Updated News From Kaup
ಅವರಾಲು : 11ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Posted On: 08 Jan 2022, 12:44 PM
ಪಡುಬಿದ್ರಿ : ಫಲಿಮಾರು ವ್ಯಾಪ್ತಿಯ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅವರಾಲು, ಅಡ್ಕ ಇವರ ವತಿಯಿಂದ 11ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜನವರಿ 14, ಶುಕ್ರವಾರ ಜರಗಲಿದೆ. ಅಂದು ಬೆಳಿಗ್ಗೆ 6.30ರಿಂದ ಸ್ಥಳ ಶುದ್ಧಿ, ಕಲಶ ಪ್ರತಿಷ್ಠೆ ಸಹಸ್ರ ನಾಮಾರ್ಚನೆ, ಗಣಹೋಮ, ಬೆಳಿಗ್ಗೆ 9ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಧ್ಯಾಹ್ನ 12.30 ರಿಂದ ದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಜಮಾಡಿ : ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವಕ್ಕೆ ಶಾಸಕರ ಭೇಟಿ
Posted On: 08 Jan 2022, 11:12 AM
ಹೆಜಮಾಡಿ : ಇಲ್ಲಿನ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವಕ್ಕೆ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಗರಡಿಯ ಆಡಳಿತ ಮಂಡಳಿಯ ಪ್ರಮುಖರು, ಊರ - ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳ ಮೌನ - ತುಳುನಾಡಿನ ದೈವಾರಾಧನೆಯ ಆಚರಣೆ, ನಂಬಿಕೆಯನ್ನು ಮುಗಿಸುವ ಹುನ್ನಾರವೇ ?
Posted On: 07 Jan 2022, 10:41 PM
ಉಡುಪಿ : ಸರಕಾರದ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಆದೇಶದಿಂದ ದೈವಾರಾಧಕರಿಗೆ ಸಮಸ್ಯೆಯಾಗಿದ್ದು ಇದನ್ನು ಕೂಡಲೇ ಪರಿಹರಿಸುವಂತೆ ಸರಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ - ಮಂಗಳೂರು ಇವರ ವತಿಯಿಂದ ಪಾಂಗಾಳ ಗುಡ್ಡೆಗರಡಿಯಲ್ಲಿ ಸಮಾಲೋಚನಾ ಸಭೆ ಜರಗಿತು. ಈ ಸಂದರ್ಭ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಂಗಾಳ ಗುಡ್ಡೆ ಗರಡಿಮನೆ ಸುಧಾಕರ ಡಿ. ಅಮೀನ್ ದೈವಾರಾಧನೆ ಕ್ಷೇತ್ರವನ್ನು ಅವಲಂಭಿಸಿರುವ ಎಲ್ಲಾ ವರ್ಗದವರೂ ಕೊರೊನಾ ಕಾರಣದಿಂದಾಗಿ ಎರಡು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ ಪರಿಸ್ಥಿತಿ ಇದೀಗ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ದೈವಾರಾಧನೆಯ ಎಲ್ಲಾ ಆಚರಣೆಗಳೂ ಹಿಂದಿನಂತೆಯೇ ನಡೆಯುವಂತಾಗಲು ಅವಕಾಶ ಮಾಡಿ ಕೊಡುವಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಬೆಂಬಲ ಪಡೆದು, ಅಧಿಕಾರಿ ವರ್ಗ ಮತ್ತು ಸರಕಾರಕ್ಕೆ ನಮ್ಮ ಬೇಡಿಕೆಗಳ ಬಗ್ಗೆ ಮನವಿ ನೀಡಬೇಕಿದೆ ಎಂದರು. ಅಖಿಲ ಭಾರತ ದೈವಾರಾಧಕರ ಒಕ್ಕೂಟದ ಉಪಾಧ್ಯಕ್ಷ ಯೋಗಿಶ್ ಪೂಜಾರಿ, ಕುಕ್ಕೆಹಳ್ಳಿ ಕೊರಗಜ್ಜ ದೇವಸ್ಥಾನದ ಮುಖ್ಯಸ್ಥ ಕೃಷ್ಣ ಕುಲಾಲ್, ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ, ಬೈರಂಪಳ್ಳಿ ಭೂತರಾಜ ದೇವಸ್ಥಾನದ ಮುಖ್ಯಸ್ಥ ಪ್ರವೀಣ್ ಶೆಟ್ಟಿ, ಹಿರಿಯಡಕ ಕಲ್ಕುಡ ದೈವಸ್ಥಾನದ ಮುಖ್ಯಸ್ಥ ಸುಧಾಕರ ಶೆಟ್ಟಿ ತಂಗಣ, ಹೆಬ್ರಿ ಘಟಕದ ಅಧ್ಯಕ್ಷ ಸುಕುಮಾರ್ ಪೂಜಾರಿ, ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ, ದೊಡ್ಡಣ್ಣಗಯಡ್ಡೆ ಪಂಚ ಜುಮಾದಿ ದೇವಸ್ಥಾನದ ಗುರಿಕಾರ ನಿತಿನ್ ಪೂಜಾರಿ, ಪಾಣಾರ ಸಂಘದ ಜಿಲ್ಲಾಧ್ಯಕ್ಷ ಪಾಂಡು ಪಾಣಾರ, ಪಂಬದ ಸಮುದಾಯದ ಮುಖಂಡ ಮಾಧವ ಪಂಬದ, ನಲಿಕೆ ಸಮುದಾಯದ ಮುಖಂಡ ನಾರಾಯಣ ಪಾಣಾರ, ದೇವಾಡಿಗ ಸಮುದಾಯದ ಮುಖಂಡ ಉದಯ ಶೇರಿಗಾರ್ ಅಲೆವೂರು, ಪರವ ಸನುದಾಯದ ಮುಖಂಡ ನರಸಿಂಹ ಪರವ ಮೊದಲಾದವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ ತಾಲೂಕಿನ ವಿವಿಧೆಡೆಗಳ ದೈವಾರಾಧಕ ಸಂಘಟನೆಯ ಪದಾಧಿಕಾರಿಗಳು, ದೈವಾರಾಧಕರು, ಸಮುದಾಯಗಳ ಮುಖಂಡರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ತುಳುನಾಡ ದೈವಾರಾಧಕರ ಸಂಘದ ಜಿಲ್ಲಾಧ್ಯಕ್ಷ ವಿನೋದ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದು, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವೀಕೆಂಡ್ ಕಫ್ಯೂ೯: ಬಂಟಕಲ್ಲು ಅಯ್ಯಪ್ಪ ಶಿಬಿರದಲ್ಲಿ ಜರಗಲಿದ್ದ ಮಹಾಪೂಜೆ, ಅನ್ನಸಂತರ್ಪಣೆ, ಶನಿಕಥಾ ಪಾರಾಯಣವು ಸೋಮವಾರಕ್ಕೆ ಮುಂದೂಡಿಕೆ
Posted On: 07 Jan 2022, 08:17 PM
ಕಾಪು : ಸಾರ್ವಜನಿಕ ಗಣೇಶೋತ್ಸವ ವೇದಿಕೆ, ಬಂಟಕಲ್ಲು ಇಲ್ಲಿನ ಅಯ್ಯಪ್ಪ ಶಿಬಿರದಲ್ಲಿ ಜನವರಿ 6 ಮತ್ತು 7ರಂದು ನಡೆಯುವ ಕಾರ್ಯಕ್ರಮಗಳು ಎಂದಿನಂತೆ ಜರಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕಫ್ಯೂ೯ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿ, ಶನಿವಾರದ ಜರಗಲಿದ್ದ ಅಯ್ಯಪ್ಪಸ್ವಾಮಿ ಮಹಾಪೂಜೆ, ಅನ್ನಸಂತರ್ಪಣೆ ಮತ್ತು ಶನಿಕಥಾ ಪಾರಾಯಣವು ಜನವರಿ 10, ಸೋಮವಾರ ಮಧ್ಯಾಹ್ನ ನಡೆಯಲಿದೆ. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ, ಅಯ್ಯಪ್ಪ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ : ಕೇಂದ್ರ ಸರಕಾರದ ಆದೇಶ, ಜನವರಿ 11ರಿಂದ ಅನ್ವಯ
Posted On: 07 Jan 2022, 06:55 PM
ಬೆಂಗಳೂರು : ದೇಶದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಅನೇಕ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಕೇಂದ್ರ ಸರಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಈ ಕುರಿತುಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ದೃಢಪಟ್ಟರೂ 7 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ. 7 ದಿನಗಳ ಹೋಂ ಕ್ವಾರಂಟೈನ್ ಮುಕ್ತಾಯಗೊಂಡ ಬಳಿಕ ಮತ್ತೆ ಆರ್ ಟಿ ಪಿಸಿಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಸಿಕ್ಕ ವರದಿಯನ್ನುಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡುವಂತೆ ತಿಳಿಸಿದೆ. ಅದನ್ನು ಆಯಾ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ಮಾಡುತ್ತವೆ. ಒಂದು ವೇಳೆ ಪಾಸಿಟಿವ್ ಬಂದರೆ ಅವರ ಮಾದರಿಗಳನ್ನು ಇಂಡಿಯನ್ ಸಾರ್ಸ್-ಕೋವಿ-2 ಜಿನೊಮಿಕ್ಸ್ ಕನ್ಸಾರಿಟಿಂ(INSACOG) ಪ್ರಯೋಗಾಲಯದ ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಬಳಿಕ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಆನ್ಲೈನ್ನಲ್ಲಿ ಏರ್ ಸುವಿಧಾ ಪೋರ್ಟಲ್ನಲ್ಲಿ ಸ್ವಯಂಘೋಷಣೆ ನಮೂನೆ ಮತ್ತು ನೆಗೆಟಿವ್ ಆರ್ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು. ವಿಮಾನ ನಿಲ್ದಾಣದಲ್ಲಿಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಾರೆ. ಈ ವೇಳೆ ರೋಗಲಕ್ಷಣ ಕಂಡುಬರುವ ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.ಈ ವೇಳೆ ಪಾಸಿಟಿವ್ ಬಂದರೆ ಅಂತಹವರ ಸಂಪರ್ಕಕ್ಕೆ ಬಂದಿದ್ದವರನ್ನು ಗುರುತಿಸಲಾಗುತ್ತದೆ. ಈ ನಿಯಮ 2022ರ ಜವನರಿ 11 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯವಾಗಲಿದೆ.
ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ 181 ಸಂಪರ್ಕಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 07 Jan 2022, 06:37 PM
ಉಡುಪಿ : ವಿವಿಧ ಕಾರಣಗಳಿಂದ ನೊಂದ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ 24x7 ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181 ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ತುರ್ತು ಸಂದರ್ಭಗಳಲ್ಲಿ 181 ಉಚಿತ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ ಎಂದರು. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದ್ದು, ಇದುವರೆಗೆ ಸಮಿತಿ ರಚಿಸದ ಇಲಾಖೆಗಳು ಮತ್ತು ಸಂಸ್ಥೆಗಳ ವರದಿ ಪಡೆದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸಮಿತಿ ರಚಿಸಿರುವ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನಿಗಧಿತವಾಗಿ ಸಮಸ್ಯೆಗಳನ್ನು ಆಲಿಸಿರುವ ಕುರಿತ ವರದಿ ಪಡೆಯುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶಾಲೆ ಬಿಟ್ಟ ಮಕ್ಕಳು ಬಾಲ ಕಾರ್ಮಿಕರು ಮತ್ತು ಬಾಲ್ಯ ವಿವಾಹಗಳಿಗೆ ಒಳಪಡುವ ಸಾಧ್ಯತೆಗಳಿದ್ದು, ಇಂತಹ ಮಕ್ಕಳ ಕುರಿತು ಸ್ಥಳೀಯವಾಗಿ ಅಂಗನವಾಡಿ ಮೇಲ್ವಿಚಾರಕರು ಮತ್ತು ಶಿಕ್ಷಣ ಇಲಾಖೆಯ ಸಿ.ಆರ್.ಪಿ ಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಆಯೋಜಿಸಿ ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕಾಣೆಯಾದ ಮಹಿಳೆ ಮತ್ತು ಮಕ್ಕಳ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯುವಂತೆ ಹಾಗೂ ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಇರುವ ಕಾನೂನುಗಳು ಮತ್ತು ಅವರ ಹಕ್ಕುಗಳ ಕುರಿತಂತೆ ಜಿಲ್ಲೆಯಾದ್ಯಂತ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶಗಳು, ಪ್ರವಾಸಿ ತಾಣಗಳು ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ದಾಖಲಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವ್ಯಾಪಕ ಅರಿವು ಕಾರ್ಯಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿನ ಯುವಜನತೆ ಈ ಪಿಡುಗಿಗೆ ಒಳಗಾಗದಂತೆ ಎಚ್ಚವಹಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿನ ರಾಜ್ಯ ಮಹಿಳಾ ಕೇಂದ್ರದಲ್ಲಿನ ಮಹಿಳೆಯರಿಗೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ, ನಿಲಯದಲ್ಲಿ ಅವರಿಗೆ ಉದ್ಯೋಗ ನೀಡಿ ಅವರು ಆರ್ಥಿಕವಾಗಿ ಗಳಿಸುವಂತೆ ಹಾಗೂ ಇಲ್ಲಿಂದ ಹೊರ ಹೋದ ನಂತರ ಸ್ವತಂತ್ರವಾಗಿ ಉದ್ಯೋಗ ಚಟುವಟಿಕೆ ಕೈಗೊಳ್ಳುವಂತೆ ತರಬೇತಿ ನೀಡಿ, ನಿಲಯದಲ್ಲಿ ಮಹಿಳೆಯರ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
Posted On: 07 Jan 2022, 05:08 PM
ಮಂಗಳೂರು : ಯುವಕನೋರ್ವ ನೆರೆಮನೆಯ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉರ್ವ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 5ರಂದು ನಿತೇಶ್ ರಿತಿನ್ @ ನಿತಿನ್ (19) ಎಂಬಾತ ಮನೆಗೆ ನೆರೆಮನೆಯ ನಗರದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯು ಟಿವಿ ನೋಡಲು ಹೋದಾಗ ಲೈಂಗಿಕ ಕಿರುಕುಳ ನೀಡಿದ್ದು, ಹೆದರಿದ ಮಗು ಅಲ್ಲಿಂದ ಓಡಿ ತನ್ನ ಮನೆಯೊಳಗಡೆಗೆ ಹೋಗಿದ್ದು, ಬಳಿಕ ಆರೋಪಿತನು ಬಾಲಕಿಯ ಮನೆಯೊಳಗೆ ಅಕ್ರಮ ಪ್ರವೇಶಿಸಿ ಮಗುವಿಗೆ ನಡೆದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುತ್ತೆನೆ ಎಂಬುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಉರ್ವ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿತನನ್ನು ದಸ್ತಗಿರಿ ಮಾಡಲಾಗಿದೆ.
ಕಳತ್ತೂರು ಪುಂಚಲಕಾಡು ಆಟೋ ರಿಕ್ಷಾ ನಿಲ್ದಾಣಕ್ಕೆ ನಾಮಫಲಕ ಅಳವಡಿಕೆ
Posted On: 04 Jan 2022, 02:02 PM
ಕಾಪು: ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಇಲ್ಲಿಯ ರಿಕ್ಷಾ ನಿಲ್ದಾಣಕ್ಕೆ ಹೊಸ ನಾಮ ಫಲಕ ಅಳವಡಿಸಲಾಯಿತು. ಈ ಸಂದರ್ಭ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 4 ದಿನದಲ್ಲಿ 60,000 ಮಕ್ಕಳಿಗೆ ಕೋವಿಡ್ ಲಸಿಕೆ : ಶಾಸಕ ರಘುಪತಿ ಭಟ್
Posted On: 03 Jan 2022, 06:16 PM
ಉಡುಪಿ : ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ವರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು 96.3% ಹಾಗೂ ಎರಡು ಡೋಸ್ಗಳನ್ನು 84.3% ನೀಡಿದ್ದು, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಲಸಿಕೆ ನೀಡುವ ಕಾರ್ಯವನ್ನು ಪ್ರಸ್ತುತ ಆರಂಭಿಸಿದ್ದು, ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಇದು ಅತ್ಯಂತ ಸುರಕ್ಷಿತವಾಗಿದೆ. ಅರ್ಹ ಎಲ್ಲಾ ಮಕ್ಕಳು ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಪೋಷಕರು ಸಹ ಈ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಕೂಡ ಲಸಿಕೆ ಬರಲಿದೆ ಎಂದು ಶಾಸಕರು ಹೇಳಿದರು. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಿದ್ದಲ್ಲಿ ಮಾತ್ರ ಇದರ ನಿಯಂತ್ರಣ ಸಾಧ್ಯವಾಗಲಿದೆ. ಪರ್ಯಾಯ ಮಹೋತ್ಸವ ಕಾರ್ಯಕ್ರಮದಲ್ಲಿ ಸಹ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದವರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ರಘುಪತಿ ಭಟ್ ಹೇಳಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಕ್ಕಳು ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ನಿಂದ ಸಂಪೂರ್ಣ ಸುರಕ್ಷೆ ಪಡೆಯಲಿದ್ದು, ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಎಲ್ಲಡೆ ಪಾಲಿಸಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಮತ್ತು ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನಸೂಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ, ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ವಂದಿಸಿದರು.
ಆಸಕ್ತಿಯುತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಿರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 03 Jan 2022, 06:12 PM
ಉಡುಪಿ : ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮದೇ ಆದ ವಿಶಿಷ್ಟ ಮತ್ತು ವೈಶಿಷ್ಠಪೂರ್ಣ ವ್ಯಕ್ತಿತ್ವ ಹಾಗೂ ಆಸಕ್ತಿಯನ್ನು ಹೊಂದಿದ್ದು, ತಮಗೆ ಸರಿ ಹೊಂದುವ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವುದರಿಂದ ಆ ಉದ್ಯೋಗದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾದ್ಯವಾಗಲಿದೆ. ಕೋವಿಡ್ನಿಂದ ಅನೇಕ ಮಂದಿ ಉದ್ಯೋಗ ವಂಚಿತರಾಗಿದ್ದು, ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪೆನಿಗಳಲ್ಲಿ ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಯಿರುವ ಕ್ಷೇತ್ರದ ಉದ್ಯೋಗಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಉದ್ಯೋಗ ಮೇಳದ ಕುರಿತ ಅತೀ ಕಡಿಮೆ ಅವಧಿಯಲ್ಲಿ 1558 ಮಂದಿ ಉದ್ಯೋಗಾಕಾಂಕ್ಷಿಗಳು ನೊಂದಾಯಿಸಿಕೊಂಡಿದ್ದು, ಇಂದಿನ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ವಿವಿದ ಕಂಪನಿಗಳಲ್ಲಿ ಸುಮಾರು 2000 ದಷ್ಟು ಉದ್ಯೋಗ ಲಭ್ಯತೆಗಳಿದ್ದು, ಅಭ್ಯರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಪ್ರತಿಭೆ ತೋರುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್ನ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ವಿವಿಧ ತರಬೇತಿ ಕಾರ್ಯಕ್ರಮಗಳು, ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು, ಉದ್ಯಮಿಯಾಗು ಎಂಬ ಯೋಜನೆಯಡಿ, ಮೊಬೈಲ್ ಕ್ಯಾಂಟೀನ್, ಚಿಕ್ಕಿ ಘಟಕ ಸ್ಥಾಪನೆಗೆ ನೆರವು ನೀಡಲಾಗಿದ್ದು, ಉದ್ಯೋಗ ಪಡೆಯುವುದರಿಂದ ವ್ಯಕ್ತಿಯ ಆದಾಯ ಮತ್ತು ಜಿಲ್ಲೆಯ ತಲಾ ಆದಾಯ ಹೆಚ್ಚಳವಾಗಲಿದೆ ಎಂದರು. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಗದೀಶ್ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ನ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿದರು, ನವ್ಯಾ ವಂದಿಸಿದರು. ಪ್ರಭಾಕರ ಆಚಾರ್ ನಿರೂಪಿಸಿದರು. ಉದ್ಯೋಗಮೇಳದಲ್ಲಿ ಜಿಲ್ಲೆಯ ಮತ್ತು ರಾಜ್ಯದ ವಿವಿಧ 20 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.
