Updated News From Kaup
ಹಿರಿಯರ ಸಾಧನೆಯನ್ನು ಗುರುತಿಸಿ ಗೌರವಿಸುವುದು ಗುರುಕಾಣಿಕೆ ನೀಡಿದಂತೆ : ಮಹೇಶ್ ಶೆಟ್ಟಿ
Posted On: 23 May 2022, 11:34 PM
ಬಂಟಕಲ್ಲು : ವಿವಿಧ ರಂಗದಲ್ಲಿ ಸಾಧನೆಯನ್ನು ಮಾಡಿ ಈಗ ವಿಶ್ರಾಂತ ಜೀವನ ನಡೆಸುತ್ತಿರುವ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸುವುದು ಸಮಾಜ ಅವರಿಗೆ ಗುರುಕಾಣಿಕೆ ನೀಡಿದಂತೆ ಎಂದು 92ನೇ ಹೇರೂರು ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗದ 2ನೇ ವರ್ಷದ ಸಾರ್ವಜನಿಕ ಕ್ರಿಡೋಸವದ ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಭವಾನಿ ಫಾರ್ಮ್ನ ಮಾಲಕರಾದ ಶ್ರೀ ಮಹೇಶ್ ಶೆಟ್ಟಿ ಹಿರಿಯರಾದ ವಿಠ್ಠಲ್ ಶೆಟ್ಟಿ, ದೇವದಾಸ ಜೋಗಿ, ದೇವರಾಜ ಆಚಾರ್ಯ, ಕೂಸ ಎಸ್. ಪೂಜಾರಿ ಕಲ್ಲುಗುಡ್ಡೆ ಇವರನ್ನು ಸನ್ಮಾನಿಸಿ ಅಭಿಪ್ರಾಯ ಪಟ್ಟರು. ಸ್ಥಳೀಯ ಪ್ರತಿಭೆ ಸ್ಟ್ರಿಂಗ್ ಆರ್ಟ್ಸ್ ಮೂಲಕ 37.5×38 ಇಂಚಿನ ವಿಶ್ವಕರ್ಮ ಕಲಾಕೃತಿಗಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇರ್ಪಡೆಗೊಂಡ ಕುಮಾರಿ ಪ್ರಿಯಾಂಕಾ ಆಚಾರ್ಯ ಇವರನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಎವಿಲಿನ್ ಲೋಬೊ ಬಹುಮಾನ ವಿತರಿಸಿದರು. ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಧೀರಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಸಾರ್ವಜನಿಕ ರಂಗದಲ್ಲಿ ಸಂಸ್ಥೆಯ ಸೇವಾ ಚಟುವಟಿಕೆಯನ್ನು ಸ್ವಾಗತಿಸಿದರು. ಬೆಳಿಗ್ಗೆ ನಡೆದ ಅರೋಗ್ಯವಂತ ಶಿಶು ಕಾರ್ಯಕ್ರಮವನ್ನು ರವಿ ಪುರೋಹಿತ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಈ ಸಂದರ್ಭದಲ್ಲಿ SSLC ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿವೇತನ ನೀಡಲಾಯಿತು. ಸಮಿತಿಯ ಉಪಾಧ್ಯಕ್ಷ ಗಣಪತಿ ಬಿ. ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿನೋದ ಜೆ. ಆಚಾರ್ಯ ಕ್ರೀಡಾಕೂಟ ನಡೆಸಿದರು. ವಿಶಾಲ ಜಿ. ಆಚಾರ್ಯ ಬಹುಮಾನಿತರ ಪಟ್ಟಿ ವಾಚಿಸಿದರು. ಕುಮಾರಿ ತನುಷಾ ಪ್ರಾರ್ಥಿಸಿದರು. ಅಧ್ಯಕ್ಷ ಮಾಧವ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಬಳಗದ ಕಾರ್ಯದರ್ಶಿ ಮಂಜುಳಾ ಗಣೇಶ್ ವಂದಿಸಿದರು.
ಮೇ 24 : ಪತ್ತನಾಜೆ - ಆಟ, ಕೋಲ, ಬಲಿ, ಅಂಕ, ಆಯನಗಳಿಗೆ 'ವಿರಾಮ'
Posted On: 23 May 2022, 08:46 PM
'ಪತ್ತನಾಜೆ' ಎಂದರೆ ಆಟ. ಕೋಲ, ಬಲಿ, ಅಂಕ, ಆಯನಗಳಿಗೆ ಅಲ್ಪವಿರಾಮ ಎಂಬ ನಂಬಿಕೆ ಸರಿಯಾದುದೇ . ಆದರೆ ಸಾಕು ಸಂಭ್ರಮ - ಗೌಜಿ ಗದ್ದಲ , ಉತ್ಸವಗಳ ಗುಂಗಿನಿಂದ ಹೊರಗೆ ಬಾ.....ತೊಡಗು... ಕೃಷಿಗೆ ಎಂಬ ಎಚ್ಚರಿಕೆಯೂ 'ಪತ್ತನಾಜೆ'ಯ ನೆನಪಿನಲ್ಲಿದೆ . ಆಚರಣೆಗಳು ಇಲ್ಲದಿದ್ದರೂ ಜೀವನಾಧಾರವಾದ ಬೇಸಾಯಕ್ಕೆ ಪ್ರವೃತ್ತನಾಗು ಎಂಬ ನಿರ್ದೇಶನ ಪತ್ತನಾಜೆ ಒದಗಿ ಬರುವ ಸಂದರ್ಭದಲ್ಲಿ ನಿಚ್ಚಳ . ತುಳುವರ ಬೇಶ ತಿಂಗಳ ಹತ್ತನೇ ದಿನವೇ ಪತ್ತನಾಜೆ .ಸೌರ ಪದ್ಧತಿಯ ಎರಡನೇ ತಿಂಗಳು ವೃಷಭ .ವೃಷಭ ಎಂದರೆ ಬೇಶ .ಹತ್ತನೇ ದಿನವನ್ನು ತಿಂಗಳು ಸಾಗುವ ಹತ್ತನೇ ಹೆಜ್ಜೆ (ಅಜೆ)ಎಂದು ಗ್ರಹಿಸಿ 'ಪತ್ತನಾಜೆ"ಎಂದಿರ ಬಹುದು. 'ಬೇಶ' ತಿಂಗಳು ತನ್ನ ವಿಶೇಷಗಳಿಂದ , ಪುರಾತನ ಒಪ್ಪಿಗೆಗಳೊಂದಿಗೆ ಬಹಳ ಮುಖ್ಯ ತಿಂಗಳು . 'ಬೇಶದ ತನು - ಬೇಶದ ತಂಬಿಲ' ತುಳುವರಿಗೆ ಆಚರಣೆಗಳ ಪರ್ವಕಾಲ .'ಬೆನ್ನಿ' ಅಥವಾ 'ಬೇಸಾಯ'ಕ್ಕೆ ತೊಡಗುವ ಮುನ್ನ ತಮ್ಮ ಮೂಲಸ್ಥಾನಗಳಿಗೆ ಹೋಗಿ ಭೂಮಿ ಪುತ್ರನಾದ ಈ ನೆಲದ ಸರ್ವಾಧಿಕಾರಿ 'ನಾಗನಿಗೆ' ; "ತನು ಮಯಿಪಾದ್ ತಂಬಿಲಕಟ್ಟಾದ್" , ದೈವಗಳಿಗೆ ಭೋಗ ಕೊಟ್ಟು ಬಂದು ಬೇಸಾಯಕ್ಕೆ ಆರಂಭಿಸುವ ಸಂಪ್ರದಾಯ ತುಳುವರದ್ದಾಗಿತ್ತು. ಈಗ ಕಾಲ ಬದಲಾಗಿದೆ , ಮನಸ್ಸು ಬಂದಾಗ 'ಮೂಲತಾನ'ಗಳಿಗೆ ಹೋಗಿ 'ನಾಗ - ದೈವ'ಗಳಿಗೆ ಸೇವೆ ಸಲ್ಲಿಸುವ ಆರ್ಥಿಕ ಸಬಲತೆ ಇದೆ - ಸ್ವಂತ ವಾಹನ ಸೌಲಭ್ಯಗಳಿವೆ . ಬದಲಾಗುತ್ತಿರುವ ಕಾಲ - ಸಂದರ್ಭ - ಮನೋಧರ್ಮಗಳಿಂದಾಗಿ ತಮ್ಮ ಮೂಲಸ್ಥಾನ ತೊರೆದು ಬದುಕುಕಟ್ಟುವ ಉದ್ದೇಶದಿಂದ ಬೇಸಾಯದ ಅವಕಾಶ ಬಯಸಿ ದೂರದ ಪ್ರದೇಶಗಳಿಗೆ ಹೋಗಿ ಬೇಸಾಯದ ಜೀವನ ಆರಂಭಿಸಿದ್ದ ಮಾನವನ ಚರ್ಯೆಗೆ ಅಥವಾ ಮನೋಧರ್ಮಕ್ಕೆ ಶತಮಾನಗಳೇ ಸಂದು ಹೋದುವು. ಈ ಪರಿಸ್ಥಿತಿಯಲ್ಲೂ ಬೇಸಾಯಕ್ಕೆ ಆರಂಭಿಸುವ ಮುನ್ನ ಮೂಲಕ್ಕೆ ಹೋಗುವುದು ಶಿಷ್ಟಾಚಾರವಾಯಿತು . ವರ್ಷಕ್ಕೆ ಒಂದೆರಡು ಬಾರಿಯಾದರೂ ಮೂಲಕ್ಕೆ ಸಂದರ್ಶನ ನೀಡುವ ಆಸ್ತಿಕರು ಬೇಶದಲ್ಲಿ ಖಂಡಿತ ಹೋಗುತ್ತಾರೆ . ಆ ದಿನ ಪತ್ತನಾಜೆಯ ಆಸುಪಾಸಿನಲ್ಲಿರುತ್ತದೆ . ಮಕರ - ಪುಯಿಂತೆಲ್ ತಿಂಗಳ ಕೊನೆಯ ಮೂರು ದಿನಗಳ "ಕೆಡ್ಡಸ" ಆಚರಣೆಯಲ್ಲಿ ಭೂಮಿದೇವಿ ಪುಷ್ಪವತಿಯಾದಳು ಎಂಬ ನಂಬಿಕೆ ನಮ್ಮದು .ಅಂದರೆ ನಿಸರ್ಗದಲ್ಲಿ ಅದ್ಭುತ ಬದಲಾವಣೆಯಾಗುವ ಕಾಲವದು .ಹೆಣ್ಣು ಮಗಳು 'ಪುಷ್ಪವತಿ' ಯಾದಳೆಂದರೆ 'ಫಲವತಿ'ಯಾಗಲು ಸಿದ್ಧಳಾದಳು ಎಂದಲ್ಲವೇ ಅರ್ಥ . ಪುಯಿಂತೆಲ್ - ಮಕರ ತಿಂಗಳಲ್ಲೆ ಪ್ರಕೃತಿ ಬದಲಾಗಲು ತೊಡಗುತ್ತದೆ , ಕೃಷಿಯ ಸಣ್ಣ ಪುಟ್ಟ ತಯಾರಿ ನಡೆಯಲಾರಂಭವಾಗುತ್ತದೆ. 'ಮಾಯಿ - ಕುಂಭ' ತಿಂಗಳು ಮುಗಿಯುತ್ತಿರುವಂತೆ 'ಸುಗ್ಗಿ - ಮೀನ' ತಿಂಗಳು . ಬೆಳೆದ ಗೆಣಸು ಮುಂತಾದುಗಳನ್ನು ಅಗೆದು ತೆಗೆಯದಿದ್ದರೆ ಅವು 'ಮಾಯಿ ತಿಂಗಳಲ್ಲಿ ಮಾಯವಾಗುತ್ತವಂತೆ" . ಹೀಗೊಂದು ಒಡಂಬಡಿಕೆ . ಮುಂದೆ ಹಂತಹಂತವಾಗಿ ಬೇಸಾಯಕ್ಕೆ ಅಣಿಯಾಗುವ ರೈತ ಸುಗ್ಗಿ ತಿಂಗಳು ಮುಗಿದು ಪಗ್ಗು ತಿಂಗಳ 'ಮೊದಲ ದಿನ - ತಿಂಗೊಡೆ' ಮೊದಲ ಹಬ್ಬ ಯುಗಾದಿ ಅಥವಾ ಇಗಾದಿ - ವಿಷು ಆಚರಿಸುತ್ತಾನೆ .ಇಗಾದಿ ಆಚರಣೆ ಸರಳವಾದುದು ,ಚೌತಿ , ದೀಪಾವಳಿಗಳಂತೆ ಸಂಭ್ರಮಗಳಿಲ್ಲ .ಆದರೆ ಕೃಷಿಕನಿಗೆ "ಪುಂಡಿಬಿತ್ತ್ ಪಾಡುನು - ನಾಲೆರು ಮಾದಾವುನ" ಕೃಷಿ ಚಕ್ರವನ್ನು ಮತ್ತೆ ಆರಂಭಿಸುವ ಕ್ರಮವಿದೆ . ಮುಂದೆ 'ಪಗ್ಗು ತಿಂಗಳ ಹದಿನೆಂಟು ಹೋಗುವ ದಿನ' ತನ್ನ ಕೃಷಿ ಭೂಮಿಗೆ ಬೇಕಾಗುವಷ್ಟು 'ನೇಜಿ' ಹಾಕುವ ಸಾಂಪ್ರದಾಯಿಕ ಕ್ರಮ. ಈ ನಡುವೆ 'ಕಜೆಬಿದೆ ಆವ - ಮಡಿಬಿದೆ ಆವ' ಎಂಬ ನಿಷ್ಕರ್ಷೆಗೆ ಅನುಗುಣವಾಗಿ ನೇಜಿ ಹಾಕುವ ಪದ್ಧತಿಯೂ ಒಂದಿದೆ. ಕೃತ್ತಿಕಾ ಮಳೆಯ ಕಾಲ ಆರಂಭವಾಗುತ್ತದೆ. ಈ ಮಳೆ ಬರಬಾರದು "ಕಿರ್ತಿಕೆ ಕಾಯೊಡು"- ಕೃತ್ತಿಕೆಯ ಬಿಸಿಲಿಗೆ ಭೂಮಿ ಸುಡಬೇಕು - ಬಿಸಿಗೆ ಭೂಮಿ 'ಬಿರಿಯ' ಬೇಕು. ಭಾಗೀರಥೀ ಜನ್ಮದಿನ' ಒದಗಿಬರುತ್ತದೆ. ಮಳೆಬಂದಾಗ ಭೂಮಿ ತನ್ನೊಳಗೆ ಮಳೆ ನೀರು ಇಳಿಸಿಕೊಂಡು - ಹಾಕುವ ಗೊಬ್ಬರ ಮತ್ತು ಸಿದ್ಧಗೊಳಿಸಿದ ಸುಡುಮಣ್ಣುಗಳಿಂದಾಗಿ ( ತೂಟಾನ್ - ತೂಂಟಾನ್) ಫಲವತ್ತಾದ ಕ್ಷೇತ್ರವಾಗುತ್ತದೆ , ಮುಂದೆ ಬೀಜಾಂಕುರವಾದಾಗ ಭೂಮಿದೇವಿ ತನ್ನ ಫಲವಂತಿಕೆಯನ್ನು ವ್ಯಕ್ತಗೊಳಿಸುತ್ತಾಳೆ . ಬಿಸಿಲ ಬೇಗೆಗೆ ಸುಟ್ಟ ಗದ್ದೆಗೆ ಮೊದಲ ಮಳೆ ನೀರು ಬಿದ್ದಾಗ ಒಂದು ಅಪೂರ್ವ ಪರಿಮಳ ಭೂಗರ್ಭದಿಂದ ಹೊರಬರುತ್ತದೆ . ಅದಕ್ಕಲ್ಲವೇ "ಪೃಥ್ವೀ ಗಂಧವತೀ" ಎಂದರು ನಮ್ಮ ಪೂರ್ವಸೂರಿಗಳು .ಇದು ಮಣ್ಣಿನ ಪರಿಮಳ ,ಇದೇ ಕಾರಣವಾಗಿ ಬೆನ್ನಿ - ಬೇಸಾಯ ಸಮೃದ್ಧವಾಗಿತ್ತು ಒಂದು ಕಾಲದಲ್ಲಿ . ಈಗ ಮಣ್ಣಿಗೆ ಅಥವಾ ಪೃಥ್ವಿಗೆ ಗಂಧವಿದೆಯಾ ...ಅದು ಅಷ್ಟು ಸುವಾಸನೆಯುಳ್ಳದ್ದಾ ...ಎಂದು ಕೇಳುವವರಿದ್ದಾರೆ . ಆದರೆ ಬೇಸಾಯವೇ ಜೀವನಾಧಾರವಾಗಿದ್ದ ಕಾಲದಲ್ಲಿ ಮಣ್ಣಿನ ಪರಿಮಳ ಗ್ರಹಿಸುತ್ತಿದ್ದ ಮಾನವ .ಆಗ ಅದೇ ಸುಗಂಧವಾಗಿತ್ತು , ಏಕೆಂದರೆ ಭೂಮಿ ತಾಯಿಯಾಗಿದ್ದಳು .ಜಡವಾದ ಭೂಮಿಯೊಂದಿಗೆ ಎಂತಹ ಭಾವನಾತ್ಮಕ ಸಂಬಂಧ. ಹಾಗೆ ಬಂದಿರಬೇಕು "ಮಣ್ಣ್ ಡ್ ಪೊಂರ್ಬಿನಾಯೆ ನುಪ್ಪು ತಿನುವೆ , ನರಮಾನಿಡ ಪೊಂರ್ಬಿನಾಯೆ ಮಣ್ಣ್ ತಿನುವೆ" ಎಂಬ ಗಾದೆ. ಪತ್ತನಾಜೆ ಮುಗಿಸಿ ಬೇಸಾಯಕ್ಕೆ ಹೊರಡುವ ಸಂದರ್ಭ ಭೂಮಿ ,ಬೇಸಾಯ , ನಮ್ಮ - ಮಣ್ಣಿನ ಸಂಬಂಧ ಮಣ್ಣಿನ ಸತ್ಯದ ದರ್ಶನವಾಗಲು ಅಥವಾ 'ಸತ್ಯ ನೆಗತ್ತ್ ದ್' ತೋಜೊಡ್ಡ ' ಪತ್ತನಾಜೆ ಪರ್ವಕಾಲ ,ಸುಸಂದರ್ಭ . ಇನ್ನು ನಮಗೆ "ಬೆನ್ನಿದ ಮಗೆ" - ಬೇಸಾಯಗಾರ ಸಿಗುವುದು ಆಟಿ ತಿಂಗಳಲ್ಲಿ . ಬಳಿಕ ಅಷ್ಟಮಿ ,ಚೌತಿ ಆಚರಣೆಗಳಲ್ಲಿ .ಅನಂತರ ತೆನೆಕಟ್ಟುವ ಸಂಭ್ರಮದಲ್ಲಿ , ನವರಾತ್ರಿಯ ವೇಳೆ .ಆದರೆ ನಗುಮೊಗದಿಂದ ಬೇಸಾಯಗಾರನ ಮುಖಾಮುಖಿಯಾಗುವುದು ದೀಪಾವಳಿಯ ಗೌಜಿ ಗದ್ದಲದಲ್ಲಿ ಬೆಳಗುವ ಸೊಡರಿನಲ್ಲಿ ,ಆಗ ಧಾನ್ಯಲಕ್ಷ್ಮೀ ಮನೆ ತುಂಬಿರುತ್ತಾಳೆ .ಆತ ಸಂತೃಪ್ತನಾಗಿರುತ್ತಾನೆ "ಕೃಷಿಯಿದ್ದಲ್ಲಿ ದುರ್ಭಿಕ್ಷೆ ಇಲ್ಲವಂತೆ" ಪತ್ತನಾಜೆ ಎಂದು ಆರಂಭಿಸಿ ದೀಪಾವಳಿ ವರಗೆ ಹೋಗ ಬೇಕಾಯಿತು . "ಭೂಮಿ -ಕೃಷಿ' ಈ ಸಂಬಂಧ ಮತ್ತೆ ಗಾಢವಾಗಬೇಕೆಂಬುದೇ ಆಶಯ .ಹಾಗೆ ಎಲ್ಲಿಂದಲೋ ಹೊರಟು ಬೇಸಾಯಗಾರನಲ್ಲಿ ಮಾತನಾಡಿ ,ನಿಸರ್ಗದ ವಿಸ್ಮಯಗಳನ್ನು ಅವಲೋಕಿಸುತ್ತಾ , ಮಳೆಯ ಅನಿವಾರ್ಯತೆಯನ್ನು ಹೇಳುತ್ತಾ 'ಕೃಷಿ ಸಂಸ್ಕೃತಿ"ಯನ್ನು ಪರಿಚಯಿಸುವ ಪ್ರಯತ್ನಮಾಡಿದೆ . ಲೇಖನ : ಕೆ.ಎಲ್ .ಕುಂಡಂತಾಯ.
ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ : ಉಸ್ತುವಾರಿ ಸಚಿವ ಎಸ್.ಅಂಗಾರ
Posted On: 23 May 2022, 08:34 PM
ಉಡುಪಿ : ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಪಂಚಾಯತ್ ರಸ್ತೆ, ಗ್ರಾಮೀಣ ರಸ್ತೆಗಳು ಸೇರಿದಂತೆ ಯಾವುದೇ ರಸ್ತೆಯಲ್ಲಿ ಮಳೆಯ ನೀರು ನಿಲ್ಲದೇ, ಸರಾಗವಾಗಿ ಹರಿದುಹೋಗುವ ಕುರಿತಂತೆ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಯಾವುದೇ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ ಸಂದರ್ಭದಲ್ಲಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಬರುತ್ತಿದ್ದು, ರಸ್ತೆ ನಿರ್ಮಾಣ ಸಂದರ್ಭದಲ್ಲಿ ರೂಪಿಸಿದ್ದ ಯೋಜನೆಯಂತೆ ಮಳೆ ನೀರು ಹರಿಯಲು ಅಗತ್ಯ ವ್ಯವಸ್ಥೆ ಮಾಡಬೇಕು. ಅವೈಜ್ಞಾನಿಕವಾಗಿ ಮಾಡಿರುವ ಕಾಮಗಾರಿಗಳನ್ನು ತೆರವುಗೊಳಿಸಬೇಕು. ಈ ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್, ಪುರಸಭೆ ಅಧಿಕಾರಿಗಳು ಸ್ಥಳ ಭೇಟಿ ನೀಡಿ, ಪರಿಶೀಲಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಯಾವುದೇ ಭಾಗದಲ್ಲಿ ಮಳೆಯಿಂದ ಅವಘಡಗಳು ಸಂಭವಿಸದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, 2 ದಿನದಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಡುಪಿ ನಗರಸಭೆ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಖಾಸಗಿ ಜಾಗದಲ್ಲಿ ಮಳೆ ನೀರು ಹರಿಯುವ ಜಾಗದಲ್ಲಿ ತಡೆ ಹಾಕಿರುವ ಬಗ್ಗೆ ಕಂಡು ಬಂದಲ್ಲಿ ಅದನ್ನು ಯಾವುದೇ ಮುಲಾಜಿಲ್ಲದೇ ಅದನ್ನು ಒಡೆದು ಹಾಕಿ, ಖಾಸಗಿ ವ್ಯಕ್ತಿಗಳು ಈ ಕಾರ್ಯಕ್ಕೆ ಅಡಚಣೆ ಮಾಡಿದಲ್ಲಿ ಪ್ರಾಕೃತಿಕ ವಿಕೋಪ ಕಾಯ್ದೆಯಡಿ ನೀಡಿರುವ ಅಧಿಕಾರ ಚಲಾಯಿಸಿ, ಅಗತ್ಯ ಕ್ರಮ ಕೈಗೊಳ್ಳಿ ಎಂದರು. ಜಿಲ್ಲೆಯಲ್ಲಿ ರಸ್ತೆ ಬದಿಗಳಲ್ಲಿ ಇರುವ ಅಪಾಯಕಾರಿ ಮರಗಳ ವಿವರಗಳನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಪಟ್ಟಿ ಮಾಡಿ, ಅರಣ್ಯ ಇಲಾಖೆಗೆ ಸಲ್ಲಿಸುವಂತೆ ತಿಳಿಸಿದ ಸಚಿವರು, ಅರಣ್ಯ ಇಲಾಖೆಯಿಂದ ಆದ್ಯತೆಯ ಮೇಲೆ ಅವುಗಳನ್ನು ತೆರವುಗೊಳಿಸಲು ಅನುಮತಿ ನೀಡಬೇಕು. ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ತಮ್ಮ ಕೆಳಹಂತದ ಸಿಬ್ಬಂದಿಗಳಿಗೂ ಅಗತ್ಯ ನಿರ್ದೇಶನಗಳನ್ನು ನೀಡಿ, ಮಳೆಯಿಂದ ಬಿದ್ದ ಮರಗಳನ್ನು ತಕ್ಷಣ ತೆರವುಗೊಳಿಸಲು ಮತ್ತು ಅಪಾಯಕಾರಿ ಮರಗಳ ತೆರವು ಕುರಿತು ಕೋರುವ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸೂಚಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ಅಗತ್ಯವಿರುವ ಎಲ್ಲಾ ರಕ್ಷಣಾ ಪರಿಕರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಹಾಗೂ ಅಗತ್ಯವಿದ್ದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಬೋಟುಗಳನ್ನು ಪಡೆಯುವಂತೆ ಸೂಚಿಸಿದರು. ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಉಲ್ಬಣವಾಗದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳ ಸಮೀಪ ನೀರು ನಿಲ್ಲದಂತೆ ಹಾಗೂ ಸೊಳ್ಳೆಗಳ ಬೆಳವಣಿಗೆ ತಡೆಯುವ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೂಲಕ ಮನೆ ಮನೆಗೆ ಸ್ವಚ್ಚತೆ ಕಾಪಾಡುವ ಕುರಿತಂತೆ ಸಂದೇಶ ರವಾನಿಸಲು ಕ್ರಮ ಕೈಗೊಳ್ಳಿ. ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ನಿಗಾ ವಹಿಸಿ ಎಂದರು. ಶಾಸಕ ರಘುಪತಿ ಭಟ್ ಮಾತನಾಡಿ, ಮಳೆಯಿಂದ ಮನೆಗಳಿಗೆ ಆಗುವ ಹಾನಿಗೆ ನೀಡುವ ಪರಿಹಾರ ಅತ್ಯಂತ ಕಡಿಮೆ ಇದೆ ಎಂದರು. ಈ ಕುರಿತಂತೆ ಮಳೆಯಿಂದ ಮನೆ ಮತ್ತು ಆಸ್ತಿ-ಪಾಸ್ತಿಗಳು ಹಾನಿಯಾದ ಸಂದರ್ಭದಲ್ಲಿ ನಷ್ಠದ ಅಂದಾಜು ಮಾಡುವಾಗ, ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಪ್ರಕರಣಗಳನ್ನು ಗಮನಿಸಿ, ಸಂತ್ರಸ್ಥರಿಗೆ ಗರಿಷ್ಠ ನೆರವು ಒದಗಿಸಬೇಕು ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಮಾನ್ಸೂನ್ನಿಂದ ಆಗುವ ಹಾನಿಯನ್ನು ತಪ್ಪಿಸಲು ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಕ್ಲಿಷ್ಟಕರ ಸಮಸ್ಯೆಯಿದ್ದಲ್ಲಿ ಕೂಡಲೇ ತಮ್ಮ ಗಮನಕ್ಕೆ ತರುವಂತೆ ಸರ್ಕಾರದಿಂದ ತಿಳಿಸಿದ ಸಚಿವರು, ತುರ್ತು ನೆರವಿನ ಅಗತ್ಯವಿದ್ದಲ್ಲಿ ಯಾವುದೇ ಸಂದರ್ಭದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕರಾವಳಿ ಕಾವಲು ಪಡೆ ಎಸ್ಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಡಿಎಫ್ಓ ಆಶೀಶ್ ರೆಡ್ಡಿ, ಕಾರ್ಕಳ ಡಿಎಫ್ಓ ಗಣಪತಿ, ಎಎಸ್ಪಿ ಸಿದ್ಧಲಿಂಗಪ್ಪ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ; ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸೂಚನೆ
Posted On: 23 May 2022, 06:02 PM
ಕಾಪು : ಇಲ್ಲಿನ ವಿಧಾನ ಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪು ಭಾಗಗಳಲ್ಲಿ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಕಿರಣ್ ಆಳ್ವ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಬಂದರು ಹಾಗೂ ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಗುತ್ತಿಗೆದಾರರು, ಸ್ಥಳೀಯ ಮುಖಂಡರಾದ ಪ್ರವೀಣ್ ಕುಂದರ್ ಪೊಲಿಪು, ಜಗದೀಶ್ ಬಂಗೇರ, ನರೇಶ್ ಮೆಂಡನ್, ಅನಂತ್ ಕುಂದರ್, ಧನಂಜಯ ಸುವರ್ಣ, ಜಗದೀಶ್ ಕಾಂಚನ್, ಗಿರೀಶ್ ಕಾಂಚನ್, ನವೀನ್ ಅಮೀನ್, ಯೋಗೀಶ್ ಅಮೀನ್, ಪುರುಷೋತ್ತಮ ಪುತ್ರನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವಿದ್ಯಾಸರಸ್ವತಿಗೆ ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಪ್ರಶಸ್ತಿ
Posted On: 22 May 2022, 05:28 PM
ಉಡುಪಿ : ಬೆಂಗಳೂರಿನ ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಉಡುಪಿಯ ವಿದ್ಯಾ ಸರಸ್ವತಿ ಅವರು ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತನ್ನ 50ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ವಿದ್ಯಾ ಸರಸ್ವತಿ ಅವರು ಅನೇಕ ಹೆಣ್ಣು ಮಕ್ಕಳಿಗೆ ಮಾದರಿಯಾಗಿರುವುದನ್ನು ಪರಿಗಣಿಸಿ ಶುಕ್ರವಾರ ಬೆಂಗಳೂರಿನ ಚಾನ್ಸರಿ ಪೆವಿಲಿಯನ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿಗೆ ಗೆಲುವು
Posted On: 22 May 2022, 01:03 PM
ಉಡುಪಿ : ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ ಮೂರನೇ ವಾರ್ಡ್ ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ್ ಪಾಲನ್ ರವರು 67 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಮನೆ ಮನೆ ಭೇಟಿ ಮಾಡಿ ಶತಪ್ರಯತ್ನ ಮಾಡಿದರೂ ಯಶಸ್ವಿಯಾಗಿಲ್ಲ. ನಮ್ಮ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ಇದು ಎಲ್ಲ ಕಾಂಗ್ರೆಸ್ಸಿಗರಿಗೆ ಸ್ಪಷ್ಟವಾದ ಸೂಚನೆ ಜನ ಕಾಂಗ್ರೆಸ್ ಪರವಾಗಿಲ್ಲವೆಂಬುದು. ಅಲ್ಲದೆ ಅಲೆವೂರು ಪಂಚಾಯತ್ ಆಡಳಿತ ಎಷ್ಟು ಜನರನ್ನು ಎಷ್ಟರ ಮಟ್ಟಿಗೆ ತಲುಪಿದೆ ಎನ್ನುವುದು ಇದರಿಂದ ತಿಳಿಯುತ್ತಿದೆ. ಅಲೆವೂರು ಪಂಚಾಯತ್ ಆಡಳಿತ ಜನಮರುಳು ಮಾಡುತ್ತ ವ್ಯರ್ಥ ಕಾಲಹರಣ ಮಾಡುತ್ತಿದೆ. ಜನತೆ ಕೊಟ್ಟ ಅವಕಾಶವನ್ನು ಸದುಪಯೋಗ ಪಡೆಸುವುದು ಬಿಟ್ಟು ಜನವಿರೋಧಿ ಆಡಳಿತ ನಡೆಸಿದುದರ ಪರಿಣಾಮವೂ ಈ ಫಲಿತಾಂಶಕ್ಕೆ ಸ್ವಲ್ಪ ಮಟ್ಟಿನ ಕಾರಣವಾಗಿದೆ. ಒಟ್ಟಾರೆ ಕಾಂಗ್ರೆಸ್ ಮುಳುಗುವ ಹಡಗು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೂ ಇದು ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹೇಳಿದ್ದಾರೆ.
ಹೇರೂರು : ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 22 May 2022, 10:05 AM
ಕಾಪು : ಹೇರೂರು ಗ್ರಾಮದ ಶ್ರೀ ಜುಮಾದಿ ಮತ್ತು ಬಂಟ ದೈವಸ್ಥಾನದ ಪುನರ್ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೇರೂರು ಇದರ ಪ್ರಧಾನ ಅರ್ಚಕರಾದ ಗುರುರಾಜ್ ಭಟ್ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ರಾಮನಾಥ ಶೆಟ್ಟಿ ಹೇರೂರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗುಣಪಾಲ ಶೆಟ್ಟಿ ಅಬ್ಬೆಟ್ಟು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ದೇವದಾಸ್ ಜೋಗಿ, ಶಂಕರ್ ದೇವಾಡಿಗ ಹೇರೂರು, ಗಾಣದ ಮನೆ ದೇಜು ಸೇರಿಗಾರ್, ನಿವೃತ್ತ ಸೇನಾನಿ ದಿನಕರ ರಾವ್, ಮುಕ್ಕಾಲ್ದಿ ಹರೀಶ್ ಶೆಟ್ಟಿ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ, ಯತೀಶ್ ಶೆಟ್ಟಿ ಹಾಗೂ ಹೇರೂರು ಗ್ರಾಮಸ್ಥರು ಉಪಸ್ಥಿತರಿದ್ದರು.
ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 21 May 2022, 05:52 PM
ಉಡುಪಿ : ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗದಿಪಡಿಸಿಕೊಂಡಿರುವ ನಿಗದಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪುನೀತ್ ನಾಯಕ್, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಯತ್ರಿ, ಕಾಳಾವರ ಸರಕಾರಿ ಪ್ರೌಢಶಾಲೆಯ ನಿಶಾ ಹಾಗೂ ಬೈಂದೂರು ಕಿರಿಮಂಜೇಶ್ವರ ಸಂದೀಪನ ಆಂಗ್ಲಮಾಧ್ಯಮ ಶಾಲೆಯ ಅಕ್ಷತಾ ಅವರನ್ನು ಸನ್ಮಾನಿಸಲಾಯಿತು.
ಕಾಪು ಸಾರ್ವಜನಿಕ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
Posted On: 21 May 2022, 05:39 PM
ಕಾಪು : ಕರ್ನಾಟಕ ಸರಕಾರದ ಅಧೀನದಲ್ಲಿರುವ ಕಾಪು ಸಾರ್ವಜನಿಕ ಗ್ರಂಥಾಲಯ ಮತ್ತು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಗ್ರಂಥಾಲಯಕ್ಕೆ ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪುರಸ್ಕೃತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಬಿ ಶೆಟ್ಟಿ ಕಳತ್ತೂರು,ದಿವಾಕರ ಡಿ ಶೆಟ್ಟಿ ಕಳತ್ತೂರು ಇವರ ನೇತೃತ್ವದಲ್ಲಿ ಕಾದಂಬರಿ ಕಥೆ ಪುಸ್ತಕ, ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕ ಹಾಗೂ ಧಾರ್ಮಿಕ ವಿಚಾರವಾದ ದೆಂದೂರ ಪಂಜುರ್ಲಿ ಪುಸ್ತಕವನ್ನು ಕಾಪುವಿನ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕರಾದ ಪೂರ್ಣಿಮಾ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಸಮಾಜ ಸೇವಾ ವೇದಿಕೆ ಗೌರವ ಸಲಹೆಗಾರರದ ದಯಾನಂದ ಕೆ ಶೆಟ್ಟಿ ದೆಂದೂರು, ಉಡುಪಿ ಯುವ ದೇವಾಡಿಗರ ವೇದಿಕೆ ಅಧ್ಯಕ್ಷ ಅಶೋಕ್ ಶೇರಿಗಾರ್ ಅಲೆವೂರು, ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮುಖ್ಯಸ್ಥರಾದ ಹಫೀಜ್ ರೆಹಮಾನ್, ಮಾರ್ಕೆಟಿಂಗ್ ಮೆನೇಜರ್ ರಾಘವೇಂದ್ರ ನಾಯಕ್ ಅಜೆಕಾರ್, ಮಲಬಾರ್ ಚಾರಿಟಿ ಇಂಚಾರ್ಜ್ ತನ್ಜಿಮ್ ಶಿರ್ವ ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿಗೆ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಭೇಟಿ
Posted On: 21 May 2022, 05:21 PM
ಕಾಪು : ದೇಶ ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿರುವ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಪಡುಬಿದ್ರಿ ಅವರು ಮೇ. 20ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ, ತನ್ನ ಹುಟ್ಟೂರಿನಲ್ಲಿ ಆಗುತ್ತಿರುವ ಇಂತಹ ಪುಣ್ಯಕಾರ್ಯಕ್ಕೆ ಮುಂದಿನ ದಿನಗಳಲ್ಲಿ ತಾನು ಕೂಡಾ ಕೈಜೋಡಿಸುವುದಾಗಿ ಭರವಸೆಯನ್ನಿತ್ತರು. ದೇವಳದ ಸಿಬ್ಬಂದಿ ಸಂತೋಷ್ ಶೆಟ್ಟಿಯವರು ಶ್ರೀ ದೇವಿಯ ಸನ್ನಿದಾನದಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದವನ್ನು ನೀಡಿದರು.
