Updated News From Kaup
ಜೂನ್ 26 : ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ವತಿಯಿಂದ ಚಿಂತನ ಮಂಥನ ಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
Posted On: 21 Jun 2022, 08:04 PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೇಸ್ ಸಮಿತಿ, ಪಡುಬಿದ್ರಿ ಇದರ ವತಿಯಿಂದ ಚಿಂತನ ಮಂಥನ ಸಭೆ ಜೂನ್ 26, ಆದಿತ್ಯವಾರದಂದು ಸಂಜೆ 4.30ಕ್ಕೆ ಸಾಯಿ ಆರ್ಕೇಡ್ ಸಭಾಂಗಣ, 3ನೇ ಮಹಡಿ ಮಾರ್ಕೇಟ್ ರಸ್ತೆ, ಪಡುಬಿದ್ರಿ ಇಲ್ಲಿ ಜರಗಲಿದೆ. ಈ ಸಂದರ್ಭ ಸಾಧಕರಿಗೆ ಸನ್ಮಾನ, ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯೊಳಗೆ ವಾಸ್ತವ್ಯವಿರುವ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 550ಕ್ಕೂ ಮೇಲ್ಪಟ್ಟು ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರ, ಪಕ್ಷದ ಹಿರಿಯ ಮುಖಂಡರಿಗೆ ಸನ್ಮಾನ, ಪಕ್ಷದ ಸಂಘಟನಾತ್ಮಕ ಕಾರ್ಯದ ಬಗ್ಗೆ ಚಿಂತನ ಮಂಥನ, ಪಕ್ಷದ ಮಾಜಿ ಹಿರಿಯ ಗ್ರಾ.ಪಂ. ಸದಸ್ಯರು, ಅಧ್ಯಕ್ಷರುಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಕರುಣಾಕರ್ ಪೂಜಾರಿ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಕಟನೆ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯೊಳಗೆ ವಾಸ್ತವ್ಯವಿರುವ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ(ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ) 550ಕ್ಕೂ ಮೇಲ್ಪಟ್ಟು ಅಂಕಗಳಿಸಿದವರು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವವರು ಜೂನ್ 24ರ ಮೊದಲು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿ ಗಣೇಶ್ ಕೋಟ್ಯಾನ್ : 9900555542 ತಸ್ನಿನ್ ಅರಾ : 8861183491
ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳ ಭ್ರಷ್ಟಚಾರ, ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಧರಣಿ ; ಜಿಲ್ಲಾಧಿಕಾರಿಗಳಿಂದ ತನಿಖೆಯ ಭರವಸೆ
Posted On: 21 Jun 2022, 03:36 PM
ಉಡುಪಿ : ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳ ಭ್ರಷ್ಟಚಾರ ಹಾಗೂ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಉಡುಪಿ ಜಿಲ್ಲೆಯ ಅರ್ ಟಿ ಐ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿ ಸಂಘಟನೆ, ಅರ್ ಪಿ ಐ ಪಕ್ಷ , ಕುಂದಾಪುರ ಕನತಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಉಡುಪಿ ಜಿಲ್ಲಾಡಳಿತ ಕಚೇರಿ ಎದುರುಗಡೆ ದಿನ ಪೂರ್ತಿ ಪ್ರತಿಭಟನೆಯನ್ನು ನಡೆಸಿದರು. ಜಿಲ್ಲೆಯಲ್ಲಿ ವಿವಿಧ ಇಲಾಖೆಯಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಈ ಬಗ್ಗೆ ಹಲವು ದೂರುಗಳನ್ನು ವಿವಿಧ ಸಂಘಟನೆಗಳು ದೂರು ನೀಡಿದರು, ಯಾವುದೇ ಪ್ರಯೋಜನ ಆಗದ ಹಿನ್ನೆಲೆಯಲ್ಲಿ ಸಂಘಟನೆಗಳು ಪ್ರತಿಭಟನೆಗಿಳಿದಿದ್ದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯ ,ಕುಂದಾಪುರ ತಹಶಿಲ್ದಾರರ ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ,ಬ್ರಹ್ಮಾವರ ಸೀತಾನದಿ ಕಳಪೆ ರಸ್ತೆ ಹಗರಣ , ಮೀಸಲು ಅರಣ್ಯ ಭೂಮಿಯನ್ನು ನಾಶ ಪಡಿಸಿ ಪರಿಶಿಷ್ಟ ಪಂಗಡದ ನಿಧಿ ದುರುಪಯೋಗ ಪಡಿಸಿಕೊಂಡು ರಸ್ತೆ ನಿರ್ಮಾಣ, ಬೈಂದೂರಿನಲ್ಲಿ ಉಪ ತಹಶೀಲ್ದಾರ್ ಭೂ ಕಬಳಿಕೆ ಪ್ರಕರಣ, ಆಯುಷ್ಮಾನ್ ಯೋಜನೆ ಸಮಪರ್ಕವಾಗಿ ಜಾರಿಯಾಗದ ಬಗ್ಗೆ , ನ್ಯಾಯಾಲಯದ ಆದೇಶಗಳನ್ನು ಅಧಿಕಾರಿಗಳು ಸರಿಯಾಗಿ ಪಾಲನೆ ಮಾಡದಿರುವ ಬಗ್ಗೆ ಸೇರಿದಂತೆ ಭ್ರಷ್ಟ ಅಧಿಕಾರಿಗಳ ವಿರುದ್ದ ಕ್ರಮಗಳನ್ನು ಕೈಗೊಳ್ಳುವಂತೆ ನೂರಾರು ಕಾರ್ಯಕರ್ತರು ಜಿಲ್ಲಾಡಳಿತ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಬೆಳಿಗ್ಗಿನಿಂದಲೂ ಪ್ರತಿಭಟನೆ ನಡೆಸಿದರೂ ಕೂಡ ಜಿಲ್ಲಾಡಳಿತ ಮಾತ್ರ ಪ್ರತಿಭಟನಕಾರರ ಕಡೆಗೆ ತಲೆ ಎತ್ತಿಯೂ ನೋಡದಿರುವುದು ಪ್ರತಿಭಟನಾಕಾರರ ಅಕ್ರೋಶಕ್ಕೆ ಕಾರಣವಾಯ್ತು. ಜಿಲ್ಲಾಧಿಕಾರಿಗಳು ಪ್ರತಿಭಟನೆ ನಡೆಯುವ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಜಿಲ್ಲಾಡಳಿತದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಭ್ರಷ್ಟರನ್ನು ಜಿಲ್ಲಾಡಳಿತ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು. ಜಿಲ್ಲಾಡಳಿತ ಸ್ಪಂದಿಸುವವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ ಕಾರ್ಯಕರ್ತರು ಪ್ರತಿಭಟನಾ ಸ್ಥಳದಿಂದ ಕದಲದೆ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ರಾತ್ರಿವರೆಗೂ ಧರಣಿ ಮುಂದುವರೆಸಿದ್ದರು. ಪೋಲೀಸರು ಹಾಗೂ ಇತರ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಸಾಧ್ಯವಾಗಲಿಲ್ಲ. ಭಾರೀ ಗಾಳಿ ಮಳೆಯನ್ನು ಲೆಕ್ಕಿಸದೇ ಪಟ್ಟು ಹಿಡಿದು ತಡವರಾತ್ರಿವರೆಗೂ ಧರಣಿ ಮುಂದುವರೆಸಿದ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಕೊನೆಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಸ್ಥಳಕ್ಕೆ ಬಂದು ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿದರು. ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಈಗ ನೀಡಿರುವ ದೂರುಗಳ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.ಭ್ರಷ್ಟ ಅಧಿಕಾರಿಗಳ ವಿರುದ್ದ ತನಿಖೆ ನಡೆಸುತ್ತೇವೆ ,ಜಿಲ್ಲಾಡಳಿತಕ್ಕೆ ಸಮರ್ಪಕವಾದ ಮಾಹಿತಿಗಳನ್ನು ನೀಡುವಂತೆಯೂ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು. ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಶೇಖರ್ ಹಾವಂಜೆ, ಆರ್. ಟಿ. ಐ ಸಂಘಟನೆಯ ಸತೀಶ್ ಪೂಜಾರಿ , ಸದಾಶಿವ ಶೆಟ್ಟಿ, ಜಯಕರ್ ನಾಯ್ಕ್ , ಸಂಜೀವ ನಾಯ್ಕ್ , ಕಿರಣ್ ಪೂಜಾರಿ, ರಮೇಶ್, ಕೆ ಅರ್ ಎಸ್ ಪಕ್ಷದ ಅಶೋಕ್ ಕಾಡಬೆಟ್ಟು, ಇಕ್ಬಾಲ್ ಕುಂಜಿಬೆಟ್ಟು, ಸದಾಶಿವ ಕೋಟೆಕಾರ್, ಪುರುಷೋತ್ತಮ, ಮತ್ತಿತರರು ಉಪಸ್ಥಿತರಿದ್ದರು.
ಜೀವಬೆದರಿಕೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಶ್ರಮಿಸಿದ ಕಾಪು ಠಾಣಾಧಿಕಾರಿ ಮತ್ತು ವೃತ್ತ ನಿರೀಕ್ಷಕರನ್ನು ಅಭಿನಂದಿಸಿದ ಕಾಪು ಬಿಜೆಪಿ ಯುವಮೋರ್ಚಾ
Posted On: 21 Jun 2022, 03:09 PM
ಕಾಪು : ಇತ್ತೀಚೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಅದರಂತೆ ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಆರೋಪಿಯನ್ನು ಬಂಧಿಸಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ತೋರ್ಪಡಿಸಿದ ಕಾಪು ವ್ರತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳಿಗೆ ಇಂದು ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಅಭಿನಂದನೆ ಸಲ್ಲಿಸಲಾಯಿತು.
ರೈಲ್ವೆ ಮಾರ್ಗದ ವಿದ್ಯುತ್ತೀಕರಣದಿಂದ ವಾರ್ಷಿಕ 300 ಕೋಟಿ ರೂ. ಉಳಿತಾಯ : ಶೋಭಾ ಕರಂದ್ಲಾಜೆ
Posted On: 21 Jun 2022, 02:55 PM
ಉಡುಪಿ : ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು, ಕೊಂಕಣ ರೈಲ್ವೆಯ ವಿದ್ಯುತ್ತೀಕರಣ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವರ್ಚುವಲ್ ಕಾರ್ಯಕ್ರಮವನ್ನು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ವೀಕ್ಷಿಸಿ ಮಾತನಾಡಿದರು. ಮಹಾರಾಷ್ಟ್ರದ ರೋಹಾದಿಂದ ಮಂಗಳೂರಿನ ತೋಕೂರು ವರೆಗಿನ 740 ಕಿ.ಮೀ ಉದ್ದದ ಕೊಂಕಣ ರೈಲು ಮಾರ್ಗವನ್ನು 1287 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ತೀಕರಣಗೊಳಿಸಿದ್ದು, ಇದರಿಂದ ವಾರ್ಷಿಕ ಇಂಧನ ವೆಚ್ಚ 180 ಕೋಟಿ ರೂ. ಹಾಗೂ ನಿರ್ವಹಣಾ ವೆಚ್ಚ 120 ಕೋಟಿ ರೂ. ಗಳ ಉಳಿತಾಯವಾಗಲಿದ್ದು, ವಿದ್ಯುತ್ ಬಳಕೆಯಿಂದ ಕಲ್ಲಿದ್ದಲ್ಲಿನ ಬಳಕೆ ಪ್ರಮಾಣ ಕಡಿಮೆಯಾಗಿ, ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಹಾಗೂ ಪ್ರಯಾಣಿಕರಿಗೆ ವೇಗವಾಗಿ ತಮ್ಮ ಸ್ಥಳಗಳಿಗೆ ತಲುಪಲು ಸಾಧ್ಯವಾಗಲಿದೆ. ಈ ಮಾರ್ಗದಲ್ಲಿ 16 ಮೈಲ್ ಎಕ್ಸ್ಪ್ರೆಸ್ ಹಾಗೂ 10 ಗೂಡ್ಸ್ ರೈಲುಗಳು ಸಂಚರಿಸಲಿವೆ ಎಂದರು. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಕೇಂದ್ರ ಸರ್ಕಾರದ 8 ವರ್ಷಗಳ ಆಡಳಿತದ ಅವಧಿಯಲ್ಲಿ ಶೌಚಾಲಯ, ವಸತಿ, ವಿದ್ಯುತ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿಪರ ಅಭಿವೃದ್ಧಿ ಕಾರ್ಯಗಳಾಗಿವೆ. ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ , ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲು ಮತ್ತು ಆಹಾರ ಪದಾರ್ಥಗಳನ್ನು ರಫ್ತು ಮಾಡಲು ಹೆಚ್ಚು ಆದ್ಯತೆ ನೀಡಲಾಗುತಿದ್ದು, ವಿಶ್ವದಲ್ಲಿ ಆಹಾರ ಪದಾರ್ಥಗಳ ರಫ್ತಿನಲ್ಲಿ ದೇಶ ಪ್ರಸ್ತುತ 9 ನೇ ಸ್ಥಾನದಲ್ಲಿದೆ ಎಂದರು. ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಕೊಂಕಣ ರೈಲ್ವೆಯ ಕಾರವಾರ ಪ್ರಾದೇಶಿಕ ಕಚೇರಿಯ ಕ್ಷೇತ್ರಿಯ ಪ್ರಬಂಧಕ ಬಿ.ಬಿ.ನಿಕ್ಕಂ, ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಕೊಂಕಣ ರೈಲ್ವೆಯ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ನಾಯಕ್ ಸ್ವಾಗತಿಸಿದರು.
ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ವಿಶ್ವ ಯೋಗ ದಿನಾಚರಣೆ
Posted On: 21 Jun 2022, 02:32 PM
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ "ವಿಶ್ವ ಯೋಗ ದಿನಾಚರಣೆ ಯನ್ನು" ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು. ಯೋಗ ಒಂದು ಸರ್ವರೋಗ ನಿವಾರಣಾ ತಂತ್ರವಾಗಿದೆ .ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಕ್ಕೆ ಸೀಮಿತಗೊಳ್ಳದೆ ಪ್ರತಿನಿತ್ಯ ಜೀವನಶೈಲಿಯಲ್ಲಿ ಜನಗಳು ಯೋಗ ಮಾಡುವ ಮೂಲಕ ನಿತ್ಯ ಆರೋಗ್ಯವಂತ ರಾಗುವರು ಎಂದು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ವಿಠ್ಠಲ್ ನಾಯ್ಕರವರು ಮಾತನಾಡಿ, ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿಸಿದರು ಮತ್ತು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಎನ್.ಸಿ.ಸಿಯ ಬಿ ' ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಕೆಡೆಟ್ ಮೋಹಿತ ಎನ್ ಸಾಲಿಯಾನ, ಆಶಿಶ್ ಪ್ರಸಾದ್ , ಧೀರಜ್ ಆಚಾರ್ಯ, ರಿಯಾನ್ ಡಿಸೋಜಾ, ವಿನೋಲ್ ನೊರೊನ್ಹಾ, ಮಂಜುನಾಥ್ ಅಮರಾವಟಿ, ಶ್ರೇಯಸ್ ವಿ ಕೋಟಿಯನ್, ದೀಪಕ್, ಸೂರಜ್,ರತನ್ ಕೋಟ್ಯಾನ್, ಶೆಟ್ಟಿ ತರುಣ್ ರಮೇಶ, ಜನಿಸಿಯಾ ನೊರೊನ್ಹಾ, ಎಲ್ರುಶಾ ಮಿಲಿನಾ ಡಿಸಾ, ರಿಯಾ ಆನ್ ನೆವಿಲ್ ಲೋಬೋ ನವ್ಯ ಆಚಾರ್ಯ, ದೀಕ್ಷಾ ಪಿ ಸಾಲಿಯಾನ್, ದೀಪ್ತಿ, ರಕ್ಷಿತಾ, ನಿವೇದಿತ ಪೂಜಾರಿ, ರಿಯಾ ಸರೀನಾ ಡಿಸೋಜಾ, ಸೆರಾ ಮಾತೆ ಮ್ಯಾಕ್ವಾನ್ ಇವರನ್ನುಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ, ವಿಶ್ವ ಯೋಗ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು. ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ಸರ್ವರನ್ನೂ ಸ್ವಾಗತಿಸಿ, ಕೆಡೆಟ್ ಶೆಟ್ಟಿಗಾರ್ ಹೇಮಶ್ರೀ ಸುದರ್ಶನ್ ಕಾರ್ಯಕ್ರಮವನ್ನು ನಿರೂಪಿಸಿದರು. ಕೆಡೆಟ್ ಸುಶ್ಮಿತಾ ಎಸ್ ಅಮೀನ್ ವಂದಿಸಿದರು
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆ
Posted On: 21 Jun 2022, 10:40 AM
ಉದ್ಯಾವರ : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಅದ ಛಾಪನ್ನು ಮೂಡಿಸಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 2022-23ರ ಸಾಲಿನ ನೂತನ ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ನಡೆದ ಮಾಸಿಕ ಸಭೆಯಲ್ಲಿ ನೂತನ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆದಿದ್ದು ಕಾರ್ಯದರ್ಶಿಯಾಗಿ ಸ್ಟೀವನ್ ಕುಲಾಸೊ ಮತ್ತು ಕೋಶಾಧಿಕಾರಿಯಾಗಿ ರೋಶನ್ ಕ್ರಾಸ್ತಾ ಆಯ್ಕೆಯಾಗಿದ್ದಾರೆ. ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜುಲೈ 2 ರಂದು ಶನಿವಾರ ಸಂಜೆ ಉದ್ಯಾವರದ ಝೇವಿಯರ್ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರಕಟಣೆ ತಿಳಿಸಿದೆ.
ಪಲಿಮಾರು : ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಎಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
Posted On: 20 Jun 2022, 07:47 PM
ಕಾಪು : ಬಿಜೆಪಿ ಶಕ್ತಿಕೇಂದ್ರ ಪಲಿಮಾರು ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಸೇವಾ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಅವರಾಲು ಶ್ರೀ ಧೂಮಾವತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಲಿಮಾರು ಶಕ್ತಿಕೇಂದ್ರ ಅಧ್ಯಕ್ಷರಾದ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು, ವಾರ್ಡ್ ಅಧ್ಯಕ್ಷರಾದ ಪ್ರಜ್ವಲ್ ನಂದಿಕೂರು, ಶಕ್ತಿಕೇಂದ್ರ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಪಂಚಾಯತ್ ಸದಸ್ಯರಾದ ಸುಮಂಗಲ ದೇವಾಡಿಗ, ಸುಜಾತ, ರಶ್ಮಿ, ಪ್ರಿಯ, ರಾಜೇಶ್ ಪೈ, ಮಹೇಶ್, ಪ್ರವೀಣ್ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯರಾದ ಪ್ರಸಾದ್ ಪಲಿಮಾರು, ಹರೀಶ್, ಪ್ರತಾಪ್, ಅರುಣ್ ಶೆಟ್ಟಿ, ಪ್ರೀತಮ್ ಶೆಟ್ಟಿ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹರಿಯಾಣದಲ್ಲಿ ಜರಗಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಗೆ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ
Posted On: 20 Jun 2022, 05:46 PM
ಕಾಪು : ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿ ಹರಿಯಾಣ ಪಟೋಡಿ ಎಂಬಲ್ಲಿ ಜೂನ್ 25 ಮತ್ತು 26ರಂದು ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಯಲ್ಲಿ ರಾಜ್ಯ ಪ್ರಮುಖ್ ಓಂ ಶ್ರೀ ವಿದ್ಯಾನಂದ ಸರಸ್ವತಿ ಜೊತೆಗೆ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಈ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕ ರಾಜ್ಯಸಮಿತಿಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಮಹತ್ವದ ಹುದ್ದೆಯನ್ನು ವಹಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಪ್ರದೀಪಚಂದ್ರ ಕುತ್ಪಾಡಿಯವರಿಗೆ ಜಾನಪದ ಪ್ರಶಸ್ತಿ
Posted On: 18 Jun 2022, 11:14 PM
ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜಕೀಯ,ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಬೇಕು : ಶಾಸಕ ಕೆ. ರಘುಪತಿ ಭಟ್
Posted On: 18 Jun 2022, 11:06 PM
ಉಡುಪಿ : ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಇಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ವ್ಯಾಪ್ತಿಯ ಪೇತ್ರಿ ಯುವಕ ಮಂಡಲ ವಠಾರದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ತಮ್ಮ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿ ಬರುತ್ತಾರೆ. ಈ ಸಮಸ್ಯೆಗಳ ಪರಿಹಾರದ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗಿಸಲು ಸಾಧ್ಯವಿದೆ. ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ದೊರೆತರೆ ಮಾತ್ರ ಸರಕಾರ ಮತ್ತು ಆಡಳಿತ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು ಎಂದರು. ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಸರ್ಕಾರವು ದೂರದ ಗ್ರಾಮೀಣ ಪ್ರದೇಶದ ಜನರ ಬಳಿ ತೆರಳಿ ಅವರ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸುವುದರಿಂದ ಜನರಿಗೆ ತುಂಬಾ ಉಪಯುಕ್ತವಾಗಿದೆ. ಜಿಲ್ಲಾಧಿಕಾರಿಗಳು ನೇರವಾಗಿ ಜನರನ್ನು ಭೇಟಿ ಮಾಡುವುದರಿಂದ ಅವರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಉಪಯುಕ್ತ ಮಾಹಿತಿ ನೀಡುವುದರಿಂದ ಜನರ ಸಮಸ್ಯೆಗಳನ್ನು ಬೇಗನೇ ಸರಿಪಡಿಸಬಹುದು ಎಂದರು. ಪರಿಶಿಷ್ಟ ವರ್ಗದ ಜನರು ಅಧಿಕವಾಗಿರುವ ಚೇರ್ಕಾಡಿ ಗ್ರಾಮದಲ್ಲಿ, ಗ್ರಾಮಸ್ಥರಿಗೆ ಅಗತ್ಯ ದಾಖಲೆ ಪತ್ರಗಳನ್ನು ಪಡೆಯಲು ತೊಂದರೆಗಳಿದ್ದು, ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಬೇಕು. ರಸ್ತೆ ಕಾಮಗಾರಿಗೆ ಸಂಬಂಧಿಸಿದ ಇರುವ ಗಡಿರೇಖೆಯ ನಿಯಮಗಳು ಅವೈಜ್ಞಾನಿಕವಾಗಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಈ ಬಗ್ಗೆ ಇರುವ ನಿಯಮಗಳ ಕುರಿತು ಅಧಿಕಾರಿಗಳು ಸಂಬAಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ನಿರ್ದೇಶನಗಳನ್ನು ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಅನುಷ್ಠಾನಗೊಳಿಸಬೇಕು ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸದರೆ ಸಾರ್ವಜನಿಕರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಹಾಗೂ ಒಳ್ಳೆಯ ಭಾವನೆ ಮೂಡಲಿದೆ. ಜನತೆಗೆ ಉತ್ತಮ ಸೇವೆ ಒದಗಿಸುವ ಬಗ್ಗೆ ಅಧಿಕಾರಿಗಳು ಸಂಕಲ್ಪ ಮಾಡಬೇಕು. ಚೇರ್ಕಾಡಿ ಭಾಗದಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಹಕ್ಕುಪತ್ರಗಳಲ್ಲಿನ ಬದಲಾವಣೆ, 11ಇ ನಕ್ಷೆ ತಿದ್ದುಪಡಿ ಹಾಗೂ ಪೌತಿ ಖಾತೆಗಳನ್ನು ಸರಿಪಡಿಸಲು, ಜನನ ಮರಣ ಪ್ರಮಾಣ ಪತ್ರ ವಿತರಿಸಲು ವಿಶೇಷ ಅಭಿಯಾನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದಿನ ಕಾರ್ಯಕ್ರಮದಲ್ಲಿಯೇ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದರು. ಗ್ರಾಮದ ಸಮಸ್ಯೆಗಳ ಬಗ್ಗೆ ಮಾತನಾಡಿದ ಗ್ರಾ,ಪಂ.ಸದಸ್ಯ ಹರೀಶ್ ಶೆಟ್ಟಿ, ರಸ್ತೆ ನಿರ್ಮಾಣದ ನಿಯಮಗಳ ಸರಳೀರಣದ ಅಗತ್ಯತೆ ಬಗ್ಗೆ ಹೇಳಿದರು. ಗ್ರಾ,.ಪಂ.ಸದಸ್ಯ ಕಮಲಾಕ್ಷ ಹೆಬ್ಬಾರ್ ಮಾತನಾಡಿ, ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿರುವ ಇಲ್ಲಿ, ಅವರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದರೂ ಹೆಚ್ಚಿನ ಗುರಿ ದೊರೆಯುತ್ತಿಲ್ಲ. ಇದರಿಂದ ಹಲವು ಮಂದಿ ಮನೆಯಿಲ್ಲದೆ ವಂಚಿತರಾಗಿದ್ದಾರೆ. ಗ್ರಾಮದಲ್ಲಿ 600 ಕ್ಕೂ ಹೆಚ್ಚು ಹೈನುಗಾರರಿದ್ದು, ಇಲ್ಲಿನ ಪಶು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಪೂರ್ಣಕಾಲಿಕ ಪಶು ವೈದ್ಯರನ್ನು ನೇಮಿಸಬೇಕು ಮತ್ತು ಕಂದಾಯ ಸೇವೆಗಳನ್ನು ಸಮರ್ಪಕವಾಗಿ ನೀಡಲು ಪೂರ್ಣಕಾಲಿಕ ಗ್ರಾಮ ಲೆಕ್ಕಿಗರನ್ನು ನೇಮಿಸಬೇಕು ಎಂದರು. ಈ ಬಗ್ಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಜಿಲ್ಲೆಯ ಇತರೆ ಪಂಚಾಯತ್ನಲ್ಲಿರುವ ಹೆಚ್ಚುವರಿ ಮನೆ ನಿರ್ಮಾಣದ ಗುರಿಯನ್ನು ಒಂದು ವಾರದ ಒಳಗೆ ಈ ಪಂಚಾಯತ್ಗೆ ವರ್ಗಾಯಿಸುವ ಕುರಿತು ಆದೇಶ ಮಾಡಿ, ಮನೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎನ್ನುವ ಮೂಲಕ ಹಲವು ವರ್ಷಗಳ ಪರಿಶಿಷ್ಟ ವರ್ಗದ ಜನರ ವಸತಿ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಹಾಲು ಕರೆಯುವ ಯಂತ್ರ, ಹಸು ಘಟಕ ನಿರ್ಮಾಣಕ್ಕೆ ಸಹಾಯಧನ, 26 ಮಂದಿಗೆ ಸಂಧ್ಯಾ ಸುರಕ್ಷಾ, 9 ಮಂದಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ಪಡಿತರ ಚೀಟಿ, ಮನೆ ಮಂಜೂರಾತಿ ಸೌಲಭ್ಯಗಳನ್ನು ಒದಗಿಸಲಾಯಿತು. ಕಂದಾಯ ಇಲಾಖೆಗೆ ಸಂಬಂಧಿಸಿದ 27, ಪಂಚಾಯತ್ ಗಳಿಗೆ ಸಂಬಂಧಿಸಿದ 15 ಅರ್ಜಿಗಳು ಸೇರಿದಂತೆ 55 ಕ್ಕೂ ಅಧಿಕ ಅರ್ಜಿಗಳ ವಿಚಾರಣೆ/ ವಿಲೇವಾರಿ ನಡೆಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ನಡೆಸಿದ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆಯ ಲಕ್ಕಿ ಡ್ರಾ ವಿಜೇತ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು ಹಾಗೂ ಡೆಂಗ್ಯೂ, ಮಲೇರಿಯಾ ಕೋವಿಡ್ ಬಗ್ಗೆ ಅರಿವು ಮೂಡಿಸಲಾಯಿತು. ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಗ್ರಾಮ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಕುಂದಾಪುರ ಡಿ.ಎಫ್.ಓ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವೀಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋವಿಂದ ಮಡಿವಾಳ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಂಕರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಇಬ್ರಾಹಿಂ ಪೂರ್, ಆಹಾರ ಇಲಾಖೆ ಉಪನಿರ್ದೇಶಕ ಮೊಹಮದ್ ಇಸಾಕ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
