Updated News From Kaup
ಸಹಾಯದ ನಿರೀಕ್ಷೆಯಲ್ಲಿ ಇರುವ (ರಂಗ್ದ ರಾಜೆ) ರಾಜೇಶ್ ಕೆಂಚನಕೆರೆ
Posted On: 06 Jun 2022, 08:57 PM
ಹೌದು ಅದೆಷ್ಟು ನಾಟಕರಂಗದಲ್ಲಿ ಹಾಸ್ಯ ನಟನೆಯಿಂದ ಕಲಾಭಿಮಾನಿಗಳನ್ನು ನಗಿಸಿದ ನಮ್ಮ ರಾಜೇಶ್ ಕೆಂಚನಕೆರೆ ಅವರ ಕುಟುಂಬ ದುಃಖದಲ್ಲಿದೆ. ರಾಜೇಶ್ ಕೆಂಚನಕೆರೆ ಅವರು ನಾಟಕ, ಯಕ್ಷಗಾನ, ಬಲೇ ತೆಲಿಪಾಲೆ ಇನ್ನೂ ಅನೇಕ ಪಾತ್ರಗಳಲ್ಲಿ ನಟಿಸಿ ಕಲಾಮಾತೆಯ ಸೇವೆ ಮಾಡಿಕೊಂಡು ಬಂದವರು. ಬಲೇ ತೆಲಿಪಾಲೆ ಖ್ಯಾತಿಯ ರಾಜೇಶ್ ಕೆಂಚನಕೆರೆ ಅವರು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದಾರೆ. ರಾಜೇಶ್ ಅವರು ಈಗಾಗಲೇ ಡಯಾಲಿಸಿಸ್ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ರಾಜೇಶ್ ಅವರ ಭವಿಷ್ಯದ ದೃಷ್ಟಿಯಿಂದ ಅವರ ಪತ್ನಿ ಕಿಡ್ನಿ ದಾನಕ್ಕೆ ಮುಂದಾಗಿದ್ದಾರೆ. ಈ ಕಿಡ್ನಿ ಸ್ಥಳಾಂತರದ ಪ್ರಕ್ರಿಯೆಗೆ ಸುಮಾರು 12 ಲಕ್ಷ ರೂಪಾಯಿ ಅಂದಾಜಿಸಲಾಗಿದೆ. ಈ ಖರ್ಚು ಭರಿಸಲು ರಾಜೇಶ್ ಅವರ ಕುಟುಂಬ ಅಸಮರ್ಥವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಾನಿಗಳ ನೆರವು ಯಾಚಿಸಿದ್ದಾರೆ. ರಾಜೇಶ್ ಕೆಂಚನಕೆರೆ ಅವರ ಭವಿಷ್ಯ ನಮ್ಮ ಕೈಯಲ್ಲಿದೆ. ರಾಜೇಶ್ ಅವರು ಹಲವಾರು ಸಂಘಸಂಸ್ಥೆಯಲ್ಲಿ ಸಕ್ರಿಯವಾಗಿದ್ದು ಅದೆಷ್ಟೋ ಬಡಕುಟುಂಬಗಳಿಗೆ ನೆರವು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಕೆನರಾ ಬ್ಯಾಂಕ್ ಕಿನ್ನಿಗೋಳಿ ಖಾತೆ ನಂಬ್ರ: 0362200052157 IFsc code: CNRB0010136 Google pay no:9632173543 ಸಂಪರ್ಕಕ್ಕಾಗಿ ರಾಜೇಶ್ ಕೆಂಚನಕೆರೆ 9880639161 ಒಪ್ಪಿಗೆ ಮೇರೆಗೆ • ಜೀವನ್ ಶೆಟ್ಟಿ ಅಂಗರಗುಡ್ಡೆ
ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣರಿಗೆ ಹತ್ಯೆ ಬೆದರಿಕೆ ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ದೂರು
Posted On: 06 Jun 2022, 08:50 PM
ಕಾಪು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಶ್ರೀ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು. ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಪೂಜಾರಿ, ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಕಾಪು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋನು ಪಾಂಗಾಳ, ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ನಲ್ಲಿ ವಿಶ್ವ ಪರಿಸರ ದಿನಾಚರಣೆ
Posted On: 05 Jun 2022, 11:50 PM
ಪಡುಬಿದ್ರಿ : ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಸಿಕಾಮ್, ಬೀಚ್ ಮ್ಯಾನೇಜ್ಮೆಂಟ್ ಕಮಿಟಿ ಹಾಗೂ ಮಣ್ಣು ಉಳಿಸಿ ಅಭಿಯಾನದ ಸಹಯೋಗದೊಂದಿಗೆ ಜೂನ್ 5ರಂದು ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ಬ್ಲೂ ಫ್ಲಾಗ್ ಬೀಚ್ ವೀಕ್ಷಕ ಸುಜಿತ್ ದೋಂಗ್ಲೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಪರಿಸರ ರಕ್ಷಣೆ ನಮ್ಮ ಕರ್ತವ್ಯ. ಅದರ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಮಣ್ಣಿನ ಸಾವಯವ, ಫಲವತ್ತತೆ ಮುಖ್ಯ. ಕರಾವಳಿಯಲ್ಲಿ ಮಣ್ಣಿನ ರಕ್ಷಣೆ ಅತೀ ಮುಖ್ಯ ಎಂದರು. ನಿವೃತ್ತ ಐಎಫ್ಎಸ್ ಅಧಿಕಾರಿ ಅಜಯ್ ಸಕ್ಸೇನಾ ಮಾತನಾಡಿ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಮನೆಯಲ್ಲಿಯೇ ಆರಂಭಿಸಬೇಕು. ಮುಂದಿನ ಪೀಳಿಗೆಗೆ ಇದರ ಬಗ್ಗೆ ತಿಳಿಸುವುದು ಅನಿವಾರ್ಯ ಎಂದರು. ಈ ಸಂದರ್ಭ ದಿಶಾ ಫೌಂಡೇಷನ್ ನ ಜಗ್ಗಿ ವಾಸುದೇವ್ ಅವರ ಅನುಯಾಯಿ ಮಣ್ಣು ಉಳಿಸಿ ಅಭಿಯಾನದ ಸದಸ್ಯ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಸಂದೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಉಪನಿರ್ದೇಶಕ ಕ್ಲಿಫಡ್೯ ಲೋಬೊ, ಪಡುಬಿದ್ರಿ ಪಂಚಾಯತ್ ಉಪಾಧ್ಯಕ್ಷೆ ಯಶೋದ, ಪಂಚಾಯತ್ ಸದಸ್ಯರಾದ ಸುಜಾತ ಆಚಾರ್ಯ, ವಿದ್ಯಾಶ್ರೀ, ಯಶ್ವಿನ್ ಬಂಗೇರ, ನವೀನ್ ಕುಮಾರ್, ಪಿಪಿಸಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಡಲಾಯಿತು. ಕಿರಣ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಲಿಫಡ್೯ ಲೋಬೊ ವಂದಿಸಿದರು.
ಕೇಂಜ ಗರಡಿಯ ಅರ್ಚಕ ಸುರನಾಥ ಪೂಜಾರಿಯವರಿಗೆ ನುಡಿನಮನ
Posted On: 05 Jun 2022, 10:54 PM
ಕಾಪು : ಕೇಂಜ ಗರಡಿಯಲ್ಲಿ ಸುಮಾರು ಹನ್ನೆರಡು ವರ್ಷಗಳಿಂದ ಪೂ ಪೂಜನಾ ಕಾರ್ಯ ನೆರವೇರಿಸುತ್ತಿದ್ದ ಸುರನಾಥ ಪೂಜಾರಿ (ಬಾಬಣ್ಣ)ಯವರು ಮೇ 31ರಂದು ಅಸೌಖ್ಯದಿಂದ ನಿಧನರಾಗಿದ್ದು ಅವರ ಆತ್ಮಕ್ಕೆ ಶಾಂತಿಕೋರುವ ನಿಟ್ಟಿನಲ್ಲಿ ಜೂನ್ 5ರಂದು ಕೇಂಜ ಗರಡಿ ವಠಾರದಲ್ಲಿ ನುಡಿನಮನ ಕಾರ್ಯವು ಜರಗಿತು. ಮುಲ್ಕಿ ತೋಕೂರು ತಪೋವನ ಎಂ.ಆರ್ ಪೂಂಜ ತಾಂತ್ರಿಕ ವಿದ್ಯಾಲಯ ಪ್ರಾಂಶುಪಾಲರಾದ ಹರಿ ಎಚ್ ಪಿಲಾರು, ಮುದರಂಗಡಿ ತಮ್ಮ ನುಡಿನಮನದಲ್ಲಿ ಕೇಂಜದ ಗ್ರಾಮವು ಹೂವಿನ ತೋಟದಂತೆ ಇಲ್ಲಿನ ಜನರು ಮೃದು ಸ್ವಭಾವದವರು. ಅದರಲ್ಲಿ ಓರ್ವರಾದ ಬಾಬಣ್ಣನವರನ್ನು ಹತ್ತಿರದಿಂದ ಬಲ್ಲವನಾಗಿದ್ದು ಎಲ್ಲರೊಂದಿಗೆ ಆತ್ಮೀಯನಾಗಿದ್ದು ಜಾತಿ ಮತ ಬೇಧವೆನ್ನದೆ ಸರಳ ಸಜ್ಜನಿಕೆಯಿಂದ ಉತ್ತಮ ಸಂಸ್ಕಾರಯುತ ಬಾಳನ್ನು ನಡೆಸಿ ಗೌರವದಿಂದಲೂ, ಪ್ರೀತಿ ವಾತ್ಸಲ್ಯದಿಂದಲೂ ಬೆರೆತು ನಿಷ್ಠೆಯಿಂದ ಬೈದೇರುಗಳ ಸೇವೆ ಸಲ್ಲಿಸುತ್ತಿದ್ದ ಇವರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದರು. ಈ ಸಂದರ್ಭ ಇರಂದಾಡಿ ಅರಸರ ಮನೆಯ ಜಗದೀಶ್ ಅರಸ, ಅರುಣ್ ಕುಮಾರ್ ಶೆಟ್ಟಿ ಪಡು ಇರಂದಾಡಿ, ರಾಘು ಶೆಟ್ಟಿ ಪಣಿಯೂರು ಗುತ್ತು, ಶಂಕರ ಶೆಟ್ಟಿ ಬರ್ಪಾಣಿ, ಪವನ್ ಶೆಟ್ಟಿ ನಡುಗುತ್ತು, ಕುತ್ಯಾರು ನವೀನ್ ಶೆಟ್ಟಿ, ಕೃಷ್ಣ ಪೂಜಾರಿ ಕೇಂಜ, ಸುಧಾಕರ ಪೂಜಾರಿ, ಸಾಯಿನಾಥ್ ಶೆಟ್ಟಿ, ಸಂಪತ್ ಕುಮಾರ್, ದೇವರಾಜು ಬಿ ಶೆಟ್ಟಿ, ಪ್ರವೀಣ್ ಭಂಡಾರಿ, ರಾಜೇಶ್ ಶೆಟ್ಟಿ, ಸತೀಶ್ ಪಾತ್ರಿ, ಮೃತರ ಕುಟುಂಬಸ್ಥರು, ಮತ್ತಿತರರು ಉಪಸ್ಥಿತರಿದ್ದರು. ಕೇಂಜ ಗರಡಿಯ ಭಂಡಾರದ ವತಿಯಿಂದ ಮೃತರ ಪುತ್ರಿಯ ಉನ್ನತ ವಿದ್ಯಾಭ್ಯಾಸದ ಖರ್ಚು ಭರಿಸುವ ಬಗ್ಗೆ ಹಾಗೂ ಕುಟುಂಬ ನಿರ್ವಹಣೆಗೆ ಹತ್ತು ಸಮಸ್ತರ ಕ್ರೋಢೀಕರಣದಿಂದ ಸಹಾಯ ನೀಡುವುದೆಂದು ನಿರ್ಣಯಿಸಲಾಯಿತು. ಕೇಂಜ ಬಗ್ಗ ತೋಟ ಬಗ್ಗ ಪೂಜಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕುತ್ಯಾರು ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಮಾಗಂದಡಿ ಕಿರಣ್ ಆಳ್ವ ವಂದಿಸಿದರು.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ವಿಶ್ವ ಪರಿಸರ ದಿನ
Posted On: 05 Jun 2022, 09:23 PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ವತಿಯಿಂದ ದಶಮಾನೋತ್ಸವದ ಪ್ರಯುಕ್ತ ವಿಶ್ವ ಪರಿಸರ ದಿನದ ಅಂಗವಾಗಿ ವನ ಮಹೋತ್ಸವ ಕಾರ್ಯಕ್ರಮ ಮಟ್ಟಾರ್ ನಲ್ಲಿ ನಡೆಯಿತು. ಕರಾವಳಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಶಿರ್ವ ಪೋಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಪ್ರಖಂಡ ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು ಪ್ರಸ್ತಾವನೆಗೈದರು. ಬಜರಂಗದಳ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ, ಮಟ್ಟಾರು ಘಟಕ ಬಜರಂಗದಳ ಸಂಚಾಲಕ ವಿಶ್ವನಾಥ ಆಚಾರ್ಯ, ದುರ್ಗಾವಾಹಿನಿ ಸಂಚಾಲಕಿ ದೀಕ್ಷಾ ಪ್ರಭು, ಸುರಕ್ಷಾ ಪ್ರಮುಖ್ ಅಭಿಜಿತ್ ಪೂಜಾರಿ, ಕೋಶಾಧಿಕಾರಿ ಅಜಿತ್ ಪೂಜಾರಿ, ಸೇವಾ ಪ್ರಮುಖ್ ಸತೀಶ್, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಟ್ಟಾರು ಇದರ ಕಾರ್ಯಕರ್ತರು, ಮತ್ತಿತರರು ಪಾಲ್ಗೊಂಡಿದ್ದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಂಚಿನಡ್ಕ ಮಿಂಚಿನ ಬಾವಿ ಮೇಲ್ಛಾವಣಿ ವಿವಾದ : ಆಕ್ಷೇಪಣೆ ಹಿಂಪಡೆದ ಕುಟುಂಬ
Posted On: 04 Jun 2022, 06:53 PM
ಪಡುಬಿದ್ರಿ : ಕಂಚಿನಡ್ಕ ಮಿಂಚಿನ ಬಾವಿಯ ಶ್ರೀ ಕೋರ್ದಬ್ಬು ದೈವಸ್ಥಾನದ ಮೇಲ್ಛಾವಣಿ ಬಗ್ಗೆ ಸಾನಿಧ್ಯದ ಬಳಿಯ ಎರಡು ಮುಸ್ಲಿಂ ಕುಟುಂಬಗಳು ಪಡುಬಿದ್ರಿ ಗ್ರಾಮ ಪಂಚಾಯತ್ ಗೆ ಸಲ್ಲಿಸಿದ್ದ ಆಕ್ಷೇಪಣೆಯನ್ನು ಹಿಂದಕ್ಕೆ ಪಡೆದಿದೆ. ಪಂಚಾಯತ್ ರಸ್ತೆಯಾದ್ದರಿಂದ ಗ್ರಾಮಪಂಚಾಯತ್ ಸರಿಯಾದ ನಿರ್ಧಾರ ಕೈಗೊಳ್ಳಬೇಕಿದೆ. ದೈವಸ್ಥಾನದ ಮುಂಭಾಗದ ಈ ರಸ್ತೆಯಲ್ಲಿ ಎಲ್ಲಾ ಸಮುದಾಯದ ಜನರು ಹೋಗುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಆಕ್ಷೇಪಣೆ ಹಿಂಪಡೆದ ಮಹಿಳೆಯೋರ್ವರು ಮಾತನಾಡಿ ದೈವಸ್ಥಾನಕ್ಕೆ ಮೇಲ್ಛಾವಣಿ ಹಾಕುವ ಬಗ್ಗೆ ಆಕ್ಷೇಪ ಮುಂಚಿನಿಂದಲೂ ಇರಲಿಲ್ಲ. ನಾವು ರಸ್ತೆಗೆ ಹಾಕಬೇಡಿ ಎಂದು ಹೇಳುವುದು. 2004 ರಿಂದಲೂ ಇಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳಿಗೆ ನಾವು ತೊಂದರೆ ಮಾಡಿಲ್ಲ. ನಮ್ಮಿಂದಾಗಿ ಯಾವುದೇ ಗಲಾಟೆಯಾಗಬಾರದೆಂದು ನಾವು ಆಕ್ಷೇಪಣೆ ಹಿಂಪಡೆದಿದ್ದೇವೆ. ಯಾವುದೇ ರೀತಿಯ ಹೆದರಿಕೆಯ ವಾತಾವರಣ ಆಗಬಾರದು. ಕಾನೂನು ಎಲ್ಲರಿಗೂ ಒಂದೇ. ದಿನನಿತ್ಯ ಓಡಾಡುವ ರಸ್ತೆ ಇದಾಗಿದೆ. ಗಾಳಿಯ ರಭಸಕ್ಕೆ ಮೇಲ್ಛಾವಣಿಯ ತಗಡಿನಿಂದ ತೊಂದರೆಯಾಗಬಾರದು. ಪಡುಬಿದ್ರಿ ಠಾಣೆಯಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಯಾವುದೇ ಗೊಂದಲವಾಗಿಲ್ಲ. ಗೊಂದಲವಾಗಿದೆ ಎಂದು ಸೃಷ್ಟಿಸಲಾಗಿದೆ ಎಂದರು. ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಮಾತನಾಡಿ ನಾವೆಲ್ಲರೂ ಸಹಬಾಳ್ವೆ, ಅನ್ಯೋನ್ಯತೆಯಿಂದ ಬಾಳಬೇಕಾಗಿದೆ. ಕಾನೂನಾತ್ಮಕವಾಗಿ ಪಂಚಾಯತ್ ಇದನ್ನು ಪರಿಶೀಲಿಸಲಿದೆ. ಡೋರ್ ನಂಬರ್ ಇಲ್ಲವಾದ್ದರಿಂದ ಪಂಚಾಯತ್ನಿಂದ ಯಾವುದೇ ಪರವಾನಗಿ ನೀಡಲಾಗದು. ಧಾರ್ಮಿಕ ಕೇಂದ್ರವಾದ್ದರಿಂದ ಪರಸ್ಪರ ಸಹಮತದಿಂದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಆಕ್ಷೇಪಣೆ ಹಿಂಪಡೆದ ಕುಟುಂಬ ವರ್ಗ, ಸ್ಥಳೀಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸದಸ್ಯರು ಉಪಸ್ಥಿತರಿದ್ದರು.
ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ' ಎನ್.ಸಿ.ಸಿ.ಯಿಂದ ವಿಶ್ವ ಪರಿಸರ ದಿನಾಚರಣೆ
Posted On: 04 Jun 2022, 05:35 PM
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯನ್ನು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾವಣೆಗೊಂಡ ವಾತಾವರಣವನ್ನು ನಾವು ನೋಡುತ್ತಿದ್ದೇವೆ. ನಮ್ಮ ಪರಿಸರ ರಕ್ಷಣೆ ಮತ್ತು ಗಿಡಗಳ ಪೋಷಣೆಯನ್ನು ಮಾಡದಲ್ಲಿ ಮುಂದೆ ಮುಂದಿನ ಪೀಳಿಗೆಗಳಿಗೆ ಹಾಗೂ ಎಲ್ಲ ಜೀವರಾಶಿಗಳಿಗೆ, ಆಮ್ಲಜನಕ ಸೇರಿದಂತೆ ಅನೇಕ ಸವಾಲುಗಳು ಎದುರಿಸಬೇಕಾಗುತ್ತದೆ. ಎನ್ ಸಿಸಿ ಕೆಡೆಟ್ಗಳು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಪರಿಸರ ಕಾಳಜಿ ಮಾಡುವ ಮೂಲಕ ಸಮಾಜದ ಒಳಿತಿಗಾಗಿ ಇತರರಿಗೆ ಮಾದರಿ ಮಾದರಿಯಾಗಬೇಕು ಎಂದು ಅವರ ಕಾರ್ಯವನ್ನು ಶ್ಲಾಘಿಸಿ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಂತಹ ಇಂಟರ್ ಗ್ರೂಪ್ ಶೂಟಿಂಗ್ ಕಾಂಪಿಟೇಶನ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀತಿ೯ಯನ್ನು ಉಜ್ವಲಗೊಳಿಸಿದ ಕೆಡೆಟ್ ಆಶಿಶ್ ಪ್ರಸಾದ್ ನನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ವಿಶ್ವ ಪರಿಸರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಮತ್ತು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಕ್ಯಾಡೆಟ್ ಸುಶ್ಮಿತಾ ಎಸ್ ಅಮೀನ್ ವಿಶ್ವ ಪರಿಸರ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉಪನ್ಯಾಸಕಿ ಯಶೋದ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು. ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್, ಕಾರ್ಪೋರಲ್ ಧೀರಜ್, ಅನುಪ್ ನಾಯಕ ಮತ್ತಿತರರು ಸಹಕರಿಸಿದರು. ಕ್ಯಾಡೆಟ್ ವರ್ಷಿತ ಸರ್ವರನ್ನೂ ಸ್ವಾಗತಿಸಿ, ಕ್ಯಾಡೆಟ್ ಪೂಜಾ ವಂದಿಸಿದರು. ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಡಿಯಾಳಿ ಬ್ರಹ್ಮಕಲಶೋತ್ಸವ ಹೊರಕಾಣಿಕೆ ಸಮರ್ಪಣೆ : ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅಭಿಮಾನಿ ಬಳಗದಿಂದ ತಂಪು ಪಾನೀಯಗಳ ವಿತರಣೆ
Posted On: 02 Jun 2022, 10:14 PM
ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹಸಿರು ಹೊರಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಂಪುಪಾನೀಯಗಳ ವಿತರಣೆಯನ್ನು ಸಮಾಜ ಸೇವಕರಾದ ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗ ವತಿಯಿಂದ ಮಾಡಲಾಯಿತು. ಈ ಸಂದರ್ಭ ಸಮಾಜ ಸೇವಕರಾದ ಕೆ ಕೃಷ್ಣ ಮೂರ್ತಿ ಆಚಾರ್ಯ, ಚರಣ್ ಬಂಗೇರ, ಪ್ರಭಾಕರ ಆಚಾರ್ಯ ಕಟಪಾಡಿ, ಯುವರಾಜ್, ಓಂಕರ್ , ಗುರು ಪ್ರಸಾದ್, ಕಾವನ್, ಸಿರಾಜ್ , ಪ್ರಣಮ್, ಕೃಷ್ಣ ಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಸದಸ್ಯರುಗಳು ಉಪಸ್ಥಿತರಿದ್ದರು.
ಶಿರ್ವ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ತಂಬಾಕು ರಹಿತ ದಿನದಂದು ತಂಬಾಕು ಸೇವನೆ ವಿರುದ್ಧ ಜಾಗೃತಿ
Posted On: 02 Jun 2022, 10:00 PM
ಕಾಪು : ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಶಿರ್ವ ಗ್ರಾಮ ಪಂಚಾಯತ್ ಮೇ 31ರಂದು ವಿಶಿಷ್ಟ ರೀತಿಯಲ್ಲಿ ತಂಬಾಕು ಸೇವನೆ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ನಡೆಸಿತು. ಬೆಳಗಿನ ಸಮಯದಲ್ಲಿ ಶಿರ್ವ ಪೇಟೆ ಪರಿಸರದಲ್ಲಿ ತಂಬಾಕು, ಗುಟ್ಕಾ ಇತ್ಯಾದಿಗಳನ್ನು ಸೇವಿಸುವವರಿಗೆ ಗುಲಾಬಿ ಹೂವನ್ನು ನೀಡಿ ತಂಬಾಕು ಪದಾರ್ಥಗಳನ್ನು ಸೇವಿಸದಂತೆ ಹಾಗೂ ಅದರ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ತಂಬಾಕು ಸೇವನೆ ಪರಿಸರಕ್ಕೆ ಹಾನಿಕರ ಎಂಬ ಈ ವರ್ಷದ ಘೋಷವಾಕ್ಯದ ಹಿನ್ನಲೆಯಲ್ಲಿ ತಂಬಾಕು ಸೇವಿಸಿ ಉಗುಳಿ ಪರಿಸರವನ್ನು ಹಾಳು ಮಾಡದಂತೆ, ಸ್ವಚ್ಚತೆಯನ್ನು ಕಾಪಾಡುವಂತೆ ಜಾಗೃತಿ ಮೂಡಿಸಲಾಯಿತು. ಸುಮಾರು 15 ದಿನಗಳಿಂದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರ ನೇತೃತ್ವದಲ್ಲಿ ಶಿರ್ವ ಬಸ್ಸು ನಿಲ್ದಾಣ, ಪಂಚಾಯತ್ ಪರಿಸರ , ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವಿಸಿ ಉಗುಳುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯಿದೆ ಪ್ರಕಾರ ದಂಡ ವಿಧಿಸುವ ಕಾರ್ಯಚರಣೆ ನಡೆಯುತ್ತಿತ್ತು. ಆದರೆ ಇಂದು ಯಾವುದೇ ದಂಡವಿಧಿಸದೆ ಗುಲಾಬಿ ಹೂವನ್ನು ನೀಡಿ ತಂಬಾಕು ಸೇವಿಸದಂತೆ ಜಾಗೃತಿ ಮೂಡಿಸಲಾಯಿತು. ತಂಬಾಕು ವ್ಯಸನಿಯೋರ್ವರಿಗೆ ಗುಲಾಬಿ ನೀಡಿ ಮಾಹಿತಿ ತಿಳಿಸಿದಾಗ ಅವರಲ್ಲಿದ್ದ ತಂಬಾಕು ಪದಾರ್ಥಗಳನ್ನು ಬಸ್ಸು ನಿಲ್ದಾಣದಲ್ಲಿರಿಸಿದ ಕಸದ ಡಬ್ಬಿಗೆ ಬಿಸಾಡಿ ಇನ್ನು ಮುಂದೆ ತಂಬಾಕು ಸೇವಿಸಲಾರೆ ಎಂದು ಹೇಳಿದ ಪ್ರಸಂಗವೂ ನಡೆಯಿತು. ಈ ಜಾಗೃತಿ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರೊಂದಿಗೆ ಪಂಚಾಯತ್ ಸಿಬ್ಬಂದಿಗಳಾದ ಕಿಶೋರ್, ರಕ್ಷಿತ್, ಯೋಗಿಶ್, ಅಮೃತ, ಸುಮಭಾಮ, ಶ್ವೇತ ಭಾಗವಹಿಸಿದ್ದರು.
ಕೇಂಜ ಗರಡಿ ಬ್ರಹ್ಮ ಬೈದೇರುಗಳ ಪೂಜಾ ಪೂಜಾರ್ಮೆಯನ್ನು ನಿರ್ವಹಿಸುತ್ತಿದ್ದ ಸುರನಾಥ ಅಮೀನ್ ( ಬಾಬಣ್ಣ) ನಿಧನ
Posted On: 01 Jun 2022, 08:24 PM
ಕಾಪು : ಗರಡಿಗಳ ಸಾಲಿನಲ್ಲಿ ಕೆಮ್ಮಲೆಗೆ ಸರಿ ಸಮಾನವಾದ ಕೇಂಜ ಮಲೆಯಲ್ಲಿ ವಿರಾಜಮಾನರಾದ ಬ್ರಹ್ಮ ಬೈದೇರುಗಳ ಪೂಜಾ ಪೂಜಾರ್ಮೆಯನ್ನು ನಿರ್ವಹಿಸುತ್ತಿದ್ದ ಸುರನಾಥ ಅಮೀನರು ಮೇ31ರಂದು ಅಲ್ಪ ಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದರು. ಪ್ರೀತಿಯಿಂದ ಬಾಬಣ್ಣ ಎಂದು ಕರೆಯಲ್ಪಡುತ್ತಿದ್ದ ಅವರು ಮೂಲ ಸಂಪ್ರದಾಯಕ್ಕೆ ಧಕ್ಕೆ ಬರದ ರೀತಿ ಆರಾಧನಾ ಪ್ರಕ್ರಿಯೆಯನ್ನು ಸುಮಾರು 12 ವರ್ಷಗಳ ಕಾಲ ಶ್ರದ್ದೆಯಿಂದ, ಪ್ರಾಮಾಣಿಕವಾಗಿ ಆತ್ಮ ಸಮರ್ಪಣಾ ಮನೋಭಾವದಿಂದ ನಿರ್ವಹಿಸಿದ್ದರು. ಮುದರಂಗಡಿ ಬಿಲ್ಲವ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
