Updated News From Kaup
ಮಹನೀಯರ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತ: ಜಿಲ್ಲಾಧಿಕಾರಿ ಕೂರ್ಮಾರಾವ್ .ಎಂ
Posted On: 21 Jan 2022, 09:37 PM
ಉಡುಪಿ : ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಮಹನೀಯ ವ್ಯಕ್ತಿಗಳಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಅವರು ನೀಡಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಹಾಗೂ ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರು ಜಾತಿ ಧರ್ಮ ಬೇಧವಿಲ್ಲದೇ ಮಾಡಿರುವ ತ್ರಿವಿಧ ದಾಸೋಹ ಸೇವೆಯು ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಹಾಗೂ ದಾಸೋಹ ದಿನ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಮಹನೀಯ ವ್ಯಕ್ತಿಗಳು ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಹಾಗೂ ತಮ್ಮ ದೈನಂದಿನ ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಅದರಂತೆ ನಡೆಯಬೇಕು. ಇಂತಹ ವ್ಯಕ್ತಿಗಳ ಜೀವನ ಚರಿತ್ರೆಯ ಬಗ್ಗೆ ಅರಿಯಬೇಕು ಎಂದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣನಾಥ ಎಕ್ಕಾರು, ಪ್ರಜಾಪ್ರಭುತ್ವದ ಮೂಲ ಉದ್ದೇಶವಾದ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವವನ್ನು ಶರಣರು ಮತ್ತು ಅನೇಕ ಮಹನೀಯರು 800 ವರ್ಷಕ್ಕೂ ಮೊದಲೇ ತಿಳಿಸಿದ್ದರು. ವಿಶ್ವ ಮಾನವ ತತ್ವದ ಪ್ರತಿಪಾದನೆ ಮಾಡಿದ್ದರು ಎಂದರು. ಅಂಬಿಗರ ಚೌಡಯ್ಯ ಅವರು, ಸಮಾಜದಲ್ಲಿನ ಅಸಮಾನತೆ ಬಗ್ಗೆ ನೇರ, ದಿಟ್ಟವಾಗಿ ನುಡಿದಿದ್ದು, ಅವರ ಸಂದೇಶಗಳಲ್ಲಿ ವಾಸ್ತವಿಕತೆ, ವೈಚಾರಿಕತೆ, ಜ್ಞಾನ ಎಲ್ಲವೂ ಇದೆ. ಅಂತರಂಗ ಶುದ್ಧತೆಯೇ ನಿಜವಾದ ಮಾನವ ಧರ್ಮ ಎಂದಿದ್ದರು. ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರು, ಸಮಾಜವೇವೆಯ ಸಿದ್ಧಾಂತವನ್ನು ಕಾಯಕವನ್ನಾಗಿ ಮಾಡಿಕೊಂಡು, ಜನಸಾಮಾನ್ಯರಿಗಾಗಿ ನಾಡಿನಾದ್ಯಂತ ಹಲವು ಕೆರೆ, ಬಾವಿಗಳನ್ನು ನಿರ್ಮಿಸಿ, ಶರಣ ಪರಂಪರೆಯಲ್ಲಿ ಮಾನವ ಸೇವೆಯ ಮೂಲಕ ಸಮಾಜಸೇವೆಯನ್ನು ಪರಿಚಯಿಸಿದ್ದರು ಎಂದರು. ಮಹಾಯೋಗಿ ವೇಮನ ಅವರು ಕವಿ, ಯೋಗಿ, ತತ್ವಜ್ಞಾನಿ, ದಾರ್ಶನಿಕರಾಗಿದ್ದು, ಸುಸಂಸ್ಕೃತ ಬದುಕಿನ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ ಎಂದರು. ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಕುರಿತು ಮಾತನಾಡಿದ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಲಕ್ಷಾಂತರ ಮಂದಿಗೆ ಉಚಿತ ಶಿಕ್ಷಣ, ವಸತಿ, ಆಹಾರ ಒದಗಿಸುವ ಮೂಲಕ ಶಿವಕುಮಾರ ಸ್ವಾಮೀಜಿ ಅವರು ನಾಡಿನ ಕೀರ್ತಿಯನ್ನು ವಿಶ್ವದಾದ್ಯಂತ ಹೆಚ್ಚಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು. ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು 60 ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಸಂಭ್ರಮ
Posted On: 21 Jan 2022, 09:28 PM
ಉಡುಪಿ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು 60 ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಸಂಭ್ರಮಕ್ಕೆ ವಿಘ್ನವಿನಾಶಕ ವಿಘ್ನೇಶ್ವರನಿಗೆ ಗಣಹೋಮ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 4 ದಿನಗಳ ಕಾಲ ನಗರ ಭಜನೆ ನಡೆಯಲಿದೆ. 25 ನೇ ತಾರೀಕಿನಂದು ಸಂಜೆ 4ಗಂಟೆಗೆ ಪರಮಪೂಜ್ಯ ಕೇಮಾರು ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ , ಖ್ಯಾತ ವಿಮರ್ಶಕರೂ, ವಾಗ್ಮಿಯೂ ಆದ ಶ್ರೀಕಾಂತ ಶೆಟ್ಟಿ ಇವರಿಂದ ಭಜನಾ ಸಂಸ್ಕಾರ ಕುರಿತಂತೆ ವಿಶ್ಲೇಷಣೆ, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದರೊಂದಿಗೆ 60 ಗಂಟೆಗಳ ನಿರಂತರ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 26 ನೇ ತಾರೀಕಿನಂದು ಬೆಳಿಗ್ಗೆ ಸತ್ಯನಾರಾಯಣ ಪೂಜೆ. 27 ನೇ ತಾರೀಕಿನಂದು ಬೆಳಿಗ್ಗೆ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ ಎಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು ಇದರ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ
Posted On: 21 Jan 2022, 09:14 PM
ಮಂಗಳೂರು : ಕುದ್ರೋಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಸುಮಾರು 5 ತಿಂಗಳಿನಿಂದ ಸೂಫಿಯಾ ಬೇಗಂ ಮತ್ತು ಆಕೆಯ ಗಂಡ ವಾಸ್ತವ್ಯ ಮಾಡಿಕೊಂಡಿರುತ್ತಾರೆ. ಜನವರಿ 21ರಂದು ಸೂಫಿಯಾ ಬೇಗಂ ಮಲಗಿದ್ದ ಕೋಣೆಯ ಕಿಟಕಿಯ ಕಬ್ಬಿಣದ ಸರಳಿಗೆ ಚೂಡಿದಾರದ ಶಾಲನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಆಕೆಯ ಗಂಡ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸೂಫಿಯಾ ಬೇಗಂ ಮನೆಯಲ್ಲೇ ಇರುವುದಾಗಿದೆ. ಜನವರಿ 20ರಂದು ರಾತ್ರಿ ಎಂದಿನಂತೆ ಗಂಡ, ಹೆಂಡತಿ ಊಟ ಮಾಡಿ ಮಲಗಿದ್ದು, 21 ರ ಮುಂಜಾನೆ 4ಗಂಟೆಗೆ ಇಬ್ಬರೂ ಎದ್ದು ಅಡುಗೆ ಕೆಲಸ ಮಾಡಿ ಮಲಗಿರುತ್ತಾರೆ. ಬೆಳಿಗ್ಗೆ 07.45 ಗಂಟೆಗೆ ಆಕೆಯ ಗಂಡ ಎಚ್ಚರಗೊಂಡು ನೋಡಿದಾಗ ಹೆಂಡತಿ ಸೂಫಿಯಾ ಬೇಂಗಂ ಮಲಗಿದ್ದ ಕೋಣೆಯ ಕಿಟಕಿಯ ಕಬ್ಬಿಣದ ಸರಳಿಗೆ ಚೂಡಿದಾರದ ಶಾಲನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಅವರನ್ನು ಕರೆದಾಗ ಸ್ಪಂದಿಸದೇ ಇದ್ದ ಕಾರಣ ಕೂಡಲೇ ಆಕೆಯ ಕುತ್ತಿಗೆಗೆ ಕಟ್ಟಿದ್ದ ಶಾಲನ್ನು ಬಿಚ್ಚಿ ನೆಲದಲ್ಲಿ ಮಲಗಿಸಿರುತ್ತಾರೆ. ಬಳಿಕ ಸ್ನೇಹಿತರಿಗೆ ಹಾಗೂ ನೆರೆಹೊರೆಯವರಿಗೆ ತಿಳಿಸಿದ್ದು ಅವರು ಬಂದು ನೋಡಿ ಪರೀಕ್ಷಿಸಿದಾಗ ಸೂಫಿಯಾ ಬೇಗಂ ರವರ ದೇಹವು ತಣ್ಣಗಾಗಿದ್ದು, ಮೃತಪಟ್ಟಂತೆ ಕಂಡುಬಂದಿರುತ್ತದೆ. ಮೃತ ಸೂಫಿಯಾ ಬೇಗಂ ಮೃತ ಶರೀರದ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ದೂರುದಾರ ವಿನಂತಿಸಿದ್ದಾರೆ.
ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿಗಳ ಸೆರೆ
Posted On: 21 Jan 2022, 08:28 PM
ಮಂಗಳೂರು : ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತರನ್ನು ಕರೆಯಿಸಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿಗಳು ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆಯನ್ನು ಮಾಡಿಕೊಡಬೇಕೆಂದು ಪುರೋಹಿತರನ್ನು ಮನೆಗೆ ಕರೆಯಿಸಿಕೊಂಡು ಮನೆಯಲ್ಲಿರುವ ಸಮಯ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವೀಡಿಯೋವನ್ನು ತೆಗೆದು ನಂತರ ಈ ವೀಡಿಯೋ ಹಾಗೂ ಫೋಟೋವನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಲವು ಬಾರಿ ಹೆದರಿಸಿ, ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ, ಹಣದ ಬೇಡಿಕೆ ಇಟ್ಟು ರೂ 15 ಲಕ್ಷ ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಆರೋಪಿಗಳು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ಭವ್ಯ (30)- ಮೇನ್ನ, ನೀಡತಾ, ಮೈಲಾಪುರ ಗ್ರಾಮ, ಶನಿವಾರ ಸಂತೆ, ಸೋಮವಾರಪೇಟೆ, ಕೊಡಗು ಜಿಲ್ಲೆ. ಪ್ರಸ್ತುತ ವಾಸ ಫ್ಲಾಟ್ ನಂಬ್ರ: 104, ಮೇರಿಹಿಲ್ ವ್ಯೂ ಆಪಾರ್ಟ್ ಮೆಂಟ್, ಮೇರಿಹಿಲ್ ಮಂಗಳೂರು. ವೃತ್ತಿ ಮನೆ ವಾರ್ತೆ. ಕುಮಾರ್ @ ರಾಜು (35)-ಅರಕಲಗೂಡು ತಾಲೂಕು, ಹಾಸನ ಜಿಲ್ಲೆ ಪ್ರಸ್ತುತ ಫ್ಲಾಟ್ ನಂಬ್ರ: 104, ಮೇರಿಹಿಲ್ ವ್ಯೂ ಆಪಾರ್ಟ್ ಮೆಂಟ್, ಮೇರಿಹಿಲ್ ಮಂಗಳೂರು. ವೃತ್ತಿ ಕಾರು ಚಾಲಕ. ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿಗಳ ವಶದಿಂದ ರೂ 37,000/- ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000/-ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್ ನು ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ದೂರುದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿರುವುದಾಗಿದೆ. ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ದೂರುದಾರರ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿರುವುದಲ್ಲದೇ, ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿರುತ್ತಾರೆ. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ. ಆರೋಪಿಗಳ ಪೈಕಿ ಭವ್ಯಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆ
Posted On: 19 Jan 2022, 05:09 PM
ಮಂಗಳೂರು : ಇಲ್ಲಿನ ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡೆ, ಹೈಸ್ಕೂಲು ಬಳಿ ನಿವಾಸಿ ಸಿ.ಎ.ಅಬ್ಬಾಸ್ ಪುತ್ರನಾದ ಆರೋಪಿ ಝಕಾರಿಯಾ ಎಂಬಾತನನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸು ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಇವರ ಮಾರ್ಗದರ್ಶನದಂತೆ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಓಂದಾಸ್, ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಇವರೊಂದಿಗೆ ಜನವರಿ 18ರಂದು ವಶಕ್ಕೆ ಪಡೆದಿರುತ್ತಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೋಲಿಸರಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ 25ಲಕ್ಷ ರೂಪಾಯಿ ದೇಣಿಗೆ
Posted On: 19 Jan 2022, 04:38 PM
ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಪ್ರಥಮ ಹಂತದಲ್ಲಿ 10 ಲಕ್ಷ, ದ್ವಿತೀಯ ಹಂತದಲ್ಲಿ 15 ಲಕ್ಷ ಒಟ್ಟು 25ಲಕ್ಷ ಮಂಜೂರು ಮಾಡಿದ್ದಾರೆ. ಮಂಜೂರಾದ ಸಹಾಯಧನದ ಚೆಕ್ ನ್ನು ಧರ್ಮಾಧಿಕಾರಿಗಳ ಸಂಬಂಧಿ, ಪಡುಬಿದ್ರಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ರತ್ನಾಕರ ರಾಜ್ ಬಲ್ಲಾಳ್ ರವರ ಉಪಸ್ಥಿತಿಯಲ್ಲಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ್ ಸಾಲ್ಯಾನ್, ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕರಾದ ಗಣೇಶ್ ಬಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಉದ್ಯಮಿ ದಯಾನಂದ ಹೆಜಮಾಡಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧಾಕರ್ ಕರ್ಕೆರ, ಉಡುಪಿ ತಾಲೂಕಿನ ಯೋಜನಾಧಿಕಾರಿಯವರಾದ ರಾಮ ಎಂ, ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಗಣ್ಯರ ಮತ್ತು ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.
ಕೆ.ಎಲ್.ಕುಂಡಂತಾಯರ 'ಧರ್ಮ ಜಾಗರ' ಬಿಡುಗಡೆ
Posted On: 18 Jan 2022, 10:43 AM
ಕಿನ್ನಿಗೋಳಿ : ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್.ನಂದೀಶ್ ಹಂಚೆ ಅವರು ಕೆ.ಎಲ್.ಕುಂಡಂತಾಯರ 'ಧರ್ಮ ಜಾಗರ' ಕೃತಿಯನ್ನು ಬಿಡುಗಡೆಗೊಳಿಸಿದರು. ಕಿನ್ನಿಗೋಳಿಯ 'ಅನಂತಪ್ರಕಾಶ ಪುಸ್ತಕಮನೆ' ಆಯೋಜಿಸಿದ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ' ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ'ಯನ್ನು ಡಾ.ನಂದೀಶ ಹಂಚೆ ಅವರು ಉದ್ಘಾಟಿಸಿದ ಸಂದರ್ಭದಲ್ಲಿ 'ಧರ್ಮ ಜಾಗರ' ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಟಿ.ಎ.ಎನ್.ಖಂಡಿಗೆ, ಕಿನ್ನಿಗೋಳಿ ಪ.ಪಂ.ಮುಖ್ಯಾಧಿಕಾರಿ ಸಾಯೀಶ್ ಚೌಟ, ಕೆ.ಎಲ್.ಕುಂಡಂತಾಯ, ಹಿರಿಯ ಸಾಹಿತಿ - ವಿದ್ವಾಂಸ ಶ್ರೀಧರ ಡಿ.ಎಸ್ , ಸಾಹಿತಿ, ಚಿಂತಕ ಎಕ್ಕಾರು ಉಮೇಶರಾವ್, ಅನಂತ ಪ್ರಕಾಶದ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ, ಗಾಯತ್ರೀ ಉಡುಪ, ನಿವೃತ್ತ ಪಾಂಶುಪಾಲರಾದ ಸುದರ್ಶನ ವೈ.ಎಸ್, ಗುರುರಾಜ ಮಂಜಿತ್ತಾಯ ಮುಂತಾದವರು ಉಪಸ್ಥಿತರಿದ್ದರು. ನಮ್ಮ 'ಪರ್ವ'ಗಳು ಅಥವಾ 'ಹಬ್ಬ'ಗಳ ಆಚರಣೆ ಕುರಿತು ಸಣ್ಣ ಸಣ್ಣ ಪುಸ್ತಕ ಪ್ರಕಟಿಸುವ ಉದ್ದೇಶದಂತೆ ಮೂರು ತಿಂಗಳಲ್ಲಿ ಮೂರು ಕೃತಿಗಳು ಬಿಡುಗಡೆಗೊಂಡಿವೆ. ನವರಾತ್ರಿ ಹಾಗೂ ಒಂಬತ್ತು ದುರ್ಗಾ ಸನ್ನಿಧಾನಗಳ ಕುರಿತ ಮಾಹಿತಿ ಇರುವ 'ನವನವ ದುರ್ಗಾ'. ದೀಪಾವಳಿ ಹಾಗೂ ಗೋಪೂಜೆ ,ತುಳಸಿ ಪೂಜೆ ,ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಕುರಿತ ಮಾಹಿತಿಗಳಿರುವ 'ಸೊಡರ ಹಬ್ಬ' ಈಗಾಗಲೇ ಬಿಡುಗಡೆಯಾಗಿದೆ. 'ಧರ್ಮ ಜಾಗರ'ದಲ್ಲಿ ಷಷ್ಠಿ ,ಮಕರ ಸಂಕ್ರಮಣ , ಶಿವ ರಾತ್ರಿ ಪರ್ವಗಳ ಹಾಗೂ ಆಚಾರ್ಯ ಮಧ್ವರ ಕುರಿತಂತೆ ಹದಿನೆಂಟು ಲೇಖನಗಳಿವೆ.
ಕಾಪು ಶಾಸಕರಿಂದ 6 ಲಕ್ಷ ರೂ.ಗಳ ಮೀನುಗಾರಿಕಾ ಪರಿಹಾರ ಚೆಕ್ ಹಸ್ತಾಂತರ
Posted On: 17 Jan 2022, 06:07 PM
ಹೆಜಮಾಡಿ : ಇತ್ತೀಚಿಗೆ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿ ಸಮೀಪ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಜಮಾಡಿ ಕೋಡಿ ನಿವಾಸಿ ಭಾಸ್ಕರ್ ಪುತ್ರನ್ ರವರ ಪುತ್ರ ಜಯಂತ್ ರವರು ನೀರು ಪಾಲಾಗಿ ಮೃತರಾಗಿದ್ದರು. ವಿಷಯ ತಿಳಿದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮೃತರ ನಿವಾಸಕ್ಕೆ ತೆರಳಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದರು. ಆ ನಿಟ್ಟಿನಲ್ಲಿ ಕುಟುಂಬ ವರ್ಗಕ್ಕೆ ತನ್ನ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಿಂದ ಸುಮಾರು 6 ಲಕ್ಷ ರೂಗಳನ್ನು ಮಂಜೂರು ಮಾಡಿ ಸ್ವತಃ ತಾನೇ ಮೃತರ ನಿವಾಸಕ್ಕೆ ತೆರಳಿ ಮಂಜೂರಾತಿ ಪತ್ರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ಸುವರ್ಣ, ಜನಾರ್ಧನ ಕೋಟ್ಯಾನ್, ಬಬಿತ, ರೋಷನ್ ಕಾಂಚನ್, ಸರಿನಾ, ಶರಣ್ ಮಟ್ಟು, ಸುಜಾತಾ, ನಳಿನಿ ಹಾಗೂ ಸ್ಥಳೀಯ ಪಕ್ಷದ ಪ್ರಮುಖರು ಸುಧಾಕರ್ ಕರ್ಕೇರ, ಹಿರಿಯರಾದ ಧನಂಜಯ ಗುರಿಕಾರ, ನಿತಿನ್ ಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
Posted On: 17 Jan 2022, 06:01 PM
ಶಿರ್ವ: ಈ ದಿನಗಳಲ್ಲಿ ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ ಏರ್ಪಡಿಸಿದ 74ನೇ ಸೇನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಮುಂಡೆಲ್ ನ ಆಧ್ಯಾ ಫೌಂಡೇಶನ್ ಸೀನಿಯರ್ ಡೈರೆಕ್ಟರ್ ರಾಕೇಶ್ ಅಜಿಲ ಮಾತನಾಡಿದರು. ಯುವಕರಲ್ಲಿ ದೇಶಭಕ್ತಿ,ಶಿಸ್ತು, ಸಮಯ ಪ್ರಜ್ಞೆ, ನಾಯಕತ್ವ ಗುಣಗಳನ್ನು ಹೆಚ್ಚಿಸುವಲ್ಲಿ ಎನ್.ಸಿ.ಸಿ ಸಹಾಯಕಾರಿಯಾಗುತ್ತದೆ.ಇಂದಿನ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆದು ಇತರರಿಗೆ ಮಾದರಿಯಾಗಬೇಕು ಹಾಗು ತಮ್ಮ ಅಮೂಲ್ಯ ಕೊಡುಗೆಯನ್ನು ಈ ದೇಶಕ್ಕೆ ನೀಡಬೇಕೆಂದು ಕಿವಿಮಾತು ಹೇಳಿದರು. ಮಾತೃಭೂಮಿಯ ರಕ್ಷಣೆ ಮತ್ತು ರಾಷ್ಟ್ರದ ಅಖಂಡತೆಯನ್ನು ಕಾಪಾಡಲು ಎಲ್ಲವನ್ನೂ ತ್ಯಜಿಸಿ, ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ವೀರ ಯೋಧರಿಗೆ ನಮನಗಳನ್ನು ಸಲ್ಲಿಸುತ್ತಾ ಹಾಗೆ ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ ಸೇನೆಯ ವೀರ ಸೈನಿಕರನ್ನು ಗೌರವಿಸ ಬೇಕಾಗಿರೋದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು. ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ಕ್ಯಾಡೆಟ್ ರಿಯಾ ಸೆರೆನಾ ಡಿಸೋಜಾ ವಿವರಿಸಿದರು. ಈ ಸಂದರ್ಭದಲ್ಲಿ ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್ ದೇಶಭಕ್ತಿ ಗೀತೆ ವನ್ನು ಹಾಡಿ ನೆರೆದವರನ್ನು ಪ್ರೇರೇಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಅಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ, ಎಲ್ಲಾ ಕ್ಯಾಡೆಟ್ ಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಾನ್ಸ್ ಕಾರ್ಪೋರಲ್ ಧೀರಜ್ ಆಚಾರ್ಯ, ಕ್ಯಾಡೆಟ್ ಅನುಪ್ ನಾಯಕ್, ದೀಪಕ್ ಮತ್ತಿತರರು ಸಹಕರಿಸಿದರು. ಕೆಡೆಟ್ ನವ್ಯ ಮತ್ತು ಬಳಗ ಪ್ರಾರ್ಥಿಸಿದರು. ಸಾರ್ಜೆಂಟ್ ನಿವೇದಿತಾ ರೆಬೆಲ್ಲೋ ಎಲ್ಲರನ್ನು ಸ್ವಾಗತಿಸಿ, ಜೂನಿಯರ್ ಅಂಡರ್ ಆಫೀಸರ್ ಸುರಕ್ಷಾ ವಂದಿಸಿ, ಕ್ಯಾಡೆಟ್ ಎಲ್ರುಷಾ ಮಿಲಿನಾ ಡೇಸ ಕಾರ್ಯಕ್ರಮವನ್ನು ಸಂಯೋಜಿಸಿದರು.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ
Posted On: 17 Jan 2022, 05:56 PM
ಸುರತ್ಕಲ್ : ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ , ಹಿರಿಯ ಯಕ್ಷಗಾನ ವಿದ್ವಾಂಸ,ಪ್ರಸಂಗಕರ್ತ,ಸಾಹಿತಿ ಶ್ರೀಧರ ಡಿ.ಎಸ್.ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ವಹಿಸಿದ್ದರು. ನಿವೃತ್ತ ಉಪನ್ಯಾಸಕ ನಾರಾಯಣ ಹೆಗಡೆ ಉಡುಪಿ ಅವರು ಅಭಿನಂದನೆಯ ಮಾತುಗಳನ್ನಾಡಿದರು. ಯಕ್ಷಗಾನ ಸಂಘಟಕ ,ಜ್ಯೋತಿಷಿ ಶ್ರೀಮಧುಕರ ಭಾಗವತರು ಕುಳಾಯಿ, ಕಣಿಪುರ ಪತ್ರಿಕೆಯ ಸಂಪಾದಕ ನಾರಾಯಣ ಚೆಂಬಲ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಗುರುಗಳಾದ ಸುರತ್ಕಲ್ ವಾಸುದೇವ ರಾವ್, ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ವಿ.ರಾವ್ ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.
