Updated News From Kaup
ಉಡುಪಿ : ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ
Posted On: 18 Jun 2022, 05:10 PM
ಉಡುಪಿ : ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು ಅವರು ಇಂದು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು. ರೈತರು ತಾವು ಬೆಳೆದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಟವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ. ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು. ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು. ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪವು ಲಭ್ಯವಿತ್ತು. ಕಾರ್ಯಕ್ರಮದಲ್ಲಿ ಸಿಇಓ ಪ್ರಸನ್ನ ಎಚ್. ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ ಅದರ ಭಾಗವಾಗಿ ಹಲಸು ಮೇಳವು ಒಂದಾಗಿದೆ. ಸಾರ್ವಜನಿಕರು ತಮಗೆ ಇಷ್ಟವಾದ ನಮೂನೆಯ ಹಲಸನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ. ಈ ಮೇಳವು 2 ದಿನಗಳವರೆಗೆ ನಡೆಯಲಿದ್ದು, ರೈತರು ತಾವು ಬೆಳೆದ ಹಲಸನ್ನು ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು . ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಮತ್ತಿರರರು ಉಪಸ್ಥಿತರಿದ್ದರು.
ಕುತ್ಯಾರು : ಅಸೆಟ್ ಗೆ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು
Posted On: 18 Jun 2022, 04:54 PM
ಕಾಪು : ಪಡುಕುತ್ಯಾರುವಿನ ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಸೆಟ್ ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾಯಾಧ್ಯಕ್ಷರಾಗಿ ಪೃಥ್ವೀರಾಜ್ ಆಚಾರ್ಯ ಕಿನ್ನಿಗೋಳಿ, ಪ್ರಧಾನ ಕಾಯದರ್ಶಿಯಾಗಿ ಕೆ.ಜೆ. ಗುರುರಾಜ್ ಆಚಾರ್ಯ ಮಂಗಳೂರು, ಕೋಶಾಧಿಕಾರಿಯಾಗಿ ಬಿ. ಸೂರ್ಯ ಕುಮಾರ್ ಹಳೆಯಂಗಡಿ, ಉಪಾಧ್ಯಕ್ಷರಾಗಿ ವಿವೇಕ್ ಆಚಾರ್ಯ ಮಂಚಕಲ್, ಎನ್. ಹರಿಶ್ಚಂದ್ರ ಆಚಾರ್ಯ ಬೆಂಗಳೂರು, ಕಾರ್ಯದರ್ಶಿಗಳಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಕೆ.ರಾಘವೇಂದ್ರ ಆಚಾರ್ಯ ಉಡುಪಿ ಆಯ್ಕೆಯಾದರು. ವಿಶ್ವಸ್ಥ ಮಂಡಳಿಯ ವಿಶ್ವಸ್ಥರಾಗಿ ತ್ರಾಸಿ ಸುಧಾಕರ ಆಚಾರ್ಯ, ನಾಗರಾಜ ಆಚಾರ್ಯ ಕಾಡಬೆಟ್ಟು, ಜಿ.ಟಿ ಆಚಾರ್ಯ ಮುಂಬಯಿ, ರಾಜಗೋಪಾಲ ಆಚಾರ್ಯ ಮಂಗಳೂರು, ಆನಂದ ಆಚಾರ್ಯ ಮದ್ಯ, ಶ್ರೀಧರ ಆಚಾರ್ಯ ಕಟಪಾಡಿ, ಜಯಪ್ರಕಾಶ ಆಚಾರ್ಯ ಕುಡ್ಚಿಲ, ಉಮೇಶ ಆಚಾರ್ಯ ಕಡೇಶ್ವಾಲ್ಯ, ವಿಶ್ವನಾಥ ಆಚಾರ್ಯ ಉಚ್ಚಿಲ, ಹರೀಶ್ ಆಚಾರ್ಯ ಕಾರ್ಕಳ ಆಯ್ಕೆಗೊಂಡರು. ಖಾಯಂ ಆಹ್ವಾನಿತರನ್ನು, ಸಲಹಾ ಮಂಡಳಿಯ ಸದಸ್ಯರನ್ನೂ ಇದೇ ವೇಳೆ ಆಯ್ಕೆ ಮಾಡಲಾಯಿತು. ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ವೆಂಕಟರಮಣ ಆಚಾರ್ಯ, ಬಿ.ಜಿ.ರಮೇಶ್ ಆಚಾರ್ಯ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ ಅವರು ನೂತನ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ, ಬೆಳುವಾಯಿ, ಸುಂದರ ಆಚಾರ್ಯ ಬೆಳುವಾಯಿ, ಜಯಕರ ಆಚಾರ್ಯ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಸ್ವಾಗತಿಸಿ, ಅಸೆಟ್ ಪ್ರಧಾನ ಕಾರ್ಯದರ್ಶಿ ಕೆ.ಜೆ.ಗುರುರಾಜ ಆಚಾರ್ಯ ಮಂಗಳೂರು ವಂದಿಸಿದರು.
ಕಾಪು : ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮ ಸಂಪನ್ನ
Posted On: 18 Jun 2022, 04:40 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮಗಳು ಜೂನ್ 17ರಂದು ಸಂಪನ್ನಗೊಂಡಿತು. ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೊರಂಗ್ರಪಾಡಿ ದೊಡ್ಡಮನೆ ವಾಸುದೇವ ಶೆಟ್ಟಿ ಕಾಪು , ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ರಾಜಶೇಖರ ಕೋಟ್ಯಾನ್, ಅನಿಲ್ ಬಲ್ಲಾಳ್ ಬೀಡು, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಮುಂಬೈ ಸಮಿತಿಯ ಉಪಾಧ್ಯಕ್ಷ ಉದ್ಯಮಿ ಕೃಷ್ಣ ವೈ. ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ , ಮಾರಿಯಮ್ಮ ದರ್ಶನ ಪಾತ್ರಿ ಗುರುಮೂರ್ತಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಎಸ್. ಶೆಟ್ಟಿ , ಗಂಗಾಧರ ಸುವರ್ಣ, ಕಟ್ಟಡ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಪುರಸಭಾ ವಾರ್ಡ್ಸಂ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಲೀಲಾಧರ ಶೆಟ್ಟಿ, ಶಿಸ್ತು ಪಾಲನ ಸಮಿತಿಯ ಪ್ರಧಾನ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಮತ್ತು ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಮೂವತ್ತನೇ ಮನೆ ಹಸ್ತಾಂತರ
Posted On: 17 Jun 2022, 08:08 PM
ಉಡುಪಿ : ಸಂಸ್ಥೆಯ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಾದೂರಿನ ಮಲ್ಲಿಕಾ ಶೆಟ್ಟಿ (ದ್ವಿತೀಯ ಪಿ.ಯು.ಸಿ) ಹಾಗೂ ನರ್ಸಿಂಗ್ ವಿದ್ಯಾರ್ಥಿನಿ ರಕ್ಷಿತಾ ಶೆಟ್ಟಿ ಇವರಿಗೆ ಮಂಗಳೂರಿನ ಉದ್ಯಮಿ ಪಿ. ಗೋಕುಲನಾಥ ಪ್ರಭುರವರು ತಮ್ಮ ಮಾತೃಶ್ರೀ ಪದ್ಮಾವತಿ ವೆಂಕಟ್ರಾಯ ಪ್ರಭು ಅವರ ಜನ್ಮಶತಾಬ್ದದ ಶುಭಾವಸರದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಪದ್ಮಾವತಿ’ಯನ್ನು ನಿವೇದಿತಾ ಜಿ. ಪ್ರಭು ಮತ್ತು ಪಿ. ಗೋಕುಲನಾಥ ಪ್ರಭು ಅವರು ಜೂನ್ 16 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗದಂತಹ ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯ ನನಗೆ ತುಂಬಾ ಸಂತೋಷ ನೀಡಿದೆ. ಈ ಮನೆಯಲ್ಲಿ ಎಲ್ಲರೂ ಸುಖ ಸಂತೋಷದಿಂದ ಬಾಳುವಂತಾಗಲಿ ಎಂದು ಶುಭಕೋರಿದರು. ಡಾ. ಜೆ.ಎನ್. ಭಟ್ ಮತ್ತು ಶಾಂತಿ ಎನ್. ಭಟ್ ಶುಭಹಾರೈಸಿದರು. ಮನೆ ನಿರ್ಮಿಸಿದ ಇಂಜಿನಿಯರ್ ಕಾಪು ಲಕ್ಷ್ಮೀಶ ತಂತ್ರಿಯವರನ್ನು ಗೌರವಿಸಲಾಯಿತು. ಗೋಕುಲನಾಥ್ ಪ್ರಭು ಅವರ ಪುತ್ರ ಅವಿನಾಶ್ ಪ್ರಭು, ಯು. ವಿಶ್ವನಾಥ ಶೆಣೈ, ವಿನಾಯಕ್ ಬಾಳಿಗಾ, ಲೀಲಾಧರ ಶೆಟ್ಟಿ ಕಾಪು, ಅನಂತ ಮೂಡಿತ್ತಾಯ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿಗಳಾದ ಮನೋಹರ ಕೆ., ಪ್ರೊ. ಕೆ. ಸದಾಶಿವ ರಾವ್, ಎಚ್. ಎನ್. ಶೃಂಗೇಶ್ವರ, ಭುವನಪ್ರಸಾದ್ ಹೆಗ್ಡೆ, ಎ. ನಟರಾಜ ಉಪಾಧ್ಯ, ವಿಜಯ್ ಕುಮಾರ್ ಮುದ್ರಾಡಿ, ಕೆ. ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ಅಶೋಕ್ ಎಂ., ಆನಂದ ಶೆಟ್ಟಿ, ಮಂಜುನಾಥ, ನಾಗರಾಜ ಹೆಗಡೆ ಹಾಗೂ ಇನ್ನಂಜೆ ಪ್ರೌಢಶಾಲೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಇದು ಸಂಸ್ಥೆಯು ದಾನಿಗಳ ನೆರವಿನಿಂದ ನಿರ್ಮಿಸಿಕೊಟ್ಟ 30ನೇ ಮನೆಯಾಗಿದ್ದು, ಈ ತಿಂಗಳಿನಲ್ಲಿ ಇನ್ನೂ 5 ಮನೆಗಳು ಉದ್ಘಾಟನೆಗೊಳ್ಳಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸುತ್ತಾ ನುಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದೊಗೆ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ನಾರಾಯಣ ಎಂ. ಹೆಗಡೆ ವಂದಿಸಿದರು.
ಜೂನ್ 20 : ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳ ಉದ್ಘಾಟನೆ
Posted On: 17 Jun 2022, 07:56 PM
ಕಾಪು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯು ಅತ್ಯಂತ ಮಹತ್ವದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಉದ್ದೇಶ . ಈ ನಿಟ್ಟಿನಲ್ಲಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರುವಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳನ್ನು ರಚಿಸಿದ್ದು ಈ ಕ್ಲಬ್ ಗಳ ಉದ್ಘಾಟನಾ ಸಮಾರಂಭವು ದಿನಾಂಕ ಜೂನ್ 20 ಸೋಮವಾರದಂದು ಮಧ್ಯಾಹ್ನ 2-30 ಕ್ಕೆ ಶಾಲಾ ಸಭಾಭವನದಲ್ಲಿ ನಡೆಯಲಿದೆ. ಕಾಪು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು, ನಿವೃತ್ತ ಶಿಕ್ಷಕರು, ಪತ್ರಕರ್ತರು ಹಾಗೂ ಖ್ಯಾತ ರೊಟೇರಿಯನ್ ಆದ ಪುಂಡಲೀಕ ಮರಾಠೆ ಇವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು, ಕಾರ್ಯಾಧ್ಯಕ್ಷರಾದ ಪ್ರಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ : ಮಟ್ಕಾ ಜುಗಾರಿ ಚೀಟಿ ಬರೆಯುತ್ತಿದ್ದ ವ್ಯಕ್ತಿ ಬಂಧನ
Posted On: 16 Jun 2022, 10:52 PM
ಪಡುಬಿದ್ರಿ : ಇಲ್ಲಿನ ಅಪೋಲೋ ಮೆಡಿಕಲ್ನ ಹಿಂಭಾಗದ ಓಣಿಯಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ಜೂ.15 ರಂದು ಬಂಧಿಸಲಾಗಿದೆ. ಬಂಧಿತನ ಕಟಪಾಡಿ ಪಳ್ಳಿಗುಡ್ಡೆ, ಕೋಟೆ ಗ್ರಾಮದ ಅಬ್ದುಲ್ ರಜಾಕ್ (37)ನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಿಸಿದಾಗ ಕಿರಣ್ ಕಟಪಾಡಿ ಎಂಬಾತನ ಸೂಚನೆಯಂತೆ ಜನರನ್ನು ಸೇರಿಸಿ ಚೀಟಿ ಬರೆದು ಕೊಡುತ್ತಿದ್ದು, ಸಂಗ್ರಹಿಸಿದ ಹಣವನ್ನು ಕಿರಣ್ ಗೆ ನೀಡುತ್ತಿದ್ದು ಬಹುಮಾನ ವಿಜೇತರಿಗೆ ಅಬ್ದುಲ್ ರಜಾಕ್ ಮುಖಾಂತರ ಹಣವನ್ನು ನೀಡುತ್ತಿದ್ದ ಎನ್ನಲಾಗಿದೆ. ಅಬ್ದುಲ್ ರಜಾಕ್ನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,830/- ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಲ್ಲಾ ಕಚೇರಿಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡ ಅನುಷ್ಠಾನ ಆಗಬೇಕು : ಡಾ.ಟಿ.ಎಸ್.ನಾಗಾಭರಣ
Posted On: 16 Jun 2022, 06:02 PM
ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸುವುವಾಗ ಇಲಾಖೆಗಳ ಮಧ್ಯೆ ಆಗುವ ಪ್ರತಿಯೊಂದು ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಒಂದೊಮ್ಮೆ ಅಂಗ್ಲಭಾಷೆಯಲ್ಲಿ ಇದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ಎಚ್ಚರಿಸುವ ಕೆಲಸವನ್ನು ಮಗದೊಂದು ಇಲಾಖೆ ಮಾಡುವುದರೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಸಾರ್ವಜನಿಕರು ತಮ್ಮ ದೈನಂದಿನ ಆರ್ಥಿಕ ಚಟುವಟಿಕೆಗಳನ್ನು ನಡೆಸಿ, ಅಗತ್ಯ ಸೇವೆಗಳನ್ನು ಪಡೆಯಲು ಬ್ಯಾಂಕ್ಗಳಿಗೆ ಭೇಟಿ ನೀಡಿದಾಗ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಒಂದೊಮ್ಮೆ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಕನ್ನಡದ ಭಾಷಾ ಸಮಸ್ಯೆ ಇದ್ದಲ್ಲಿ ಅವರಿಗೆ ಆಗಿಂದಾಗ್ಗೆ ಕನ್ನಡ ಕಲಿಕೆ ತರಬೇತಿಯನ್ನು ಕೊಡುವ ಕಾರ್ಯ ಅಗ್ರಗಣ್ಯ ಬ್ಯಾಂಕ್ಗಳಿಂದ ಆಗಬೇಕು ಎಂದು ಸೂಚನೆ ನೀಡಿದರು. ಪ್ರಸ್ತುತ ಜಿಲ್ಲೆಯ ಬ್ಯಾಂಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಹಾಗೂ ಕನ್ನಡೇತರ ಸಿಬ್ಬಂದಿಗಳ ಬಗ್ಗೆ ಹಾಗೂ ಅವರುಗಳಿಗೆ ಕನ್ನಡ ಓದಲು, ಬರೆಯಲು ಹಾಗೂ ಮಾತನಾಡುವ ಬಗ್ಗೆ ವಿವರಗಳನ್ನು ಪ್ರಾಧಿಕಾರಕ್ಕೆ ನೀಡಬೇಕು ಎಂದ ಅವರು, ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ಕನ್ನಡಿಗರೇ ಬ್ಯಾಂಕ್ ಉದ್ಯೋಗದಲ್ಲಿ ಸೇರುವಂತೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಟಿಎಂ ಯಂತ್ರದ ಡಿಸ್ ಪ್ಲೇ ಗಳಲ್ಲಿ ಕನ್ನಡದ ಬಳಕೆ ಕಡ್ಡಾಯವಾಗಿ ಇರುವಂತೆ ಎಚ್ಚರವಹಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಅಪಾಯದ ಎಚ್ಚರಿಕ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಿದ್ದಲ್ಲಿ ಸ್ಥಳಿಯ ಜನರಿಗೆ ಅದರ ಎಚ್ಚರಿಕೆ ಗೊತ್ತಾಗಿ ಅಪಘಾತ ಸಂಭವಿಸುವುದು ತಪ್ಪುತ್ತದೆ. ಕೈಗಾರಿಕೆಗಳಲ್ಲಿ ಕೌಶಲ್ಯ ಹಾಗೂ ಅಕೌಶಲ್ಯ ಕೆಲಸಗಳಿಗೆ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದ ಅವರು ಪ್ರತಿಯೊಂದು ಉದ್ಯೋಗ ಘಟಕಗಳಲ್ಲಿ ಕನ್ನಡ ಸೆಲ್ಗಳನ್ನು ತೆರೆಯಬೇಕು ಅದರಲ್ಲಿ ಸಿಬ್ಬಂದಿ ವರ್ಗದವರು ಹೆಚ್ಚು ಇರುವುದು ಅಗತ್ಯ ಎಂದರು. ಗೊಬ್ಬರ, ಕೀಟನಾಶಕ ಮತ್ತು ಔಷಧಿಗಳ ಮೇಲೆ ಅವುಗಳ ಬಳಕೆ ಹಾಗೂ ಅದರಲ್ಲಿನ ಅಂಶಗಳ ಕುರಿತು ಕನ್ನಡದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಒಂದೊಮ್ಮೆ ನಮೂದಿಸದೇ ಇರುವುದು ಕಂಡು ಬಂದಲ್ಲಿ ಅಂತಹ ಕಂಪೆನಿಗಳಿಗೆ ಪತ್ರ ಬರೆದು ನಮೂದಿಸುವಂತೆ ಎಚ್ಚರಿಸಬೇಕು. ವೈದ್ಯರುಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಪರೀಕ್ಷಾ ವರದಿ ಅಥವಾ ರೋಗದ ಬಗ್ಗೆ ರೋಗಿಗಳಿಗೆ ಅಥವಾ ಅವರ ಸಂಬಂಧಿಕರಿಗೆ ಕನ್ನಡದಲ್ಲಿಯೇ ಸ್ಪಷ್ಟವಾಗಿ ಅರ್ಥವಾಗುವಂತೆ ತಿಳಿಸಬೇಕು. ಆರೋಗ್ಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ವರದಿಗಳನ್ನು ಕಳುಹಿಸುವಾಗ ಅವು ಕನ್ನಡದಲ್ಲಿಯೇ ಇರಬೇಕು ಎಂದರು. ಸಾಮಾನ್ಯವಾಗಿ ಎಲ್ಲಾ ಆಂಗ್ಲಪದಗಳಿಗೆ ಪರ್ಯಾಯವಾಗಿ ಕನ್ನಡ ಬಳಕೆಗೆ ಅನುಕೂಲವಾಗುವಂತೆ ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ 86 ವಿವಿಧ ಶಬ್ಧಕೋಶಗಳು ಲಭ್ಯವಿದ್ದು, ಇವುಗಳ ಸದ್ಬಳಕೆ ಮಾಡಿಕೊಳ್ಳಬಹುದು ಎಂದ ಅವರು, ಆಡಳಿತದಲ್ಲಿ ಮಿಂಚಂಚೆಗಳನ್ನು ಕಳುಹಿಸುವಾಗ ವಿಳಾಸಗಳನ್ನು ಕನ್ನಡದ ಪದ ಬಳಕೆ ಪ್ರಾರಂಭವಾಗಿದ್ದು, ಇದರ ಬಳಕೆಯಾಗಬೇಕು ಎಂದರು. ಕನ್ನಡ ಕಲಿಕಾ ಅಧಿನಿಯಮ 2017 ರ ಅನ್ವಯ ಎಲ್ಲಾ ಶಾಲೆಗಳು, ಮದರಸಗಳೂ ಸೇರಿದಂತೆ, ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಒಂದು ಭಾಷೆಯಾಗಿ ಇರಬೇಕು. ಸಿ.ಬಿ.ಎಸ್.ಸಿ. ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 9 ರ ವರೆಗೆ ಸ್ಥಳೀಯ ಭಾಷೆಯನ್ನು ಒಂದು ವಿಷಯವಾಗಿ ಕಲಿಸಿದರೂ 10 ನೇ ತರಗತಿಯಲ್ಲಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಅಂಕಗಳನ್ನು ಗಣನೆಗೆ ತೆಗದುಕೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಜಾಹೀರಾತು ಫಲಕಗಳಲ್ಲಿ ಕನ್ನಡದ ಬಳಕೆ ಅಲ್ಪ ಪ್ರಮಾಣದಲ್ಲಿ ಇರುವಂತಹ ಪ್ರಕಟಣೆಗಳಿಗೆ ಕಡಿವಾಣ ಹಾಕಬೇಕು. ಅಂಗಡಿ ನಾಮಫಲಕಗಳು ಕನ್ನಡದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು. ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮತ್ತಿತರ ಟೆಂಡರ್ ಕರೆಯುವಾಗ ಅರ್ಜಿ ನಮೂನೆಗಳು ಪ್ರತಿಯೊಂದು ಕನ್ನಡದಲ್ಲಿಯೇ ಇರಬೇಕು. ಉದ್ಯಾನವನಗಳು, ಸರಕಾರಿ ಕಟ್ಟಡಗಳಲ್ಲಿ ಕನ್ನಡದ ಕವಿಗಳು ಸಮಾಜಕ್ಕೆ ನೀಡಿರುವ ಹಿತ ಸಂದೇಶಗಳನ್ನು ಪ್ರಚಾರಪಡಿಸಬೇಕು. ಕನ್ನಡ ಎಲ್ಲೆಡೆ ಕಾಣಬೇಕು, ಕನ್ನಡ ಎಲ್ಲೆಡೆ ಕೇಳಬೇಕು ಎಂದ ಅವರು ಉಡುಪಿ ಜಿಲ್ಲೆಯು ಕನ್ನಡ ಅನುಷ್ಠಾನಗೊಳಿಸುವಲ್ಲಿ ಮಾದರಿ ಜಿಲ್ಲೆಯಾಗಬೇಕು ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯನ್ನು ಎಲ್ಲರ ಸಹಭಾಗಿತ್ವದೊಂದಿಗೆ ಕನ್ನಡಮಯವಾಗಿಸಬಹುದಾಗಿದ್ದು, ಇದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಅವರು ಇಂದಿನ ಸಭೆಯಲ್ಲಿ ನೀಡಿರುವ ಸಲಹೆ ಹಾಗೂ ಮಾರ್ಗದರ್ಶನಗಳು ಕನ್ನಡ ಅನುಷ್ಠಾನಕ್ಕೆ ಹೆಚ್ಚಿನ ಸಹಕಾರಿಯಾಗಲಿವೆ ಎಂದರು. ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ರಮೇಶ್ ಗುಬ್ಬಿಗೂಡು, ಕಾರ್ಯದರ್ಶಿಗಳಾದ ಡಾ.ಸಂತೋಷ್ ಹಾನಗಲ್, ಮಹೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ವಿವಿಧ ಸಾಹಿತಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಬಿಜೆಪಿ ಸೇರ್ಪಡೆ
Posted On: 15 Jun 2022, 10:49 PM
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಳಾ ಆಚಾರ್ಯರವರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಸಮ್ಮತಿ ಮೇರೆಗೆ ಇಂದು ಕಾಪು ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಶ್ರೀಕಾಂತ್ ನಾಯಕ್ , ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಪ್ರಮುಖರಾದ ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಶಶಿಪ್ರಭಾ ಶೆಟ್ಟಿ, ಗೋಪಾಲಕೃಷ್ಣ ರಾವ್, ಕೇಸರಿ, ಶರ್ಮಿಳಾ ಆಚಾರ್ಯ, ಸಂದೀಪ್ ರಾವ್, ಸುಶಾಂತ್ ಕುತ್ಯಾರು, ಮಧುಸೂದನ್, ವಿಜಯ್ ಕುಮಾರ್, ನವೀನ್ ಎಸ್ ಕೆ, ಗಣೇಶ್ ಶೆಟ್ಟಿ ಹೇರೂರು, ನಳಿನಾಕ್ಷಿ ಆಚಾರ್ಯ, ಶೈಲಜಾ ನಾರಾಯಣ ಪೂಜಾರಿ, ನಿತ್ಯಾನಂದ ಆಚಾರ್ಯ, ಮೇಘನಾಥ ಆಚಾರ್ಯ, ದಿನೇಶ್ ದೇವಾಡಿಗ, ಶ್ರೀನಿವಾಸ ದೇವಾಡಿಗ, ಶಂಕರ್ ಹೇರೂರು ಹಾಗೂ ಮಜೂರು ಗ್ರಾಮ ಪಂಚಾಯತ್ ನ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ 4 ಆರೋಪಿಗಳ ಸೆರೆ
Posted On: 15 Jun 2022, 09:34 PM
ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ಪ್ರದೀಪ್ ಟಿ ಆರ್ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಕಾಸರಗೋಡಿನ ಮಹಮ್ಮದ್ ರಮೀಝ್(24), ಮೊಹಿದ್ದೀನ್ ರಾಶೀದ್(24), ಅಬ್ದುಲ್ ರವೂಫ್(35), ಬೆಂಗಳೂರಿನ ಸಬಿತಾ @ ಚಿಂಚು @ ಸಮೀರಾ(25), ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 125 ಗ್ರಾಂ ತೂಕದ ರೂ. 6 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 6 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಡ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 9,82,000/-ಲಕ್ಷ ಆಗಬಹುದು. ಆರೋಪಿಗಳು ಬೆಂಗಳೂರಿನಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು. ಆರೋಪಿಗಳ ಪೈಕಿ ಮೊಹಮ್ಮದ್ ರಮೀಝ್ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ 2 ಪ್ರಕರಣ ದಾಖಲಾಗಿರುತ್ತದೆ. ಈತನು 6 ತಿಂಗಳ ಹಿಂದೆ ಜೈಲ್ ನಿಂದ ಬಿಡುಗಡೆಗೊಂಡಿದ್ದನು. ಆರೋಪಿ ಅಬ್ದುಲ್ ರವೂಫ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಿಧ ಅಕ್ರಮಗಳ ಬಗ್ಗೆ ದೂರು ನೀಡಿದರೂ ಜಿಲ್ಲಾಧಿಕಾರಿಗಳ ಅಸಡ್ಡೆ ; ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗೆ ಸಜ್ಜು
Posted On: 15 Jun 2022, 09:23 PM
ಉಡುಪಿ : ಜಿಲ್ಲೆಯ ವಿವಿಧ ಸಂಘಟನೆಗಳಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ನಿರಂತರವಾಗಿ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಉದಾಸಿನ ಭಾವನೆ ತೋರುತ್ತಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು (ನ್ಯಾಯಕ್ಕಾಗಿ ಹೋರಾಟ) ಧರಣಿ (ಪ್ರತಿಭಟನೆ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ/ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಂಘಟನೆಯಿಂದ ಜಿಲ್ಲಾಧಿಕಾರಿಯವರಿಗೆ ಮಾಚ್೯ 3ರಂದು ದೂರು. ಈ ಬಗ್ಗೆ ಪತ್ರಕರ್ತರಾದ ಕಿರಣ್ ಪೂಜಾರಿ ಕುಂದಾಪುರ ಸಾಕ್ಷಿ ಸಮೇತ ದಾಖಲೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಹಾಗೂ ಮುಖ್ಯಮಂತ್ರಿ, ಆರೋಗ್ಯ ಮಂತ್ರಿ, ಗೃಹ ಮಂತ್ರಿ ಮತ್ತು ಸಂಬಂಧಪಟ್ಟ ಪೋಲಿಸ್ ಇಲಾಖೆ ಎಲ್ಲರಿಗೂ ತಪ್ಪಿತಸ್ಥ ಬಿ.ಎ.ಎಂ.ಎಸ್. ವೈದ್ಯರು (ಆರ್ಯುವೇದಿಕ್) ಗಳ ಮೇಲೆ ಕ್ರಮ ಕೈಗೊಂಡು ಸಾರ್ವಜನಿಕರ ಪ್ರಾಣ ಹಾನಿಯನ್ನು ರಕ್ಷಣೆ ಮಾಡಬೇಕೆಂದು ಕೋರಿದ್ದರು ಕ್ರಮ ಕೈಗೊಳ್ಳದೆ ಇರುವ ಬಗ್ಗೆ. ಉಡುಪಿ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಹೋರಾಟ ವೇದಿಕೆಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಉಡುಪಿ ಇವರಿಗೆ ಕುಂದಾಪುರ ತಾಲೂಕಿನ ತಹಶೀಲ್ದಾರರಾದ ಕಿರಣ್ ಗೌರಯ್ಯ ಇವರು ನಕಲಿ ಪರಿಶಿಷ್ಟ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಸರಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ದೂರು. ಬ್ರಹ್ಮಾವರ ಸೀತಾನದಿ ರಾಜ್ಯ ಹೆದ್ದಾರಿ (ಹಿಂದಿನ ಲೋಕೊಪಯೋಗಿ ರಸ್ತೆ) ಯನ್ನು ಅಂದಾಜು ಸುಮಾರು 30 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪ್ರಾರಂಭದಲ್ಲಿ ವೇದಿಕೆಯು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಮತ್ತು ಸರಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಾರ್ವಜನಿಕ ಧರಣಿ ಕೂಡ ನಡೆಸಿ ಜಿಲ್ಲಾಡಳಿತಕ್ಕೆ ಮತ್ತು ಸರ್ಕಾರಕ್ಕೆ ಮನವಿ ನೀಡಲಾಗಿದೆ. ಇದುವರೆಗೆ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆದಿರುವುದಿಲ್ಲ. ಮೀಸಲು ಅರಣ್ಯ ಭೂಮಿ ಸರ್ವೆ ನಂಬ್ರ 147 ರಲ್ಲಿ ಪರಿಶಿಷ್ಟ ಪಂಗಡದ ನಿಧಿಯನ್ನು ದುರ್ಬಳಕೆ ಮಾಡಿ ಅರಣ್ಯದ ಜಾಗದಲ್ಲಿ ಕರ್ಜೆ ಎಂಬಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಇವರಿಗೆ ನಮ್ಮ ವೇದಿಕೆ ಮತ್ತು ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಮನವಿ ನೀಡಿದೆ. ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಪಂಚಾಯತ್ ಸದಸ್ಯರ ಕುಟುಂಬಗಳಿಗೆ ಪಂಚಾಯತ್ ಅಂಗಡಿಕೋಣೆಗಳನ್ನು ಕಡಿಮೆ ಬಾಡಿಗೆಗೆ ನೀಡಿ ಕಳೆದ 2004 ರಿಂದ ಸರಕಾರದ ಖಜಾನೆಗೆ ನಷ್ಟ ಉಂಟು ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಲಾಗಿದೆ. ಈ ಬಗ್ಗೆ 2011 ರಿಂದ ಜಿಲ್ಲಾಡಳಿತಕ್ಕೆ ಸರಕಾರಕ್ಕೆ ದೂರು ನೀಡಲಾಗಿದೆ. ಬೈಂದೂರು ಉಪತಹಶೀಲ್ದಾರರಾಗಿರುವ ಲತಾ ಎಸ್. ಶೆಟ್ಟಿ ಎಂಬುವರು ಸರಕಾರಿ ಜಮೀನನ್ನು ಕಬಳಿಸುವ ಸಂಚು ನಡೆಸಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿಕೊಂಡಿರುವ ಬಗ್ಗೆ ದೂರು ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಯೋಜನೆಗಳಿಗೆ ಮತ್ತು ಅದರ ದೂರುಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ನ್ಯಾಯಾಲಯ ನೀಡುವ ಆದೇಶ ಪಾಲನೆ ಮಾಡದೇ ಇರುವ ಬಗ್ಗೆ ನಮ್ಮ ವೇದಿಕೆಯಿಂದ ಉಚ್ಚನ್ಯಾಯಾಲಯದ ನ್ಯಾಯ ಮೂರ್ತಿಯವರಿಗೆ ಜಿಲ್ಲಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಪಂಚಾಯತ್ ದೂರು ನೀಡಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲಾ ಕಛೇರಿ ಮತ್ತು ಅಧೀನ ಕಛೇರಿಗಳಲ್ಲಿ ಸಾರ್ವಜನಿಕರ ದೂರುಗಳಿಗೆ ಹಿಂಬರಹ ನೀಡದೆ ಇರುವ ಬಗ್ಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಶೇಖರ್ ಹಾವಂಜೆ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕರು, ಸದಾಶಿವ ಶೆಟ್ಟಿ, ಜಿಲ್ಲಾಧ್ಯಕ್ಷರು RTI ಕಾರ್ಯಕರ್ತ ಸಮಿತಿ, ಉಡುಪಿ ಜಿಲ್ಲೆ, ಸಪನ್ ಕರ್ನಾಟಕ ರಾಷ್ಟ್ರ ಸಮಿತಿ (KRS) ಉಡುಪಿ, ಸದಾಶಿವ ಕೋಟೆಗಾರ್, ಕಾರ್ಯದರ್ಶಿ ಜನತಾ ವೇದಿಕೆ ಕುಂದಾಪುರ, ಸತೀಶ್ ಪೂಜಾರಿ ಬಾರ್ಕೂರ್ ನಾಗರಿಕ ಹಿತರಕ್ಷಣಾ ಸಮಿತಿ, ಬ್ರಹ್ಮಾವರ ಉಪಸ್ಥಿತರಿದ್ದರು.
