Updated News From Kaup

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ

Thumbnail
Posted On: 03 Jan 2022, 01:36 PM

ಶಿರ್ವ:ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿಯಲ್ಲಿ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 15 ರಿಂದ 18 ವರ್ಷದೊಳಗಿನ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ಡಾ| ವೈಷ್ಣವಿ ರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಕಾಲೇಜಿನ ವಿದ್ಯಾರ್ಥಿ ಅನುಪ್ ನಾಯಕ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ ಆಶಾ ಕಾರ್ಯಕರ್ತರಾದ ಸಂಗೀತ, ವಿಜಯ, ನಿರ್ಮಲರವರು ನೆರವೇರಿಸಿ ಕೊಟ್ಟರು.

ಕಲ್ಯಾಣಪುರ ರೋಟರಿ ಕ್ಲಬ್ : ಕುಟುಂಬ ಸಮ್ಮಿಲನ, ಸೌಹಾರ್ದ ಕೂಟ, ಸನ್ಮಾನ

Thumbnail
Posted On: 02 Jan 2022, 11:43 AM

ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ನ ಸದಸ್ಯರ ಕುಟುಂಬ ಸಮ್ಮಿಲನ ಮತ್ತು ಸೌಹಾರ್ದ ಕೂಟ ನೆರವೇರಿತು. ಈಬಸಂದರ್ಭ ಸದಸ್ಯರಾದ ವಿಜಯ ಮಯ್ಯಾಡಿ ಇವರ ಹುಟ್ಟು ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರುಗಿದ ಈ ಸಮಾರಂಭದಲ್ಲಿ ಹವ್ಯಾಸಿ ರಕ್ತ ದಾನಿಯಾದ ದೀಕ್ಷಿತ್ ಪ್ರಭುರವರ ಸಾಮಾಜಿಕ ಕಾಳಜಿಯನ್ನು ಗುರುತಿಸಿ ಸನ್ಮಾನಿಸಲಾಯಿತು. ರೊಟರಾಕ್ಟ್ ಮಣಿಪಾಲದ ನೂತನ ಅಧ್ಯಕ್ಷರಾದ ಗ್ಲೆನ್ ಡಯಾಸ್ ರವರನ್ನು ಅಭಿನಂದಿಸಲಾಯಿತು. ಕಲ್ಯಾಣಪುರ ರೋಟರಿಯ ಸದಸ್ಯರು ಆದ, ಅಂತಾರಾಷ್ಟ್ರೀಯ ಸಾಧನೆ ಮಾಡಿದ ನಿಕಟಪೂರ್ವ ಜಿಲ್ಲಾ ಗವರ್ನರ್ ರಾಜರಾಮ ಭಟ್, Indian Dental Association Manglore ಚಾರ್ಟರ್ ನ ನೂತನ ಅಧ್ಯಕ್ಷರಾದ ಡಾ.ರೋಶನ್ ಶೆಟ್ಟಿ, ಮುದ್ರಣ ಸಂಸ್ಥೆಗಳ ಮಾಲೀಕರ ಸಂಘದ ರಾಜ್ಯ ಸಂಚಾಲಕರಾಗಿ ಆಯ್ಕೆ ಆದ ಮಹೇಶ್ ಕುಮಾರ್, ಡಾಕ್ಟರೇಟ್ ಪದವಿ ಪಡೆದ ಡಾ.ಮೇವಿ ಮಿರಾಂಡಾ ರವರು ಗಳನ್ನೂ ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ನ ಅಧ್ಯಕ್ಷ ಶಂಭು ಶಂಕರ್, ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಶಿರ್ವ ಗ್ರಾಮ ಪಂಚಾಯತ್ ಗೆ ರೂ 11ಲಕ್ಷ ಮೌಲ್ಯದ ಸ್ವಚ್ಛವಾಹಿನಿ ವಾಹನ ಕೊಡುಗೆ

Thumbnail
Posted On: 02 Jan 2022, 09:15 AM

ಶಿರ್ವ : ಇಲ್ಲಿನ ಗ್ರಾಮ ಪಂಚಾಯತ್ ನ ನಮ್ಮ ಶಿರ್ವ, ಸ್ವಚ್ಛ ಶಿರ್ವ ಪರಿಕಲ್ಪನೆಯಡಿ ಸ್ವಚ್ಚತೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ , ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರ ವಿನಂತಿಗೆ ಸ್ಪಂದಿಸಿದ ಶಿರ್ವ ನಿವಾಸಿ, ದಾನಿ, ಮುಂಬೈಯಲ್ಲಿ ಉದ್ಯಮಿಯಾಗಿರುವ ಥೋಮಸ್ ವಿಲ್ಫ್ರಡ್ ಪಿಂಟೊ ರವರು ರೂ. 11 ಲಕ್ಷ ಮೌಲ್ಯದ ಬೊಲೆರೋ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಪಂಚಾಯತ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ದಾನಿಯವರ ಪರವಾಗಿ ಅವರ ಸಹೋದರ ಮೆಥ್ಯು ಡೇಸಾರವರು ವಾಹನದ ಕೀಲಿಯನ್ನು ಪಂಚಾಯತ್ ಅಧ್ಯಕ್ಷ ಕೆ ಆ ರ್ ಪಾಟ್ಕರ್ ರವರಿಗೆ ಹಸ್ತಾಂತರಿಸಿದರು. ಇದೇ ಸಂಧರ್ಭದಲ್ಲಿ ದಾನಿಗಳಿಗೆ ಪಂಚಾಯತ್ ವತಿಯಿಂದ ಪಂಚಾಯತ್ ಅಧ್ಯಕ್ಷರು ಶಾಲು ಹೊದಿಸಿ ಸ್ಮರಣಿಕೆ, ಕೃತಜ್ಞತಾ ಪತ್ರ ನೀಡಿ ಗೌರವಿಸಿ ಮಾತನಾಡಿ ಈ ಕೊಡುಗೆಗಾಗಿ ಕೃತಜ್ಞತೆಯನ್ನು ಸಲ್ಲಿಸಿದರು. ಗ್ರಾಮಸ್ಥರು, ದಾನಿಗಳು ಈ ರೀತಿಯ ಸಹಕಾರ ನೀಡಿದರೆ ಗ್ರಾಮದ ಅಭಿವೃದ್ದಿ ಸಾಧ್ಯ, ಈ ಕಸ ಸಂಗ್ರಹ ವಾಹನವು ನಮ್ಮ ಪಂಚಾಯತ್ ಗೆ ಅತೀ ಅಗತ್ಯವಾಗಿತ್ತು, ಇದರಿಂದ ನಮ್ಮ ಶಿರ್ವ ಸ್ವಚ್ಛ ಶಿರ್ವ ಪರಿಕಲ್ಪನೆಗೆ ಮತ್ತಷ್ಟು ಅನುಕೂಲವಾಗಿದೆ ಎಂದರು. ಗ್ರಾಮ ಪಂಚಾಯತ್ ಸದಸ್ಯರಾದ ವೈಲೆಟ್ ಕಸ್ತಲಿನೋ, ಜೆಸಿಂತಾ ಡಿ'ಸೋಜಾ, ಹಸನಬ್ಬ ಶೇಖ್, ಪ್ರವೀಣ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. SLRM ಘಟಕದ ಮೇಲ್ವಿಚಾರಕರಿದ ಕಿಶೋರ್, ರಕ್ಷಿತ್ ಗ್ರಾಮ ಪಂಚಾಯತ್ ಸಬ್ಬಂಧಿ ವರ್ಗ, ಎಸ್.ಎಲ್.ಆರ್.ಎಮ್ ಘಟಕದ ಸಿಬ್ಬಂಧಿ ವರ್ಗ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನಂತಪದ್ಮನಾಭ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ಮಂಗಳ ಕೆ.ವಿ ಯವರು ವಂದಿಸಿದರು. ಕಾರ್ಯಕ್ರಮದ ಬಳಿಕ ಹೊಸ ವಾಹನದಲ್ಲಿ ಶಿರ್ವ ದಿಂದ ಬಂಟಕಲ್ಲು ವರೆಗೆ ರಸ್ತೆಯ ಇಕ್ಕೆಲಗಳಲ್ಲಿನ ಕಸ, ತ್ಯಾಜ್ಯ, ಪ್ಲಾಸ್ಟಿಕ್ ಗಳನ್ನು ಪಂಚಾಯತ್ ಅಧ್ಯಕ್ಷರು ಮತ್ತು ಅಭಿವೃದ್ದಿ ಅಧಿಕಾರಿಯವರ ನೇತ್ರತ್ವದಲ್ಲಿ SLRM ಘಟಕದ ಸಿಬ್ಬಂದಿಯವರು ಸ್ವಚ್ಛಗೊಳಿಸಿದರು.

ಜಿಲ್ಲೆಯಲ್ಲಿ 15 -18 ವರ್ಷದವರೆಗಿನ 53,555 ಮಕ್ಕಳಿಗೆ ಕೋವಿಡ್-19 ಲಸಿಕೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Thumbnail
Posted On: 01 Jan 2022, 08:09 PM

ಉಡುಪಿ : ಜಿಲ್ಲೆಯಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 309 ಹೈಸ್ಕೂಲ್, 104 ಪದವಿ ಪೂರ್ವ ಕಾಲೇಜು, 21 ಐ.ಟಿ.ಐ ಇತ್ಯಾದಿ ಸಂಸ್ಥೆಗಳನ್ನು ಸೇರಿದಂತೆ ಒಟ್ಟು 434 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 15 ರಿಂದ 18 ವರ್ಷದವರೆಗಿನ 53,555 ಮಕ್ಕಳಿಗೆ ಲಸಿಕೆ ನೀಡಲು ಗುರಿಯನ್ನು ನಿಗದಿಪಡಿಸಲಾಗಿದೆ. 2007 ಹಾಗೂ ಇದಕ್ಕೂ ಮುನ್ನ ಜನಿಸಿರುವ ಮಕ್ಕಳು ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಅರ್ಹರಿದ್ದು, ಮಕ್ಕಳು ಕಲಿಯುತ್ತಿರುವ ಹೈಸ್ಕೂಲ್, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಲಸಿಕಾ ಶಿಬಿರಗಳನ್ನು ಏರ್ಪಡಿಸಿ ಅರ್ಹ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ಮಕ್ಕಳಿಗೆ ಅವರು ವಾಸಿಸುವ ಸ್ಥಳದ ಹತ್ತಿರದ ಶಿಕ್ಷಣ ಸಂಸ್ಥೆಯ ಲಸಿಕಾ ಶಿಬಿರದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳು ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಅಗತ್ಯವಿದ್ದು, ಪೋಷಕರು ಮಕ್ಕಳ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಮತ್ತು ಪೋಷಕರ ಮೊಬೈಲ್ ಸಂಖ್ಯೆ ನೀಡಿ ಮಕ್ಕಳು ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು. ಫಲಾನುಭವಿ ಮಕ್ಕಳು ಮೊಬೈಲ್ ಸಂಖ್ಯೆ ಬಳಸಿ ಅಥವಾ ಕೋವಿನ್ ಪೋರ್ಟಲ್ನಲ್ಲಿ ಈಗಾಗಲೇ ಇರುವ ಪೋಷಕರ ಅಕೌಂಟಲ್ಲಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಶಾಲೆಯ ಮಖ್ಯೋಪಾಧ್ಯಾಯರ ಹಾಗೂ ಶಿಕ್ಷಕರ ಮೊಬೈಲ್ ಸಂಖ್ಯೆ ಮೂಲಕ ಲಸಿಕಾ ಶಿಬಿರದಲ್ಲಿಯೂ ನೋಂದಣಿ ಮಾಡಿಕೊಳ್ಳಬಹುದು. ಪ್ರತಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ತರಬೇತಿ ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಯವರನ್ನು ನೇಮಿಸಲಾಗಿದ್ದು, ಮಕ್ಕಳು ಅಥವಾ ಪೋಷಕರು ಲಸಿಕಾಕರಣದ ಬಗ್ಗೆ ಮಾಹಿತಿ ಪಡೆಯಲು ಶಿಕ್ಷಣ ಸಂಸ್ಥೆಯ ನೋಡಲ್ ಅಧಿಕಾರಿ, ಮುಖ್ಯಸ್ಥರು ಅಥವಾ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದು. ಕೋವಿಡ್ ಲಸಿಕೆ ಪಡೆಯುವವರಿಗೆ ಯಾವುದೇ ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ. ಲಸಿಕಾ ಶಿಬಿರ ನಡೆಯುವ ದಿನದಂದು, ಪೋಷಕರು ಲಸಿಕಾ ಶಿಬಿರ ಜರುಗುವ ಶಿಕ್ಷಣ ಸಂಸ್ಥೆಗಳಲ್ಲಿ ಉಪಸ್ಥಿತರಿದ್ದು, ಲಸಿಕಾ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾರಿಕೆರೆ ಕೊರಗ ಕಾಲೋನಿಗೆ ಗೃಹ ಸಚಿವರ ಭೇಟಿ

Thumbnail
Posted On: 01 Jan 2022, 07:59 PM

ಉಡುಪಿ : ಬ್ರಹ್ಮಾವರ ತಾಲೂಕು ಕೋಟತಟ್ಟುವಿನ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಘಟನೆಯ ಕುರಿತಂತೆ ,ಇಂದು ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಘಟನೆಯ ತನಿಖೆಯನ್ನು ಸಿ.ಓ.ಡಿ ಗೆ ವಹಿಸುವುದಾಗಿ ತಿಳಿಸಿದರು. ಇದೇ ವೇಳೆ ಲಾಠಿಚಾರ್ಜ್ ನಿಂದ ಗಾಯಗೊಂಡ 6 ಜನರಿಗೆ 2 ಲಕ್ಷ ರೂ ಗಳ ಪರಿಹಾರವನ್ನು ಘೋಷಣೆ ಮಾಡಿ, ಅದರಲ್ಲಿ ಮೊದಲ ಹಂತದ ಪರಿಹಾರವಾಗಿ 50000 ರೂ ಗಳ ಚೆಕ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ವಿಷ್ಣುವರ್ಧನ್, ಕೊರಗ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

ಮಲ್ಪೆ : ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಾಗಾರ

Thumbnail
Posted On: 01 Jan 2022, 10:32 AM

ಉಡುಪಿ : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘ ಮಲ್ಪೆ ಜಂಟಿಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂನಿಂದ ಆಗುವ ಅನಾಹುತಗಳ ಬಗ್ಗೆ ಕಾರ್ಯಾಗಾರವನ್ನು ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಸೈಬರ್ ಕ್ರೈಂನ ಎಸ್ ಪಿ ಮಂಜುನಾಥ್ ಪೂಜಾರಿ ಆಗಮಿಸಿ ಕಾರ್ಯಾಗಾರವನ್ನು ನೆರವೇರಿಸಿಕೊಟ್ಟರು. ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲ ಸಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಮ್ ಮಹೇಶ್ ಕುಮಾರ್, ಸುರೇಶ್ ಕರ್ಕೇರ, ಪ್ರಾಂಶುಪಾಲರಾದ ವರ್ಗಿಸ್, ಮುಖ್ಯೋಪಾಧ್ಯಾಯರಾದ ಸಂಧ್ಯಾ ಶಿವರಾಮ್, ಕಲ್ಮಾಡಿ ಲಕ್ಷ್ಮಣ್ ಮೈಂದನ್ ಹಾಗೂ ವಿದ್ಯಾರ್ಥಿ ನಾಯಕ ಭಾಗವಹಿಸಿದ್ದರು. ನಂತರ ಹಳೆ ವಿದ್ಯಾರ್ಥಿ ಎಮ್ ಮಹೇಶ್ ಕುಮಾರ್ ಕೊಡ ಮಾಡಿದ ಐ ಡಿ ಕಾರ್ಡ್ ನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಪೂಜಾರಿಯವರನ್ನು ಸನ್ಮಾನ ಮಾಡಲಾಯಿತು. ಹಾಗೂ ಶಾಲೆಗೆ ಸಹಕಾರ ನೀಡಿದ ಶಿವರಾಮ್ ಕಲ್ಮಾಡಿ ಹಾಗೂ ಎಮ್ ಮಹೇಶ್ ಕುಮಾರ್ ರವರನ್ನು ಪ್ರೌಢ ಶಾಲಾ ವತಿಯಿಂದ ಗೌರವಿಸಲಾಯಿತು. ಮುಖ್ಯೋಪಾಧ್ಯಾಯರಾದ ಸಂಧ್ಯಾರವರು ಸ್ವಾಗತಿಸಿ, ಸತೀಶ್ ಭಟ್ ನಿರೂಪಿಸಿ, ರಂಜನ್ ವಂದಿಸಿದರು.

ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀರ್ಮಾನ ; ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು : ಸಚಿವ ಶಂಕರ ಬ ಪಾಟೀಲ

Thumbnail
Posted On: 31 Dec 2021, 06:55 PM

ಉಡುಪಿ : ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಕುರಿತಂತೆ, ಎಥೆನಾಲ್ ಪಾಲಿಸಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಹೇಳಿದರು. ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ, ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಉಡುಪಿಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ, ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿ, ಕಾರ್ಖಾನೆ ಆರಂಭಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಅಶೋಕ್, ದ.ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಸೀತಾರಾಮ ಶೆಟ್ಟಿಗಾರರ ಕೈ ಮಗ್ಗ ಕೇಂದ್ರಕ್ಕೆ ರಾಜ್ಯದ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರ ಭೇಟಿ

Thumbnail
Posted On: 31 Dec 2021, 06:45 PM

ಉಡುಪಿ‌: ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಇಂದು ದೊಡ್ಡಣಗುಡ್ಡೆಯ ನೇಕಾರರ ಕಾಲೋನಿಯ, ಸೀತಾರಾಮ ಶೆಟ್ಟಿಗಾರ ಅವರ ಕೈ ಮಗ್ಗಕ್ಕೆ ಭೇಟಿ ನೀಡಿ, ಕೈ ಮಗ್ಗದ ಕಾರ್ಯ ವಿಧಾನವನ್ನು ವೀಕ್ಷಿಸಿದರು.

ಜಿಲ್ಲೆಯಲ್ಲಿ ಕೈಮಗ್ಗಗಳ ಆಧುನೀಕರಣ ಕುರಿತು ಪರಿಶೀಲನೆಗೆ ತಜ್ಞರ ತಂಡ : ಸಚಿವ ಶಂಕರ ಬ ಪಾಟೀಲ

Thumbnail
Posted On: 31 Dec 2021, 06:31 PM

ಉಡುಪಿ : ಜಿಲ್ಲೆಯ ಕೈಮಗ್ಗಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಜವಳಿ ಇಂಜಿನಿಯರ್ಗಳು ಮತ್ತು ಜವಳಿ ಪರಿಣಿತರ ತಂಡವನ್ನು ಜಿಲ್ಲೆಗೆ ಕಳುಹಿಸಿ, ಅವರಿಂದ ಪರಿಶೀಲನಾ ವರದಿ ಪಡೆದು, ಕೈಮಗ್ಗಗಳನ್ನು ತಾಂತ್ರಿಕವಾಗಿ ಸುಧಾರಿಸಿ, ನೇಕಾರರಿಗೆ ಆರ್ಥಿಕ ಅನುಕೂಲವಾಗುವಂತೆ ಮಾಡಲಾಗುವುದು ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ ಮಾತನಾಡಿದರು. ನೇಕಾರಿಕೆಯಲ್ಲಿ ನಷ್ಟ ಎಂಬ ಕಾರಣದಿಂದ ಯುವಜನತೆ ಈ ಉದ್ಯೋಗದಿಂದ ದೂರ ಉಳಿದಿದ್ದಾರೆ. ನೇಕಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಅದನ್ನು ಲಾಭದಾಯಕವನ್ನಾಗಿ ಮಾಡಲು ಜವಳಿ ಇಂಜಿನಿಯರ್ಗಳು ಮತ್ತು ಜವಳಿ ಪರಿಣಿತರ ತಂಡವನ್ನು ಜಿಲ್ಲೆಗೆ ಕಳುಹಿಸಿ, ಅವರ ಮೂಲಕ ವರದಿ ಪಡೆದು ಅದನ್ನು ಆಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಕಾರ್ಕಳದಲ್ಲಿ ಆರಂಭವಾಗಲಿರುವ ಜವಳಿ ಪಾರ್ಕ್ನಲ್ಲಿ ವೃತ್ತಿಪರ ನೇಕಾರರಿಗೆ ಕೌಶಲ್ಯ ತರಬೇತಿ ನೀಡಲು, ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದ ಸಚಿವರು, ವಿದ್ಯಾರ್ಥಿಗಳಿಗೂ ಸಹ ಈ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು. ಉಡುಪಿ ಕೈಮಗ್ಗದ ಸೀರೆಗಳಿಗೆ ರಾಜ್ಯ ಮತ್ತು ರಾಷ್ಟçದಲ್ಲಿ ಬೇಡಿಕೆ ಇದೆ ಎಂದರು. ರಾಜ್ಯದಲ್ಲಿ ನೇಕಾರರನ್ನು ಕೃಷಿಕರೆಂದು ಪರಿಗಣಿಸಿ ಅವರ ಅಭಿವೃದ್ಧಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಸಚಿವರು, ನೇಕಾರ ಸಮ್ಮಾನ ಯೋಜನೆಯಡಿ ಈಗಾಗಲೇ ಮೊತ್ತವನ್ನು ಪಾವತಿಸಲಾಗಿದ್ದು, 122 ಕೋಟಿ ರೂ. ಗಳ ಸಬ್ಸಿಡಿ ನೀಡಲಾಗಿದೆ. ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ, ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಬಡ್ಡಿ ಸಹಾಯಧನ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಶಾಸಕ ರಘುಪತಿ ಭಟ್ ಮಾತನಾಡಿ, ಕೈಮಗ್ಗಗಳನ್ನು ಪುನಃಶ್ಚೇತನಗೊಳಿಸಬೇಕು. ಆಧುನಿಕ ತಂತ್ರಜ್ಞಾನ ಅಳವಡಿಸುವುದರ ಮೂಲಕ ಯುವಜನತೆ ಇದರೆಡೆಗೆ ಆಕರ್ಷಿತವಾಗುವಂತೆ ಹಾಗೂ ಲಾಭದಾಯಕವಾಗುವಂತೆ ಮಾಡಬೇಕು. ಕೈಮಗ್ಗದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು ಎಂದರು. ಕೈಮಗ್ಗ ಉತ್ಪನ್ನಗಳಿಗೆ ವಿಧಿಸಲಾಗಿರುವ ಜಿ.ಎಸ್.ಟಿ ದರವನ್ನು 12% ರಿಂದ 5% ಗೆ ಇಳಿಕೆ ಮಾಡಬೇಕು. ನೇಕಾರರಿಗೆ ನೀಡುವ ಮಜೂರಿ ಮೇಲೆ 10% ಇನ್ಸೆಂಟಿವ್ ಹಾಗೂ ಪ್ರೋತ್ಸಾಹಧನ ನೀಡಬೇಕು ಎಂದು ನೇಕಾರರು ಸಚಿವರಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಅಶೋಕ್, ದ.ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್, ನೇಕಾರರ ಸಂಘದ ಅಧ್ಯಕ್ಷ ಅಬ್ನೆಸರ್ ಸತ್ಯಾರ್ಥಿ, ಶಿವಳ್ಳಿ ನೇಕಾರರ ಸಂಘದ ಶಶಿಕಾಂತ್ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ನೇಕಾರರ ಸಂಘದ ವ್ಯವಸ್ಥಾಪಕ ನಿರ್ದೇಶಕ ಸದಾನಂದ ಕಾಂಚನ್ ಸ್ವಾಗತಿಸಿ, ವಂದಿಸಿದರು.

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ವಿಶೇಷ ಭಜನಾ ಕಾರ್ಯಕ್ರಮ

Thumbnail
Posted On: 31 Dec 2021, 06:25 PM

ಶಿರ್ವ : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ಆವರಣದಲ್ಲಿರುವ ಭವ್ಯ ಏಕಶಿಲಾ ಪರಶುರಾಮ ವಿಗ್ರಹವನ್ನೊಳಗೊಂಡ ಪರಶುರಾಮೇಶ್ವರ ದೇವಸ್ಥಾನದಲ್ಲಿ ನಾಗೇಶ್ವರ ಭಜನಾ ಮಂಡಳಿ, ಪಡುಬಿದ್ರಿ - ಮೂಲ್ಕಿ ವಲಯ ಇವರಿಂದ ಡಿಸೆಂಬರ್ 31 ರಂದು ವಿಶೇಷ ಭಜನಾ ಕಾರ್ಯಕ್ರಮವು ಜರುಗಿತು. ಭಜನಾ ಮಂಡಳಿಯ ನೇತೃತ್ವವನ್ನು ಶ್ರೀ ಚಂದ್ರಹಾಸ್ ವಹಿಸಿದ್ದರು. ಎಳೆಯ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿ ಸಂಸ್ಕಾರವಂತರನ್ನಾಗಿ ಮಾಡುವ ಕೆಲಸ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ತರುವಾಯ ಮಾತನಾಡಿದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ ಮಾತನಾಡಿ, ಅಕ್ಷರ ಕಲಿಸುವ ವಿದ್ಯಾಲಯ ಹಾಗೂ ದೇವರ ಸಾನಿಧ್ಯವಿರುವ ದೇವಾಲಯ - ಇವೆರಡೂ ಒಟ್ಟಿಗೆ ಇರುವ ವಿಶೇಷ ಕ್ಷೇತ್ರ ಈ ಪರಶುರಾಮೇಶ್ವರ ಕ್ಷೇತ್ರ ಎಂದು ಬಣ್ಣಿಸಿದರು. ಭಜನೆಗಳು ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿ ಸೌಹಾರ್ದತೆ, ಸಹಬಾಳ್ವೆ ಮತ್ತು ಉದಾರತೆಯ ಸದ್ಗುಣಗಳನ್ನು ಬೆಳೆಸುತ್ತವೆ ಎಂದರು. ಪ್ರಿನ್ಸಿಪಾಲ್ ಗುರುದತ್ತ ಸೋಮಯಾಜಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.