Updated News From Kaup

ಎಪ್ರಿಲ್ 16 - 30 : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ವತಿಯಿಂದ ಸಮ್ಮರ್ ಕ್ಯಾಂಪ್ ದಮಾಕ

Thumbnail
Posted On: 15 Apr 2023, 11:10 PM

ಕಾಪು : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ಇವರ ವತಿಯಿಂದ ನೆರವೇರಲಿರುವ ಸಮ್ಮರ್ ಕ್ಯಾಂಪ್ ದಮಾಕ ಎಪ್ರಿಲ್ 16ರಿಂದ ಎಪ್ರಿಲ್ 30ರವರೆಗೆ ನಡೆಯಲಿದೆ. ಇದರ ವತಿಯಿಂದ ಮಕ್ಕಳಿಗೆ ಹಲವಾರು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಡ್ಯಾನ್ಸ್:- ವಿನೂತನ ನೃತ್ಯ ಭಂಗಿಗಳು,ಮುಖದಲ್ಲಿ ನೃತ್ಯದ ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬಹುದು ಎಂದು ಮಕ್ಕಳಿಗೆ ತಿಳಿಸಿ ಕೊಡಲಾಗುತ್ತದೆ. ಚಿತ್ರಕಲೆ:- ಹಲವಾರು ಶ್ಯೆಲಿಯ ಚಿತ್ರಕಲೆಯ ಸೊಬಗನ್ನು ಮಕ್ಕಳಿಗೆ ತಿಳಿಸಿಕೊಡಲಾಗುವುದು. ಅಭಿನಯ:- ಖ್ಯಾತ ಕಲಾವಿದರಿಂದ ಅಭಿನಯದ ಸ್ಪರ್ಶವನ್ನು ಮಕ್ಕಳಿಗೆ ಹೇಳಿಕೊಡಲಾಗುವುದು. ಸ್ಪರ್ಧೆ:- ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಯೊಂದಿಗೆ ಮನೋರಂಜಿಸಲಾಗುವುದು.

ಪಡುಬಿದ್ರಿ : ಕಂಚಿನಡ್ಕ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ತಾಲೂಕು ಅಧಿಕಾರಿ ವರ್ಗ ಭೇಟಿ

Thumbnail
Posted On: 15 Apr 2023, 10:58 PM

ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕದ ವಲ್ನರೇಬಲ್ ಮತಗಟ್ಟೆಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಕಾಪು ತಾಲೂಕು ಅಧಿಕಾರಿ ವರ್ಗ ಭೇಟಿ ನೀಡಿದರು. ಈ ಸಂದರ್ಭ ಸಾರ್ವಜನಿಕರಿಗೆ ಯಾವುದೇ ಒತ್ತಡ ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು. ಈ‌ ಸಂದರ್ಭ ಸ್ಥಳೀಯರು ಮತ್ತು ಅಧಿಕಾರಿ ‌ವರ್ಗ ಉಪಸ್ಥಿತರಿದ್ದರು.

ಕಾಪು : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ - ಕಾರ್ಯಕರ್ತರ ಭೇಟಿ ; ಸಮಾಲೋಚನೆ

Thumbnail
Posted On: 15 Apr 2023, 08:14 PM

ಕಾಪು : ಇಲ್ಲಿನ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಇಂದು ಕುರ್ಕಾಲು, ಇನ್ನಂಜೆ ಮಲ್ಲಾರು, ಕಟಪಾಡಿ, ಮಜೂರು, ಎಲ್ಲೂರು, ಕೋಟೆ ಗ್ರಾಮೀಣ ಕಾಂಗ್ರೆಸ್ ಸಮಿತಿಗಳಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ನಾಮಪತ್ರ ಸಲ್ಲಿಸುವ ಬಗ್ಗೆ ಕಾರ್ಯಕರ್ತರ ಹಾಗೂ ಪಕ್ಷದ ಹಿತೈಷಿಗಳಲ್ಲಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿ ಮಾಡಿಕೊಂಡರು. ಈ ಸಂದರ್ಭ ಡಾ. ದೇವಿ ಪ್ರಸಾದ ಶೆಟ್ಟಿ, ಜಿತೇಂದ್ರ ಪೂಟಾರ್ಡೋ, ನವೀನ್ ಚಂದ್ರ ಜೆ ಶೆಟ್ಟಿ, ದಿವಾಕರ್, ಸುರೇಶ್ ಪೂಜಾರಿ ಕೂರ್ಕಾಲು, ನವೀನ್ ಚಂದ್ರ ಸುವರ್ಣ ಅಡ್ವೆ, ವೈ ಸುಕುಮಾರ್, ದೇವಪುತ್ರ ಕೋಟ್ಯಾನ್, ರಾಜೇಶ್ ರಾವ್ ,ಶ್ರೀಕರ್ ಅಂಚನ್, ಅಶೋಕ್ ರಾವ್ ಕಟ್ಪಾಡಿ ,ಅಬ್ದುಲ್ ಅಜೀಜ್, ನಯೀಮ್ ಕಟಪಾಡಿ, ಅಖಿಲೇಶ್ ಕೋಟ್ಯಾನ್, ಪ್ರಭಾಕರ್ ಆಚಾರ್ಯ, ಅಬೂಬಕರ್ ಕಟಪಾಡಿ, ಮಹೇಶ್ ಶೆಟ್ಟಿ ಬಿಳಿಯಾರು ಮುಂತಾದವರು ಉಪಸ್ಥಿತರಿದ್ದರು.

ಮೋದಿಯವರ ಯೋಜನೆ, ಯೋಚನೆ ಮತ್ತು ಶಾಸಕ ಲಾಲಾಜಿ ಮೆಂಡನ್ ರ ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ : ಸುರೇಶ್ ಶೆಟ್ಟಿ ‌ಗುರ್ಮೆ

Thumbnail
Posted On: 15 Apr 2023, 07:47 PM

ಕಾಪು : ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿದೆ. ಎಪ್ರಿಲ್ 17, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾಪು ಜನಾರ್ಧನ ದೇವಸ್ಥಾನದಿಂದ ಸುಮಾರು 25,000 ಜನರ ಸೇರುವಿಕೆಯೊಂದಿಗೆ ಪಾದಯಾತ್ರೆ ಮೂಲಕ ಕಾಪು ತಾಲೂಕು ಕಛೇರಿಗೆ ಸಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ‌ಗುರ್ಮೆ ಹೇಳಿದರು. ಅವರು ಕಾಪುವಿನಲ್ಲಿ ಜರಗಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ನಾಮಪತ್ರಿಕೆ ಸಲ್ಲಿಕೆಯಂದು ಅಣ್ಣಾಮಲೈ, ಸುನಿಲ್ ಕುಮಾರ್, ಕೋಟ ಶ್ರೀನಿವಾಸ ‌ಪೂಜಾರಿ, ಲಾಲಾಜಿ‌‌ ಮೆಂಡನ್, ರಘುಪತಿ ಭಟ್, ಯಶ್ಪಾಲ್ ಸುವರ್ಣ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿಯ ಯೋಜನೆ, ಯೋಚನೆಯ ಜೊತೆಗೆ ಸ್ಥಳೀಯವಾಗಿ ಶಾಸಕರಾದ ಲಾಲಾಜಿ‌ ಮೆಂಡನ್ ರವರ ಐದು ವರ್ಷಗಳಲ್ಲಿ ಮೂರು ಸಾವಿರ ಕೋಟಿ ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ. ನಮ್ಮ ಚುನಾವಣೆಗೆ ಇದು ಶ್ರೀರಕ್ಷೆಯಾಗಲಿದೆ. ಮುಂದೆ ಹಲವಾರು ಕನಸುಗಳಿವೆ ಎಂದರು. ಈ ಸಂದರ್ಭ ಮಾತನಾಡಿದ ಶಾಸಕ ಲಾಲಾಜಿ ಮೆಂಡನ್ ಪಕ್ಷ 6 ಬಾರಿ ಸ್ಪರ್ಧಿಸಲು ಅವಕಾಶ ನೀಡಿ 3 ಬಾರಿ ಶಾಸಕನಾಗಿ ಆಯ್ಕೆಯಾಗಿ ಮೂರು ಸಾವಿರಕ್ಕೂ ಮಿಕ್ಕಿ ಅನುದಾನದ ಕಾರ್ಯಯೋಜನೆಗಳಾಗಿವೆ. ಸುರೇಶ್ ಶೆಟ್ಟಿ ಗುರ್ಮೆಯವರು ಶಾಸಕನಾಗಿ ಆಯ್ಕೆಯಾಗಿ ಹಲವಾರು ರೀತಿಯ ಅಭಿವೃದ್ಧಿಯಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ದೆಹಲಿ ವಿಧಾನಸಭಾ ಶಾಸಕ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದರ್ ಗುಪ್ತ, ಶಾಸಕರಾದ ಲಾಲಾಜಿ ಮೆಂಡನ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿರಿಯರಾದ ಗಂಗಾಧರ್ ಸುವರ್ಣ, ಗೀತಾಂಜಲಿ ಸುವರ್ಣ ಮತ್ತು ಶಿಲ್ಪಾ ಜಿ ಸುವರ್ಣ ಉಪಸ್ಥಿತರಿದ್ದರು.

ಬೆಳಪು : ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ

Thumbnail
Posted On: 14 Apr 2023, 07:25 PM

ಬೆಳಪು : ಇಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಚುನಾವಣಾ ಕಛೇರಿಯನ್ನು ಇಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಚುನಾವಣೆಗೆ ಅಣಿಗೊಳ್ಳುವ ನಿಟ್ಟಿನಲ್ಲಿ ಬೆಳಪು ಭಾಗದಲ್ಲಿ ಗ್ರಾಮೀಣ ಕಾಂಗ್ರೆಸ್ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 18ರಂದು ನಾಮಪತ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಬೆಳಿಗ್ಗೆ 10 ಗಂಟೆಗೆ ಜನಾರ್ಧನ ದೇವಸ್ಥಾನದಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಕಾಪು ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿ ಮಧ್ಯಾಹ್ನ 12ಗಂಟೆಯ ನಂತರ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ದೇವಿ ಪ್ರಸಾದ್ ಶೆಟ್ಟಿ, ದಿವಾಕರ ಶೆಟ್ಟಿ, ಸುನಿಲ್ ಬಂಗೇರ, ಶೇಖರ ಹೆಜ್ಮಾಡಿ, ಜಿತೇಂದ್ರ ಫುಟಾರ್ಡೊ, ಶೇಖಬ್ಬ, ಝಾಹಿರ್, ಗುಲಾಂ, ಹರೀಶ್ ನಾಯಕ್, ಸೆಲ್ವ, ಸತೀಶ್, ಮುಸ್ತಾಕ್, ಮನ್ಸೂರ್, ದೀಪಕ್ ಕುಮಾರ್ ಎರ್ಮಾಳ್ ಮತ್ತಿತರರು ಉಪಸ್ಥಿತರಿದ್ದರು.

ಪಲಿಮಾರು : ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು

Thumbnail
Posted On: 14 Apr 2023, 07:21 PM

ಪಲಿಮಾರು : ಗ್ರಾಮದ ಮಠದ ಬಳಿಯ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಭಾಸ್ಕರ ದೇವಾಡಿಗ (60) ಏಪ್ರಿಲ್ 13 ರಂದು ಕೆಲಸ ಮುಗಿಸಿ ಸಂಜೆ ಪಲಿಮಾರು ಪೇಟೆಗೆ ಹೋಗಿ ವಾಪಾಸ್ಸು ಮನೆಗೆ ನಡೆದುಕೊಂಡು ಬರುವಾಗ ಮನೆಯ ಬಳಿ ಕಾಲು ದಾರಿಯ ಬದಿಯಲ್ಲಿ ಇದ್ದ ಗಿರೀಶ್ ಎಂಬುವರ ಆವರಣ ದಂಡೆ ಇರುವ ಬಾವಿಯ ಕುಂದವನ್ನು ಹಿಡಿದು ಮುಂದೆ ಸಾಗುವ ಸಮಯ ಆಕಸ್ಮಿಕವಾಗಿ ಕೈಜಾರಿ ಆಯ ತಪ್ಪಿ ಬಾವಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ : ಬಿಲ್ಲವ ಸಮಾಜ ಸೇವಾ ಸಂಘ - 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ

Thumbnail
Posted On: 14 Apr 2023, 12:28 PM

ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಏಪ್ರಿಲ್ 16, ಆದಿತ್ಯವಾರ 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಜರಗಲಿದೆ. ಬೆಳಿಗ್ಗೆ ಗಂಟೆ 7ರಿಂದ 9 ರವರೆಗೆ ಗಣಹೋಮ ಹಾಗೂ ಕಲಶಾಭಿಷೇಕ, ಬೆಳಿಗ್ಗೆ 9:30ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 1 ರಿಂದ ಅನ್ನ ಸಂತರ್ಪಣೆ, ಸಂಜೆ ಗಂಟೆ 6:30ಕ್ಕೆ ಮಹಾಮಂಗಳಾರತಿ ಜರಗಲಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಪ್ರಕಟನೆ ತಿಳಿಸಿದೆ.

ಕಾಪು : ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

Thumbnail
Posted On: 14 Apr 2023, 12:20 PM

ಕಾಪು : ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದರ್ ಗುಪ್ತ, ಶಾಸಕರಾದ ಲಾಲಾಜಿ ಮೆಂಡನ್, ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರದ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಮಂಗಳೂರು ವಿಭಾಗದ ಪ್ರಭಾರೀಗಳಾದ ಉದಯ್ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಗಂಗಾಧರ್ ಸುವರ್ಣ, ವೀಣಾ ಶೆಟ್ಟಿ, ಶ್ಯಾಮಲ ಕುಂದರ್, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಶೀಲಾ ಶೆಟ್ಟಿ, ನೀತಾ ಗುರುರಾಜ್, ಶಶಿಪ್ರಭ ಶೆಟ್ಟಿ, ಮಾಲಿನಿ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೃಷಿಗೆ ತೊಡಗುವ ಸಂದೇಶವಿರುವ ಯುಗಾದಿ

Thumbnail
Posted On: 14 Apr 2023, 10:12 AM

ಕೋಲ, ಬಲಿ, ಅಂಕ, ಆಯನಗಳ ಉತ್ಸಾಹ, ನಾಗ - ಬಹ್ಮಲೋಕ, ದೈವಗಳ ಸಾಮ್ರಾಜ್ಯ ಸೃಷ್ಟಿಯಾಗುತ್ತಾ ಪ್ರತಿ ರಾತ್ರಿಯೂ ದಿವ್ಯವಾಗುವ ಶ್ರಾಯ. ಇದಕ್ಕೆ ಪೂರಕವಾಗಿ ಒದಗಿ ಬಂದಿರುತ್ತದೆ ವಸಂತ ಋತುವಿನ ಬಿನ್ನಾಣ. ಈ ನಡುವೆ ಕಾಲ ನಿಯಾಮಕ ಸೂರ್ಯ ಮೇಷ ರಾಶಿ ಪ್ರವೇಶಿಸಿ ಹೊಸ ಕ್ರಮಣ ಆರಂಭಿಸುವ ಪರ್ವ ಕಾಲ ‘ಸೌರಯುಗಾದಿ’ ಸಮನಿಸುತ್ತದೆ. ಗೌಜಿ - ಗದ್ದಲಗಳಿಲ್ಲದ, ಸಂಭ್ರಮದ ವಿಧಿಯಾಚರಣೆಗಳಿಲ್ಲದ ‘ಇಗಾದಿ’ ಸೌರ ಮಾನಿಗಳಿಗೆ ‘ವರ್ಷಾರಂಭ’ ಎಂಬ ಶ್ರದ್ಧೆಯೊಂದಿಗೆ ಆಚರಿಸಲ್ಪಡುತ್ತದೆ. ಆದರೆ ಕೃಷಿಯನ್ನು ಆಧರಿಸಿ ಜೀವನ ರೂಪಿಸಿಕೊಂಡ ಮಣ್ಣಿನ ಮಕ್ಕಳಿಗೆ ಕೃಷಿ ಕಾರ್ಯವನ್ನು ಆರಂಭಿಸುವ ದಿನ ಸೌರ ಯುಗಾದಿ. ಸೌರಪದ್ಧತಿಯಂತೆ ತುಳುವರ ಮೊದಲ ತಿಂಗಳು ‘ಪಗ್ಗು’. ಪಗ್ಗು ತಿಂಗಳ ಹದಿನೆಂಟು ಅಥವಾ ಮುಂದಿನ ದಿನಗಳಲ್ಲಿ ಕೃಷಿಯಲ್ಲಿ ಸಂಪೂರ್ಣ ತೊಡಗಿಕೊಳ್ಳುವ ಕೃಷಿಕನಿಗೆ ಸೌರ ಯುಗಾದಿಯಂದು ಸಾಂಕೇತಿಕವಾಗಿ ತನ್ನ ಚಟುವಟಿಕೆಗಳನ್ನು ಆರಂಭಿಸುವ ನಿಯಮ ರೂಢಗೊಂಡಿತ್ತು. ಜಾತ್ರೆ-ನೇಮಗಳ ಸಹಿತ ಶುಭ ಶೋಭನಾದಿಗಳ ಗುಂಗಿನಿಂದ ಹೊರ ಬಂದು ಕೃಷಿಗೆ ತೊಡಗು ಎಂಬ ಆಶಯವೂ ‘ಸೌರಯುಗಾದಿ’ಯ ಆಚರಣೆಯಲ್ಲಿದೆ. ಹೊಸ ವರ್ಷ ಆರಂಭವಾಗಿರುವುದರಿಂದ ಶುಭ ಪ್ರತೀಕ್ಷೆಯೂ ಸೌರಯುಗಾದಿಯ ಆಶಯವಾಗಿದೆ. ಕೃಷಿ ಮತ್ತು ಮುಂದಿನ ವರ್ಷದ ಜೀವನ ನಿರಾತಂಕವಾಗಿ ನಡೆಯಲಿ ಎಂಬ ಹರಕೆಯೊಂದಿಗೆ ‘ಕಣಿ’ ದರ್ಶನ. ಈ ಮೂಲಕ ನೂತನ ವರ್ಷದ ಮೊದಲ ದಿನ ಮಂಗಲದ್ರವ್ಯಗಳನ್ನು ಹೊಂದಿರುವ ‘ಕಣಿ’ಯನ್ನು ನೋಡುವುದು ಹಲವೆಡೆ ಪ್ರಧಾನ ವಿಧಿಯಾಗಿ ನಡೆಯುತ್ತದೆ. ದೇವಾಲಯಗಳಿಗೆ ಹೋಗುವುದು, ದೈವಗಳಿಗೆ ಸೇವೆ ಸಲ್ಲಿಸುವುದು ಮುಖ್ಯ ಆಚರಣೆಯಾಗುವ ಕ್ರಮವೂ ಚಾಲ್ತಿಯಲ್ಲಿದೆ. ತುಳುನಾಡಿನ ಉದ್ದಕ್ಕೂ ವೈವಿಧ್ಯತೆಯಿಂದ ನಡೆಯುವ ‘ಇಗಾದಿ’ ಅಥವಾ ‘ಯುಗಾದಿ’ ‘ವಿಷು’ ಎಂದೇ ವಿಶೇ?ಷವಾಗಿ ‘ಬಿಸು’ವಾಗಿ ಸ್ವೀಕರಿಸಲ್ಪಟ್ಟು ನಡೆಯತ್ತದೆ. ಆದರೆ ಕೃಷಿಕನ ಲಕ್ಷ್ಯವಿರುವುದು ಮುಂದಿನ ವರ್ಷದ ಬೇಸಾಯದ ಸ್ವರೂಪ ಹೇಗಿರಬೇಕು ಎಂದು ನಿರ್ಧರಿಸುವಲ್ಲಿ. ಅದಕ್ಕಾಗಿ ಆತ ‘ಯುಗಾದಿ ಫಲ’ ಕೇಳುವಲ್ಲಿ ಆಸಕ್ತನಿರುತ್ತಾನೆ. ಈ ವರ್ಷದ ಮಳೆ ಹೇಗೆ ಎಂದು ಪಂಚಾಂಗ ವಿವರಿಸುವ ‘ಯುಗಾದಿ ಫಲ’ವು ಮಳೆಯ ಪ್ರಮಾಣವನ್ನು ತಿಳಿಸುತ್ತದೆ. ಯಾವ ಬಣ್ಣದ ಧಾನ್ಯಗಳ ಬೆಳೆ ಹುಲುಸಾಗಿ ಬೆಳೆದೀತು ಎಂಬ ಭವಿಷ್ಯವನ್ನು ತಿಳಿಯುವ ಕುತೂಹಲವೂ ರೈತನದ್ದಾಗಿರುತ್ತದೆ. ‘ಕಪ್ಪುಗು ಎಡ್ಡೆನಾ, ಬೊಲ್ದುಗು ಎಡ್ಡೆನಾ’ (ಕಪ್ಪು ಬಣ್ಣದ ಧಾನ್ಯ ಅಥವಾ ಅಕ್ಕಿಯಾಗುವ ಭತ್ತದ ತಳಿ ಆದೀತೋ ಬಿಳಿ ಬಣ್ಣದವು ಆದೀತೊ ಅಥವಾ ಯಾವುದು ಒಳ್ಳೆಯದಾದೀತು) ಎಂಬ ನಿರ್ಧಾರಕ್ಕೆ ಬಂದು ‘ಕಜೆಬಿದೆ’ ಅಥವಾ ‘ಮಡಿಬಿದೆ’ಯನ್ನು ‘ಕೈಬಿತ್ತ್’ ಪಾಡುನಿ ಎಂಬ ಯುಗಾದಿಯಂದು ನಡೆಸಲಾಗುವ ಕೃಷಿ ಆರಂಭದ ಪ್ರಕ್ರಿಯೆಯಲ್ಲಿ ಅನುಸರಿಸುವ ಪದ್ಧತಿ ಇತ್ತು ಎಂದು ಹಿರಿಯ ಕೃಷಿಕರು ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಆದರೆ ಕೃಷಿಯೇ ಅವಗಣಿಸಲ್ಪಡುತ್ತಿರುವ ಈ ಕಾಲಘಟ್ಟದಲ್ಲಿ ಅಲ್ಲೊಬ್ಬ ಇಲ್ಲೊಬ್ಬ ಪೂರ್ಣ ಪ್ರಮಾಣದ ಕೃಷಿಕ ದೊರೆಯಬಹುದು, ಆತನಲ್ಲಿ ಈ ಪರಂಪರೆ ಉಳಿದಿರಬಹುದು. ಭೂ ಸುಧಾರಣೆಯ ಪೂರ್ವದಲ್ಲಿ ‘ಬೆನ್ನಿಬುಡ್ಪುನಿ ಮತ್ತು ಬೆನ್ನಿಮಲ್ಪುನಿ’ ಎಂಬ ನಿರ್ಣಯಕ್ಕೆ ಯುಗಾದಿ ನಿಗದಿತ ದಿನವಾಗಿತ್ತು. ಏಕೆಂದರೆ ಕೃಷಿ ಆರಂಭವೇ ಇಲ್ಲಿಂದ ಆಗಿರುವುದರಿಂದ ಭೂ ಒಡೆತನ ಉಳುವವನದ್ದಾಗಿರದಿದ್ದುದ ಕಮಲರಿಂದ ಭೂ ಒಡೆಯನಿಗೆ ಮುಂದಿನ ವರ್ಷದ ಅಥವಾ ಹೊಸ ವರ್ಷದಲ್ಲಿ ಕೃಷಿ ಮುಂದುವರಿಸಲು ‘ಬುಳೆಪು ಕಾಣಿಕೆ’ ಸಲ್ಲಿಸಿ ಅಪ್ಪಣೆ ಕೇಳುವ ಕ್ರಮವೂ ಮರೆತುಹೋಗಿದೆ. ಆದರೆ ಊರ ದೇವಾಲಯಕ್ಕೆ ಈ ಕಾಣಿಕೆ ಸಂದಾಯದ ಸಂಪ್ರದಾಯ ಇಂದಿಗೂ ಕೆಲವೆಡೆ ಇದ್ದಂತಿದೆ. ಮನೆಯ ಹಿರಿಯರನ್ನು ಗೌರವದಿಂದ ಕಾಣುವ ಅಂದರೆ, ಅವರಿಗೆ ನಮಸ್ಕರಿಸುವುದೂ ಸತ್‌ಸಂಪ್ರದಾಯವಾಗಿದೆ. ಮನೆಮಂದಿಗೆ ಹಾಗೂ ಪೂರ್ಣ ಕಾಲಿಕ ಕೆಲಸದವರಿಗೂ ಹೊಸಬಟ್ಟೆ ಕೊಡುವ ಕ್ರಮವು ‘ಇಗಾದಿ’ಯಂದು ನಡೆಯುತ್ತದೆ. ಇಗಾದಿಯ ಅಂಗವಾಗಿ ‘ತಾರಾಯಿ ಕುಟ್ಟುನಿ’ ಒಂದು ಜನಪದ ಆಟವಾಗಿ, ‘ಬಿಸುತ ಕಟ್ಟ’ ಎಂಬ ಕೋಳಿ ಅಂಕವೂ ‘ಬಿಸು’ ಅಂಗವಾಗಿ ನಡೆಯುವುದಿದೆ. ಹಬ್ಬಗಳ ಆಚರಣೆಯ ಗುರಿ ‘ಆನಂದ’ವನ್ನು ಪಡೆಯುವುದು. ಆದರೆ ಯುಗಾದಿ ಸರಳ, ಭಾವನಾತ್ಮಕ ಆಚರಣೆಯಾಗಿ ನೆರವೇರುತ್ತದೆ. ಇಲ್ಲಿ ಹಳೆಯ ಕಹಿಯನ್ನು ಮರೆಯುವ, ‘ಸಿಹಿ’ಯನ್ನು ಬಯಸುವ ನಿರೀಕ್ಷೆ ಇದೆ. ಕಹಿಯಲ್ಲೂ ಸಿಹಿಯನ್ನು ಆನಂದಿಸುವ ಅಧ್ಯಾತ್ಮವಿದೆ. ಒಟ್ಟಿನಲ್ಲಿ ‘ಕರ್ತವ್ಯ’ಕ್ಕೆ ಎಚ್ಚರಿಕೆ ಇದೆ. ‘ತೊಡಗು’ ಎಂಬ ಸಂದೇಶವಿದೆ. ಅದೇನಿದ್ದರೂ ಕೃಷಿ ಆರಂಭಕ್ಕೆ ಇಗಾದಿ (ಯುಗಾದಿ ಅಥವಾ ಬಿಸು) ಎಂಬ ಅನುಸಂಧಾನವಿದ್ದಾಗ ಮಾತ್ರ. ಆದರೆ ಈ ಕಾಲದಲ್ಲೂ ‘ಇಗಾದಿ’ ನೆನಪಿದೆ, ಯುಗಾದಿ ಆಚರಿಸಲ್ಪಡುತ್ತಿದೆ, ‘ಬಿಸು ಕಣಿ’ಯ ದರ್ಶನ ಸಂಭ್ರಮದಿಂದ ನಡೆಯುತ್ತಿದೆ ಎನ್ನುವುದು ಮಾತ್ರ ಸಂತಸದ ಸಂಗತಿ. ವೈವಿಧ್ಯಮಯ ಕಲ್ಪನೆಯೊಂದಿಗೆ ಸೂಕ್ತ ಅನುಸಂಧಾನ ವಿಧಾನದಿಂದ ‘ಸೌರಯುಗಾದಿ’ ನೆರವೇರುವುದು. ಇದರ ಹಿನ್ನೆಲೆ ಕೃಷಿ ಆಧಾರಿತ ಬದುಕಿನ ನೋಟ. * ಹಳೆಯ ಕಹಿಯನ್ನು ಮರೆತು ಮುಂದೆ ಅಡಿ ಇಡುವ ಸಂಭ್ರಮದ ನಡುವೆಯೂ ‘ಬಾಗುವ’ (ನಮಸ್ಕರಿಸುವ) ಸಂದೇಶವಿದೆ. * ‘ಕಣಿ’ ಎಂಬುದು ಹಣ್ಣು, ಕಾಯಿ, ಅಕ್ಕಿ, ಕನ್ನಡಿ, ಚಿನ್ನಾಭರಣ ಇತ್ಯಾದಿ ಮಂಗಳ ದ್ರವ್ಯಗಳನ್ನು ದೇವರ ಮುಂದೆ ಜೋಡಿಸಿಟ್ಟು ಯುಗಾದಿಯಂದು ಬೆಳಗ್ಗೆ ಎದ್ದೊಡನೆ ನೋಡುವ ಮಂಗಲದ್ರವ್ಯ ದರ್ಶನ ಪ್ರಕ್ರಿಯೆ. * ‘ಕಣಿ’ಯಿಂದ ಶುಭಫಲ ನಿರೀಕ್ಷೆ ಇದೆ. * ‘ವಿಷು’ ಎಂಬುದು ‘ಸೌರಯುಗಾದಿ’. ಇದು ತುಳುವರಲ್ಲಿ ‘ಬಿಸು’ ಆಯಿತು. ಈ ಹೆಸರಿನಲ್ಲಿ ವಿವಿಧ ಸಾಮೂಹಿಕ ಆಚರಣೆಗಳು ಇತ್ತೀಚೆಗೆ ನಡೆಯುತ್ತಿವೆ. * ಉತ್ತರದಿಂದ ದಕ್ಷಿಣ ತುಳುನಾಡಿನತ್ತ ಗಮನಿಸಿದರೆ ನಾಲ್ಕೈದು ವಿಧದ ಸೌರ ಯುಗಾದಿಯ ಆಚರಣಾ ವೈವಿಧ್ತವಿದೆ. * "ನಾಲೆರು ಮಾದಾವುನಿ, ಕೈಬಿತ್ತ್ ಪಾಡುನಿ" ಯುಗಾದಿಯ ಪರ್ವದಲ್ಲಿ ನಡೆಯುವ ಕೃಷಿ ಆರಂಭದ ಕಾರ್ಯ. * ಸೌರಯುಗಾದಿಯಲ್ಲಿ ಜಾನಪದ - ಶಿಷ್ಟ ಸಂಸ್ಕೃತಿಗಳ ಸುಗಮ ಸಮಾಗಮದ ಆಚರಣಾ ವಿಧಾನವಿದೆ. * ‘ಕಣಿ’ಯೊಂದಿಗೆ ಅಟ್ಟದ ಮೇಲಿನಲ್ಲಿರುವ ‘ತಾಳೆಗರಿ’ಯ ಗ್ರಂಥಗಳನ್ನು ಸ್ವಚ್ಛಗೊಳಿಸಿ ಇಡುವ ಕ್ರಮವಿದೆ. ಇತ್ತೀಚೆಗೆ ಪಂಚಾಂಗ(ಹೊಸತು)ವನ್ನು ಇಡುವುದು ರೂಢಿಯಾಗಿದೆ. * ಯುಗಾದಿ ಫಲ : ಸೇಮೆಯ ದೇವಾಲಯಗಳಲ್ಲಿ, ಗ್ರಾಮ ದೇವಸ್ಥಾನಗಳಲ್ಲಿ,ಐಗಳ ಮಠದಲ್ಲಿ, ಗೌರವಾನ್ವಿತರ ಮನೆಗಳಲ್ಲಿ "ಯುಗಾದಿಫಲ" ಓದುವ ಕ್ರಮವಿತ್ತು.ಅಲ್ಲಿಗೆ ಹಿರಿಯ ರೈತರು ತೆರಳಿ ತಮಗೆ ಬೇಕಾದ ಮಾಹಿತಿಗಳನ್ನು‌ಪಡೆಯುತ್ತಿದ್ದರು. ‌ ಲೇಖನ : ಕೆ.ಎಲ್.ಕುಂಡಂತಾಯ

ಪಡುಬಿದ್ರಿ : ಗಾಂಜಾ ಸೇವನೆ - ಓರ್ವ ಪೋಲಿಸ್ ವಶಕ್ಕೆ

Thumbnail
Posted On: 14 Apr 2023, 10:03 AM

ಪಡುಬಿದ್ರಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಠಾಣಾಧಿಕಾರಿ ಗಸ್ತಿನಲ್ಲಿದ್ದ ಸಮಯ ನಡ್ಸಾಲು ಗ್ರಾಮದ ಕಂಚಿನಡ್ಕದಲ್ಲಿ ದಾವೂದ್ ಹಕೀಂ (24) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಫೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ದಾವೂದ್ ಹಕೀಂ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.