Updated News From Kaup
ISPRL ಪಾದೂರು ಘಟಕದಿಂದ : ಪ್ರಕೃತಿ ರಮಣೀಯವಾಗಿರುವ ಧನಸ್ಸು ತೀರ್ಥ ಸ್ವಚ್ಛತೆ
Posted On: 13 Jul 2025, 05:30 PM
ಕಾಪು : ಇನ್ನಂಜೆ ಗ್ರಾಮದ ಮಡುಂಬು ಧನಸ್ಸು ತೀರ್ಥ, ರೆಂಜಾಲ ಪಾದೆ ಇಲ್ಲಿ ISPRL ಪಾದೂರು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮಸ್ಥರ ಆಗ್ರಹ : ಧನಸ್ಸು ತೀರ್ಥ ಎಂಬುದು ಪವಿತ್ರ ತೀರ್ಥಬಾವಿಯನ್ನು ಹೊಂದಿದ್ದು, ಕುಂಜಾರು ಗಿರಿಯಿಂದ ಗುರುತಿಸಲ್ಪಡುವ ನಾಲ್ಕು ತೀರ್ಥಗಗಳಲ್ಲಿ ಇದೂ ಒಂದು, ಕಾಪು ರಾಷ್ಟ್ರೀಯ ಹೆದ್ದಾರಿಯಿಂದ 3 ಕಿಲೋಮೀಟರ್ ಅಂತರದಲ್ಲಿ ಇದ್ದು, ಶಂಕರಪುರ ಅಥವಾ ಬಂಟಕಲ್ಲಿಗೂ 3 ಕಿಲೋಮೀಟರ್ ಅಂತರದಲ್ಲಿರುವ ಈ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸಿ ಕೈ ಬೀಸಿ ತನ್ನತ್ತ ಕರೆಯುತ್ತಿದೆ, ಪ್ರವಾಸೋದ್ಯಮಕ್ಕೆ ಕೊಡುಗೆಯನ್ನು ನೀಡಬಲ್ಲ ಈ ಧನಸ್ಸು ತೀರ್ಥಕ್ಕೆ ಸಾಗಬೇಕಾದರೆ ಮಣ್ಣಿನ ರಸ್ತೆಯಲ್ಲೇ ಸಾಗಬೇಕಾಗಿರುವುದು ದುರದೃಷ್ಟಕರ ಸಂಗತಿ, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ, ಸೂಕ್ತ ರಸ್ತೆಯ ವ್ಯವಸ್ಥೆಯನ್ನು ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ
Posted On: 13 Jul 2025, 04:57 PM
ಕಾಪು : ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ ನಿರ್ಮಾಣ ಮಾಡಿರುವುದು ಬಹಳ ಸಂತೋಷ. ಇಲ್ಲಿನ ವಾಸ್ತುಶಿಲ್ಪ ಬಹಳಷ್ಟು ಚೆನ್ನಾಗಿ ಮೂಡಿಬಂದಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಸಚಿವ ಮತ್ತು ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯ ಚಂದ್ರ ಜೈನ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಮಂಜುಳಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ಭಾಸ್ಕರ ದೇವಾಡಿಗ, ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ದೇವಳದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಚರಿತ ದೇವಾಡಿಗ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಸಾವಿತ್ರಿ ಗಣೇಶ್, ಕಾಪು ಪುರಸಭೆ ನಾಮ ನಿರ್ದೇಶಿತ ಸದಸ್ಯ ದೇವರಾಜ್ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ : ಅಶೋಕ್ ಸಾಲ್ಯಾನ್
Posted On: 06 Jul 2025, 09:33 PM
ಪಡುಬಿದ್ರಿ: ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು. ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ ಮಹಾಸಭಾ ಮುಂಬೈ ಇವರ ಸಹಕಾರದೊಂದಿಗೆ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಮೀನುಗಾರ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಮಾತನಾಡಿ, ವಿದ್ಯಾರ್ಥಿವೇತನದ ಸಹಾಯ ಪಡೆದುಕೊಳ್ಳುವ ಪ್ರತಿಯೊಬ್ಬರೂ ಭವಿಷ್ಯದಲ್ಲಿ ಸುಂದರ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು. ಯುವಕ ಯುವತಿ ವೃಂದದಂತಹ ಸಂಘಟಿತ ವೇದಿಕೆ ನಿರ್ಮಾಣವಾಗಬೇಕು. ಇದರಿಂದ ಶೈಕ್ಷಣಿಕವಾಗಿ ಮಾತ್ರವಲ್ಲದೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಈ ಸಂದರ್ಭ ಊರಿನ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಕಾಡಿಪಟ್ಣ ಮೊಗವೀರ ಮಹಾಸಭಾದ ಕೋಶಾಧಿಕಾರಿ ಅಶೋಕ್ ಬಂಗೇರ, ಕೆ.ಎನ್.ವಿ.ಪಿ ಸದಸ್ಯ ಸುಧಾಕರ್ ಸಾಲ್ಯಾನ್, ಮಹಿಳಾ ಸಭಾ ದ ಅಧ್ಯಕ್ಷೆ ಸರಳಾ ಕಾಂಚನ್, ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ ಮಾಲತಿ ಸಾಲ್ಯಾನ್, ಗುರು ಪ್ರಸಾದ್, ಶರತ್ ಕರ್ಕೇರ, ನಾರಾಯಣ ಕಕೇರ, ಉದಯ ಸಾಲ್ಯಾನ್, ಸತೀಶ್ ಕೋಟ್ಯಾನ್, ಜೀವನ್ ಎಸ್ ಸುವರ್ಣ, ಮಿಥುನ್ ಸಾಲ್ಯಾನ್, ದೇವರಾಜ್ ಬಂಗೇರ, ಅಕ್ಷಿತ್ ಕರ್ಕೇರ, ಆಡಳಿತ ಮಂಡಳಿ ಸದಸ್ಯರು ಮತ್ತು ಊರಿನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಸ್ವಾಗತಿಸಿ, ನಿರೂಪಿಸಿದರು.
ಅಂಗಾಗ ಕಸಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿ ಡಾ.ಸುರೇಶ ರಾವ್ ಗೆ ಹುಟ್ಟೂರ ಅಭಿನಂದನೆ
Posted On: 04 Jul 2025, 06:09 AM
ಕಾಪು : ಮಾನವ ದೇಹದ ಅಮೂಲ್ಯ ಅತ್ಯಗತ್ಯ "ಅಂಗಾಂಗಳ ಕಸಿ ಶಸ್ತ್ರಚಿಕಿತ್ಸೆ"ಯ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್ ಅವರಿಗೆ ಹುಟ್ಟೂರಿನಲ್ಲಿ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು. ಕೆಮುಂಡೇಲಿನ ಶ್ರೀ ಪಾಂಡುರಂಗ ಭಜನಾ ಮಂಡಳಿ,ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆಹಾಗೂ ಹಳೆವಿದ್ಯಾರ್ಥಸಂಘ ಮತ್ತು ಕೆಮುಂಡೇಲು,ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು. ಮಹತ್ತನ್ನು ಸಾಧಿಸುವ ಸಂಕಲ್ಪ ವ್ಯಕ್ತಿಜೀವನವನ್ನು ಸುಸಂಪನ್ನಗೊಳಿಸಿ ದೇಶದ ಆಸ್ತಿಯನ್ನಾಗಿಸಿ ಸಮಾಜದಲ್ಲಿ ಬಹುಮಾನ್ಯತೆಯನ್ನು ಪಡೆಯುವ ಎತ್ತರಕ್ಕೆ ಏರಿಸುತ್ತದೆ ಎಂಬುದಕ್ಕೆ ನಮ್ಮ ಸುರೇಶ ರಾವ್ ಪ್ರತ್ಯಕ್ಷ ಸಾಕ್ಷಿ, ಯುವ ಸಂದಣಿಗೆ ಇವರ ಜೀವನ ವಿಧಾನ ಒಂದು ಆದರ್ಶ - ಮಾರ್ಗದರ್ಶಿ ಎಂದು ಹುಟ್ಟೂರಿನ ಕುವರನನ್ನು ಶ್ಲಾಘಿಸಿ "ಅಭಿನವ ಧನ್ವಂತರಿ" ಉಪಾದಿಯನ್ನಿತ್ತು ಸಮ್ಮಾನಿಸಲಾಯಿತು.ಸುರೇಶ ರಾವ್ ಪತ್ನಿ ನೇತ್ರತಜ್ಞೆ ಡಾ.ಕಲ್ಪನಾ ಜೊತೆಗಿದ್ದರು. ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಯುಎಸ್ ಎಎಂ ಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ,ಎನ್ ಎಸ್ ಯು ಎಂ ಪ.ಪೂ.ಕಾಲೇಜಿನ ಪ್ರಾಚಾರ್ಯ ಪ್ರಕಾಶ ಶೆಣೈ ಅವರು ಡಾ.ಸುರೇಶ ರಾವ್ ಅವರ ಸಾಧನೆಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡು ಅಭಿನಂದಿಸಿದರು.ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಆಶೀರ್ವದಿಸಿದರು. ನಿವೃತ್ತ ಪಾಂಶುಪಾಲ ಬಿ.ಆರ್. ನಾಗರತ್ನ, ಕೆಮುಂಡೇಲು ಶಾಲೆಯ ಮುಖೋಪಾಧ್ಯಾಯ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿಯ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಪ್ರಸ್ತಾವಿಸಿ,ಸ್ವಾಗತಿಸಿದರು.ಹರೀಶ ಕೋಟ್ಯಾನ್ ಡಾ.ಸುರೇಶ ರಾವ್ ಅವರಿಗೆ ನೀಡಲಾದ "ಅಭಿನಂದನೆಯ ಆಲೇಖ"ವನ್ನು ವಾಚಿಸಿದರು, ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಅವರು ವಂದಿಸಿದರು.
ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು : ಪಾಯಸ ಸೇವೆಗೆ ಚಾಲನೆ
Posted On: 04 Jul 2025, 05:58 AM
ಕಾಪು : ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು ಶಾಲೆಯಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶಂಕರಪುರ ವತಿಯಿಂದ ಶಾಲಾಮಕ್ಕಳಿಗೆ ಪಾಯಸ ಸೇವೆ ನೀಡಲಾಯಿತು. ಶ್ರೀ ಸಾಯಿ ಈಶ್ವರ್ ಗುರೂಜಿಯವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಯಿ ಮಂದಿರದ ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ಲಾವಣ್ಯ, ಶಾಲಾ ಸಂಚಾಲಕ ಪ್ರವೀಣ್ ಕುಮಾರ್ ಗುರ್ಮೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಕಿಶನ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಲಕ್ಷ್ಮೀ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ, ಶಾಲಾ ಶಿಕ್ಷಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೌಮ್ಯ ರೆಡ್ಡಿ ಭೇಟಿ
Posted On: 03 Jul 2025, 08:34 PM
ಪಡುಬಿದ್ರಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್, ಕಾಪು ನಾಲ್ಕು ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ, ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.
ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ ಆಯ್ಕೆ
Posted On: 02 Jul 2025, 09:48 AM
ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ ಹೋಟೆಲ್ ಉದ್ಯಮಿ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಅವಿರೋಧ ಆಯ್ಕೆ
Posted On: 01 Jul 2025, 06:10 PM
ಕಾಪು : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ. ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಗೀತಾ ಉಳಿಯಾರು ಆಯ್ಕೆಯಾಗಿದ್ದಾರೆ.
ಗಾನ ಕೋಗಿಲೆ -2025 : ದ.ಕ, ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ
Posted On: 01 Jul 2025, 11:50 AM
ಪಡುಬಿದ್ರಿ : ಸಂಗೀತವು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಮಾನಸಿಕ ವಿಶ್ರಾಂತಿ, ಸೃಜನಶೀಲತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ಇದು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ಸಂಗೀತವು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಗ್ರಾಮೀಣ ಪ್ರದೇಶದ ಸಂಗೀತ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸುವ ಕಾರ್ಯವನ್ನು ಹಿನ್ನೆಲೆ ಗಾಯಕಿ ಸುಶ್ಮಿತಾ ಎರ್ಮಾಳ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ಮೂಲಕ ಬಹಳಷ್ಟು ಪ್ರತಿಭೆಗಳು ಹೂರಹೂಮ್ಮಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಹೇಳಿದರು. ಅವರು ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಸುಶ್ಮಿ ಮೆಲೋಡಿಯಸ್ ಎರ್ಮಾಳ್ ಸಂಸ್ಥೆಯ ವತಿಯಿಂದ ಹಿನ್ನೆಲೆ ಗಾಯಕಿ ಕು. ಸುಶ್ಮಿತಾ ಕೇಶವ್ ಎರ್ಮಾಳ್ ಸಾರಥ್ಯದಲ್ಲಿ ಜುಲೃೆ 27 ರಂದು ಪಡುಬಿದ್ರಿ ಸುಜಾತ ಆಡಿಟೋರಿಯಂ ನಲ್ಲಿ ನಡೆಯುವ ಗಾನ ಕೋಗಿಲೆ-2025 ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿ ಕು. ಸುಶ್ಮಿತಾ ಕೇಶವ್ ಎರ್ಮಾಳ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ರೋಟರಿ ಪೂರ್ವ ಅಧ್ಯಕ್ಷೆ ಗೀತಾ ಅರುಣ್ , ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ಕ.ರ.ವೇ. ಉಡುಪಿ ಜಿಲ್ಲಾ ಮಹಿಳಾ ಸಮಿತಿ ಉಪಾಧ್ಯಕ್ಷೆ ಕಿರಣ್ ಪ್ರತಾಪ್ ಸಾಲ್ಯಾನ್ ಉಪಸ್ಥಿತರಿದ್ದರು. ಸುಶ್ಮಿತಾ ಎರ್ಮಾಳ್ ಸ್ವಾಗತಿಸಿ, ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಡುಪಿ ಜಿಲ್ಲಾ ಜೆಡಿಎಸ್ : ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
Posted On: 30 Jun 2025, 07:34 PM
ಉಡುಪಿ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ವಸತಿ ಇಲಾಖೆಯು ರಾಜ್ಯದಲ್ಲಿನ ಅತ್ಯಂತ ಹಿಂದುಳಿದ, ಬಡತನದ ಕುಟುಂಬಗಳ ನಿವೇಶನ ಹಾಗೂ ವಸತಿ ರಹಿತ ನೈಜ್ಯ ಫಲಾನುಭವಿಗಳಿಗೆ ಮೀಸಲಾಗಿರುವ ವಸತಿ ಯೋಜನೆಗಳನ್ನು ಲಂಚ ನೀಡುವವರಿಗೆ ಮಾತ್ರ ನೀಡುತ್ತಿದ್ದು, ಇಲಾಖೆಯು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವುದಾಗಿ ಈಗಾಗಲೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ. ಇದಲ್ಲದೆ, ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುನಶ್ಚೇತನ, ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುತ್ತದೆ. ಅಂತೆಯೇ, ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡುವಲ್ಲಿಯೂ ಸಹ ವಿಳಂಬ ಮಾಡುತ್ತಾ ಬಂದಿದ್ದು ಬಡವರ ಹಾಗೂ ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿರುತ್ತದೆ. ಪರಿಶಿಷ್ಟರಿಗೆ ಮೀಸಲಾಗಿರುವ ಹಣದಲ್ಲಿಯೂ ಅತ್ಯಂತ ತಾರತಮ್ಯವೆಸಗುತ್ತಿದ್ದು ಆ ವರ್ಗದ ಜನರಿಗೆ ಅನ್ಯಾಯ ಮಾಡುತ್ತಲಿದ್ದು, ಕೇವಲ ತುಷ್ಠಿಕರಣ ರಾಜಕಾರಣ ಮಾಡುತ್ತಲಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯವೆಸಗಿದೆ. ಇದಲ್ಲದೆ, ರಾಜೀವ್ಗಾಂಧಿ ವಸತಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಮನೆಗಳ ಹಂಚಿಕೆಯಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆದಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ನೇರವಾಗಿ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ರವರ ವಿರುದ್ಧ ಆಪಾದನೆ ಮಾಡಿರುತ್ತಾರೆ. ಮುಂದುವರೆದು, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ರಾಜ್ಯ ಸರ್ಕಾರ ಕಳೆದ 2 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ಜನರನ್ನು ವಂಚಿಸುತ್ತಿರುವುದಾಗಿ ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ಹೊತ್ತಿರುವ ಶ್ರೀ ಜಮೀರ್ ಅಹಮದ್ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ. ಮುಂದುವರೆದು, ಅತೀವ ಭ್ರಷ್ಟಾಚಾರ ಆಡಳಿತ ವೈಫಲ್ಯದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಾಜಿ ಜಿಲ್ಲಾಧ್ಯಕ್ಷರಾದ ದಕ್ಷತ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಉದಯ ಹೆಗ್ಡೆ, ನಾಯಕರುಗಳಾದ ಚಂದ್ರಹಾಸ ಎರ್ಮಾಳ್, ಬ್ಲಾಕ್ ಅಧ್ಯಕ್ಷರುಗಳಾದ ಸಂದೇಶ್ ಭಟ್, ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್, ನಾಯಕರುಗಳಾದ ಭರತ್ ಶೆಟ್ಟಿ, ರಮೇಶ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಹುಸೇನ್ ಹೈಕಾಡಿ, ಸುರೇಶ್ ದೇವಾಡಿಗ, ರಾಮ ರಾವ್, ವೆಂಕಟೇಶ್ ಪಡುಬಿದ್ರಿ, ಬಿಕೆ ಮೊಹಮ್ಮದ್, ವಿನ್ಸೆಂಟ್ ಸುನಿಲ್, ರಂಗ ಕೋಟ್ಯಾನ್, ಆಶ್ರಫ್ ಪಡುಬಿದ್ರಿ, ಗುರುರಾಜ್ ಶೆಟ್ಟಿ, ಉಮಾನಾಥ ಶೆಟ್ಟಿ, ಶಂಶುದ್ದಿನ್ ಮಜೂರು, ಮಧುಕರ್ ಅಂಬಲಪಾಡಿ, ಸುರೇಶ್ ಉಡುಪಿ, ಪ್ರವೀಣ್ ಎರ್ಮಾಳ್, ಪ್ರಸಾದ್ ಪೂಜಾರಿ, ಉಮೇಶ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
