Updated News From Kaup
ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 06 Dec 2021, 06:19 PM
ಉಡುಪಿ : ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಕಾರ್ಯನಿರ್ವಸುವಂತೆ ಎಲ್ಲಾ ಮೈಕ್ರೋ ಅಬ್ಸರ್ವರ್ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ವಿಧಾನಪರಿಷತ್ ಚುನಾವಣಾ ಕರ್ತವಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾನ ದಿನದಂದು ಮತಗಟ್ಟೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳ ಅನ್ವಯ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಮೈಕ್ರೋ ಅಬ್ಸರ್ವರ್ಗಳು ಪರಿಶೀಲಿಸಬೇಕು. ಯಾವುದೇ ಲೋಪಗಳಿದ್ದಲ್ಲಿ ಮತಗಟ್ಟೆ ಅಧಿಕಾರಿಯ ಗಮನಕ್ಕೆ ತಂದು ಅದನ್ನು ಸರಿಪಡಿಸಬೇಕು. ಮತದಾನವು ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಮತದಾನದ ಪೂರ್ಣ ವಿವರಗಳನ್ನು ನೇರವಾಗಿ ಜಿಲ್ಲಾ ಚುನಾವಣಾ ವೀಕ್ಷಕರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಮೈಕ್ರೋ ಅಬ್ಸರ್ವರ್ಗಳು ಮತದಾನ ಆರಂಭದಿಂದ ಮುಕ್ತಾಯದವರೆಗಿನ ಎಲ್ಲಾ ಘಟನೆಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು. ಈ ವರದಿಯನ್ನು ನಿಗದಿತ ಸಮೂನೆಯಲ್ಲಿ ದಾಖಲಿಸಿ, ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು. ಮತದಾನ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ನೋಡಕೊಳ್ಳಬೇಕು ಎಂದರು. ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದೆ ಎಂದರು. ಜಿಲ್ಲಾ ನೋಡೆಲ್ ಅಧಿಕಾರಿ ಅಶೋಕ್ ಕಾಮತ್ ಮೈಕ್ರೋ ಅಬ್ಸರ್ವರ್ಗಳು ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ನಿರ್ವಹಿಸುವ ಕುರಿತು ತರಬೇತಿ ನೀಡಿದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಲೀಡ್ ಬ್ಯಾಂಕ್ ಮೆನೇಜರ್ ಪಿಂಜಾರ, ಎನ್.ಐ.ಸಿ. ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು
ಉಡುಪಿ : ಮಹಾ ಪರಿನಿರ್ವಾಣ ದಿನ
Posted On: 06 Dec 2021, 06:12 PM
ಉಡುಪಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೋಶನ್, ಜಿ.ಪಂ. ಉಪಕಾರ್ಯದರ್ಶಿ ಕಿರಣ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಪಡು ಕುತ್ಯಾರು : ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಭಜನಾ ಮಂಗಲೋತ್ಸವ ಸಂಪನ್ನ
Posted On: 06 Dec 2021, 05:16 PM
ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡು ಕುತ್ಯಾರು ಗ್ರಾಮದ ಶ್ರೀ ದುರ್ಗಾಮಂದಿರದಲ್ಲಿ ಡಿಸೆಂಬರ್ 05ರಂದು ವಾರ್ಷಿಕ ಭಜನಾ ಮಂಗಲೋತ್ಸವವು ಸಂಪನ್ನಗೊಂಡಿತು. ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಆಚಾರ್ಯ, ಕಾರ್ಯದರ್ಶಿ ಸುರೇಶ್ ಆಚಾರ್ಯ, ಗ್ರಾಮ ಮೋಕ್ತೆಶರ್ ಮತ್ತು ಗೌರವ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕೂಡುವಳಿಕೆಯ ಸದಸ್ಯರು, ದುರ್ಗಾದೇವಿ ಮಹಿಳಾ ಮಂಡಳಿ, ಸಂಘದ ಎಲ್ಲಾ ಸದಸ್ಯರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಮತ್ತು ಇತರೆ ಗ್ರಾಮದ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಸೃಜನಶೀಲತೆ, ಏಕಾಗ್ರತೆಯನ್ನು ಉದ್ದೀಪನಗೊಳ್ಳಲು, ಹಾಗೂ ಬದುಕನ್ನು ಅರಿತು ಜೀವನೋತ್ಸಾಹ ಬೆಳೆಸಲು ಚಿತ್ರಕಲೆ ಸಹಕಾರಿ : ಡಾ। ಯು.ಸಿ.ನಿರಂಜನ್
Posted On: 05 Dec 2021, 11:35 PM
ಮಣಿಪಾಲ : ಪ್ರಷಾ ಸೇವಾ ಟ್ರಸ್ಟ್ ಹಾಗೂ ತ್ರಿವರ್ಣ ಕಲಾಕೇಂದ್ರದ ಸಹಯೋಗದಲ್ಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ದಿವಂಗತ ಡಿ. ವಿ. ಶೆಟ್ಟಿಗಾರ್ ಸ್ಮರಣಾರ್ಥ 18 ವರ್ಷ ಮೇಲ್ಪಟ್ಟ ಕಲಾಸಕ್ತರಿಗಾಗಿ ಡಿಸೆಂಬರ್ 5ರಂದು ಪ್ರಶಾವರ್ಣ - 2021 ಉಚಿತ ಒಂದು ದಿನದ ಚಿತ್ರಕಲಾ ಕಾರ್ಯಾಗಾರ ಜರಗಿತು. ಕಾರ್ಯಾಗಾರವನ್ನು ಡಾ। ಯು. ಸಿ. ನಿರಂಜನ್, ನಿರ್ದೇಶಕರು ಚಿತ್ರಕಲಾ ವಿದ್ಯಾಮಂದಿರ, ಉಡುಪಿ ಉದ್ಘಾಟಿಸಿ, ಸೃಜನಶೀಲತೆ ಮತ್ತು ಏಕಾಗ್ರತೆಯನ್ನು ಉದ್ದೀಪನಗೊಳ್ಳಲು, ಹಾಗೂ ಬದುಕನ್ನು ಅರಿತು ಜೀವನೋತ್ಸಾಹ ಬೆಳೆಸಲು ಚಿತ್ರಕಲೆ ಸಹಕಾರಿಯಾಗಿತ್ತದೆ ಎಂದು ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಗೌರವಾನ್ವಿತ ಅತಿಥಿಗಳಾದ ಸುರೇಂದ್ರ ನಾಯಕ್, ಟ್ರಸ್ಟೀ, ರಾಮಕೃಷ್ಣ ನಾಯಕ್ ಚಾರಿಟೇಬಲ್ ಟ್ರಸ್ಟ್, ಹಾಗೂ ಮಂಜುನಾಥ್ ಮಣಿಪಾಲ, ಮುನ್ಸಿಪಾಲ್ ಕೌನ್ಸಿಲರ್ , ಉಡುಪಿ, ಇವರು ಮಾತನಾಡಿ ಶಿಭಿರಾರ್ಥಿಗಳನ್ನು ಚಿತ್ರಕಲೆಯಲ್ಲಿ ತೊಡಗಿಸಿಕೊಳ್ಳಲು ಹುರಿದುಂಬಿಸಿದರು. ಪ್ರಶಾ ಸೇವಾ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ಕಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಜ್ಞಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅನುಷಾ ಆಚಾರ್ಯ ರವರು ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ತ್ರಿವರ್ಣ ಕಲಾಕೇಂದ್ರದ ನಿರ್ದೇಶಕರಾದ ಹರೀಶ್ ಸಾಗಾ ಅವರು ಶಿಬಿರದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು. ಟ್ರಸ್ಟ್ ನ ಕಾರ್ಯದರ್ಶಿ ಡಾ। ವಸುಧಾ ದೇವಿ ಕಾರ್ಯಕ್ರಮ ನಿರ್ವಹಿಸಿದರು. ಶರಣ್ಯಾ ವಂದನಾರ್ಪಣೆಗೈದರು. ಚಿತ್ರಕಲೆ ಪ್ರಾಥಮಿಕ ಜ್ಞಾನ ಹಾಗೂ ರಚನೆ, ಮತ್ತು ಪೆನ್ಸಿಲ್ ಶೇಡಿಂಗ್ ಕುರಿತು ತ್ರಿವರ್ಣ ಕಲಾಕೇಂದ್ರದ ನಿರ್ದೇಶಕರಾದ ಹರೀಶ್ ಸಾಗಾ ತರಬೇತಿ ನೀಡಿದರು. ಮಣಿಪಾಲ, ಉಡುಪಿ, ಬಂಟ್ವಾಳ , ಕಾಪು , ಮತ್ತು ಮಂಗಳೂರಿನಿಂದ ಒಟ್ಟು 3೦ ಮಂದಿ ಚಿತ್ರಕಲಾ ಶಿಬಿರದ ಪ್ರಯೋಜನ ಪಡೆದುಕೊಂಡರು .
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಚೌಕುಳಮಕ್ಕಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೆ ಉಚಿತ ಶುದ್ಧ ನೀರಿನ ಘಟಕ ಕೊಡುಗೆ
Posted On: 05 Dec 2021, 10:26 PM
ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೌಕುಳಮಕ್ಕಿಗೆ ಭೇಟಿ ನೀಡಿ ಉಚಿತ ಶುದ್ಧ ನೀರಿನ ಘಟಕವನ್ನು ತಂಡದ ಸ್ಥಾಪಕಧ್ಯಕ್ಷರಾದ ಡಾ. ಕೀರ್ತಿ ಪಾಲನ್ ಅವರ ಹುಟ್ಟುಹಬ್ಬದ ಸವಿನೆನಪಿಗಾಗಿ ನೀಡಲಾಯಿತು. ಈ ಕಾರ್ಯಕ್ರಮವು ಉದಯ ಪೂಜಾರಿ ಜಿಡ್ಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೋಗ ಪೂಜಾರಿ, ಆಜ್ರಿ ಪಂಚಾಯತ್ ಸದಸ್ಯರುಗಳಾದ ಸುರೇಶ ಪೂಜಾರಿ, ಶಾರದಾ ಪೂಜಾರಿ ಹಾಗೂ ಆಸರೆ ತಂಡದ ಸ್ಥಾಪಕಾಧ್ಯಕ್ಷರಾದ ಡಾ. ಕೀರ್ತಿ ಪಾಲನ್, ಕೋಶಾಧಿಕಾರಿ ಜಗದೀಶ್ ಬಂಟಕಲ್, ತಂಡದ ಸದಸ್ಯರಾದ ಬೇಬಿ ಶೆಟ್ಟಿ, ದಿನೇಶ್ ಬಿದ್ಕಲಕಟ್ಟೆ, ಮೋಕ್ಷ, ಶ್ಲೋಕ ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಅನಿತಾರವರು ವಂದಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರೀಕೃಷ್ಣ ಮಠದಿಂದ ಉತ್ತಮ ಬೆಂಬಲ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 05 Dec 2021, 08:39 PM
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ರಮಗಳಿಗೆ ಶ್ರೀಕೃಷ್ಣ ಮಠ ಜಿಲ್ಲಾಡಳಿತಕ್ಕೆ ನೀಡುತ್ತಿರುವ ಬೆಂಬಲ ಹಾಗೂ ಸಹಕಾರದಿಂದ , ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಹಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ, ಜಿಲ್ಲೆಯ ವಸಿಗರು ಮತ್ತು ವಲಸಿಗರಿಗೆ ರಾಜಾಂಗಣದಲ್ಲಿ ಅಯೋಜಿಸಿದ್ದ ವಿಶೇಷ ಕೋವಿಡ್ 19 ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಠದ ವತಿಯಿಂದ ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಜಿಲ್ಲೆಯಲ್ಲಿದ್ದ ವಲಸೆ ಕಾರ್ಮಿರಿಗೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಇದ್ದವರಿಗೆ ಉಚಿತ ಆಹಾರ ಒದಗಿಸಿರುವುದಲ್ಲದೇ, ಜಿಲ್ಲಾಡಳಿತಕ್ಕೆ ಸುಸಜ್ಜಿತ ಆಂಬುಲೆನ್ಸ್ ನೀಡುವ ಮೂಲಕ ಶ್ರೀಕೃಷ್ಣ ಮಠ ಜಿಲ್ಲಾಡಳಿತಕ್ಕೆ ಕೋವಿಡ್ ನಿಯಂತ್ರಣದಲ್ಲಿ ಅತ್ಯುತ್ತಮ ಬೆಂಬಲ ನೀಡಿದ್ದು,ಜಿಲ್ಲೆಯ ಕೋವಿಡ್ ಪೀಡಿತರಿಗೆ ಶ್ರೀಕೃಷ್ಣನ ಪ್ರಸಾದ ಹಾಗೂ ಸ್ವಾಮೀಜಿಗಳ ಆಶೀರ್ವಾದ ಒಟ್ಟಿಗೆ ದೊರೆತಿದೆ. ಅಲ್ಲದೇ ಕೋವಿಡ್ ಸಮುಚಿತ ವರ್ತನೆಗಳ ಪಾಲನೆ ಕುರಿತು ಪೂಜ್ಯ ಶ್ರೀಗಳು ನೀಡಿದ ವೀಡಿಯೋ ಸಂದೇಶ , ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಜಿಲ್ಲೆಯ ಪ್ರತಿ ಮನೆ ಮನೆಗಳಿಗೆ ತಲುಪಿದ್ದು, ನಾಗರೀಕರು ಅವುಗಳನ್ನು ಪಾಲನೆ ಮಾಡಿದ್ದು, ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆಯ ಹೆಚ್ಚಳ ತಡೆಯಲು ಸಾಧ್ಯವಾಗಿದೆ ಎಂದರು. ಜಿಲ್ಲೆಯಲ್ಲಿ ಪ್ರಸ್ತುತ 94.5% ಪ್ರಥಮ ಡೋಸ್ ಹಾಗೂ 74% ಎರಡನೇ ಡೋಸ್ ಲಸಿಕೆ ನೀಡುವ ಸಾಧನೆ ಆಗಿದ್ದು , ಇಂದು ಜಿಲ್ಲೆಯ ವಲಸಿಗರು ಮತ್ತು ಕೂಲಿ ಕಾರ್ಮಿಕರಿಗಾಗಿ ವಿಶೇಷ ಲಸಿಕಾ ಅಭಿಯಾನ ವನ್ನು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆರಂಭಿಸಿದ್ದು, ಶ್ರೀಕೃಷ್ಣನ ಆಶೀರ್ವಾದದಿಂದ ಶೀಘ್ರದಲ್ಲಿ ಜಿಲ್ಲೆಯಲ್ಲಿ 100% ಲಸಿಕೆ ಗುರಿ ಸಾಧಿಸಲು ಸಾಧ್ಯವಾಗಲಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರೀಕರು 2 ಡೋಸ್ ಲಸಿಕೆ ಪಡೆಯುವುದರ ಮೂಲಕ ಜಿಲ್ಲೆಯನ್ನು ಕೋವಿಡ್19 ಮುಕ್ತವಾಗಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪರ್ಯಾಯ ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು ಮಾತನಾಡಿ, ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಭಗವಂತನ ಸೇವೆಯನ್ನು ಪ್ರತಿಮೆ ಮೂಲಕ ಮತ್ತು ಸಮಾಜಸೇವೆಯ ಮೂಲಕ ಮಾಡಬಹುದು ಎಂದು ಹೇಳಿದ್ದಾರೆ, ಸಮಾಜಸೇವೆ ಮೂಲಕ ಭಗವಂತನಿಗೆ ನಾವು ತೆರಿಗೆ ನೀಡಬೇಕು. ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಯನ್ನು ತಪ್ಪದೇ ಪಾಲಿಸಬೇಕು, ಯಾವುದೇ ರೂಪಾಂತರಿ ವೈರಸ್ ಬಂದರೂ ಸಹ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರಿಂದ , ರೋಗ ಮುಕ್ತರಾಗಬಹುದು. ಕೋವಿಡ್ ಲಸಿಕೆ ಪಡೆಯದವರು ತಪ್ಪದೇ 2 ಡೋಸ್ ಲಸಿಕೆ ಪಡೆಯುವದರ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಬೇಕು ಎಂದರು. ಅದಮಾರು ಮಠದ ಕಿರಿಯ ಶ್ರೀಗಳಾದ ಈಶಪ್ರಿಯ ತೀರ್ಥ ಸ್ವಾಮೀಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್ , ಕಿರುತೆರೆ ನಟ ಎಂ.ಎಸ್. ಸೇತುರಾಂ ಮತ್ತಿತರರು ಉಪಸ್ಥಿತರಿದ್ದರು. ಅದಮಾರು ಮಠದ ಮೆನೇಜರ್ ಗೋವಿಂದರಾಜು ಸ್ವಾಗತಿಸಿದರು,ಕೃಷ್ಣರಾಜ ಭಟ್ ನಿರೂಪಿಸಿ, ವಂದಿಸಿದರು.
ಎಬಿವಿಪಿ ಬಜಗೋಳಿ ಘಟಕದ ಉದ್ಘಾಟನೆ
Posted On: 05 Dec 2021, 08:30 PM
ಕಾರ್ಕಳ : ಬಜಗೋಳಿ ಸರಕಾರಿ ಪದವಿಪೂರ್ವ ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಯು ಡಿಸೆಂಬರ್ 4ರಂದು ನೆರವೇರಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ಸಹಪ್ರಮುಖ್ ದಯಾನಂದ್ ಬಾಯರ್ ಮಾತನಾಡಿ ವಿದ್ಯಾರ್ಥಿ ಪರಿಷತ್ ಒಂದು ಸ್ವತಂತ್ರ ಸಂಘಟನೆಯಾಗಿದ್ದು ಯಾವುದೇ ರಾಜಕೀಯ ಪಕ್ಷದ ಕೈ ಗೊಂಬೆಯಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದಾಗ ಪ್ರತಿ ಹಂತದಲ್ಲೂ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದೆ ಎಂದರು. ಕಾರ್ಕಳ ನಗರ ಅಧ್ಯಕ್ಷರಾದ ಅಭಿಷೇಕ್ ಸುವರ್ಣ ಅವರು ಜವಾಬ್ದಾರಿ ಘೋಷಣೆ ಮಾಡಿದರು. ಅಧ್ಯಕ್ಷರಾಗಿ ರಂಜನ್, ಕಾರ್ಯದರ್ಶಿಯಾಗಿ ಸುಮಂತ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಸಂಚಾಲಕ ಕಾಬೆಟ್ಟು ಮನೀಶ್ ಕುಲಾಲ್, ಸಹಸಂಚಾಲಕ ಶಿವರುದ್ರ ಪಾಟೀಲ್, ರಾಜ್ಯಕಾರ್ಯಕಾರಿಣಿ ಸದಸ್ಯ ಯುಕೇಶ್ ಇಂದಬೆಟ್ಟು, ನಗರ ವಿದ್ಯಾರ್ಥಿನಿ ಪ್ರಮುಖ್ ಮುಕ್ತಿವರ್ಧನ ಹಾಗೂ ಪ್ರಮುಖ ಕಾರ್ಯಕರ್ತರಾದ ನಿರಂಜನ್ ನಾಯಕ್, ಗೌತಮ್ ಕಾಂತಾವರ, ದೀಕ್ಷಿತ್,ಪ್ರಜ್ವಲ್, ಮಹಾಲಕ್ಷ್ಮಿ, ಉಪಸ್ಥಿತರಿದ್ದರು.
ಡಿಸೆಂಬರ್ 6 : ಕುತ್ಯಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ
Posted On: 05 Dec 2021, 08:21 PM
ಕಾಪು : ಕುತ್ಯಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿಸೆಂಬರ್ 6, ಸೋಮವಾರ ಬೆಳಿಗ್ಗೆ 10 ಗಂಟೆಗೆ ಕುತ್ಯಾರು ಯುವಕ ಮಂಡಲದ ವಠಾರದಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾಶ್ರಯ-2021 : ಇನ್ನಾ ಬಂಟರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ
Posted On: 05 Dec 2021, 08:08 PM
ಕಾರ್ಕಳ : ಇಲ್ಲಿನ ಇನ್ನಾ ಬಂಟರ ಸಂಘ (ರಿ.) ಇನ್ನಾದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ವಿದ್ಯಾಶ್ರಯ-2021 ಇಂದು ಇನ್ನಾದ ಕಾಚೂರು ಪರಾರಿ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ವ್ಯ.ಸೇ.ಸ.ಬ್ಯಾಂಕ್ ಮುಂಡ್ಕೂರು ಇದರ ಅಧ್ಯಕ್ಷರಾದ ಎಮ್. ವಾದಿರಾಜ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಇನ್ನಾ ಬಂಟರ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿಗಳು, ಸಂಘದ ಸಲಹೆಗಾರರು, ಸದಸ್ಯರು ಉಪಸ್ಥಿತರಿದ್ದರು.
ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್
Posted On: 04 Dec 2021, 09:31 PM
ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ, ಯಾವುದೇ ಗೊಂದಲ ಹಾಗೂ ದೋಷಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶನಿವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ತೊಡಗಿರುವ ಉಡುಪಿ ಮತ್ತು ಕಾಪು ತಾಲೂಕಿನ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜನವರಿ 1, 2021 ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಮತದಾರರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಕ್ಷೇತ್ರದಿಂದ ಹೊರ ಹೋದವರು ಮತ್ತು ಮರಣ ಹೊಂದಿದವರ ಹೆಸರುಗಳನ್ನು ಆ ಕ್ಷೇತ್ರ್ರದ ಮತಗಟ್ಟೆಯ ಮತದಾರರ ಪಟ್ಟಿಯಿಂದ ಕೈ ಬಿಡುವಂತೆ ತಿಳಿಸಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈ ಬಿಡುವ ಮುನ್ನ ಮತ್ತೊಮ್ಮೆ ಆ ಮನೆಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಿ ದೃಢಡಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಮತದಾರರ ಪಟ್ಟಿಯಲ್ಲಿ ತಪ್ಪುಗಳಿದ್ದರೆ, ಚುನಾವಣೆಯ ಮತದಾನ ದಿನದಂದು ಗೊಂದಲ, ಗಲಾಟೆಗಳು ಸಂಭವಿಸಲಿದ್ದು, ಇದರಿಂದ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಡ್ಡಿಯಾಗುತ್ತದೆ ಎಂದರು. ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರ ಪಾತ್ರ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಅರ್ಹ ಎಲ್ಲಾ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಬೇಕು. ನಿಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ 18 ವರ್ಷ ಪೂರ್ಣಗೊಂಡ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದರ ಮೂಲಕ ಜಿಲ್ಲೆಯಲ್ಲಿ 100% ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಲಸಿಕಾ ಮಿತ್ರ ಕಾರ್ಯಕ್ರಮದ ಮೂಲಕ, ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು, ಕೋವಿಡ್ ಲಸಿಕೆ ಪಡೆಯಲು ಅರ್ಹರಿರುವ 18 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಮೊದಲ ಡೋಸ್ ಪಡೆದ ನಾಗರೀಕರು, 2 ನೇ ಡೋಸ್ ಪಡೆದ ಮತ್ತು ಪಡೆಯದ ನಾಗರೀಕರು, ಲಸಿಕೆ ಪಡೆಯದ ನಾಗರೀಕರನ್ನು ಈಗಾಗಲೇ ಗುರುತಿಸಲಾಗಿದೆ. ಎಲ್ಲಾ ಬಿ.ಎಲ್.ಓ ಗಳು ಮತದಾರರ ಪಟ್ಟಿ ಪರಿಶೀಲನೆ ಸಂದರ್ಭದಲ್ಲಿ, ತಮ್ಮ ಗ್ರಾಮಗಳಲ್ಲಿನ ಲಸಿಕೆ ಪ್ರಗತಿ ಕುರಿತು ಮಾಹಿತಿಯನ್ನು ಪರಿಶೀಲಿಸಿ, ಎಲ್ಲರೂ ತಪ್ಪದೇ ಲಸಿಕೆ ಪಡೆಯುವಂತೆ ಮನವೊಲಿಸುವುದರ ಮೂಲಕ ಜಿಲ್ಲೆಯಲ್ಲಿ 100% ಲಸಿಕೆ ನೀಡಿ, ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಯನಿರ್ವಹಿಸಬೇಕು ಎಂದರು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಮತ್ತು ಬಿ.ಎಲ್.ಓ ಗಳು ಜಂಟಿಯಾಗಿ ತಪಾಸಣೆ ನಡೆಸಬೇಕು. ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ 100% ಲಸಿಕಾಕರಣವಾಗುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸುವ ಸಿಬ್ಬಂದಿಯನ್ನು, ಮತದಾರರ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಸೂಕ್ತ ರೀತಿಯಲ್ಲಿ ಅಭಿನಂಧಿಸಲಾಗುವುದು ಎಂದರು. ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ, ಜಿಲ್ಲಾ ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ ಉಪಸ್ಥಿತರಿದ್ದರು.
