Updated News From Kaup
ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ
Posted On: 28 Jun 2025, 10:38 PM
ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ನಿಯಾಝ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ದಕ್ಷಿಣ, ಉತ್ತರ ಅಧ್ಯಕ್ಷರುಗಳಾದ ಗೌರೀಶ್ ಹಾಗೂ ಶರತ್ ನಾಯಕ್ ಮತ್ತು ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಶನಿವಾರ ಕಾಪು ರಾಜೀವ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಆಡಳಿತಾರೂಢ ಮೋದಿ ಸರಕಾರದಿಂದ ಸಂವಿಧಾನಕ್ಕೆ ಧಕ್ಕೆ ತರುವಂತಾಗಿದೆ. ಜನಪರ ಆಶಯಕ್ಕೆ ಕಾಂಗ್ರೆಸ್ ನಿಂದ ಸಂವಿಧಾನ ತಿದ್ದುಪಡಿ ಆಗಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ ನೀಡಿದ ಪಕ್ಷ. ಶೇ.40 ರಷ್ಟು ಯುವಕರ ಸೇರ್ಪಡೆಯಾದಾಗ ಮಾತ್ರ ಪಕ್ಷ ಬೆಳವಣಿಗೆ ಸಾಧ್ಯ. ದೇಶದ ಸಂವಿಧಾನ ನಮ್ಮ ಸಿದ್ಧಾಂತ. ಬಿಜೆಪಿಯಿಂದ ಸಂವಿಧಾನದ ಮೂಲ ಅಂಶ ಸಮಾಜವಾದಿ, ಜಾತ್ಯಾತೀತ ತೆಗೆದು ಹಾಕಲು ಚಿಂತನೆಯಾಗಿದೆ. ಸಂವಿಧಾನಕ್ಕೆ ಧಕ್ಕೆ ಬಂದರೆ ನಾವೆಲ್ಲರೂ ವಿರೋಧಿಸಲು ಅಣಿಯಾಗಬೇಕಿದೆ ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮಾತನಾಡಿ, ಯುವ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಕಾಂಗ್ರೆಸ್ ಹಿರಿಯರ ಮಾರ್ಗದರ್ಶನದಲ್ಲಿ ಯುವಕರನ್ನು ಪಕ್ಷದೆಡೆ ಆಕರ್ಷಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯು ಕಾಂಗ್ರೆಸ್ ತಂಡವನ್ನು ಅಭಿನಂದಿಸಿದರು. ಮಹಮ್ಮದ್ ನಿಯಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕಾಪು ಬ್ಲಾಕ್ (ದ) ಅಧ್ಯಕ್ಷ ವೈ. ಸುಕುಮಾರ್, ಕಾಪು ಬ್ಲಾಕ್ (ಉ)ಅಧ್ಯಕ್ಷ ಸಂತೋಷ್ ಕುಲಾಲ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್ ಸುವರ್ಣ, ಕಾಪು ದಿವಾಕರ ಶೆಟ್ಟಿ, ಅರ್ಜುನ್, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಹಸನಬ್ಬ ಶೇಕ್, ರಮೀಝ್ ಹುಸೇನ್, ವಿಶ್ವಾಸ್ ಅಮೀನ್, ಅಝೀಝ್, ನವೀನ್ ಎನ್ ಶೆಟ್ಟಿ, ದೀಪಕ್ ಕೋಟ್ಯಾನ್, ಹರೀಶ್ ಕಿಣಿ ಮತ್ತಿತರರು ಉಪಸ್ಥಿತರಿದ್ದರು.
ನಾಡಪ್ರಭು ಕೆಂಪೇಗೌಡರ ಆದರ್ಶ ನಮ್ಮೆಲ್ಲರಿಗೆ ದಾರಿದೀಪ : ತಹಶಿಲ್ದಾರ್ ಡಾ.ಪ್ರತಿಭಾ ಆರ್.
Posted On: 27 Jun 2025, 08:26 PM
ಕಾಪು : ನಾಡಪ್ರಭು ಕೆಂಪೇಗೌಡರ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪದಂತೆ. ಅವರ ದೂರದೃಷ್ಟಿಯನ್ನು ನಮ್ಮ ಇಂದಿನ ಯುವ ಪೀಳಿಗೆ ಮಾದರಿಯಾಗಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಹಶಿಲ್ದಾರ್ ಪ್ರತಿಭಾ ಆರ್ ಕರೆ ನೀಡಿದರು. ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಜಯಂತಿಯ ಅಂಗವಾಗಿ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ನಡೆಸಲಾಗಿತ್ತು. ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ನಾಡ ಪ್ರಭು ಕೆಂಪೇಗೌಡರ ಕುರಿತು ಭಾಷಣ ಮತ್ತು ದೇಶಭಕ್ತಿಗೀತೆ ಹಾಡಿದರು. ಪುರಸಭಾ ಅಧ್ಯಕ್ಷರಾದ ಹರಿಣಾಕ್ಷಿಯವರು ಮಾತನಾಡಿ "ಕೆಂಪೇಗೌಡರ ಆಡಳಿತ ಕಾಲ ಅತ್ಯಂತ ಸುಭಿಕ್ಷವಾಗಿತ್ತು. ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟಿದ್ದಾರೆ. ಅವರ ಆದರ್ಶಗಳು ಎಲ್ಲರಿಗೂ ಮಾದರಿಯಾಗಲಿ ಎಂದು ಶುಭ ಹಾರೈಸಿದರು. ಪುರಸಭಾ ಚೀಫ್ ಆಫೀಸರ್ ನಾಗರಾಜ್, ಪುರಸಭಾ ಅದ್ಯಕ್ಷೆ ಹರಿಣಾಕ್ಷಿ, ಪುರಸಭಾ ಉಪಾಧ್ಯಕ್ಷರಾದ ಸರಿತಾ, ಸ್ಥಾಯಿ ಸಮಿತಿ ಅಧ್ತಕ್ಷರಾದ ಅನಿಲ್, ಪುರಸಭಾ ಸದಸ್ಯರು, ಉಪ ತಹಶಿಲ್ದಾರ್ ಗಳಾದ ದೇವಕಿ, ರವಿಕಿರಣ್, ಅಶೋಕ್ ಕೋಟೆಕಾರ್ , ರೆವಿನ್ಯೂ ಇನ್ಸ್ ಪೆಕ್ಟರ್ ಇಜ್ಜಾರ್ ಸಾಬಿರ್, ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್, ತಾಲ್ಲೂಕು ಕಚೇರಿ ಸಿಬ್ಬಂದಿ, ಗ್ರಾಮಾಡಳಿತಾಧಿಕಾರಿಗಳು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಜರಿದ್ದರು. ದೇವಿಚರಣ್ ಕಾರ್ಯಕ್ರಮ ನಿರೂಪಿಸಿದರು. ಲೋಕನಾಥ್ ಸ್ವಾಗತಿಸಿ, ದೇವಕಿ ವಂದಿಸಿದರು.
ಬಂಟಕಲ್ಲು : ಶ್ರೀ ಯತಿ ಗುರುರಾಯ ತಂಡದ ಆಶ್ರಯದಲ್ಲಿ ಕೆಸರುಡ್ ಒಂಜಿ ದಿನ ಕಾರ್ಯಕ್ರಮ ಸಂಪನ್ನ
Posted On: 25 Jun 2025, 09:52 AM
ಬಂಟಕಲ್ಲು : ಇಲ್ಲಿನ ಶ್ರೀ ಯತಿ ಗುರುರಾಯ ತಂಡ ಆಶ್ರಯದಲ್ಲಿ ಕೆಸರುಡ್ ಒಂಜಿ ದಿನ ಕಾರ್ಯಕ್ರಮ 92 ನೇ ಹೇರೂರಿನ ವಿಜಯ್ ಧೀರಜ್ ಇವರ ಗದ್ದೆಯಲ್ಲಿ ನಡೆಯಿತು. ಹೇರೂರು ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಸ್ವಾಮಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಕೃಷಿ ವೃತ್ತಿಯನ್ನು ನಡೆಸುತ್ತಿದ್ದ ಶ್ರೀಮತಿ ಅಪ್ಪಿ ಸೇರಿಗಾರ್ತಿಯವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಉಪಾಧ್ಯಕ್ಷ ಮಾಧವಾಚಾರ್ಯ, ಮಹಿಳಾ ಬಳಗದ ಉಪಾಧ್ಯಕ್ಷೆ ಸುನಿತಾ ಜಯ ಸೇರಿಗಾರ್, ಹೇರೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಸದಸ್ಯ ವಿಜಯ ಧೀರಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾರ್ವಿ ನಾಯಕ್ ಪ್ರಾರ್ಥಿಸಿದರು. ತಂಡದ ಅಧ್ಯಕ್ಷೆ ಅನಿತಾ ಉಮೇಶ್ ಸ್ವಾಗತಿಸಿದರು. ಬಹುಮಾನದ ವಿವರಣೆಯನ್ನು ಕಾರ್ಯದರ್ಶಿ ವಿದ್ಯಾಶ್ರೀ ಆಚಾರ್ಯ ವಾಚಿಸಿದರು. ಜ್ಯೋತಿ ಶ್ರೀಪತಿ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಸಂಸದ, ಶಾಸಕರಿಂದ ವೀಕ್ಷಣೆ
Posted On: 20 Jun 2025, 04:25 PM
ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿದ್ದು ಈ ಸಂಬಂಧ ಶುಕ್ರವಾರದಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಕ್ಷಣವೇ ಸೇತುವೆ ಇಕ್ಕೆಲಗಳಲ್ಲಿ ನಿಂತ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಜೊತೆಗೆ ಮಳೆ ಕಡಿಮೆಯಾದ ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ನಿರ್ವಹಿಸಲು ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ ಪೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಕಾಪು : ಇನ್ನಂಜೆ ಗ್ರಾಮದ ಯುವಕ ಆತ್ಮಹತ್ಯೆ
Posted On: 20 Jun 2025, 03:21 PM
ಕಾಪು : ಕ್ಯಾಟರಿಂಗ್ ವೃತ್ತಿ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇನ್ನಂಜೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ರಾಕೇಶ್ (32) ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದರು. ಕೆಲವೊಮ್ಮೆ ಕೆಲಸದ ನಿಮಿತ್ತ ಹೊರಗೆ ಹೋದಾಗ 2-3 ದಿನ ಬಿಟ್ಟು ಮನೆಗೆ ಬರುತ್ತಿದ್ದರು. ಎಂದಿನಂತೆ ಕೆಲಸದ ಬಗ್ಗೆ ಹೊರಗೆ ಹೋದವರು ಜೂ.18ರ ರಾತ್ರಿ 9:30 ಗಂಟೆಗೆ ಮನೆಗೆ ಬಂದಿದ್ದು, ಜೂ.19 ರಂದು ಬೆಳಿಗ್ಗೆ 8:30 ಗಂಟೆ ಸಮಯದವರೆಗೂ ರೂಮ್ನಿಂದ ಹೊರಗೇ ಬರದೇ ಇರುವುದನ್ನು ನೋಡಿ ಅವರ ತಂದೆ ರಮೇಶ್ ರವರು ಬಾಗಿಲು ಬಡಿದಾಗ ಪ್ರತಿಕ್ರಿಯೆ ಬಾರದಿದ್ದನ್ನು ಕಂಡು ನೆರೆಮನೆಯವರಾದ ವಿಜಯ್ ಹಾಗೂ ಸಂಬಂಧಿಕರಾದ ಉಮೇಶ್ ರವರನ್ನು ಮನೆಗೆ ಕರೆಯಿಸಿ, ರೂಮಿನ ಹಿಂಬದಿಯಲ್ಲಿನ ಕಿಟಕಿ ಗ್ಲಾಸ್ ಅನ್ನು ಹೊಡೆದು ಕೋಲು ಹಾಕಿ ರೂಮ್ ಬಾಗಿಲ ಚಿಲಕವನ್ನು ತೆಗೆದು ರೂಮ್ ಒಳಗೆ ಹೋಗಿ ನೋಡುವಾಗ ರಾಕೇಶ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸನ್ ಶೈನ್ ಸೀನಿಯರ್ ಚೇಂಬರ್ ಬಂಟಕಲ್ಲು : ಅಧ್ಯಕ್ಷರಾಗಿ ರಮೇಶ್ ಬಂಟಕಲ್ ಆಯ್ಕೆ
Posted On: 20 Jun 2025, 03:03 PM
ಶಿರ್ವ : ಸನ್ ಶೈನ್ ಸೀನಿಯರ್ ಚೇಂಬರ್ ಬಂಟಕಲ್ಲು ಇದರ 2025- 26 ನೇ ಸಾಲಿನ ಅಧ್ಯಕ್ಷರಾಗಿ ಸೀನಿಯರ್ ರಮೇಶ್ ಬಂಟಕಲ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ರವೀಂದ್ರ ಪಾಟ್ಕರ್, ಖಜಾಂಜಿಯಾಗಿ ಸೀನಿಯರ್ ವಿಘ್ನೇಶ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುತ್ಯಾರು : ದಿವಾಕರ್ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ಡಿಸ್ಟಿಂಕ್ಷನ್
Posted On: 20 Jun 2025, 02:57 PM
ಕಾಪು : ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ ಮಾರ್ಗದರ್ಶನದಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ್ ಆಚಾರ್ಯ ಗೇರುಕಟ್ಟೆ ಇವರು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024-25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚಿಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಇವರು ಆನೆಗುಂದಿ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು ಶಾಲೆಯ ಶೈಕ್ಷಣಿಕ ಸಲಹೆಗಾರರಾಗಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿ, ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಪು : ನರೇಂದ್ರ ಮೋದಿ ನೇತೃತ್ವದ ಸರ್ಕಾರ 11 ವರ್ಷ ಪೂರೈಸಿದ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಸಭೆ
Posted On: 19 Jun 2025, 06:59 PM
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷ ಪೂರೈಸಿದ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಸಭೆ ಗುರುವಾರ ಕಾಪುವಿನ ವೀರಭದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿಯಾದ 11 ವರ್ಷದಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದೆ. ಇನ್ನು ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಇಂದು ಸ್ವಾವಲಂಬಿ ಆತ್ಮ ನಿರ್ಭರ ಭಾರತವಾಗಿದೆ. ಇಂದರಿಂದ ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದ ಅವರು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಸಜ್ಜಾಗಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಸುದರ್ಶನ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರ್ಣಂಕಿಲ, ನಿಕಟಪೂರ್ವ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಪ್ರಮುಖರಾದ ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ
Posted On: 17 Jun 2025, 10:50 PM
ಉಡುಪಿ :ರಾಜ್ಯ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ್ದು ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಜೂ.17 (ನಾಳೆ) : ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Posted On: 16 Jun 2025, 10:41 PM
ಉಡುಪಿ : ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪದವಿಪೂರ್ವ ಕಾಲೇಜು, ಐ.ಟಿ.ಐ ಗಳಿಗೂ ರಜೆ ಘೋಷಿಸಲಾಗಿದೆ. ದ್ವೀತಿಯ ಪಿಯುಸಿ -3 ಪರೀಕ್ಷೆ ನಡೆಯಲಿದೆ. ಪದವಿ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ನಡೆಯಲಿದೆ.
