Updated News From Kaup

ಉದ್ಯಾವರ : ಬಹುಭಾಷಾ ನಿರಂತರ್ ನಾಟಕೋತ್ಸವ ಉದ್ಘಾಟನೆ

Thumbnail
Posted On: 31 Jan 2023, 11:55 AM

ಉಡುಪಿ : ನಾಟಕಗಳಿಂದ ಸಭಿಕರಿಗೆ ಉತ್ತಮ ಮೌಲ್ಯಗಳು ದೊರಕುತ್ತವೆ. ಉತ್ತಮ ನಾಟಕಗಳ ಮೂಲಕ ಜನರಿಗೆ ಉತ್ತಮ ಸಂದೇಶ ನೀಡಲು ಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನಾಟಕ ಒಂದು ಪ್ರಬಲವಾದ ಮಾಧ್ಯಮ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಜೆವಿಯರ್ ದೇವಾಲಯದ ಪ್ರಧಾನ ಧರ್ಮ ಗುರು ವಂ. ಸ್ಟ್ಯಾನಿ ಬಿ ಲೋಬೋ ತಿಳಿಸಿದರು. ಉದ್ಯಾವರ ದೇವಾಲಯದ ವಠಾರದಲ್ಲಿರುವ ಐಸಿವೈಎಂ ಸುವರ್ಣ ಮಹೋತ್ಸವ ಸ್ಮಾರಕ ವೇದಿಕೆಯಲ್ಲಿ ನಿರಂತರ್ ಉದ್ಯಾವರ ಸಂಘಟನೆಯ ಐದನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಏಳು ದಿನಗಳ ಕಾಲ ನಡೆಯುತ್ತಿರುವ ಬಹುಭಾಷಾ ನಿರಂತರ್ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ, 'ಸಹಕಾರ ರತ್ನ' ಪ್ರಶಸ್ತಿ ಪುರಸ್ಕೃತ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡುತ್ತಾ, ಏಳು ದಿನ ನಾಟಕ ಆಯೋಜನೆ ಮಾಡುವುದು ಅಷ್ಟು ಸುಲಭವಲ್ಲ. ಒಂದು ನಾಟಕದಿಂದ ಉತ್ತಮ ಸಂದೇಶ ದೊರಕಲು ಸಂಘಟಕರು ಬಹಳಷ್ಟು ಪ್ರಯತ್ನ ಪಡುತ್ತಾರೆ. ಅಂತಹ ಉತ್ತಮ ಸಾಹಸಕ್ಕೆ ನಿರಂತರ್ ಉದ್ಯಾವರ ಮುಂದಡಿ ಇಟ್ಟಿದೆ ಎಂದರು. ಇದೇ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜಯಕರ್ ಶೆಟ್ಟಿ ಇಂದ್ರಾಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರಂಗ ನಿರ್ದೇಶಕ ನಾಗೇಶ್ ಕುಮಾರ್ ಉದ್ಯಾವರ, ದೇವಾಲಯದ ಪಾಲನ ಮಂಡಳಿ ಉಪಾಧ್ಯಕ್ಷ ಲಾರೆನ್ಸ್ ಡೆಸಾ, ನಿರಂತರ್ ಉದ್ಯಾವರ ಸಂಘಟನೆಯ ಅಧ್ಯಕ್ಷ ರೋಷನ್ ಕ್ರಾಸ್ತಾ ಕಾರ್ಯದರ್ಶಿ ಒಲಿವೀರ ಮಥಾಯಸ್ ಮತ್ತು ಸಂಚಾಲಕ ರೊನಾಲ್ಡ್ ಡಿಸೋಜ ಉಪಸ್ಥಿತರಿದ್ದರು. ಮೈಕಲ್ ಡಿಸೋಜ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಳಿಕ ಭೂಮಿಗೀತಾ ತಂಡದಿಂದ 'ಹೇ ರಾಮ್' ಎನ್ನುವ ತುಳು ನಾಟಕ ಪ್ರದರ್ಶನಗೊಂಡಿತು. 600ಕ್ಕೂ ಅಧಿಕ ಸಭಿಕರು ಪ್ರಥಮ ದಿನದ ನಾಟಕೋತ್ಸವ ವೀಕ್ಷಿಸಿದರು.

ಕೆಮುಂಡೇಲು : ಹುತಾತ್ಮರ ದಿನಾಚರಣೆ

Thumbnail
Posted On: 31 Jan 2023, 11:49 AM

ಪಡುಬಿದ್ರಿ : ಸ್ವಾತಂತ್ರ್ಯ ಪೂರ್ವದಲ್ಲಿ ಮಾತ್ರವಲ್ಲದೇ ಸ್ವಾತಂತ್ರ್ಯ ನಂತರೂ ಹಲವಾರು ಹೋರಾಟಗಾರರು, ಯೋಧರು ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಅವರೆಲ್ಲರ ಬಲಿದಾನವನ್ನು ನಾವು ಇಂದು ಸ್ಮರಿಸಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವ್ಯಕ್ತಿತ್ವ , ಆಲೋಚನೆಗಳು ಮತ್ತು ಆದರ್ಶಗಳು ನವಭಾರತ ನಿರ್ಮಾಣಕ್ಕೆ ಸ್ಪೂರ್ತಿ ನೀಡುತ್ತಲೇ ಇರುತ್ತವೆ ಎಂದು ಉಪನ್ಯಾಸಕ ಹರೀಶ್ ಕೋಟ್ಯಾನ್ ನುಡಿದರು. ನೆಹರೂ ಯುವ ಕೇಂದ್ರ, ಉಡುಪಿ, ಪಾಂಡುರಂಗ ಹವ್ಯಾಸಿ ಕಲಾ ಸಂಘ (ರಿ) ಕೆಮುಂಡೇಲು ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಾಂಡುರಂಗ ಹವ್ಯಾಸಿ ಕಲಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಬಾಲಕೃಷ್ಣ ಆಚಾರ್ ಕೊಲ್ಯ , ಉದ್ಯಮಿ ಚಂದ್ರಹಾಸ್ ಭಂಡಾರಿ, ಪಾಂಡುರಂಗ ಭಜನಾ ಮಂಡಳಿ ಕಾರ್ಯದರ್ಶಿ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಬಾಪೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಹುತಾತ್ಮರಿಗಾಗಿ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು. ನಿಶಾಂತ್ ಕುಲಾಲ್ ಸ್ವಾಗತಿಸಿ, ಸರ್ವಜ್ಞ ರಾವ್ ವಂದಿಸಿದರು, ರಾಘವೇಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ದಶಮಾನೋತ್ಸವ - ಕ್ರೀಡೋತ್ಸವ

Thumbnail
Posted On: 31 Jan 2023, 10:40 AM

ಶಿರ್ವ : ಸಮಾಜ ಬೆಳೆಯಬೇಕಿದ್ದರೆ ನಾವು ಸಮಾಜಕ್ಕಾಗಿ ತ್ಯಾಗ ಮಾಡಬೇಕು ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ಯುವ ಸಂಗಮದ ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ ಅಭಿಪ್ರಾಯ ಪಟ್ಟರು. ಅವರು ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗ ಇದರ ದಶಮಾನೋತ್ಸವದ ವತಿಯಿಂದ ಹಮ್ಮಿಕೊಂಡ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು. ಗೌರವಾಧ್ಯಕ್ಷ ಸುರೇಶ ಆಚಾರ್ಯ, ದಶಮಾನೋತ್ಸವದ ಸಂಚಾಲಕ ಪ್ರಶಾಂತ ಆಚಾರ್ಯ, ಕ್ರೀಡಾಕೂಟದ ಪ್ರಾಯೋಜಕರಾಗಿರುವ ಸೀತಾರಾಮ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿದರು. ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಟಪಾಡಿ : ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ನಟಿ ಮೇಘ ಶೆಟ್ಟಿ ಭೇಟಿ

Thumbnail
Posted On: 30 Jan 2023, 01:24 PM

ಕಟಪಾಡಿ : ಇಲ್ಲಿನ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಭಾನುವಾರ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು. ಮೇಘ ಶೆಟ್ಟಿಯವರು ಮಾಧ್ಯಮದವರೊಂದಿಗೆ ಮಾತನಾಡಿ, ಕಟಪಾಡಿ ಪೇಟೆಬೆಟ್ಟು ದೈವಸ್ಥಾನದಲ್ಲಿ ಕಾರ್ನಿಕ ಮೆರೆದ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಯ ಕಾರ್ಣಿಕದ ಬಗ್ಗೆ ಕೇಳಿ ತಿಳಿದಿದ್ದೇನೆ. ಆದ್ದರಿಂದ ಇಲ್ಲಿಗೆ ಭೇಟಿ ನೀಡಿ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು. ಈ ಸಂದರ್ಭ ಭಗವಾನ್ ಶ್ರೀ ಬಬ್ಬು ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಹರಿಶ್ಚಂದ್ರ ಪಿಲಾರ್, ತುಕಾರಾಂ ಉರ್ವ, ಗುರಿಕಾರರು ಮತ್ತು ಹತ್ತು ಸಮಸ್ತರು ಉಪಸ್ಥಿತಿ ಇದ್ದರು.

ಕಾಪು : ಜೇಸಿಐ ರಜತ ವರ್ಷಾಚರಣೆಯ ಸಮಾರೋಪ ; ಸನ್ಮಾನ ; ಸಾಂಸ್ಕೃತಿಕ ಕಾರ್ಯಕ್ರಮ

Thumbnail
Posted On: 29 Jan 2023, 10:06 PM

ಕಾಪು : ಜಗತ್ತಿನ ಎಲ್ಲೆಡೆ ಕಾಡುತ್ತಿರುವ ಅಶಾಂತಿಯ ವಾತಾವರಣವನ್ನು ತೊಲಗಿಸುವಲ್ಲಿ ಜೇಸಿಐನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಮಾರ್ಗದರ್ಶನ ಅತೀ ಅಗತ್ಯವಾಗಿದ್ದು, ಜಾಗತಿಕ ಶಾಂತಿ ಮತ್ತು ಜಗತ್ತಿನ ಕಲ್ಯಾಣಕ್ಕಾಗಿ ಜೇಸಿಐ ಸಂಸ್ಥೆ ವಿಶೇಷ ಕೊಡುಗೆ ನೀಡುವಂತಾಗಲಿ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು. ಅವರು ಜನವರಿ 28 ರಂದು ಕಾಪು ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಪು ಜೇಸಿಐನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಮಾತನಾಡಿ, ಕಾಪು ಜೇಸಿಐ ಸಮಾಜಕ್ಕೆ ಉತ್ತಮ ನಾಯಕರನ್ನು, ತರಬೇತಿದಾರರನ್ನು, ಮಾರ್ಗದರ್ಶಕರನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿದೆ. ಇಪ್ಪತ್ತೈದು ವರ್ಷಗಳನ್ನು ತಪಸ್ಸಿನಂತೆ ಪೂರೈಸಿರುವ ಸಂಸ್ಥೆಯ ಆಶಯ ಮತ್ತು ಆಶೋತ್ತರಗಳನ್ನು ಈಡೇರಿಕೆಗೆ ಎಲ್ಲರ ಸಹಕಾರದ ಅಗತ್ಯತೆಯಿದೆ ಎಂದರು. ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಉಡುಪಿ ಜಿಲ್ಲೆ ಮತ್ತು ಕಾಪು ಜೇಸಿಐ ಸಂಸ್ಥೆಯು ಜತೆ ಜತೆಗೆ ರಜತ ವರ್ಷವನ್ನು ಪೂರೈಸುತ್ತಿದ್ದು ಎಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಜೇಸಿಐನ ಮೂಲಕವಾಗಿ ವ್ಯಕ್ತಿತ್ವದ ನಿರ್ಮಾಣವಾಗುತ್ತಿದ್ದು ಈ ಮಾದರಿಯ ತರಬೇತಿ, ಮಾರ್ಗದರ್ಶನಗಳು ಸಮಾಜದ ಯುವಜನರಿಗೆ ನಿರಂತರವಾಗಿ ದೊರಕುವಂತಾಗಲಿ ಎಂದು ಶುಭ ಹಾರೈಸಿದರು. ರಜತ ವರ್ಷಾಚರಣೆ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಶುಭಾಶಂಸನೆಗೈದರು. ಜೇಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಕೆ.ಎಂ.ಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜೇಸಿಐ ಆಡಳಿತ ನಿರ್ವಹಣಾ ಸಮಿತಿ ಸದಸ್ಯ ವೈ. ಸುಕುಮಾರ್, ಉದ್ಯಮಿ ಪ್ರಭಾಕರ ಪೂಜಾರಿ, ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಜೇಸಿಐ ಕಟಪಾಡಿ ಅಧ್ಯಕ್ಷೆ ಜ್ಯೋತಿ ಶಂಕರ್ ಸಾಲ್ಯಾನ್, ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ನಟಿ ನವ್ಯಾ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಕಾಪು ಜೇಸಿಐನ ವಿವಿಧ ಕಾರ್ಯಕ್ರಮಗಳಿಗೆ ಸಹಕರಿಸಿದ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಹಾಗೂ ಕಾಪು ಜೇಸಿಐನ ನಿಕಟ ಪೂರ್ವಾಧ್ಯಕ್ಷ ಸುಜಿತ್ ಶೆಟ್ಟಿ, ವೈ. ಜಯಕರ್ ಎರ್ಮಾಳು ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಸಂಸ್ಥೆಯನ್ನು ಮುನ್ನಡೆಸಿದ ಪೂರ್ವಾಧ್ಯಕ್ಷರುಗಳನ್ನು ಗೌರವಿಸಲಾಯಿತು. ಸಮಿತಿ ಕೋಶಾಧಿಕಾರಿ ಸೌಮ್ಯ ರಾಕೇಶ್, ಕಾರ್ಯಕ್ರಮ ನಿರ್ದೇಶಕ ರಮೇಶ್ ನಾಯ್‌ಕ, ಜೇಸಿಐ ಕಾರ್ಯದರ್ಶಿ ಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು. ರಜತ ವರ್ಷಾಚರಣೆ ಸಮಿತಿ ಕಾರ್ಯದರ್ಶಿ ಎಂ. ನೀಲಾನಂದ ನಾಯ್ಕ್ ಸ್ವಾಗತಿಸಿದರು. ಕಾಪು ಜೇಸಿಐ ಅಧ್ಯಕ್ಷೆ ದೀಕ್ಷಾ ಆರ್. ಕೋಟ್ಯಾನ್ ಸಮ್ಮಾನಿತರನ್ನು ಪರಿಚಯಿಸಿದರು. ಪೂರ್ವಾಧ್ಯಕ್ಷ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು. ನಿಕಟ ಪೂರ್ವಾಧ್ಯಕ್ಷ ಸುಜಿತ್ ಶೆಟ್ಟಿ ವಂದಿಸಿದರು.

ಕಾಪು : ಬೃಹತ್ ಉದ್ಯೋಗ ಮೇಳ ; ಕಂಪನಿಗಳು ಉದ್ಯೋಗದ ದಾರಿ ಕಲ್ಪಿಸಿ ಕೊಡಿ - ಕೂರ್ಮಾ ರಾವ್ ಎಂ

Thumbnail
Posted On: 29 Jan 2023, 04:00 PM

ಕಾಪು : ಕೌಶಲ ಕರ್ನಾಟಕ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ಬೆಂಗಳೂರು, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಇದರ ಸಹಯೋಗದೊಂದಿಗೆ ಕಾಪು ಉದ್ಯೋಗ ಮೇಳವನ್ನು ಭಾನುವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕರ್ನಾಟಕದ ಸುಮಾರು 40 ಕಂಪನಿ ಗಳು ಈ ಮೇಳದಲ್ಲಿ ಭಾಗವಹಿಸಿವೆ. ಉದ್ಯೋಗ ನೀಡುವ ಕಂಪನಿಗಳು ದಾರಿ ಕಲ್ಪಿಸಿ ಕೊಡಿ, ಉತ್ತಮ ರೀತಿಯಲ್ಲಿ ಆಯ್ಕೆ ಮಾಡಿ ಅವರ ಜೀವನಕ್ಕೆ ಅವಕಾಶ ಮಾಡಿ ಕೊಡಿ, ಒಂದುಹಸಿದ ಹೊಟ್ಟೆಗೆ ಅನ್ನ ನೀಡಿದಲ್ಲಿ ಅದು ಕ್ಷಣಿಕ ಹಸಿವನ್ನು ನೀಗಿಸಬಹುದು. ಆದರೆ ಒಂದು ಉದ್ಯೋಗ ನೀಡಿದಲ್ಲಿ ಅದು ಜೀವನ ಪೂರ್ತಿ ಹಸಿವು ನೀಗಿಸಲು ಸಹಕಾರಿಯಾದೀತು. ಇಂದು ಇಲ್ಲಿಗೆ ಬಂದ ಎಲ್ಲರೂ ಉದ್ಯೋಗ ಪಡೆಯಲು ಅಸಾಧ್ಯ ಆದರೆ ಯಾರೂ ನಿರಾಶೆಪಡದಿರಿ. ಇನ್ನೂ ಅವಕಾಶ ದೊರೆಯುತ್ತವೆ ಎಂದರು. ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿ ದಿನನಿತ್ಯ ಹಲವಾರು ಉದ್ಯೋಗಾಕಾಂಕ್ಷಿಗಳ ಅರ್ಜಿಗಳು ಬರುತ್ತಿದ್ದ ಕಾರಣ ಸಚಿವರಾದ ಅಶ್ವಥ್ ನಾರಾಯಣ್ ಅಭಿಪ್ರಾಯದಂತೆ ಈ ಕಾಪು ಉದ್ಯೋಗ ಮೇಳ ಆಯೋಜಿಸಿದೆ. ಇದರ ಸದುಪಯೋಗವನ್ನು ಉದ್ಯೋಗಾಕಾಂಕ್ಷಿ ಗಳು ಪಡೆಯಲು ಕರೆಕೊಟ್ಟರು. ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಮಿಕ್ಕಿ ಉದ್ಯೋಗಾಕಾಂಕ್ಷಿಗಳು ಹಾಜರಿದ್ದರು. ಈ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ನಿರ್ದೇಶಕ ಗಿರಿಧರ್ ರಾವ್ ಇವರನ್ನು ಸನ್ಮಾನಿಸಲಾಯಿತು. ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಕರ್ಣಿ, ಕಾಪು ಪುರಸಭಾ ಅಧಿಕಾರಿ ವೆಂಕಟೇಶ್ ನಾವಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಹರ್ಷವರ್ಧನ್, ಕಿಶೋರ್ ಆಳ್ವ ಅಶೋಕ್ ಶೆಟ್ಟಿ, ಮಟ್ಟಾರು ರತ್ನಾಕರ್ ಹೆಗ್ಡೆ, ಪ್ರಾಂಶುಪಾಲ ಸ್ಟೀವನ್ ಕ್ವಾರ್ಡಸ್, ಗಿರಿಧರ್ ರಾವ್‌ ಮುಂತಾದವರು ಉಪಸ್ಥಿತರಿದ್ದರು.

ಯಕ್ಷ ಪ್ರತಿಭೆ ಪಡುಬಿದ್ರಿಯ ವೈಷ್ಣವಿ ರಾವ್

Thumbnail
Posted On: 29 Jan 2023, 01:23 PM

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯ ಪಿವಿ ಜಗನ್ನಾಥ್ ರಾವ್ ಹಾಗೂ ಸುಜ್ಯೋತಿ ದಂಪತಿಯರ ಮಗಳಾದ ವೈಷ್ಣವಿ ರಾವ್ ಇವರ ಜನನ. ಬಿಕಾಂ ವಿದ್ಯಾಭ್ಯಾಸವನ್ನು ಪೂರೈಸಿ ಪ್ರಸ್ತುತ U18 ನಲ್ಲಿ M.COM ವ್ಯಾಸಂಗ ಮಾಡುತ್ತಿದ್ದಾರೆ. ಇವರ ಊರಿನಲ್ಲಿ ತುಂಬಾ ಯಕ್ಷಗಾನ ಪ್ರದರ್ಶನ ಆಗುತಿತ್ತು ಮತ್ತು ತಮ್ಮ ಮೂರನೇ ವಯಸ್ಸಿಗೆ ಭರತನಾಟ್ಯ ಕಲಿಯಲು ಆರಂಭಿಸಿದ್ದ ಇವರಿಗೆ ಯಕ್ಷಗಾನ ಕಲಿಯಬೇಕು ಅನ್ನುವ ಆಸೆ ಬಂತು ಆವಾಗ ಯಕ್ಷಗಾನಕ್ಕೆ ಸೇರಿದರು, ಹೀಗೆ ಇವರಿಗೆ ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆಯಾಯಿತು ಎಂದು ವೈಷ್ಣವಿ ಅವರು ಹೇಳುತ್ತಾರೆ. ಪೂರ್ಣಿಮಾ ಯತೀಶ್ ರೈ ಅವರ "ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಮಂಡಳಿಯಲ್ಲಿ”, ಅವರ ಮಾರ್ಗಶ್ರನದಲ್ಲಿ ಆರು ವರ್ಷಗಳಿಂದ ಮುಂಬೈ,ಚೆನ್ನೈ ಸೇರಿದಂತೆ ಬಹಳಷ್ಟು ಕಡೆ ಪ್ರದರ್ಶನ ಕೊಟ್ಟಿದ್ದಾರೆ. ಸಾಯಿಸುಮ ಮಿಥುನ್ ನಾವಡ ಇವರ "ಯಕ್ಷವಾಸ್ಯಮ್ ಕಾರಿಂಜ" ಇದರಲ್ಲೂ ಬಹಳ ಕಾರ್ಯಕ್ರಮಗಳಿಗೆ ಹೋಗಿದ್ದಾರೆ. ಇನ್ನೂ ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳನ್ನು ವೈಷ್ಣವಿ ಅವರು ನೀಡಿರುತ್ತಾರೆ. ಯಕ್ಷಗಾನದ ಗುರುಗಳು : ಎಂಟನೇ ವಯಸ್ಸಿಗೆ ಊರಲ್ಲಿ ಗುರುಗಳಾದ ಭಾಸ್ಕರ ಪಡುಬಿದ್ರಿ ಹಾಗೂ ರವೀಂದ್ರ ಪಡುಬಿದ್ರಿ ಇವರಲ್ಲಿ ಯಕ್ಷಗಾನ ಅಭ್ಯಾಸ ಆರಂಭಿಸಿ, ನಿತಿನ್ ಆಚಾರ್ಯ ಪಡುಬಿದ್ರಿ ಇವರಲ್ಲಿ ಅಭ್ಯಾಸ ಮಾಡಿ ನಂತರ ಶ್ರೀಮತಿ ಪೂರ್ಣಿಮಾ ಯತೀಶ್ ರೈ ಇವರಲ್ಲಿ ಅಭ್ಯಾಸ ಮುಂದುವರೆಸಿ ಅವರ ಮಾರ್ಗದರ್ಶನದಲ್ಲಿ ಬಹಳಷ್ಟು ಪ್ರದರ್ಶನಗಳನ್ನು ಅವರ ತಂಡದಲ್ಲಿ ನೀಡಿದ್ದಾರೆ. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ ಎಂದು ಕೇಳಿದಾಗ ಹೀಗೆ ಹೇಳುತ್ತಾರೆ : ಗುರುಗಳಿಂದ ಪ್ರಸಂಗದ ಸಂಪೂರ್ಣ ಮಾಹಿತಿ ಪಡೆದುಕೊಂಡು ಆಮೇಲೆ ಇವರ ಪಾತ್ರದ ನಡೆಯನ್ನು ನೋಡಿ ಕೇಳಿ ತಿಳಿದುಕೊಳುತ್ತೇನೆ. ಕೆಲವೊಮ್ಮೆ ಪುಸ್ತಕಗಳು, ಕೆಲವು ವಿಡಿಯೋಗಳಿಂದ ಕೂಡ ಸಹಾಯ ಪಡೆಯುತ್ತೇನೆ. ಶ್ರೀ ದೇವಿ ಮಹಾತ್ಮ ಬಹಳ ಇಷ್ಟದ ಪ್ರಸಂಗ, ದಕ್ಷಾಧ್ವರ, ಸುಧನ್ವಾರ್ಜುನ ಕಾಳಗ ಇವರ ನೆಚ್ಚಿನ ಪ್ರಸಂಗಗಳು. ಶ್ರೀ ದೇವಿ, ಸುಧನ್ವಾರ್ಜುನದ ಅರ್ಜುನ, ದಾಕ್ಷಾಯಿಣಿ ನೆಚ್ಚಿನ ವೇಷಗಳು. ಯಕ್ಷಗಾನದ ಇಂದಿನ ಸ್ಥಿತಿ ಗತಿ ಬಗ್ಗೆ ಕೇಳಿದಾಗ ಹೀಗೆ ಹೇಳುತ್ತಾರೆ : ಇತ್ತೀಚೆಗೆ ಯಕ್ಷಗಾನಕ್ಕೆ ಬಹಳಷ್ಟು ಪ್ರಸಿದ್ಧಿ ಸಿಗ್ತಿದೆ. ಅಭಿಪ್ರಾಯ ಕೊಡುವಷ್ಟು ಬೆಳೆದಿಲ್ಲ ನಾನು. ಆದರೆ ಆದಷ್ಟು ಕಲೆಯನ್ನು ಅದರ ತನದಲ್ಲೇ ಕಲಿತು ಮುಂದುವರೆಸಬೇಕು. ಹೊಸತನ ಕೊಡಲು ಹೋಗಿ ಕೆಡಿಸಬಾರದು. ಹಿರಿಯರ ಮಾರ್ಗದರ್ಶನದ ಜೊತೆಗೆ ಮುಂದುವರೆಸಬೇಕು. ಆದಷ್ಟು ಮಕ್ಕಳಿಗೆ ಪೌರಾಣಿಕ ಪ್ರಸಂಗಗಳ ಮಾಹಿತಿ ಕೊಡಬೇಕು. ಇವತ್ತಿನ ಯಕ್ಷಗಾನ ಪ್ರೇಕ್ಷಕರ ಬಗ್ಗೆ ಅಭಿಪ್ರಾಯ ಕೇಳಿದಾಗ ಹೀಗೆ ಹೇಳುತ್ತಾರೆ : ಪ್ರೇಕ್ಷಕರಿಂದ ಕಲಾವಿದನಿಗೆ ತುಂಬಾ ಉತ್ತೇಜನ ಸಿಗುತ್ತದೆ, ಒಳ್ಳೆಯ ಪ್ರೋತ್ಸಾಹ ಸಿಗುತ್ತಾ ಇದೆ. ಖುಷಿ ಆಗ್ತದೆ. ಯಕ್ಷರಂಗದಲ್ಲಿ ನಿಮ್ಮ ಮುಂದಿನ ಯೋಜನೆ ಬಗ್ಗೆ : ಇನ್ನಷ್ಟು ಅಭ್ಯಾಸ ಮಾಡಿ ಒಳ್ಳೆಯ ಕಲಾವಿದೆ ಆಗಬೇಕು. ಪ್ರಶಸ್ತಿ/ಸನ್ಮಾನ : 'ಕಲಾಭೂಷಣ' ಪ್ರಶಸ್ತಿ -2016, ಸೇರಾಕೆರ್ ಸ್ಟಾರ್ ಆಫ್ ದಿ ಇಯರ್ -2015 ಕರಾವಳಿ ಯಕ್ಷ ಮಿತ್ರರು ಬಹುಮುಖ ಪ್ರತಿಭೆಗಳ ಸಂಗಮ ಪ್ರಶಸ್ತಿ -2019, ನೃತ್ಯಸಿಂಚನ -2018, ಗಿರಿಶ್ರೀ ಭಾಸ್ಕರ ಪ್ರಶಸ್ತಿ -2018, ರೋಟರಿ ಕ್ಲಬ್ ವತಿಯಿಂದ ಯುವ ಸಾಧಕ ಪ್ರಶಸ್ತಿ-2022, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯುವ ಸಾಧಕ ಪ್ರಶಸ್ತಿ -2020 ಹೀಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ರಾಜ್ಯಮಟ್ಟದ ಯುವಜನೋತ್ಸವದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಸಿಕ್ಕಿದೆ. ಪ್ರಸ್ತುತ ನಾಟ್ಯಮಯೂರಿ ಲಕ್ಷ್ಮೀ ಗುರುರಾಜ್ ಇವರಲ್ಲಿ ವಿದ್ವತ್ ಅನ್ನು ಮುಂದುವರಿಸುತ್ತಿದ್ದಾರೆ. ಭರತನಾಟ್ಯ, ಡ್ಯಾನ್ಸ್, ಸ್ವಿಮ್ಮಿಂಗ್, ಸಮಯ ಸಿಕ್ಕಾಗೆಲ್ಲ ಪುಸ್ತಕ ಓದುವುದು, ಕನ್ನಡ ಕಥೆಗಳನ್ನು ಕೇಳುವುದು ಇವರ ಹವ್ಯಾಸಗಳು. ಇವರಿಗೆ ಇವರು ನಂಬಿರುವ ಕಲಾಮಾತೆ ಹಾಗೂ ಕಟೀಲು ಶ್ರೀ ಭ್ರಮರಾಂಬೆ ಕಲೆಯಲ್ಲಿ ಇನ್ನಷ್ಟು ಸಾಧಿಸುವ ಶಕ್ತಿಯನ್ನು ಕರುಣಿಸಲಿ, ಅವರಿಗೆ ಶುಭವನ್ನು ಕರುಣಿಸಲಿ ಎಂದು ಬೇಡುತ್ತಿದ್ದೇವೆ ಹಾಗೂ ಕಲಾಮಾತೆಯು ಸಕಲ ಭಾಗ್ಯಗಳನ್ನೂ ಅನುಗ್ರಹಿಸಲಿ ಎಂದು ಕಲಾಭಿಮಾನಿಗಳೆಲ್ಲರ ಪರವಾಗಿ ಹಾರೈಕೆಗಳು. ಶ್ರವಣ್ ಕಾರಂತ್ ಕೆ ಸುಪ್ರಭಾತ ಶಕ್ತಿನಗರ ಮಂಗಳೂರು. +91 8971275651

ನಿರಂತರ್ ಉದ್ಯಾವರ : ಜ.30 - ಫೆ. 5 ರವರೆಗೆ ಏಳು ದಿನದ ಬಹುಭಾಷಾ ನಾಟಕೋತ್ಸವ

Thumbnail
Posted On: 28 Jan 2023, 02:25 PM

ಉಡುಪಿ : ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿರುವ ನಿರಂತರ್ ಉದ್ಯಾವರ ಐದನೇ ವರ್ಷದ ಸಂಭ್ರಮಾಚರಣೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ 30 ರಿಂದ ಫೆಬ್ರವರಿ 5 ರವರೆಗೆ ಸಂಪೂರ್ಣ ಉಚಿತ ಪ್ರವೇಶದ ನಿರಂತರ ಏಳು ದಿನದ ಬಹುಭಾಷಾ ನಾಟಕೋತ್ಸವ ಉದ್ಯಾವರದಲ್ಲಿ ಹಮ್ಮಿಕೊಳ್ಳಲಾಗಿದೆ. 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ಸಂಸ್ಥೆ ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ನಾಟಕ ಮತ್ತು ಕವಿಗೋಷ್ಠಿ, ಚಲನಚಿತ್ರ ಪ್ರದರ್ಶನವನ್ನು ಹಮ್ಮಿಕೊಂಡಿತ್ತು. ಉದ್ಯಾವರ ಸಂತ ಫ್ರಾನ್ಸಿಸ್ ಜೀವಿಯರ್ ದೇವಾಲಯದ ವಠಾರದಲ್ಲಿರುವ ಐಸಿಐಎಂ ಉದ್ಯಾವರ ಸುವರ್ಣ ಮಹೋತ್ಸವ ಸ್ಮಾರಕ ವೇದಿಕೆಯಲ್ಲಿ ನಾಟಕೋತ್ಸವ ಪ್ರದರ್ಶನವಾಗಲಿದೆ. ಐದನೇ ವರ್ಷದ ಪ್ರಯುಕ್ತ ಜನವರಿ 30ರಂದು ಸಂತೋಷ್ ನಾಯಕ್ ಪಟ್ಲ ಇವರ ನಿರ್ದೇಶನದ ಮತ್ತು ನಾಗೇಶ್ ಕುಮಾರ್ ಉದ್ಯಾವರ ಇವರು ತುಳು ಅನುವಾದ ಮಾಡಿದ ಭೂಮಿಗೀತ ಸಾಂಸ್ಕೃತಿಕ ವೇದಿಕೆ ಪಟ್ಲ ಇವರಿಂದ "ಹೇ ರಾಮ್" ತುಳು ನಾಟಕ, ಜನವರಿ 31ರಂದು ವಾಲ್ಸ್ಟನ್ ಡೇಸ ರಚನೆಯ, ಗಣೇಶ್ ರಾವ್ ಎಲ್ಲೂರು ನಿರ್ದೇಶನದ ಕಲಾರಾಧನ ಸಂಸ್ಥೆ ಶಂಕರ್ ಪುರ ಇವರಿಂದ "ಕಾಮಿಲ್ ಕಲ್ವಾರ್" ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ ಒಂದರಂದು ಲಿಟಲ್ ಅರ್ಥ ಸ್ಕೂಲ್ ಆಫ್ ಥಿಯೇಟರ್ ಕೇರಳ ಇವರಿಂದ ಮಲಯಾಳ ನಾಟಕ "ಬೊಲಿವಿಯನ್ ಸ್ಟಾರ್ಸ್", ಫೆಬ್ರವರಿ ಎರಡರಂದು ಅಸ್ತಿತ್ವ ಹಾಗೂ ರಂಗ ಅಧ್ಯಯನ ಕೇಂದ್ರ ಸಂತ ಅಲೋಸಿಸ್ ಕಾಲೇಜ್ ಮಂಗಳೂರು ಇವರಿಂದ ಕನ್ನಡ ನಾಟಕ "ಜನಶತ್ರು" ಪ್ರದರ್ಶನವಾಗಲಿದೆ. ಫೆಬ್ರವರಿ ಮೂರರಂದು ರಂಗ ಅಧ್ಯಯನ ಕೇಂದ್ರ ಸಂತ ಅಲೋವಿಷಸ್ ಕಾಲೇಜು ಮಂಗಳೂರು ಇವರಿಂದ ಇಂಗ್ಲೀಷ್ ನಾಟಕ "Can't Pay, Won't Pay", ಫೆಬ್ರವರಿ ನಾಲ್ಕರಂದು ಅಸ್ತಿತ್ವ ಮಂಗಳೂರು ಇವರಿಂದ ಕೊಂಕಣಿ ನಾಟಕ "ಅದಾಂವ್ ಅನಿ ಏವೆನ್ ಉಘಡ್ಲೆ ದೊಳೆ, ರಚ್ನಾರ ಅತಾಂ ತುಂಚ್ ಪಳೆ" ಮತ್ತು ಅಸ್ತಿತ್ವ ಮಂಗಳೂರು ಇವರಿಂದ ಕೊಂಕಣಿ ನಾಟಕ "ಎಮ್ಮಾವ್ಸ್" ಪ್ರದರ್ಶನವಾಗಲಿದೆ. ಜನವರಿ 30 ರಂದು ಸಂಜೆ 6 ಗಂಟೆಗೆ ಉದ್ಯಾವರ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವಂ. ಸ್ಟ್ಯಾನಿ ಬಿ ಲೋಬೋ ಏಳು ದಿನದ ಬಹುಭಾಷ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕರು, ಮಾಜಿ ಸಚಿವರು, ವಿವಿಧ ಜನಪ್ರತಿನಿಧಿಗಳು, ಕಲಾವಿದರು, ಸಮಾಜದ ವಿವಿಧ ಸಂಘಟನೆಗಳ ಮುಖಂಡರು ವಿವಿಧ ದಿನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನಿರಂತರ್ ಸಂಘಟನೆಯ ಪ್ರಕಟಣೆ ತಿಳಿಸಿದೆ.

ಜೆಸಿಐ ಕಟಪಾಡಿ ವತಿಯಿಂದ ಟ್ರಾಫಿಕ್ ಪೋಲಿಸರಿಗೆ ಸನ್ಮಾನ

Thumbnail
Posted On: 27 Jan 2023, 05:59 PM

ಕಟಪಾಡಿ : ಜೆಸಿಐ ಇಂಡಿಯಾ ಇದರ ವಲಯ 15ರ ಕಾರ್ಯಕ್ರಮ, ಕಟಪಾಡಿ ಘಟಕದ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಂಗವಾಗಿ ಗುರುವಾರ ಕಟಪಾಡಿ ಹೊರ ಠಾಣೆಯಲ್ಲಿ ಟ್ರಾಫಿಕ್ ಪೊಲೀಸರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಜೆಸಿಐ ಪೂರ್ವ ಅಧ್ಯಕ್ಷರಾದ ಡಾ.ಉದಯಕುಮಾರ್ ಶೆಟ್ಟಿ ಮತ್ತು ಪೂರ್ವ ವಲಯಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಭಾಗವಹಿಸಿದ್ದರು. ಜೆಸಿಐ ವಲಯ XVರ ಅಧ್ಯಕ್ಷರಾದ ಜ್ಯೋತಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು. ವಲಯಧಿಕಾರಿ ಪ್ರವೀಣ್ ಪೂಜಾರಿ, ಪೂರ್ವಧ್ಯಾಕ್ಷರಾದ ಮಹೇಶ್ ಅಂಚನ್, ಜಯಶ್ರೀ ಕೋಟ್ಯಾನ್, ಸುರೇಶ್ ಪೂಜಾರಿ, ಕಾರ್ಯದರ್ಶಿ ವಿಜೇತ್ ಪೂಜಾರಿ ಉಪಸ್ಥಿತರಿದ್ದರು. ಪ್ರವೀಣ್ ಜತ್ತನ್ ಕಾರ್ಯಕ್ರಮ ನಿರ್ವಹಿಸಿದರು.

ಜನವರಿ 28 : ಕಾಪು ಜೇಸಿಐ ರಜತ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮ

Thumbnail
Posted On: 27 Jan 2023, 05:55 PM

ಕಾಪು : ಜೇಸಿಐ ಕಾಪುವಿನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವು ಜ. 28ರಂದು ಸಂಜೆ 6 ಗಂಟೆಗೆ ಕಾಪು ಪೇಟೆಯಲ್ಲಿ ನಡೆಯಲಿದೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಜತ ವರ್ಷಾಚರಣೆ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಜೇಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಗಣ್ಯರಾದ ಯಶ್‌ಪಾಲ್ ಸುವರ್ಣ, ಕಿಶೋರ್ ಆಳ್ವ, ವಾಸುದೇವ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ವೈ. ಸುಕುಮಾರ್, ಅಲ್ ರೋಹನ್ ವಾಝ್, ರಾಕೇಶ್ ಕೆ., ಕಾಪು ದಿವಾಕರ ಶೆಟ್ಟಿ, ಮನೋಹರ್ ಎಸ್. ಶೆಟ್ಟಿ, ವೆಂಕಟೇಶ್ ನಾವಡ, ಪ್ರಭಾಕರ ಪೂಜಾರಿ, ಸಂಕಪ್ಪ ಅಮೀನ್, ಹರೀಶ್ ಅಮೀನ್, ಮಾಲಿನಿ ಶೆಟ್ಟಿ, ಜ್ಯೋತಿ ಶಂಕರ್ ಸಾಲ್ಯಾನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಜತ ಸಂಭ್ರಮ ಸಮಾರಂಭದ ಪ್ರಯುಕ್ತ ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಕಾಪು ಜೇಸಿಐನ ಕಾರ್ಯಕ್ರಮಗಳಿಗೆ ಸಹಕರಿಸಿದ ಕಾಪು ಪರಿಸರದ ವಿವಿಧ ಸಂಘ ಸಂಸ್ಥೆಗಳಿಗೆ ರಜತ ಪುರಸ್ಕಾರ ಗೌರವಾರ್ಪಣೆ, ನೃತ್ಯ ವೈಭವ, ಸಂಗೀತ ರಸಮಂಜರಿ ಮತ್ತು ಸಿನಿ ತಾರೆಯರ ಸಂಗಮ ನಡೆಯಲಿದೆ ಎಂದು ರಜತ ಸಮಿತಿಯ ಮತ್ತು ಕಾಪು ಜೇಸಿಐನ ಪ್ರಕಟಣೆಯು ತಿಳಿಸಿದೆ.