Updated News From Kaup
ಈ ಬಯೋಟೋರಿಯಂ ಕಂಪನಿ : ಆರೋಗ್ಯ ಮಾಹಿತಿ ಶಿಬಿರ ; ಸಾಧಕರ ಸನ್ಮಾನ
Posted On: 14 May 2025, 05:45 PM
ಶಿರ್ವ : ಈ ಬಯೋಟೋರಿಯಂ ಕಂಪನಿಯ ಆರೋಗ್ಯ ಮಾಹಿತಿ ಶಿಬಿರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಶಾಮ್ಸ್ ಸ್ವೇರ್ ಜಾಸ್ಮಿನ್ ಮಿನಿ ಹಾಲ್ ನಲ್ಲಿ ನಡೆಯಿತು. ಶಿರ್ವ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿರುವ ವಿಠಲ್ ಬಿ ಅಂಚನ್ ಹಾಗೂ ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾಗಿರುವ ವಿಷ್ಣುಮೂರ್ತಿ ಸರಳಾಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಆರೋಗ್ಯದ ಮಾಹಿತಿಯನ್ನು ಸಂತೋಷ್ ಶೆಟ್ಟಿ ಮೂಡಬಿದ್ರೆ ನೆರವೇರಿಸಿದರು. ಕಂಪನಿಯ ಸಿಬ್ಬಂದಿ ಸುಧಾಕರ ಆಚಾರ್ಯ ಕುತ್ಯಾರು ಇವರಿಗೆ ವೈದ್ಯಕೀಯ ನೆರವು ರೂ. 25,500 ನೀಡಲಾಯಿತು. ಗಿರೀಶ್ ನಾಯಕ್ ಅಲೆವೂರು, ಪ್ರಶಾಂತ್ ಆಚಾರ್ಯ ಶಿರ್ವ, ನವೀನ್ ಪೂಜಾರಿ ಬ್ರಹ್ಮಾವರ, ತ್ರಿಶೂಲ್ ಆಚಾರ್ಯ ಉಡುಪಿ, ಸಂತೋಷ ಶೆಟ್ಟಿ ಮೂಡಬಿದ್ರೆ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತಿಯಿದ್ದರು. ಮಲ್ಲಿಕಾ ಆಚಾರ್ಯ ಕಿನ್ನಿಗೊಳಿ ಸ್ವಾಗತಿಸಿ, ವಂದಿಸಿದರು.
ಉಡುಪಿ : ಲೈಟ್ ಹೌಸ್ ಚಲನಚಿತ್ರ ನೇತ್ರದಾನ ವಾಗ್ದಾನ ಕಾಯ೯ಕ್ರಮ
Posted On: 14 May 2025, 05:34 PM
ಉಡುಪಿ : ಲೈಟ್ ಹೌಸ್ ಚಲನಚಿತ್ರ ತಂಡ ಮತ್ತು ಪ್ರಸಾದ್ ನೇತ್ರಾಲಯ ಉಡುಪಿ ಇದರ ವತಿಯಿಂದ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ಪ್ರಸಾದ್ ನೇತ್ರಾಲಯದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಪ್ರಸಾದ್ ನೇತ್ರಾಲಯ ಇದರ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಮಾತನಾಡಿ ಭಾರತದಲ್ಲಿ ನೇತ್ರದಾನದ ಬಗ್ಗೆ ಹೆಚ್ಚಿನ ಅರಿವು ಇಲ್ಲ. ಇದರಿಂದ ದೃಷ್ಟಿ ಕಳೆದುಕೊಂಡವರಿಗೆ ಶ್ರೀಲಂಕಾದಿಂದ ಕಣ್ಣಿನ ಕರಿಗುಡ್ಡೆಯನ್ನು ಆಮದು ಮಾಡಿ ರೋಗಿಗಳಿಗೆ ನೀಡಲಾಗುತ್ತಿದೆ. ಬೌದ್ಧ ಧರ್ಮದಲ್ಲಿ ನೇತ್ರದಾನಕ್ಕೆ ವಿಶೇಷವಾದ ಆದ್ಯತೆ ಇರುವ ಕಾರಣ ಅವರು ಹೆಚ್ಚಿನ ಸಂಖ್ಯೆಯಲ್ಲಿ ನೇತ್ರದಾನ ಮಾಡಲು ಮುಂದೆ ಬರುತ್ತಿದ್ದಾರೆ. ಒಂದು ಕರಿಗುಡ್ಡೆಯಿಂದ ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯ ಈ ನಿಟ್ಟಿನಲ್ಲಿ ಲೈಟ್ ಹೌಸ್ ಚಲನಚಿತ್ರ ತಂಡದ ಕಾರ್ಯ ಅಭಿನಂದನೀಯ ನೇತ್ರದಾನದ ಬಗ್ಗೆ ಇರುವ ಅಪನಂಬಿಕೆಯನ್ನು ದೂರ ಮಾಡಲು ಈ ರೀತಿಯ ಕಾರ್ಯಕ್ರಮ ಪೂರಕವಾಗಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಕಾಕ೯ಳ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಂದ್ರನಾಥ ಎಂ.ವಿ ಮಾತನಾಡಿ, ದೃಷ್ಟಿ ಕಳೆದುಕೊಂಡವರು ಪ್ರಪಂಚವನ್ನು ನೋಡಲು ಅಸಾಧ್ಯ ಈ ನಿಟ್ಟಿನಲ್ಲಿ ನೇತ್ರದಾನದ ಅರಿವು ಮೂಡಿಸುವ ಕಾರ್ಯಕ್ರಮ ಎಲ್ಲಾ ಕಡೆಯಲ್ಲಿ ನಡೆಯಬೇಕು ಎಂದು ಶುಭ ಹಾರೈಸಿದರು. ಸಾಮಾಜಿಕ ಕಾರ್ಯಕರ್ತ ಲೇಖಕ ರಾಘವೇಂದ್ರ ಪ್ರಭು ಕರ್ವಾಲು ಮಾತನಾಡಿ, ನಾವು ಕಣ್ಣು ಮುಚ್ಚಿದಾಗ ಮತ್ತೊಬ್ಬರು ಕಣ್ಣು ತೆರೆಯಬೇಕು. ಈ ನಿಟ್ಟಿನಲ್ಲಿ ನೇತ್ರದಾನ ಮತ್ತು ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ಇರುವ ಮೂಢನಂಬಿಕೆ. ದೂರ ಮಾಡಲು ನೇತ್ರದಾನ ವಾಗ್ದಾನ ಶಿಬಿರಗಳು ಪ್ರತಿಯೊಂದು ಗ್ರಾಮದಲ್ಲಿ ನಡೆಯಬೇಕು. ದೃಷ್ಟಿ ಕಳೆದುಕೊಂಡವರು ಸಮಾಜದಲ್ಲಿ ಯಾವ ರೀತಿಯ ಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂಬ ಕಥೆಯನ್ನು ಹೊಂದಿರುವ ಲೈಟ್ ಹೌಸ್ ಚಲನಚಿತ್ರ ತಂಡದ ಈ ಕಾರ್ಯ ಶ್ಲಾಘನೀಯ ಎಂದರು. ವೈದ್ಯರಾದ ಡಾ. ಶಮಂತ್ ಶೆಟ್ಟಿ, ಡಾ. ಸ್ನೇಹ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು. ಲೈಟ್ ಹೌಸ್ ಚಲನಚಿತ್ರದ ನಿರ್ಮಾಪಕರಾದ ದತ್ತಾತ್ರೇಯ ಪಾಟ್ಕಾರ್' ಮಾತನಾಡಿದರು. ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಸ್ವಾಗತಿಸಿ ಮತ್ತು ಪ್ರಸ್ತಾವನೆಗೈದರು, ರಂಗಭೂಮಿ ಕಲಾವಿದ ರಾಮಾಂಜಿ ನಮ್ಮ ಭೂಮಿ ನಿರೂಪಿಸಿ, ವಂದಿಸಿದರು.
ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿತ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ
Posted On: 14 May 2025, 05:14 PM
ಕಾಪು : ನಗರ ಹಾಗೂ ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂದಿತ ವಿವಿಧ ಸಮಸ್ಯೆಗಳ ಬಗ್ಗೆ ಬುಧವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸ್ಥಳಿಯ ಯೋಜನ ಪ್ರದೇಶದ ಹೊರಭಾಗದಲ್ಲಿನ 1 ಎಕರೆಗಿಂತ ಕಡಿಮೆ ಇರುವ ಪ್ರದೇಶ ಮತ್ತು ಎಕನಿವೇಶನ ವಸತಿ/ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಈ ಹಿಂದೆ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಲ್ಲಿ ಅನುಮೋದನೆಯನ್ನು ನೀಡಲಾಗುತ್ತಿತ್ತು. 2024 ರಿಂದ ಸದ್ರಿ ಅಧಿಕಾರವನ್ನು ನಗರ ಗ್ರಾಮಾಂತರ ಯೋಜನಾ ಇಲಾಖೆಗೆ ನೀಡಿದ್ದರಿಮದ ಸಾರ್ವಜನಿಕರಿಗೆ ಸಕಾಲದಲ್ಲಿ ವಿನ್ಯಾಸ ಅನುಮೋದನೆಯನ್ನು ಪಡೆಯಲಾಗುತ್ತಿಲ್ಲ. ಇದರಿಂದಾಗಿ ವಿಳಂಬವಾಗುತ್ತಿದೆ. 9&11ಎ ಅನ್ನು ಸಾರ್ವಜನಿಕರಿಗೆ ಪಡೆಯಲು ವಿಳಂಬವಾಗುತ್ತಿದೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ವಹಿಸಿದ್ದರಿಂದ ಸಿಬ್ಬಂದಿ ಹಾಗೂ ಅಧಿಕಾರಿಗಳ ಕೊರತೆಯಿಂದ ವಿನ್ಯಾಸ ಅನುಮೋದನೆಯನ್ನು ಪಡೆಯಲು ಕನಿಷ್ಠ 2 ರಿಂದ 3 ತಿಂಗಳು ಬೇಕಾಗುದರಿಂದ ಸಾರ್ವಜನಿಕರಿಗೆ ಅನಾನುಕೂಲತೆಯಾಗಿರುತ್ತದೆ. ಈ ಹಿಂದೆ ಗ್ರಾಮ ಹಾಗೂ ತಾಲೂಕು ಪಂಚಾಯತ ನಲ್ಲಿ 15 ದಿನದ ವಿನ್ಯಾಸ ಅನುಮೋದನೆಯೊಂದಿಗೆ 9&11ಎ ಅನ್ನು ಸಾರ್ವಜನಿಕರಿಗೆ ಶೀಘ್ರದಲ್ಲಿ ಪಡೆಯಲು ಸಾದ್ಯವಾಗುತ್ತಿತ್ತು. ಅತೀ ದೂರದ ಗ್ರಾಮೀಣ ಪ್ರದೇಶಗಳಿಗೆ ಸಕಾಲದಲ್ಲಿ ಕ್ಷೇತ್ರ ಭೇಟಿ ನೀಡಲು ನಗರ ಹಾಗೂ ಗ್ರಾಮಾಂತರ ಯೋಜನ ಪ್ರಾಧಿಕಾರಿಗಳ ಅಧಿಕಾರಿಗಳಿಗೆ ಸಾದ್ಯವಾಗದೇ ಇದ್ದು, ಅಲ್ಲದೆ ದಾಖಲೆಗಳ ನೆಪವೊಡ್ಡಿ ಕಡತಗಳ ವಿಲೆಯಲ್ಲಿ ವಿಳಂಬತೆಯನ್ನು ತೋರುತ್ತಿರುದರಿಂದ ಸಾರ್ವಜನಿಕರಿಗೆ ತೊಂದರೆ ಹಾಗೂ ಜನ ಪ್ರತಿನಿಧಿಗಳಿಗೆ ಪ್ರತಿ ನಿತ್ಯ ಸಾರ್ವಜನಿಕರಿಂದ ದುರುಗಳು ಬರುತ್ತಿದೆ. ಕಾಪು ತಾಲೂಕು ವ್ಯಾಪ್ತಿಯಲ್ಲಿ 16 ಗ್ರಾಮ ಪಂಚಾಯಿತಿಗಳು ಇದ್ದು ಸದ್ರಿ ಗ್ರಾಮ ಪಂಚಾಯತ್ ಗೆ ಸಂಬಂದಿಸಿದಂತೆ ಸಾಕಷ್ಟು ಕಡತಗಳು ಕಾಪು ಯೋಜನ ಪ್ರಾಧಿಕಾರದಲ್ಲಿ ವಿನ್ಯಾಸ ಅನುಮೋದನೆ ಅವಶ್ಯಕತೆಯಿದ್ದು ಸದಸ್ಯ ಕಾರ್ಯದರ್ಶಿರವರಿಗೆ ಕಾಪು ತಾಲೂಕು ಅಲ್ಲದೆ ಕಾರ್ಕಳ ಹಾಗೂ ಬಂಟ್ವಾಳ ತಾಲೂಕಿಗೆ ಹೆಚ್ಚುವರಿ ಪ್ರಭಾರವಹಿಸಿದ್ದರಿಂದ ಕಾಪು ತಾಲೂಕು ವ್ಯಾಪ್ತಿಯಲ್ಲಿನ ಏಕ ವಿನ್ಯಾಸ ಕಡತಗಳು ಸುಮಾರು 3 ತಿಂಗಳ ವರೆಗೆ ವಿಲೇ ಯಾಗದೇ ಇರುವುದರಿಂದ 9&11ಎ ಅನ್ನು ಸಾರ್ವಜನಿಕರಿಗೆ ಶೀಘ್ರದಲ್ಲಿ ಪಡೆಯಲು ಸಾದ್ಯವಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಗ್ರಾಮ ಠಾಣಾ ಪ್ರಕ್ರಿಯೆ ಇಲ್ಲದೆ ಇದ್ದು ಹೆಚ್ಚಿನವರು ತುಂಡು ಭೂಮಿಯನ್ನು ಹೊಂದಿದವರಾಗಿರುತ್ತಾರೆ. ವಿನ್ಯಾಸ ಅನುಮೋದನೆಯ ಸಂದರ್ಭದಲ್ಲಿ ನಿವೇಶನ ಭೂಪರಿವರ್ತನೆಯಾಗಿದ್ದರೂ ಪ್ರಾಧಿಕಾರದ ನಿಯಮದಂತೆ ರಸ್ತೆಯನ್ನು ಭೂ ಪರಿವರ್ತನೆ ಮಾಡಿ ಪುರಸಭೆ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಪಾರಾಧೀನ ಮಾಡುವಂತೆ ಹಾಗೂ ಗ್ರಾಮಾಂತರ ದಲ್ಲಿ ರಸ್ತೆಯ ಮದ್ಯ ಬಾಗದಿಂದ 25 ಮೀ. ಬಿಟ್ಟು ಕಟ್ಟಡವನ್ನು ನಿರ್ಮಿಸಲು ಕಡ್ಡಾಯಗೊಳಿಸಿದ್ದರಿಂದ ತುಂಡು ಭೂಮಿಯನ್ನು ಹೊಂದಿದ್ದವರಿಗೆ ಇದರಿಂದ ಕಷ್ಟವಾಗುತ್ತಿದ್ದು ಬಗ್ಗೆ ಸರಳೀಕರಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರ ಹಾಗೂ ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಕುತ್ಯಾರು ಗ್ರಾಮಾಂತರ ಪ್ರದೇಶಕ್ಕೆ ಬಸ್ಸು ಸೌಲಭ್ಯ ಒದಗಿಸಿ : ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ
Posted On: 14 May 2025, 04:57 PM
ಕಾಪು : ತಾಲೂಕಿನ ಕುತ್ಯಾರು ಗ್ರಾಮಾಂತರ ಪ್ರದೇಶಕ್ಕೆ ಸರಕಾರಿ ಬಸ್ಸಿನ ಸೌಲಭ್ಯ ಅಥವಾ ಖಾಸಗಿ ಬಸ್ಸಿನ ಸೌಲಭ್ಯವನ್ನು ಮುಂದುವರಿಕೆ ಮಾಡುವಂತೆ ಈಗಾಗಲೇ ಮನವಿ ನೀಡಿದ್ದು ಪುನರ್ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರಾದ ಜಯರಾಮ ಆಚಾರ್ಯ ಕಾಪು ಇವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ರವರಿಗೆ ಮನವಿ ಮಾಡಿದರು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಕಾಪು ಪಡುಕುತ್ಯಾರು ಇರಂದಾಡಿ ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಸ್ವಾಮಿಗಳಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಸಾರ್ವಜನಿಕರು ನೀಡಿದ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಈ ಗ್ರಾಮಾಂತರ ಭಾಗಕ್ಕೆ ಬಸ್ಸು ಸೌಲಭ್ಯ ಒದಗಿಸುವರೆ ಉಡುಪಿ ಜಿಲ್ಲಾಧಿಕಾರಿ ಮುಖೇನ, ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಮೂಲಕ, ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆ.ಎಸ್.ಆರ್.ಟಿ.ಸಿ ಬಿಜೈ ಮಂಗಳೂರುರವರಿಗೆ ಪತ್ರ ಮುಖೇನ ಕುತ್ಯಾರು ಗ್ರಾಮಂತರ ಪ್ರದೇಶಕ್ಕೆ ಸರಕಾರಿ ಬಸ್ಸು ಸೌಲಭ್ಯ ಒದಗಿಸುವರೆ ತಿಳಿಸಿರುತ್ತಾರೆ. ಈ ಬಗ್ಗೆ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರಿಗೂ ಮನವಿಯನ್ನು ಸಲ್ಲಿಸಲಾಗಿರುತ್ತದೆ. ನಂತರ ನಡೆದ ಬೆಳವಣಿಗೆ ಗಮನಿಸಿದಾಗ ಖಾಸಗಿ ಬಸ್ಸಿನವರು ಗ್ರಾಮಂತರ ಪ್ರದೇಶಕ್ಕೆ ಸರಕಾರಿ ಬಸ್ಸು ಸೌಲಭ್ಯ ಒದಗಿಸುವ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ತಡೆಯನ್ನು ಪಡೆದಿರುವ ಮಾಹಿತಿಯು ತಿಳಿದು ಬಂದಿರುತ್ತದೆ. ಹಲವಾರು ವರ್ಷಗಳಿಂದ ನಮ್ಮ ಪ್ರದೇಶಕ್ಕೆ ಸರಕಾರಿ ಅಥವಾ ಖಾಸಗಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಲಿಲ್ಲ. ಅಂತೆಯೇ ಮನವಿಯನ್ನು ನೀಡಿ ಒಂದು ವರ್ಷ ಐದು ತಿಂಗಳು ಕಳೆದರೂ ಯಾವುದೇ ವ್ಯವಸ್ಥೆಯಾಗಲಿಲ್ಲ. ಈ ಬಗ್ಗೆ ಮಾನ್ಯ ಉಸ್ತುವಾರಿ ಸಚಿವರಿಗೆ ಮತ್ತು ಮಾನ್ಯ ಜಿಲ್ಲಾಧಿಕಾರಿ ಮತ್ತು ಉಡುಪಿ ಜಿಲ್ಲೆ ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಗೆ ಪುನರಪಿ ಜ.15ರಂದು ಮನವಿಯನ್ನು ಸಲ್ಲಿಸಲಾಯ್ತು. ಯಾವ ಕಾರಣಕ್ಕಾಗಿ, ಕುತ್ಯಾರು ಗ್ರಾಮಾಂತರ ಪ್ರದೇಶಕ್ಕೆ ಬಸ್ಸು ಸೌಲಭ್ಯ ಒದಗಿಸಲಾಗಿರುವುದಿಲ್ಲ ಎಂದು ನಮಗೆ ತಿಳಿದಿರುವುದಿಲ್ಲ. ಖಾಸಗಿ ಬಸ್ಸಿನವರು ಸರಕಾರಿ ಬಸ್ಸು ಹಾಕದಂತೆ ತಡೆ ಮಾಡಿಸಿದರೆ ತಡೆ ತೆರವಿಗೆ ಯಾರು ಸ್ಪಂದಿಸಬೇಕೆಂದು ಮನವರಿಕೆಯಾಗುವುದಿಲ್ಲ. ತಡೆ ತೆರವಿನ ನಂತರ ನಮ್ಮ ಪ್ರದೇಶಕ್ಕೆ ಸರಕಾರಿ ಬಸ್ಸು ಸೌಲಭ್ಯ ಬರಲಿ ಎಂದು ಆಶಿಸುತ್ತಿದ್ದೇನೆ. ಅಂತೆಯೇ ತಮ್ಮಲ್ಲಿ ನಿವೇದಿಸುವುದೆಂದರೆ, ಪ್ರಸ್ತುತ ಉಡುಪಿಯಿಂದ ಹೊರಟು ಕಾಪು ಮೂಲಕ ಈಗ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳು ಕುತ್ಯಾರು ಗ್ರಾಮದ ಪುಂಚಲಕಾಡು ಪ್ರದೇಶದಲ್ಲಿ 45 ನಿಮಿಷಕ್ಕೂ ಮೇಲ್ಪಟ್ಟು ನಿಲುಗಡೆಯಾಗುತ್ತಿದ್ದು, ಸದ್ರಿ ಬಸ್ಸುಗಳ ಮುಂದಿನ ನಿಲುಗಡೆ ವ್ಯಾಪ್ತಿಯನ್ನು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕುತ್ಯಾರು ಗ್ರಾಮದ ಇರಂದಾಡಿ, ಆನೆಗುಂದಿ ಶ್ರೀ ಮಹಾಸಂಸ್ಥಾನ ಸರಸ್ವತಿ ಪೀಠ ಮತ್ತು ಸಮಾಜ ಕಲ್ಯಾಣ ಇಲಾಖೆಯ ಮೋರಾರ್ಜಿ ದೇಸಾಯಿ ವಸತಿ ಶಿಕ್ಷಣ ಶಾಲೆ, ಶ್ರೀ ದುರ್ಗಾಮಂದಿರ ಮತ್ತು ಇತರ ಸಂಘ ಸಂಸ್ಥೆಗಳು ಇರುವ ಸ್ಥಳದಲ್ಲಿ ನಿಲುಗಡೆ ಮಾಡಿ ಅಲ್ಲಿಂದ ಪುಂಚಲಕಾಡು ಮಾರ್ಗವಾಗಿ ಕಾಪುವಿನಿಂದ ಉಡುಪಿಗೆ ತಲುಪಬಹುದು. ಪ್ರಸ್ತುತ ಪುಂಚಲಕಾಡಿನಿಂದ ನಮ್ಮ ಪ್ರದೇಶಕ್ಕೆ ಕ್ರಾಂಕ್ರಿಟ್ ರಸ್ತೆಯಾಗಿದ್ದು ಯಾವುದೇ ಆಡಚನೆಯಾಗುವುದಿಲ್ಲ. ಈ ಬಗ್ಗೆ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರು ಇದಕ್ಕೆ ಬೇಕಾದ ಖಾಸಗಿ ಬಸ್ಸುಗಳ ಪರ್ಮಿಟ್ ವ್ಯವಸ್ಥೆಯನ್ನು ಮಾರ್ಪಾಡು ಮಾಡಿ ಸಾರ್ವಜನಿಕರಿಗೆ ಬಸ್ಸಿನ ಸೌಕರ್ಯವನ್ನು ಒದಗಿಸಿಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.
ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ : ರಚನ್ ಸಾಲಿಯಾನ್
Posted On: 12 May 2025, 07:27 PM
ಕಾರ್ಕಳ : ನಿಟ್ಟೆ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಸ್ಥಾಪಕಾಧ್ಯಕ್ಷ ಶಿವಕುಮಾರ್ ಕರ್ಜೆ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿ ಕೂಂಡಿರುವ ನಿಟ್ಟೆ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್ ಗೋಡೆಯ ಮೇಲೆ ಮೇ.7ರಂದು ರಾತ್ರಿ ಕೆಲವು ವಿದ್ಯಾರ್ಥಿನಿಯರು ದೇಶ ದ್ರೋಹ ಬರವಣಿಗೆಯ ಘಟನೆಯಲ್ಲಿ ಕಂಡು ಬಂದಿದ್ದು, ದೇಶದ ಆಂತರಿಕ ಭದ್ರತೆಗೆ ಅನುಮಾನ ಸೃಷ್ಟಿಸುವ ಕೃತ್ಯವಾಗಿದ್ದು, ಇದನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ತ್ರೀವವಾಗಿ ಖಂಡಿಸುತ್ತದೆ. ಪ್ರಸುತ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ದೇಶಾಭಿಮಾನವನ್ನು ಹೆಚ್ಚಿಸುತ್ತಿದ್ದು, ನಮ್ಮ ದೇಶದ ಸೈನ್ಯದ ತ್ಯಾಗ ಮತ್ತು ಸೇವೆಯನ್ನು ಇಡೀ ದೇಶವೇ ಕೊಂಡಾಡುತಿರುವುದು ಗಮನಾರ್ಹ ಸಂಗತಿ. ಇಂತಹ ಸಂದರ್ಭದಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಚಟುವಟಿಕೆ ಕಂಡು ಬಂದಿರುವುದು ಅವಮಾನೀಯ. ಈ ರೀತಿಯ ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕ್ಯೆಗೊಂಡು, ವಿದ್ಯಾರ್ಥಿಗಳನ್ನು ಕಾಲೇಜ್ ನಿಂದ ಅಮಾನತುಗೊಳಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಉಡುಪಿ ಜಿಲ್ಲಾಧ್ಯಕ್ಷ ಸ್ವಯಂ ಶೆಟ್ಟಿ, ಪದಾಧಿಕಾರಿಗಳಾದ ಸ್ಮರಣ್ ನಿಟ್ಟೆ, ಅಭಿಲಾಷ್ ನಿಟ್ಟೆ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರತೀಕ್ ಶೆಟ್ಟಿ, ಸನ್ನಿ ನೆಲ್ಸನ್ ಡಿಸೋಜ ಉಪಸ್ಥಿತರಿದ್ದರು.
ಪಡುಬಿದ್ರಿ : ಗ್ರಾ.ಪಂ. ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Posted On: 12 May 2025, 05:28 PM
ಪಡುಬಿದ್ರಿ : ಪಾದೆಬೆಟ್ಟು-2 ಅನುಸೂಚಿತ ಜಾತಿ ಮಹಿಳೆಗೆ ಮೀಸಲಿರಿಸಿದ ಉಪಚುನಾವಣಾ ಕ್ಷೇತ್ರಕ್ಕೆ ಮೇ.25ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಪಿ.ಉಷಾರವರು ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ್ ಎಮ್ ಪೂಜಾರಿ, ಕೆ.ಪಿ.ಸಿ.ಸಿ ಕೋ-ಆರ್ಡೀಟರ್ ನವೀನಚಂದ್ರ ಜೆ ಶೆಟ್ಟಿ, ದಲಿತ ಮುಖಂಡರಾದ ಶೇಖರ್ ಹೆಜ್ಮಾಡಿ, ಗ್ರಾ.ಪಂ.ಸದಸ್ಯರಾದ ನವೀನ್ ಎನ್ ಶೆಟ್ಟಿ, ಗಣೇಶ್ ಕೋಟ್ಯಾನ್, ಜ್ಯೋತಿ ಮೆನನ್, ಮಾಜಿ ಸದಸ್ಯರಾದ ಅಶೋಕ್ ಸಾಲ್ಯಾನ್, ದಿನೇಶ್ ಕಂಚಿನಡ್ಕ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಹಸನ್ ಬಾವ, ಕೀರ್ತಿ ಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಎಸ್.ಸಿ /ಎಸ್.ಟಿ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ್ ಕೆ., ವಿಠಲ್ ಮಾಸ್ಟರ್, ಸಂತೋಷ್ ಪಡುಬಿದ್ರಿ ಉಪಸ್ಥಿತರಿದ್ದರು.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
Posted On: 09 May 2025, 03:05 PM
ಕಾಪು: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಅವರನ್ನು ಗೌರವಿಸಲಾಯಿತು. ದೇವಳದ ಶಿಲಾ ಕೆತ್ತನೆಗಳನ್ನು ಗಮನಿಸಿದರು. ಹೊಸ ಮಾರಿಗುಡಿ ಅಭಿವೃದ್ಧಿ ಹೊಂದಿದ ಬಗ್ಗೆ ವಿವರಿಸಲಾಯಿತು. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮತ್ತು ಕಾಪು ಶಾಸಕ, ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಪ್ರವಾಸೋದ್ಯಮದ ನಿಟ್ಟಿನಲ್ಲಿ ಅನುದಾನ ಒದಗಿಸುವ ಕುರಿತು ಮನವಿ ನೀಡಿದರು. ಗಜೇಂದ್ರ ಸಿಂಗ್ ಶೇಖಾವತ್ ಮನವಿಯನ್ನು ಸ್ವೀಕರಿಸಿ ಅನುದಾನ ಒದಗಿಸುವುದಾಗಿ ಅಮ್ಮನ ಸನ್ನಿದಾನದಲ್ಲಿ ಭರವಸೆ ನೀಡಿದರು. ಈ ಸಂದರ್ಭ ಕಾಪು ಬಿಜೆಪಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಬಂಟಕಲ್ಲು : ನೂರಹನ್ನೊಂದನೇ ಕಸಾಪ ಸಂಸ್ಥಾಪನಾ ದಿನಾಚರಣೆ ಸಂಪನ್ನ
Posted On: 09 May 2025, 03:00 PM
ಶಿರ್ವ: ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತಿಗಳಿಗೆ ಮಾತ್ರ ಸೇರಿದ್ದಲ್ಲ. ಪ್ರತೀಯೊಬ್ಬ ಕನ್ನಡಿಗನಿಗೂ ಸೇರಿದ ಸ್ವಾಯತ್ತ ಸಂಸ್ಥೆಯಾಗಿದೆ. ೧೧೧ನೇ ವರ್ಷ ಪೂರೈಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುತ್ತಿದ್ದು ಇದೇ ಅದರ ದೀರ್ಘ ಅಸ್ತಿತ್ವಕ್ಕೆ ಕಾರಣವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ನಾಡು,ನುಡಿ, ಸಂಸ್ಕೃತಿ, ಸಾಹಿತ್ಯ, ಜಾನಪದ, ಕನ್ನಡ,ಕನ್ನಡಿಗ, ಕರ್ನಾಟಕ ಇದೇ ಧ್ಯೇಯೋದ್ಧೇಶಗಳನ್ನು ಅನುಷ್ಠಾನ ಮಾಡಲು ಬದ್ದವಾಗಿದೆ. ಪ್ರೀತಿಯ ಬಾಂಧವ್ಯ ಬೆಳೆಸುವುದೇ ಇದರ ಆಶಯವಾಗಿದೆ ಎಂದು ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ನುಡಿದರು. ಅವರು ಸೋಮವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಬಂಟಕಲ್ಲು ಬಸ್ಸು ನಿಲ್ದಾಣದ ಸಾರ್ವಜನಿಕ ತರೆದ ವಾಚನಾಲಯದಲ್ಲಿ ಜರುಗಿದ ೧೧೧ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ,ಜನಸಾಮಾನ್ಯರೆಲ್ಲ ಬಂದು ನಿಲ್ಲುವ ಬಸ್ಸು ತಂಗುದಾಣದಲ್ಲಿ ಶತಮಾನೋತ್ತರ ಇತಿಹಾಸ ಹೊಂದಿರುವ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿರುವುದು ನಾಡಿನ ಸಮಸ್ತರ ಭಾವನೆಗಳಿಗೆ ಸ್ಪಂದಿಸುವುದೇ ಆಗಿದೆ. ಈ ಸಂಸ್ಥೆಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು, ಅವರಿಗೆ ಬೆಂಬಲವಾಗಿ ನಿಂತ ಮಹಾನ್ ದಿವಾನರಾಗಿದ್ದ ಸರ್.ಎಂ.ವಿಶ್ವಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ರವರು. ಇದು ಸಾಹಿತಿಗಳ ಪರಿಷತ್ತು ಅಲ್ಲ. ಜನಸಾಮಾನ್ಯರ ಪರಿಷತ್ತು. ನಾವು ಆಡುವ ಭಾಷೆ ನೆಲದಭಾಷೆ, ಹೃದಯದ ಭಾಷೆ ಆಗಿದೆ, ಆಗಬೇಕು. ಇದು ಭಾವದ ಪ್ರತೀಕ ಎಂದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿದ ಸಾಹಿತಿ,ಕವಯತ್ರಿ ಪ್ರೊ.ಡಾ.ಫ್ಲಾವಿಯಾ ಕಸ್ತಲಿನೊ ಮಣಿಪಾಲ ಇವರು ಮಾತನಾಡಿ ಕರಾವಳಿ ಭಾಗದಲ್ಲಿ ಹೆಚ್ಚಿನವರ ಮಾತೃಭಾಷೆ, ತುಳು, ಕೊಂಕಣಿ, ಕುಂದಾಪ್ರ ಕನ್ನಡ ಇದ್ದರೂ ಶಾಲೆಯಲ್ಲಿ ಕನ್ನಡವನ್ನು ಕಲಿಯುತ್ತೇವೆ. ಕನ್ನಡದ ನೆಲದಲ್ಲಿ ನಾವೆಲ್ಲ ಕನ್ನಡಿಗರೇ ಆಗಿದ್ದೇವೆ. ಕನ್ನಡದ ಶ್ರೀಮಂತ ಸಂಸ್ಕೃತಿ,ಪರಂಪರೆಯನ್ನು ನೂರಾರು ಕವಿಗಳು,ಸಾಹಿತಿಗಳು ಸಾಹಿತ್ಯ ಗ್ರಂಥಗಳ ಮೂಲಕ ಅನಾವರಣಗೊಳಿಸಿದ್ದಾರೆ ಎಂದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯನುಡುಗಳನ್ನಾಡಿ ಉಡುಪಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸಾಹಿತ್ಯದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ನಡೆಸುತ್ತಿರುವುದು ಜಿಲ್ಲೆಯ ಸಾಧನೆಗೆ ಪ್ರೇರಣೆಯಾಗಿದೆ. ಸಾಹಿತ್ಯ ಚಟುವಟಿಕೆಗಳಿಗೆ ರಾಜ್ಯದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದೆ ಎಂದರು. ದತ್ತಿ ಉಪನ್ಯಾಸ : ಹಿರಿಯ ಸಾಹಿತಿ ಕುರಾಡಿ ಸೀತಾರಾಮ ಅಡಿಗ ಮತ್ತು ಟಿ.ಎಸ್.ಕಮಲಾಕ್ಷಿ ಅಡಿಗ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ಬೆನಗಲ್ ವಿಶ್ವಭಾರತ ಕರ್ನಾಟಕ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಸೂರಾಲು ನಾರಾಯಣ ಮಡಿ ಮಾತನಾಡಿ ಕುರಾಡಿ ಸೀತಾರಾಮ ಅಡಿಗರು ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿ ಅವರ ಸಾಹಿತ್ಯ, ಮಕ್ಕಳ ಗೀತೆಗಳು, ಕವನಗಳ ಬಗ್ಗೆ ಗಮನ ಸೆಳೆದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ದಂಪತಿಗಳಾದ ದೇವೇಂದ್ರ ನಾಯಕ್ ಶಿರ್ವ ಮತ್ತು ವನಿತಾ ಡಿ,ನಾಯಕ್ರವರನ್ನು ದತ್ತಿಗೌರವದೊಂದಿಗೆ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ವೇದಿಕೆಯಲ್ಲಿ ಕಸಾಪ ಜಿಲ್ಲಾ ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಕೆ.ದೇವದಾಸ್ ಹೆಬ್ಬಾರ್, ಬಂಟಕಲ್ಲು ನಾಗರಿಕ ಸೇವಾ ಸಮಿತಿ ಕೋಶಾಧಿಕಾರಿ ಜಗದೀಶ ಆಚಾರ್ಯ, ಬೆಳ್ಳೆ ಗ್ರಾ.ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಂಟಕಲ್ಲು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ಕಸಾಪ ಜಿಲ್ಲಾ ಸಮಿತಿಯ ನರಸಿಂಹಮೂರ್ತಿ, ರಿಕ್ಷಾ ಯೂನಿಯನ್ ಅಧ್ಯಕ್ಷ ಮಂಜುನಾಥ ಪೂಜಾರಿ, ಡೇನಿಸ್ ಡಿಸೋಜ, ಉಮೇಶ್ ರಾವ್, ರವೀಂದ್ರ ಪಾಟ್ಕರ್, ಉಷಾ ಮರಾಠೆ, ಕಸಾಪ ಕಾಪು ಘಟಕದ ಗೌ.ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಸಮಿತಿಯ ಸದಸ್ಯರುಗಳಾದ ಮಧುಕರ್ ಎಸ್, ಪ್ರೊ.ವಿದ್ಯಾ ಅಮ್ಮಣ್ಣಾಯ, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ ಉಪಸ್ಥಿತರಿದ್ದರು. ಕು.ದೀಕ್ಷಿತಾ, ದೀಕ್ಷಾ ನಾಡಗೀತೆ ಹಾಡಿದರು. ಕಸಾಪ ಸಹಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿದರು. ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಹಾಗೂ ಕಸಾಪ ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ನಿರೂಪಿಸಿದರು. ಗೌ.ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿದರು.
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
Posted On: 05 May 2025, 12:14 PM
ಕಾರ್ಕಳ : 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಿಎ ಫೌಂಡೇಶನ್ ನಲ್ಲಿ 13 ವಿದ್ಯಾರ್ಥಿಗಳಲ್ಲಿ 07 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುವುದಲ್ಲದೆ, CSEET ಪರೀಕ್ಷೆಯಲ್ಲಿ 34 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಅರ್ಹತೆಯನ್ನು ಪಡೆದುಕೊಂಡಿರುವುದು ವಾಣಿಜ್ಯ ವಿಭಾಗದ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಹತ್ತಾರು ಕ್ರೀಯಾಶೀಲ ಕಾರ್ಯಕ್ರಮಗಳೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಅವರ ಉತ್ತಮ ಭವಿಷ್ಯಕ್ಕೆ ಸಂಸ್ಥೆ ಕಾರಣವಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ ಈ ಉಚಿತ ಶಿಕ್ಷಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : +919980924567
ಎಸ್ ಎಸ್ ಎಲ್ ಸಿ ಪರೀಕ್ಷೆ : ಮುಹಮ್ಮದ್ ಅಫ್ನಾನ್ 578 ( 92.48%) ಅಂಕ
Posted On: 05 May 2025, 12:05 PM
ಕಾಪು : ಕಾಪು ದಂಡತೀರ್ಥ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಹೈಸ್ಕೂಲ್ ನ ವಿದ್ಯಾರ್ಥಿ ಮುಹಮ್ಮದ್ ಅಫ್ನಾನ್ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 578 ( 92.48%) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದ್ದಿದ್ದಾರೆ ಇವರು ಮುಹಮ್ಮದ್ ಅಶ್ರಫ್ ಮತ್ತು ತಬಸ್ಸುಮ್ ದಂಪತಿಯ ಪುತ್ರ ಹಾಗೂ ಕಾಪು ಎಸ್. ಐ. ಓ ಯುನಿಟ್ ನ ಕ್ಯಾಡರ್ ಆಗಿರುತ್ತಾರೆ.
