Updated News From Kaup

ಜೂನ್ 20 : ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳ ಉದ್ಘಾಟನೆ

Thumbnail
Posted On: 17 Jun 2022, 07:56 PM

ಕಾಪು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯು ಅತ್ಯಂತ ಮಹತ್ವದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಉದ್ದೇಶ . ಈ ನಿಟ್ಟಿನಲ್ಲಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರುವಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳನ್ನು ರಚಿಸಿದ್ದು ಈ ಕ್ಲಬ್ ಗಳ ಉದ್ಘಾಟನಾ ಸಮಾರಂಭವು ದಿನಾಂಕ ಜೂನ್ 20 ಸೋಮವಾರದಂದು ಮಧ್ಯಾಹ್ನ 2-30 ಕ್ಕೆ ಶಾಲಾ ಸಭಾಭವನದಲ್ಲಿ ನಡೆಯಲಿದೆ. ಕಾಪು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು, ನಿವೃತ್ತ ಶಿಕ್ಷಕರು, ಪತ್ರಕರ್ತರು ಹಾಗೂ ಖ್ಯಾತ ರೊಟೇರಿಯನ್ ಆದ ಪುಂಡಲೀಕ ಮರಾಠೆ ಇವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು, ಕಾರ್ಯಾಧ್ಯಕ್ಷರಾದ ಪ್ರಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಪಡುಬಿದ್ರಿ : ಮಟ್ಕಾ ಜುಗಾರಿ ಚೀಟಿ ಬರೆಯುತ್ತಿದ್ದ ವ್ಯಕ್ತಿ ಬಂಧನ

Thumbnail
Posted On: 16 Jun 2022, 10:52 PM

ಪಡುಬಿದ್ರಿ :  ಇಲ್ಲಿನ ಅಪೋಲೋ ಮೆಡಿಕಲ್‌‌ನ ಹಿಂಭಾಗದ ಓಣಿಯಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ಜೂ.15 ರಂದು ಬಂಧಿಸಲಾಗಿದೆ. ಬಂಧಿತನ ಕಟಪಾಡಿ ಪಳ್ಳಿಗುಡ್ಡೆ, ಕೋಟೆ ಗ್ರಾಮದ ಅಬ್ದುಲ್ ರಜಾಕ್ (37)ನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಿಸಿದಾಗ ಕಿರಣ್ ಕಟಪಾಡಿ ಎಂಬಾತನ ಸೂಚನೆಯಂತೆ  ಜನರನ್ನು ಸೇರಿಸಿ ಚೀಟಿ ಬರೆದು ಕೊಡುತ್ತಿದ್ದು, ಸಂಗ್ರಹಿಸಿದ ಹಣವನ್ನು ಕಿರಣ್ ಗೆ ನೀಡುತ್ತಿದ್ದು ಬಹುಮಾನ ವಿಜೇತರಿಗೆ ಅಬ್ದುಲ್ ರಜಾಕ್ ಮುಖಾಂತರ ಹಣವನ್ನು  ನೀಡುತ್ತಿದ್ದ ಎನ್ನಲಾಗಿದೆ. ಅಬ್ದುಲ್ ರಜಾಕ್‌‌ನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,830/- ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲಾ ಕಚೇರಿಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡ ಅನುಷ್ಠಾನ ಆಗಬೇಕು : ಡಾ.ಟಿ.ಎಸ್.ನಾಗಾಭರಣ

Thumbnail
Posted On: 16 Jun 2022, 06:02 PM

ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸುವುವಾಗ ಇಲಾಖೆಗಳ ಮಧ್ಯೆ ಆಗುವ ಪ್ರತಿಯೊಂದು ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಒಂದೊಮ್ಮೆ ಅಂಗ್ಲಭಾಷೆಯಲ್ಲಿ ಇದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ಎಚ್ಚರಿಸುವ ಕೆಲಸವನ್ನು ಮಗದೊಂದು ಇಲಾಖೆ ಮಾಡುವುದರೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಸಾರ್ವಜನಿಕರು ತಮ್ಮ ದೈನಂದಿನ ಆರ್ಥಿಕ ಚಟುವಟಿಕೆಗಳನ್ನು ನಡೆಸಿ, ಅಗತ್ಯ ಸೇವೆಗಳನ್ನು ಪಡೆಯಲು ಬ್ಯಾಂಕ್ಗಳಿಗೆ ಭೇಟಿ ನೀಡಿದಾಗ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಒಂದೊಮ್ಮೆ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಕನ್ನಡದ ಭಾಷಾ ಸಮಸ್ಯೆ ಇದ್ದಲ್ಲಿ ಅವರಿಗೆ ಆಗಿಂದಾಗ್ಗೆ ಕನ್ನಡ ಕಲಿಕೆ ತರಬೇತಿಯನ್ನು ಕೊಡುವ ಕಾರ್ಯ ಅಗ್ರಗಣ್ಯ ಬ್ಯಾಂಕ್ಗಳಿಂದ ಆಗಬೇಕು ಎಂದು ಸೂಚನೆ ನೀಡಿದರು. ಪ್ರಸ್ತುತ ಜಿಲ್ಲೆಯ ಬ್ಯಾಂಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಹಾಗೂ ಕನ್ನಡೇತರ ಸಿಬ್ಬಂದಿಗಳ ಬಗ್ಗೆ ಹಾಗೂ ಅವರುಗಳಿಗೆ ಕನ್ನಡ ಓದಲು, ಬರೆಯಲು ಹಾಗೂ ಮಾತನಾಡುವ ಬಗ್ಗೆ ವಿವರಗಳನ್ನು ಪ್ರಾಧಿಕಾರಕ್ಕೆ ನೀಡಬೇಕು ಎಂದ ಅವರು, ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ಕನ್ನಡಿಗರೇ ಬ್ಯಾಂಕ್ ಉದ್ಯೋಗದಲ್ಲಿ ಸೇರುವಂತೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಟಿಎಂ ಯಂತ್ರದ ಡಿಸ್ ಪ್ಲೇ ಗಳಲ್ಲಿ ಕನ್ನಡದ ಬಳಕೆ ಕಡ್ಡಾಯವಾಗಿ ಇರುವಂತೆ ಎಚ್ಚರವಹಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಅಪಾಯದ ಎಚ್ಚರಿಕ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಿದ್ದಲ್ಲಿ ಸ್ಥಳಿಯ ಜನರಿಗೆ ಅದರ ಎಚ್ಚರಿಕೆ ಗೊತ್ತಾಗಿ ಅಪಘಾತ ಸಂಭವಿಸುವುದು ತಪ್ಪುತ್ತದೆ. ಕೈಗಾರಿಕೆಗಳಲ್ಲಿ ಕೌಶಲ್ಯ ಹಾಗೂ ಅಕೌಶಲ್ಯ ಕೆಲಸಗಳಿಗೆ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದ ಅವರು ಪ್ರತಿಯೊಂದು ಉದ್ಯೋಗ ಘಟಕಗಳಲ್ಲಿ ಕನ್ನಡ ಸೆಲ್ಗಳನ್ನು ತೆರೆಯಬೇಕು ಅದರಲ್ಲಿ ಸಿಬ್ಬಂದಿ ವರ್ಗದವರು ಹೆಚ್ಚು ಇರುವುದು ಅಗತ್ಯ ಎಂದರು. ಗೊಬ್ಬರ, ಕೀಟನಾಶಕ ಮತ್ತು ಔಷಧಿಗಳ ಮೇಲೆ ಅವುಗಳ ಬಳಕೆ ಹಾಗೂ ಅದರಲ್ಲಿನ ಅಂಶಗಳ ಕುರಿತು ಕನ್ನಡದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಒಂದೊಮ್ಮೆ ನಮೂದಿಸದೇ ಇರುವುದು ಕಂಡು ಬಂದಲ್ಲಿ ಅಂತಹ ಕಂಪೆನಿಗಳಿಗೆ ಪತ್ರ ಬರೆದು ನಮೂದಿಸುವಂತೆ ಎಚ್ಚರಿಸಬೇಕು. ವೈದ್ಯರುಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಪರೀಕ್ಷಾ ವರದಿ ಅಥವಾ ರೋಗದ ಬಗ್ಗೆ ರೋಗಿಗಳಿಗೆ ಅಥವಾ ಅವರ ಸಂಬಂಧಿಕರಿಗೆ ಕನ್ನಡದಲ್ಲಿಯೇ ಸ್ಪಷ್ಟವಾಗಿ ಅರ್ಥವಾಗುವಂತೆ ತಿಳಿಸಬೇಕು. ಆರೋಗ್ಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ವರದಿಗಳನ್ನು ಕಳುಹಿಸುವಾಗ ಅವು ಕನ್ನಡದಲ್ಲಿಯೇ ಇರಬೇಕು ಎಂದರು. ಸಾಮಾನ್ಯವಾಗಿ ಎಲ್ಲಾ ಆಂಗ್ಲಪದಗಳಿಗೆ ಪರ್ಯಾಯವಾಗಿ ಕನ್ನಡ ಬಳಕೆಗೆ ಅನುಕೂಲವಾಗುವಂತೆ ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ 86 ವಿವಿಧ ಶಬ್ಧಕೋಶಗಳು ಲಭ್ಯವಿದ್ದು, ಇವುಗಳ ಸದ್ಬಳಕೆ ಮಾಡಿಕೊಳ್ಳಬಹುದು ಎಂದ ಅವರು, ಆಡಳಿತದಲ್ಲಿ ಮಿಂಚಂಚೆಗಳನ್ನು ಕಳುಹಿಸುವಾಗ ವಿಳಾಸಗಳನ್ನು ಕನ್ನಡದ ಪದ ಬಳಕೆ ಪ್ರಾರಂಭವಾಗಿದ್ದು, ಇದರ ಬಳಕೆಯಾಗಬೇಕು ಎಂದರು. ಕನ್ನಡ ಕಲಿಕಾ ಅಧಿನಿಯಮ 2017 ರ ಅನ್ವಯ ಎಲ್ಲಾ ಶಾಲೆಗಳು, ಮದರಸಗಳೂ ಸೇರಿದಂತೆ, ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಒಂದು ಭಾಷೆಯಾಗಿ ಇರಬೇಕು. ಸಿ.ಬಿ.ಎಸ್.ಸಿ. ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 9 ರ ವರೆಗೆ ಸ್ಥಳೀಯ ಭಾಷೆಯನ್ನು ಒಂದು ವಿಷಯವಾಗಿ ಕಲಿಸಿದರೂ 10 ನೇ ತರಗತಿಯಲ್ಲಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಅಂಕಗಳನ್ನು ಗಣನೆಗೆ ತೆಗದುಕೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಜಾಹೀರಾತು ಫಲಕಗಳಲ್ಲಿ ಕನ್ನಡದ ಬಳಕೆ ಅಲ್ಪ ಪ್ರಮಾಣದಲ್ಲಿ ಇರುವಂತಹ ಪ್ರಕಟಣೆಗಳಿಗೆ ಕಡಿವಾಣ ಹಾಕಬೇಕು. ಅಂಗಡಿ ನಾಮಫಲಕಗಳು ಕನ್ನಡದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು. ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮತ್ತಿತರ ಟೆಂಡರ್ ಕರೆಯುವಾಗ ಅರ್ಜಿ ನಮೂನೆಗಳು ಪ್ರತಿಯೊಂದು ಕನ್ನಡದಲ್ಲಿಯೇ ಇರಬೇಕು. ಉದ್ಯಾನವನಗಳು, ಸರಕಾರಿ ಕಟ್ಟಡಗಳಲ್ಲಿ ಕನ್ನಡದ ಕವಿಗಳು ಸಮಾಜಕ್ಕೆ ನೀಡಿರುವ ಹಿತ ಸಂದೇಶಗಳನ್ನು ಪ್ರಚಾರಪಡಿಸಬೇಕು. ಕನ್ನಡ ಎಲ್ಲೆಡೆ ಕಾಣಬೇಕು, ಕನ್ನಡ ಎಲ್ಲೆಡೆ ಕೇಳಬೇಕು ಎಂದ ಅವರು ಉಡುಪಿ ಜಿಲ್ಲೆಯು ಕನ್ನಡ ಅನುಷ್ಠಾನಗೊಳಿಸುವಲ್ಲಿ ಮಾದರಿ ಜಿಲ್ಲೆಯಾಗಬೇಕು ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯನ್ನು ಎಲ್ಲರ ಸಹಭಾಗಿತ್ವದೊಂದಿಗೆ ಕನ್ನಡಮಯವಾಗಿಸಬಹುದಾಗಿದ್ದು, ಇದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಅವರು ಇಂದಿನ ಸಭೆಯಲ್ಲಿ ನೀಡಿರುವ ಸಲಹೆ ಹಾಗೂ ಮಾರ್ಗದರ್ಶನಗಳು ಕನ್ನಡ ಅನುಷ್ಠಾನಕ್ಕೆ ಹೆಚ್ಚಿನ ಸಹಕಾರಿಯಾಗಲಿವೆ ಎಂದರು. ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ರಮೇಶ್ ಗುಬ್ಬಿಗೂಡು, ಕಾರ್ಯದರ್ಶಿಗಳಾದ ಡಾ.ಸಂತೋಷ್ ಹಾನಗಲ್, ಮಹೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ವಿವಿಧ ಸಾಹಿತಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಬಿಜೆಪಿ ಸೇರ್ಪಡೆ

Thumbnail
Posted On: 15 Jun 2022, 10:49 PM

ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಳಾ ಆಚಾರ್ಯರವರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಸಮ್ಮತಿ ಮೇರೆಗೆ ಇಂದು ಕಾಪು ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಶ್ರೀಕಾಂತ್ ನಾಯಕ್ , ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಪ್ರಮುಖರಾದ ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಶಶಿಪ್ರಭಾ ಶೆಟ್ಟಿ, ಗೋಪಾಲಕೃಷ್ಣ ರಾವ್, ಕೇಸರಿ, ಶರ್ಮಿಳಾ ಆಚಾರ್ಯ, ಸಂದೀಪ್ ರಾವ್, ಸುಶಾಂತ್ ಕುತ್ಯಾರು, ಮಧುಸೂದನ್, ವಿಜಯ್ ಕುಮಾರ್, ನವೀನ್ ಎಸ್ ಕೆ, ಗಣೇಶ್ ಶೆಟ್ಟಿ ಹೇರೂರು, ನಳಿನಾಕ್ಷಿ ಆಚಾರ್ಯ, ಶೈಲಜಾ ನಾರಾಯಣ ಪೂಜಾರಿ, ನಿತ್ಯಾನಂದ ಆಚಾರ್ಯ, ಮೇಘನಾಥ ಆಚಾರ್ಯ, ದಿನೇಶ್ ದೇವಾಡಿಗ, ಶ್ರೀನಿವಾಸ ದೇವಾಡಿಗ, ಶಂಕರ್ ಹೇರೂರು ಹಾಗೂ ಮಜೂರು ಗ್ರಾಮ ಪಂಚಾಯತ್ ನ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ 4 ಆರೋಪಿಗಳ ಸೆರೆ

Thumbnail
Posted On: 15 Jun 2022, 09:34 PM

ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ಪ್ರದೀಪ್ ಟಿ ಆರ್ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಕಾಸರಗೋಡಿನ ಮಹಮ್ಮದ್ ರಮೀಝ್(24), ಮೊಹಿದ್ದೀನ್ ರಾಶೀದ್(24), ಅಬ್ದುಲ್ ರವೂಫ್(35), ಬೆಂಗಳೂರಿನ ಸಬಿತಾ @ ಚಿಂಚು @ ಸಮೀರಾ(25), ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 125 ಗ್ರಾಂ ತೂಕದ ರೂ. 6 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 6 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಡ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 9,82,000/-ಲಕ್ಷ ಆಗಬಹುದು. ಆರೋಪಿಗಳು ಬೆಂಗಳೂರಿನಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು. ಆರೋಪಿಗಳ ಪೈಕಿ ಮೊಹಮ್ಮದ್ ರಮೀಝ್ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ 2 ಪ್ರಕರಣ ದಾಖಲಾಗಿರುತ್ತದೆ. ಈತನು 6 ತಿಂಗಳ ಹಿಂದೆ ಜೈಲ್ ನಿಂದ ಬಿಡುಗಡೆಗೊಂಡಿದ್ದನು. ಆರೋಪಿ ಅಬ್ದುಲ್ ರವೂಫ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಿಧ ಅಕ್ರಮಗಳ ಬಗ್ಗೆ ದೂರು ನೀಡಿದರೂ ಜಿಲ್ಲಾಧಿಕಾರಿಗಳ ಅಸಡ್ಡೆ ; ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗೆ ಸಜ್ಜು

Thumbnail
Posted On: 15 Jun 2022, 09:23 PM

ಉಡುಪಿ : ಜಿಲ್ಲೆಯ ವಿವಿಧ ಸಂಘಟನೆಗಳಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ನಿರಂತರವಾಗಿ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಉದಾಸಿನ ಭಾವನೆ ತೋರುತ್ತಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು (ನ್ಯಾಯಕ್ಕಾಗಿ ಹೋರಾಟ) ಧರಣಿ (ಪ್ರತಿಭಟನೆ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ‌ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ/ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಂಘಟನೆಯಿಂದ ಜಿಲ್ಲಾಧಿಕಾರಿಯವರಿಗೆ ಮಾಚ್೯ 3ರಂದು ದೂರು. ಈ ಬಗ್ಗೆ ಪತ್ರಕರ್ತರಾದ ಕಿರಣ್ ಪೂಜಾರಿ ಕುಂದಾಪುರ ಸಾಕ್ಷಿ ಸಮೇತ ದಾಖಲೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಹಾಗೂ ಮುಖ್ಯಮಂತ್ರಿ, ಆರೋಗ್ಯ ಮಂತ್ರಿ, ಗೃಹ ಮಂತ್ರಿ ಮತ್ತು ಸಂಬಂಧಪಟ್ಟ ಪೋಲಿಸ್ ಇಲಾಖೆ ಎಲ್ಲರಿಗೂ ತಪ್ಪಿತಸ್ಥ ಬಿ.ಎ.ಎಂ.ಎಸ್. ವೈದ್ಯರು (ಆರ್ಯುವೇದಿಕ್) ಗಳ ಮೇಲೆ ಕ್ರಮ ಕೈಗೊಂಡು ಸಾರ್ವಜನಿಕರ ಪ್ರಾಣ ಹಾನಿಯನ್ನು ರಕ್ಷಣೆ ಮಾಡಬೇಕೆಂದು ಕೋರಿದ್ದರು ಕ್ರಮ ಕೈಗೊಳ್ಳದೆ ಇರುವ ಬಗ್ಗೆ. ಉಡುಪಿ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಹೋರಾಟ ವೇದಿಕೆಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಉಡುಪಿ ಇವರಿಗೆ ಕುಂದಾಪುರ ತಾಲೂಕಿನ ತಹಶೀಲ್ದಾರರಾದ ಕಿರಣ್ ಗೌರಯ್ಯ ಇವರು ನಕಲಿ ಪರಿಶಿಷ್ಟ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಸರಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ದೂರು. ಬ್ರಹ್ಮಾವರ ಸೀತಾನದಿ ರಾಜ್ಯ ಹೆದ್ದಾರಿ (ಹಿಂದಿನ ಲೋಕೊಪಯೋಗಿ ರಸ್ತೆ) ಯನ್ನು ಅಂದಾಜು ಸುಮಾರು 30 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪ್ರಾರಂಭದಲ್ಲಿ ವೇದಿಕೆಯು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಮತ್ತು ಸರಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಾರ್ವಜನಿಕ ಧರಣಿ ಕೂಡ ನಡೆಸಿ ಜಿಲ್ಲಾಡಳಿತಕ್ಕೆ ಮತ್ತು ಸರ್ಕಾರಕ್ಕೆ ಮನವಿ ನೀಡಲಾಗಿದೆ. ಇದುವರೆಗೆ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆದಿರುವುದಿಲ್ಲ. ಮೀಸಲು ಅರಣ್ಯ ಭೂಮಿ ಸರ್ವೆ ನಂಬ್ರ 147 ರಲ್ಲಿ ಪರಿಶಿಷ್ಟ ಪಂಗಡದ ನಿಧಿಯನ್ನು ದುರ್ಬಳಕೆ ಮಾಡಿ ಅರಣ್ಯದ ಜಾಗದಲ್ಲಿ ಕರ್ಜೆ ಎಂಬಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಇವರಿಗೆ ನಮ್ಮ ವೇದಿಕೆ ಮತ್ತು ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಮನವಿ ನೀಡಿದೆ. ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಪಂಚಾಯತ್ ಸದಸ್ಯರ ಕುಟುಂಬಗಳಿಗೆ ಪಂಚಾಯತ್ ಅಂಗಡಿಕೋಣೆಗಳನ್ನು ಕಡಿಮೆ ಬಾಡಿಗೆಗೆ ನೀಡಿ ಕಳೆದ 2004 ರಿಂದ ಸರಕಾರದ ಖಜಾನೆಗೆ ನಷ್ಟ ಉಂಟು ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಲಾಗಿದೆ. ಈ ಬಗ್ಗೆ 2011 ರಿಂದ ಜಿಲ್ಲಾಡಳಿತಕ್ಕೆ ಸರಕಾರಕ್ಕೆ ದೂರು ನೀಡಲಾಗಿದೆ. ಬೈಂದೂರು ಉಪತಹಶೀಲ್ದಾರರಾಗಿರುವ ಲತಾ ಎಸ್. ಶೆಟ್ಟಿ ಎಂಬುವರು ಸರಕಾರಿ ಜಮೀನನ್ನು ಕಬಳಿಸುವ ಸಂಚು ನಡೆಸಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿಕೊಂಡಿರುವ ಬಗ್ಗೆ ದೂರು ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಯೋಜನೆಗಳಿಗೆ ಮತ್ತು ಅದರ ದೂರುಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ನ್ಯಾಯಾಲಯ ನೀಡುವ ಆದೇಶ ಪಾಲನೆ ಮಾಡದೇ ಇರುವ ಬಗ್ಗೆ ನಮ್ಮ ವೇದಿಕೆಯಿಂದ ಉಚ್ಚನ್ಯಾಯಾಲಯದ ನ್ಯಾಯ ಮೂರ್ತಿಯವರಿಗೆ ಜಿಲ್ಲಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಪಂಚಾಯತ್ ದೂರು ನೀಡಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲಾ ಕಛೇರಿ ಮತ್ತು ಅಧೀನ ಕಛೇರಿಗಳಲ್ಲಿ ಸಾರ್ವಜನಿಕರ ದೂರುಗಳಿಗೆ ಹಿಂಬರಹ ನೀಡದೆ ಇರುವ ಬಗ್ಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಶೇಖರ್ ಹಾವಂಜೆ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕರು, ಸದಾಶಿವ ಶೆಟ್ಟಿ, ಜಿಲ್ಲಾಧ್ಯಕ್ಷರು RTI ಕಾರ್ಯಕರ್ತ ಸಮಿತಿ, ಉಡುಪಿ ಜಿಲ್ಲೆ, ಸಪನ್ ಕರ್ನಾಟಕ ರಾಷ್ಟ್ರ ಸಮಿತಿ (KRS) ಉಡುಪಿ, ಸದಾಶಿವ ಕೋಟೆಗಾರ್, ಕಾರ್ಯದರ್ಶಿ ಜನತಾ ವೇದಿಕೆ ಕುಂದಾಪುರ, ಸತೀಶ್ ಪೂಜಾರಿ ಬಾರ್ಕೂರ್ ನಾಗರಿಕ ಹಿತರಕ್ಷಣಾ ಸಮಿತಿ, ಬ್ರಹ್ಮಾವರ ಉಪಸ್ಥಿತರಿದ್ದರು.

ಕಲೆ, ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು : ಪ್ರೊ. ಕಿಶೋರ್ ಕುಮಾರ್ ಸಿ.ಕೆ

Thumbnail
Posted On: 15 Jun 2022, 08:47 AM

ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಬಹಳ ಮುತುವರ್ಜಿಯಿಂದ ಸಾಮಾಜಿಕ ಕಳಕಳಿಯಿಂದ ದೇಶದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅದರಲ್ಲು ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸ್ತುತ್ಯಾರ್ಹ ವಿಚಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಅವರು ಹೇಳಿದರು. ಅವರು ಜೂ.12ರಂದು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾದ “ಸಂಸ್ಕೃತಿ ವೈಭವ" ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆಯ ಬಗ್ಗೆ ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಮಕ್ಕಳ ಶೈಕ್ಷಣಿಕ ವಿಚಾರದ ಬಗ್ಗೆ ಕಾಳಜಿ ಇರುವ ಇಂತಹ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೂ ಹೆಮ್ಮೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ SSLC ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ದ.ಕ. ಜಿಲ್ಲೆಯ ಸುಮಾರು ಹನ್ನೊಂದು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಕಾಶವಾಣಿಯ ಹಿರಿಯ ಉದ್ಘೋಷಕ ಹಾಗೂ ಸಾಹಿತಿ ಮುದ್ದು ಮೂಡುಬೆಳ್ಳೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದರು. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತ ನಿರ್ದೇಶಕ ಎಂ ಆರ್. ವಾಸುದೇವ, NSCDF ಅಧ್ಯಕ್ಷ ಗಂಗಾಧರ್ ಗಾಂಧಿ, ಹಾಗೂ ಲೇಖಕಿ ವಿಂಧ್ಯಾ ಎಸ್. ರೈ, ಕವಿ ಗೋಪಾಲಕೃಷ್ಣ ಶಾಸ್ತ್ರಿ ಉಪಸ್ಥಿತರಿದ್ದರು. ನಂತರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 44 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತ ಗಾಯನ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.

ಕಾಪು ಬಂಟರ ಸಂಘ : ಭಜನಾ ಕಾರ್ಯಕ್ರಮ ಉದ್ಘಾಟನೆ

Thumbnail
Posted On: 14 Jun 2022, 11:59 PM

ಕಾಪು‌ : ಬಂಟರ ಸಂಘ (ರಿ) ಕಾಪುವಿನ ಭಜನಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ, ಸಂಘದ ಕಛೇರಿಯಲ್ಲಿ ಜರಗಿತು. ಮುಂಬೈ ಉದ್ಯಮಿ ಉದಯ ಸುಂದರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಭಜನೆಯ ಮಹತ್ವ, ತಂಡಗಳ ಹೊಣೆ, ತರಬೇತಿ, ವ್ಯಕ್ತಿತ್ವ ವಿಕಸನ, ಶೃತಿ, ಲಯ, ತಾಳ ಮತ್ತು ಭಾಷಾ ಶುದ್ಧತೆ ಹಾಗೂ ಸಂವಹನ ಸಾಮರ್ಥ್ಯ ವೃದ್ಧಿಯ ಬಗ್ಗೆ ಮಾತನಾಡಿದರು. ಶೀಲಾ ಕೆ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು ಬಂಟರ ಸಂಘ(ರಿ) ಕಾಪು ಇದರ ಅಧ್ಯಕ್ಷ ವಾಸುದೇವ ಶೆಟ್ಟಿಯವರು ವಹಿಸಿದ್ದರು. ಕಾಪು ಬಂಟರ ಸಂಘದ ಮಹಿಳಾ ವೇದಿಕೆಯ ಸಂಚಾಲಕಿ ಜಯಲಕ್ಷ್ಮೀ ಎಸ್ ಶೆಟ್ಟಿಯವರು ಸ್ವಾಗತಿಸಿ, ಕಾರ್ಯದರ್ಶಿ ಲೀಲಾಧರ ಶೆಟ್ಟಿಯವರು ಪ್ರಾಸ್ತಾವಿಕ ಮಾಡಿದರು. ನಿರ್ಮಲ್ ಕುಮಾರ್ ಹೆಗ್ಡೆಯವರು ಕಾರ್ಯಕ್ರಮ ನಿರೂಪಣೆ ಮಾಡಿ, ಪ್ರಭಾತ್ ಶೆಟ್ಟಿ ಮೂಳೂರು ವಂದಿಸಿದರು.

ಶಂಕರಪುರ : ಆರೋಗ್ಯ ತಪಾಸಣೆಯ ನೆಪದಲ್ಲಿ ವೈದ್ಯನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ

Thumbnail
Posted On: 14 Jun 2022, 11:37 PM

ಶಿರ್ವ : ಇಲ್ಲಿನ ಕ್ಲಿನಿಕ್ ಒಂದರ ವೈದ್ಯ ಪತಿಯೊಂದಿಗೆ ಆರೋಗ್ಯ ತಪಾಸಣೆಗೆ ಬಂದಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ‌ಸೋಮವಾರ ನಡೆದಿದೆ. ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ ಕ್ಲಿನಿಕ್‌ಗೆ ಹೋಗಿದ್ದ ಸಮಯ ಅಲ್ಲಿನ ವೈದ್ಯ ಡಾ| ಮುರಳೀಕೃಷ್ಣ ಭಟ್‌ ತಪಾಸಣೆಯ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ವೈದ್ಯರ ವಿರುದ್ಧ ಮಹಿಳೆ ನೀಡಿದ ದೂರಿನನ್ವಯ ಶಿರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 13 Jun 2022, 08:17 PM

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಟೆಸ್ಟಿಂಗ್ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ತಕ್ಷಣದಲ್ಲಿ ಕೈಗೊಂಡು, ಅದು ಇತರರಿಗೆ ಹರಡದಂತೆ ಎಚ್ಚರವಹಿಸಿ. ಎಲ್ಲಾ ತಾಲೂಕುಗಳಲ್ಲಿನ ಕೋವಿಡ್ ಕಾರ್ಯಪಡೆಗಳನ್ನು ಮತ್ತೆ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿನ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿನ್ ಕಾನ್ಸನ್ಟ್ರೇಟರ್ಗಳು, ಆಮ್ಲಜನಕ ತಯಾರಿಕಾ ಮತ್ತು ಶೇಖರಣಾ ಘಟಕಗಳು ಸೇರಿದಂತೆ ಎಲ್ಲಾ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಕಾಲೇಜುಗಳು ಆರಂಭಗೊಳ್ಳುತ್ತಿದ್ದು, ಜಿಲ್ಲೆಗೆ ಹೊರರಾಜ್ಯ ಮತ್ತು ಹೊರ ರಾಷ್ಟçಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಅವರ ಮೂಲಕ ಕೋವಿಡ್ ಪ್ರಕರಣಗಳು ಹರಡದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೋವಿಡ್ ಮುನ್ನೆಚ್ಚರಿಕಾ ಲಸಿಕೆ ಪಡೆಯುವ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಸೂಚನೆ ನೀಡುವಂತೆ ಹಾಗೂ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಲಸಿಕೆ ನೀಡುವಂತೆ ಹಾಗೂ ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕಳೆದ 10 ದಿನದಲ್ಲಿ 2127 ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 17 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಪಾಸಿಟಿವಿಟಿ ದರವು 0.80 ರಷ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 11 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾಹಿತಿ ನೀಡಿದರು. ಮಳೆಗಾಲದಲ್ಲಿ ಕಂಡು ಬರುವ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಸಾರ್ವಜನಿಕರ ಮೊಬೈಲ್ಗಳಿಗೆ ಜಾಗೃತಿ ಕುರಿತ ಆಡಿಯೋ ಸಂದೇಶಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಿ ಮತ್ತು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾರ್ವಜನಿಕ ಜಾಥಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣ ಕುರಿತಂತೆ ಈಗಾಗಲೇ ಜಾಗೃತಿ ಮೂಡಿಸಲು ಪಿ.ಡಿ.ಓ ಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಶಾಲಾ ವಿದ್ಯಾರ್ಥಿಗಳ ಮೂಲಕ ಮನೆ ಮನೆಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.