Updated News From Kaup

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ : ಯುಎಸ್‌ಎ ಘಟಕ ಉದ್ಘಾಟನೆ

Thumbnail
Posted On: 22 May 2023, 11:05 AM

ಕಾಪು : ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಂತಾರಾಷ್ಟ್ರೀಯ ಘಟಕವನ್ನು ಯುಎಸ್‌ಎ ಸಮಿತಿಯ ಅಧ್ಯಕ್ಷ ಅಖಿಲ ಅಮೇರಿಕಾ ತುಳು ಅಸೋಸಿಯೇಶನ್‌ನ ಸಂಸ್ಥಾಪಕ ಭಾಸ್ಕರ ಶೇರಿಗಾರ್ ಬೋಸ್ಟನ್, ಶೈಲಶ್ರೀ ಶೇರಿಗಾರ್, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಅಮೆರಿಕದ ಬೋಸ್ಟನ್‌ನಲ್ಲಿ ಮೇ 14 ರಂದು ಉದ್ಘಾಟಿಸಿದರು. ಪ್ರಸ್ತವಾನೆಗೈದ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಪ್ರಪಂಚದಾದ್ಯಂತ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಮಗ್ರವಾಗಿ ಜೀರ್ಣೋದ್ದಾರಗೊಳ್ಳುತ್ತಿದೆ. 17ನೇ ಶತಮಾನದ ಕೆಳದಿ ಅರಸರ ಕಾಲದ ಇತಿಹಾಸವನ್ನು ಹೊಂದಿರುವ ಮಾರಿಗುಡಿಯ ಪುನರುತ್ಥಾನ ಯೋಜನೆಗಳು ಹೊಯ್ಸಳ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿವೆ. ಜೀರ್ಣೋದ್ಧಾರಕ್ಕೆ ಪೂರಕವಾಗಿ 18 ಕ್ಕೂ ಅನೇಕ ದೇಶಗಳಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಹಸ್ರಮಾನದಲ್ಲೊಮ್ಮೆ ಸಿಗಬಹುದಾದ ಮಾರಿಗುಡಿ ಜೀರ್ಣೋದ್ದಾರ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸುವಂತೆ ಅವರು ವಿನಂತಿಸಿದರು. ಅಧ್ಯಕ್ಷತೆ ವಹಿಸಿದ್ದ ಯುಎಇ ಸಮಿತಿ ಅಧ್ಯಕ್ಷ ಭಾಸ್ಕರ್ ಶೇರಿಗಾರ್ ಮಾತನಾಡಿ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕದಾದ್ಯಂತ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿಯ ಸಂದೇಶವನ್ನು ಹರಡುವುದರ ಜತೆಗೆ ಜೀರ್ಣೋದ್ಧಾರ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮತ್ತು ಬೆಂಬಲಿಸುವುದಾಗಿ ಭರವಸೆ ನೀಡಿದರು. ಅಮೇರಿಕಾ ಸಮಿತಿಯ ಸದಸ್ಯ ಶರತ್ ಅಮೀನ್, ಬೋಸ್ಟನ್ ತುಳುಕೂಟದ ಸಂಸ್ಥಾಪಕ ಅಧ್ಯಕ್ಷ ಮತ್ತು ಬೋಸ್ಟನ್ ಕನ್ನಡ ಕೂಟದ ಮಾಜಿ ಅಧ್ಯಕ್ಷ ಡಾ| ಸುಧಾಕರ ರೇವನ್, ಶಿರೀಶ್ ಶೆಟ್ಟಿ ಅಟ್ಲಾಂಟಾ, ಡಿಜಿಟಲ್ ಕ್ಯೂಬ್ಸ್‌ನ ಸಿಇಒ ಸಂತೋಷ್ ಉಡುಪಿ ಮಿಚಿಗನ್, ರಾಮದಾಸ್ ಕುಲಾಲ್ ನ್ಯೂಯಾರ್ಕ್, ಆಟಾದ ಅಧ್ಯಕ್ಷೆ ಶ್ರೀವಲ್ಲಿ ರೈ ಫ್ಲೋರಿಡಾ, ಸಿದ್ಧಾರ್ಥ್ ಶೆಟ್ಟಿ ಟೆಕ್ಸಾಸ್, ಸುಷ್ಮಾ ಜಯಚಂದ್ರ ಪೆನ್ಸಿಲ್ವೇನಿಯಾ, ತುಳುವೆರೆ ಚಾವಡಿ ಸಂಸ್ಥಾಪಕ ಉಮೇಶ್ ಅಸೈಗೋಳಿ ಉತ್ತರ ಕೆರೊಲಿನಾ ಉಪಸ್ಥಿತರಿದ್ದರು. ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಯುಎಇ, ಯುಎಇ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ ಸಹಿತ ವಿವಿಧ ಸಮಿತಿಗಳ ಪ್ರಮುಖರು ವರ್ಚುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ನವದುರ್ಗೆಯರನ್ನು ಪ್ರತಿನಿಧಿಸುವ ಒಂಬತ್ತು ಸುಮಂಗಲಿಯರಾದ ಪೂಜಾ ಶೆಟ್ಟಿ, ಡಾ| ಉಷಾ ರಾವ್, ರಮ್ಯಾ ಜೈನ್, ಲಕ್ಷ್ಮೀ ಪುರಾಣಿಕ್, ಮಧು ಗೌಡ, ಚಂದ್ರಿಕಾ ರಾವ್, ಚಂದ್ರ ಬಿಸ್ವಾಸ್, ಶೈಲಶ್ರೀ ಶೇರಿಗಾರ್ ಮತ್ತು ಸೌಮ್ಯಾ ಕರುಣಾಕರ್ ಒಂಬತ್ತು ದೀಪಗಳನ್ನು ಬೆಳಗಿಸಿದರು. ಸಂಘಟಕರಾದ ಶೈಲಶ್ರೀ ಭಾಸ್ಕರ ಶೇರಿಗಾರ್ ಸ್ವಾಗತಿಸಿದರು. ಶಿರೀಶ್ ಶೆಟ್ಟಿ ಅಟ್ಲಾಂಟಾ ವಂದಿಸಿದರು. ಡಾ| ಸುಧಾಕರ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ಕಟಪಾಡಿಯ ಮಹಿಳೆಗೆ ಮುತ್ತೂಟ್ ಫ಼ೈನಾನ್ಸ್ ಸಂಸ್ಥೆಯ ಎಮ್‌ ಜಾರ್ಜ್ ಫೌಂಡೆಶನ್ ವತಿಯಿಂದ ವೈದ್ಯಕೀಯ ನೆರವು

Thumbnail
Posted On: 21 May 2023, 10:55 AM

ಉಡುಪಿ : ನಗರದ ಮೈತ್ರಿ ಕಾಂಪ್ಲೆಕ್ಸ್ ‌ನಲ್ಲಿರುವ ಚಿನ್ನದ ಸಾಲದ ಕಂಪನಿಯಾದ ಮುತ್ತೂಟ್ ಫ಼ೈನಾನ್ಸ್ ಸಂಸ್ಥೆಯ ಎಮ್‌ ಜಾರ್ಜ್ ಫೌಂಡೆಶನ್ ವತಿಯಿಂದ ಮಂಜೂರಾದ ಮೆಡಿಕಲ್‌‌ ಚಾರಿಟಿಯ ಚೆಕ್ ನ್ನು ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವ ಕಟಪಾಡಿಯ ಲಕ್ಷ್ಮಿಬಾಯಿ ಚಂದ್ರಪ್ಪರವರಿಗೆ ಕಟಪಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರ ಆಚಾರ್ಯರವರು ಹಸ್ತಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ಪ್ರಭಾಕರ ಕೆ ಪಾಲನ್, ಪ್ರಬಂಧಕ ಗಣೇಶ್ ಭಟ್, ಮುತ್ತೂಟ್ ಫ಼ೈನಾನ್ಸ್ ಲಿಮಿಟೆಡ್‌ ಉಡುಪಿ ಮತ್ತು ಮುತ್ತೂಟ್ ಫ಼ೈನಾನ್ಸ್ ಸಿಬ್ಬಂದಿ‌ ಮಂಜುನಾಥ್ ಬಿ‌. ಉಪಸ್ಥಿತರಿದ್ದರು.

ಕಾಪು : ಕ್ಷೇತ್ರದ ಮತದಾರರಿಗೆ ಚಿರಋಣಿಯಾಗಿರುತ್ತೇನೆ - ಗುರ್ಮೆ ಸುರೇಶ್ ಶೆಟ್ಟಿ

Thumbnail
Posted On: 21 May 2023, 10:29 AM

ಕಾಪು : ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಪಂಚಾಯತ್ ಗಳಿಗೆ ಶನಿವಾರ ಭೇಟಿ ನೀಡಿ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ನಡೆದ ರೋಡ್ ಶೋದಲ್ಲಿ ಅವರು ಮಾತನಾಡಿ ತಾವು ನೀಡಿದ ವಚನಕ್ಕೆ ಬದ್ಧರಿರುವುದಾಗಿ ಹೇಳಿದರು. ತಾನು ಕ್ಷೇತ್ರದ ಮತದಾರರಿಗೆ ಚಿರಋಣಿಯಾಗಿರುತ್ತೇನೆ ಎಂಬುದನ್ನು ಅವರು ಪುನರುಚ್ಚರಿಸಿದರು. ಮೊದಲ ದಿನದ ವಿಜಯೋತ್ಸವದ ಸಮಾರೋಪ : ಕಳತ್ತೂರಿನಲ್ಲಿ ಶನಿವಾರ ನಡೆದ ಮೊದಲನೇ ದಿನದ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಮುಂದಿನ ಐದು ವರ್ಷಗಳಿಗೆ ತಮ್ಮನ್ನು ಚುನಾಯಿಸಿದ ಮತದಾರರಿಗೆ ತಾವು ಕಾಯಾ ವಾಚಾ ಮನಸಾ ಸೇವೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶಿಲ್ಪಾ ಜಿ ಸುವರ್ಣ, ಗಂಗಾಧರ್ ಸುವರ್ಣ, ಲತಾ ಆಚಾರ್ಯ, ಸುಮಾ ಶೆಟ್ಟಿ, ಸುರೇಂದ್ರ ಪನಿಯೂರು, ಗೋಪಾಲಕೃಷ್ಣ ರಾವ್, ಸಚಿನ್ ಸುವರ್ಣ ಪಿತ್ರೋಡಿ, ಸಂತೋಷ ಮೂಡುಬೆಳ್ಳೆ ಸೇರಿದಂತೆ ಹಿರಿಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ : ತಹಶೀಲ್ದಾರ್ ರವಿ ಎಸ್ ಅಂಗಡಿ

Thumbnail
Posted On: 20 May 2023, 06:42 PM

ಉಡುಪಿ : ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು. ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಸೂಚಿಸಲಾದ ಇಲಾಖೆಗಳು ನಿಗಧಿಪಡಿಸಿದ ದಿನಗಳಂದು ಗಸ್ತು ನಡೆಸಿ, ಅಕ್ರಮ ಮರಳು ಗಣಿಗಾರಿಕೆಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಕೆ.ಎಂ ರಾಜು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಾಯಕ ಪೂಜಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಿರಿಯ ಭೂ ವಿಜ್ಞಾನಿ ಅಶ್ವಿನಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಉಪ ತಹಶೀಲ್ದಾರ್ ಐರಿನ್ ನೊರೋಹ್ನ, ಮಲ್ಪೆ ವೃತ್ತ ನಿರೀಕ್ಷಕ ಸುರೇಶ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಗೆಲುವಿನ ಸಂಭ್ರಮಾಚರಣೆ - ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ರೋಡ್ ಶೋ

Thumbnail
Posted On: 20 May 2023, 05:56 PM

ಕಾಪು : ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರ ರೋಡ್ ಶೋ ಕಾರ್ಯಕ್ರಮ ಶನಿವಾರದಂದು ಬಿಜೆಪಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಪಡುಕೆರೆಯಿಂದ ಆರಂಭವಾಯಿತು. ತದನಂತರ ಉದ್ಯಾವರ, ಕಟಪಾಡಿ, ಶಿರ್ವ, ಮುದರಂಗಡಿ, ಅಡ್ಡೆ, ಪಲಿಮಾರು, ನಂದಿಕೂರು, ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ಅದಮಾರು, ಕಾಪು ಹೀಗೆ ಕ್ಷೇತ್ರದೆಲ್ಲೆಡೆ ಸಾಗಿ ಈ ದಿನದ ರೋಡ್ ಶೋ ಶಿರ್ವ ವ್ಯಾಪ್ತಿಯ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಮಾಪನಗೊಳ್ಳಲಿದೆ. ನೂತನ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್, ಮೆಂಡನ್, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿ.ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ ಪೂಜಾರಿ, ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಪೇಟೆಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

Thumbnail
Posted On: 20 May 2023, 05:24 PM

ಕಾಪು : ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಮತ್ತು ಇತರರ ಪ್ರಮಾಣವಚನ ಸ್ವೀಕಾರದ ನೇರ ಪ್ರಸಾರದ ವೀಕ್ಷಣೆಯ ಅವಕಾಶವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಕಾಪು ಪೇಟೆಯಲ್ಲಿ ಆಯೋಜಿಸಲಾಗಿತ್ತು. ಪಕ್ಷದ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರದ ಸಂದರ್ಭ ಜೈಕಾರ ಹಾಕಿದರು. ಇದೇ ಸಂದರ್ಭ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಪದಗ್ರಹಣ ಸಮಾರಂಭದ ಸಂಭ್ರಮಾಚರಣೆ ಮಾಡಿದರು.

ಮೇ 20-21 : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ರೋಡ್ ಶೋ

Thumbnail
Posted On: 19 May 2023, 09:41 PM

ಕಾಪು : ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರ ರೋಡ್ ಶೋ ಮೇ 20, ಶನಿವಾರ ಮತ್ತು ಮೇ 21, ಭಾನುವಾರ ಜರಗಲಿದೆ. ವಿವರಗಳು : ಮೇ 20 ಶನಿವಾರದಂದು ಬೆಳಿಗ್ಗೆ ಗಂಟೆ 9.30 ಪಡುಕೆರೆ, 10 ಗಂಟೆಗೆ ಕೋಟೆ, 10.15 ಕಟಪಾಡಿ, 10.45 ಉದ್ಯಾವರ ಸಂಪಿಗೆನಗರ, 11.15 ಕಟಪಾಡಿ, 11.30 ಕುರ್ಕಾಲು, 12.00 ಬಂಟಕಲ್ಲು, 12.15 ಶಿರ್ವ, 12.45 ಕುತ್ಯಾರು, 1ಗಂಟೆಗೆ ಮುದರಂಗಡಿ, 1.30 ಪಲಿಮಾರಿನಲ್ಲಿ ನಡೆಯಲಿದೆ. ವಿರಾಮದ ಬಳಿಕ ಮಧ್ಯಾಹ್ನ 2.30 ಕ್ಕೆ ಪಲಿಮಾರು, 3 ಗಂಟೆಗೆ ಪಡುಬಿದ್ರಿ, 3.15 ಹೆಜಮಾಡಿ, 3.30 ಪಡುಬಿದ್ರಿ 3.45 ತೆಂಕ, 4 ಅದಮಾರು, 4.15 ಬೆಳಪು, 4.30 ಎಲ್ಲೂರು ಪಣಿಯೂರು, 4.45 ಉಚ್ಚಿಲ, ಸಂಜೆ 5 ಮುಳೂರು ಫಿಶರೀಸ್ ರಸ್ತೆ, 5.15 ದೀಪಸ್ತoಭ, 5.45 ಕೈಪುಂಜಾಲು, 6ಕ್ಕೆ ಕೋತಲ್ ಕಟ್ಟೆ, ಕಾಪು ಪೇಟೆ, 6.15 ಕೊಂಬಗುಡ್ಡೆ, 6.30 ಮಜೂರು, 7 ಗಂಟೆಗೆ ಕಳತ್ತೂರು ತದನಂತರ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಮಾರೋಪ ಮತ್ತು ಭೋಜನದ ವ್ಯವಸ್ಥೆ ಇರಲಿದೆ. ಎರಡನೇ ದಿನವಾದ ಮೇ 21, ಭಾನುವಾರ ಬೆಳಿಗ್ಗೆ ಗಂಟೆ 9.30 ಬೆಳ್ಳಂಪಳ್ಳಿ ಕುಕ್ಕೆಹಳ್ಳಿ, 9.45 ಕುಕ್ಕೆಹಳ್ಳಿ, 10 ಬಜೆ ರಸ್ತೆ, 10.15 ಬುಕ್ಕಿಗುಡ್ಡೆ, 10.30 ಪೆರ್ಡೂರು, 10.45 ಭೈರಂಪಳ್ಳಿ, 11 ಪಂಚನಬೆಟ್ಟು ರಸ್ತೆ, 11.30 ಮುತ್ತೂರು ರಸ್ತೆ, 12.00 ಕಾಜರಗುತ್ತು, 12.15 ಕೊಡಿಬೆಟ್ಟು, ಓಂತಿಬೆಟ್ಟು‌ ಜಂಕ್ಷನ್, 12.30 ಹಿರಿಯಡ್ಕ, 12.45 ಪುತ್ತಿಗೆ, ಮಧ್ಯಾಹ್ನ 1ಕ್ಕೆ ಹಿರಿಯಡ್ಕದಲ್ಲಿ ಸಭಾ ಕಾರ್ಯಕ್ರಮ ಭೋಜನದ ವಿರಾಮ ತದನಂತರ 2.15 ಮಟ್ಟಾರು, 3 ನಾಲ್ಕುಬೀದಿ, 3.15 ಬೆಳ್ಳೆ, 3.30 ನೆಲ್ಲಿಕಟ್ಟೆ ಕೊಡಂಗಳ, 4 ಕರ್ವಾಲು ನೆಹರೂನಗರ, 4.15 ನೈಲಪಾದೆ ಕುಂತಳನಗರ, 4.30 ದೆಂದೂರುಕಟ್ಟೆ, 4.45 ಅಲೆವೂರು, 5 ಕೆಮ್ತೂರು ರಸ್ತೆ ಕೊರಂಗ್ರಪಾಡಿ, 5.15ಅಲೆವೂರು ಮಣಿಪಾಲ ರಸ್ತೆ, 5.30 ದಶರಥ ನಗರ, 5.45 ಪರ್ಕಳ, 6 ಆತ್ರಾಡಿ, 6.15 ಪರೀಕ, 6.39 ನೆಲ್ಲಿಕಟ್ಟೆ, 7ಗಂಟೆಗೆ ಸಮಾರೋಪ, ಸಭಾಕಾರ್ಯಕ್ರಮ‌ ಮತ್ತು ಭೋಜನದೊಂದಿಗೆ ಮುಕ್ತಾಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿರ್ವ : ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ದೃಷ್ಟಿಹೀನರಿಗೆ ಸಹಾಯಕವಾಗುವ ಯಂತ್ರದ ಅಭಿವೃದ್ಧಿ

Thumbnail
Posted On: 19 May 2023, 08:28 PM

ಶಿರ್ವ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶ್ರೇಯ ಉಡುಪ, ಸ್ನೇಹ ಜೆ ಎಸ್, ತುಳಸಿ ಡಿ ಜೆ ಮತ್ತು ಯಶವಂತ ನಾಯಕ್ ಇವರು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕರಾದ ಚೇತನ್ ಇವರ ಮಾರ್ಗದರ್ಶನದಲ್ಲಿ “ರೋಬೋಟ್ ಅಸಿಸ್ಟೆನ್ಸ್ ಫಾರ್ ವಿಷುವಲೀ ಇಂಪೇರ್ಡ್” ಎಂಬ ಪ್ರಾಜೆಕ್ಟ್‌ನ್ನು ಅಭಿವೃದ್ಧಿ ಪಡಿಸಿರುತ್ತಾರೆ. ಈ ಪ್ರಾಜೆಕ್ಟ್‌ಗೆ ಕರ್ನಾಟಕ ಸರಕಾರದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಮಂಡಳಿಯಿಂದ (KSCST) ಆರ್ಥಿಕ ನೆರವು ದೊರೆತಿದೆ. ಕಣ್ಣುಗಳು ಮಾನವನ ಅತ್ಯಮೂಲ್ಯವಾದ ಅಂಗ. ದೃಷ್ಟಿಯನ್ನು ಕಳೆದುಕೊಂಡವರು ತಮ್ಮ ದಿನನಿತ್ಯದ ಚಟುವಟಿಕೆಯನ್ನು ನಡೆಸಲು ಬಹಳಷ್ಟು ಕಷ್ಟಪಡುತ್ತಾರೆ. ಈ ಸಮಸ್ಯೆಯನ್ನು ಬಗೆಹರಿಸಲು ವಿದ್ಯಾರ್ಥಿಗಳು ಈ ಪ್ರಾಜೆಕ್ಟ್‌ನ್ನು ಅಭಿವೃದ್ಧಿಪಡಿಸಿದ್ದಾರೆ. ಈ ರೋಬೋಟ್ ಮೂಲಕ ದೃಷ್ಟಿಯನ್ನು ಕಳೆದುಕೊಂಡವರು ತಮ್ಮ ದಿನನಿತ್ಯದ ಚಟುವಟಿಕೆಗಳಿಗೆ, ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು, ವಸ್ತುಗಳನ್ನು ಗುರುತಿಸಲು ಸಹಾಯಕವಾಗಿದೆ, ಈ ರೋಬೋಟ್ ಧ್ವನಿ ಪ್ರಕ್ರಿಯೆಯನ್ನು ಒಳಗೊಂಡಿದ್ದು ಇದರ ಮೂಲಕ ದೃಷ್ಟಿಯನ್ನು ಕಳೆದುಕೊಂಡವರು ತಮ್ಮ ಕೆಲಸ ಕಾರ್ಯವನ್ನು ನಿರ್ವಹಿಸುತ್ತಾರೆ. ವಿದ್ಯಾರ್ಥಿಗಳ ಈ ಯೋಜನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಮುಖ್ಯಸ್ಥರು ಅಭಿನಂದಿಸಿರುತ್ತಾರೆ.

ಮೇ 20 ಮತ್ತು 21 : ಉಡುಪಿ‌ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲಿದ್ದಾರೆ 5712 ವಿದ್ಯಾರ್ಥಿಗಳು

Thumbnail
Posted On: 19 May 2023, 08:10 PM

ಉಡುಪಿ : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ಸಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು. ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು.

ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Thumbnail
Posted On: 19 May 2023, 07:53 PM

ಉಡುಪಿ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿ-ಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೆöÊಲ್ಕಿಟ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.