Updated News From Kaup

ಪಡುಬಿದ್ರಿ : ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್ ಪಿ.ಎ. ಮೊಹಿದ್ದೀನ್ ಸನ್ಮಾನ

Thumbnail
Posted On: 10 Jun 2023, 07:02 AM

ಪಡುಬಿದ್ರಿ: ಗಡಿ ಭದ್ರತಾ ಪಡೆಯಲ್ಲಿ ಸುಮಾರು ೩೫ ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ನಿವೃತ್ತ ಹೊಂದಿದ ಪಡುಬಿದ್ರಿ ಜಮಾಅತ್ ಸದಸ್ಯರಾದ ಪಿ.ಎ. ಮೊಹಿದ್ದೀನ್ ಅವರನ್ನು ಪಡುಬಿದ್ರಿ ಜಮಾಅತ್ ಸಮಿತಿಯ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಬಿಎಸ್‌ಎಫ್‌ನಲ್ಲಿ ೩೫ ವರ್ಷಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಸಿಸ್ಟೆಂಟ್ ಕಮಾಂಡೆಂಟ್ ಇತ್ತೀಚೆಗೆ ನಿವೃತ್ತರಾದ ಪಿ.ಎ. ಮೊಹಿದ್ದೀನ್ ಅವರನ್ನು ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ನಡೆದ ಸಮಾರಂಭದಲ್ಲಿ ಜುಮ್ಮಾ ಮಸೀದಿ ಖತೀಬ್ ಎಸ್.ಎಮ್. ಅಬ್ದುಲ್ ರಹ್ಮಾನ್ ಮದನಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಹಜ್ ಯಾತ್ರೆಕೈಗೊಳ್ಳಲಿರುವ ಜಮಾಅತ್ ಸದಸ್ಯ ವೈ. ಜಲೀಲ್ ಸಾಹೇಬ್ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು. ಪಡುಬಿದ್ರಿ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಪಿ.ಕೆ. ಮಯ್ಯದ್ದೀನ್ ಲಚ್ಚಿಲ್, ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶೇಖ್ ಇಸ್ಮಾಯಿಲ್ ಮಾಸ್ಟರ್, ಉಪಾಧ್ಯಕ್ಷ ಅಬ್ದುಲ್ ಶುಕೂರ್ ದಾವೂದ್ ಸಾಹೇಬ್, ಕೋಶಾಧಿಕಾರಿ ಎ.ಎಚ್. ಮುಹಮ್ಮದ್ ಹಾಜಿ, ಮಾಜಿ ಅಧ್ಯಕ್ಷ ಹಾಜಿ ಪಿ.ಎ. ಅಬ್ದುಲ್ ರಹ್ಮಾನ್, ಹಾಜಿ ಎಂ.ಎಚ್. ಹಮ್ಮಬ್ಬ, ಜಮಾಅತ್ ಸದಸ್ಯರಾದ ಪಿ.ಎಂ, ಅಕ್ಬರ್, ನಜೀರ್ ಸಿ.ಪಿ ಕಂಚಿನಡ್ಕ, ಹಂಝ ಅಬ್ಬಾಸ್, ಮಯ್ಯದ್ದಿ ಮಜಲಕೋಡಿ, ಇಮ್ತಿಯಾಝ್ ಚಾಬು ಸಾಹೇಬ್, ಇಸ್ಮಾಯಿಲ್ ಕಾಡಿಪಟ್ಣ, ಭಾಷಾ ಬೇಂಗ್ರೆ ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ದ.ಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್

Thumbnail
Posted On: 09 Jun 2023, 06:53 PM

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

Thumbnail
Posted On: 09 Jun 2023, 06:39 PM

ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು. ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದ್ದುದನ್ನು ನೇರವಾಗಿ ಹೇಳುತ್ತಿದ್ದ ಇವರು ಉದ್ಯಾವರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ಫಿಶ್ ಮಿಲ್ ವಿರೋಧಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್ಸಿನಲ್ಲಿ ಸಕ್ರಿಯವರಾಗಿದ್ದು, ಪತ್ನಿ, ಮಗಳು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಕಾಪು : ಮುದರಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೆ ಅಭಿನಂದನೆ

Thumbnail
Posted On: 08 Jun 2023, 11:06 AM

ಕಾಪು : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7ರಂದು ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯೋಗಿಣಿ ಶೆಟ್ಟಿ, ಮುದರಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವರಾಮ್ ಭಂಡಾರಿ, ಮುದರಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಹಿರಿಯರಾದ ಗಂಗಾಧರ ಶೆಟ್ಟಿ, ಸಮಾಜ ಸೇವಕರಾದ ವಿಶ್ವನಾಥ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಪು : ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯ ಸರಕಾರದ ವಚನಭೃಷ್ಟತೆ ನೀತಿ ಖಂಡಿಸಿ ಪ್ರತಿಭಟನೆ

Thumbnail
Posted On: 05 Jun 2023, 07:02 PM

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ಸೋಮವಾರ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯುತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ. ಇನ್ನು ಪಶುಸಂಗೋಪನಾ ಇಲಾಖೆಯ ಸಚಿವರಾದ ವೆಂಕಟೇಶ್ ರವರು ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹಿಂದೂಗಳ ಭಾವನೆಗಳ ಮೇಲೆ ಚೆಲ್ಲಾಟವಾಡುವ ಮಾತನ್ನಾಡಿದ್ದಾರೆ. ಗೋವುಗಳೆಂದರೆ ಭಾರತೀಯರಿಗೆ ಪರಮ‌ ಪವಿತ್ರವಾದದು. ಯಾವುದೇ ಕೆಲಸ ಶುಭಾರಂಭ ಮಾಡುವುದಾದರೆ ಮೊದಲು ಗೋಪೂಜೆ ಮಾಡುವರು. ಗ್ರಹಪ್ರವೇಶ ಮಾಡುವುದಾರೂ ಮೊದಲು ಗೋವನ್ನು ಪ್ರವೇಶ ಮಾಡಿಸಿ ನಂತರ ನಾವು ಪ್ರವೇಶ ಮಾಡುವೆವು. ಭಾರತೀಯರದ್ದು ಗೋವು ಆಧಾರಿತ ಕೃಷಿ ಜೀವನ ಪದ್ಧತಿ. ಅಂತಹ ಗೋವುಗಳನ್ನು ಕಡಿಯುವ ಮಾತನ್ನಾಡುವ ಮೂಲಕ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವರು. ಈ ಕಾಯ್ದೆ ಹಿಂಪಡೆಯುವ ಪ್ರಯತ್ನ ಮಾಡಿದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ಮಾಡುವೆವು. ಗ್ರಾಮ ಗ್ರಾಮಗಳಲ್ಲಿ ಜನಜಾಗ್ರತಿ ಮೂಡಿಸುವೆವು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ವೃದ್ಧ ಗೋವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆಗೆ ನಿಮ್ಮ ವೃದ್ಧ ತಂದೆ ತಾಯಿ ಇದ್ದರೆ ಏನು ಮಾಡುವಿರೋ ಗೋವನ್ನೂ ಅದೇ ರೀತಿಯಲ್ಲಿ ನೋಡುವ ಸಂಸ್ಕ್ರತಿ ನಮ್ಮದು ಎಂದರು. ಚಕ್ರವರ್ತಿ ಸೂಲಿಬೆಲೆಗೆ ಜೈಲು ಸೇರಬೇಕಾದೀತು ಎನ್ನುವ ಸಚಿವ ಎಮ್ ಬಿ‌ ಪಾಟೀಲ್ ಹೇಳಿಕೆ ಖಂಡಿಸಲಾಗಿ ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ದಿನಂಪ್ರತಿ ಹೋರಾಟಕ್ಕೂ ನಾವು ಸಿಧ್ಧ ಎನ್ನುವ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು‌ ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಚಂದ್ರಶೇಖರ್ ಕೋಟ್ಯಾನ್, ಸುಧಾಮ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿಗಳಾದ ಲತಾ ಆಚಾರ್ಯ, ಚಂದ್ರ ಮಲ್ಲಾರ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ಎಮ್ ಜಿ ನಾಗೇಂದ್ರ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್, ಪ್ರಮುಖರಾದ ಶರಣ್ ಕುಮಾರ್ ಮಟ್ಟು, ಪ್ರವೀಣ್ ಶೆಟ್ಟಿ ಇನ್ನಂಜೆ, ದಿನೇಶ್ ಕೋಟ್ಯಾನ್, ಜಗದೀಶ್ ಮೆಂಡನ್, ಶೈಲೇಶ್ ಶೆಟ್ಟಿ, ರಮಾ ಶೆಟ್ಟಿ, ಗೌರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನು ಭೇಟಿಯಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Thumbnail
Posted On: 05 Jun 2023, 06:53 PM

ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಜೂನ್ 5ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಕಳ : ಕುಲಾಲ ಸಂಘ ಬೋಳ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ - ವಾರ್ಷಿಕ ಮಹಾಸಭೆ

Thumbnail
Posted On: 05 Jun 2023, 06:19 PM

ಕಾರ್ಕಳ : ನೂರಾರು ಕುಟುಂಬಗಳ ಸದಸ್ಯರು ಒಂದೆಡೆ ಸೇರಿ ವಿಚಾರ ವಿನಿಮಯ ಮಾಡುವಾಗ ಒಮ್ಮತವೇರ್ಪಡದಿರುವುದು ಸಹಜ. ಆದರೆ ಉತ್ತಮ ಕಾರ್ಯ ಸಿದ್ಧಿಯಾಗಬೇಕಾದರೆ, ಇಂತಹ ಭಿನ್ನಾಭಿಪ್ರಾಯಗಳನ್ನು ಮೂಲದಲ್ಲಿಯೇ ಸರಿಪಡಿಸಿಕೊಂಡು ಏಕತೆಯಿಂದಿದ್ದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೊಸ್ಮಾರು ಕುಲಾಲ ಸಮಾಜ ಕಲ್ಯಾಣ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಅಭಿಪ್ರಾಯಪಟ್ಟರು‌. ಅವರು ಕುಲಾಲ ಸಂಘ ಬೋಳದ ವತಿಯಿಂದ ಜೂ.4ರಂದು ನಡೆದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಂಭತ್ತನೇ ವರ್ಷದ ವಾರ್ಷಿಕ ಮಹಾಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೈವ ದೇವರ ಆರಾಧನೆ ಮಾತ್ರವಲ್ಲದೆ ಸೇವೆಯಲ್ಲಿಯೂ ಕುಲಾಲ ಸಮಾಜದ ಬಂಧುಗಳ ಪಾತ್ರ ಮಹತ್ವವಾದುದು. ಶ್ರದ್ಧಾ ಭಕ್ತಿಯಿಂದ, ಪ್ರಾಮಾಣಿಕತೆಯಿಂದ ದುಡಿಯುವ ಇಂತಹ ಸೇವಕರನ್ನು ಗುರುತಿಸಿ,ಗೌರವಿಸುವ ಕಾರ್ಯ ಸಮಾಜದಲ್ಲಿ ನಡೆಯಬೇಕೆಂದರು. ಸನ್ಮಾನ : ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ 94.33% ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿ ಚಿಂತನ್ ಕುಲಾಲ್ ರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಕುಲಾಲ ಸಮಾಜದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭಾಗವಹಿಸಿದ ಮಕ್ಕಳಿಗೆ ವಸಂತಿ ಮಹಾಬಲ ಮೂಲ್ಯರ ವತಿಯಿಂದ ಪುಸ್ತಕ ವಿತರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷ ಮಹಾಬಲ ಮೂಲ್ಯ, ಗೌರವಾಧ್ಯಕ್ಷ ವಸಂತ ಮೂಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪವನ್ ಕುಮಾರ್ ಸ್ವಾಗತಿಸಿ, ವರದಿ ವಾಚಿಸಿದರು. ಶ್ರೀಶಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಸಂಗೀತಾ ಕುಲಾಲ್ ವಂದಿಸಿದರು.

ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

Thumbnail
Posted On: 05 Jun 2023, 06:04 PM

ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ಮತ್ತು ಕಾರ್ಕಳ, ಮೂಡುಬಿದ್ರೆ ತಾಲೂಕು ಅರಣ್ಯ ಇಲಾಖೆಗಳ ವತಿಯಿಂದ ವಿಶ್ವ ಪರಿಸರ ದಿನಾಚರಣೆಯು ಪಂಚಾಯತನ ಗೋಪಾಲ್ ಭಂಡಾರಿ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಕುಶ ಆರ್ ಮೂಲ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯಾಧಿಕಾರಿ ನಾಗೇಶ್ ಎನ್ ಬಿಲ್ಲವ ಅವರು ಪರಿಸರ ಸರಕ್ಷಣೆ ನಮ್ಮೆಲ್ಲರ ಕರ್ತವ್ಯ. ಪರಿಸರದ ಪ್ರೀತಿ ಬಾಲ್ಯದಿಂದಲೂ ಇರಬೇಕು. ಹಸಿರು ಮನೆ, ಹಸಿರು ಶಾಲೆ, ಹಸಿರು ಗ್ರಾಮಗಳು ಇಂದು ನಮ್ಮ ಅಗತ್ಯವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಇನ್ನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ಅವರು ಪರಿಸರ ದಿನದ ಸಂದೇಶವನ್ನು ನೀಡಿ ಮಾಲಿನ್ಯವನ್ನು ಉಂಟುಮಾಡುತ್ತಿರುವ ಪಳೆಯುಳಿಕೆ ಇಂಧನಗಳ ಬಳಕೆ ಹೆಚ್ಚುತ್ತಿರುವ ಬಗ್ಗೆ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ರೈತರಿಗೆ, ಶಕ್ತಿ ಸಂಜೀವಿನಿ ಒಕ್ಕೂಟದ ಎಲ್ಲ ಸದಸ್ಯರಿಗೆ, ಶಾಲೆಯ ಅಧ್ಯಾಪಕರಿಗೆ, ವಿದ್ಯಾರ್ಥಿಗಳಿಗೆ ಹಸಿರು ಗಿಡಗಳನ್ನು ಅರಣ್ಯ ಇಲಾಖೆಯ ವತಿಯಿಂದ ವಿತರಣೆ ಮಾಡಲಾಯಿತು. ಪರಿಸರದ ಬಗ್ಗೆ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆ ಮಾಡಲಾಯಿತು. ಶಕ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪ್ರತಿಮಾ, ಪಂಚಾಯತ್ ಉಪಾಧ್ಯಕ್ಷೆ ಸರಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ, ಕಾರ್ಕಳ ಸಾಮಾಜಿಕ ಅರಣ್ಯಾಧಿಕಾರಿ ವಿದ್ಯಾಲಕ್ಷ್ಮಿ ಪಂಚಾಯತ್ ಸದಸ್ಯರಾದ ವಿಮಲ ಚಂದ್ರಹಾಸ ಶೆಟ್ಟಿ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಟಪಾಡಿ : ಪಡುಕುತ್ಯಾರು ಆನೆಗುಂದಿ ಶ್ರೀ ಗಳ ಚಾತುರ್ಮಾಸ್ಯ ಜು 5ರಿಂದ ಸೆ.29 ; ಪೂರ್ವಭಾವಿ ಕ್ಷೇತ್ರ ಸಂದರ್ಶನ ಜೂ8ರಿಂದ 29

Thumbnail
Posted On: 05 Jun 2023, 05:56 PM

ಕಟಪಾಡಿ : ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕ್ಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು 2023 ಜುಲೈ 3 ರಿಂದ ಸೆಪ್ಟಂಬರ್ 29 ರ ವರೇಗೆ ಪಡು ಕುತ್ಯಾರಿನಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಚಾತುರ್ಮಾಸ್ಯ ಪೂರ್ವಭಾವೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇಗುಲಗಳಲ್ಲಿ 2023 ಜೂನ್ 8 ರಿಂದ 29 ರವರೆಗೆ ಅಂಕೋಲಾ, ಕೊಲಕಾಡಿ, ಪಡುಪಣಂಬೂರು, ಹಳೆಯಂಗಡಿ, ಮಂಗಳೂರು, ಮಧೂರು, ಆರಿಕ್ಕಾಡಿ ಕಾರ್ಳೆ,ಬಂಗ್ರ ಮಂಜೇಶ್ವರ, ಕೋಟೆಕಾರು, ಕಾರ್ಕಳ, ಮೂಡಬಿದ್ರೆ, ಗೋಕರ್ಣ, ಭಟ್ಕಳ, ಬಾರ್ಕೂರು, ಉಪ್ರಳ್ಳಿ, ಕಟಪಾಡಿ, ಕಾಪು ಇಲ್ಲಿ ಕ್ಷೇತ್ರ ಸಂದರ್ಶನವು ನಡೆಯಲಿದೆ ಎಂದು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ : ಅಪಘಾತಕ್ಕೀಡಾಗಿ ಸಾವಾದ ವಾನರದ ಅಂತ್ಯ ಸಂಸ್ಕಾರ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Thumbnail
Posted On: 04 Jun 2023, 08:35 PM

ಉಚ್ಚಿಲ : ರಾಷ್ಟೀಯ ಹೆದ್ದಾರಿ 66ರ ಉಚ್ಚಿಲ ನಾರಾಯಣಗುರು ರಸ್ತೆ ಬಳಿ ರಸ್ತೆ ಅಪಘಾತದಲ್ಲಿ ಅಸುನೀಗಿದ ವಾನರನಿಗೆ ಭಜರಂಗದಳ ಹಾಗೂ ವಿಶ್ವ ಹಿಂದು ಪರಿಷದ್ ಕಾರ್ಯಕರ್ತರಿಂದ ಭಕ್ತಿ ಶ್ರದ್ಧಾ ಪೂರ್ವಕ ಅಂತ್ಯ ಸಂಸ್ಕಾರ ನಡೆಸಿದ ಘಟನೆಯು ಉಚ್ಚಿಲದಲ್ಲಿ ಶನಿವಾರ ನಡೆದಿದೆ. ಬೆಳಿಗ್ಗೆ 11 ಗಂಟೆಯ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರಲ್ಲಿ ಕಾರೊಂದು ಡಿಕ್ಕಿ ಹೊಡೆದು ವಾನರ ಗಾಯಗೊಂಡಿತ್ತು. ಕೂಡಲೇ ಕಾರ್ಯಕರ್ತರು ಪಶು ಚಿಕಿತ್ಸಾಲಯಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನ ಪಟ್ಟಿದ್ದಾರೆ ಚಿಕಿತ್ಸೆಗೆ ಸ್ಪಂದಿಸದ ವಾನರ ಅಸು ನೀಗಿತ್ತು. ಪರಿಶೀಲನೆ ನಡೆಸಿದ ವೈದ್ಯರು ಸಾವನ್ನು ಧೃಡಪಡಿಸಿದ್ದರು. ಬಳಿಕ ಪುರೋಹಿತರ ಮಾರ್ಗದರ್ಶನದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರಾದ ಮಹೇಶ್, ಸಂದೀಪ್, ವಿಶು, ಮನೋಜ್ ಸೇರಿ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.