Updated News From Kaup

ಕಾರ್ಕಳ : ಇನ್ನಾ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ

Thumbnail
Posted On: 31 Jul 2022, 02:59 PM

ಕಾರ್ಕಳ : ತಾಲೂಕಿನ ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಪತ್ತೆಯಾಗಿದೆ. ಇದು ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಕಾರನ್ನು ಯಾರೂ ಸ್ಪರ್ಶಿಸಬಾರದೆಂದು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಸ್ಥಳೀಯರ ಪ್ರಕಾರ ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ಅಷ್ಟಾಗಿ ಗಮನಿಸಿರಲಿಲ್ಲ. ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕಾಪು ಶಾಸಕರಿಂದ 2 ಲಕ್ಷದ ಪರಿಹಾರ ಚೆಕ್ ಹಸ್ತಾಂತರ

Thumbnail
Posted On: 30 Jul 2022, 08:10 PM

ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉಳಿಯಾರಗೋಳಿ ರಘು ಪೂಜಾರಿ ಮನೆಗೆ ಭೇಟಿ ನೀಡಿ 2 ಲಕ್ಷ ಮೊತ್ತದ ಪರಿಹಾರ ಚೆಕ್ ಹಸ್ತಾಂತರಿಸಿದರು. ಕಳೆದ ದೀಪಾವಳಿ ಸಂದರ್ಭದಲ್ಲಿ ಕಾಪು ತಾಲೂಕು ಉಳಿಯಾರಗೋಳಿ ಗ್ರಾಮದ ರೋಹಿತ್ ರವರು ಮನೆಯ ಅಂಗಳದಲ್ಲಿಯೇ ಹಾವು ಕಡಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮನೆಗೆ ತೆರಳಿ ಮಾನ್ಯ ಶಾಸಕರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು. ಸರಕಾರದಿಂದ ಸುಮಾರು 2 ಲಕ್ಷ ರೂ.ಗಳನ್ನು ಮಂಜೂರಾತಿ ಮಾಡಿಸಿ ಇದರ ಮಂಜೂರಾತಿ ಪತ್ರವನ್ನು ಮೃತ ರೋಹಿತ್ ತಂದೆ ರಾಘು ಕೆ ಪೂಜಾರಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನೀರಿಕ್ಷಕರು ಸುಧೀರ್ ಕುಮಾರ್ ಶೆಟ್ಟಿ, ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ರಮೇಶ್ ಹೆಗ್ಡೆ, ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ, ಲತಾ ದೇವಾಡಿಗ, ಪ್ರದೀಪ್ ಹಾಗೂ ಸ್ಥಳೀಯರಾದ ರಮೇಶ್ ಶೆಟ್ಟಿ, ಉಪಸ್ಥಿತರಿದ್ದರು.

ಕಾಮನ್ ವೆಲ್ತ್ ಕ್ರೀಡಾಕೂಟ : ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿ

Thumbnail
Posted On: 30 Jul 2022, 07:03 PM

ಕುಂದಾಪುರ : ಇಲ್ಲಿನ ಗುರುರಾಜ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಬರ್ಮಿಂಗ್ ಹ್ಯಾಂನಲ್ಲಿ ಶನಿವಾರ ನಡೆದ ಪುರುಷರ 61 ಕೆಜಿ ವಿಭಾಗದ ಫೈನಲ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ ಪೂಜಾರಿ ಒಟ್ಟಾರೆ 269 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗಳಿಸಿದರು.

ಕಾಪು : ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕಾರ್ಯಗಾರ, ಇ ಶ್ರಮ ಕಾರ್ಡ್ ವಿತರಣೆ

Thumbnail
Posted On: 30 Jul 2022, 06:55 PM

ಕಾಪು : ಇಲ್ಲಿನ ಪುರಸಭಾ ಮತ್ತು ಕಾರ್ಮಿಕ ಇಲಾಖೆಯಿಂದ ಕಾಪುನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಶಿಬಿರವು ಕಾಪು ಪುರಸಭೆ ಮತ್ತು ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಶನಿವಾರ ಕಾಪು ಜೆಸಿ ಭವನದಲ್ಲಿ ಜರಗಿತು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಪುರಸಭಾ ಅಧಿಕಾರಿ ವೆಂಕಟೇಶ ನಾವಡರವರು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಹಲವಾರು ಯೋಜನೆಗಳನ್ನು ಸರಕಾರ ತಂದಿದ್ದು, ಸಾರ್ವಜನಿಕರು ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಇದೇ ವೇಳೆ ಕಾಪುವಿನ ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ಹಾಗೂ ವಲಸಿ ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಕಾಪು ನಗರ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಉದಯಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ, ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

ಬಲಾಯಿಪಾದೆ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ; ಯುವಕನಿಗೆ ಗಾಯ

Thumbnail
Posted On: 30 Jul 2022, 06:34 PM

ಉದ್ಯಾವರ : ಕಾಪು ಠಾಣಾ ವ್ಯಾಪ್ತಿಯ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಯುವಕನೋರ್ವನಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ನಡೆದಿದೆ. ಗಾಯಗೊಂಡ ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಾಯಿಪಾದೆ ಜಂಕ್ಷನ್ ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಅಪಘಾತ ಸಂಭವಿಸುತ್ತಿದ್ದು, ಆದಷ್ಟು ಶೀಘ್ರವಾಗಿ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಹಿತಕರ ಘಟನೆ ನಡೆಯದಂತೆ ಉಡುಪಿಯಲ್ಲಿ ಪೋಲಿಸ್ ಬಂದೋಬಸ್ತ್ ; ವಾಹನಗಳ ತಪಾಸಣೆ

Thumbnail
Posted On: 29 Jul 2022, 10:42 PM

ಕಾಪು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಮತ್ತು ಸುರತ್ಕಲ್ ಫಾಝಿಲ್ ಹತ್ಯೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಅಹಿತಕರ ಘಟನೆ ನಡೆಯದಂತೆ ಉಡುಪಿಯಲ್ಲೂ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ ೬೬ ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು ೧೧ ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಿರುವ ಜಿಲ್ಲಾ ಪೋಲಿಸರು ಹೊರ ರಾಜ್ಯ, ಹೊರ ಜಿಲ್ಲೆಯ ನೋಂದಣಿ ಹೊಂದಿರುವ ಸಂಶಯಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಉದ್ಯಾವರದ ಬಲಾಯಿಪಾದೆ, ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ಮಾಡಲಾಗಿದೆ.

ಕಾಪು : ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಪತ್ರಿಕಾ ಮಾಹಿತಿ ಕಾರ್ಯಾಗಾರ

Thumbnail
Posted On: 29 Jul 2022, 09:17 PM

ಕಾಪು : ಪ್ರಸ್ತುತ ವಿದ್ಯಮಾನದಲ್ಲಿ ಪತ್ರಿಕೆಗಳ ಮಹತ್ವ ಯುವ ಸಮುದಾಯ ಅರಿಯಬೇಕಾಗಿದೆ. ಪತ್ರಿಕೆಗಳ ಮೂಲಕ ಒಂದಷ್ಟು ಜ್ಞಾನದ ಹೊನಲನ್ನು ನಮ್ಮ ಜೀವನದಲ್ಲಿ ಅಳವಡಿಸಬೇಕಾಗಿದೆ. ಹಿಂದಿನ ಹಲವಾರು ಪತ್ರಿಕೆಗಳು ಪರಿಶ್ರಮದ ಮೂಲಕ ಜನರಿಗೆ ಸುದ್ದಿಯನ್ನು ನೀಡುತ್ತಿದ್ದವು. ಇಂದು ರಾಜಕೀಯ ಮೇಲಾಟದಲ್ಲಿ ಪತ್ರಿಕಾ ವ್ಯವಸ್ಥೆ ಕುಸಿಯುತ್ತಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇದರ ಪ್ರಾಂಶುಪಾಲರಾದ ಡಾ|ಅನಿಲ್ ಕುಮಾರ್ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ನಡೆದ ಪತ್ರಿಕಾ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಂಜಿಎಂ ಕಾಲೇಜು ಉಡುಪಿ ಇದರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಕಾಮತ್ ಮಾತನಾಡಿ ಯುವ ಜನಾಂಗ ನಮ್ಮಲ್ಲಿರುವ ಅಂತರ್ಗತ ಶಕ್ತಿಯನ್ನು ಹೊರಗೆಳೆಯುವ ಪ್ರಯತ್ನ ಮಾಡಬೇಕಾಗಿದೆ. ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ ಇಂದು ವಿಪುಲ ಅವಕಾಶಗಳಿವೆ. ಸಾಮಾಜಿಕ ವ್ಯವಸ್ಥೆಗಳನ್ನು ಬದಲಾಯಿಸುವ ಶಕ್ತಿ ಸಮೂಹ ಮಾಧ್ಯಮಗಳಿಗಿವೆ. ಪತ್ರಿಕೋದ್ಯಮದ ಅಧ್ಯಯನ ಮಾಡಿದವರಿಗೆ ಬಹಳಷ್ಟು ಅವಕಾಶಗಳಿವೆ ಎಂದರು. ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮಾತನಾಡಿ ಯುವಕರು ಸುಳ್ಳು ಸುದ್ದಿಗಳನ್ನು ನಂಬದೇ ತಮ್ಮ ಜೀವನವನ್ನು ರೂಪಿಸಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿ ದೆಸೆಯಲ್ಲಿ ತಮ್ಮ ಬದುಕನ್ನು ರೂಪಿಸುವ ಕಡೆಗೆ ಗಮನ ನೀಡುವ ಮೂಲಕ ಭವಿಷ್ಯದ ಯೋಚನೆ ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುರೇಶ್ ಎರ್ಮಾಳ್ ವಹಿಸಿದ್ದರು. ಕಾಪು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕೋಶಾಧಿಕಾರಿ ಅಬ್ದುಲ್ ಹಮೀದ್, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸದಸ್ಯರು ಉಪಸ್ಥಿತರಿದ್ದರು. ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪುಂಡಲೀಕ ಮರಾಠೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರು ನಿರೂಪಿಸಿದರು. ಸಂತೋಷ್ ನಾಯಕ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಉಪನ್ಯಾಸಕಿ ಡಾ| ಸುಚಿತ್ರ ವಂದಿಸಿದರು.

ಹೆಜಮಾಡಿ ಟೋಲ್ ಬಳಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೊಲೀಸರ ವಶ

Thumbnail
Posted On: 29 Jul 2022, 02:10 PM

ಹೆಜಮಾಡಿ : ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ನಿರ್ಬಂಧವಿದ್ದರೂ ಹೋಗಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್‌ನಲ್ಲಿ ನಿನ್ನೆ ರಾತ್ರಿ ಪಾಝಿಲ್ ಕೊಲೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇರುವುದರಿಂದ ಪೊಲೀಸರು ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದರು. ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಸ್ಥರನ್ನು ಭೇಟಿ ಮಾಡುವ ಯೋಜನೆ ಮುತಾಲಿಕ್ ಅವರಿಗಿತ್ತು. ಅವರ ಭೇಟಿಯಿಂದ ಇಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದೆಂಬ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮತ್ತು ಕಮಿಷನರೇಟ್, ಮುತಾಲಿಕ್ ರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು.

ಸುರತ್ಕಲ್ ಹತ್ಯೆ : 4 ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Thumbnail
Posted On: 28 Jul 2022, 10:19 PM

ಸುರತ್ಕಲ್ : ಬೆಳ್ಳಾರೆಯ ಹತ್ಯೆಯ ಬಳಿಕ ಇದೀಗ ಮತ್ತೊಂದು ಹತ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ. ಹತ್ಯೆಯಾದ ಯುವಕ ಪಾಝಿಲ್. ಬಟ್ಟೆ ಅಂಗಡಿಯ ಮುಂದೆ ನಿಂತ ಸಂದರ್ಭ ಹಲ್ಲೆಯಾಗಿದೆ. ಸಿಸಿ ಟಿವಿ ದೃಶ್ಯಾವಳಿಯಲ್ಲಿ 5 ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಫಾಝಿಲ್ ಮೇಲೆ ಎರಗಿದ್ದಾರೆ. ಆಸ್ಪತ್ರೆಗೆ ಸೇರಿಸಿದರೂ ಯಾವುದೇ ಪ್ರಯೋಜನವಾಗದೆ ಫಾಝಿಲ್ ಮೃತರಾಗಿದ್ದಾರೆ. ಪ್ರೀತಿಯ ವಿಷಯ ಎಂದು ಹೇಳಲಾಗುತ್ತಿದೆಯಾದರೂ, ಪೋಲಿಸರು ತನಿಖೆ ಚುರುಕುಗೊಳಿಸಿದ್ದಾರೆ. ಅಹಿತಕಾರಿ ಘಟನೆ ನಡೆಯದಂತೆ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನವರೆಗೆ ನಿಷೇಧಾಜ್ಞೆ ಜಾರಿಗೆ ಮಂಗಳೂರು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.

ಕಾಪು ಪೇಟೆಯಲ್ಲಿ ಬಸ್ಸಿನಡಿಗೆ ಬಿದ್ದ ವ್ಯಕ್ತಿ : ಕಾಲು ಮುರಿತ ; ಆಸ್ಪತ್ರೆಗೆ ದಾಖಲು

Thumbnail
Posted On: 28 Jul 2022, 09:53 PM

ಕಾಪು : ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿದ ಘಟನೆ ಜುಲೈ 28ರ ಸಂಜೆ ಕಾಪು ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಶಿರ್ವ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು ಕೂಲಿ ಕಾರ್ಮಿಕರಾಗಿದ್ದರು. ಚಕ್ರದಡಿಗೆ ಸಿಲುಕಿದ ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.