Updated News From Kaup
ಕಲೆ, ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು : ಪ್ರೊ. ಕಿಶೋರ್ ಕುಮಾರ್ ಸಿ.ಕೆ
Posted On: 15 Jun 2022, 08:47 AM
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಬಹಳ ಮುತುವರ್ಜಿಯಿಂದ ಸಾಮಾಜಿಕ ಕಳಕಳಿಯಿಂದ ದೇಶದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅದರಲ್ಲು ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸ್ತುತ್ಯಾರ್ಹ ವಿಚಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಅವರು ಹೇಳಿದರು. ಅವರು ಜೂ.12ರಂದು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾದ “ಸಂಸ್ಕೃತಿ ವೈಭವ" ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆಯ ಬಗ್ಗೆ ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಮಕ್ಕಳ ಶೈಕ್ಷಣಿಕ ವಿಚಾರದ ಬಗ್ಗೆ ಕಾಳಜಿ ಇರುವ ಇಂತಹ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೂ ಹೆಮ್ಮೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ SSLC ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ದ.ಕ. ಜಿಲ್ಲೆಯ ಸುಮಾರು ಹನ್ನೊಂದು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಕಾಶವಾಣಿಯ ಹಿರಿಯ ಉದ್ಘೋಷಕ ಹಾಗೂ ಸಾಹಿತಿ ಮುದ್ದು ಮೂಡುಬೆಳ್ಳೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದರು. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತ ನಿರ್ದೇಶಕ ಎಂ ಆರ್. ವಾಸುದೇವ, NSCDF ಅಧ್ಯಕ್ಷ ಗಂಗಾಧರ್ ಗಾಂಧಿ, ಹಾಗೂ ಲೇಖಕಿ ವಿಂಧ್ಯಾ ಎಸ್. ರೈ, ಕವಿ ಗೋಪಾಲಕೃಷ್ಣ ಶಾಸ್ತ್ರಿ ಉಪಸ್ಥಿತರಿದ್ದರು. ನಂತರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 44 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತ ಗಾಯನ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.
ಕಾಪು ಬಂಟರ ಸಂಘ : ಭಜನಾ ಕಾರ್ಯಕ್ರಮ ಉದ್ಘಾಟನೆ
Posted On: 14 Jun 2022, 11:59 PM
ಕಾಪು : ಬಂಟರ ಸಂಘ (ರಿ) ಕಾಪುವಿನ ಭಜನಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ, ಸಂಘದ ಕಛೇರಿಯಲ್ಲಿ ಜರಗಿತು. ಮುಂಬೈ ಉದ್ಯಮಿ ಉದಯ ಸುಂದರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಭಜನೆಯ ಮಹತ್ವ, ತಂಡಗಳ ಹೊಣೆ, ತರಬೇತಿ, ವ್ಯಕ್ತಿತ್ವ ವಿಕಸನ, ಶೃತಿ, ಲಯ, ತಾಳ ಮತ್ತು ಭಾಷಾ ಶುದ್ಧತೆ ಹಾಗೂ ಸಂವಹನ ಸಾಮರ್ಥ್ಯ ವೃದ್ಧಿಯ ಬಗ್ಗೆ ಮಾತನಾಡಿದರು. ಶೀಲಾ ಕೆ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು ಬಂಟರ ಸಂಘ(ರಿ) ಕಾಪು ಇದರ ಅಧ್ಯಕ್ಷ ವಾಸುದೇವ ಶೆಟ್ಟಿಯವರು ವಹಿಸಿದ್ದರು. ಕಾಪು ಬಂಟರ ಸಂಘದ ಮಹಿಳಾ ವೇದಿಕೆಯ ಸಂಚಾಲಕಿ ಜಯಲಕ್ಷ್ಮೀ ಎಸ್ ಶೆಟ್ಟಿಯವರು ಸ್ವಾಗತಿಸಿ, ಕಾರ್ಯದರ್ಶಿ ಲೀಲಾಧರ ಶೆಟ್ಟಿಯವರು ಪ್ರಾಸ್ತಾವಿಕ ಮಾಡಿದರು. ನಿರ್ಮಲ್ ಕುಮಾರ್ ಹೆಗ್ಡೆಯವರು ಕಾರ್ಯಕ್ರಮ ನಿರೂಪಣೆ ಮಾಡಿ, ಪ್ರಭಾತ್ ಶೆಟ್ಟಿ ಮೂಳೂರು ವಂದಿಸಿದರು.
ಶಂಕರಪುರ : ಆರೋಗ್ಯ ತಪಾಸಣೆಯ ನೆಪದಲ್ಲಿ ವೈದ್ಯನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ
Posted On: 14 Jun 2022, 11:37 PM
ಶಿರ್ವ : ಇಲ್ಲಿನ ಕ್ಲಿನಿಕ್ ಒಂದರ ವೈದ್ಯ ಪತಿಯೊಂದಿಗೆ ಆರೋಗ್ಯ ತಪಾಸಣೆಗೆ ಬಂದಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ ಕ್ಲಿನಿಕ್ಗೆ ಹೋಗಿದ್ದ ಸಮಯ ಅಲ್ಲಿನ ವೈದ್ಯ ಡಾ| ಮುರಳೀಕೃಷ್ಣ ಭಟ್ ತಪಾಸಣೆಯ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ವೈದ್ಯರ ವಿರುದ್ಧ ಮಹಿಳೆ ನೀಡಿದ ದೂರಿನನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 13 Jun 2022, 08:17 PM
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಟೆಸ್ಟಿಂಗ್ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ತಕ್ಷಣದಲ್ಲಿ ಕೈಗೊಂಡು, ಅದು ಇತರರಿಗೆ ಹರಡದಂತೆ ಎಚ್ಚರವಹಿಸಿ. ಎಲ್ಲಾ ತಾಲೂಕುಗಳಲ್ಲಿನ ಕೋವಿಡ್ ಕಾರ್ಯಪಡೆಗಳನ್ನು ಮತ್ತೆ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿನ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿನ್ ಕಾನ್ಸನ್ಟ್ರೇಟರ್ಗಳು, ಆಮ್ಲಜನಕ ತಯಾರಿಕಾ ಮತ್ತು ಶೇಖರಣಾ ಘಟಕಗಳು ಸೇರಿದಂತೆ ಎಲ್ಲಾ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಕಾಲೇಜುಗಳು ಆರಂಭಗೊಳ್ಳುತ್ತಿದ್ದು, ಜಿಲ್ಲೆಗೆ ಹೊರರಾಜ್ಯ ಮತ್ತು ಹೊರ ರಾಷ್ಟçಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಅವರ ಮೂಲಕ ಕೋವಿಡ್ ಪ್ರಕರಣಗಳು ಹರಡದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೋವಿಡ್ ಮುನ್ನೆಚ್ಚರಿಕಾ ಲಸಿಕೆ ಪಡೆಯುವ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಸೂಚನೆ ನೀಡುವಂತೆ ಹಾಗೂ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಲಸಿಕೆ ನೀಡುವಂತೆ ಹಾಗೂ ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕಳೆದ 10 ದಿನದಲ್ಲಿ 2127 ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 17 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಪಾಸಿಟಿವಿಟಿ ದರವು 0.80 ರಷ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 11 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾಹಿತಿ ನೀಡಿದರು. ಮಳೆಗಾಲದಲ್ಲಿ ಕಂಡು ಬರುವ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಸಾರ್ವಜನಿಕರ ಮೊಬೈಲ್ಗಳಿಗೆ ಜಾಗೃತಿ ಕುರಿತ ಆಡಿಯೋ ಸಂದೇಶಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಿ ಮತ್ತು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾರ್ವಜನಿಕ ಜಾಥಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣ ಕುರಿತಂತೆ ಈಗಾಗಲೇ ಜಾಗೃತಿ ಮೂಡಿಸಲು ಪಿ.ಡಿ.ಓ ಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಶಾಲಾ ವಿದ್ಯಾರ್ಥಿಗಳ ಮೂಲಕ ಮನೆ ಮನೆಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ; ಸಾಧಕರಿಗೆ ಸನ್ಮಾನ
Posted On: 13 Jun 2022, 07:51 AM
ಕಾಪು : ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಸಾಧಕರ ಗೌರವಾರ್ಪಣೆ ಮಂಡಲ ಸಂಚಾಲಕರಾದ ಗುರುಕೃಪಾ ರಾವ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ ಪಡುಬಿದ್ರಿ, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿಶೆಟ್ಟಿ, ಹೆಜಮಾಡಿ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಪವಿತ್ರ ಗಿರೀಶ್, ಪಲಿಮಾರು ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು.
ಜಲಜೀವನ್ ಮಿಷನ್ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಿ: ಜಿ.ಪಂ. ಸಿಇಒ ಪ್ರಸನ್ನ ಹೆಚ್
Posted On: 10 Jun 2022, 05:24 PM
ಉಡುಪಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ, ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಶುದ್ಧ ನಳ್ಳಿ ನೀರು ಸಂಪರ್ಕ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಸೂಚಿಸಿದರು. ಅವರು ಇಂದು ಜಿ.ಪಂ. ಕಚೇರಿಯಲ್ಲಿ ನಡೆದ, ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯತ್ಗಳ 246 ಗ್ರಾಮಗಳಲ್ಲಿನ 2,42,526 ಮನೆಗಳ ಒಟ್ಟು 10,32,277 ಜನರಿಗೆ ದೈನಂದಿನ ಬಳಕೆಗಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿದ್ದು, ಈ ಬಗ್ಗೆ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು 2023 ನೇ ಸಾಲಿನ ಒಳಗೆ ಮುಗಿಸಿ, ನಿಗದಿತ ಅವಧಿಯೊಳಗೆ ಗುರಿ ಸಾಧನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ನೀಡಿದ ನಂತರ, ನೀರಿನ ಸಮರ್ಪಕ ಬಳಕೆ ಕುರಿತು ಪರಿಶೀಲಿಸಲು ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವಂತೆ ಹಾಗೂ ಅನಗತ್ಯವಾಗಿ ನೀರು ಪೋಲಾಗದಂತೆ ಅರಿವು ಮೂಡಿಸಿ, ಆಗಾಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಈಗಾಗಲೇ ನಿಟ್ಟೆಯಲ್ಲಿ ಎಂ.ಆರ್.ಎಫ್ ಘಟಕವನ್ನು ಆರಂಭಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ಇದುವರೆಗೆ 1000 ಟನ್ ಗೂ ಅಧಿಕ ಪ್ಲಾಸ್ಟಿಕ್ ಕಸವನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 1 ಮಿನಿ ಎಂ.ಆರ್.ಎಫ್ ಘಟಕ ಆರಂಭಿಸಲು ಟೆಂಡರ್ ಕರೆಯಲಾಗಿದ್ದು, 2 ಮಿನಿ ಎಂ.ಆರ್.ಎಫ್ ಘಟಕ ಆರಂಭಿಸಲು ಮಂಜೂರಾತಿಗೆ ಕಳುಹಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ಅಧ್ಯಕ್ಷರು ಮತ್ತು ಪಿಡಿಓ ಗಳಿಗೆ ನಿಟ್ಟೆ ಎಂ.ಆರ್.ಎಫ್ ಘಟಕಕ್ಕೆ ಆಹ್ವಾನಿಸಿ, ಘಟಕದ ಕಾರ್ಯನಿರ್ವಹಣೆ ಬಗ್ಗೆ ಸವಿವರಣೆ ಮತ್ತು ಪ್ರಾತ್ಯಕ್ಷಿಕೆ ತೋರಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಸಮರ್ಪಕ ರೀತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಮಾಡಲು ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು. ಮನೆಗಳಲ್ಲಿ ತ್ಯಾಜ್ಯದ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶಾಲಾ ಮಕ್ಕಳಿಗೆ ಅರಿವು ಮೂಡಿಸಿ, ಅದನ್ನು ತಮ್ಮ ಮನೆಗಳಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪುಣೆಯ ಬಿಲ್ಲವ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆ
Posted On: 10 Jun 2022, 02:54 PM
ಉಡುಪಿ : ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭೆ ಜರಗಿತು. ಈ ಸಂದರ್ಭ ಸರ್ವಾನುಮತದಿಂದ ಆರಿಸಲಾಯಿತು. ಪುಣೆ ಬಿಲ್ಲವ ಸಂಘದಲ್ಲಿ ಸಕ್ರಿಯ ಸದಸ್ಯರಾಗಿರುವ ಇವರು ಬಿ.ಕಾಂ, ಪದವೀಧರೆಯಾಗಿದ್ದು, ಸೌಂದರ್ಯ ವಿನ್ಯಾಸಕಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದಿದ್ದಾರೆ. ನೃತ್ಯ ಕಲಾವಿದೆಯಾಗಿರುವ ಇವರು ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತನ್ನ ಅಕ್ಕನೊಂದಿಗೆ ಡ್ರೀಮ್ ಕ್ಯಾಚಸ್ ಫೌಂಡೇಶನ್ನಲ್ಲಿ ಕೆಲಸ ಮಾಡುತ್ತಿರುವ ಇವರು ಪುಣೆಯ ಉದ್ಯಮಿ ಶಂಕರ ಪೂಜಾರಿ ಕಲ್ಲುಗುಡ್ಡೆ ಮತ್ತು ಸಂಗೀತಾ ಎಸ್ ಪೂಜಾರಿ ದಂಪತಿಯ ಪುತ್ರಿ.
ಕುರ್ಕಾಲು ಬೀಡು ನವೀನ್ ಶೆಟ್ಟಿಯವರಿಗೆ ಗಡಿಪ್ರಧಾನ
Posted On: 10 Jun 2022, 11:35 AM
ಕಾಪು : ತಾಲೂಕಿನ ಕುರ್ಕಾಲು ಬೀಡಿನ ಸಾರಾಲ ಜುಮಾದಿ ಬಂಟ ದರ್ಶನ ಮತ್ತು ಕುರ್ಕಾಲು ಬೀಡುವಿನ ನವೀನ್ ಶೆಟ್ಟಿಯವರಿಗೆ ಗಡಿಪ್ರಧಾನವು ಇತ್ತೀಚೆಗೆ ಜರಗಿತು. ಈ ಸಂದರ್ಭ ಬೀಡಿನ ಪ್ರಮುಖರು ಮತ್ತು ಊರಿನ ಪ್ರಮುಖರು ಉಪಸ್ಥಿತರಿದ್ದರು.
ಕೊಲೆ ಪ್ರಕರಣ ಭೇದಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು
Posted On: 09 Jun 2022, 11:30 PM
ಮಂಗಳೂರು : ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ಚರಣ್ ರಾಜ್ ಎಂಬವರನ್ನು ಕಿಶೋರ್ ಪುಜಾರಿ ಮತ್ತು ಇತರರ ತಂಡ ಜೂನ್ 4ರಂದು ತಲವಾರು ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಈ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಇದೊಂದು ಪೂರ್ವದ್ವೇಷದಿಂದ ಮಾಡಿರುವ ಕೊಲೆಯಾಗಿದ್ದು. ಈ ಹಿಂದೆ ಮೃತ ಚರಣ್ ರಾಜ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂಪ್ಯ ಬಳಿ ಕಾರ್ತಿಕ್ ಮಾರ್ಲ ಎಂಬವರನ್ನು ಕೊಲೆ ಮಾಡಿದ್ದು ಪ್ರಸ್ತುತ ಜಾಮೀನಿನಲ್ಲಿ ಬಿಡುಗಡೆಗೊಂಡು ಪೆರ್ಲಂಪ್ಪಾಡಿಯಲ್ಲಿ ಹೊಸದಾಗಿ ತೆರೆಯಲಿರುವ ಮೆಡಿಕಲ್ ಶಾಪ್ ಕೆಲಸಕ್ಕೆ ಓಡಾಡಿಕೊಂಡಿದ್ದ ವೇಳೆ ಆರೋಪಿತರುಗಳು ಹೊಂಚುಹಾಕಿ ಕೊಲೆ ಮಾಡಿರುವುದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿಗಾದ ಕಿಶೋರ್ ಪುಜಾರಿ ( 34),ರಾಕೇಶ್ ಮಡಿವಾಳ (27), ರೇಮಂತ್ ಗೌಡ (26), ನರ್ಮೆಶ್ ರೈ(29), ನಿತಿಲ್ ಶೆಟ್ಟಿ (23), ವಿಜೇಶ್(22) ಎಂಬ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಬಾಳುಕತ್ತಿ-1 , ರಾಡ್ -2 ಮತ್ತು ಮೋಟಾರ್ ಸೈಕಲ್ -2 ನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸದ್ರಿ ಪ್ರಕರಣದ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಭಗವಾನ್ ಸೊನವಣೆ ಐಪಿಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಹಾಗು ಮಾನ್ಯ ಪೊಲೀಸ್ ಉಪಾಧೀಕ್ಷಕರಾದ ಗಾನಾ.ಪಿ.ಕುಮಾರ್ ರವರ ಮಾರ್ಗದರ್ಶನದಂತೆ ನವೀನ್ ಚಂದ್ರ ಜೋಗಿ, ಪೊಲೀಸ್ ವೃತ್ತ ನಿರೀಕ್ಷಕರು, ಮತ್ತು ಸಿಬ್ಬಂದಿಗಳು, ರುಕ್ಮ ನಾಯ್ಕ್ ಪಿ ಎಸ್ ಐ ಬೆಳ್ಳಾರೆ ಮತ್ತು ಸಿಬ್ಬಂದಿಗಳು, ದಿಲೀಪ್ ಪೊಲೀಸ್ ಉಪನಿರೀಕ್ಷಕರು ಸುಳ್ಯ ಠಾಣೆ, ಮತ್ತು ಸಿಬ್ಬಂದಿಗಳು, ಉದಯರವಿ ಪಿ ಎಸ್ ಐ ಪುತ್ತೂರು ಗ್ರಾಮಾಂತರ ಠಾಣೆ ಮತ್ತು ಸಿಬ್ಬಂದಿಗಳು, ರಾಜೇಶ್ ಪುತ್ತೂರು ನಗರ ಠಾಣೆ ಮತ್ತು ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದರು.
ಶ್ರೀ ಸರಸ್ವತೀ ಪೀಠ ಆನೆಗುಂದಿ ಸೂರ್ಯ ಚೈತನ್ಯ ಶಾಲೆಯಲ್ಲಿ ಚಿಣ್ಣರ ಚೈತನ್ಯ ಭೋಜನ ಪ್ರಾರಂಭ
Posted On: 09 Jun 2022, 11:17 PM
ಕಾಪು : ಆನೆಗುಂದಿ ಶ್ರೀ ಸರಸ್ವತೀ ಪೀಠ ಎಜುಕೇಷನ್ ಟ್ರಸ್ಟ್ (ರಿ) ಅಸೆಟ್ ನ ಅಧೀನ ಸಂಸ್ಥೆ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಮಧ್ಯಾಹ್ನದ ಊಟದ ಯೋಜನೆಯಾದ ಚಿಣ್ಣರ ಚೈತನ್ಯ ಭೋಜನಕ್ಕೆ ಆನೆಗುಂದಿ ಮಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಸೆಟ್ ನ ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಮಂಗಳೂರು ,ಉಪಾಧ್ಯಕ್ಷ ವಿವೇಕ ಆಚಾರ್ಯ ಶಿರ್ವ , ಶಿಕ್ಷಕ – ಪೋಷಕ ಸಂಘದ ಅಧ್ಯಕ್ಷ ದೀಪಕ್ ಕಾಮತ್ , ಉಪಾಧ್ಯಕ್ಷೆ ಶೋಭಾ ಆಚಾರ್ಯ ,ವಿದ್ವಾನ್ ಶಂಭುದಾಸ್ ಗುರೂಜಿ, ಪ್ರಾಂಶುಪಾಲ ಗುರುದತ್ತ ಸೋಮಯಾಜಿ , ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
