Updated News From Kaup
ಬ್ರಹ್ಮಾವರ : ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ

Posted On: 16-07-2023 05:46PM
ಬ್ರಹ್ಮಾವರ : ವಿದ್ಯಾಮಂದಿರ ಶಾಲಾ ಹಳೆ ವಿದ್ಯಾಥಿ೯ ಸಂಘ, ಸಾವ೯ಜನಿಕ ಗಣೇಶೋತ್ಸವ ಸಮಿತಿ ಹಾರಾಡಿ- ಸಾಲಿಕೇರಿ, ಕಾಮಧೇನು ಕಲ್ಪತರು ಸೇವಾ ಸಮಿತಿ ಹಾರಾಡಿ, ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ.ಸಿ ಟ್ರಸ್ಟ್, ರೋಟರಿ ರೋಯಲ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ವೈದ್ಯಕೀಯ ಪ್ರತಿನಿಧಿಗಳ ಸಂಘ, ಕುಂದಾಪುರ ರೂರಲ್ ಆಯುವೇ೯ದ ಮೆಡಿಕಲ್ ಕಾಲೇಜು, ರಕ್ತನಿಧಿ ಕೇಂದ್ರ, ಮಿಷನ್ ಆಸ್ಪತ್ರೆ, ಎಸ್.ಎಸ್.ಎಫ್ ಹೊನ್ನಾಳ ಇದರ ಜಂಟಿ ಆಶ್ರಯದಲ್ಲಿ ಜುಲೈ 16ರಂದು ಹಾರಾಡಿ ಜಿ.ಎಂ ವಿದ್ಯಾನಿಕೇತನದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು.
ಕಾಯ೯ಕ್ರಮವನ್ನು ಜಿ.ಎಂ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಚಂದ್ರ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜ್ಞಾನ ವಸಂತ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ವಿವಿಧ ಸಂಸ್ಥೆಗಳ ಪದಾಧಿಕಾರಿಗಳಾದ ರಾಘವ ಶೆಟ್ಟಿ, ಅಭಿರಾಮ ನಾಯಕ್,ವಿವೇಕಾನಂದ ಕಾಮತ್, ಮಧುಸೂಧನ್ ಹೇರೂರು, ಸುಂದರ ಪೂಜಾರಿ ಮೂಡುಕುಕ್ಕುಡೆ, ಪ್ರಸನ್ನ ಕಾರಂತ್, ಡಾ. ಪ್ರಸನ್ನ ಐತಾಳ, ಡಾ. ವಿನಾಯಕ್ ಅಂಚನ್, ಡಾ. ಗಣೇಶ್ ಕಾಮತ್, ಆಯುವೇ೯ದ ಕಾಲೇಜಿನ ವೈದ್ಯರು ಉಪಸ್ಥಿತರಿದ್ದರು.ಸುಮಾರು 200ಕ್ಕೂ ಅಧಿಕ ಜನರು ಶಿಬಿರದ ಪ್ರಯೋಜನ ಪಡೆದರು.
ಜುಲೈ 17 (ನಾಳೆ) : ಪಡುಬಿದ್ರಿಯಲ್ಲಿ ಆಟಿ ಕಷಾಯ ವಿತರಣೆ

Posted On: 16-07-2023 04:18PM
ಪಡುಬಿದ್ರಿ : ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 17, ಸೋಮವಾರದಂದು ಬೆಳಿಗ್ಗೆ 6 ಗಂಟೆಯಿಂದ 7.30 ರ ವರೆಗೆ ವರ್ಷಂ ಪ್ರತಿಯಂತೆ ಶ್ರೀ ಸಾಯಿ ಆರ್ಕೇಡ್ ಪಡುಬಿದ್ರಿಯಲ್ಲಿ ದಿವ್ಯ ಕೇಟರರ಼್ಸ್ ರವರ ಸಹಕಾರದೊಂದಿಗೆ ಆಟಿ ಕಷಾಯ ವಿತರಣೆ ನಡೆಯಲಿದೆ ಎಂದು ಪಡುಬಿದ್ರಿ ಮೂರ್ತೆದಾರರ ಸಂಘದ ಅಧ್ಯಕ್ಷರಾದ ಪಿ. ಕೆ. ಸದಾನಂದರವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಶಿರ್ವ : ಪಡುಕುತ್ಯಾರು ಆನೆಗುಂದಿ ಶ್ರೀ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ

Posted On: 16-07-2023 10:59AM
ಶಿರ್ವ : ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ ನಡೆಯಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವ ನಿಟ್ಟಿನಲ್ಲಿ ಸರಕಾರದ ಅನುದಾನ ಒದಗಿಸಲಾಗುವುದು. ಸರ್ವ ಜನಾಂಗಕ್ಕೆ ಒಳಿತು ಬಯಸುವ ಕಾಳಹಸ್ತೇಂದ್ರ ಸ್ವಾಮೀಜಿ ಸರ್ವರಸ್ವಾಮೀಜಿಯಾಗಿ ಮೂಡಿಬಂದಿದ್ದಾರೆ ಎಂದರು.
ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ದೀಪ ಪ್ರಜ್ವಲನಗೊಳಿಸಿದರು. ಆನೆಗುಂದಿ ಪ್ರತಿಷ್ಠಾನದ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಅಚಾರ್ಯ ವಡೇರಹೋಬಳಿ ಅಧ್ಯಕ್ಷತೆ, ವಹಿಸಿದ್ದರು. ಸಮಾರಂಭದಲ್ಲಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ಧರ್ಮದರ್ಶಿ ವಡೇರ ಆನಂದ, ಸಮಾಜ ಸೇವಕರಾದ ಮಿಥುನ್ ಎಂ ರೈ, ಕ್ಯಾ| ಬ್ರಿಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಆಸ್ಥಾನ ವಿದ್ವಾನ್ ಪದವಿ ಪ್ರದಾನ : ಆನೆಗುಂದಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಜನ್ಮವರ್ಧಂತಿ ಉತ್ಸವದ ಧರ್ಮ ಪ್ರಯುಕ್ತ ಸಂಸತ್ತಿನಲ್ಲಿ ಮಹಾಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ, ಗುರು ಪರಂಪರೆಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಶಂಕರಾಚಾರ್ಯ ಕಡ್ಡಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರಿಗೆ ಆಸ್ಥಾನ ವಿದ್ವಾನ್ ಪದವಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಪ್ರಧಾನ ಮಾಡಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ಹೋಬಳಿ ಅಧ್ಯಕ್ಷತೆ ವಹಿಸಿದ್ದರು.
ಸಂಚಾಲಕ ಸೂರ್ಯ ಆಚಾರ್ಯ ಹಳೆಯಂಗಡಿ, ಅನೆಗುಂದಿ ಸರಸ್ವತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಸರಸ್ವತಿ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಅಚಾರ್ಯ ಬೆಳುವಾಯಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಅಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಎಸ್ ಕುತ್ಯಾರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ.ಗಂಗಾಧರ ಆಚಾರ್ಯ ಉಡುಪಿ, ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆಯ ಆಸ್ಥಾನ ವಿದ್ವಾಂಸರುಗಳಾದ ಪಂಜ ಭಾಸ್ಕರ್ ಭಟ್, ಬಾಲಚಂದ್ರ ಭಟ್, ಚಂದು ಕೂಡ್ಲು, ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಹರಿಶ್ಚಂದ್ರ ಎನ್. ಆಚಾರ್ಯ, ಕಾಳಿಕಾಂಬಾ ವಿಶ್ವಕರ್ಮ ದೇವಾಲಯಗಳ ಪ್ರಧಾನ ಧರ್ಮದರ್ಶಿಗಳು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರ್ ಸ್ವಾಗತಿಸಿದರು. ಗೀತಾ ಚಂದ್ರ ಕಾರ್ಕಳ, ಗಂಗಾಧರ ಕೊಂಡೆವೂರು, ಸುರೇಶ್ ಆಚಾರ್ಯ ನಿರೂಪಿಸಿದರು. ಅರವಿಂದ ವೈ ಆಚಾರ್ಯ ವಂದಿಸಿದರು.
ಕಾಪು : ಈ ಮೀಡಿಯಾ ಕನ್ನಡ ನ್ಯೂಸ್ ವೆಬ್ ಪೋರ್ಟಲ್ ಲೋಕಾರ್ಪಣೆ

Posted On: 16-07-2023 10:17AM
ಕಾಪು : ಸುದ್ದಿಯ ಧಾವಂತದ ಈ ಕಾಲಘಟ್ಟದಲ್ಲಿ ನಮ್ಮ ಸುತ್ತಮುತ್ತಲಿನ, ದೇಶ, ವಿದೇಶದ ಸುದ್ದಿಗಳು ನಮ್ಮನ್ನು ಕ್ಷಣ ಮಾತ್ರದಲ್ಲಿ ತಲುಪುತ್ತಿವೆ. ಸುದ್ದಿಯು ಸಾಮಾಜಿಕ ಬದಲಾವಣೆಯ ಜೊತೆಗೆ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮಾಧ್ಯಮವಾದಾಗ ಮಾತ್ರ ಜನರ ಮನಸ್ಸು ಗೆಲ್ಲಲು ಸಾಧ್ಯ. ಮುಂದಿನ ದಿನಗಳಲ್ಲಿ ಈ ಮೀಡಿಯಾ ಕನ್ನಡ ಸಂಸ್ಥೆಯು ಕೂಡ ಜನಮನ ಗೆಲ್ಲಲಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಅವರು ಕಾಪುವಿನಲ್ಲಿ ಜರಗಿದ ಈ ಮೀಡಿಯಾ ಕನ್ನಡ ವೆಬ್ ಪೋರ್ಟಲ್ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ, ಸಂಸ್ಥೆಯ ಲೋಗೋ ಅನಾವರಣಗೊಳಿಸಿ ಮಾತನಾಡಿದರು.
ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಊರಿನ ಸುದ್ದಿ ಮಾಧ್ಯಮಗಳ ಜೊತೆಗೆ ಮುಂಬಯಿಯಲ್ಲಿ ಪ್ರಸಾರಿತ ಪತ್ರಿಕೆಯಲ್ಲಿ ದುಡಿಯುತ್ತಿರುವ ಅನುಭವಿ ಹಿರಿಯ ಪತ್ರಕರ್ತ ಬಾಲಕೃಷ್ಣ ಪೂಜಾರಿಯವರು ಅಂತರ್ಜಾಲದಲ್ಲಿಯೂ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಈ ಮೀಡಿಯಾ ಕನ್ನಡ ಸಂಸ್ಥೆಗೆ ಶುಭಹಾರೈಸಿದರು.
ಈ ಸಂದರ್ಭ ಉಡುಪಿ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕೋಶಾಧಿಕಾರಿ ಷರೀಫ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್, ಗೀತಾ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಈ ಮೀಡಿಯಾ ಕನ್ನಡ ವೆಬ್ ಪೋರ್ಟಲ್ ಆಡಳಿತ ನಿರ್ದೇಶಕರಾದ ಬಾಲಕೃಷ್ಣ ಪೂಜಾರಿ ಉಚ್ಚಿಲ ವಹಿಸಿದ್ದರು. ಬಾಲಕೃಷ್ಣ ಪೂಜಾರಿ ಉಚ್ಚಿಲ ಸ್ವಾಗತಿಸಿದರು. ವಿಜಯ ಆಚಾರ್ಯ ಉಚ್ಚಿಲ ನಿರೂಪಿಸಿ, ಶ್ರೀನಿವಾಸ್ ಐತಾಳ್ ವಂದಿಸಿದರು.
ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Posted On: 15-07-2023 02:56PM
ಕಾಪು : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಕಾಪು ವಿಧಾನಸಭಾ ಕ್ಷೇತ್ರದ ಇದರ ವತಿಯಿಂದ ಕಾಪುವಿನ ಉಳಿಯಾರಗೋಳಿಯ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಫ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಗೆ ಶನಿವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಅವರ ವಾಕ್ ಚಾತುರ್ಯವನ್ನು ಹೆಚ್ಚಿಸಿಕೊಳ್ಳಲು ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಒಂದು ಉತ್ತಮ ವೇದಿಕೆಯಾಗಿದೆ. ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇವರ ಮೂಲಕ ಈ ವರ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15 ಶಾಲೆಗಳಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮಧುಕರ್, ಪ್ರಾಂಶುಪಾಲರಾದ ಮರೀನ ಸರೋಜ, ಮುಖ್ಯೋಪಾಧ್ಯಾಯರಾದ ಚಿತ್ರಲೇಖ ಟಿ ಶೆಟ್ಟಿ, ಯಕ್ಷಗಾನ ಗುರುಗಳಾದ ಮಂಜುನಾಥ್, ಶಿವಣ್ಣ ಬಾಯರ್ ಉಪಸ್ಥಿತರಿದ್ದರು.
ಕಾಪು : ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ

Posted On: 15-07-2023 02:47PM
ಕಾಪು : ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ಶನಿವಾರ ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಜರಗಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅನಿತಾ ಬಿ, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಪ್ರಾಂಶುಪಾಲರಾದ ಉಮಕಾಂತ್ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ್ದು ಮರೆಯಲಾಗದ ಅನುಭವ : ಕೂರ್ಮಾರಾವ್ ಎಂ

Posted On: 15-07-2023 02:41PM
ಉಡುಪಿ : ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ರೀತಿಯ ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲೇ ಸದಾ ಮಾದರಿ ಜಿಲ್ಲೆಯನ್ನಾಗಿ ಮಾಡುವ ತುಡಿತ ಜಿಲ್ಲೆಯ ಸಾರ್ವಜನಿಕರು ಮತ್ತು ನೌಕರರ ವಲಯದಲ್ಲಿದೆ. ಈ ಸ್ಪೂರ್ತಿ ಸದಾ ಕಾಲ ಇದೇ ರೀತಿ ಮುಂದುವರೆಯಬೇಕು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜಿಲ್ಲೆಯ ಜನತೆ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯ ಸಹಕಾರ ನೀಡಿದ್ದು, ಎಲ್ಲರ ಸಹಕಾರದಿಂದ ಒಂದು ತಂಡದ ರೀತಿಯಲ್ಲಿ ಜಿಲ್ಲೆಯ ಪ್ರಗತಿಗೆ ಕಾರ್ಯನಿರ್ವಹಿಸಲು ಸಾದ್ಯವಾಯಿತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ವಿದ್ಯಾವಂತ ಮತ್ತು ಬುದ್ದಿವಂತರ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲಿನ ಹಲವು ಸವಾಲುಗಳನ್ನು ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಎಂ. ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಮತ್ತು ಪ್ರಾಮಾಣಿಕ ಸೇವೆ ನೀಡುವ ನಿಟ್ಟಿನಲ್ಲಿ , ಜಿಲ್ಲೆಯ ಪ್ರಮುಖ ಇಲಾಖೆಗಳಾದ ಕಂದಾಯ, ಜಿಲ್ಲಾ ಪಂಚಾಯತ್ ಮತ್ತು ಪೊಲೀಸ್ ಇಲಾಖೆಗಳು ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಿದೆ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಪ್ರಗತಿಗೆ ಒಟ್ಟಾಗಿ ಶ್ರಮಿಸೋಣ ಎಂದರು. ಜಿ.ಪಂ. ಸಿಇಓ ಪ್ರಸನ್ನ ಮಾತನಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಅವರ ತಾಳ್ಮೆಯ ಗುಣ, ನಿರ್ಣಯಗಳನ್ನು ತೆಗೆದುಕೊಳ್ಳುವ ಗುಣ ಎಲ್ಲಾ ಅಧಿಕಾರಿಗಳಿಗೆ ಮಾದರಿಯಾಗಬೇಕು. ಜಿಲ್ಲಾ ಪಂಚಾಯತ್ ನ ಹಲವು ಯಶಸ್ವಿ ಯೋಜನೆಗಳಿಗೆ ಉತ್ತಮ ಸಹಕಾರ ನೀಡಿದ್ದು, ಚುನಾವಣೆಯಲ್ಲಿ ಸ್ವೀಪ್ ಮೂಲಕ ರಾಜ್ಯ ಮತ್ತು ದೇಶದಲ್ಲೇ ಗಮನ ಸೆಳೆಯುವಂತಹ ಕಾರ್ಯಕ್ರಮಗಳನ್ನು ಇವರ ಮಾರ್ಗದರ್ಶನದಲ್ಲಿ ಮಾಡಲಾಗಿದ್ದು, ಇಂಜಿನಿಯರಿಂಗ್ ವಿದ್ಯಾಭ್ಯಾಸ ಪಡೆದಿರುವ ಇವರಿಂದ ಎನ್.ಐ.ಸಿ. ಮೂಲಕ ಕಂದಾಯ ಇಲಾಖೆಗೆ ವಿವಿಧ ರೀತಿಯ ಬಹುಪಯೋಗಿಯ 3 ನೂತನ ತಂತ್ರಾಂಶಗಳನ್ನು ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ ಎಂದರು.
ಎಸ್ಪಿ ಅಕ್ಷಯ್ ಎಂ ಹಾಕೆ ಮಾತನಾಡಿ, ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಗೆ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಎಲ್ಲಾ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಿದ್ದಾರೆ, ಉಡುಪಿಯನ್ನು ಸೇಫ್ ಸಿಟಿ ಮಾಡುವ ಯೋಜನೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ನಿರ್ವಹಣೆ ಮೂಲಕ ಸ್ಮಾರ್ಟ್ ಸಿಟಿ ಮಾಡಲು ಒತ್ತು ನೀಡಿದ್ದರು ಎಂದರು. ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಿಎಫ್ ಆಯುಕ್ತ ಅಭಿಷೇಕ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಸ್ವಾಗತಿಸಿದರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳಿOದ ಅಭಿನಂದನೆ ನಡೆಯಿತು.
ಜುಲೈ 16 : ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಬೆಳಪು - ವಿದ್ಯಾರ್ಥಿವೇತನ ವಿನಿಯೋಗ ಕಾರ್ಯಕ್ರಮ

Posted On: 15-07-2023 07:20AM
ಕಾಪು : ಶ್ರೀ ಪಂಚಾಕ್ಷರಿ ಯಕ್ಷಗಾನ ಮಂಡಳಿ, ಎಲ್ಲೂರು ಟೆಕ್ ಸೆಲ್ ಅಟೋಮೇಶನ್ ಪ್ರೈ. ಲಿ. ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಜುಲೈ 16, ಆದಿತ್ಯವಾರ ಸಂಜೆ 4 ಗಂಟೆಗೆ ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಬೆಳಪು ಇಲ್ಲಿ ವಿದ್ಯಾರ್ಥಿವೇತನ ವಿನಿಯೋಗ ಕಾರ್ಯಕ್ರಮ ಜರಗಲಿದೆ.
ಬೆಂಗಳೂರಿನ 'ಟೆಕ್ ಸೆಲ್" ಅಟೋಮೇಶನ್ ಪ್ರೈ.ಲಿ. ಸಂಸ್ಥೆಯು ಎಲ್ಲೂರು ಪರಿಸರದ ಒಂಬತ್ತು ಶಾಲೆಗಳ ಮೂವತ್ತೈದು ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಸುಮಾರು ಒಂದು ಲಕ್ಷದ ಹತ್ತುಸಾವಿರ ರೂಪಾಯಿ ಮೊತ್ತವನ್ನು ವಿದ್ಯಾರ್ಥಿ ವೇತನವಾಗಿ ನೀಡಲಿದೆ.
ಟೆಕ್ ಸೆಲ್ ಅಟೋಮೇಶನ್ ಎಂ.ಡಿ ಆರ್.ಆರ್. ಹರೀಶ್ ರಾವ್ ಮತ್ತು ರೂಪಾ ಹರೀಶ್ ರಾವ್ ವಿದ್ಯಾರ್ಥಿ ವೇತನದ ಪ್ರಾಯೋಜಕರಾಗಿದ್ದು, ಶ್ರೀ ದುರ್ಗಾ ದೇವಸ್ಥಾನ, ಕುಂಜೂರು ಅಧ್ಯಕ್ಷರಾದ ದೇವರಾಜ ರಾವ್, ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಟೇಲ್ ಪ್ರಕಾಶ ರಾವ್, ಬ್ರಾಹ್ಮಣ ಸಂಘ, ಬೆಳಪು ವಲಯದ ಅಧ್ಯಕ್ಷರಾದ ನಡಿಮನೆ ವಾದಿರಾಜ ರಾವ್, ರಾಘವೇಂದ್ರ ರಾವ್ ಎಲ್ಲೂರು, ಕೆ.ಎಲ್.ಕುಂಡಂತಾಯ ಕುಂಜೂರು ಉಪಸ್ಥಿತಿಯಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಕ್ಷರೀ ಯಕ್ಷಗಾನ ಮಂಡಳಿ ಅಧ್ಯಕ್ಷರಾದ ಕೆ. ಶ್ರೀನಿವಾಸ ಉಪಾಧ್ಯಾಯ ವಹಿಸಲಿದ್ದಾರೆ.
ಕಾರ್ಯಕ್ರಮದ ಸಂಯೋಜನೆ, ನಿರ್ವಹಣೆ ಗಣೇಶ್ ರಾವ್ ಎಲ್ಲೂರು ಮಾಡಲಿದ್ದು, ಅಂದು ಬೆಳಗ್ಗೆ ಎಲ್ಲೂರು ಶ್ರೀ ವಿಶ್ವೇಶ್ವರ ದೇವಳದ ಅರ್ಚಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೇ.ಮೂ. ಗೋಪಾಲ ಭಟ್,ವೇ. ಮೂ. ಶ್ರೀ ಕೃಷ್ಣಮೂರ್ತಿ ಭಟ್, ಹಾಗೂ ವೇ.ಮೂ.ಸುಬ್ರಾಯ ಭಟ್ ಅವರನ್ನು ಹಾಗೂ ಶ್ರೀ ಬಡಿಕೇರಿ ಹರದಾಸ ರಾವ್ ಅವರನ್ನು ಅವರವರ ಮನೆಗೆ ಹೋಗಿ ಸಮ್ಮಾನಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು : ನೂತನ ಜಿಲ್ಲಾಧಿಕಾರಿಯನ್ನು ಅಭಿನಂದಿಸಿದ ಕಾಪು ಶ್ರೀ ಹೊಸ ಮಾರಿಗುಡಿ ದೇವಳ ಸಮಿತಿ

Posted On: 15-07-2023 06:46AM
ಕಾಪು : ಈ ಹಿಂದೆ ಉಡುಪಿ ಜಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ವಿದ್ಯಾ ಕುಮಾರಿ ಅವರು ಶುಕ್ರವಾರ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ ದೇವಳದ ವತಿಯಿಂದ ಅಭಿನಂದಿಸಿದರು.
ಕಾಪು : ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಬಿಜೆಪಿಯ ನೇತೃತ್ವದಲ್ಲಿ ಪ್ರತಿಭಟನಾ ಸಭೆ

Posted On: 13-07-2023 08:46PM
ಕಾಪು : ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು.
ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳ ಜೆಹಾದಿ ಶಕ್ತಿಗಳ ಕೈವಾಡ ಇರುವ ಸಾಧ್ಯತೆ ಇದ್ದು ಇದರ ತನಿಖೆ ಸಿಬಿಐ ಗೆ ವಹಿಸಬೇಕು. ಇದರೊಂದಿಗೆ ರಾಜ್ಯದಲ್ಲಿ ನಡೆದ ವೇಣುಗೋಪಾಲ್ ಹತ್ಯೆ, ಬೆಂಗಳೂರಿನಲ್ಲಿ ನಡೆದ ಸರಣಿ ಹತ್ಯೆಗಳನ್ನು ಖಂಡಿಸಲಾಗಿ ರಾಜ್ಯದಲ್ಲಿ ಹಿಂದೂಗಳಿಗೆ ಭಯದಲ್ಲಿ ಓಡಾಡುವ ವಾತಾವರಣ ನಿರ್ಮಾಣವಾಗುತ್ತಿದ್ದು ಮುಖ್ಯಮಂತ್ರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕೂಡಲೇ ಗ್ರಹ ಇಲಾಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಲಾಯಿತು. ತುಷ್ಟೀಕರಣ ನೀತಿಯನ್ನು ಕೈ ಬಿಡದಿದ್ದರೆ ಮುಂದೆ ಮತ್ತೆ ಬೀದಿಗಿಳಿದು ಹೋರಾಟ ಮಾಡುವೆವು ಎಂದರು. ಪಂಚ ಗ್ಯಾರಂಟಿಗಳ ಅವ್ಯವಸ್ಥೆಯಿಂದ ಜನ ರೋಸಿಹೋಗಿದ್ದಾರೆ. ಕೂಡಲೇ ಇದನ್ನು ಸರಿಪಡಿಸಿ ಜನರಿಗೆ ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನು ಒದಗಿಸಲು ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮಾತನಾಡಿ ಸರಕಾರ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುವಲ್ಲಿ ಮೊದಲ ಹೆಜ್ಜೆಯಾಗಿ ಶಿಕ್ಷಣದಲ್ಲಿ ಕೋಮುವಾದ ತುಂಬಿದೆ. ನಂತರ ಬಜೆಟ್ ನಲ್ಲಿ ಅವರಿಗೆ ಮಾತ್ರ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಇಷ್ಟಲ್ಲದೆ ವರ್ಗಾವಣೆ ಧಂದೆ ಮೂಲಕ ಕೋಟ್ಯಂತರ ರೂಪಾಯಿ ಹಣದ ವ್ಯವಹಾರ ಮಾಡಿ ಹೇಸಿಗೆ ಹುಟ್ಟಿಸುತ್ತದೆ. ಮತ್ತೆ ಮತ್ತೆ ಹಿಂದೂಗಳ ಹತ್ಯೆ ನಡೆದರೆ ಸುಮ್ಮನೆ ಕುಳಿತುಕೊಳ್ಳಲಾಗದು ಎಂದರು.
ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಂಡಲ ಕಾರ್ಯದರ್ಶಿ ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಮಹಾಶಕ್ತಿಕೇಂದ್ರಗಳ ಅಧ್ಯಕ್ಷರುಗಳಾದ ವಿಶ್ವನಾಥ ಕುರ್ಕಾಲು, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಪ್ರಮುಖರಾದ ಶಶಿಧರ್ ವಾಗ್ಳೆ, ಸುರೇಖ ಶೈಲೇಶ್, ಪದ್ಮನಾಭ ಕೊಡಂಗಳ, ಸುಬ್ರಹ್ಮಣ್ಯ ಪಾಂಗಳ, ಶಕ್ತಿಕೇಂದ್ರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.