Updated News From Kaup
ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ ಪುಟ್ಟ ಕಂದ ವರ್ಷಿತ್ ಕುಲಾಲ್ ಗೆ ವೈದಕೀಯ ನೆರವು
Posted On: 12 Jul 2023, 08:56 PM
ಕಾಪು : ಹೃದಯ ಭಾರವಾದಂತೆ ತೇವಗೊಂಡ ಆ ಕಣ್ಣಂಚಲಿ ಭರವಸೆಯ ಬೆಳಕೊಂದು ಮಿಂಚಿ ಮರೆಯಾಯಿತು. ಭಾವುಕ ಮನಸ್ಸಿನಲ್ಲಿ ಭಾವೋದ್ವೇಗವು ಕಟ್ಟೆಯೊಡೆದು ಸಂತಸ, ದುಃಖ ಏಕಕಾಲಕ್ಕೆ ಪ್ರಕಟಗೊಂಡು ಗಂಟಲು ಗದ್ಗದಿತವಾಗಿ ಮಾತು ತಡವರಿಸಿತು. ಅರೆಕ್ಷಣದ ಮೌನ ಸಾವಿರ ಸಾವಿರ ಕೃತಜ್ಞತೆ ಸಲ್ಲಿಸುವ ಭಾವಕ್ಕೆ ಸಾಕ್ಷಿಯಾಯಿತು. "ಈ ನೋವಿಗಿಂತ ಮಕ್ಕಳಿಲ್ಲದ ಬದುಕೇ ಲೇಸು" ಎನ್ನುವ ಮಾತೃ ಹೃದಯದ ಅಂತರಾಳದ ನುಡಿ ಆ ಮಗುವಿನ ಆರೋಗ್ಯಕ್ಕಾಗಿ ಪಟ್ಟ ಪಡಿಪಾಟಲಿನ ತೆರೆದ ಪುಸ್ತಕವಾಯಿತು. ಚಾವಡಿ ಬಂಧುಗಳು ಪುಟ್ಟ ಕಂದ ವರ್ಷಿತ್ ನ ಆರೋಗ್ಯಕ್ಕಾಗಿ ನಲ್ಲೂರು ಗ್ರಾಮದ ನೆಲ್ಲಿಕಾರಿನ ಪೇರಳ್ಕೆ ನಿವಾಸಿ ಜಯಶ್ರೀಯವರ ಮನೆಯಂಗಳ ತಲುಪಿದಾಗಿನ ಕ್ಷಣದ ಭಾವನಾತ್ಮಕ ಸನ್ನಿವೇಶದ ತುಣುಕಿದು. ಆ ತಾಯಿ ಪಟ್ಟ ಬವಣೆಗಳೆಲ್ಲಾ ಪದಗಳಾಗಿ ವೇದನೆಯ ನುಡಿಗಳಾದಾಗ ಮೌನವಾಗಿ ತಲೆ ಅಲ್ಲಾಡಿಸುವ ಸರದಿ ನಮ್ಮದು. ಒಂದು ವರ್ಷ ಚಿಕಿತ್ಸೆಗೆ ಹಣ ಹೊಂದಿಸಲಾಗದೆ ಚಿಕಿತ್ಸೆಯನ್ನೇ ನಿಲ್ಲಿಸಿದ್ದೆವು ಎನ್ನುವ ಆ ತಾಯಿಯ ಅಸಹಾಯಕತೆಯ ಮಾತಿನಲ್ಲಿ ಸ್ಪಷ್ಟವಾದ ಪಶ್ಚಾತ್ತಾಪದ ಛಾಯೆಯಿತ್ತು. ಗಂಡು ದಿಕ್ಕಿಲ್ಲದ ಸಂಸಾರದ ನೊಗಕ್ಕೆ ಹೆಗಲು ಕೊಟ್ಟು ತನ್ನೆಲ್ಲ ಹರೆಯದ ಆಸೆ ಆಕಾಂಕ್ಷೆಗಳ ಬದಿಗಿರಿಸಿ ದೇವರು ಕೊಟ್ಟ ಕರುಳ ಕುಡಿಯ ಆರೋಗ್ಯಕ್ಕೆ ಸರ್ವವನ್ನೂ ತ್ಯಾಗ ಮಾಡಿದ ಆ ಮಾತೃ ಹೃದಯದ ಕೂಗು ಕೊನೆಗೂ ಆ ಭಗವಂತನ ಬಡಿದೆಬ್ಬಿಸಿದೆ. ಪರಿಣಾಮ ಸತತ ಐದು ವರ್ಷಗಳ ನಿರಂತರವಾದ ಅವರ ಶ್ರಮ ಫಲಿಸಿದೆ. ಸದ್ಯದ ಸ್ಥಿತಿಯಲ್ಲಿ ಮಗುವಿನ ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆ ಆಗುತ್ತಿದ್ದು ಗಳಿಗೆಗೊಮ್ಮೆ ಅಪಸ್ಮಾರದ ಪ್ರಭಾವಕ್ಕೆ ಮೈ ಸುರುಟಿ ಕೊಳ್ಳುತ್ತಿದ್ದ ಮಗುವಿನಲ್ಲಿ ಬಹುತೇಕ ಈ ಲಕ್ಷಣಗಳು ಕಾಣುತ್ತಿಲ್ಲ. ಶಬ್ದ ಮತ್ತು ಸ್ಪರ್ಶದ ಅರಿವಿಲ್ಲದೆ ಜಡತ್ವದ ಸ್ಥಿತಿಯಲ್ಲಿದ್ದ ಮಗು ಈಗ ಒಂದೆರಡು ಚಹರೆಗಳ ಗುರುತಿಸಿ ಕಿರುನಗುವ ಬೀರುತ್ತಿದೆ. ಇದನ್ನು ಕಾಣುತ್ತಿರುವ ಆ ತಾಯಿಯಲ್ಲೂ ಭರವಸೆಯ ಧೃಡ ಹೆಜ್ಜೆಗಳು ಮತ್ತಷ್ಟು ಬಲಗೊಳ್ಳತೊಡಗಿವೆ. ಚಾವಡಿ ಬಂಧುಗಳ ನೂರು,ಇನ್ನೂರಿಂದ ಪ್ರಾರಂಭಗೊಂಡ ಅಂತರಾಳದ ಹಾರೈಕೆ ನೂರು ಪ್ರತಿಶತ ಸಾರ್ಥಕ್ಯ ಪಡೆಯಿತು ಎಂಬ ಭರವಸೆ ತುಂಬಿದ ಆ ಕ್ಷಣಕ್ಕೆ ಸಾಕ್ಷಿಯಾದ ಸಂತೃಪ್ತಿ ಒಂದೆಡೆಯಾದರೆ ಸಂಕಷ್ಟಗಳಿಂದ ಜೀವಕೋಟಿ ಮುಕ್ತವಾಗಲಿ "ಲೋಕಾ ಸಮಸ್ತ ಸುಖಿನೋ ಭವಂತು" ಎನ್ನುವುದೇ ಭಗವಂತನಲ್ಲಿ ನಮ್ಮ ನಿತ್ಯ ಪ್ರಾರ್ಥನೆ. ವರ್ಷಿತ್ ನ ಚಿಕಿತ್ಸಾ ವೆಚ್ಚವಾಗಿ ಒಗ್ಗೂಡಿದ ₹57865/-ರೂ ಗಳಲ್ಲಿ ₹57000/-ವನ್ನು ವರ್ಷಿತ್ ತಾಯಿಗೆ ನೀಡಲಾಗಿದೆ. ಕುಲಾಲ ಚಾವಡಿಯು "ಅಶಕ್ತರ ಆಶಾದೀಪ ಮಾನವೀಯತೆಯ ವಿಶ್ವರೂಪ" ಎಂಬ ಘೋಷವಾಕ್ಯದಡಿ ಒಂದು ಸಂತುಲಿತ ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಜವಾಬ್ದಾರಿ ಮೆರೆದಿದೆ.
ಉಡುಪಿ : ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ ನೇಹಾ ಹೊಳ್ಳ ಆಯ್ಕೆ
Posted On: 12 Jul 2023, 08:08 PM
ಉಡುಪಿ : ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021 ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ. ಇವರು ಮಣೂರು ಡಾ ಎಂ ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ .ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್ ನಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿರುತ್ತಾರೆ.
ಜುಲೈ 14 : ಮಿನಿ ಉದ್ಯೋಗ ಮೇಳ
Posted On: 11 Jul 2023, 09:37 PM
ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ - ನ್ಯಾ. ಶರ್ಮಿಳಾ ಎಸ್
Posted On: 11 Jul 2023, 09:17 PM
ಉಡುಪಿ : ದೇಶದಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವುಗಳು ಕಾರಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಇಂದು ನಗರದ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರಿಂದ ಜನಸಂಖ್ಯಾ ಹೆಚ್ಚಳವನ್ನು ತಡೆಗಟ್ಟಬಹುದಾಗಿದ್ದು, ಕುಟುಂಬ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದೂ ಕೂಡಾ ಅಗತ್ಯವಾಗಿದೆ. ಪ್ರಸ್ತುತ ಮುಂದುವರಿದ ದೇಶಗಳಲ್ಲಿ ಜನಸಂಖ್ಯೆ ಹೆಚ್ಚಳವು ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ಹಲವು ಆರ್ಥಿಕ, ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುಟುಂಬದ ನಿರ್ವಹಣೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಜನಸಂಖ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಅಜ್ಞಾನ, ಮುಂತಾದವುಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದ್ದು, ಜನಸಂಖ್ಯಾ ಹೆಚ್ಚಳವು ನೇರವಾಗಿ ಪ್ರಕೃತಿ ಮೇಲೆ ಪರಿಣಾಮ ಬೀರಲಿದ್ದು, ಪ್ರಕೃತಿಯಲ್ಲಿ ಅಸಮತೋಲನ ಕಾಣುವಂತಹ ಸಾಧ್ಯತೆಯಿದೆ ಎಂದರು. ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್ರಾವ್ ಕೆ, ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ಅಂಜಲಿ ವಾಗ್ಲೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಘುನಾಥ ಕೆ.ಎಸ್, ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಹಿರಿಯ ತಾಲೂಕು ಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವಪ್ಪ ಪಟಗಾರ್ ನಿರೂಪಿಸಿ, ಕಾಲೇಜಿನ ಉಪನ್ಯಾಸಕ ಡಾ.ನವೀನ್ ವಂದಿಸಿದರು.
ಕಾಪು : ಇನ್ನಂಜೆಯಲ್ಲಿ ಕಂಡೊಡೊಂಜಿ ದಿನ ಸಂಪನ್ನ
Posted On: 09 Jul 2023, 10:38 PM
ಕಾಪು : ಜೇಸಿಐ ಶಂಕರಪುರ ಜಾಸ್ಮಿನ್, ಸೀನಿಯರ್ ಛೆಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್, ಯುವಕ ಮಂಡಲ (ರಿ.) ಇನ್ನಂಜೆ, ಯುವತಿ ಮಂಡಲ (ರಿ.) ಇನ್ನಂಜೆ, ರೋಟರಿ ಸಮುದಾಯದಳ ಇನ್ನಂಜೆ, ಬಿಲ್ಲವ ಸಂಘ ಇನ್ನಂಜೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಸಂಯುಕ್ತ ಆಶ್ರಯದಲ್ಲಿ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಕಂಡೊಡೊಂಜಿ ದಿನ ಭಾನುವಾರ ತೆಂಡೆಮನೆ ಮಾರ್ಕೆಟ್ ರೋಡ್ ಇನ್ನಂಜೆ ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್ಎನ್ಆರ್ ನವೀನ್ ಅಮೀನ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಸಿರಿಲ್ ಮೋನಿಸ್ ಸಾಲ್ಮರ, ಸುರೇಶ್ ಎನ್ ಪೂಜಾರಿ ಇನ್ನಂಜೆ, ಕೃಷ್ಣ ಅಮೀನ್ ತೆಂಡೆಮನೆ ಇನ್ನಂಜೆ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ಜೇಸಿ ಮಾಲಿನಿ ಶೆಟ್ಟಿ ವಹಿಸಿದ್ದರು. ಸೀನಿಯರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಅಧ್ಯಕ್ಷರಾದ ಎಸ್ಎನ್ಆರ್ ಆಲ್ವಿನ್ ಮಿನೇಜಸ್, ರೋಟರಿ ಸಮುದಾಯದಳ ಇನ್ನಂಜೆ ಅಧ್ಯಕ್ಷರಾದ ಆರ್ ಸಿ ಸಿ ದಿವ್ಯೇಶ್ ಶೆಟ್ಟಿ, ಇನ್ನಂಜೆ ಯುವಕ ಮಂಡಲ ಅಧ್ಯಕ್ಷರಾದ ಉಮೇಶ್ ಆಚಾರ್ಯ, ಇನ್ನಂಜೆ ಯುವತಿ ಮಂಡಲ ಅಧ್ಯಕ್ಷೆ ಆಶಾ ನಾಯಕ್, ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಶಂಕರಪುರ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾದ ರಮೇಶ್ ಕುಂದರ್, ಶಂಕರಪುರ ಟೆಂಪೋ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾದ ಸಂಜೀವ ಮೂಲ್ಯ ಉಪಸ್ಥಿತರಿದ್ದರು. ಸಂಜೆ ಜರಗಿದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಭೇಟಿಯಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ
Posted On: 09 Jul 2023, 08:35 PM
ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಈ ಸಲುವಾಗಿ ಭಾನುವಾರ ಸಂಜೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ ಉಪಸ್ಥಿತರಿದ್ದರು.
ಕಾಪು : ಹೊಸ ಮಾರಿಗುಡಿ ದೇವಸ್ಥಾನ - ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನಕ್ಕೆ ಶಾಸಕರಿಂದ ಚಾಲನೆ
Posted On: 09 Jul 2023, 04:08 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ "ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನ" ಜುಲೈ 9 ರಿಂದ ಅಕ್ಟೋಬರ್ 15 ರ ವರೆಗೆ ನಡೆಯಲಿದ್ದು, ಈ ಸಲುವಾಗಿ ಜುಲೈ 9 ರಂದು ನಡೆದ "ದೀಕ್ಷಾ ದೀಪ ಪ್ರಜ್ವಲನ ಕಾರ್ಯಕ್ರಮಕ್ಕೆ" ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸಮಿತಿ ಪದಾಧಿಕಾರಿಗಳು, ಸಮಿತಿಯ ಗೌರವಾಧ್ಯಕ್ಷರುಗಳು, ಸದಸ್ಯರು ಹಾಗೂ ದೀಕ್ಷೆ ಸ್ವೀಕರಿಸಿದ ಸಂಯೋಜಕರು, ಭಕ್ತರು ಉಪಸ್ಥಿತರಿದ್ದರು.
ಉಡುಪಿ : 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ಸಂಪನ್ನ
Posted On: 09 Jul 2023, 03:59 PM
ಉಡುಪಿ : ಕನಾ೯ಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಬ್ರಹ್ಮಾವರ ರೋಯಲ್ ಇನ್ ಸಭಾಂಗಣದಲ್ಲಿ ಜುಲೈ 8ರಂದು 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಕೆ.ಎಂ.ಸಿ ಮಣಿಪಾಲದ ಡೀನ್ ಯುರಾಲಜಿ ವಿಭಾಗದ ಪ್ರಾಧ್ಯಾಪಕ ಡಾ| ಪದ್ಮರಾಜ್ ಹೆಗ್ಡೆ ಮಾತನಾಡಿ, ವೈದ್ಯರು ತಮ್ಮ ಹೆಚ್ಚಿನ ಸಮಯವನ್ನು ರೋಗಿಗಳ ಸೇವೆಯಲ್ಲಿ ಕಳೆಯುತ್ತಾರೆ. ಆದರೆ ರೋಗಿಗಳಿಗೆ ತೊಂದರೆಯಾದಾಗ ವೈದ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ, ಇವರ ಸೇವೆಯನ್ನು ಸಮಾಜ ಗುರುತಿಸಿ ಅವರಿಗೆ ಗೌರವ ನೀಡುತ್ತಿರುವುದು ಅಭಿನಂದನೀಯ ಎಂದರು. ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷ ಮತ್ತು ಎ.ವಿ ಬಾಳಿಗಾ ಸಮೂಹ ಸಂಸ್ಥೆಗಳ ನಿದೇ೯ಶಕ ಡಾ| ಪಿ.ವಿ ಭಂಡಾರಿ, ವೈದ್ಯರನ್ನು ವಿನಾ ಕಾರಣ ಹಲ್ಲೆ ಮಾಡುವುದು ಅವರ ಮೇಲೆ ಮಾನಸಿಕ ಕಿರುಕುಳ ನಡೆಯುತ್ತಿರುವುದು ಖಂಡನೀಯ. ವೈದ್ಯರ ಸಂಘದಿಂದ ಮಾತ್ರ ಈ ಹಿಂದೆ ವೈದ್ಯರನ್ನು ಗುರುತಿಸಲಾಗುತ್ತಿತ್ತು ಆದರೆ ಇಂದು ಸಮಾಜದ ವಿವಿಧ ಸಂಘ- ಸಂಸ್ಥೆಗಳು ಈ ಕಾಯ೯ ಮಾಡುತ್ತಿರುವುದು ಅಭಿನಂದನೀಯ ಎಂದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಅಧ್ಯಕ್ಷ ವಿವೇಕಾನಂದ ಕಾಮತ್ ವಹಿಸಿದ್ದರು. ವೇದಿಕೆಯಲ್ಲಿ ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ಕಾಯ೯ದಶಿ೯ ಪ್ರಸನ್ನ ಕಾರಂತ್, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಸುಂದರ ಪೂಜಾರಿ ಮೂಡುಕುಕ್ಕುಡೆ ಮುಂತಾದವರು ಉಪಸ್ಥಿತರಿದ್ದರು. ಖ್ಯಾತ ವೈದ್ಯರುಗಳಾದ ಮಣಿಪಾಲ ಕೆ.ಎಂ.ಸಿ ಯ ಚಮ೯ ರೋಗ ವಿಭಾಗದ ಪ್ರಾಧ್ಯಾಪಕ ಡಾI ಸತೀಶ್ ಪೈ, ಹೈಟೆಕ್ ಆಸ್ಪತ್ರೆಯ ಮೂಳೆ ರೋಗ ತಜ್ಞ ಡಾI ಉಮೇಶ್ ಪ್ರಭು ಯು, ಪ್ರಾಥಮಿಕ ಆರೋಗ್ಯ ಕೇಂದ್ರ ದೊoಡೆ ರಂಗಡಿಯ ವೈದ್ಯಾಧಿಕಾರಿ ಡಾI ಚoದ್ರಿಕಾ ಕಿಣಿ, ಕೋಟ ಪಿ.ಹೆಚ್.ಸಿ ಆರೋಗ್ಯಾಧಿಕಾರಿ ಡಾ| ವಿಶ್ವನಾಥ್ ಬಿ ಯವರನ್ನು ಗೌರವಿಸಲಾಯಿತು. ಈ ಸಂದಭ೯ದಲ್ಲಿ ಸನ್ಮಾನಿತರು ಮಾತನಾಡಿದರು. ಹಿರಿಯ ಸಾಧಕ ವೈದ್ಯಕೀಯ ಪ್ರತಿನಿಧಿಗಳನ್ನು ಗುರುತಿಸಲಾಯಿತು. ಜಯಂಟ್ಸ್ ಕಾಯ೯ದಶಿ೯ ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ಅಂಬಿಕಾ, ಡೊರಿಸ್, ಸುಬ್ರಮಣ್ಯ ಆಚಾಯ೯, ರಾಘವೇಂದ್ರ ಪ್ರಭು, ಕವಾ೯ಲು ಪರಿಚಯಿಸಿದರು. ಅನಂತ್ ಹೊಳ್ಳ ನಿರೂಪಿಸಿದರು. ಪ್ರಸನ್ನ ಕಾರಂತ್ ವಂದಿಸಿದರು.
ಕಾಪು : ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆ ಉದ್ಘಾಟನೆ
Posted On: 09 Jul 2023, 02:05 PM
ಕಾಪು : ಇಲ್ಲಿನ ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ರವಿವಾರ ಉದ್ಘಾಟಿಸಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಪಾಕಶಾಲೆಯ ನಿರ್ಮಾಣ ಪೂರ್ಣಗೊಂಡಿದೆ. ಅಭಿನಂದನೆ : ಬಬ್ಬುಸ್ವಾಮಿ ದೈವಸ್ಥಾನ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪುಷ್ಪರಾಜ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸುಧಾಕರ್ ಶೆಟ್ಟಿ ಮಲ್ಲಾರು, ಪುರಸಭಾ ಸದಸ್ಯರಾದ ಉಮೇಶ ಕರ್ಕೇರ, ಹರಿಣಿ, ಕ್ಷೇತ್ರದ ಗುರಿಕಾರರಾದ ಶೀನ ಮಲ್ಲಾರು, ಕೃಷ್ಣ ಮಾಸ್ತರ್, ಸಾಧು ಮಾಸ್ತರ್ ಮುಖೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುಂಡಾಳ ಮಹಾ ಸಭಾದ ಉಡುಪಿ ಜಿಲ್ಲಾಧ್ಯಕ್ಷರಾದ ಶಿವರಾಜ್ ಮಲ್ಲಾರು ನಿರೂಪಿಸಿದರು.
ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯ ಹಸ್ತ
Posted On: 09 Jul 2023, 08:04 AM
ಪಡುಬಿದ್ರಿ : ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ 6 ವರ್ಷದ ಪುಟ್ಟ ಮಗು ಸಾನ್ವಿಯ ವೈದ್ಯಕೀಯ ಶುಶ್ರೂಷೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ನ್ನು ಸಾನ್ವಿಯ ತಂದೆಯವರಿಗೆ ಹಸ್ತಾಂತರಿಸಿ, ಸಾನ್ವಿ ಆದಷ್ಟು ಬೇಗ ಗುಣಮುಖಲಾಗಳೆಂದು ಪಡುಬಿದ್ರಿಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂಧರ್ಭದಲ್ಲಿ ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ, ಎಸ್ ಇ ಝೆಡ್ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಸುಜಿತ್ ಶೆಟ್ಟಿ, ಯೋಗೀಶ್ ಪೂಜಾರಿ ಪಾದೆಬೆಟ್ಟು, ದಿನೇಶ್ ಶೆಟ್ಟಿ, ಸಂದೇಶ್ ಶೆಟ್ಟಿ ಪಾದೆಬೆಟ್ಟು ಮತ್ತು ರವಿ ಶೆಟ್ಟಿ ಪಾದೆಬೆಟ್ಟು ಉಪಸ್ಥಿತರಿದ್ದರು.
