Updated News From Kaup
ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಕಟಪಾಡಿ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ
Posted On: 04 May 2023, 11:55 AM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಹೆಚ್ಚಿನ ಬೆಂಬಲ ನೀಡಿ ಅವರ ಗೆಲುವಲ್ಲಿ ನೀವು ಪಾಲುದಾರರಾಗಬೇಕು ಎಂದು ಮನವಿ ಮಾತನಾಡಿದರು. ನಂತರ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ರವರು, ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ನೆರೆದಿರುವ ಜನರ ಸಂಖ್ಯೆಗೆ ಹಾಗೂ ಜನರು ನೀಡಿರುವ ಬೆಂಬಲಕ್ಕೆ ಶ್ಲಾಘನೆ ವ್ಯಕ್ತ ಪಡಿಸಿದರು. ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ನರೇಂದ್ರ ಮೋದಿಯವರ ಸಂಕಲ್ಪ ಗೆಲ್ಲಬೇಕು ನಮ್ಮ ಧರ್ಮ ಗೆಲ್ಲಬೇಕು ಅವರು ಈ ದೇಶಕ್ಕೆ ನೀಡಿರುವ ಕೊಡುಗೆಗಳು ಅಪಾರ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ವೀಣಾ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖ್ ಸಂತೋಷ್ ಮೂಡುಬೆಳ್ಳೆ, ಶಕ್ತಿ ಕೇಂದ್ರ ಅಧ್ಯಕ್ಷ ನಿತೇಶ್ ಶೇರಿಗಾರ್, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಕಟಪಾಡಿ ಗ್ರಾಮದ ಬಿಜೆಪಿ ಸದಸ್ಯೆ ಶಾಲಿನಿಚಂದ್ರ ಪೂಜಾರಿ, ಸರ್ಕಾರಿ ಗುಡ್ಡೆ ಭೂತ್ ಅಧ್ಯಕ್ಷ ನಿತೇಶ್ ದೇವಾಡಿಗ, ಸರ್ಕಾರಿ ಗುಡ್ಡೆ ಓ ಬಿ ಸಿ ಕಾರ್ಯದರ್ಶಿ ರಘುಪತಿ ಆಚಾರ್ಯ, ಪಂಚಾಯತ್ ಸದಸ್ಯೆ ಕುಮಾರಿ ದೀಕ್ಷಿತಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ
Posted On: 03 May 2023, 06:27 PM
ಕಾಪು : ಭಾರತೀಯ ಜನತಾ ಪಕ್ಷದ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಣಾಳಿಕೆಯನ್ನು ದೆಹಲಿ ಶಾಸಕರಾದ ವಿಜೇಂದ್ರ ಗುಪ್ತ ಬುಧವಾರ ಕಾಪು ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾಲದಲ್ಲಿ ಹಲವಾರು ಯೋಜನೆಗಳು ಚಾಲ್ತಿಗೆ ಬಂದಿದೆ. ಮುಂದೆಯೂ ಕಾಪು ಕ್ಷೇತ್ರದ ಅಭಿವೃದ್ಧಿ ನಮ್ಮ ಗುರಿ ಎಂದರು. ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಚುನಾವಣಾ ಪ್ರಣಾಳಿಕೆಯ ಪ್ರಮುಖಾಂಶಗಳು : ಪ್ರಣಾಳಿಕೆಯಲ್ಲಿ ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗೆ ಒತ್ತು, ಕಾಪು ಲೈಟ್ಹೌಸ್ ಬೀಚ್ನ ಸಮಗ್ರ ಅಭಿವೃದ್ಧಿ ಮೂಲಕ ಪ್ರವಾಸಿಗರ ಆಕರ್ಷಣೆ, ಸ್ಥಳೀಯರಿಗೆ ಉದ್ಯೋಗದ ಅವಕಾಶ, ಕಾಪು ತಾಲೂಕಿಗೆ ಸುಸಜ್ಜಿತವಾದ ಅಗ್ನಿ ಶಾಮಕ ಠಾಣೆಯ ಮಂಜೂರಾತಿ, ಕಾಪು ಪುರಸಭಾ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದು, ಕಾಪು ದೀಪಸ್ತಂಭದ ಬಳಿ (ಉತ್ತರ ದಿಕ್ಕು) ಸರ್ವಋತುವಿನಲ್ಲಿಯೂ ಮೀನುಗಾರರಿಗೆ ಅನುಕೂಲವಾಗುವಂತೆ ಮೀನುಗಾರಿಕಾ ಜಟ್ಟಿ ನಿರ್ಮಾಣ, ಕಾಪು ತಾಲೂಕಿನಲ್ಲಿ ಪ್ರಮುಖ ಸರಕಾರಿ ಕಟ್ಟಡಗಳ ನಿರ್ಮಾಣ, ಪ್ರವಾಸಿ ಮಂದಿರ ಕಟ್ಟಡ ಹಾಗೂ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಯೋಜನೆ, ಹೆಜಮಾಡಿಯಲ್ಲಿ ತಾಲೂಕು ಕ್ರೀಡಾಂಗಣವನ್ನು ಮೇಲ್ದರ್ಜೆಗೆ ಪರಿವರ್ತನೆ, ಕಾಪು ತಾಲೂಕು ಕೇಂದ್ರದಲ್ಲಿ ವಿವಿಧೋದ್ದೇಶಕ್ಕಾಗಿ ಸುಸಜ್ಜಿತವಾದ ಮಾರುಕಟ್ಟೆ ಪ್ರಾಂಗಣ ನಿರ್ಮಾಣ, ಕಾಪು ತಾಲೂಕಿನಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ. ಕಾಪು ವಿಧಾನಸಭಾ ಕ್ಷೇತ್ರದ ನಗರ ಭಾಗದ ವಸತಿ ರಹಿತರಿಗೆ ವಸತಿ ಸೌಲಭ್ಯ ಹಾಗೂ ಗ್ರಾಮೀಣ ಭಾಗದ ನಿವೇಶನ ರಹಿತರಿಗೆ ನಿವೇಶನ ಸಹಿತ ವಸತಿ ಸೌಲಭ್ಯ ಒದಗಿಸುವ ಗುರಿ, ಸಮುದ್ರ ಕೊರೆತಕ್ಕೆ ಶಾಶ್ವತ ತಡೆಗೋಡೆ ಯೋಜನೆ, ವಿಧಾನಸಭಾ ಕ್ಷೇತ್ರದಾದ್ಯಂತ ವಿವಿಧ ಕೆರೆಗಳ ಅಭಿವೃದ್ಧಿ/ಅಂತರ್ಜಲ ವೃದ್ಧಿಗೆ ಕ್ರಮ, ಹಿರಿಯಡ್ಕ ಭಾಗಗಳಲ್ಲಿ ಸರಕಾರಿ ಜಾಗದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಕೈಗಾರಿಕಾ ಪ್ರದೇಶದ ಗುರುತಿಸುವಿಕೆ ಮತ್ತು ಅಭಿವೃದ್ಧಿ, ನಾಡದೋಣಿ ಮೀನುಗಾರರಿಗೆ ಪ್ರತೀ ತಿಂಗಳು ಪ್ರತೀ ದೋಣಿಗೆ 300 ಲೀಟರ್ ಸೀಮೆಎಣ್ಣೆ ವರ್ಷದಲ್ಲಿ 10 ತಿಂಗಳು ನಿರಂತರವಾಗಿ ನೀಡುವುದು, ಹಿಂದುಳಿದ ವರ್ಗಕ್ಕೆ ಸೇರಿದ ಸಣ್ಣ ಸಣ್ಣ ಸಮುದಾಯಗಳಿಗೆ ನಿವೇಶನ ಒದಗಿಸಿ, ಸಮುದಾಯ ಭವನ ನಿರ್ಮಾಣ. ಶಿಕ್ಷಣ, ಸ್ವಂತ ಉದ್ಯೋಗ ಹಾಗೂ ಇನ್ನಿತರ ಅಭಿವೃದ್ಧಿಗೆ ಯೋಜನೆ ರೂಪಿಸುವುದು, ಕಾಪುವಿನ ಹೃದಯ ಭಾಗದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಸಹಿತ ಸಂಕೀರ್ಣ ನಿರ್ಮಾಣಕ್ಕೆ ಆದ್ಯತೆ, ಕಾಪು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳ ರಸ್ತೆ, ಚರಂಡಿ, ಮಳೆ ನೀರಿನ ತೋಡು, ಬೀದಿ ದೀಪ ಸಹಿತವಾಗಿ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಲು ವ್ಯವಸ್ಥಿತ ಯೋಜನೆ, ಭೂ ಪರಿವರ್ತಿತ ನಿವೇಶನದಲ್ಲಿ ಏಕ ವಿನ್ಯಾಸಗೊಳ್ಳದ ವಸತಿ ನಿವೇಶನಕ್ಕೆ ಕಾನೂನು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳುವುದು, 60 ವರ್ಷ ದಾಟಿದ ಮೀನುಗಾರರಿಗೆ ಪಿಂಚಣಿ ಯೋಜನೆಗೆ ಸರಕಾರದಿಂದ ಮಂಜೂರಾತಿ, 80 ಬಡಗುಬೆಟ್ಟು ಗ್ರಾಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಸ್ಟರ್ ಪ್ಲಾನ್ನಲ್ಲಿ ಗುರುತಿಸಿರುವ ಕೈಗಾರಿಕಾ ವಲಯವನ್ನು ವಸತಿ ವಲಯವಾಗಿ ಬದಲಾಯಿಸುವುದು, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿರ್ಮಾಣ, ಕಾಪು ತಾಲೂಕಿಗೆ ನ್ಯಾಯಾಲಯಗಳ ಸ್ಥಾಪನೆ, ಕರಾವಳಿ ಭಾಗದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ, ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ನೀಡುವುದು, ಪುರಸಭೆ ವ್ಯಾಪ್ತಿಯೊಳಗೆ ಬಫಾರ್ ಝೇನ್ ಕೈಬಿಡಲು ಸರಕಾರದ ಮಟ್ಟದಿಂದ ಆದೇಶಿಸಿ ಸರಳೀಕರಣಗೊಳಿಸುವುದು, ಅಕ್ರಮ-ಸಕ್ರಮ ಯೋಜನೆ ಪರಿಣಾಮಕಾರಿಯಾಗಿ ಜಾರಿ, ಕಾಪು ಕ್ಷೇತ್ರದ ಅತ್ಯಂತ ಹುಸಿ ಒಕ್ಕಲು ಸಾಗುವಾಳಿದಾರರಿಗೆ ಅವರ ಹೆಸರಿಗೆ ಪಹಣಿ ದಾಖಲಿಸಲು ಕ್ರಮವಹಿಸುವುದು. ಈಗಿರುವ ಪಾಲಿಟೆಕ್ನಿಕ್ ಕಾಲೇಜನ್ನು ಮೇಲ್ದರ್ಜೆಗೊಳಿಸುವುದು, ಸರಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ಹೆಜಮಾಡಿ/ಪಡುಬಿದ್ರಿಯಲ್ಲಿ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಮತ್ಸ್ಯಗ್ರಾಮ ಸ್ಥಾಪನೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಮೇಲ್ದರ್ಜೆಗೆ, ಐ.ಟಿ. ಪಾರ್ಕ್ ಸ್ಥಾಪನೆ, ಜವಳಿ ಪಾರ್ಕ್ ಸ್ಥಾಪನೆ, ವಿಧಾನಸಭಾ ಕ್ಷೇತ್ರಾದ್ಯಂತ ಪ್ರವಾಸೋದ್ಯಮಕ್ಕೆ ಆದ್ಯತೆ, ಧಾರ್ಮಿಕ ಕೇಂದ್ರಗಳ ನವೀಕರಣ/ ಹೊಸತನ/ಕಾರಿಡಾರ್ ನಿರ್ಮಾಣ. ಈ ಸಂದರ್ಭ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಚುನಾವಣಾ ಉಸ್ತುವಾರಿ ಸುಲೋಚನ ಭಟ್, ಪಕ್ಷದ ಪ್ರಮುಖರಾದ ಪ್ರಕಾಶ್ ಶೆಟ್ಟಿ, ಕೇಸರಿ ಯುವರಾಜ್, ಉಪೇಂದ್ರ ನಾಯಕ್, ಶಿಲ್ಪಾ ಸುವರ್ಣ, ಶ್ಯಾಮಲಾ ಕುಂದರ್, ಕಿರಣ್ ಆಳ್ವ ಉಪಸ್ಥಿತರಿದ್ದರು.
ಕಾಪು : ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮತಯಾಚನೆ
Posted On: 03 May 2023, 02:45 PM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನೆಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು. ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾತನಾಡಿ ಪಕ್ಷದದಲ್ಲಿ ಮಾಡಿದ ನಿಸ್ವಾರ್ಥ ಸೇವೆಯ ಮುಂದಿನ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಕೊಟ್ಟರು. ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಪರಿಹಾರದ ಭರವಸೆ ಕೊಟ್ಟರು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ಬಂಟ್ವಾಳ ಹಾಗೂ ಕಾಪು ಪುರಸಭಾ ಸದಸ್ಯರಾದ ಹರಿಣಿ ಹಾಗೂ ಅನುಸೂಯ ಕಾಂಪ್ಲೆಕ್ಸ್ ನ ಅಧ್ಯಕ್ಷರಾದ ಡಾ. ಶ್ವೇತಾ ರವರು ಉಪಸ್ಥಿತರಿದ್ದರು.
ಕಾಪು : ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ
Posted On: 03 May 2023, 11:01 AM
ಕಾಪು : ಪಡುಕುತ್ಯಾರಿನಲ್ಲಿ ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆ ಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ, ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.
ಕಾಪು : ಗುರ್ಮೆ ಪ್ರಚಾರಕ್ಕೆ ತಾರಾ ಮೆರುಗು ; ನಟಿ ತಾರಾ ಚುನಾವಣಾ ಕಾರ್ಯಾಲಯ ಭೇಟಿ
Posted On: 03 May 2023, 10:54 AM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಪರವಾಗಿ ನಟಿ ತಾರಾ ಮತ ಯಾಚನೆ ಮಾಡಿದರು. ಈ ಸಂದರ್ಭ ಕಾಪುವಿನಲ್ಲಿರುವ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯಕ್ಕೆ ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಪಕ್ಷದ ಸ್ಟಾರ್ ಪ್ರಚಾರಕಿ ನಟಿ ತಾರಾ ಭೇಟಿ ಕೊಟ್ಟರು.
ಉಚ್ಚಿಲ ಬಡಾ ಗ್ರಾಮದಲ್ಲಿ 300ರಕ್ಕೂ ಮಿಕ್ಕ ಮೀನುಗಾರರು ಕಾಂಗ್ರೆಸ್ ಸೇರ್ಪಡೆ
Posted On: 03 May 2023, 10:31 AM
ಕಾಪು : ತಾಲೂಕಿನ ಉಚ್ಚಿಲ ಬಡಾ ಗ್ರಾಮದ ಕಡಲತಡಿಯ ಭಾಗದಲ್ಲಿ ಬಹಳಷ್ಟು ಮೀನುಗಾರರು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಭಾಗದಲ್ಲಿ ಇಷ್ಟೊಂದು ಜನರು ಸೇರಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಚುನಾವಣಾ ಇತಿಹಾಸದಲ್ಲಿ ಇದೇ ಮೊದಲು ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಡಲ ತಡಿಯ ಉಚ್ಚಿಲ ಬಡಾ ಗ್ರಾಮದಲ್ಲಿ 300ರಕ್ಕೂ ಮಿಕ್ಕ ಮೀನುಗಾರರ ಮುಖಂಡರು ಹಾಗೂ ಯುವಕ ಯುವತಿಯರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊಗವೀರರನ್ನು ಕೇವಲ ಓಟ್ ಬ್ಯಾಂಕ್ ಆಗಿ ನಡೆಸಿಕೊಂಡ ಬಿಜೆಪಿ ಸರ್ಕಾರ ಬಹಳಷ್ಟು ಸೌಲಭ್ಯದಿಂದ ವಂಚಿತರನ್ನಾಗಿ ಮಾಡಿದೆ. ಕರಾವಳಿ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಈ ಬಾರಿ ವಿಶೇಷ ಅನುದಾನವನ್ನು, ವಿಶೇಷ ಪ್ರಣಾಳಿಕೆಯನ್ನು ಜಾರಿ ಮಾಡುವ ಪ್ರಾಮಾಣಿಕ ಭರವಸೆಯನ್ನು ನೀಡಿದೆ. ಭರಪೂರ ಕೊಡುಗೆಯನ್ನು ಕಾಂಗ್ರೆಸ್ ಈ ಬಾರಿ ಕರಾವಳಿ ಭಾಗಕ್ಕೆ ನೀಡುವ ವಾಗ್ದಾನವನ್ನು ಮಾಡಿದೆ. ಅದರ ಸಂಪೂರ್ಣ ಜವಾಬ್ದಾರಿ ನನ್ನ ಹೆಗಲಮೇಲಿದೆ ಎಂದು ಸೊರಕೆ ಹೇಳಿದರು. ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ ಅಮೀನ್, ದೀಪಕ್ ಎರ್ಮಳ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಶೇಖಬ್ಬಾ ಅವರ ನೇತೃತ್ವದಲ್ಲಿ ಬಹಳಷ್ಟು ಮಂದಿ ಇಳಿಹೊತ್ತಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮೊಗವೀರ ಮುಖಂಡರಾದ ಸುಕುಮಾರ್ ಬಂಗೇರ, ರೂಪೇಶ್ ಮೆಂಡನ್, ಜೀವನ್ ಮೆಂಡನ್, ಆನಂದ್ ತಿಂಗಳಾಯ, ಅನಿಶ್, ಯಶ್ವಂತ್ ಬಂಗೇರ, ಉಮೇಶ್ ಪೂಜಾರಿ, ದಯಾನಂದ ಕೋಟ್ಯಾನ್ ,ಶಿವಣ್ಣ ಬಂಗೇರ, ಲಕ್ಷ್ಮಣ್ ಗುರಿಕಾರ ಸೇರ್ಪಡೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸುಕುಮಾರ್ ಬಂಗೇರರವರು ವಿನಯಕುಮಾರ್ ಸೊರಕೆಯವರ ಗೆಲುವಿಗೆ ಎಲ್ಲರೂ ಸೇರಿ ಹಗಲಿರುಳು ಶ್ರಮಿಸುವುದಾಗಿ ಭರವಸೆ ನೀಡಿದರು.
ಗೆದ್ದಲು ತಿನ್ನುತ್ತಿರುವ 2 ಸಾವಿರ ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡುತ್ತೇನೆ : ವಿನಯ ಕುಮಾರ್ ಸೊರಕೆ
Posted On: 02 May 2023, 04:53 PM
ಉಡುಪಿ : ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ. ನಾನು ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಅದಕ್ಕೆ ಮರುಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡುತ್ತೇನೆ ಎಂದು ಅವರು ಹೇಳಿದರು. ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೈಪಾಸ್ ರಸ್ತೆ ಮೂಲಕ ಪೆರ್ಡೂರು ದೇವಸ್ಥಾನಕ್ಕೆ ಹಾನಿ ಆಗದ ಹಾಗೇ ರಸ್ತೆ ಅಗಲೀಕರಣ ಮಾಡಬೇಕಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಬಹಳಷ್ಟು ರಾಜಕೀಯ ಮಾಡ್ತಾ ಇದೆ. ಈಗಿನ ವ್ಯವಸ್ಥೆಯಲ್ಲಿ ಮಾಡೋದಾದಲ್ಲಿ ದೇವಸ್ಥಾನದ ಅರ್ಚಕರು ತಿಳಿಸಿದಂತೆ ಪಾಣಿಗ್ರಹದಲ್ಲಿ ಕಂಪನ ಬರುತ್ತದೆ. ಕೆರೆ, ರಥಬೀದಿ ಎಲ್ಲಾನು ನಾಶವಾಗುತ್ತದೆ. ದೇವಸ್ಥಾನಕ್ಕೆ ಧಕ್ಕೆ ಆಗುತ್ತದೆ. ಬೈಪಾಸ್ ರಸ್ತೆ ಮೂಲಕ ಈ ಕಾಮಗಾರಿ ಆದರೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ. ದೇವಸ್ಥಾನಕ್ಕೆ ಧಕ್ಕೆ ಆಗದೇ ರಸ್ತೆ ಅಗಲೀಕರಣಕ್ಕೆ ನಾವು ಮುಂದುವರಿಸುತ್ತೇವೆ ಎಂದು ಸೊರಕೆ ಹೇಳಿದ್ದಾರೆ. ಬಿಜೆಪಿ ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಶುರುಮಾಡಿ ದೇವಸ್ಥಾನವನ್ನೆ ನಾಶ ಮಾಡಲು ಪ್ರಯತ್ನ ಮಾಡುತ್ತಿದೆ ಎಂದು ಸೊರಕೆ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಕ್ಷೇತ್ರದಾದ್ಯಂತ ಕುಡಿಯುವ ನೀರಿನ ಸಮಸ್ಯೆ ಬಹಳಷ್ಟು ಇದೆ. ಚುನಾವಣಾ ಸಂದರ್ಭದಲ್ಲಿ ಕುಡಿಯುವ ನೀರಿಗೆ ಆದ್ಯತೆ ಕೊಡ್ತಾ ಇಲ್ಲ. ಮೂಲಭೂತ ಸೌಕರ್ಯದಿಂದ ಜನರನ್ನು ವಂಚಿತರಾಗುವ ಕೆಲಸವನ್ನು ಬಿಜೆಪಿ ಮಾಡ್ತಾ ಇದೆ. ಕುಡಿಯುವ ನೀರಿನ ಮೂಲ ಹುಡುಕುವ ಬದಲು ಪೈಪ್ ಲೈನ್ ಮಾತ್ರ ಹಾಕುವ ಕೆಲಸ ಆಗ್ತಿದೆ ಅಂತಾ ಸೊರಕೆ ವ್ಯಂಗ್ಯವಾಡಿದರು. ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೊಳಿ ಮಾತನಾಡಿ ಈಗಿನ ಬಿಜೆಪಿ ಅಭ್ಯರ್ಥಿಯ ಮೇಲೆ ಎರಡು ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಅವರೇ ಸಲ್ಲಿಸಿದ ಅಫಿದಾವಿತ್ ದಾಖಲಾಗಿದೆ. ಗಣಿ ಲೂಟಿಯಲ್ಲಿ ಸರಕಾರಕ್ಕೆ 81 ಕೋಟಿ ವಂಚಿಸಿದ ಪ್ರಕರಣ ಇದರಲ್ಲಿ ಮುಖ್ಯವಾದದ್ದು. ಈ ಬಗ್ಗೆ ಜನರು ಯೋಚಿಸಬೇಕಾಗಿದೆ. ಆಲೋಚಿಸಿ ಮತ ಹಾಕಬೇಕಾಗಿದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಗದ್ದೆಯಲ್ಲಿದ್ದರೆ ಚಂದ, ಪ್ರಾಮಾಣಿಕವಾದ ಕೈ ಅಧಿಕಾರದಲ್ಲಿದ್ದರೆ ಚಂದ ಅಂತೆ. ಹಾಗಾಗಿ ಪ್ರಾಮಾಣಿಕ ರಾಜಕಾರಣಿ ಸೊರಕೆ ಉತ್ತಮ ಆಯ್ಕೆ ಎಂದು ಮರೋಳಿ ಅಭಿಪ್ರಾಯ ಪಟ್ಟರು. ಕಾಂಗ್ರೆಸ್ ಮುಖಂಡರಾದ ಶಾಂತಾರಾಮಸೂಡ, ಚರಣ್ ವಿಠಲ್ ಕುದಿ, ಜಿತೇಂದ್ರ ಫುಟಾರ್ಡೊ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.
ಗುರ್ಮೆ ಸುರೇಶ್ ಶೆಟ್ಟಿ ಪರ ಹರಿಕೃಷ್ಣ ಬಂಟ್ವಾಳ್ ಮತಯಾಚನೆ
Posted On: 02 May 2023, 04:35 PM
ಕಾಪು : ವಿಧಾನಸಭೆಯ ಹಿರಿಯಡ್ಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮೇ 10 ಮತ ಒತ್ತು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 01 May 2023, 05:46 PM
ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10 ಮತ ಒತ್ತು ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ, ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ ಧ್ಯೇಯ ವಾಕ್ಯದ ಧ್ವಜರೋಹಣ ನೆರವೇರಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ತಾವು ಮತದಾನ ಮಾಡಬೇಕಾದ ಮತಗಟ್ಟೆಯ ವಿಳಾಸವನ್ನು ಮೊದಲೇ ತಿಳಿದುಕೊಳ್ಳುವುದರಿಂದ ಮತದಾನ ದಿನದಂದು ಮತಗಟ್ಟೆ ಕುರಿತ ಯಾವುದೇ ಗೊಂದಲಗಳಿಗೆ ಒಳಗಾಗದೇ ಸುಲಭವಾಗಿ ಮತದಾನ ಮಾಡಲು ಸಾಧ್ಯವಿದೆ. ಈ ಮಾಹಿತಿಯನ್ನು ತಮ್ಮ ವ್ಯಾಪ್ತಿಯ ಬಿ.ಎಲ್.ಓ ಗಳ ಬಳಿ, ಚುನಾವಣಾ ಆಯೋಗದ ವೋಟರ್ ಹೆಲ್ಪ್ಲೈನ್ ಆಪ್ ಮೂಲಕ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು. ಜಿಲ್ಲಾ ಸ್ವೀಪ್ ವತಿಯಿಂದ ಈಗಾಗಲೇ ಹಲವು ವಿನೂತನ ಕಾರ್ಯಕ್ರಮಗಳ ಮೂಲಕ, ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದು, ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶತಾಯುಷಿ ಮತದಾರರೂ ಸಹ ಉತ್ಸಾಹದಿಂದ ಮತದಾನ ಪ್ರಕ್ರಿಯೆಲ್ಲಿ ಭಾಗವಹಿಸುತ್ತಿದ್ದು, ಎಲ್ಲಾ ಯುವ ಮತದಾರರು ತಮ್ಮ ಮೊದಲ ಬಾರಿಯ ಮತವನ್ನು ತಪ್ಪದೇ ಚಲಾಯಿಸುವುವಂತೆ ಹೇಳಿದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನತೆಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲಾಗಿದೆ. ಯುವ ಜನತೆ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸೂಕ್ತ ರೀತಿಯಲ್ಲಿ ಚಲಾಯಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಡಯಟ್ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಉಪ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉಡುಪಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಿಜಯಾ ಮತ್ತು ಶಾಲೆಯ ಶಿಕ್ಷಕ ವೃಂದ, ಬಿ.ಎಲ್.ಓ ಗಳು ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಬನ್ನಂಜೆಯಿಂದ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು. ಡಿಡಿಪಿಐ ಗಣಪತಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಬೇಸಿಗೆ ಶಿಬಿರಗಳು ಮಕ್ಕಳ ಮನೋ ವಿಕಸನಕ್ಕೆ ಸಹಕಾರಿ : ನ್ಯಾ.ಶರ್ಮಿಳಾ
Posted On: 01 May 2023, 05:42 PM
ಉಡುಪಿ : ಮಕ್ಕಳು ರಜೆ ಸಮಯದಲ್ಲಿ ಮನೆಯಲ್ಲಿಯೇ ಮೊಬೈಲ್ ಗೀಳಿಗೆ ಬಲಿಯಾಗುತ್ತಿದ್ದು, ಅವರನ್ನು ಬೇಸಿಗೆ ಶಿಬಿರಗಳಿಗೆ ಕಳುಹಿಸುವುದರಿಂದ, ಅವರು ಇತರೇ ಮಕ್ಕಳೊಂದಿಗೆ ಬೆರೆಯುವ ಮೂಲಕ ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಉಡುಪಿಯ ಬಾಲ ಭವನದಲ್ಲಿ, ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಕಾನೂನು ಸೇವಾ ಪ್ರಾಧಿಕಾರ ಉಡುಪಿ, ಜಿಲ್ಲಾ ಬಾಲ ಭವನ ಸಮಿತಿ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, 2023-24 ನೇ ಸಾಲಿನ ಬೇಸಿಗೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮತನಾಡಿದರು. ಬುದ್ದಿವಂತರ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ಉಡುಪಿಯಲ್ಲಿ ಯುವ ಜನತೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳದ ಸಂಗತಿಯಾಗಿದೆ. ಯುವ ಜನರಲ್ಲಿ ಏಕಾಂಗಿತನ, ಆತ್ಮ ವಿಶ್ವಾಸದ ಕೊರತೆ, ನಕರಾತ್ಮಕ ಚಿಂತನೆಯಿಂದ ಆತ್ಮಹತ್ಯೆಗಳು ಸಂಭವಿಸಲಿದ್ದು, ಇತರೊಂದಿಗೆ ಬೆರೆತು, ವಿವಿಧ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಆತ್ಮ ವಿಶ್ವಾಸ ಮತ್ತು ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದರು. ಬೇಸಿಗೆ ಶಿಬಿರಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ದೊರೆಯುವುದರ ಜೊತೆಗೆ ಮಕ್ಕಳು ವಿನೂತನ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಮನೋ ವಿಕಾಸ ಹೊಂದಿ, ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗಲಿದೆ. ಬೇಸಿಗೆ ರಜೆಯ ಸದುಪಯೋಗವಾಗಲಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಸಂಪನ್ಮೂಲ ವ್ಯಕ್ತಿಗಳಾದ ನಿರಂಜನ ಭಟ್, ಹೇಮಲತಾ ರಾವ್, ಸ್ಪೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಬಾಲಭವನದ ಮೇಲ್ವಿಚಾರಕಿ ಶೈಲಾ ಸ್ವಾಗತಿಸಿದರು. ಶ್ವೇತಾ ನಿರೂಪಿಸಿ ವಂದಿಸಿದರು.
