Updated News From Kaup
ಪಲಿಮಾರು : ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಎಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
Posted On: 20 Jun 2022, 07:47 PM
ಕಾಪು : ಬಿಜೆಪಿ ಶಕ್ತಿಕೇಂದ್ರ ಪಲಿಮಾರು ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಸೇವಾ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಅವರಾಲು ಶ್ರೀ ಧೂಮಾವತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಲಿಮಾರು ಶಕ್ತಿಕೇಂದ್ರ ಅಧ್ಯಕ್ಷರಾದ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು, ವಾರ್ಡ್ ಅಧ್ಯಕ್ಷರಾದ ಪ್ರಜ್ವಲ್ ನಂದಿಕೂರು, ಶಕ್ತಿಕೇಂದ್ರ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಪಂಚಾಯತ್ ಸದಸ್ಯರಾದ ಸುಮಂಗಲ ದೇವಾಡಿಗ, ಸುಜಾತ, ರಶ್ಮಿ, ಪ್ರಿಯ, ರಾಜೇಶ್ ಪೈ, ಮಹೇಶ್, ಪ್ರವೀಣ್ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯರಾದ ಪ್ರಸಾದ್ ಪಲಿಮಾರು, ಹರೀಶ್, ಪ್ರತಾಪ್, ಅರುಣ್ ಶೆಟ್ಟಿ, ಪ್ರೀತಮ್ ಶೆಟ್ಟಿ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹರಿಯಾಣದಲ್ಲಿ ಜರಗಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಗೆ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ
Posted On: 20 Jun 2022, 05:46 PM
ಕಾಪು : ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿ ಹರಿಯಾಣ ಪಟೋಡಿ ಎಂಬಲ್ಲಿ ಜೂನ್ 25 ಮತ್ತು 26ರಂದು ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಯಲ್ಲಿ ರಾಜ್ಯ ಪ್ರಮುಖ್ ಓಂ ಶ್ರೀ ವಿದ್ಯಾನಂದ ಸರಸ್ವತಿ ಜೊತೆಗೆ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಈ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕ ರಾಜ್ಯಸಮಿತಿಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಮಹತ್ವದ ಹುದ್ದೆಯನ್ನು ವಹಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಪ್ರದೀಪಚಂದ್ರ ಕುತ್ಪಾಡಿಯವರಿಗೆ ಜಾನಪದ ಪ್ರಶಸ್ತಿ
Posted On: 18 Jun 2022, 11:14 PM
ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜಕೀಯ,ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಬೇಕು : ಶಾಸಕ ಕೆ. ರಘುಪತಿ ಭಟ್
Posted On: 18 Jun 2022, 11:06 PM
ಉಡುಪಿ : ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಇಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ವ್ಯಾಪ್ತಿಯ ಪೇತ್ರಿ ಯುವಕ ಮಂಡಲ ವಠಾರದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ತಮ್ಮ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿ ಬರುತ್ತಾರೆ. ಈ ಸಮಸ್ಯೆಗಳ ಪರಿಹಾರದ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗಿಸಲು ಸಾಧ್ಯವಿದೆ. ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ದೊರೆತರೆ ಮಾತ್ರ ಸರಕಾರ ಮತ್ತು ಆಡಳಿತ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು ಎಂದರು. ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಸರ್ಕಾರವು ದೂರದ ಗ್ರಾಮೀಣ ಪ್ರದೇಶದ ಜನರ ಬಳಿ ತೆರಳಿ ಅವರ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸುವುದರಿಂದ ಜನರಿಗೆ ತುಂಬಾ ಉಪಯುಕ್ತವಾಗಿದೆ. ಜಿಲ್ಲಾಧಿಕಾರಿಗಳು ನೇರವಾಗಿ ಜನರನ್ನು ಭೇಟಿ ಮಾಡುವುದರಿಂದ ಅವರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಉಪಯುಕ್ತ ಮಾಹಿತಿ ನೀಡುವುದರಿಂದ ಜನರ ಸಮಸ್ಯೆಗಳನ್ನು ಬೇಗನೇ ಸರಿಪಡಿಸಬಹುದು ಎಂದರು. ಪರಿಶಿಷ್ಟ ವರ್ಗದ ಜನರು ಅಧಿಕವಾಗಿರುವ ಚೇರ್ಕಾಡಿ ಗ್ರಾಮದಲ್ಲಿ, ಗ್ರಾಮಸ್ಥರಿಗೆ ಅಗತ್ಯ ದಾಖಲೆ ಪತ್ರಗಳನ್ನು ಪಡೆಯಲು ತೊಂದರೆಗಳಿದ್ದು, ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಬೇಕು. ರಸ್ತೆ ಕಾಮಗಾರಿಗೆ ಸಂಬಂಧಿಸಿದ ಇರುವ ಗಡಿರೇಖೆಯ ನಿಯಮಗಳು ಅವೈಜ್ಞಾನಿಕವಾಗಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಈ ಬಗ್ಗೆ ಇರುವ ನಿಯಮಗಳ ಕುರಿತು ಅಧಿಕಾರಿಗಳು ಸಂಬAಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ನಿರ್ದೇಶನಗಳನ್ನು ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಅನುಷ್ಠಾನಗೊಳಿಸಬೇಕು ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸದರೆ ಸಾರ್ವಜನಿಕರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಹಾಗೂ ಒಳ್ಳೆಯ ಭಾವನೆ ಮೂಡಲಿದೆ. ಜನತೆಗೆ ಉತ್ತಮ ಸೇವೆ ಒದಗಿಸುವ ಬಗ್ಗೆ ಅಧಿಕಾರಿಗಳು ಸಂಕಲ್ಪ ಮಾಡಬೇಕು. ಚೇರ್ಕಾಡಿ ಭಾಗದಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಹಕ್ಕುಪತ್ರಗಳಲ್ಲಿನ ಬದಲಾವಣೆ, 11ಇ ನಕ್ಷೆ ತಿದ್ದುಪಡಿ ಹಾಗೂ ಪೌತಿ ಖಾತೆಗಳನ್ನು ಸರಿಪಡಿಸಲು, ಜನನ ಮರಣ ಪ್ರಮಾಣ ಪತ್ರ ವಿತರಿಸಲು ವಿಶೇಷ ಅಭಿಯಾನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದಿನ ಕಾರ್ಯಕ್ರಮದಲ್ಲಿಯೇ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದರು. ಗ್ರಾಮದ ಸಮಸ್ಯೆಗಳ ಬಗ್ಗೆ ಮಾತನಾಡಿದ ಗ್ರಾ,ಪಂ.ಸದಸ್ಯ ಹರೀಶ್ ಶೆಟ್ಟಿ, ರಸ್ತೆ ನಿರ್ಮಾಣದ ನಿಯಮಗಳ ಸರಳೀರಣದ ಅಗತ್ಯತೆ ಬಗ್ಗೆ ಹೇಳಿದರು. ಗ್ರಾ,.ಪಂ.ಸದಸ್ಯ ಕಮಲಾಕ್ಷ ಹೆಬ್ಬಾರ್ ಮಾತನಾಡಿ, ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿರುವ ಇಲ್ಲಿ, ಅವರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದರೂ ಹೆಚ್ಚಿನ ಗುರಿ ದೊರೆಯುತ್ತಿಲ್ಲ. ಇದರಿಂದ ಹಲವು ಮಂದಿ ಮನೆಯಿಲ್ಲದೆ ವಂಚಿತರಾಗಿದ್ದಾರೆ. ಗ್ರಾಮದಲ್ಲಿ 600 ಕ್ಕೂ ಹೆಚ್ಚು ಹೈನುಗಾರರಿದ್ದು, ಇಲ್ಲಿನ ಪಶು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಪೂರ್ಣಕಾಲಿಕ ಪಶು ವೈದ್ಯರನ್ನು ನೇಮಿಸಬೇಕು ಮತ್ತು ಕಂದಾಯ ಸೇವೆಗಳನ್ನು ಸಮರ್ಪಕವಾಗಿ ನೀಡಲು ಪೂರ್ಣಕಾಲಿಕ ಗ್ರಾಮ ಲೆಕ್ಕಿಗರನ್ನು ನೇಮಿಸಬೇಕು ಎಂದರು. ಈ ಬಗ್ಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಜಿಲ್ಲೆಯ ಇತರೆ ಪಂಚಾಯತ್ನಲ್ಲಿರುವ ಹೆಚ್ಚುವರಿ ಮನೆ ನಿರ್ಮಾಣದ ಗುರಿಯನ್ನು ಒಂದು ವಾರದ ಒಳಗೆ ಈ ಪಂಚಾಯತ್ಗೆ ವರ್ಗಾಯಿಸುವ ಕುರಿತು ಆದೇಶ ಮಾಡಿ, ಮನೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎನ್ನುವ ಮೂಲಕ ಹಲವು ವರ್ಷಗಳ ಪರಿಶಿಷ್ಟ ವರ್ಗದ ಜನರ ವಸತಿ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಹಾಲು ಕರೆಯುವ ಯಂತ್ರ, ಹಸು ಘಟಕ ನಿರ್ಮಾಣಕ್ಕೆ ಸಹಾಯಧನ, 26 ಮಂದಿಗೆ ಸಂಧ್ಯಾ ಸುರಕ್ಷಾ, 9 ಮಂದಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ಪಡಿತರ ಚೀಟಿ, ಮನೆ ಮಂಜೂರಾತಿ ಸೌಲಭ್ಯಗಳನ್ನು ಒದಗಿಸಲಾಯಿತು. ಕಂದಾಯ ಇಲಾಖೆಗೆ ಸಂಬಂಧಿಸಿದ 27, ಪಂಚಾಯತ್ ಗಳಿಗೆ ಸಂಬಂಧಿಸಿದ 15 ಅರ್ಜಿಗಳು ಸೇರಿದಂತೆ 55 ಕ್ಕೂ ಅಧಿಕ ಅರ್ಜಿಗಳ ವಿಚಾರಣೆ/ ವಿಲೇವಾರಿ ನಡೆಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ನಡೆಸಿದ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆಯ ಲಕ್ಕಿ ಡ್ರಾ ವಿಜೇತ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು ಹಾಗೂ ಡೆಂಗ್ಯೂ, ಮಲೇರಿಯಾ ಕೋವಿಡ್ ಬಗ್ಗೆ ಅರಿವು ಮೂಡಿಸಲಾಯಿತು. ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಗ್ರಾಮ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಕುಂದಾಪುರ ಡಿ.ಎಫ್.ಓ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವೀಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋವಿಂದ ಮಡಿವಾಳ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಂಕರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಇಬ್ರಾಹಿಂ ಪೂರ್, ಆಹಾರ ಇಲಾಖೆ ಉಪನಿರ್ದೇಶಕ ಮೊಹಮದ್ ಇಸಾಕ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು : ಶಾಸಕ ಲಾಲಾಜಿ ಆರ್ ಮೆಂಡನ್
Posted On: 18 Jun 2022, 06:14 PM
ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಈಗಾಗಲೇ 12 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಅನುದಾನವನ್ನು ನೀಡಲಾಗಿದೆ ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಮುಖ್ಯ ರಸ್ತೆಗಳನ್ನು ಮೀನುಗಾರಿಕಾ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿದ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೆಜಮಾಡಿ ಗ್ರಾಮ ಪಂಚಾಯತ್ಗೆ ಜೈ ಹಿಂದ್ ಪ್ರೈವೇಟ್ ಲಿ. ಕಂಪೆನಿಯು ತನ್ನ ಸಿಎಸ್ ಆರ್ ನಿಧಿಯಿಂದ ಕೊಡಮಾಡಲ್ಪಟ್ಟ ಘನ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಚಾಲನೆಯನ್ನು ನೀಡಿದರು. ಇತ್ತೀಚೆಗೆ ಮೀನುಗಾರಿಕೆಯ ಸಂದರ್ಭ ಮೃತಪಟ್ಟ ಸಂತೋಷ್ ಕುಟುಂಬಸ್ಥರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ರೂ.ಗಳ ಪರಿಹಾರ ಧನದ ಚೆಕ್, ಪಂಚಾಯತ್ ವ್ಯಾಪ್ತಿಯ 94ಸಿ ಹಕ್ಕುಪತ್ರ, ಬಸವ ವಸತಿ ಹಾಗೂ ಅಂಬೇಡ್ಕರ್ ನಿಗಮದ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ಮಂಜೂರಾತಿ ಪತ್ರವನ್ನು, ಪ್ರಾಕೃತಿಕ ವಿಕೋಪ ನಿಧಿ ಚೆಕ್, ವೃದ್ಧಾಪ್ಯ ವೇತನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗಿರೀಶ್, ಪಡುಬಿದ್ರಿ ಪೊಲೀಸ್ ಉಪನಿರೀಕ್ಷಕ ಪುರುಷೋತ್ತಮ, ಜಲ ಜೀವನ್ ಮಿಷನ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್ ಶೇಟ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ್ ಖಾರ್ವಿ, ಜಿಲ್ಲಾಪಂಚಾಯತ್ ಸಹಾಯಕ ಇಂಜಿನಿಯರ್ ಸುನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮತಿ, ತೋಟಗಾರಿಕೆ ಇಲಾಖೆ ಅಧಿಕಾರಿ ಅಮಿತ್ ಸಿಂಪಿ, ಕೃಷಿ ಇಲಾಖೆ ಅಧಿಕಾರಿ ಶೇಖರ್, ಪಡುಬಿದ್ರಿ ಎಸ್ ಸಿ ಝಡ್ ಜನರಲ್ ಮೆನೇಜರ್ ಅಶೋಕ್ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಕಾರ್ತಿಕ್
Posted On: 18 Jun 2022, 05:16 PM
ಉಡುಪಿ : ಇಲ್ಲಿನ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 584 (97.33)ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಕಾರ್ತಿಕ್ ಅವರ ತಾಯಿ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗಿದೆ. ಕ್ಯಾನ್ಸರ್ ಪೀಡಿತ ತಾಯಿಯ ನೋವು ಒಂದೆಡೆಯಾದರೆ, ಹಣಕಾಸಿನ ತೀವ್ರ ತೊಂದರೆಯ ನಡುವೆಯೂ ಶ್ರೇಷ್ಠ ಸಾಧನೆ ಮಾಡಿರುವುದು ಗಮನಾರ್ಹ.
ಉಡುಪಿ : ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ
Posted On: 18 Jun 2022, 05:10 PM
ಉಡುಪಿ : ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು ಅವರು ಇಂದು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು. ರೈತರು ತಾವು ಬೆಳೆದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಟವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ. ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು. ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು. ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪವು ಲಭ್ಯವಿತ್ತು. ಕಾರ್ಯಕ್ರಮದಲ್ಲಿ ಸಿಇಓ ಪ್ರಸನ್ನ ಎಚ್. ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ ಅದರ ಭಾಗವಾಗಿ ಹಲಸು ಮೇಳವು ಒಂದಾಗಿದೆ. ಸಾರ್ವಜನಿಕರು ತಮಗೆ ಇಷ್ಟವಾದ ನಮೂನೆಯ ಹಲಸನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ. ಈ ಮೇಳವು 2 ದಿನಗಳವರೆಗೆ ನಡೆಯಲಿದ್ದು, ರೈತರು ತಾವು ಬೆಳೆದ ಹಲಸನ್ನು ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು . ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಮತ್ತಿರರರು ಉಪಸ್ಥಿತರಿದ್ದರು.
ಕುತ್ಯಾರು : ಅಸೆಟ್ ಗೆ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು
Posted On: 18 Jun 2022, 04:54 PM
ಕಾಪು : ಪಡುಕುತ್ಯಾರುವಿನ ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಸೆಟ್ ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾಯಾಧ್ಯಕ್ಷರಾಗಿ ಪೃಥ್ವೀರಾಜ್ ಆಚಾರ್ಯ ಕಿನ್ನಿಗೋಳಿ, ಪ್ರಧಾನ ಕಾಯದರ್ಶಿಯಾಗಿ ಕೆ.ಜೆ. ಗುರುರಾಜ್ ಆಚಾರ್ಯ ಮಂಗಳೂರು, ಕೋಶಾಧಿಕಾರಿಯಾಗಿ ಬಿ. ಸೂರ್ಯ ಕುಮಾರ್ ಹಳೆಯಂಗಡಿ, ಉಪಾಧ್ಯಕ್ಷರಾಗಿ ವಿವೇಕ್ ಆಚಾರ್ಯ ಮಂಚಕಲ್, ಎನ್. ಹರಿಶ್ಚಂದ್ರ ಆಚಾರ್ಯ ಬೆಂಗಳೂರು, ಕಾರ್ಯದರ್ಶಿಗಳಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಕೆ.ರಾಘವೇಂದ್ರ ಆಚಾರ್ಯ ಉಡುಪಿ ಆಯ್ಕೆಯಾದರು. ವಿಶ್ವಸ್ಥ ಮಂಡಳಿಯ ವಿಶ್ವಸ್ಥರಾಗಿ ತ್ರಾಸಿ ಸುಧಾಕರ ಆಚಾರ್ಯ, ನಾಗರಾಜ ಆಚಾರ್ಯ ಕಾಡಬೆಟ್ಟು, ಜಿ.ಟಿ ಆಚಾರ್ಯ ಮುಂಬಯಿ, ರಾಜಗೋಪಾಲ ಆಚಾರ್ಯ ಮಂಗಳೂರು, ಆನಂದ ಆಚಾರ್ಯ ಮದ್ಯ, ಶ್ರೀಧರ ಆಚಾರ್ಯ ಕಟಪಾಡಿ, ಜಯಪ್ರಕಾಶ ಆಚಾರ್ಯ ಕುಡ್ಚಿಲ, ಉಮೇಶ ಆಚಾರ್ಯ ಕಡೇಶ್ವಾಲ್ಯ, ವಿಶ್ವನಾಥ ಆಚಾರ್ಯ ಉಚ್ಚಿಲ, ಹರೀಶ್ ಆಚಾರ್ಯ ಕಾರ್ಕಳ ಆಯ್ಕೆಗೊಂಡರು. ಖಾಯಂ ಆಹ್ವಾನಿತರನ್ನು, ಸಲಹಾ ಮಂಡಳಿಯ ಸದಸ್ಯರನ್ನೂ ಇದೇ ವೇಳೆ ಆಯ್ಕೆ ಮಾಡಲಾಯಿತು. ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ವೆಂಕಟರಮಣ ಆಚಾರ್ಯ, ಬಿ.ಜಿ.ರಮೇಶ್ ಆಚಾರ್ಯ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ ಅವರು ನೂತನ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ, ಬೆಳುವಾಯಿ, ಸುಂದರ ಆಚಾರ್ಯ ಬೆಳುವಾಯಿ, ಜಯಕರ ಆಚಾರ್ಯ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಸ್ವಾಗತಿಸಿ, ಅಸೆಟ್ ಪ್ರಧಾನ ಕಾರ್ಯದರ್ಶಿ ಕೆ.ಜೆ.ಗುರುರಾಜ ಆಚಾರ್ಯ ಮಂಗಳೂರು ವಂದಿಸಿದರು.
ಕಾಪು : ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮ ಸಂಪನ್ನ
Posted On: 18 Jun 2022, 04:40 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮಗಳು ಜೂನ್ 17ರಂದು ಸಂಪನ್ನಗೊಂಡಿತು. ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೊರಂಗ್ರಪಾಡಿ ದೊಡ್ಡಮನೆ ವಾಸುದೇವ ಶೆಟ್ಟಿ ಕಾಪು , ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ರಾಜಶೇಖರ ಕೋಟ್ಯಾನ್, ಅನಿಲ್ ಬಲ್ಲಾಳ್ ಬೀಡು, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಮುಂಬೈ ಸಮಿತಿಯ ಉಪಾಧ್ಯಕ್ಷ ಉದ್ಯಮಿ ಕೃಷ್ಣ ವೈ. ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ , ಮಾರಿಯಮ್ಮ ದರ್ಶನ ಪಾತ್ರಿ ಗುರುಮೂರ್ತಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಎಸ್. ಶೆಟ್ಟಿ , ಗಂಗಾಧರ ಸುವರ್ಣ, ಕಟ್ಟಡ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಪುರಸಭಾ ವಾರ್ಡ್ಸಂ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಲೀಲಾಧರ ಶೆಟ್ಟಿ, ಶಿಸ್ತು ಪಾಲನ ಸಮಿತಿಯ ಪ್ರಧಾನ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಮತ್ತು ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಮೂವತ್ತನೇ ಮನೆ ಹಸ್ತಾಂತರ
Posted On: 17 Jun 2022, 08:08 PM
ಉಡುಪಿ : ಸಂಸ್ಥೆಯ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಾದೂರಿನ ಮಲ್ಲಿಕಾ ಶೆಟ್ಟಿ (ದ್ವಿತೀಯ ಪಿ.ಯು.ಸಿ) ಹಾಗೂ ನರ್ಸಿಂಗ್ ವಿದ್ಯಾರ್ಥಿನಿ ರಕ್ಷಿತಾ ಶೆಟ್ಟಿ ಇವರಿಗೆ ಮಂಗಳೂರಿನ ಉದ್ಯಮಿ ಪಿ. ಗೋಕುಲನಾಥ ಪ್ರಭುರವರು ತಮ್ಮ ಮಾತೃಶ್ರೀ ಪದ್ಮಾವತಿ ವೆಂಕಟ್ರಾಯ ಪ್ರಭು ಅವರ ಜನ್ಮಶತಾಬ್ದದ ಶುಭಾವಸರದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಪದ್ಮಾವತಿ’ಯನ್ನು ನಿವೇದಿತಾ ಜಿ. ಪ್ರಭು ಮತ್ತು ಪಿ. ಗೋಕುಲನಾಥ ಪ್ರಭು ಅವರು ಜೂನ್ 16 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ ಸಂತೋಷ ನೀಡಿದೆ. ಈ ಮನೆಯಲ್ಲಿ ಎಲ್ಲರೂ ಸುಖ ಸಂತೋಷದಿಂದ ಬಾಳುವಂತಾಗಲಿ ಎಂದು ಶುಭಕೋರಿದರು. ಡಾ. ಜೆ.ಎನ್. ಭಟ್ ಮತ್ತು ಶಾಂತಿ ಎನ್. ಭಟ್ ಶುಭಹಾರೈಸಿದರು. ಮನೆ ನಿರ್ಮಿಸಿದ ಇಂಜಿನಿಯರ್ ಕಾಪು ಲಕ್ಷ್ಮೀಶ ತಂತ್ರಿಯವರನ್ನು ಗೌರವಿಸಲಾಯಿತು. ಗೋಕುಲನಾಥ್ ಪ್ರಭು ಅವರ ಪುತ್ರ ಅವಿನಾಶ್ ಪ್ರಭು, ಯು. ವಿಶ್ವನಾಥ ಶೆಣೈ, ವಿನಾಯಕ್ ಬಾಳಿಗಾ, ಲೀಲಾಧರ ಶೆಟ್ಟಿ ಕಾಪು, ಅನಂತ ಮೂಡಿತ್ತಾಯ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿಗಳಾದ ಮನೋಹರ ಕೆ., ಪ್ರೊ. ಕೆ. ಸದಾಶಿವ ರಾವ್, ಎಚ್. ಎನ್. ಶೃಂಗೇಶ್ವರ, ಭುವನಪ್ರಸಾದ್ ಹೆಗ್ಡೆ, ಎ. ನಟರಾಜ ಉಪಾಧ್ಯ, ವಿಜಯ್ ಕುಮಾರ್ ಮುದ್ರಾಡಿ, ಕೆ. ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ಅಶೋಕ್ ಎಂ., ಆನಂದ ಶೆಟ್ಟಿ, ಮಂಜುನಾಥ, ನಾಗರಾಜ ಹೆಗಡೆ ಹಾಗೂ ಇನ್ನಂಜೆ ಪ್ರೌಢಶಾಲೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಇದು ಸಂಸ್ಥೆಯು ದಾನಿಗಳ ನೆರವಿನಿಂದ ನಿರ್ಮಿಸಿಕೊಟ್ಟ 30ನೇ ಮನೆಯಾಗಿದ್ದು, ಈ ತಿಂಗಳಿನಲ್ಲಿ ಇನ್ನೂ 5 ಮನೆಗಳು ಉದ್ಘಾಟನೆಗೊಳ್ಳಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸುತ್ತಾ ನುಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದೊಗೆ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ನಾರಾಯಣ ಎಂ. ಹೆಗಡೆ ವಂದಿಸಿದರು.
