Updated News From Kaup

ಕಾಮನ್ ವೆಲ್ತ್ ಕ್ರೀಡಾಕೂಟ : ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿ

Thumbnail
Posted On: 30 Jul 2022, 07:03 PM

ಕುಂದಾಪುರ : ಇಲ್ಲಿನ ಗುರುರಾಜ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಬರ್ಮಿಂಗ್ ಹ್ಯಾಂನಲ್ಲಿ ಶನಿವಾರ ನಡೆದ ಪುರುಷರ 61 ಕೆಜಿ ವಿಭಾಗದ ಫೈನಲ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ ಪೂಜಾರಿ ಒಟ್ಟಾರೆ 269 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗಳಿಸಿದರು.

ಕಾಪು : ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕಾರ್ಯಗಾರ, ಇ ಶ್ರಮ ಕಾರ್ಡ್ ವಿತರಣೆ

Thumbnail
Posted On: 30 Jul 2022, 06:55 PM

ಕಾಪು : ಇಲ್ಲಿನ ಪುರಸಭಾ ಮತ್ತು ಕಾರ್ಮಿಕ ಇಲಾಖೆಯಿಂದ ಕಾಪುನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಶಿಬಿರವು ಕಾಪು ಪುರಸಭೆ ಮತ್ತು ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಶನಿವಾರ ಕಾಪು ಜೆಸಿ ಭವನದಲ್ಲಿ ಜರಗಿತು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಪುರಸಭಾ ಅಧಿಕಾರಿ ವೆಂಕಟೇಶ ನಾವಡರವರು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಹಲವಾರು ಯೋಜನೆಗಳನ್ನು ಸರಕಾರ ತಂದಿದ್ದು, ಸಾರ್ವಜನಿಕರು ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಇದೇ ವೇಳೆ ಕಾಪುವಿನ ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ಹಾಗೂ ವಲಸಿ ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಕಾಪು ನಗರ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಉದಯಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ, ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

ಬಲಾಯಿಪಾದೆ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ; ಯುವಕನಿಗೆ ಗಾಯ

Thumbnail
Posted On: 30 Jul 2022, 06:34 PM

ಉದ್ಯಾವರ : ಕಾಪು ಠಾಣಾ ವ್ಯಾಪ್ತಿಯ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಯುವಕನೋರ್ವನಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ನಡೆದಿದೆ. ಗಾಯಗೊಂಡ ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಾಯಿಪಾದೆ ಜಂಕ್ಷನ್ ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಅಪಘಾತ ಸಂಭವಿಸುತ್ತಿದ್ದು, ಆದಷ್ಟು ಶೀಘ್ರವಾಗಿ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಹಿತಕರ ಘಟನೆ ನಡೆಯದಂತೆ ಉಡುಪಿಯಲ್ಲಿ ಪೋಲಿಸ್ ಬಂದೋಬಸ್ತ್ ; ವಾಹನಗಳ ತಪಾಸಣೆ

Thumbnail
Posted On: 29 Jul 2022, 10:42 PM

ಕಾಪು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಮತ್ತು ಸುರತ್ಕಲ್ ಫಾಝಿಲ್ ಹತ್ಯೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಅಹಿತಕರ ಘಟನೆ ನಡೆಯದಂತೆ ಉಡುಪಿಯಲ್ಲೂ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ ೬೬ ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು ೧೧ ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಿರುವ ಜಿಲ್ಲಾ ಪೋಲಿಸರು ಹೊರ ರಾಜ್ಯ, ಹೊರ ಜಿಲ್ಲೆಯ ನೋಂದಣಿ ಹೊಂದಿರುವ ಸಂಶಯಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಉದ್ಯಾವರದ ಬಲಾಯಿಪಾದೆ, ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ಮಾಡಲಾಗಿದೆ.

ಕಾಪು : ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಪತ್ರಿಕಾ ಮಾಹಿತಿ ಕಾರ್ಯಾಗಾರ

Thumbnail
Posted On: 29 Jul 2022, 09:17 PM

ಕಾಪು : ಪ್ರಸ್ತುತ ವಿದ್ಯಮಾನದಲ್ಲಿ ಪತ್ರಿಕೆಗಳ ಮಹತ್ವ ಯುವ ಸಮುದಾಯ ಅರಿಯಬೇಕಾಗಿದೆ. ಪತ್ರಿಕೆಗಳ ಮೂಲಕ ಒಂದಷ್ಟು ಜ್ಞಾನದ ಹೊನಲನ್ನು ನಮ್ಮ ಜೀವನದಲ್ಲಿ ಅಳವಡಿಸಬೇಕಾಗಿದೆ. ಹಿಂದಿನ ಹಲವಾರು ಪತ್ರಿಕೆಗಳು ಪರಿಶ್ರಮದ ಮೂಲಕ ಜನರಿಗೆ ಸುದ್ದಿಯನ್ನು ನೀಡುತ್ತಿದ್ದವು. ಇಂದು ರಾಜಕೀಯ ಮೇಲಾಟದಲ್ಲಿ ಪತ್ರಿಕಾ ವ್ಯವಸ್ಥೆ ಕುಸಿಯುತ್ತಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇದರ ಪ್ರಾಂಶುಪಾಲರಾದ ಡಾ|ಅನಿಲ್ ಕುಮಾರ್ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ನಡೆದ ಪತ್ರಿಕಾ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಂಜಿಎಂ ಕಾಲೇಜು ಉಡುಪಿ ಇದರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಕಾಮತ್ ಮಾತನಾಡಿ ಯುವ ಜನಾಂಗ ನಮ್ಮಲ್ಲಿರುವ ಅಂತರ್ಗತ ಶಕ್ತಿಯನ್ನು ಹೊರಗೆಳೆಯುವ ಪ್ರಯತ್ನ ಮಾಡಬೇಕಾಗಿದೆ. ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ ಇಂದು ವಿಪುಲ ಅವಕಾಶಗಳಿವೆ. ಸಾಮಾಜಿಕ ವ್ಯವಸ್ಥೆಗಳನ್ನು ಬದಲಾಯಿಸುವ ಶಕ್ತಿ ಸಮೂಹ ಮಾಧ್ಯಮಗಳಿಗಿವೆ. ಪತ್ರಿಕೋದ್ಯಮದ ಅಧ್ಯಯನ ಮಾಡಿದವರಿಗೆ ಬಹಳಷ್ಟು ಅವಕಾಶಗಳಿವೆ ಎಂದರು. ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮಾತನಾಡಿ ಯುವಕರು ಸುಳ್ಳು ಸುದ್ದಿಗಳನ್ನು ನಂಬದೇ ತಮ್ಮ ಜೀವನವನ್ನು ರೂಪಿಸಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿ ದೆಸೆಯಲ್ಲಿ ತಮ್ಮ ಬದುಕನ್ನು ರೂಪಿಸುವ ಕಡೆಗೆ ಗಮನ ನೀಡುವ ಮೂಲಕ ಭವಿಷ್ಯದ ಯೋಚನೆ ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುರೇಶ್ ಎರ್ಮಾಳ್ ವಹಿಸಿದ್ದರು. ಕಾಪು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕೋಶಾಧಿಕಾರಿ ಅಬ್ದುಲ್ ಹಮೀದ್, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸದಸ್ಯರು ಉಪಸ್ಥಿತರಿದ್ದರು. ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪುಂಡಲೀಕ ಮರಾಠೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪತ್ರಕರ್ತ ರಾಕೇಶ್ ಕುಂಜೂರು ನಿರೂಪಿಸಿದರು. ಸಂತೋಷ್ ನಾಯಕ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಉಪನ್ಯಾಸಕಿ ಡಾ| ಸುಚಿತ್ರ ವಂದಿಸಿದರು.

ಹೆಜಮಾಡಿ ಟೋಲ್ ಬಳಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೊಲೀಸರ ವಶ

Thumbnail
Posted On: 29 Jul 2022, 02:10 PM

ಹೆಜಮಾಡಿ : ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ನಿರ್ಬಂಧವಿದ್ದರೂ ಹೋಗಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್‌ನಲ್ಲಿ ನಿನ್ನೆ ರಾತ್ರಿ ಪಾಝಿಲ್ ಕೊಲೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇರುವುದರಿಂದ ಪೊಲೀಸರು ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದರು. ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಸ್ಥರನ್ನು ಭೇಟಿ ಮಾಡುವ ಯೋಜನೆ ಮುತಾಲಿಕ್ ಅವರಿಗಿತ್ತು. ಅವರ ಭೇಟಿಯಿಂದ ಇಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದೆಂಬ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮತ್ತು ಕಮಿಷನರೇಟ್, ಮುತಾಲಿಕ್ ರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು.

ಸುರತ್ಕಲ್ ಹತ್ಯೆ : 4 ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Thumbnail
Posted On: 28 Jul 2022, 10:19 PM

ಸುರತ್ಕಲ್ : ಬೆಳ್ಳಾರೆಯ ಹತ್ಯೆಯ ಬಳಿಕ ಇದೀಗ ಮತ್ತೊಂದು ಹತ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ. ಹತ್ಯೆಯಾದ ಯುವಕ ಪಾಝಿಲ್. ಬಟ್ಟೆ ಅಂಗಡಿಯ ಮುಂದೆ ನಿಂತ ಸಂದರ್ಭ ಹಲ್ಲೆಯಾಗಿದೆ. ಸಿಸಿ ಟಿವಿ ದೃಶ್ಯಾವಳಿಯಲ್ಲಿ 5 ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಫಾಝಿಲ್ ಮೇಲೆ ಎರಗಿದ್ದಾರೆ. ಆಸ್ಪತ್ರೆಗೆ ಸೇರಿಸಿದರೂ ಯಾವುದೇ ಪ್ರಯೋಜನವಾಗದೆ ಫಾಝಿಲ್ ಮೃತರಾಗಿದ್ದಾರೆ. ಪ್ರೀತಿಯ ವಿಷಯ ಎಂದು ಹೇಳಲಾಗುತ್ತಿದೆಯಾದರೂ, ಪೋಲಿಸರು ತನಿಖೆ ಚುರುಕುಗೊಳಿಸಿದ್ದಾರೆ. ಅಹಿತಕಾರಿ ಘಟನೆ ನಡೆಯದಂತೆ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನವರೆಗೆ ನಿಷೇಧಾಜ್ಞೆ ಜಾರಿಗೆ ಮಂಗಳೂರು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.

ಕಾಪು ಪೇಟೆಯಲ್ಲಿ ಬಸ್ಸಿನಡಿಗೆ ಬಿದ್ದ ವ್ಯಕ್ತಿ : ಕಾಲು ಮುರಿತ ; ಆಸ್ಪತ್ರೆಗೆ ದಾಖಲು

Thumbnail
Posted On: 28 Jul 2022, 09:53 PM

ಕಾಪು : ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿದ ಘಟನೆ ಜುಲೈ 28ರ ಸಂಜೆ ಕಾಪು ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಶಿರ್ವ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು ಕೂಲಿ ಕಾರ್ಮಿಕರಾಗಿದ್ದರು. ಚಕ್ರದಡಿಗೆ ಸಿಲುಕಿದ ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1 ರಿಂದ 19 ವರ್ಷದೊಳಗಿನವರಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 28 Jul 2022, 07:08 PM

ಉಡುಪಿ : ಆಗಸ್ಟ್ 10 ರಂದು ಜಿಲ್ಲೆಯ 1 ರಿಂದ 19 ವರ್ಷದೊಳಗಿನವರಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸಲು ಅಗತ್ಯ ಸಿದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಜಂತುಹುಳುಗಳು ಮಣ್ಣಿನ ಮೂಲಕ ಜನರಿಗೆ ಹರಡುವಂತಹದ್ದಾಗಿದ್ದು, ಇದರ ಸೋಂಕಿನಿಂದಾಗಿ ಮನುಷ್ಯನಲ್ಲಿ ರಕ್ತಹೀನತೆ, ಅಪೌಷ್ಠಿಕತೆ, ದುರ್ಬಲ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಉಂಟಾಗುತ್ತದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರ 19 ವರ್ಷದೊಳಗಿನವರಿಗೆ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆ ಅಲ್ಬೆಂಡೋಜೋಲ್ ಮಾತ್ರೆಯನ್ನು ವಿತರಿಸುತ್ತಿದೆ ಎಂದರು. ಜಂತಹುಳು ಭಾದೆಯಿಂದಾಗಿ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಕುಗ್ಗಿ ಕ್ರಿಯಾಶೀಲತೆಯನ್ನು ಕುಂಠಿತಗೊಳಿಸುತ್ತದೆ, ವಿಶೇಷವಾಗಿ ಮಕ್ಕಳು ಜಂತುಹುಳು ಸೋಂಕಿನಿಂದಾಗಿ ದಣಿದಂತಾಗಿ ಅಥವಾ ಅನಾರೋಗ್ಯ ಪೀಡಿತರಾಗಿ ಶಾಲೆಗೆ ಗೈರು ಆಗುವ ಸಾಧ್ಯತೆಗಳಿರುತ್ತವೆ ಎಂದರು. ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸಲು ಅಗತ್ಯ ಪ್ರಮಾಣದ ದಾಸ್ತಾನು ಇಟ್ಟುಕೊಳ್ಳುವುದರೊಂದಿಗೆ ಅಂಗನವಾಡಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಮೂಲಕ ಅವರ ಸಮ್ಮುಖದಲ್ಲಿ ಸೇವನೆ ಮಾಡಲು ಕ್ರಮ ಕೈಗೊಳ್ಳಬೇಕು, ಸಣ್ಣ ಮಕ್ಕಳಿದ್ದಲ್ಲಿ ಅವರುಗಳಿಗೆ ಮಾತ್ರೆಯನ್ನು ಪುಡಿ ಮಾಡುವುದರೊಂದಿಗೆ ಸೇವನೆಗೆ ನೀಡಬೇಕು ಎಂದರು. ಶಾಲಾ ಕಾಲೇಜುಗಳಿಂದ ಹೊರಗುಳಿದ 19 ವರ್ಷ ವಯೋಮಿತಿಯವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಗುರುತಿಸಿ ನೀಡಬೇಕು ಎಂದ ಅವರು , ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಪಡಿಸಿ ಅರ್ಹ ವ್ಯಕ್ತಿಗಳು ಇದರ ಪ್ರಯೋಜನ ಪಡೆಯುವಂತೆ ಕ್ರಮ ವಹಿಸಬೇಕು ಎಂದರು. ಒಂದೊಮ್ಮೆ ಆಗಸ್ಟ್ 10 ರಂದು ಕಾರಣಾಂತರಗಳಿಂದ ಮಾತ್ರೆ ಪಡೆಯಲು ಸಾಧ್ಯವಿಲ್ಲದಂತಹವರಿಗೆ ಆಗಸ್ಟ್ 17 ರಂದು ವಿತರಿಸಲು ಮುಂದಾಗಬೇಕು ಈ ಜಂತುಹುಳು ನಿವಾರಣಾ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಸಹಕರಿಸಬೇಕೆಂದು ಸೂಚನೆ ನೀಡಿದರು. ಆಗಸ್ಟ್ 1 ರಿಂದ 15 ರ ವರೆಗೆ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳುವುದರ ಜೊತೆಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು 5 ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ಓಆರ್ಎಸ್ ಪೊಟ್ಟಣಗಳ್ನು ನೀಡುವುದರ ಜೊತೆಗೆ ಅವುಗಳನ್ನು ತಯಾರಿಸುವ ವಿಧಾನವನ್ನೂ ಸಹ ತಿಳಿಸಲಿದ್ದಾರೆ ಎಂದರು. ಸ್ವಚ್ಛತೆಯನ್ನು ಕಾಪಾಡಿದ್ದಲ್ಲಿ ಮಾತ್ರ ಅತಿಸಾರ ಭೇಧಿಯಿಂದ ದೂರ ಉಳಿಯಲು ಸಾಧ್ಯ ಈ ಹಿನ್ನಲೆ ಶಾಲಾ ಮಕ್ಕಳಿಗೆ ಕೈಗಳನ್ನು ಸ್ವಚ್ಛಗೊಳಿಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲಾಗುವುದು ಎಂದ ಅವರು ಪ್ರತಿಯೊಬ್ಬ ಸಾರ್ವಜನಿಕರೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಹೆಚ್ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ .ರಾಮ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಪಡುಬಿದ್ರಿಯಲ್ಲಿ ಅನ್ಯಕೋಮಿನ ಯುವಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ : ಪೋಕ್ಸೋ ಪ್ರಕರಣ ದಾಖಲು

Thumbnail
Posted On: 28 Jul 2022, 06:40 PM

ಪಡುಬಿದ್ರಿ : ಅಪ್ರಾಪ್ತ ಬಾಲಕಿಯೋರ್ವಳನ್ನು ಸಾಮಾಜಿಕ ಜಾಲತಾಣದಲ್ಲಿ ಪುಸಲಾಯಿಸಿ ಆಕೆಗೆ ಲೈಂಗಿಕ ದೌರ್ಜನ್ಯ ನಡೆಸಿದ ಪಡುಬಿದ್ರಿ ಮೂಲದ ಅನ್ಯ ಧರ್ಮದ ಯುವಕನ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಹೆಜಮಾಡಿ ಆಲಡೆ ಬಳಿಯ ಪ್ಲ್ಯಾಟ್ ನಿವಾಸಿ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ಜ್ಯೂಸ್, ಬಟ್ಟೆ, ತಿಂಡಿಯ ಆಶೆ ತೋರಿಸಿ, ಹೆಜಮಾಡಿ ಮಾಜಿ ಗ್ರಾ.ಪಂ. ಸದಸ್ಯನ ಕಾರನ್ನು ಬಳಸಿಕೊಂಡು, ಆಕೆಯನ್ನು ಪಡುಬಿದ್ರಿಯ ಅಬ್ಬೇಡಿ ಪ್ರದೇಶದ ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ದೌರ್ಜನ್ಯ ನಡೆಸಿದ್ದು, ಇದೀಗ ಅಟೋ ರಿಕ್ಷಾವೊಂದರಲ್ಲಿ ಆಕೆಯನ್ನು ಕುಳ್ಳಿರಿಸಿಕೊಂಡು ಕಂಚಿನಡ್ಕ ಪ್ರದೇಶದ ಇನ್ನೋರ್ವ ಅಪ್ರಾಪ್ತ ಬಾಲಕನನ್ನು ಸೇರಿಸಿಕೊಂಡು ಹೆಜಮಾಡಿಗೆ ಹೋಗುತ್ತಿದ್ದ ವೇಳೆ ಟೋಲ್ ಸಿಬ್ಬಂದಿಗಳು ಗಮನಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೋಲಿಸರು ಅವರ ಬೆನ್ನಟ್ಟಿ ಆತ ವಾಸವಿರುವ ಪ್ಲ್ಯಾಟ್ ಗೆ ಹೋದಾಗ ಆಕೆಯನ್ನು ಆ ಕಟ್ಟಡದ ಮೂರನೇ ಮಹಡಿಯ ಮೇಲಿನ ನೀರಿನ ಟ್ಯಾಂಕ್ ಎಡೆಯಲ್ಲಿ ಬಚ್ಚಿಡಲಾಗಿತ್ತು. ಅಲ್ಲಿಂದ ಆಕೆಯನ್ನು ರಕ್ಷಿಸಿದ ಪೊಲೀಸರು ಠಾಣೆಗೆ ಕರೆತಂದು ವಿಚಾರಿಸಿದಾಗ ಸತ್ಯ ಬಯಲಾಗಿದೆ. ಈ ವಿಚಾರ ತಿಳಿಯುತ್ತಿದಂತೆ ಆಕ್ರೋಶಗೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆಯ ಬಳಿ ಸೇರಿ ಆತನನ್ನು ಬಂಧಿಸಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದಾಗ ಪೊಲೀಸರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಸ್ಥಳಕ್ಕೆ ಆಗಮಿಸಿದ ಕಾಪು ವೃತ್ತ ನಿರೀಕ್ಷಕ ಪೂವಯ್ಯ ಕಾರ್ಯಕರ್ತರನ್ನು ಸಮಾಧಾನ ಪಡಿಸಿ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ, ಕಾನೂನಿನ ಅಡ್ಡಿಯಲ್ಲಿ ಯಾವ ರೀತಿಯ ಪ್ರಕರಣ ದಾಖಲಿಸಲು ಅವಕಾಶ ಇದೆಯೋ ಅದನ್ನು ಮಾಡಿಯೇ ಮಾಡುತ್ತೇವೆ ಎಂಬುದಾಗಿ ಭರವಸೆ ವ್ಯಕ್ತ ಪಡಿಸಿದಾಗ ಕಾರ್ಯಕರ್ತರು ತೆರಳಿದ್ದಾರೆ. ಪೊಲೀಸರು ಆಕೆಯ ಮನೆಮಂದಿಯನ್ನು ಕರೆಯಿಸಿ ಬಳಿಕ ಆಕೆ ನೀಡಿದ ದೂರಿನಂತೆ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಅಪ್ರಾಪ್ತ ಬಾಲಕನೊಂದಿಗೆ ಕಾರ್ಕಳ ರಸ್ತೆಯಲ್ಲಿ ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಇಬ್ಬರನ್ನೂ ಅಟೋ ರಿಕ್ಷಾ ಸಹಿತ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಲಾದ ಕಾರನ್ನು ಕೂಡಾ ಸೀಜ್ ಮಾಡಲಾಗಿದೆ.