Updated News From Kaup

ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ

Thumbnail
Posted On: 17 Jan 2022, 06:01 PM

ಶಿರ್ವ: ಈ ದಿನಗಳಲ್ಲಿ ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ ಏರ್ಪಡಿಸಿದ 74ನೇ ಸೇನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಮುಂಡೆಲ್ ನ ಆಧ್ಯಾ ಫೌಂಡೇಶನ್ ಸೀನಿಯರ್ ಡೈರೆಕ್ಟರ್ ರಾಕೇಶ್ ಅಜಿಲ ಮಾತನಾಡಿದರು. ಯುವಕರಲ್ಲಿ ದೇಶಭಕ್ತಿ,ಶಿಸ್ತು, ಸಮಯ ಪ್ರಜ್ಞೆ, ನಾಯಕತ್ವ ಗುಣಗಳನ್ನು ಹೆಚ್ಚಿಸುವಲ್ಲಿ ಎನ್.ಸಿ.ಸಿ ಸಹಾಯಕಾರಿಯಾಗುತ್ತದೆ.ಇಂದಿನ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆದು ಇತರರಿಗೆ ಮಾದರಿಯಾಗಬೇಕು ಹಾಗು ತಮ್ಮ ಅಮೂಲ್ಯ ಕೊಡುಗೆಯನ್ನು ಈ ದೇಶಕ್ಕೆ ನೀಡಬೇಕೆಂದು ಕಿವಿಮಾತು ಹೇಳಿದರು. ಮಾತೃಭೂಮಿಯ ರಕ್ಷಣೆ ಮತ್ತು ರಾಷ್ಟ್ರದ ಅಖಂಡತೆಯನ್ನು ಕಾಪಾಡಲು ಎಲ್ಲವನ್ನೂ ತ್ಯಜಿಸಿ, ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ವೀರ ಯೋಧರಿಗೆ ನಮನಗಳನ್ನು ಸಲ್ಲಿಸುತ್ತಾ ಹಾಗೆ ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ ಸೇನೆಯ ವೀರ ಸೈನಿಕರನ್ನು ಗೌರವಿಸ ಬೇಕಾಗಿರೋದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು. ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ಕ್ಯಾಡೆಟ್ ರಿಯಾ ಸೆರೆನಾ ಡಿಸೋಜಾ ವಿವರಿಸಿದರು. ಈ ಸಂದರ್ಭದಲ್ಲಿ ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್ ದೇಶಭಕ್ತಿ ಗೀತೆ ವನ್ನು ಹಾಡಿ ನೆರೆದವರನ್ನು ಪ್ರೇರೇಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಅಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ, ಎಲ್ಲಾ ಕ್ಯಾಡೆಟ್ ಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಾನ್ಸ್ ಕಾರ್ಪೋರಲ್ ಧೀರಜ್ ಆಚಾರ್ಯ, ಕ್ಯಾಡೆಟ್ ಅನುಪ್ ನಾಯಕ್, ದೀಪಕ್ ಮತ್ತಿತರರು ಸಹಕರಿಸಿದರು. ಕೆಡೆಟ್ ನವ್ಯ ಮತ್ತು ಬಳಗ ಪ್ರಾರ್ಥಿಸಿದರು. ಸಾರ್ಜೆಂಟ್ ನಿವೇದಿತಾ ರೆಬೆಲ್ಲೋ ಎಲ್ಲರನ್ನು ಸ್ವಾಗತಿಸಿ, ಜೂನಿಯರ್ ಅಂಡರ್ ಆಫೀಸರ್ ಸುರಕ್ಷಾ ವಂದಿಸಿ, ಕ್ಯಾಡೆಟ್ ಎಲ್ರುಷಾ ಮಿಲಿನಾ ಡೇಸ ಕಾರ್ಯಕ್ರಮವನ್ನು ಸಂಯೋಜಿಸಿದರು.

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ‌

Thumbnail
Posted On: 17 Jan 2022, 05:56 PM

ಸುರತ್ಕಲ್ : ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ , ಹಿರಿಯ ಯಕ್ಷಗಾನ ವಿದ್ವಾಂಸ,ಪ್ರಸಂಗಕರ್ತ,ಸಾಹಿತಿ‌ ಶ್ರೀಧರ ಡಿ.ಎಸ್.ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ವಹಿಸಿದ್ದರು. ನಿವೃತ್ತ ಉಪನ್ಯಾಸಕ ನಾರಾಯಣ ಹೆಗಡೆ ಉಡುಪಿ ಅವರು ಅಭಿನಂದನೆಯ ಮಾತುಗಳನ್ನಾಡಿದರು. ಯಕ್ಷಗಾನ ಸಂಘಟಕ ,ಜ್ಯೋತಿಷಿ ಶ್ರೀಮಧುಕರ ಭಾಗವತರು ಕುಳಾಯಿ, ಕಣಿಪುರ ಪತ್ರಿಕೆಯ ಸಂಪಾದಕ ನಾರಾಯಣ ಚೆಂಬಲ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಗುರುಗಳಾದ ಸುರತ್ಕಲ್ ವಾಸುದೇವ ರಾವ್, ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ವಿ.ರಾವ್ ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.

ಉದ್ಯಾವರದ ಸುರೇಶ್ ಬಂಗೇರ ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವು

Thumbnail
Posted On: 16 Jan 2022, 07:35 PM

ಉಡುಪಿ : ಜಿಲ್ಲೆಯ ಉದ್ಯಾವರ ಅಯ್ಯಪ್ಪಸ್ವಾಮಿ ಮಂದಿರದಿಂದ ಹೊರಟ ಅಯ್ಯಪ್ಪಸ್ವಾಮಿ ಸುರೇಶ್ ಬಂಗೇರ ( 52) ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಉದ್ಯಾವರ ಅಯ್ಯಪ್ಪ ಮಂದಿರದಿಂದ ಮಹಾಪೂಜೆ ಮಾಡಿ ಇರುಮುಡಿ ಕಟ್ಟಿ ನಿನ್ನೆ‌ ರೈಲು ಮುಖಾಂತರ 32 ಸ್ವಾಮಿಗಳ ಜೊತೆ ಹೊರಟಿದ್ದರು. ಶಬರಿಮಲೆಯ ಗಣೇಶ ಬೆಟ್ಟ ಹತ್ತುವ ವೇಳೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೃತದೇಹ ಪಂಪೆಯಲ್ಲಿ ಚಿಕಿತ್ಸಾ ಕೇಂದ್ರದಲ್ಲಿದ್ದು, ನಾಳೆ ಅವರ ಮೃತದೇಹ ಉದ್ಯಾವರ ಅವರ ನಿವಾಸಕ್ಕೆ ಬರಲಿದೆ. ಉದ್ಯಾವರ ಸಂಪಿಗೆ ನಗರದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.

ಮೋಕ್ಷಗಿರಿಯಲ್ಲಿ ಕಿಡಿಗೇಡಿಗಳಿಂದ ಧ್ವಂಸಗೊಂಡಿದ್ದ ಭಾಗವಧ್ವಜ ಕಟ್ಟೆಯನ್ನು ಮರುಸ್ಥಾಪಿಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು

Thumbnail
Posted On: 16 Jan 2022, 07:16 PM

ಉಡುಪಿ : ಜಿಲ್ಲೆಯಲ್ಲಿ ಒಂದು ದೊಡ್ಡ ಮಟ್ಟಿನಲ್ಲಿ ಸದ್ದು ಮಾಡಿದ್ದ ಕುಂತಲ ನಗರ ಗ್ರಾಮದಲ್ಲಿ ಮೋಕ್ಷಗಿರಿ ಎಂಬ ಪರ್ವತದಲ್ಲಿ 2 ತಿಂಗಳ ಹಿಂದೆಯಷ್ಟೇ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಸ್ಥಾಪಿಸಿದ್ದ ಭಾಗವಧ್ವಜ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೋಕ್ಷಗಿರಿ ಘಟಕದ ಕಾರ್ಯಕರ್ತರು ದ್ವಜಕಟ್ಟೆಯನ್ನು ಮರುಸ್ಥಾಪಿಸಿದರು .ಕಟ್ಟೆಯನ್ನು ದ್ವOಸ ಮಾಡಿದ ಕಿಡಿಗೇಡಿಗಳಿಗೆ ಕಾರ್ಯಕರ್ತರು ಸ್ಪಷ್ಟ ಎಚ್ಚರಿಕೆಯನ್ನು ಕೂಡ ನೀಡಿದರು. ಮುಂದಿನದಿನಗಳಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದಲ್ಲಿ ಅವರ ಮನೆಯನ್ನು ಕೇಸರಿಮಯ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್, ವಿಹಿಂಪ ಉಡುಪಿ ಜಿಲ್ಲಾ ಸೇವಾ ಪ್ರಮುಖ್ ದೀಪಕ್ ಮೂಡುಬೆಳ್ಳೆ, ಉಡುಪಿ ಬಜರಂಗದಳ ಗ್ರಾಮಾಂತರ ಪ್ರಖಂಡ ಸಂಚಾಲಕರಾದ ಅನಿಲ್ ಅತ್ರಾಡಿ, ಶಿರ್ವ ವಲಯಧ್ಯಕ್ಷರಾದ ವಿಖ್ಯಾತ್ ಭಟ್, ಮೋಕ್ಷಗಿರಿ ವಿಂಹಿಪ ಅಧ್ಯಕ್ಷರಾದ ಅಶೋಕ್ ಶೆಟ್ಟಿ , ಬಜರಂಗದಳ ಸಂಚಾಲಕರಾದ ನಿಶಾಂತ್ ಪೂಜಾರಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೇಂದ್ರ ಸರಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು ಅವರ ಬೋಧನೆಗಳನ್ನು ಕಡೆಗಣಿಸಿದಂತೆ : ವಿನಯ್ ಕುಮಾರ್ ಸೊರಕೆ

Thumbnail
Posted On: 16 Jan 2022, 06:13 PM

ಗಣರಾಜ್ಯೋತ್ಸವ ಪೆರೇಡಿಗೆ ಕೇರಳ ಸರಕಾರವು ಕಳುಹಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಡೆ ಹಿಡಿದಿರುವ ಕೇಂದ್ರದ ನಿಲುವು ಗುರುಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ತೋರಿಸಿದ ಅಗೌರವ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಬಲವಾಗಿ ಬೇರೂರಿದ್ದ ಸಮಯದಲ್ಲಿ ಸಮಾಜದ ಶೋಷಣೆಗೊಳಗಾದ ಜನರಿಗೆ ದೇವರ ಪಾರ್ಥನೆ ಮಾಡಲು ಹಾಗೂ ದೇವಸ್ಥಾನಕ್ಕೂ ಪ್ರವೇಶವಿಲ್ಲದ ಸಮಯದಲ್ಲಿ ಗುರೂಜಿ ಧ್ವನಿಯಾಗಿ ಆತ್ಮವಿಶ್ವಾಸ ತುಂಬಿದರು.ಅವರಲ್ಲಿ ಸಮಾನತೆಯ ಆಶಾಕಿರಣ ಬೀರಿ, ಶೋಷಣೆಗೊಳಗಾದ ಜನರಿಗೆ ಭರವಸೆ ನೀಡಿದರು. ಒಂದೇ ಜಾತಿ,ಒಂದೇ ಮತ ಎಂಬ ವಿಶಾಲ ಸಂದೇಶ ನೀಡಿ, ಮಹಾ ಮಾನವತಾವಾದಿಯಾದ ಗುರುಗಳ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು ಅವರ ಬೋಧನೆಗಳನ್ನು ಕೇಂದ್ರ ಸರಕಾರ ಕಡೆಗಣಿಸಿದಂತಿದೆ.ಗುರುಗಳನ್ನು ಭಕ್ತಿಯಿಂದ ಆರಾಧಿಸುವ ಬಿಜೆಪಿ ನಾಯಕರ ಮೌನ ಹಿಂದುಳಿದವರ ಬಗ್ಗೆ ಹಾಗೂ ನಾರಾಯಣ ಗುರುಗಳ ಬಗ್ಗೆ ಅವರಿಗಿರುವ ಕಾಳಜಿಯನ್ನು ಅನುಮಾನದಿಂದ ನೋಡುವಂತಾಗಿದೆ ಎಂದಿದ್ದಾರೆ. ಬಿಜೆಪಿ ಸರಕಾರವು ರಾಜ್ಯ ಹಾಗೂ ದೇಶದ ಅಭಿವೃದ್ಧಿಯನ್ನು ಕಡೆಗಣಿಸಿ, ವಿರೋಧ ಪಕ್ಷದವರ ವಾಕ್ ಸ್ವಾತಂತ್ರ್ಯವನ್ನು ದಮನ ಮಾಡುತ್ತಿದೆ. ವಿರೋಧ ಪಕ್ಷದವರ ಮೇಲೆ ಸುಳ್ಳು ಸುಳ್ಳು ಕೇಸುಗಳನ್ನು ದಾಖಲಿಸುವುದರ ಮೂಲಕ ಜವಾಬ್ದಾರಿಯುತವಾಗಿ ಕೆಲಸ ಮಾಡುವ ವಿರೋಧ ಪಕ್ಷವನ್ನು ಬೆದರಿಸುತ್ತಿದೆ.ಕೋವಿಡ್ ನಿಯಮಾವಳಿಯನ್ನು ದುರುದ್ದೇಶಕ್ಕಾಗಿ ಉಪಯೋಗಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸನ್ನು ದಾಖಲಿಸುವುದರ ಜೊತೆಗೆ, ಕೋವಿಡ್ ನಿಯಮಾವಳಿಗಳು ಇದ್ದರು ಬಿಜೆಪಿಯ ಕಾರ್ಯಕ್ರಮಕ್ಕೆ ಯಾವುದೇ ಕೇಸ್ ನಿರ್ಬಂಧನೆ ಇಲ್ಲವಾಗಿದೆ,ಸಮಾಜದ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಸಮಾಜ ಕಲ್ಯಾಣ ಸಚಿವರ ಕ್ಷೇತ್ರದಲ್ಲಿ ಕೋಟದ ಕೊರಗ ಸಮಾಜದ ಮೇಲೆ ನಡೆದ ಘಟನೆ ಮತ್ತು ಇತ್ತೀಚಿಗೆ ನಡೆದ ಅವಳಿ ಕೊಲೆ ದೊಡ್ಡ ಸಾಕ್ಷಿ ಎಂದರು. ಇತ್ತೀಚಿಗೆ ಬಿಜೆಪಿ ಕಾರ್ಯಕರ್ತರಿಂದಲೇ ಯಡಮೊಗ್ಗೆ ಉದಯ ಗಾಣಿಗರ ಕೊಲೆ ಮತ್ತು ಕೆಂಜೂರು ಪ್ರವೀಣ್ ಪೂಜಾರಿ ಕೊಲೆ ಎಲ್ಲವೂ ಹಿಂದುಳಿದ ವರ್ಗದವರ ಮೇಲೆ ನಡೆದ ದೌರ್ಜನ್ಯವಾಗಿದೆ,ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯನ್ನು ಭಕ್ತಿಯಿಂದ ಆರಾಧನೆ ಮಾಡುವ ಬಹುಸಂಖ್ಯೆಯ ಹಿಂದುಳಿದ ವರ್ಗದವರ ಮನಸಿನ ಭಾವನೆಗೆ ಧಕ್ಕೆಯಾಗಿದೆ ಇದೊಂದು ಗಂಭೀರ ವಿಷಯವಾಗಿದ್ದು ಸರಕಾರವು ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ಮಾಡಿಕೊಡುವುದರ ಮೂಲಕ ಅವರಿಗೆ ಗೌರವ ಸಲ್ಲಿಸಬೇಕೆಂದು ಸೊರಕೆ ಆಗ್ರಹಿಸಿದ್ದಾರೆ.

ಸಮಾಜ್ಯೋದಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ತಪ್ಪು: ಯೋಗೀಶ್ ಶೆಟ್ಟಿ

Thumbnail
Posted On: 16 Jan 2022, 12:02 PM

ಕಾಪು : ಸಮಾಜ್ಯೋದಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು ಜಾತಿ ಅಸಮಾನತೆ ನೀತಿ, ಒಂದೇ ಜಾತಿ ಒಂದೇ ಮತ ಒಬ್ಬರೇ ದೇವರು ಎಂದು ಸಾರಿ, ಜನರಿಗೆ ಆತ್ಮ ಬಲವನ್ನು ಮೂಡಿಸಿದವರು ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ತಪ್ಪು ಎಂದು ಉಡುಪಿ ಜಿಲ್ಲಾ ಜನತಾದಳ ಪಕ್ಷವು ಖಂಡಿಸಿದೆ. ಆಯ್ಕೆ ಸಮಿತಿಯಲ್ಲಿ ಸಮಾನ ಮನಸ್ಕರು ಇಲ್ಲದಿರುವುದು ಕಾರಣ ಕೇಂದ್ರ ಸರಕಾರದ ನಿರ್ಧಾರ ಸರಿಯಲ್ಲ,ಕೂಡಲೇ ಶ್ರೀ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪೆರೇಡ್ ಗೆ ಸಮಿತಿಯು ಅಂಗೀಕಾರ ಮಾಡಬೇಕು. ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಪತ್ರಿಕಾ ಪ್ರಕಟನೆಯ ಮೂಲಕ ಆಗ್ರಹಿಸಿದ್ದಾರೆ.

ಚಾಲಕನ ಅಜಾಗರೂಕತೆಯಿಂದ ಮನೆಯ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಗೆ ಪಿಕ್ ಅಪ್ ವಾಹನ ತಾಗಿ ಸಾವು

Thumbnail
Posted On: 15 Jan 2022, 11:50 PM

ಮಂಗಳೂರು : ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲನಿ ಎಂಬಲ್ಲಿ ಕೊರಗಪ್ಪ (85) ರವರು ಮನೆಯ ಅಂಗಳದಲ್ಲಿದ್ದ ಸಮಯ ಟೈಲ್ಸ್ ತುಂಬಿಕೊಂಡು ವಾಹನವನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲಕ ಮೋಹನ್ ರವರು ಹಿಂದಕ್ಕೆ ತೆಗೆಯುವ ಸಮಯದಲ್ಲಿ, ವಾಹನದ ಹಿಂದುಗಡೆ ನಿಂತಿದ್ದ ಕೊರಗಪ್ಪನವರ ತಲೆಯ ಭಾಗಕ್ಕೆ ತಾಗಿ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಜಿಲ್ಲಾ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟ ಬಗ್ಗೆ ತಿಳಿಸಿರುತ್ತಾರೆ. ಈ ಬಗ್ಗೆ ಪಿಕ್ ಅಪ್ ವಾಹನದ ಚಾಲಕ ಮೋಹನ್ ರವರ ವಿರುದ್ದ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಧುರೀಣ ಡಾ| ಕೆ. ಪ್ರಭಾಕರ ಶೆಟ್ಟಿ ನಿಧನ

Thumbnail
Posted On: 15 Jan 2022, 11:22 PM

ಕಾಪು : ಕಾಪುವಿನ ಹಿರಿಯ ವೈದ್ಯ, ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಗೌರವಾಧ್ಯಕ್ಷ, ಪ್ರಶಾಂತ್ ಹಾಸ್ಪಿಟಲ್‌ನ ಸಂಸ್ಥಾಪಕ ಡಾ| ಕೆ. ಪ್ರಭಾಕರ ಶೆಟ್ಟಿ (81) ಅವರು ಜನವರಿ 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಕಾಪು ಗೋವಿಂದ ಶೆಟ್ಟಿ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ ಮತ್ತು ಪುತ್ರ ಗೃಹರಕ್ಷಕದಳದ ಉಡುಪಿ ಜಿಲ್ಲಾ ಕಮಾಂಡೆಂಟ್ / ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ| ಕೆ. ಪ್ರಶಾಂತ್ ಶೆಟ್ಟಿ ಅವರನ್ನು ಅಗಲಿದ್ದಾರೆ. ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾಗಿದ್ದ ಅವರು ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿಗಾಗಿ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿದ್ದರು. ಕಾಪು ಶಾಂತಿ ಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ ಅವರು ಹಲವು ವರ್ಷಗಳ ಹಿಂದೆ ಸಂಭವಿಸಿದ್ದ ಕೋಮು ಘರ್ಷಣೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿಯಾರಗೋಳಿ ದಂಡತೀರ್ಥ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕತ್ವವನ್ನು ವಹಿಸಿಕೊಂಡ ಅವರು ಬಳಿಕ ಗ್ರಾಮೀಣ ವಿದ್ಯಾರ್ಥಿಗಳ ಅವಶ್ಯಕತೆಗನುಣವಾಗಿ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ ಮತ್ತು ದಂಡತೀರ್ಥ ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಿ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ, ಪ್ರಸ್ತುತ ಗೌರವಾಧ್ಯಕ್ಷರಾಗಿ ವಿದ್ಯಾರ್ಥಿಗಳ ಏಳಿಗೆಗಾಗಿ ಶಕ್ತಿಮೀರಿದ ಶ್ರಮ ವಹಿಸಿದ್ದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, ಕಾಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲಾ ಖಾಸಗಿ ಆಸ್ಪತ್ರೆಗಳ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಐಎಂಎ ಕರಾವಳಿ ಇದರ ಅಧ್ಯಕ್ಷರಾಗಿ, ಉಡುಪಿ ಕರಾವಳಿ ಐಎಂಎ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ, ಹಿಂದ್ ಕುಷ್ಠ ನಿವಾರಣಾ ಸಂಘ ಕಾಪು ಘಟಕದ ಗೌರವ ವೈದ್ಯಾಧಿಕಾರಿಯಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸಲಹಾ ಸಮಿತಿಯ ಸದಸ್ಯರಾಗಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೀಕ್ಷಕ ವಿಭಾಗದ ಸದಸ್ಯರಾಗಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಗೌರವಾಧ್ಯಕ್ಷರಾಗಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಜೀವ ಸದಸ್ಯರಾಗಿ, ಕಾಪು ಲಯನ್ಸ್ ಕ್ಲಬ್‌ನ ಸ್ಥಾಪಕರಾಗಿ, ಅಧ್ಯಕ್ಷರಾಗಿ, ಜಿಲ್ಲಾ ಕ್ಯಾಬಿನೆಟ್ ಸದಸ್ಯರಾಗಿ, ಭಾರತೀಯ ಜೀವ ವಿಮಾ ನಗಮದ ವೈದ್ಯಕೀಯ ಪರಿವೀಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು. ಕಾಪುವಿನ ಪ್ರಥಮ ಚಿನ್ನದ ಪದಕ ಪುರಸ್ಕೃತ ವೈದ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು 55 ವರ್ಷಗಳ ಸುದೀರ್ಘ ಗ್ರಾಮೀಣ ಸೇವೆಗಾಗಿ ಹಲವು ಗೌರವ - ಸಮ್ಮಾನಗಳಿಗೆ ಪಾತ್ರರಾಗಿದ್ದಾರೆ. ಮಂಗಳೂರು ಬಂಟರ ಮಾತೃ ಸಂಘದಿಂದ ಚಿನ್ನದ ಪದಕ, ಲಯನ್ಸ್ ಸೇವಾ ಪುರಸ್ಕಾರ, ಗ್ರಾಮೀಣ ಸೇವೆಗಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಸಿಂಡಿಕೇಟ್ ಬ್ಯಾಂಕ್, ರೋಟರಿ ಕ್ಲಬ್ ಸಹಭಾಗಿತ್ವದ ಹೊಸ ವರ್ಷದ ಸಾಧನಾ ಪ್ರಶಸ್ತಿ, ಕರ್ನಾಟಕ ಸ್ಟೇಟ್ ಮೆಡಿಕಲ್ ಅಸೋಸಿಯೇಶನ್, ಐ.ಎಮ್.ಎ. ಉಡುಪಿ ಕರಾವಳಿಯಿಂದ ಸಮ್ಮಾನ, ಕಾಪು ತುಳುಕೂಟ, ಉಡುಪಿ ಜಯಂಟ್ಸ್ ಸಂಸ್ಥೆಗಳಿಂದ ಸಮ್ಮಾನ, ಶೀರೂರು ಮಠದಿಂದ ಶ್ರೀ ಕೃಷ್ಣ ವಿಠಲ ಪರಮಾನುಗ್ರಹ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಮೊದಲಾದ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಕುಂತಳನಗರ ಭಾರತೀ ಹಿ.ಪ್ರಾ. ಶಾಲೆಯ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ

Thumbnail
Posted On: 15 Jan 2022, 05:32 PM

ಕಟಪಾಡಿ : ಕರಾವಳಿ ಅಭಿವೃದ್ಧಿ ಪ್ರಾಧಿಕಾರಿಂದ 25 ಲಕ್ಷ ರೂಪಾಯಿ ಮತ್ತು ಮಣಿಪುರ ಗ್ರಾಮ ಪಂಚಾಯತ್ ಶೇ.5ರ ಜಂಟಿ ಅನುದಾನದಲ್ಲಿ ಕುಂತಳನಗರ ಭಾರತೀ ಹಿ.ಪ್ರಾ. ಶಾಲೆಯ ಬಯಲು ರಂಗ ಮಂಟಪಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಶಿಲಾನ್ಯಾಸಗೈದರು. ಈ ಸಂದರ್ಭ ಮಾತನಾಡಿದ ಅವರು ಮಣಿಪುರ ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಡಿ 10 ಲಕ್ಷ ರೂ. ಅನುದಾನವನ್ನು ಒದಗಿಸಲು ಬದ್ಧ ಎಂದರು. ಶಂಕುಸ್ಥಾಪನೆ ನಡೆಸಿದ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಜನರ ನಿರೀಕ್ಷೆಗೆ ಆದ್ಯತೆಯನ್ನು ನೀಡಿ 19 ಶಾಸಕರ ವಿಶ್ವಾಸಗಳಿಸಿ ಬಯಲು ರಂಗಮಂಟಪಕ್ಕೆ 23.75 ಲಕ್ಷ ರೂ. ಅನುದಾನವನ್ನು ಹೊಂದಿಸಿಕೊಳ್ಳಲಾಗಿದೆ. ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಅವಶ್ಯಕವಾದ ಬಯಲು ರಂಗ ಮಂಟಪ ಗ್ರಾಮದ ಕೇಂದ್ರವಾಗಿ ಬೆಳೆದು ಬರಲಿದೆ. ಮಣಿಪುರ ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೂ ಅನುದಾನ ಒದಗಿಸಲು ಬದ್ಧ ಎಂದರು. ಶಾಲಾಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಬಯಲು ರಂಗ ಮಂಟಪ ನಿರ್ಮಾಣಕ್ಕೆ ಅನುದಾನ ಒದಗಿಸಲು ಸಹಕರಿಸಿದ ಮಟ್ಟಾರು ರತ್ನಾಕರ್ ಹೆಗ್ಡೆ, ಕ್ಷೇತ್ರ ಶಾಸಕ ಲಾಲಾಜಿ ಆರ್ ಮೆಂಡನ್, ಮಣಿಪುರಗ್ರಾಮ ಪಂಚಾಯತ್‌ಗೆ ಕೃತಜ್ಞತೆ ಸಲ್ಲಿಸಿದರು. ಮಣಿಪುರ ಗ್ರಾ.ಪಂ. ಅಧ್ಯಕ್ಷ ಹಸನ್ ಶೇಕ್ ಅಹಮದ್‌, ಪ್ರಮುಖರಾದ ರಾಘು ಪೂಜಾರಿ ಕಲ್ಮಂಜೆ, ನ್ಯಾಯವಾದಿ ಎನ್.ಕೆ. ಆಚಾರ್ಯ ಮಾತನಾಡಿದರು. ಅರ್ಚಕ ವೇ|ಮೂ|ಗಣೇಶ್ ಭಟ್ ಶಿಲಾನ್ಯಾಸ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಕರಾಮ ಶೆಟ್ಟಿ, ಗ್ರಾ.ಪಂ ಉಪಾಧ್ಯಕ್ಷೆ ವಿನ್ನಿಫ್ರೆಡ್ ಡಿಸೋಜ, ಸದಸ್ಯರುಗಳಾದ ಸಂತೋಷ್ ಶೆಟ್ಟಿ, ಆಶಾ ಶೇಖರ್, ಡೆನ್ಜಿಲ್ ಡಿಸೋಜ, ಜಾನ್ ಸಿಕ್ವೇರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಸಲಹೆಗಾರ ಭೂವರಾಹ ಆಚಾರ್ಯ, ಗುರುರಾಜ್ ಭಟ್, ಮುಂಬಯಿ ಉದ್ಯಮಿ ಅಶೋಕ್ ಶೆಟ್ಟಿ ತೋಟದಮನೆ ವೇದಿಕೆಯಲ್ಲಿದ್ದರು. ಮಣಿಪುರ ಗ್ರಾ.ಪಂ ಪಿಡಿಓ ಮೋಹನ್ ರಾವ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಆಚಾರ್ಯ ವಂದಿಸಿದರು. ಪ್ರಧಾನ ಅಧ್ಯಾಪಕಿ ಶ್ರೀಮತಿ ವೈ. ನಿರೂಪಿಸಿದರು.

ಉಚ್ಚಿಲದ ಕುಂಜೂರು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

Thumbnail
Posted On: 15 Jan 2022, 12:49 PM

ಕಾಪು : ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದ ಕುಂಜೂರು ಸಮೀಪದ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದ್ದು, ರೈಲ್ವೆ ಹಳಿಯ ಸಮೀಪದಲ್ಲಿಯೇ ಈತನ ಮನೆಯಿದ್ದು, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪಡುಬಿದ್ರಿ ಪೋಲೀಸರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ, ಛಿದ್ರ ಛಿದ್ರವಾದ ಮೃತ ಶರೀರವನ್ನು ಆಸಿಫ್ ಆಪದ್ಬಾಂಧವರವರ ತಂಡ ಕಾರ್ಯಾಚರಿಸಿ ಪಡುಬಿದ್ರಿ ಶವಾಗಾರಕ್ಕೆ ರವಾನಿಸಲಾಗಿದೆ.