂ ಅದರ ಪ್ರಸ್ತುತ ವೈಭವವನ್ನು ವಿವರಿಸಿದರು. ಕೊಂಕಣಿ ಒಂದು ರಾಷ್ಟ್ರಭಾಷೆಯಾಗಿದ್ದು, ಶಾಲೆಗಳಲ್ಲಿಯೂ ತೃತೀಯ ಭಾಷೆಯಾಗಿ ಕಲಿಯುವ ಅವಕಾಶ ಇದೆ. ಬದಲಾಗುತ್ತಿರುವ ಸನ್ನಿವೇಶಗಳಲ್ಲಿ ಕೊಂಕಣಿ ಭಾಷೆಯಲ್ಲೂ ಅವಕಾಶಗಳು ಉಜ್ವಲವಾಗಿದ್ದು, ಕೊಂಕಣಿ ಭಾಷಿಕರು ಹಾಗೂ ಆಸಕ್ತರು ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು. ಪ್ರಾಸ್ತಾವಿಕವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್‌ರವರು ಮಾತನಾಡಿ ಕೊಂಕಣಿ ಭಾಷೆಯು ರಾಜ್ಯಭಾಷೆಯಾಗಿ ಬೆಳೆದು ಬಂದ ದಾರಿಯನ್ನು ವಿವರಿಸಿದರು. ಸಂವಿಧಾನದ ಎಂಟನೇ ಪರಚ್ಛೇದದಲ್ಲಿ ಸೇರ್ಪಡೆಗೊಂಡ ನಂತರ ಕೊಂಕಣಿ ಭಾಷೆಯ ಕ್ಷಿಪ್ರ ಬೆಳವಣಿಗೆಯನ್ನು ವಿವರಿಸಿದರು. ಭಾಷೆಯು ಜನರನ್ನು ಒಗ್ಗೂಡಿಸುವ ಜೊತೆಗೆ ಅನೇಕ ಸಂಬಂಧಗಳನ್ನು ಬೆಸೆಯುತ್ತದೆ. ಕೊಂಕಣಿ ಭಾಷೆಯು ತನ್ನದೇ ಆದ ಅಸ್ಮಿತತೆಯನ್ನು ಹೊಂದಿದ್ದು ಜಾತಿ, ಧರ್ಮ ಹಾಗೂ ಪ್ರಾಂತ್ಯಗಳ ಬೇಧವಿಲ್ಲದೆ ವಿವಿಧ ಕ್ಷೇತ್ರಗಳಲ್ಲಿ ತನ್ನ ಅಪೂರ್ವ ಕೊಡುಗೆಗಳನ್ನು ನೀಡಿದೆ ಅಲ್ಲದೆ ಎರಡು ಜ್ಞಾನಪೀಠ ಗೌರವವನ್ನು ಪಡೆದಿದೆ ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೊನಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಪ್ರೀತಿಸಿ ಅದನ್ನು ಬಳಸಿದಾಗ ಭಾಷೆಯ ಉಳಿವು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಉಪನ್ಯಾಸಕರಾದ ಪೂರ್ಣಿಮಾ ಜಿ.ಎ., ಶರ್ಮಿಳಾ, ಪ್ರೇಮನಾಥ, ರಾಘವೇಂದ್ರ ಹೆಗ್ಡೆ ಮತ್ತು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಮೆಲ್ವಿನ್ ಕ್ಯಾಸ್ತೆಲಿನೊ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕರಾದ ಜಗದೀಶ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೇಯಾ ನಾಯಕ್ ಕಾರ್ಯಕ್ರಮ ನಿರೂಪಿಸಿ, ಶಾನಿಯಾ ತಂಡದವರು ಪ್ರಾರ್ಥಿಸಿದರು. ವೆನೆಸಿಯಾ ಕ್ವಾಡ್ರಸ್ ವಂದಿಸಿದರು.

ಕಾಪು : ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ

Thumbnail
Posted On: 15 Sep 2023, 06:40 PM

ಕಾಪು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ಇಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಜರುಗಿತು. ಈ ಸಂದರ್ಭ ಹೊಸ ಮಾರಿಗುಡಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಸದಸ್ಯರುಗಳಾದ ಚಂದ್ರಶೇಖರ ಅಮೀನ್, ಬಾಬು ಮಲ್ಲಾರು, ಪ್ರಬಂಧಕರಾದ ಗೋವರ್ಧನ ಶೇರಿಗಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ - ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸಲು ವಿಮೆನ್ ಇಂಡಿಯಾ ಮೂವ್ಮೇಂಟ್ ಆಗ್ರಹ

Thumbnail
Posted On: 15 Sep 2023, 06:14 PM

ಉಡುಪಿ : ಬೈಂದೂರಿನ ಉದ್ಯಮಿ ಹಾಗೂ ಬಿಜೆಪಿ ಪಕ್ಷದ ಮುಖಂಡರೊಬ್ಬರಿಗೆ ಪಕ್ಷದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಏಳು ಕೋಟಿ ರೂಪಾಯಿಗಳನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಎಂಬ ನಕಲಿ ಹಿಂದೂ ಹೋರಾಟಗಾರ್ತಿಯನ್ನು ಬಂಧಿಸಿರುವ ಪೋಲೀಸರ ಕ್ರಮ ಸ್ವಾಗತಾರ್ಹ. ದ್ವೇಷಭಾಷಣದ ಮೂಲಕ ಕುಖ್ಯಾತಿ ಹೊಂದಿದ್ದ ಚೈತ್ರ ರೌಡಿಸಂನಲ್ಲೂ ಗುರುತಿಸಿಕೊಂಡಿದ್ದರು. ಇದೀಗ ವಂಚನೆ ಪ್ರಕರಣದಲ್ಲೂ ಸಿಕ್ಕಿಬಿದ್ದಿರುವುದು ಅತಿಶಯೋಕ್ತಿ ಅಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದರೆ ಇನ್ನಷ್ಟು ಪ್ರಕರಣಗಳು ಬಯಲಾಗಬಹುದು. ಅಂತೆಯೇ ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಗೆ ಪೊಲೀಸರಿಂದ ತಪ್ಪಿಸಲು ಆಶ್ರಯ ನೀಡಿದ ಕಾಂಗ್ರೆಸ್ ವಕ್ತಾರೆ, ವಂಚನೆಗೊಳಗಾದ ಉದ್ಯಮಿ ಮತ್ತು ಸ್ವತಃ ಚೈತ್ರಾಳೇ ತಿಳಿಸಿರುವಂತೆ ಈ ವಂಚನೆಯ ಹಿಂದಿರುವ ಪ್ರಭಾವಿ ಆರ್ ಎಸ್ ಎಸ್ ಮುಖಂಡನನ್ನೂ ಸಮಗ್ರ ತನಿಖೆಗೊಳಪಡಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲಾ ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಮಾಜ ಸೇವೆಗೆ ಮತ್ತೊಂದು ಹೆಸರು ಆಸ್ಕರ್ ಫೆರ್ನಾಂಡಿಸ್ : ಎಂ.ಎ. ಗಪೂರ್

Thumbnail
Posted On: 15 Sep 2023, 06:11 PM

ಉಡುಪಿ : ಕೇಂದ್ರ ರಾಜ್ಯದಲ್ಲಿ ನಿಸ್ವಾರ್ಥ ರಾಜಕಾರಣ ಮಾಡಿರುವ ಕೇಂದ್ರದ ಮಾಜಿ ಸಚಿವ ದಿವಂಗತ ಆಸ್ಕರ್ ಫೆರ್ನಾಂಡಿಸ್ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರು. ಯಾವುದೇ ಪ್ರಚಾರ ಬಯಸದ ಆಸ್ಕರ್ ಫೆರ್ನಾOಡಿಸ್ ನಿಜವಾಗಿಯೂ ಸಮಾಜಸೇವೆಗೆ ಮತ್ತೊಂದು ಹೆಸರು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂಎ ಗಪೂರ್ ತಿಳಿಸಿದರು. ಅವರು ದಿವಂಗತ ಆಸ್ಕರ್ ಫೆರ್ನಾOಡಿಸ್ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ದಿವಂಗತ ಆಸ್ಕರ್ ಫೆರ್ನಾOಡಿಸ್ ರವರ ದ್ವಿತೀಯ ಪುಣ್ಯತಿಥಿಯ ಸ್ಮರಣಾರ್ಥ ಉದ್ಯಾವರ ಸಂಪಿಗೆ ನಗರದ 'ಸ್ನೇಹಲಯ'ದಲ್ಲಿ ದಿನಸಿ ವಸ್ತುಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಅಸ್ಕರ್ ಫೆರ್ನಾOಡಿಸ್ ರವರು ಕೇಂದ್ರ ಸಚಿವರಾಗಿದ್ದಾಗ ಮಧ್ಯರಾತ್ರಿಯವರೆಗೂ ತನ್ನ ಕಚೇರಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದರು. ಅವರ ಕೆಲಸ ಕಾರ್ಯಗಳೇ ನನ್ನ ಸಾಮಾಜಿಕ ಕೆಲಸಗಳಿಗೆ ಪ್ರೇರಣೆ ಎಂದರು. ಈ ಸಂದರ್ಭದಲ್ಲಿ ದಿನಸಿ ವಸ್ತುಗಳ ಪ್ರಾಯೋಜಕರೂ, ಮಾನವ ಬಂಧುತ್ವ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯರಾಗಿರುವ ರೊನಾಲ್ಡ್ ಮನೋಹರ್ ಕರ್ಕಡ, ಕಡೆಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಂಜೀತ್ ನಾಗರಾಜ್, ಮಹಮ್ಮದ್ ಶೀಶ್, ಜೂಲಿಯನ್ ದಾಂತಿ, ಚಾಲ್ಸ್ ಅಂಬ್ಲರ್, ರಿಯಾಜ್ ಪಳ್ಳಿ, ಸುಹೇಲ್ ಅಬ್ಬಾಸ್, ಪ್ರೇಮ್ ಮಿನೆಜಸ್, ಸಿಸ್ಟರ್ ಲೀನಾ ಮತ್ತಿತರರು ಉಪಸ್ಥಿತರಿದ್ದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸೆಪ್ಟೆಂಬರ್ 16 : ಕಾಪು ಉಪ ಅಂಚೆ ಕಚೇರಿಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

Thumbnail
Posted On: 14 Sep 2023, 11:51 AM

ಕಾಪು : ಅಂಚೆ ಜನ ಸಂಪರ್ಕ ಅಭಿಯಾನವನ್ನು ಕಾಪು ಉಪ ಅಂಚೆ ಕಚೇರಿಯಲ್ಲಿ ಸೆಪ್ಟೆಂಬರ್ 16, ಶನಿವಾರ ಬೆಳಿಗ್ಗೆ 9 ಗಂಟೆ ಯಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ವಿವಿಧ ಅಂಚೆ ಸೇವೆಗಳ ಬಗ್ಗೆ ಮಾಹಿತಿ ನೀಡುವುದು, ಎಲ್ಲ ರೀತಿಯ ಹೊಸ ಅಂಚೆ ಉಳಿತಾಯ ಖಾತೆಗಳನ್ನು ಮತ್ತು ಹೊಸ ವಿಮಾ ಪಾಲಿಸಿಗಳನ್ನು ತೆರೆಯುವುದು, ಹೊಸ ಆಧಾರ್ ನೊಂದಣಿ, ಬಯೋಮೆಟ್ರಿಕ್, ವಿಳಾಸ ಹಾಗು ಮೊಬೈಲ್ ಸಂಖ್ಯೆ ಬದಲಾವಣೆ, ಸರಕಾರದ ವಿವಿಧ ಸವಲತ್ತುಗಳಿಗಾಗಿ ಅಂಚೆ ಖಾತೆಗೆ ಆಧಾರ್ ಜೋಡಣೆ, ಹತ್ತು ಲಕ್ಷ ರೂಪಯಿವರೆಗಿನ ಅಪಘಾತ ವಿಮೆಗಾಗಿ ಟಾಟಾ ಇನ್ಸುರೆನ್ಸ್ ಮೊದಲಾದ ಸೇವೆಗಳನ್ನು ಕಾಪು ಅಂಚೆ ಕಚೇರಿಯಲ್ಲಿಯೇ ಗ್ರಾಹಕರಿಗೆ ಒದಗಿಸುವ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಅಭಿಯಾನದ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಉಡುಪಿ ಅಂಚೆ ವಿಭಾಗದ ಅಧೀಕ್ಷಕ ರಮೇಶ ಪ್ರಭು ವಿನಂತಿಸಿದ್ದಾರೆ. ಗ್ರಾಹಕರು ತರಬೇಕಾದ ದಾಖಲೆಗಳು : ಆಧಾರ್ ಪ್ರತಿ, ಪಾನ್ ಕಾರ್ಡ್ ಪ್ರತಿ, ಗುರುತು ಪತ್ರ, ಪಾಸ್ ಪೊರ್ಟ್ ಫೊಟೊ-2. ಜನನ ಪ್ರಮಾಣ ಪತ್ರ [SSA]. ಹೆಚ್ಚಿನ ವಿವರಗಳಿಗೆ ಪೋಸ್ಟ್ ಮಾಸ್ಟರ್ ಕಾಪುರವರನ್ನು ಸಂಪರ್ಕಿಸಬಹುದು.

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

Thumbnail
Posted On: 13 Sep 2023, 01:41 PM

ಉಡುಪಿ : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಡೆಂಗ್ಯೂ ರೋಗ ತಡೆಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದು ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯ ಇದ್ದು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ರವೀಂದ್ರ, ಉಡುಪಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ವಿಜಯ ಮತ್ತು ಉಡುಪಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಲು ಕಳೆದುಕೊಂಡ ರಾಜೇಶ್ ಕುಲಾಲ್ : ನೆರವಿಗಾಗಿ ಸಹೃದಯಿ ದಾನಿಗಳಲ್ಲಿ ವಿನಂತಿ

Thumbnail
Posted On: 13 Sep 2023, 11:45 AM

ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅದಮಾರು ನಿವಾಸಿ ರಾಜೇಶ್ ಕುಲಾಲ್, ಇವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ತಿಂಗಳ ಹಿಂದೆ ಗ್ಯಾಂಗ್ರಿನ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ತನ್ನ ಎಡಗಾಲನ್ನೆ ಕಳೆದು ಕೊಂಡಿರುತಾರೆ, ಇನ್ನೊಂದು ಕಾಲನ್ನು ಕೂಡ ಉಳಿಸುವದು ಕಷ್ಟ ಎಂದು ವೈದ್ಯರು ತಿಳಿಸಿರುತ್ತಾರೆ. ಇದೀಗ ಈ ಕುಟುಂಬ ಜೀವನ ನಿರ್ವಹಣೆಗೆ ಪರದಾಡುತ್ತಿದೆ. ಮಾನವೀಯ ಸಹೃದಯಿ ದಾನಿಗಳು ಈ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದರೆ ಆಧಾರ ಕಳೆದುಕೊಂಡ ಕುಟುಂಬಕ್ಕೆ ತುಸು ಆಧಾರ ಸಿಕ್ಕಂತಾಗುತ್ತದೆ. ಈ ಬಡ ಕುಟುಂಬ ದಾನಿಗಳ ಸಹಾಯದಲ್ಲಿದೆ.. ಹಣ ಸಹಾಯ ಮಾಡುವವರು ರಾಜೇಶ್ ಕುಲಾಲ್ ಪತ್ನಿ ವಿನೋದ ರವರ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು. Contact Number :9008559310 Google pay number 9008559310 Bank detail CANARA BANK Mudharangadi. NAME: Vinoda A/c number: 110106025209 IFSC: CNRB0000638.

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಧ್ವಜದ ಬಿಡುಗಡೆ

Thumbnail
Posted On: 12 Sep 2023, 08:52 AM

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ವಿಶ್ವ ಬ್ರಾಹ್ಮಣರ ಕುಲಗುರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜದ ಬಿಡುಗಡೆ ಮಾಡಿ ಆಶೀರ್ವಚನ ನೀಡುತ್ತಿದ್ದರು. ನಮ್ಮ ದೇವಸ್ಥಾನದ ಧರ್ಮದರ್ಶಿಗಳು, ವಿದ್ವಾಂಸರುಗಳು, ವೈದಿಕ ಮುಖಂಡರು, ವಿವಿಧ ಸಂಘಟನೆಯ ಮುಖಂಡರುಗಳೊಂದಿಗೆ ಸಭೆಗಳಲ್ಲಿ ಒಮ್ಮತ ಅಭಿಪ್ರಾಯದಿಂದ ವಿಶ್ವಕರ್ಮ ಧ್ವಜ ರೂಪುಗೊಂಡಿದೆ. ಇನ್ನಷ್ಟು ಅಭಿಪ್ರಾಯಗಳು ಬಂದಲ್ಲಿ ಸೂಕ್ತವೆನಿಸಿದಲ್ಲಿ ಪರಿಗಣಿಸುವ ಮುಕ್ತ ಅಭಿಪ್ರಾಯವೂ ಧ್ವಜಸಮಿತಿಗೆ ಇದೆ ಎಂದು ಅವರು ನುಡಿದರು. ಇದೀಗ ರಚಿಸಲಾದ ಧ್ವಜವನ್ನು ಮಹಾ ಸಂಸ್ಥಾನದ ಎಲ್ಲ ದೇವಸ್ಥಾನದ ಧರ್ಮದರ್ಶಿಗಳು, ಎಲ್ಲಾ ಸಂಘಟನೆಯ ಮುಖಂಡರುಗಳು ವಿಶ್ವಕರ್ಮ ಮಹೋತ್ಸವದ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಸಾಂಘಿಕ ಶಕ್ತಿ ಪ್ರದರ್ಶನವಾಗಲಿ ಎಂದು ಅವರು ಹಾರೈಸಿದರು. ವಿಶ್ವಕರ್ಮ ಧ್ವಜದಲ್ಲಿ ಆರು ಬಣ್ಣಗಳಿವೆ. ಇದರಲ್ಲಿ ಐದು ಬಣ್ಣಗಳು ವಿಶ್ವಕರ್ಮನ ಸಾಕಾರ ರೂಪದ ಐದು ಮುಖಗಳ ಬಣ್ಣವನ್ನು ಹೊಂದಿದೆ. ಐದು ಮುಖಗಳಾದ ಸದ್ಯೋಜಾತ- ಬಿಳಿ, ವಾಮದೇವ- ಕಪ್ಪು, ಅಘೋರ- ಕೆಂಪು, ತತ್ಪುರಷ- ಹಳದಿ , ಈಶಾನ- ಹಸುರು ಹಾಗೂ ಆರನೇ ಬಣ್ಣವು ಶರೀರ- ಹೇಮವರ್ಣ( ಚಿನ್ನದ ಬಣ್ಣ)ವನ್ನು , ಪ್ರಕೃತಿಯ ಪೂರ್ಣ ರೂಪವಾದ ಭೂಮಿಯನ್ನು ಪಂಚಶಕ್ತಿಗಳನ್ನು ಪ್ರತಿನಿಧೀಕರಿಸುತ್ತದೆ. ಭೂಮಿಯ ಮೇಲೆ ಜ್ಞಾನದ ಸಂಕೇತವಾದ ಓಂಕಾರದ ಲಾಂಛನವನ್ನು ಹೊಂದಿದೆ. ಕತ್ತಲೆಯಿಂದ ಬೆಳಕಿನೆಡೆಗೆ ಎನ್ನುವ ಜ್ಞಾನ ಸಂದೇಶವನ್ನೂ ನೀಡುತ್ತದೆ. ಆಯತಾಕಾರದ ಧ್ವಜವು ವಾಸ್ತು ಪ್ರಕಾರ ಧ್ವಜದಲ್ಲಿದೆ. ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ವೇ.ಬ್ರ ಶ್ರೀ ಶಂಕರಾಚಾರ್ಯ ಕಡ್ಲಾಸ್ಕರ್‌, ಧ್ವಜ ಸಮಿತಿಯ ಸಂಚಾಲಕ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು , ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಬಿ ಸೂರ್ಯಕುಮಾರ ಹಳೆಯಂಗಡಿ, ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ ಉಡುಪಿ. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪಂಚಾಸಿಂಹಾಸನ ಸರಸ್ವತೀ ಪೀಠ ವಿಕಾಸ ಸಮಿತಿ( ರಿ) ಗಂಗಾವತಿಯ ಅದ್ಯಕ್ಷ ದಿನೇಶ್ ಆಚಾರ್ಯ ಪಡುಬಿದ್ರಿ, ವೇ.ಬ್ರ ಶ್ರೀ ಸುಬ್ಬಣ್ಣಾಚಾರ್ಯ ಗಿಣಿಗೇರಿ ಸಮಾಜದ ಕಾಳಿಕಾಂಬಾ ದೇವಾಲಯಗಳ ಧರ್ಮಧರ್ಶಿಗಳಾದ ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಕೆ. ಸುಂದರ ಆಚಾರ್ಯ ಕೋಟೆಕಾರು, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, , ಜನಾರ್ದನ ಆಚಾರ್ಯ ಆರಿಕ್ಕಾಡಿ, ಎ. ಶೇಖರ ಆಚಾರ್ಯ ಕಾಪು, ಬೆಳಪು ಬಾಲಕೃಷ್ಣ ಆಚಾರ್ಯ ಕಟಪಾಡಿ, ಬಿ. ಎಂ ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ತ್ರಾಸಿ ಸುಧಾಕರ ಆಚಾರ್ಯ, ಡಾ. ಬಾಲಕೃಷ್ಣ ಹೊಸಂಗಡಿ, ಡಾ. ಗೋಪಾಲಕೃಷ್ಣ ಆಚಾರ್ಯ ನವದೆಹಲಿ,ಡಾ. ವಿ.ಪಿ ರಾಘವನ್ ಕಣ್ಣೂರು, ರೂಪೇಶ್ ಆಚಾರ್ಯ ಶಿರ್ವ, ಗುರುರಾಜ್ ಕೆ ಜೆ ಮಂಗಳೂರು , ಸುರೇಶ್ ಆಚಾರ್ಯ ನಿಟ್ಟೆ ಕಾರ್ಕಳ , ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ರಮಾ ನವೀನ್ ಆಚಾರ್ಯ ಕಾರ್ಕಳ,ದಿನೇಶ್ ಆಚಾರ್ಯ ಕಿನ್ನಿಗೊಳಿ, ಗಣೇಶ್‌ ಆಚಾರ್ಯ ಕೋಟ, ಯೋಗೀಶ್ ಆಚಾರ್ಯ ಕರಂಬಳ್ಳಿ, ಕೆಮ್ಮಣ್ಣು ಗಣೇಶ ಆಚಾರ್ಯ, ವಿವೇಕ್‌ ಆಚಾರ್ಯ ಮಂಚಕಲ್‌, ವೈ ಧರ್ಮೇಂದ್ರ ಆಚಾರ್ಯ ಕಾಸರಗೋಡು, ಪೆರ್ಣೆ ಕೆ.ಎಂ ಮಧುಸೂದನ ಆಚಾರ್ಯ ಕಾಸರಗೋಡು, ಯೋಗೀಶ್ ಆಚಾರ್ಯ ಕೊಯಂಬತ್ತೂರು, ರಾಘವೇಂದ್ರ ಆಚಾರ್ಯ ಉಡುಪಿ, ಜಯಕರ ಆಚಾರ್ಯ ಕರಂಬಳ್ಳಿ, ರತ್ನಾಕರ ಆಚಾರ್ಯ ಉದ್ಯಾವರ, ಜನಾರ್ದನ ಆಚಾರ್ಯ ಕನ್ಯಾನ, ವಾದಿರಾಜ ಆಚಾರ್ಯ ಮಂಗಳೂರು, ಸತೀಶ್ ಆಚಾರ್ಯ ಸುರುಳಿ , ಚಂದ್ರ ಶೇಖರ ಆಚಾರ್ಯ ಬೆಂಗಳೂರು ರಿದಂತೆ ಬೆಂಗಳೂರು, ಕೊಯಂಬುತ್ತೂರು, ಮುಂಬೈ ಸೇರಿದಂತೆ ಉಡುಪಿ, ಮಂಗಳೂರು ಪುತ್ತೂರು ಮುಂತಾದ ಪ್ರದೇಶಗಳ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು . ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ.ಬಿ ಆಚಾರ್‌ ಕಂಬಾರು ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಲೋಲಾಕ್ಷ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.