Updated News From Kaup

ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ

Thumbnail
Posted On: 09 Feb 2022, 07:56 PM

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್‍ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ ಮುಂದೆ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದಂತ ಬೆಸ್ಟ್ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕೆಡೆಟ್ ಆಶಿಶ್ ಪ್ರಸಾದ್ ಮತ್ತು ಇತರ ಕ್ಯಾಡೆಟ್ ಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ತರಬೇತಿನ ಮುಖ್ಯ ಉದ್ದೇಶ ಮತ್ತು ಪ್ರಯೋಜನವನ್ನು ತಿಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಹವಾಲ್ದಾರ್ ಜೆಸಿಓ ಟಿಸೆರಿಂಗ್ ಆಂಗ್ಚೋಕ್ , ಸಂತೋಷ್ ಕುಮಾರ್, ಎನ್ಸಿಓ ಗುರು ಪಾಲ್ ಸಿಂಗ್ ಭೂ-ಯುವ ಸೇನಾದಳದ ಕೆಡೆಟ್‍ಗಳನ್ನು ಎನ್.ಸಿ.ಸಿ. ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ಕವಾಯತು, ಭೂಪಟ ಅಧ್ಯಯನ, ಫೈರಿಂಗ್ ಅಣಕುಯುದ್ಧ, ಶಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯಮೂಲಕ ತಿಳಿಸಿ ತರಬೇತಿ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉಪನ್ಯಾಸಕಿ ಯಶೋದ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ,ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು.ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್,ಕಾರ್ಪೋರಲ್ ಧೀರಜ್, ಅನುಪ್ ನಾಯಕ ಮತ್ತಿತರರು ಸಹಕರಿಸಿದರು. ಕ್ಯಾಡೆಟ್ ಜನಿಸಿಯಾ ನೊರೊನ್ಹಾ ಸರ್ವರನ್ನೂ ಸ್ವಾಗತಿಸಿ ,ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ವಂದಿಸಿದರು. ಕ್ಯಾಡೆಟ್ ಎಲ್ರುಷಾ ಮಿಲಿನಾ ಡೇಸ ಕಾರ್ಯಕ್ರಮವನ್ನು ನಿರೂಪಿಸಿದರು.

'ಕೆಡ್ಡಸ' ಮರೆತು ಹೋಗುತ್ತಿರುವ ಆಚರಣೆ - ಭೂಮಿತಾಯಿ 'ಪುಷ್ಪವತಿ' ಎಂಬ 'ಒಸಗೆ'

Thumbnail
Posted On: 09 Feb 2022, 07:46 PM

[ಫೆ.9,10,11 ಅಂದರೆ ಮಕರಮಾಸದ ಕೊನೆಯ ಮೂರು ದಿನ.ಪುಯಿಂತೆಲ್ ತಿಂಗಳ ಅಂತ್ಯದ ದಿನಗಳು : 'ಭೂ ರಜಸ್ವಲಾ ದಿನ'.] ‌‌‌ ‘ನಿಸರ್ಗ ದೇಶಕ್ಕೆ ಸೌಭಾಗ್ಯವನ್ನು ಕೊಡುತ್ತದೆ’ ಎಂಬುದು ಒಂದು ಹಳೆಯ ರೂಢಿಯ ಮಾತು. ಕಾಡು ನಾಡಾಗುತ್ತಾ ಕೃಷಿ ಲಾಭಕಾರಿ ಎನಿಸದೆ, ಅವಗಣನೆಗೆ ಒಳಗಾಗಿರುವ ಅಭಿವೃದ್ಧಿಯ ಭರಾಟೆಯ ಈ ಕಾಲಘಟ್ಟದಲ್ಲಿ ಒಂದು ಪುರಾತನ ಸಾಂಸ್ಕೃತಿಕ ಸಂಭ್ರಮ ಮರೆಯಾಗುತ್ತಿದೆ. ಆದುದರಿಂದಲೇ ನಮ್ಮ ಆಚರಣೆಗಳು ಮೂಲ ಆಶಯ ಕಳೆದುಕೊಳ್ಳುತ್ತಿವೆ, ಔಪಚಾರಿಕವಾಗುತ್ತಿವೆ. ಅಥವಾ ಮರೆತೇ ಹೋಗುತ್ತಿವೆ. ಮರೆತು ಹೋದ - ಹೋಗುತ್ತಿರುವ ಆಚರಣೆಗಳಲ್ಲಿ ತುಳುವರ ‘ಕೆಡ್ಡಸ’ ಒಂದು; ಹೌದು... ಕೆಡ್ಡಸ ಹಾಗಂದರೆ ಏನು, ಯಾವಾಗ ಸನ್ನಿಹಿತವಾಗುತ್ತದೆ ಎಂದು ಪ್ರಶ್ನಿಸುವಂತಾದ ಈ ಸ್ಥಿತಿಗೆ ನಮ್ಮ ಬದುಕಿನ ರೀತಿ-ನೀತಿ-ರಿವಾಜುಗಳು ಬದಲಾದುದೇ ಕಾರಣ. ಮನಸ್ಸು - ಮನಸ್ಸುಗಳ ನಡುವಿನ ಮಾನಸಿಕ ಅಂತರ ಹಿಗ್ಗುತ್ತಾ ಭಾವನಾತ್ಮಕ ಸಂಬಂಧಗಳು ಕೇವಲ ‘ಸೋಗು ಅನ್ನಿಸುತ್ತಾ’ ಮುಂದೆ ಗಮಿಸುವ ಅತಿ ಉತ್ಸಾಹದಲ್ಲಿ ನೆಲ, ಜಲ, ಮರಮಟ್ಟು ,ಒಟ್ಟಿನಲ್ಲಿ ಪ್ರಕೃತಿಯನ್ನು ಕಾಣುವ ದೃಷ್ಟಿಯೂ ಬದಲಾಗಿದೆ. ಒಂದು ಕಾಲಕ್ಕೆ ಪ್ರಕೃತಿ ನಮ್ಮನ್ನು ಪೋಷಿಸುವ, ಜೀವನಾಧಾರಳಾಗಿರುವ ತಾಯಿ. ನೆಲದವ್ವೆಯನ್ನು ನಂಬಿದ್ದು ಎಲ್ಲಿಯವರೆಗೆ ಎಂದರೆ ‘ಭೂಮಿಸಾಕ್ಷಿಯಾಗಿ ಹೇಳುತ್ತೇನೆ' ಎಂದು ಭೂಮಿಯನ್ನು ಸ್ಪರ್ಶಿಸಿ ಸಾಕ್ಷಿ ಹೇಳುವ ಮಾತು ಜನಮಾನಸದಲ್ಲಿ ಸಹಜವಾಗಿ ಚಾಲ್ತಿಯಲ್ಲಿತ್ತು. ನಾವು ಭೂಮಿಯನ್ನು ಗೌರವಿಸುತ್ತಿದ್ದೆವು, ಪೂಜಿಸುತ್ತಿದ್ದೆವು.ಜನಪದರ ಜೀವನ ಭೂಮಿಗೆ ಅಂತಹ ಮಹತ್ತರ ಪ್ರಾಶಸ್ತ್ಯ ಕೊಟ್ಟಿತ್ತು ಎಂಬುದಕ್ಕೆ ‘ಕೆಡ್ಡಸ’ ಆಚರಣೆಯ ಸ್ವರೂಪ, ಕಲ್ಪನೆ, ಅನುಸಂಧಾನಕ್ಕೆ ಆಧಾರವಾಗುತ್ತದೆ. ಭೂಮಿ ಹೆಣ್ಣು ಎಂದು ಪರಿಗ್ರಹಿಸಿದ ಮಾನವ ಭೂಮಿಯಂತೆ ಫಲಸಮೃದ್ಧಿಯನ್ನು ನೀಡುವ, ಜನ್ಮ ನೀಡಿದ ತಾಯಿಯ ಔದಾರ್ಯಕಂಡ; ‘ನೆಲವನ್ನು ಅಬ್ಬೆ ಎಂದು ಪ್ರೀತಿಸಿದ. ಆಕೆಯ ಉತ್ಪನ್ನಗಳೆಲ್ಲ ‘ಫಲವೆಂದು ಪರಿಗ್ರಹಿಸಿ ತಾಯಿಯಿಂದ ತಾನು, ಭೂಮಿಯಿಂದ ಫಲವಂತಿಕೆ’ ಎಂದು ಸಮೀಕರಿಸಿ ಆರಾಧಿಸತೊಡಗಿದ. ಜನಪದರ ಸರಳ, ಮುಗ್ಧ ಆದರೆ ಗಾಢವಾದ ಚಿಂತನೆಯುಳ್ಳ ಪ್ರಕೃತಿ ಪರ ಕಾಳಜಿ ಎಷ್ಟು ಭವ್ಯವಾಗಿದೆ ತಾನೆ! ಸ್ತ್ರೀ ಸಹಜ ದೈಹಿಕ ಬದಲಾವಣೆಯನ್ನು ಗಮನಿಸುತ್ತಾ ಪ್ರಕೃತಿಯ ಋತುಚಕ್ರಕ್ಕನುಗುಣವಾಗಿ ಭೂಮಿತಾಯಿಯಲ್ಲಿ ಕಾಣುವ ಸ್ಥಿತ್ಯಂತರಗಳನ್ನು ಕ್ರೋಡೀಕರಿಸಿಕೊಂಡ ಜನಪದರು ತನ್ನ ತಾಯಿಯಂತೆಯೇ ಭೂಮಿದೇವಿಯೂ 'ಋತುಮತಿ'ಯಾಗುವ ಕಾಲವನ್ನು, ಮತ್ತೆ ಸೃಷ್ಟಿಗೆ ಅಣಿಯಾಗುವ ಸಂದರ್ಭವನ್ನು ಪ್ರಾಕೃತಿಕ ಋತುಮಾನಕ್ಕೆ ಅನುಗುಣವಾಗಿ ನಿಗದಿಪಡಿಸಿ ಆಚರಿಸತೊಡಗಿದ , ಹೇಗಿದೆ ಮುಗ್ಧ ಹೃದಯಗಳ ಕಲ್ಪನೆ? ನಮ್ಮವ್ವೆ ತಿಂಗಳಿಗೊಮ್ಮೆ ಪುಷ್ಪವತಿಯಾಗುವುದಾದರೆ, ‘ಭೂಮಿ ಅವ್ವೆ ವರ್ಷಕ್ಕೊಮ್ಮೆ ಋತುಮತಿಯಾಗುವುದು. ನಮ್ಮ ಜೀವನ ವಿಧಾನದಲ್ಲಿ ಇರುವ ಎಲ್ಲ ವಿಧಿ-ನಿಷೇಧಗಳೂ ಭೂಮಿತಾಯಿಗೂ ಇದೆ ಎಂದು ನಿರ್ಧರಿಸಿ ಭೂಮಿಯನ್ನು ಅಗೆಯಬಾರದು, ಕೃಷಿಗೆಂದು ಉಳಬಾರದು, ಮರಗಿಡಗಳನ್ನು ಕಡಿಯಬಾರದು , ಬದಲಾಗುವ ನಿಸರ್ಗದ ಸೌಂದರ್ಯ ನೋಡುತ್ತಾ ಸೌಭಾಗ್ಯ ರೂಪದ ಕೃಷಿ ಸಮೃದ್ಧಿ ನೀಡಲು ಭೂಮಿತಾಯಿ ಪ್ರಕೃತಿಯ ಮಡಿಲಲ್ಲಿ ಮತ್ತೆ ಅಣಿಯಾದಳು ಎಂಬ ಸಂಕೇತವಾಗಿ ಫಲೀಕರಣಕ್ಕೆ ಮುನ್ನ ಪುಷ್ಪವತಿಯಾಗಿ ತಾನು ಸಿದ್ಧಳಾಗುತ್ತಿದ್ದಾಳೆ ಎಂದು ಭವದ ಭವ್ಯತೆಯನ್ನು ನಿರೂಪಿಸಿರಬೇಕು. 'ಭೂದೇವಿ ಪುಷ್ಪವತಿ' ಎಂಬ ಸಡಗರವಾದರೆ ಈ ಸಂಭ್ರಮಾಚರಣೆಗೆ ‘ಬೇಟೆ’ ಒಂದು ಪೂರಕ ಅಂಗ. ‘ಪುಂಡದ’ ಎಂಬ ಹಕ್ಕಿಗೆ ಜ್ವರ ಬರುವ ದಿನಗಳಂತೆ, ಉಳಿದಂತೆ ಕಾಡು ಪ್ರಾಣಿಗಳ ಕಾಲಿನ ಪಾದದ (ಗೊರಸು, ಪಂಜ ಇತ್ಯಾದಿ) ಅಡಿಭಾಗ ಬಿರಕು ಬಿಟ್ಟು ಓಡಲು ಕಷ್ಟವಾಗುವ ಸಂದರ್ಭವು ಕಾಲಮಾನಕ್ಕೆ ಸರಿಯಾಗಿ ಒದಗುತ್ತದದಂತೆ. ಊರಿನ ಜನರೆಲ್ಲ ಸಾಮೂಹಿಕವಾಗಿ ಬೇಟೆಯಾಡುತ್ತಾ ಬೇಟಯನ್ನು ಸಂಭ್ರಮಿಸುತ್ತಾರೆ. ಊರಿನ ಮುಖ್ಯಸ್ಥನ ಅಥವಾ ಅರಸನ ಅಪ್ಪಣೆಯೂ ಬೇಟೆಯಾಟಕ್ಕೆ ಇತ್ತಂತೆ. ಒಟ್ಟಿನಲ್ಲಿ ಸ್ತ್ರೀಯರ ಆಚರಣೆಯಲ್ಲಿ ಪುರುಷರಿಗೆ ಬೇಟೆಯ ಅವಕಾಶ. ಮನೆಯಂಗಳದಲ್ಲಿ ‘ಕೆಡ್ಡಸ’ ಬರೆದು ಅದರ ಮೇಲೆ ಮಾಂಗಲ್ಯ ಸೂಚಕ ವಸ್ತುಗಳನ್ನು ಕೊಡಿಬಾಳೆ ಎಲೆಯಲ್ಲಿಡುವ, ಸ್ನಾನಕ್ಕೆ ಬೇಕಾದ ಪ್ರಕೃತಿಜನ್ಯ ಸವಲತ್ತುಗಳನ್ನು ಒದಗಿಸುತ್ತಾ ಫುಷ್ಪವತಿಯಾದ ತಾಯಿ ಮಡಿಸ್ನಾನದಿಂದ ಪರಿಶುದ್ಧಳಾಗಿ ಮನೆಯೊಳಗೆ ಬರುವ ಮುಂತಾದ ವಿವಿಧ ಆಚರಣೆಗಳು ನಡೆಯುತ್ತವೆ. ಫಲವತಿಯಾಗುವ ಸರ್ವ ಲಕ್ಷಣ ಸಂಪನ್ನೆಯಾಗಿ ಪುಷ್ಪವತಿಯಾಗುವ ಪೂರ್ವಭಾವೀ ಚಿಂತನೆ, ಸ್ನಾನದ ಸಡಗರ, ಈ ನಡುವೆ ತಿನ್ನಲು ನೀಡುವ ,ಆ ಕಾಲದಲ್ಲಿ ಲಭ್ಯವಿರುವ ಧಾನ್ಯಗಳನ್ನು ಹುರಿದು ತಯಾರಿಸಿದ ವಿಶೇಷ ತಿನಿಸುಗಳು ತುಳುನಾಡಿನ ‘ಕೆಡ್ಡಸ’ ಆಚರಣೆಯ ವಿಶಿಷ್ಟ ವಿಷಯಗಳು. ಧಾನ್ಯಗಳಲ್ಲಿ ‘ಜೀವ’ವನ್ನು, ದೈಹಿಕ ಕಾಮನೆಗಳನ್ನು ಪ್ರಚೋದಿಸುವ ಗುಣಗಳು ಇವೆ ಎಂಬುದೂ ಒಂದು ಆಯಾಮದ ಚಿಂತನೆ. ಭೂ ದೇವಿಗೆ ಪುಷ್ಪವತಿ ಎಂಬ ಸಂಭ್ರಮ ಮುಗಿದು ಜಳಕದ ಸಿದ್ಧತೆಗಳಾಗುತ್ತಿವೆ. ಇದು ‘ಕೆಡ್ಡಸ’. ಕುಡುವರಿ - ನನ್ನೆರಿ : • ಕುಡುವರಿ ನನ್ನೆರಿ ಅಕ್ಕಿ, ಹುರುಳಿ, ಹೆಸರು ಮುಂತಾದ ಧಾನ್ಯಗಳನ್ನು ಹುರಿದು ತೆಂಗಿನ ಕಾಯಿ ತುಂಡುಗಳನ್ನು ಬೆರೆಸಿ ತಯಾರಿಸುವ ವಿಶಿಷ್ಟ ತಿನಿಸು 'ಕೆಡ್ಡಸದ ಕುಡುವರಿ'. ಹೀಗೆ ಹುರಿದ ಧಾನ್ಯಗಳನ್ನು ಕುಟ್ಟಿಪುಡಿ ಮಾಡಿ ಬೆಲ್ಲ ಮತ್ತು ತೆಂಗಿನ ಕಾಯಿ ಬೆರೆಸಿ ಸಿದ್ಧಗೊಳಿಸುವ ‘ನನ್ನೆರಿ’ ಎಂಬುದು ಪ್ರಾದೇಶಿಕ ಭಿನ್ನತೆಯಾಗಿ ರೂಢಿಯಲ್ಲಿದೆ. • ಕುಡುವರಿಯನ್ನು ಎಲ್ಲರೂ ತಿನ್ನಬೇಕು. ಊರಿನಲ್ಲಿಲ್ಲದಿದ್ದರೆ ತೆಗೆದಿಟ್ಟು ಬಂದಾಗ ಕೊಡಬೇಕು. ಚೊಚ್ಚಲ ಮಕ್ಕಳಿಗೆ ಇದರಲ್ಲೂ ಆದ್ಯತೆ. • ಕೆಡ್ಡಸದ ಗಾಳಿ, ಕೆಡ್ಡಸ ಬರೆಪುನಿ ಮುಂತಾದುವು ಕೇಳಿಬರುತ್ತಿರುವ ಶಬ್ದಗಳು. ಈಗ ಗಾಳಿಯೂ ಬೀಸುವುದಿಲ್ಲ. ಭೂಮಿಯೂ ಪರಿಮಳ ಬೀರುವುದಿಲ್ಲ. ಮಂದಾರ ರಾಮಾಯಣದಲ್ಲಿ ‘ಬನ್ನಗನೆ ಕೆಡ್ಡಸದ ಪೊತ್ತುದಿನರಿ, ಕುಡುಕಡಲೆ, ಪೇರ‍್ಪದೆಂಗಿದ ಪೊದಿಕೆನ್ ಕಣತ್ ದೀದ್' ಎಂಬ ಉಲ್ಲೇಖವಿದೆ. • ಕೆಡ್ಡಸ ಒಂದು ಕಾಲದ ವಿಜೃಂಭಣೆಯ ಆಚರಣೆಯಾಗಿತ್ತು. ಆದರೆ ಈಗ ನೆನಪೇ ಆಗದ ಪರ್ವ ದಿನ’ವಾಗಿದೆ. ಒಂದು ವ್ಯತ್ಯಾಸವಾದರೆ ಅದನ್ನು ಆಧರಿಸಿದ ಎಲ್ಲವೂ ವ್ಯತ್ಯಸ್ತಗೊಂಡಂತೆ ತಾನೆ? ಪ್ರಕೃತಿಯ ಮಡಿಲಲ್ಲಿ ನಿಸರ್ಗದ ನಿಶ್ಚಿತ ಸ್ಥಿತ್ಯಂತರಗಳ ವಿಸ್ಮಯಗಳನ್ನು ಗಮನಿಸುತ್ತಾ ಮನುಷ್ಯ ಬದುಕು ಕಟ್ಟಿದ. • ಪುಯಿಂತೆಲ್ ಅಥವಾ ಪೊನ್ನಿ ತಿಂಗಳ (ಮಕರಮಾಸ) ಇಪ್ಪತ್ತೇಳನೇ ದಿನ ಸಂಜೆಯಿಂದ ಮಾಯಿ ತಿಂಗಳು ಬರುವ ಸಂಕ್ರಮಣ (ಕುಂಭ ಸಂಕ್ರಮಣ)ದವರೆಗೆ ಮೂರು-ನಾಲ್ಕು ದಿನ 'ಕೆಡ್ಡಸ'. ಸುರುಕೆಡ್ಡಸ-ನಡುಕೆಡ್ಡಸ-ಕಡೆಕೆಡ್ಡಸವೆಂದು ಮೂರು ದಿನ ಆಚರಣೆ. ಫಲವಂತಿಕೆಯನ್ನು ನೀಡುವ ಭೂದೇವಿ ಬೆಳೆ ಸಮೃದ್ಧಿಯನ್ನು ನೀಡಲು ಮತ್ತೆ ಸನ್ನದ್ಧಳಾದಳೆಂಬ ಸಂದರ್ಭದ ಆರಾಧನಾ ವಿಧಿಯಾಗಿ ‘ಕೆಡ್ಡಸ’ ತುಳುವರ ವಿಶಿಷ್ಟ ಹಬ್ಬ. • ಮಳೆಗಾಲದ ಪ್ರಧಾನ ಕೃಷಿಗೆ (ಕರಾವಳಿಯಲ್ಲಿ ಹೆಚ್ಚಾಗಿ ಭತ್ತ) ಪೂರ್ವಭಾವಿ ಸಿದ್ಧತೆಯನ್ನು ಚಳಿಗಾಲ ಮುಗಿದು ಧಾನ್ಯಗಳ ಬೆಳೆಯ ಬಳಿಕ ಆರಂಭಿಸಲಾಗುತ್ತದೆ. ಪೊನ್ನಿ ತಿಂಗಳ (ಜನವರಿ ತಿಂಗಳ ಮಧ್ಯದಿಂದ ಫೆಬ್ರವರಿ ತಿಂಗಳ ಮಧ್ಯದವರೆಗೆ) ಆರಂಭವು ಬೇಸಗೆ ಕಾಲವನ್ನು ಘೋಷಿಸುತ್ತದೆ.ಮುಂದಿನ ಮಳೆಗಾಲದಲ್ಲಿ ಭೂಮಿ (ಗದ್ದೆಯನ್ನು) ಉತ್ತು, ನೇಜಿ ನೆಡಲು ಸಿದ್ಧತೆ ನಡೆಸಲು ಜಾಗೃತನಾಗುವಂತೆ ಕೃಷಿಕನನ್ನು ಎಚ್ಚರಿಸುತ್ತಾಳೆ ಪ್ರಕೃತಿ. • ಮೂಡು ದಿಕ್ಕಿನಿಂದ ವಿಶಿಷ್ಟವಾದ ಗಾಳಿ ಬೀಸತೊಡಗುತ್ತದೆ. ಭೂಮಿಗೆ ವಿಶೇಷ ಕಂಪು ಬರುತ್ತದೆ. ಇದು ಪುಯಿಂತೆಲ್ ಕೊನೆಯ ದಿನಗಳಾಗಿರುತ್ತವೆ. • ಇದು 'ಭೂ ರಜಸ್ವಲಾ' ಪರ್ವ ಕಾಲವಾಗಿರುತ್ತದೆ. ಭೂದೇವಿ ರಜಸ್ವಲೆಯಾದಳೆಂದು ನಂಬಲಾಗುವ ಈ ದಿನಗಳು ಪರ್ವವಾಗಿ ಸ್ವೀಕರಿಸಲ್ಪಟ್ಟ ಕಲ್ಪನೆ ಹಾಗೂ ಕೃಷಿ ಆಧಾರಿತ ಜೀವನ ಶೈಲಿ. • ಭೂಮಾತೆಗೆ ಬಡಿಸುವ ಆಹಾರ (ಕುಡುಅರಿ - ನನ್ನೆರಿ) ವಸ್ತುಗಳೆಲ್ಲ ಫಲವಂತಿಕೆಯ ಬಯಕೆಯ ಸಂಕೇತಗಳೇ ಆಗಿರುತ್ತವೆ. ಹಲಸಿನ ಎಳಸು ಕಾಯಿ ಹಾಕಿದ ಪದಾರ್ಥ, ಉದ್ದಿನ ದೋಸೆ, ನುಗ್ಗೆ ಕೋಡು ಹಾಕಿದ ಪಲ್ಯಗಳು ಪ್ರಧಾನ. • ಕೆಡ್ಡಸದ ಅವಧಿಯಲ್ಲಿ ಹೆಂಗಸರು ಮುಟ್ಟಾದರೆ ಹಸಿ ಸೋಗೆಯಲ್ಲಿ ಮಲಗಬೇಕು. ತಾನು ಮುಟ್ಟಾಗುವ ವೇಳೆ ಇತರ ಹೆಣ್ಣು ಮಕ್ಕಳುಮುಟ್ಟಾಗುವುದನ್ನು ಭೂಮಿತಾಯಿ ಸಹಿಸಲಾರಳೆಂಬ ಕಲ್ಪನೆ ಜನಪದರಲ್ಲಿದೆ. ಕೈಯಲ್ಲಿ ಹಿಡಿದುಕೊಂಡೇ ತಿಂಡಿ ತಿನ್ನುವ, ಊಟ ಮಾಡುವ ಸಂಪ್ರದಾಯವೂ ಇದೆ‌ (ಇತ್ತು). • ಭೂಮಿಯನ್ನು ಯಾವುದೇ ಕಾರಣಕ್ಕೆ ಅಗೆಯಬಾರದು ಎಂಬ ನಿಷೇಧ ಕೆಡ್ಡಸದ ಅವಧಿಯಲ್ಲಿ ಅನುಸರಿಸಲಾಗುತ್ತದೆ ಅಥವಾ ಅನುಸರಿಸಲಾಗುತ್ತಿತ್ತು. • ಭೂದೇವಿ ಪುಷ್ಪವತಿಯಾಗುವಳೆಂಬ ಕಲ್ಪನೆಯೇ ಅನನ್ಯವಾದುದು. ಬೆಳೆ ಆಕೆಯ ಫಲವಂತಿಕೆಯ ಫಲಗಳೆಂಬುದು ವಿಶಿಷ್ಟ ಕಲ್ಪನೆ. ಕೆಡ್ಡಸದ ಬೋಂಟೆ : ‘ಕೆಡ್ಡಸ’ ಎಂದರೆ ಬೇಟೆ ಸಂಬಂಧಿಯಾದುದು ಎಂಬ ನಿರ್ವಚನವೂ ಇದೆ. ಆದುದರಿಂದಲೇ ಬೇಟೆಯೂ ಕೆಡ್ಡಸದ ಅವಿಭಾಜ್ಯ ಅಂಗ. ‘ಪುಂಡದ’ ಎಂಬ ಹಕ್ಕಿಗೆ ಈ ಶ್ರಾಯದಲ್ಲಿ ಜ್ವರ ಬರುತ್ತದೆಯಂತೆ. ‘ಪುಂಡದ ಬೋಟೆ’ ಎಂಬುದು ವಾಡಿಕೆ. ‘ಕೆಡ್ಡಸ’ ಎಂದರೆ ತೊಡಗು ಎಂಬ ಅರ್ಥವೂ ಇದೆ. ತೊಡಗುವುದು ಎಂದರೆ ಕೃಷಿ ಆರಂಭಿಸು ಎಂದು ಪರಿಗ್ರಹಿಸಬಹುದು. ಕೆಡ್ಡಸದ ನೇಮ, ಕೆಡ್ಡಸದ ಆಯನ, ಕೆಡ್ಡಸದ ಗಾಳಿ, ಕೆಡ್ಡಸದ ಕುಡುಅರಿ ಮುಂತಾದವು ಜನಪದರಲ್ಲಿ ರೂಢಿಯಲ್ಲಿರುವ ಆಡು ಮಾತು. ಸಂಪ್ರದಾಯ : ಮೂರುದಿನ ಹಸಿ ಕಡಿಯಬಾರದು, ಒಣಗಿರುವುದನ್ನು ಮುರಿಯಬಾರದು ಎಂಬ ನಂಬಿಕೆ ಇದೆ. ಲೇಖನ : ಕೆ.ಎಲ್.ಕುಂಡಂತಾಯ

3.48 ಕೋಟಿ ಮೌಲ್ಯದ ಅಂಬರ್ ಗ್ರೀಸ್ ಪತ್ತೆ ಹಚ್ಚಿದ ಮಂಗಳೂರು ನಗರ ಪೊಲೀಸರು

Thumbnail
Posted On: 09 Feb 2022, 06:58 PM

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ನವೋದಯ ಶಾಲೆಯ ಬಳಿ ನಿಷೇಧಿತ ವಸ್ತುವಾದ ಅಂಬರ್ ಗ್ರೀಸ್ ನ್ನು ಅಕ್ರಮವಾಗಿ ಮಾರಾಟ ಮಾಡಲು ಬಂದ ಬೆಂಗಳೂರು ಮತ್ತು ಉಡುಪಿ ಮೂಲದವರು ಸೇರಿದಂತೆ 6 ಮಂದಿಯನ್ನು ಬಂಧಿಸಿ ಅವರಿಂದ 3.48 ಕೋಟಿ ಮೌಲ್ಯದ 3 ಕೆಜಿ 480 ಗ್ರಾಂ ತೂಕದ ಅಂಬರ್ ಗಿಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರು : ಕುಂದಾಪುರದ ಜಡ್ಕಲ್ ಗ್ರಾಮದ ಪ್ರಶಾಂತ್, ಬೆಂಗಳೂರಿನ ವೀರ ಭದ್ರ ನಗರ ಬಿಎಸ್ಕೆಯ ಸತ್ಯರಾಜ್, ಮಂಗಳೂರಿನ ತಂಕೆಡಪದವು ಗ್ರಾಮದ ರೋಹಿತ್, ಮಂಗಳೂರಿನ ಅಡೂರು ಗ್ರಾಮದ ರಾಜೇಶ್, ಮಂಗಳೀರಿನ ತಂಕಎಡಪದವು ಗ್ರಾಮದ ವಿರುಪಾಕ್ಷ, ಮಲಾರ್ ಕಾಪು ಗ್ರಾಮದ ನಾಗರಾಜ್ ಈ ಅಂಬರ್ ಗ್ರೀಸ್ ನ್ನು ತಮಿಳುನಾಡು ಮೂಲದ ಮೀನುಗಾರ ಸೇದು ಮಾಣಿಕ್ಯ ಎಂಬುವರು ನೀಡಿದ್ದಾಗಿ ತಿಳಿಸಿರುತ್ತಾರೆ. ಈ ಕಾರ್ಯಾಚರಣೆಯನ್ನು ಸಹಾಯಕ ಪೊಲೀಸ್ ಆಯುಕ್ತರಾದ ದಿನಕರ ಶೆಟ್ಟಿರವರ ಮಾರ್ಗದರ್ಶನದಲ್ಲಿ ಕೊಣಾಜೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರವರ ಮುಂದಾಳತ್ಯದಲ್ಲಿ, ಉಪ-ನಿರೀಕ್ಷಕರಾದ ಶರಣಪ್ಪ ಭಂಡಾರಿ ಮತ್ತು ಮಲಿಕಾರ್ಜುನ್ ಬಿರಾದಾರ್ ಎ.ಎಸ್.ಐರವರಾದ ಮೋಹನ್ ದೇರಳಕಟ್ಟೆ, ಸಂಜೀವ ಸಿಬ್ಬಂದಿಗಳಾದ ಅಶೋಕ್, ಶಿವಕುಮಾರ್ ಪುರುಶೋತ್ತಮ, ದೀಪಕ್, ಅಂಬರೀಷ್ ಘಂಟಿ, ಭರಮಾ ಬಡಿಗೇರ್ ರವರುಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

ಕಟಪಾಡಿ ಗ್ರಾಮ ಒನ್ ಕೇಂದ್ರದಲ್ಲಿ : ಉದ್ಯೋಗಾವಕಾಶ

Thumbnail
Posted On: 08 Feb 2022, 10:44 AM

ಕಟಪಾಡಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಕಟಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯಾಚರಿಸಲಿದ್ದು ಸುಮಾರು 750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡಿದೆ. ಈ ಕೇಂದ್ರಕ್ಕೆ ಸೇವಾ ಸಿಂಧು ಬಗ್ಗೆ ಮಾಹಿತಿ ಮತ್ತು ಕನ್ನಡ ಟೈಪಿಂಗ್ ಬಗ್ಗೆ ಗೊತ್ತಿರುವ ಮಹಿಳಾ ಉದ್ಯೋಗಾಕಾಂಕ್ಷಿ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 6362859038 9071817862

ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್ನಿಂದ ಖಾಲಿ ಕಮರ್ಷಿಯಲ್ ಸಿಲಿಂಡರ್ ಗೆ ಕೃತಕವಾಗಿ ತುಂಬಿಸಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪೋಲಿಸ್ ಧಾಳಿ ; ಆರೋಪಿ ಪರಾರಿ

Thumbnail
Posted On: 07 Feb 2022, 10:51 PM

ಮಂಗಳೂರು : ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ತನ್ನ ವಾಸದ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ತುಂಬಿದ ಅಡುಗೆ ಅನಿಲದ (ಡೊಮೆಸ್ಮಿಕ್) ಸಿಲಿಂಡರ್ ನಿಂದ ಖಾಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ತುಂಬಿಸಿ ಗಿರಾಕಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಹಾಯಕ ಪೊಲೀಸ್ ಆಯುಕ್ತರು, ಮಂದ,ಉ,ವಿಭಾಗ ರವರ ಮಾರ್ಗದರ್ಶನದಲ್ಲಿ ಮಂಗಳೂರು ಗಿರಾಕಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಹಾಯಕ ಪೊಲೀಸ್ ಆಯುಕ್ತರು, ಮಂ,ಉ,ವಿಭಾಗ ರವರ ಮಾರ್ಗದರ್ಶನದಲ್ಲಿ ಮಂಗಳೂರು ತಾಲೂಕು ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ್,ಜಿ.ಎಸ್.ಪೊಲೀಸ್ ಉಪ-ನಿರೀಕ್ಷಕರಾದ ಶಿವಕುಮಾರ್,ಕೆ, ಹಾಗೂ ಸಿಬ್ಬಂದಿಗಳಾದ ಮಹೇಶ, ರೆಜಿ, ಉದಯ, ಸಾಗರ್ ರವರು ಮತ್ತು ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹಾರಿಸ್, ಪ್ರಭಾರ ಆಹಾರ ನಿರೀಕ್ಷಕರಾದ ರೇಖ ಹಾಗೂ ಅವರ ತಂಡದವರೊಂದಿಗೆ ಫೆಬ್ರವರಿ 5ರಂದು ಸ್ಥಳಕ್ಕೆ ಗಂಟೆಗೆ ಧಾಳಿ ನಡೆಸಲಾಗಿದೆ. ಆರೋಪಿ ಫ್ರಾನ್ಸಿಸ್ ಎಂಬಾತನು ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರ್‌ನ್ನು ನೆಲದಲ್ಲಿ ಇಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರ್‌ನ್ನು ಕವುಚಿ ಹಾಕಿ ಖಾಲಿ ಗ್ಯಾಸ್‌ಸಿಲಿಂಡರ್‌ಗೆ ಪೈಪು ಮುಖೇನ ಕೃತಕವಾಗಿ ತಾನೇ ತುಂಬಿಸುತ್ತಿದ್ದನು ಸ್ಥಳದಿಂದ ಓಡಿ ಪರಾರಿಯಾಗಿದ್ದು, ಸ್ಥಳದಲ್ಲಿ, ದೊರೆತ ವಿವಿಧ ಕಂಪೆನಿಗಳ ಸಣ್ಣ ಹಾಗೂ ದೊಡ್ಡ ಮಾದರಿಯ ಡೊಮೆಸ್ಟಿಕ್ ಹಾಗೂ ಕಮರ್ಷಿಯಲ್ ನ ಗ್ಯಾಸ್ ಒಟ್ಟು ಮೌಲ್ಯ ರೂ.1,92,000 ಹಾಗೂ ಅದಕ್ಕೆ ಸಂಬಂಧಪಟ್ಟ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿ ಫ್ರಾನ್ಸಿಸ್‌ನು ಎಸಗಿದ ಕೃತ್ಯದ ಕುರಿತು ಆಹಾರ ನಿರೀಕ್ಷಕರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಉಳ್ಳಾಲ ಠಾಣಾ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ. ಆರೋಪಿಯ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ.

ಪಾಂಗಾಳ : ಫೆಬ್ರವರಿ 15 ರಂದು ವೈಭವದ ಸಿರಿಜಾತ್ರೆ

Thumbnail
Posted On: 07 Feb 2022, 10:33 PM

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿಜಾತ್ರೆಯು ಫೆಬ್ರವರಿ 15, ಮಂಗಳವಾರದಂದು ಜರಗಲಿರುವುದು. ಅಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು. ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ , ರಾತ್ರಿ 2:30 ಕ್ಕೆ ಬ್ರಹ್ಮಮಂಡಲ ,ರಾತ್ರಿ 3:30 ಕ್ಕೆ ಭೂತಬಲಿ , ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ. ಫೆಬ್ರವರಿ 16, ಬುಧವಾರ ಬೆಳಿಗ್ಗೆ 11ಕ್ಕೆ ಮಹಾಪೂಜೆ ,ಸಂಜೆ 7 ಕ್ಕೆ ತಪ್ಪಂಗಾಯಿ ಬಲಿ , ರಾತ್ರಿ 8:30 ಕ್ಕೆ ದೂಳು ಮಂಡಲ ,ನಂತರ ಭೂತಬಲಿ , ಕವಾಟಬಂಧನ ,ಶಯನೋತ್ಸವ ಫೆಬ್ರವರಿ 17, ಗುರುವಾರ ಬೆಳಿಗ್ಗೆ 7ಕ್ಕೆ ಕವಾಟೋದ್ಘಾಟನೆ , ನಂತರ ಮಹಾಪೂಜೆ ,ಸಾಯಂಕಾಲ 5ಕ್ಕೆ ಬಲಿ ಹೊರಟು ಕಟ್ಟೆಪೂಜೆ , ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ. ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ , ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪತ್ರಿಕಾ ಪ್ರಕಟಣೆಯು ತಿಳಿಸಿದೆ.

ಗೂಗಲ್ ಪೇ, ಫೋನ್ ಪೇ ಬಳಸುವವರೇ ಜಾಗೃತರಾಗಿರಿ ಇಂತಹ ಕೆಲಸಗಳನ್ನು ಎಂದಿಗೂ ಮಾಡಬೇಡಿ..!

Thumbnail
Posted On: 06 Feb 2022, 10:42 AM

ನೀವು ಫೋನ್ ಪೇ ಬಳಸುತ್ತಿರುವಿರಾ? ಗೂಗಲ್ ಪೇ ಬಳಸುತ್ತೀರಾ? ನೀವು Paytm ಬಳಸುತ್ತೀರಾ..? ಅಗಾದರೆ, ನೀವು ಖಂಡಿತವಾಗಿಯೂ ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆಗೆ ಸಿಲುಕುತ್ತೀರಿ. ತಪ್ಪಿದಲ್ಲಿ ಖಾತೆಯಿಂದ ಹಣ ಕಳೆದುಕೊಳ್ಳಬಹುದು. ಹಾಗಾಗಿ ಯುಪಿಐ ಆ್ಯಪ್ ಬಳಸುವವರು ಜಾಗರೂಕರಾಗಿರಬೇಕು. ಆನ್‌ಲೈನ್ ವಂಚನೆಗಳು ಹೆಚ್ಚುತ್ತಿದ್ದು, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ವಂಚನೆಗಳ ಜೊತೆಗೆ ಯುಪಿಐ ವಂಚನೆಗಳೂ ಹೆಚ್ಚುತ್ತಿವೆ. ಆದ್ದರಿಂದ ನೀವು ಎಚ್ಚರಿಕೆಯಿಂದ ಇರಬೇಕು. PhonePay, Google Pay ಮತ್ತು Paytm ನ ಬಳಕೆದಾರರು ಮೋಸದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬಹುದು. ವಂಚಕರು ಸಂದೇಶ ಅಥವಾ WhatsApp ಮೂಲಕ ಇದೇ ರೀತಿಯ ಲಿಂಕ್‌ಗಳನ್ನು ಕಳುಹಿಸುತ್ತಾರೆ. ಇವುಗಳ ಮೇಲೆ ಕ್ಲಿಕ್ ಮಾಡಬೇಡಿ. ಅಲ್ಲದೆ ವಂಚಕರು ಕರೆ ಮಾಡಿ ಲಕ್ಕಿಡ್ರಾದಲ್ಲಿ ಹಣ ಗೆದ್ದಿರುವುದಾಗಿ ಹೇಳುತ್ತಾರೆ. UPI ಪಿನ್ ನಮೂದಿಸುವುದರಿಂದ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ನಿಮ್ಮನ್ನು ವಂಚಿಸುತ್ತದೆ. ಈ ರೀತಿ ಪಿನ್ ನಮೂದಿಸಿದರೆ.. ನಿಮ್ಮ ಖಾತೆಯಿಂದ ಹಣ ಕಡಿತವಾಗುತ್ತದೆ. ಜಾಗರೂಕರಾಗಿರಿ. ಹಣವನ್ನು ಕಳುಹಿಸಲು ನೀವು UPI ಪಿನ್ ಅನ್ನು ನಮೂದಿಸುವ ಅಗತ್ಯವಿದೆ. ಹಣ ನೀಡಲು ಯಾವುದೇ ಪಿನ್ ಬಯಸುವುದಿಲ್ಲ. ವ್ಯಕ್ತಿಯು PIN ಅನ್ನು ನಮೂದಿಸಿದ್ದರೆ ನಿಮಗೆ ಹಣವನ್ನು ಕಳುಹಿಸುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಬ್ಯಾಂಕಿಂಗ್ ಮತ್ತು ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮ ಅಥವಾ WhatsApp ಮತ್ತು ಇತರ ವಿಧಾನಗಳಲ್ಲಿ ಯಾರೊಂದಿಗೂ ಹಂಚಿಕೊಳ್ಳಬೇಡಿ. ಹಂಚಿಕೊಂಡಲ್ಲಿ ಮಾತ್ರ, ನೀವು ಮೋಸ ಹೋಗಬಹುದು. ಅಲ್ಲದೆ ಫೋನ್‌ನಲ್ಲಿ ರಿಮೋಟ್ ಆಕ್ಸೆಸ್ ಆಪ್‌ಗಳನ್ನು ಬಳಸಬೇಡಿ. ಇವುಗಳ ಮೂಲಕವೂ ಹಲವು ಹಗರಣಗಳು ನಡೆದಿವೆ. ಆದ್ದರಿಂದ ನೀವು ಮೋಸಹೋಗುವ ಅಪಾಯವನ್ನು ಸಹ ಎದುರಿಸುತ್ತೀರಿ. ಇಂತಹ ವಂಚನೆಗಳಿಗೆ ಬಲಿಯಾಗುವುದನ್ನು ತಪ್ಪಿಸಲು, ಸ್ಕ್ರೀನ್ ಲಾಕ್ ಮಾಡಬೇಕು. ಫೋನ್ ಮಾತ್ರವಲ್ಲದೆ ಹಣಕಾಸು ಆಪ್ ಗಳನ್ನೂ ಲಾಕ್ ಮಾಡುವುದು ಒಳ್ಳೆಯದು. ನಿಮ್ಮ ಪಿನ್ ವಿವರಗಳನ್ನು ಇನ್ನೂ ಯಾರೊಂದಿಗೂ ಹಂಚಿಕೊಳ್ಳಬೇಡಿ. ಅಲ್ಲದೆ ನಕಲಿ ಕರೆಗಳಿಗೆ ಪ್ರತಿಕ್ರಿಯಿಸಬೇಡಿ. ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. UPI ಅಪ್ಲಿಕೇಶನ್‌ಗಳನ್ನು ಕಾಲಕಾಲಕ್ಕೆ ನಿಯಮಿತವಾಗಿ ನವೀಕರಿಸಬೇಕು. ಬಹು ಪಾವತಿ ಅಪ್ಲಿಕೇಶನ್‌ಗಳಿಗೆ ಇನ್ನೂ ಬಳಸಬೇಡಿ. ನಿಮ್ಮ ಫೋನ್‌ನಲ್ಲಿ ವಿಶ್ವಾಸಾರ್ಹ ಅಪ್ಲಿಕೇಶನ್‌ಗಳನ್ನು ಮಾತ್ರ ಸ್ಥಾಪಿಸಿ.

ಕ್ಯಾನ್ಸರ್ ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಮುಖರಾಗಲು ಸಾಧ್ಯ : ಸುಮಿತ್ರಾ ನಾಯಕ್

Thumbnail
Posted On: 06 Feb 2022, 10:23 AM

ಉಡುಪಿ : ಕ್ಯಾನ್ಸರ್ನ ಲಕ್ಷಣಗಳ ಬಗ್ಗೆ ಅರಿತುಕೊಂಡು, ಖಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದಲ್ಲಿ, ಕ್ಯಾನ್ಸರ್ನಿಂದ ಗುಣಮುಖವಾಗಲು ಸಾಧ್ಯವಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಇಂದು, ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಸ್ಪತ್ರೆ (ಎನ್.ಸಿ.ಡಿ ವಿಭಾಗ), ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಸಿ.ಡಿ&ಎನ್.ಟಿ.ಸಿ.ಪಿ ಘಟಕ), ದಂತ ವೈದ್ಯಕೀಯ ವಿಭಾಗ ಜಿಲ್ಲಾ ಆಸ್ಪತ್ರೆ, ಭಾರತೀಯ ದಂತ ವೈದ್ಯಕೀಯ ಮಂಡಳಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಹಯೋಗದಲ್ಲಿ ನಡೆದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಯಾನ್ಸರ್ ಬಂದರೆ ಅವರ ಜೀವನ ಕೊನೆಯಾಯಿತು ಎಂಬ ಭಾವನೆ ಇದೆ. ಆದರೆ ಎಲ್ಲಾ ಕ್ಯಾನ್ಸರ್ ಮಾರಣಾಂತಿಕವಲ್ಲ. ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ, ಗುಣಮುಖರಾಗಲು ಸಾಧ್ಯವಿದೆ. ಸಾರ್ವಜನಿಕರಿಗೆ ಕ್ಯಾನ್ಸರ್ನ ಲಕ್ಷಣಗಳ ಬಗ್ಗೆ ಸಂಪೂರ್ಣ ಅರಿವು ಹಾಗೂ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಿದೆ. ಆರೋಗ್ಯಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ನಗರಸಭೆ ಆಧ್ಯಕ್ಷರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾತನಾಡಿ, ಜಿಲ್ಲೆಯ ರೋಟರಿ, ಲಯನ್ಸ್ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಗಳ ಸಹಕಾರದಿಂದ ಜಿಲ್ಲೆಯಾದ್ಯಂತ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲಾಗುವುದು. ಕ್ಯಾನ್ಸರ್ ಖಾಯಿಲೆಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಲಭ್ಯವಿದ್ದು, ಖಾಯಿಲೆಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ತಪಾಸಣೆ ಮಾಡಿಸಿಕೊಳ್ಳುವುದರಿಂದ, ರೋಗ ಉಲ್ಬಣವಾಗುವುದನ್ನು ತಡೆಯಲು ಮತ್ತು ಸಂಪೂರ್ಣ ಗುಣಮುಖರಾಗಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಜಾಗೃತಿ ಕುರಿತು ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಂ.ಸಿ. ಮಣಿಪಾಲದ ಕ್ಯಾನ್ಸರ್ ತಜ್ಞ ಡಾ.ನವೀನ್ ಉಪನ್ಯಾಸ ನೀಡಿದರು. ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಐ.ಎಂ.ಎ ಅಧ್ಯಕ್ಷ ಡಾ.ವಿನಾಯಕ ಶೆಣ್ಯೆ, ಜಿಲ್ಲಾ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ಬೀಸು ನಾಯಕ್ ಉಪಸ್ಥಿತರಿದ್ದರು. ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ರಾಜೇಂದ್ರ ಕೆ. ಸ್ವಾಗತಿಸಿದರು. ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ. ಕಾರ್ಯಕ್ರಮ ಸಂಘಟಿಸಿ ವಂದಿಸಿದರು. ಆಪ್ತ ಸಮಾಲೋಚಕ ದಿನೇಶ್ ನಿರೂಪಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಗೆ ಆದ್ಯತೆ: ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭುಶೆಟ್ಟಿ

Thumbnail
Posted On: 06 Feb 2022, 09:49 AM

ಉಡುಪಿ : ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಬಗ್ಗೆ ಹೆಚ್ಚಿನ ತಾಂತ್ರಿಕ ಕೌಶಲ್ಯವನ್ನು ಪಡೆದುಕೊಳ್ಳುವಂತೆ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭು ಶೆಟ್ಟಿ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ನೋಂದಣಿ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಾದ ಮತದಾರರ ನೊಂದಣಿ, ತಿದ್ದುಪಡಿಗಳನ್ನು ಆನ್ಲೈನ್ ಮೂಲಕ ಮಾಡಲು ಅವಕಾಶ ನೀಡಿದ್ದು, ಮತಗಟ್ಟೆ ಅಧಿಕಾರಿಗಳಿಗೆ ವಿವಿಧ ಆಪ್ಗಳನ್ನು ಸಿದ್ಧಪಡಿಸಲಾಗಿದೆ. ಅಲ್ಲದೆ ತರಬೇತಿಗಳನ್ನೂ ಸಹ ಆನ್ಲೈನ್ ಮೂಲಕವೇ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ, ಚುನಾವಣೆಯ ವಿವಿಧ ಹಂತದಲ್ಲಿ ಅತ್ಯಂತ ಸುಲಭ ಮತ್ತು ನಿಖರ ಹಾಗೂ ತ್ವರಿತ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಮತ್ತಷ್ಟು ವಿದ್ಯುನ್ಮಾನ ತಾಂತ್ರಿಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿದ್ದು, ಎಲ್ಲಾ ಆಧಿಕಾರಿಗಳು ಮತ್ತು ಸಿಬ್ಬಂದಿಗಳು ಇವುಗಳನ್ನು ಬಳಸುವ ಬಗ್ಗೆ ತಾಂತ್ರಿಕವಾಗಿ ತಿಳಿದುಕೊಳ್ಳಬೇಕು. ಈ ಬಗ್ಗೆ ಚುನಾವಣಾ ಆಯೋಗದಿಂದ ತರಬೇತಿಯನ್ನೂ ಸಹ ನೀಡಲಾಗುವುದು ಎಂದರು. ಉಡುಪಿ ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಆಭಿಯಾನವನ್ನು ಅತ್ಯುತ್ತಮ ರೀತಿಯಲ್ಲಿ ನಡೆಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆಯೋಗದಿಂದ ಕೋರುವ ಯಾವುದೇ ವರದಿಯನ್ನು ಅತ್ಯಂತ ನಿಖರವಾಗಿ ಮತ್ತು ಶೀಘ್ರದಲ್ಲಿ ಉಡುಪಿ ಜಿಲ್ಲೆಯಿಂದ ನೀಡುತ್ತಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದರು. ಮತದಾರರ ವಿಶೇಷ ನೋಂದಣಿ ಅಭಿಯಾನದ ನಂತರ ಜಿಲ್ಲೆಯಲ್ಲಿ 487676 ಪುರುಷರು, 525155 ಮಹಿಳೆಯರು, ಇತರೆ 11 ಸೇರಿ ಒಟ್ಟು 1012842 ಮಂದಿ ಮತದಾರರಿದ್ದು, ಇದರಲ್ಲಿ 18-19 ವಯೋಮಾನದ 8392 ಯುವ ಮತದಾರರಿದ್ದಾರೆ. ಯುವ ಮತದಾರರನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸುವ ಅಗತ್ಯವಿದ್ದು, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರವಹಿಸುವಂತೆ ತಿಳಿಸಿದ ಅವರು, ಒಬ್ಬನೇ ವ್ಯಕ್ತಿ ಎರಡು ಕಡೆಯಲ್ಲಿ ನೋಂದಣಿ ಆಗದಂತೆ ಮತ್ತು ಎರಡು ಎಪಿಕ್ ಕಾರ್ಡ್ಗಳನ್ನು ಪಡೆಯದಂತೆ ನೋಡಿಕೊಳ್ಳಿ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈ ಬಿಡುವ ಮುಂಚೆ ಮತ್ತೊಮ್ಮೆ ಕೂಲಂಕುಷವಾಗಿ ಪರಿಶೀಲಿಸಿ ಎಂದರು. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇಡೀ ರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಮಾತ್ರ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಈಗಿನಿಂದಲೇ ಪರಿಶೀಲನೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಮತದಾನ ಕೇಂದ್ರಗಳನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗದ ತಂಡ ಭೇಟಿ ನೀಡಲಿದೆ ಎಂದ ಅವರು, ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲಗಳಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮಾನಿಟರಿಂಗ್ ಸೆಲ್ನ ಹಿರಿಯ ಸಮಾಲೋಚಕ ಬಿ.ಎಸ್.ಹಿರೇಮಠ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ

Thumbnail
Posted On: 05 Feb 2022, 02:50 PM

ಉಡುಪಿ : ಜಿಲ್ಲೆಯ ಹಲವಾರು ವರ್ಷಗಳ ವರ್ಷಗಳ ಇತಿಹಾಸವಿರುವ ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಬನ್ನಂಜೆ ಕಲ್ಕುಡ ಮನೆ , ಉಡುಪಿ ಇಲ್ಲಿ ಫೆಬ್ರವರಿ 8, ಮಂಗಳವಾರದಂದು ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ಜರಗಲಿದೆ. ಮಧ್ಯಾಹ್ನ 12 ಗಂಟೆಗೆ ದರ್ಶನ ಸೇವೆ ಹಾಗೂ 12.30ರಿಂದ ಮಹಾಅನ್ನಸಂತರ್ಪಣೆ ಹಾಗೂ ಸಂಜೆ 6 ಗಂಟೆಯಿಂದ ಭಜನೆ ಕಾರ್ಯಕ್ರಮ ಹಾಗೂ 7 ಗಂಟೆಯಿಂದ ದೈವ ದರ್ಶನ ಹಾಗೂ ಹೂವಿನ ಪೂಜೆ ನಡೆಯಲಿದೆ. ನಮ್ಮ ಉಡುಪಿ ಟಿವಿ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6ರಿಂದ ನೆಮೋತ್ಸವದ ನೇರಪ್ರಸಾರವನ್ನು ವೀಕ್ಷಿಸಬಹುದು ಎಂದು ವಿಠಲ್ ಶೆಟ್ಟಿ ಹಾಗೂ ಕುಟುಂಬಸ್ಥರು ಬನ್ನಂಜೆ ಕಲ್ಕುಡ ಮನೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.