Updated News From Kaup
ವಿಶ್ವಕರ್ಮ ಸಮಾಜದ ಸಂಘ ಸಂಸ್ಥೆಗಳಿಂದ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರ್ ಗೆ ಪಾದಯಾತ್ರೆ
Posted On: 09 Sep 2025, 11:54 AM
ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಕಡಂಬು ಮಟ್ಟಾರ್ ಮತ್ತು ಕಾಳಿಕಾಂಬಾ ಮಹಿಳಾ ಮಂಡಳಿ ಕಡಂಬು ಇದರ ಜಂಟಿ ಆಶ್ರಯದಲ್ಲಿ ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರ್ ಗೆ ಪಾದಯಾತ್ರೆ ನಡೆಯಿತು. ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯರ ಮುಂದಾಳತ್ವದಲ್ಲಿ ಸುಮಾರು 45 ಜನರನ್ನು ಒಳಗೊಂಡ ಬಾಂಧವರ ತಂಡ 20 ಕಿ.ಮೀ.ಗಳ ಸುದೀರ್ಘ ಕಾಲ್ನಡಿಗೆ ಮಾಡಿದರು. ಪಾದಯಾತ್ರೆಯ ಸಂದರ್ಭ ಶಿರ್ವ ಶ್ರೀಮಾಹಮ್ಮಾಯಿ ಅಮ್ಮನ ಸನ್ನಿಧಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುತ್ಯಾರು, ಹಾಗೂ ಇತರ ದೇವಾಲಯಗಳಿಗೆ ಭೇಟಿ ಕೊಡಲಾಯಿತು. ಪಡುಕುತ್ಯಾರ್ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಕ್ಕೆ ತಲುಪಿದ ನಂತರ ಗುರುಪಾದ ಪೂಜೆ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆಯುವ ಮೂಲಕ ಪಾದಯಾತ್ರೆ ಸಂಪನ್ನಗೊಂಡಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳಿಗೆ ಬಸ್ಸುಗಳ ಕೊಡುಗೆ
Posted On: 09 Sep 2025, 08:17 AM
ಶಿರ್ವ : ಶ್ರೀ ಸೋದೆ ವಾದಿರಾಜ ಮಠದಿಂದ ಪ್ರವರ್ತಿತವಾದ ಸೋದೆ ಸಮೂಹ ಶಿಕ್ಷಣ ಸಂಸ್ಥೆಯು ಸಮಗ್ರ ಶಿಕ್ಷಣ ನೀಡುತ್ತಿರುವುದನ್ನು ಮನಗಂಡ ಬೆಂಗಳೂರಿನ ಉದ್ಯಮ ಸಂಸ್ಥೆಯಾದ “ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್" ಸಿಎಸ್ಆರ್ ನಿಧಿಯಿಂದ ರೂ.48ಲಕ್ಷ ವೆಚ್ಚದ ಎರಡು ನೂತನ ಬಸ್ಸುಗಳ ಹಸ್ತಾಂತರ ಕಾರ್ಯಕ್ರಮವು ವಿದ್ಯಾಸಂಸ್ಥೆಯ ಆವರಣದಲ್ಲಿ ಜರಗಿತು. ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಐವರು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಅದರ ಮುಖ್ಯಸ್ಥರಾದ ಪ್ರಭಾವ್ ಎನ್ ರಾವ್ ಹಾಗೂ ಅವರ ಧರ್ಮಪತ್ನಿ ಪ್ರಿಯಾ ಶೈಲಾ ಪಿ ರಾವ್ ಇವರು ಬಸ್ಸಿನ ಕೀಲಿಕೈಗಳನ್ನು ವಿಷ್ಣುಮೂರ್ತಿ ಹಯವದನ ಸ್ವಾಮಿ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀನಿವಾಸ ತಂತ್ರಿಗಳು ಮತ್ತು ಕಾರ್ಯದರ್ಶಿಗಳಾದ ರತ್ನಕುಮಾರ್ ಇವರಿಗೆ ಹಸ್ತಾಂತರಿಸಿದರು. ಲೀಪ್ ಫ್ರಾಗ್ ಸಂಸ್ಥೆಯನ್ನು ಶ್ಲಾಘಿಸಿದ ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರು, ಈ ಬಸ್ಸಿನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು ಹಾಗೂ ಲೀಪ್ ಫ್ರಾಗ್ ಸಂಸ್ಥೆಯ ಮುಖ್ಯಸ್ಥರ ಈ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಎಸ್ ವಿ ಹೆಚ್ ಪಿಯು ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರೌಢಶಾಲೆ, ಪ್ರಾಥಮಿಕ ಮತ್ತು ನರ್ಸರಿ ಶಾಲೆ ಇನ್ನಂಜೆ ವಿದ್ಯಾಸಂಸ್ಥೆಗಳ ಮುಖ್ಯೋಪಾಧ್ಯಯರು ಮತ್ತಿತ್ತರು ಉಪಸ್ಥಿತರಿದ್ದರು.
ಯೂತ್ ಬಿಲ್ಲವಾಸ್ ಮೂಡುಬೆಳ್ಳೆ : 171ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
Posted On: 08 Sep 2025, 06:05 PM
ಶಿರ್ವ : ಯೂತ್ ಬಿಲ್ಲವಾಸ್ ಮೂಡುಬೆಳ್ಳೆ ತಂಡದ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮೂಡುಬೆಳ್ಳೆ ಗೀತಾ ಮಂದಿರದಲ್ಲಿ ನಡೆಯಿತು. ನೂರಾರು ಬಿಲ್ಲವ ಭಾಂದವರು ಗುರು ಪೂಜೆಯಲ್ಲಿ ಭಾಗವಹಿಸಿ ನಾರಾಯಣಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಹಿರಿಯರಾದ ಸಂತೋಷ್ ಪೂಜಾರಿ, ಸುಧಾಕರ್ ಪೂಜಾರಿ ಮಡಿಕೆಟ್ಟು,ಯೂತ್ ಬಿಲ್ಲವಾಸ್ ಮೂಡುಬೆಳ್ಳೆ ಇದರ ಅಧ್ಯಕ್ಷರಾದ ತಿಲಕ್ ಪೂಜಾರಿ ಭದ್ರಮ, ಗೌರವಾಧ್ಯಕ್ಷ ದಿನೇಶ್ ಸುವರ್ಣ ಮಡಿಕೆಟ್ಟು, ಪ್ರಧಾನ ಕಾರ್ಯದರ್ಶಿ ರಾಕೇಶ್ ಪೂಜಾರಿ ವರ್ವಾಡಿ, ಮಹಿಳಾ ಘಟಕ ಅಧ್ಯಕ್ಷೆ ಧನಲಕ್ಷ್ಮೀ ಸುಧಾಕರ್ ಪೂಜಾರಿ, ಉಪಾಧ್ಯಕ್ಷೆ ಸುನೀತಾ ಪೂಜಾರಿ ಹಾಗೂ ಯೂತ್ ಬಿಲ್ಲವಾಸ್ ಮೂಡುಬೆಳ್ಳೆ ಇದರ ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ನೂರ್ ಹುದಾ ಮದ್ರಸ ಮಕ್ಕಳ ಕಲಾ ಉತ್ಸವ
Posted On: 07 Sep 2025, 11:01 PM
ಪಡುಬಿದ್ರಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ನೂರಾನಿಯಾ ಹುದಾ ಮದ್ರಸ ಪಡುಬಿದ್ರಿ – ದೀನ್ ಸ್ಟ್ರೀಟ್, ಮಿಸ್ಕ್ – ಎ - ಮದೀನಾ ವತಿಯಿಂದ 2025ನೇ ಸಾಲಿನ ವಿದ್ಯಾರ್ಥಿಗಳ ಕಲಾ ಉತ್ಸವವು ಭಾನುವಾರ ಪಡುಬಿದ್ರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ನೂರಾನಿಯಾ ಜುಮ್ಮಾ ಮಸೀದಿಯ ಮೌಲಾನಾ ಅಬ್ದುಲ್ ಕುದ್ದೂಸ್ ಉದ್ಘಾಟಿಸಿದರು. ಜುಮ್ಮಾ ಮಸೀದಿಯ ಖತೀಬ್ ಎಸ್.ಎಂ. ಅಬ್ದುಲ್ ರಹ್ಮಾನ್ ಮದನಿ ಉಸ್ತಾದ್ ದುವಾ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಜುಮಾ ಮಸೀದಿ ಅಧ್ಯಕ್ಷರಾದ ಪಿ.ಕೆ. ಮೋಹಿದೀನ್ ವಹಿಸಿದ್ದರು. ಈ ಸಂದರ್ಭದಲ್ಲಿ ಹಿಮಾಯತುಲ್ ಇಸ್ಲಾಂ ಸಂಘದ ಅಧ್ಯಕ್ಷ ಬುಡನ್ ಶೈಖ್, ಜುಮಾ ಮಸೀದಿ ಕಂಚಿನಡ್ಕ ಖತೀಬ್ ಅಬ್ದುಲ್ ಲತೀಫ್ ಮದನಿ, ಸದರ್ ಉಸ್ತಾದ್ ಅಶ್ರಫ್ ಸಅದಿ, ಮಾಜಿ ಅಧ್ಯಕ್ಷ ರಾದ ಅಬ್ದುಲ್ ರಹ್ಮಾನ್, ಜುಮಾ ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಕೋಶಾಧಿಕಾರಿ ಎ.ಹೆಚ್. ಮೊಹಮ್ಮದ್, ಸದಸ್ಯರಾದ ಅಕ್ಬರ್, ಬಾಶ ಬೆಂಗ್ರೆ, ಎಂ.ಎಸ್ ಶಾಫಿ , ಮೈಯದಿ, ಇಸ್ಮಾಯಿಲ್, ಹಂಝ, ನಜ಼ೀರ್, ಮುಸ್ತಕ್ ಮತ್ತಿತರರು ವಿದ್ಯಾರ್ಥಿಗಳನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಕಲಾ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಸ್ಪರ್ಧೆಗಳು ಜರಗಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅವರಾಲು ಮಟ್ಟುವಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ
Posted On: 07 Sep 2025, 09:06 PM
ಪಡುಬಿದ್ರಿ : ಶ್ರೀ ನಾರಾಯಣಗುರು ಸೇವಾ ಸಮಿತಿ ಅವರಾಲು ಮಟ್ಟು ನೇತೃತ್ವದಲ್ಲಿ ಅವರಾಲು ಮಟ್ಟು ನಾರಾಯಣ ಪೂಜಾರಿ ಇವರ ಮನೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯನ್ನು ಆಚರಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭ ಅವರಾಲು ಮಟ್ಟುವಿನ ಬಿಲ್ಲವ ಸಮಾಜಕ್ಕಾಗಿ ಶ್ರಮಿಸಿದ ಕುಂದಾಪುರ ಮೆಜಿಸ್ಟ್ರೇಟ್ ಕೋಟ್೯ನಲ್ಲಿ ಶಿರಸ್ತೇದಾರ್ ಆಗಿದ್ದ ನಿವೃತ್ತ ಜೀವನ ನಡೆಸುತ್ತಿರುವ ಮದುಸೂದನ್ ಕೋಟ್ಯಾನ್ ರನ್ನು ಶ್ರೀ ನಾರಾಯಣಗುರು ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಕಾಳಿಕಾಂಬ ಮಹಿಳಾ ಮಂಡಳಿ ಕಡಂಬು ಮಟ್ಟಾರ್ - ಅಧ್ಯಕ್ಷರಾಗಿ ಜಯಶ್ರೀ ಶಿವಾನಂದ ಆಚಾರ್ಯ ಆಯ್ಕೆ
Posted On: 07 Sep 2025, 10:58 AM
ಕಾಪು : ಕಾಳಿಕಾಂಬ ಮಹಿಳಾ ಮಂಡಳಿ ಕಡಂಬು ಮಟ್ಟಾರ್ ಇದರ ವಾರ್ಷಿಕ ಸಭೆಯಲ್ಲಿ 2025-2026 ಸಾಲಿನ ನೂತನ ಅಧ್ಯಕ್ಷರಾಗಿ ಜಯಶ್ರೀ ಶಿವಾನಂದ ಆಚಾರ್ಯ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ವಿಶಾಲ ಅಚ್ಚುತ ಆಚಾರ್ಯ, ಕಾರ್ಯದರ್ಶಿಯಾಗಿ ವಾಣಿ ಜಯರಾಮ ಆಚಾರ್ಯ, ಕೋಶಾಧಿಕಾರಿಯಾಗಿ ಕಾಂಚನ ಶ್ರೀಧರ ಆಚಾರ್ಯ ಆಯ್ಕೆಯಾಗಿದ್ದಾರೆ.
ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ದೈವದ ಪಾತ್ರಿ ಮೋಹನ್ ಪೂಜಾರಿಯವರಿಗೆ ಸನ್ಮಾನ
Posted On: 03 Sep 2025, 09:51 AM
ಮೂಲ್ಕಿ: ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ಪ್ರತಿ ತಿಂಗಳ ತಿಂಗಳ ಬೆಳಕು ಹಾಗೂ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಮೂಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಮಾತನಾಡಿ, “ಧಾರ್ಮಿಕ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಸಾಧಕರನ್ನು ಗುರುತಿಸಿ ಗೌರವಿಸುವುದು ನಿಜಕ್ಕೂ ಶ್ಲಾಘನೀಯ ಕಾರ್ಯ” ಎಂದು ಹೇಳಿದರು. ಮೂಲ್ಕಿಯ ಏಕೈಕ ಪತ್ರಿಕೆಯಾದ ‘ಹೊಸ ಅಂಗಣ’, ಹತ್ತು ವರ್ಷಗಳಿಂದ ನಿರಂತರವಾಗಿ ಪ್ರಕಟವಾಗುತ್ತಾ ಬಂದಿದೆ. ಪತ್ರಿಕೆಯನ್ನ ನಡೆಸೋದು ಸುಲಭದ ಕೆಲಸವಲ್ಲ. ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ಸಾಹಿತ್ಯದ ಮೇಲೆ ತಮ್ಮ ಆಸಕ್ತಿಯನ್ನು ಇರಿಸಿಕೊಂಡು ಪತ್ರಿಕೆಯನ್ನು ಮುನ್ನಡೆಸುತ್ತಿರುವ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ ಪ್ರಯತ್ನ ನಿಜಕ್ಕೂ ಮೆಚ್ಚುವಂತಹದ್ದು ಎಂದರು. ಹತ್ತು ವರ್ಷಗಳಿಂದ ಪತ್ರಿಕೆ ಹಲವಾರು ಹೊಸ ಲೇಖಕರಿಗೆ ಪ್ರೋತ್ಸಾಹ ನೀಡಿದೆ. ಮೂಲ್ಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾರು ಗುರುತಿಸದ ಸಾಧಕರನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಸನ್ಮಾನ ಮಾಡುವ ಈ ಪ್ರಯತ್ನಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಬ್ಯಾಂಕ್ ಪ್ರಬಂಧಕ ವಿಠಲ್ ವಾಗ್ಲೆಯವರು ಪತ್ರಿಕೆಯ ಕಾರ್ಯವನ್ನು ಮೆಚ್ಚಿ, ಮೂಲ್ಕಿಯ ಜನಮನ ಗೆದ್ದಿರುವ ‘ಹೊಸ ಅಂಗಣ’ಕ್ಕೆ ತಮ್ಮ ಬ್ಯಾಂಕ್ನಿಂದ ಸಾಧ್ಯವಾದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದರು. ಸುಮಾರು 33 ವರ್ಷಗಳಿಂದ ದೈವ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಹಳೆಯಂಗಡಿಯ ಮೋಹನ್ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಸದಾನಂದ, ಮುಂಬೈ ಮೊಗವೀರ ಪತ್ರಿಕೆಯ ಅಶೋಕ್ ಸುವರ್ಣ, ಚಿತ್ರಾಪು ಕೇಶವಾನಂದ ಸ್ವಾಮೀಜಿ, ಸತೀಶ್ ಕಿಲ್ಪಾಡಿ, ಸರೋಜಿನಿ ಸುವರ್ಣ, ಲ. ಪುಷ್ಪರಾಜ್ ಚೌಟ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಜೋನ್ ಕ್ವಾಡ್ರಸ್, ವಾಸು ಪೂಜಾರಿ ಚಿತ್ರಾಪು, ದಿನೇಶ್ ಶೆಟ್ಟಿ, ವಕೀಲ ರವೀಶ್ ಕಾಮತ್, ಅಬ್ದುಲ್ ರಜಾಕ್, ಜಯ ಕುಮಾರ್ ಕುಬೆವೂರು, ಜಯರಾಮ್ ಬಿ.ಎಸ್. ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ವಂದಿಸಿದರು. ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.
ಕಾಪು : ಸೆ.3 ರಿಂದ ಸೀರತ್ ಅಭಿಯಾನ
Posted On: 03 Sep 2025, 09:45 AM
ಕಾಪು : ಪ್ರವಾದಿ ಮುಹಮ್ಮದ್ (ಸ) ರವರು ಅರೆಬಿಕ್ ಕ್ಯಾಲೆಂಡರ್ ಪ್ರಕಾರ ರಬೀವುಲ್ ಅವ್ವಲ್ ತಿಂಗಳಿನಲ್ಲಿ ಜನಿಸಿದರು, ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್ (ಸ)ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಕಾಪು ವರ್ತುಲದಿಂದ ವಿಚಾರ ಗೋಷ್ಠಿ. ಚಹಾ ಕೂಟ, ಆಸ್ಪತ್ರೆ ಸಂದರ್ಶನ, ಹಣ್ಣು ಹಂಪಲು ವಿತರಣೆ, ವೃದ್ದಾಶ್ರಮ ಭೇಟಿ, ಅನಾಥಶ್ರಮ ಭೇಟಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ, ವೈಯಕ್ತಿಕ ಮತ್ತು ತಂಡ್ಡ ಭೇಟಿ, ಫೋಲ್ಡರ್ಸ್ ವಿತರಣೆ, ವೈದ್ಯಕೀಯ ತಪಾಸಣಾ ಶಿಬಿರ ಇತ್ಯಾದಿ ಕಾರ್ಯಕ್ರಮಗಳು ಹಾಕಿ ಕೊಂಡ್ದಿದ್ದು ಅದನ್ನು ಈ ಅಭಿಯಾನದಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಕಾಪು ವರ್ತುಲದ ಜಮಾ ಅತೆ ಇಸ್ಲಾಮೀ ಹಿಂದ್ ನ ಅಧ್ಯಕ್ಷರಾದ ಅನ್ವರ್ ಅಲಿ ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರ ಭೇಟಿ
Posted On: 01 Sep 2025, 10:55 AM
ಕಾಪು : ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಉಮಾ ಶಂಕರ್ ಅವರು ಭಾನುವಾರ ಪತ್ನಿ ಮತ್ತು ಪುತ್ರನೊಂದಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇಲ್ಲಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನವನ್ನು ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು. ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅವರು ಜೀರ್ಣೋದ್ಧಾರ ನಡೆದು ಬಂದ ಹಾದಿ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಯನ್ನು ನೀಡಿದರು.
ಬನ್ನಂಜೆಯ ನಾರಾಯಣಗುರು ವೃತ್ತ ತೆರವು ; ದಾರ್ಶನಿಕ ಪುರುಷರಿಗೆ ಮಾಡಿದ ಅಪಮಾನ - ರಘುಪತಿ ಭಟ್ ಖಂಡನೆ
Posted On: 31 Aug 2025, 06:02 PM
ಉಡುಪಿ : ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ ನಾರಾಯಣ ಗುರು ವೃತ್ತ ಎಂದು ಪದನಾಮಕರಣ ಮಾಡಿ ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಆದರೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ವೃತ್ತ ತೆರವುಗೊಳಿಸಿ ಆ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದವನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಡುಪಿಯ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ. ನಾರಾಯಣ ಗುರುಗಳು ಆಧ್ಯಾತ್ಮಿಕ ನಾಯಕ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು. ಜಾತಿ ಪದ್ಧತಿಯ ಅನ್ಯಾಯಗಳ ವಿರುದ್ಧ ಹೋರಾಡಿ ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಅವರ ಗೌರವದ ಪ್ರತೀಕವಾಗಿ ಬನ್ನಂಜೆ ವೃತ್ತವನ್ನು ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿತ್ತು. ನಾನು ಶಾಸಕನಾಗಿದ್ದ ಅವಧಿಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬರುವ ವೃತ್ತ ಹಾಗೂ ಜಂಕ್ಷನ್ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡುವ ಬಗ್ಗೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿ ತೀರ್ಮಾನ ಕೈಗೊಂಡು ಬಳಿಕ ಈ ಕುರಿತಾಗಿ ಸಾರ್ವಜನಿಕರ ಆಕ್ಷೇಪಣೆ ಹಾಗೂ ಶಾಂತಿ ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧೀಕ್ಷಕರ ವರದಿ ಕೇಳಲಾಗುತ್ತದೆ. ಈ ಎಲ್ಲಾ ವೃತ್ತ/ಜಂಕ್ಷನ್ ಗಳಿಗೆ ನಗರ ಸಭೆ ನಿರ್ಣಯಿಸಿ ತೀರ್ಮಾನಿಸಿದ ಹೆಸರುಗಳಿಗೆ ಯಾವುದೇ ಆಕ್ಷೇಪಣೆ ಇಲ್ಲದೆ ಇರುವ ಬಗ್ಗೆ ಜಿಲ್ಲಾಧಿಕಾರಿಯವರು ಸರ್ಕಾರಕ್ಕೆ ವರದಿ ಸಲ್ಲಿಸಿ ಬಳಿಕ ನಾನು ಸರ್ಕಾರದ ಮಟ್ಟದಲ್ಲಿ ಹಂತ ಹಂತವಾಗಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ 2022, ನವೆಂಬರ್ ರಲ್ಲಿ ಕರ್ನಾಟಕ ಪುರಸಭೆಗಳ ಅಧಿನಿಯಮ 1964 211ರ ಅನ್ವಯದಂತೆ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ, ಜಂಕ್ಷನ್ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಅದರಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ಸರ್ಕಲ್ ಗೆ "ನಾರಾಯಣಗುರು ವೃತ್ತ", ಕಲ್ಸಂಕ ವೃತ್ತಕ್ಕೆ "ಮಧ್ವಾಚಾರ್ಯ ವೃತ್ತ", ಡಯಾನಾ ಸರ್ಕಲ್ ಗೆ "ವಾದಿರಾಜ ವೃತ್ತ", ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್ ಗೆ "ಕೋಟಿ - ಚೆನ್ನಯ್ಯ ವೃತ್ತ", ಬ್ರಹ್ಮಗಿರಿ ದೊಡ್ಡ ಸರ್ಕಲ್ ಗೆ "ಆಸ್ಕರ್ ಫೆರ್ನಾಂಡಿಸ್ ಸರ್ಕಲ್" ಹಾಗೂ ಪರ್ಕಳದಿಂದ ಕೋಡಂಗೆ ಹಾಗೂ ಕೋಡಂಗೆಯಿಂದ ಸರಳಬೆಟ್ಟುಗೆ ಹಾದುಹೋಗುವ ಮಧ್ಯದಲ್ಲಿರುವ ವೃತ್ತಕ್ಕೆ "ಶ್ರೀರಾಮ ವೃತ್ತ" ಎಂದು ನಾಮಕರಣ ಮಾಡಲು ಆದೇಶಿಸಲಾಗಿತ್ತು. ಸರ್ಕಾರದ ಆದೇಶದಂತೆ ಈ ಎಲ್ಲಾ ಸರ್ಕಲ್ ಗಳನ್ನು ನಗರ ಸಭೆಯಿಂದ ಸುಂದರವಾಗಿ ನಿರ್ಮಿಸುವ ಯೋಜನೆ ನನ್ನದಾಗಿತ್ತು. ಆದರೆ ಇದರಲ್ಲಿ ಈಗ ನಾರಾಯಣ ಗುರು ವೃತ್ತವನ್ನು ತೆರವುಗೊಳಿಸಿ ಆ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು ತಪ್ಪು. ಇದು ಸರ್ಕಾರದ ಆದೇಶದ ಉಲ್ಲಂಘನೆಯಾಗಿದ್ದು, ತಪ್ಪು ಮಾಡಿದವರನ್ನು ತಕ್ಷಣದಲ್ಲಿ ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಬನ್ನಂಜೆ ವೃತ್ತದಲ್ಲಿ ನಗರ ಸಭೆ ವತಿಯಿಂದ ಸುಂದರವಾದ ನಾರಾಯಣ ಗುರು ವೃತ್ತ ನಿರ್ಮಾಣ ಮಾಡಬೇಕು. ಇಲ್ಲವಾದಲ್ಲಿ ಈ ಬಗ್ಗೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ನಾನು ನೀಡುತ್ತೇನೆ ಎಂದು ತಿಳಿಸಿದ್ದಾರೆ.
