Updated News From Kaup
ಕಾಪು : ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರಿಗೆ ತ್ವರಿತ ಸೇವೆ ಸಿಗಲಿ : ಉಡುಪಿ ಜಿಲ್ಲಾ ಕೃಷಿಕ ಸಂಘ ಆಗ್ರಹ
Posted On: 21 May 2025, 04:36 PM
ಕಾಪು : ಪ್ರಸ್ತುತ ಕಾಪುವಿನಲ್ಲಿ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರ ಇದೆ. ಇಲ್ಲಿ ಜನಸಾಮಾನ್ಯರ ಅರ್ಜಿ ವಿಲೇವಾರಿಗೆ ಸರಿಯಾದ ವ್ಯವಸ್ಥೆಯೇ ಇಲ್ಲ. ನೂಕು ನುಗ್ಗಲು ಇದೆ. ಒಮ್ಮೆಗೆ 5 -10 ಅರ್ಜಿಗಳನ್ನು ತರುವ ದಲ್ಲಾಳಿಗಳ ಹಾವಳಿ ಇದೆ. ನೇರವಾಗಿ ಅರ್ಜಿ ಸಲ್ಲಿಸಲು ಹೋದವರನ್ನು ಕೇಳುವವರೇ ಇಲ್ಲ. ಬೆಳಗ್ಗಿನಿಂದ ಸಂಜೆಯವರೆಗೆ ಕಾಯುವ ಪರಿಸ್ಥಿತಿ. ಹಾಗಿದ್ದರೂ ಕೆಲಸವಾಗದೆ ಹಿಂದಿರುಗಿ ಹೋಗಬೇಕು. 10 -12 ಬಾರಿ ಹೋದರೂ ಯೋಜನಾ ಪ್ರಾಧಿಕಾರದ ಅಧಿಕಾರಿಯ ಭೇಟಿ ಅಸಾಧ್ಯ. ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರಿಗೆ ತ್ವರಿತವಾದ ಸೇವೆ ಸಿಗುವಂತಾಗಬೇಕು ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಆಗ್ರಸಿದ್ದಾರೆ. ಈ ಬಗ್ಗೆ ಸೋಮವಾರ ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಕಾಪು ತಹಶೀಲ್ದಾರ್ರವರ ಮೂಲಕ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರಾಧಿಕಾರದ ಕಚೇರಿಗೆ ನೇರವಾಗಿ ಬರುವ ಅರ್ಜಿದಾರರೊಂದಿಗೆ ವಿನಯ ಮತ್ತು ಸೌಜನ್ಯದಿಂದ ವರ್ತಿಸುವಂತೆ ಪ್ರಾಧಿಕಾರದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಿರ್ದೇಶ ನೀಡಬೇಕು. ಅರ್ಜಿಯ ಸ್ವೀಕಾರ ಮತ್ತು ಸ್ಥಿತಿಗತಿಯ ಬಗ್ಗೆ ರಿಜಿಸ್ಟರ್ ನಿರ್ವಹಣೆ ಮಾಡಬೇಕು. ಅರ್ಜಿಯ ಜೊತೆ ಯಾವುದೆಲ್ಲ ದಾಖಲೆಗಳ ಅಗತ್ಯವಿರುವುದೆಂದು ಪರಿಶೀಲಿಸಿ, ಅರ್ಜಿದಾರರಿಗೆ ಆಗಲೇ ತಿಳಿಸಬೇಕು. ಕ್ರಮವತ್ತಾಗಿ ಕಚೇರಿಯನ್ನು ಸಂಪರ್ಕಿಸುವ ದಿನ ಮತ್ತು ಸಮಯವನ್ನು ದೂರವಾಣಿ ಮೂಲಕ ಅರ್ಜಿದಾರರಿಗೆ ನೀಡುವ ವ್ಯವಸ್ಥೆಯಾಗಬೇಕು ಮತ್ತು ಅಂದೇ ಅರ್ಜಿಯ ವಿಲೇವಾರಿಯಾಗಬೇಕು. ಅರ್ಜಿ ಸಲ್ಲಿಸಿದ ರೀತಿಯಲ್ಲಿ ಕಡ್ಡಾಯವಾಗಿ ಅನುಮೋದನೆ ನೀಡುವುದು. ದಲ್ಲಾಳಿಗಳಿಗೆ ಪ್ರಾಧಿಕಾರದಲ್ಲಿ ಅವಕಾಶ ನೀಡಕೂಡದು. ಒಮ್ಮೆಗೆ ಒಬ್ಬರಿಂದ ಒಂದು ಅರ್ಜಿ ಮಾತ್ರ ಸ್ವೀಕಾರ ಮಾಡುವುದು. ಅವ್ಯವಸ್ಥೆಯಿಂದಾಗಿ ಉಂಟಾಗುತ್ತಿರುವ ನೂಕುನುಗ್ಗಲನ್ನು ನಿಯಂತ್ರಿಸಬೇಕು, ಇದೆಲ್ಲಾ ಪ್ರಕ್ರಿಯೆಗಳನ್ನು ವ್ಯವಸ್ಥಿತವಾಗಿ ಮಾಡಿ ಪ್ರಾಧಿಕಾರವು ಸಾರ್ವಜನಿಕರಿಗೆ ಅನುಕೂಲವಾಗಿ ತ್ವರಿತ ಕೆಲಸ ಮಾಡಲು ತಾವು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ವಿನಂತಿಸಲಾಯಿತು. ಪ್ರಾಧಿಕಾರದ ಪ್ರಸ್ತುತ ಕಾರ್ಯವೈಖರಿಯಿಂದ ನಮ್ಮ ಸಂಘಟನೆಯ ಸದಸ್ಯರು ಈಗಾಗಲೇ ತೀವ್ರ ಅಸಮಾಧಾನ ಹೊಂದಿದ್ದಾರೆ ಮತ್ತು ಪ್ರತಿಭಟನೆ ನಡೆಸುವ ಸ್ಥಿತಿಯಲ್ಲಿದ್ದಾರೆ. ಆದ್ದರಿಂದ ಇವೆಲ್ಲ ಪ್ರಕ್ರಿಯೆಗಳನ್ನು ವ್ಯವಸ್ಥಿತವಾಗಿ ಮಾಡಿ ಪ್ರಾಧಿಕಾರವು ಸಾರ್ವಜನಿಕರಿಗೆ ಅನುಕೂಲವಾಗಿ ತ್ವರಿತ ಕೆಲಸ ಮಾಡುವಂತೆ ತಾವು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್ ಮಲ್ಲಂಪಳ್ಳಿ, ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ಪಾಂಗಾಳ ಗಣೇಶ ಶೆಟ್ಟಿ, ಡಾ. ರಾಧಾಕೃಷ್ಣ ಶರ್ಮಾ, ವೇಣುಗೋಪಾಲ್ ಎಂ. ಪಡುಕಳತ್ತೂರು, ರಮೇಶ್ಚಂದ್ರ ನಾಯಕ್ ಪಂಜಿಮಾರು ಉಪಸ್ಥಿತರಿದ್ದರು.
ಮಳೆ ವಿಪತ್ತು ನಿರ್ವಹಣೆ ಕುರಿತು ಕಾಪು ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಸಭೆ
Posted On: 21 May 2025, 04:01 PM
ಕಾಪು : ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಹಾಗೂ ವಿಪತ್ತು ನಿರ್ವಹಣಾ ವಿಷಯಗಳ ಕುರಿತು ಕಾಪು ತಾಲೂಕು ಮಟ್ಟದ ಸಭೆಯು ಬುಧವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ಜರಗಿತು. ಸಭೆಯಲ್ಲಿ ರಾ.ಹೆ. 66 ರ ಹೆಜಮಾಡಿಯಿಂದ ಉದ್ಯಾವರದವರೆಗಿನ ಬೈ-ಪಾಸ್ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಕಡೆಗಳಲ್ಲಿ ಬ್ಯಾರೀಕೇಡ್ ಗಳನ್ನು ಅಳವಡಿಸಿದ್ದು ಸುಭದ್ರ ಸ್ಥಿತಿಯಲ್ಲಿ ಇರಿಸುವಂತೆ ಹಾಗೂ ಪ್ರತಿಫಲನಗಳನ್ನು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಕಾಣುವಂತೆ ಅಳವಡಿಸುವಂತೆ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಿದ್ದು ಮಳೆಯಿಂದ ಮಣ್ಣು ಒದ್ದೆಯಾಗಿ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಸೂಚಿಸಲಾಯಿತು ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಮನೆಗಳಿಗೆ ಹಾನಿಯುಂಟಾದ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ/ ಪಂಚಾಯತ್ ರಾಜ್ ಅಧಿಕಾರಿಗಳು ಸಮನ್ವಯತೆಯಿಂದ ಸ್ಥಳ ಪರಿಶೀಲನೆ ನಡೆಸಿ ಗರಿಷ್ಠ ಪರಿಹಾರ ನೀಡಬೇಕು. ರಸ್ತೆ ಬದಿಗಳಲ್ಲಿರುವ ಹಳೆ ವಿದ್ಯುತ್ ತಂತಿಗಳನ್ನು ಮತ್ತು ಅಪಾಯಕಾರಿ ಮರಗಳನ್ನು ತೆರವು ಗೊಳಿಸುವಂತೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಜಲ್ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಪೈಪ್ ಲೈನ್ ಅಳವಡಿಸಲು ತೆಗೆದ ಹೊಂಡ ಗುಂಡಿಗಳನ್ನು ಸರಿಯಾಗಿ ಮುಚ್ಚದ ಕಾರಣ ಅಪಘಾತ ಸಂಭವಿಸುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಶಾಲಾ ಕಾಲೇಜುಗಳು ಆರಂಭವಾಗಲಿದ್ದು ವಿದ್ಯಾರ್ಥಿಗಳಿಗೆ ಜಾತಿ ಆದಾಯ ಪ್ರಮಾಣ ಪತ್ರ ಅಗತ್ಯವಾಗಿದ್ದು, ಜಾತಿ ಆದಾಯ ಪ್ರಮಾಣ ಪತ್ರ ನೀಡಲು ವಿಳಂಬ ಮಾಡದಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ, ಅತಿಸಾರ ಮುಂತಾದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಉಲ್ಬಣವಾಗಲಿದ್ದು ಇದರ ತಡೆಗೆ ಮುಂಜಾಗ್ರತ ಕ್ರಮ ಹಾಗೂ ಸಾರ್ವಜನಿಕರಿಗೆ ಜಾಗೃತಿ ಉಂಟುಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಇಲಾಖೆಯವರಿಗೆ ಸೂಚಿಸಲಾಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛ ಪರಿಸರ ಹಿತದೃಷ್ಟಿಯಿಂದ ಮಲೀನ ನೀರು ಮತ್ತು ಮಲೀನ ತ್ಯಾಜ್ಯಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮತ್ತು ಮಳೆಗಾಲದ ಸಂದರ್ಭದಲ್ಲಿ ಪುರಸಭೆಯಲ್ಲಿ ತುರ್ತು ಸೇವಾ ಕೇಂದ್ರ ತೆರೆದು ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಕ ಮಾಡಿ ಅರ್ಜಿಗಳನ್ನು ಸ್ವೀಕರಿಸಿ ತುರ್ತು ಪರಿಹಾರೋಪಾಯ ಕೈಗೊಳ್ಳವಂತೆ ಪುರಸಭಾ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಯಿತು. ರಾಷ್ಟೀಯ ಹೆದ್ದಾರಿಯ ಅಪಘಾತ ವಲಯದಲ್ಲಿ ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಬ್ಯಾರಿ ಗೇಟ್ ಗಳನ್ನು ಅಳವಡಿ ಸಂಭಾವ್ಯ ಅಪಘಾತ ತಡೆಯಲು ಕ್ರಮ ವಹಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು. ಕಡಲ್ಕೊರೆತ ಬಾದಿತ ಪ್ರದೇಶಗಳ ಕಡಲ್ಕೊರೆತ ತಡೆಗೆ ಯೋಜನೆ ಸಿದ್ಧಪಡಿಸುವಂತೆ ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕಿಂಡಿ ಅಣೆಕಟ್ಟುಗಳಗೆ ಅಳವಡಿಸಲಾದ ಹಲಗೆಗಳನ್ನು ನೀರಿನ ಮಟ್ಟಕ್ಕೆ ಅನುಗುಣವಾಗಿ ತೆರವುಗೊಳಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದ ಸಂದರ್ಭದಲ್ಲಿ ಕೆರೆ, ತೋಡು, ನದಿಗಳು ಅಪಾಯಕಾರಿ ಮಟ್ಟವನ್ನು ಮೀರಿ ನೀರು ಹರಿಯುವುದು ಸ್ವಾಭಾವಿಕ ಇಂತಹ ಸಂದರ್ಭದಲ್ಲಿ ಅವಘಡ ಸಂಭವಿಸಿದರೆ ತುರ್ತು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳುವುದು ಇದಕ್ಕೆ ಅವಶ್ಯಕತೆ ಇರುವ ಪೂರಕ ಸಲಕರಣೆಗಳನ್ನು ತಮ್ಮಲ್ಲಿ ಇರಿಸಿಕೊಳ್ಳುವಂತೆ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಡಾ.ಪ್ರತಿಭಾ ಆರ್., ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಕಾಪು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
ಮೇ.24 : ಅಮೋಘ (ರಿ.) ಉಡುಪಿ ವತಿಯಿಂದ ಸಾಮರಸ್ಯ ಪ್ರಶಸ್ತಿ ಪುರಸ್ಕಾರ
Posted On: 21 May 2025, 03:41 PM
ಉಡುಪಿ : ಸಾಂಸ್ಕೃತಿಕ -ಸಾಮಾಜಿಕ-ಸಾಹಿತ್ಯಿಕ ಸಂಸ್ಥೆಯಾದ ಅಮೋಘ (ರಿ.) ಉಡುಪಿ ವತಿಯಿಂದ "ಸಾಮರಸ್ಯ ಪ್ರಶಸ್ತಿ ಪುರಸ್ಕಾರ" ಕಾರ್ಯಕ್ರಮ ಮೇ.24, ಶನಿವಾರದಂದು ಸಂಜೆ ಗಂಟೆ 4ಕ್ಕೆ ಉಡುಪಿ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜರಗಲಿದೆ. ಶ್ರೀ ಮಾದಾರ ಚೆನ್ನಯ್ಯ ಗುರುಪೀಠ ಚಿತ್ರದುರ್ಗ ಇದರ ಪೀಠಾಧಿಪತಿಗಳಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿಯವರು ಪ್ರಶಸ್ತಿ ಪುರಸ್ಕೃತರಾಗಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ವಿದ್ವಾಂಸರಾದ ಡಾ|| ಪಾದೆಕಲ್ಲು ವಿಷ್ಣು ಭಟ್ ವಹಿಸಲಿದ್ದು, ಮಾಹೆ, ಮಣಿಪಾಲ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್ ಪ್ರಶಸ್ತಿ ಪ್ರದಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉಡುಪಿ ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲರಾದ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಉಡುಪಿ ಎಂ.ಜಿ.ಎಂ. ಕಾಲೇಜು ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ಹಿರಿಯ ಲೇಖಕಿ ಪಾರ್ವತಿ ಜಿ. ಐತಾಳ್ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲೇಖಕಿ ಪೂರ್ಣಿಮಾ ಸುರೇಶ್ ರವರ 2024ರ ಮುದ್ದಣ ಕಾವ್ಯ ಪ್ರಶಸ್ತಿ ಪುರಸ್ಕೃತ ಕೃತಿ ಸಂತೆಯೊಳಗಿನ ಏಕಾಂತ, ಪೂರ್ಣಿಮಾ ಸುರೇಶ್ ರವರ ಪಾರ್ವತಿ ಜಿ. ಐತಾಳ್ ಅನುವಾದಿಸಿರುವ ದಿ ಅಕ್ವೇರಿಯಂ ಕೃತಿ ಬಿಡುಗಡೆಯಾಗಲಿದೆ ಎಂದು ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಎಂಎಫ್ ನಿರ್ದೇಶಕರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆ
Posted On: 21 May 2025, 03:18 PM
ಕಾಪು : ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳ ಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಗೊಂಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾ ಯಿತು. ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಶಿಫಾರಸ್ಸಿನ ಮೂಲಕ ಈ ಆಯ್ಕೆ ನಡೆದಿದೆ. ಈ ಮೊದಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ.ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೆಶಕರು ಆಯ್ಕೆಗೊಂಡಿದ್ದು, ಬಳಿಕ ಡಾ.ಎಂಎನ್ ಆರ್ ಬಳಗದ ರವಿರಾಜ ಹೆಗ್ಡೆ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಇದೀಗ ಡಾ.ದೇವಿಪ್ರಸಾದ್ ಶೆಟ್ಟಿಯವರು ಕೂಡ ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂ ಲಕ ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಂಗಳೂರು ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿರುವ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಇವರು ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳಪುವಿನಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಭೂಮಿ ಪೂಜೆ
Posted On: 21 May 2025, 02:57 PM
ಉಚ್ಚಿಲ : ಬೆಳಪುವಿನಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಯ ಮೂಲಕ ಗುಣಾತ್ಮಕ ಶಿಕ್ಷಣ ನೀಡುವ ಕನಸು. 5 ಕೋಟಿ ಅನುದಾನ ಬಿಡುಗಡೆಯಾಗಿದ್ದು, 18 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬೆಳಪು ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ನಡೆಸಲ್ಪಡುವ ಬೆಳಪುವಿನ ಮೌಲಾನಾ ಆಜಾದ್ ಮಾದರಿ ಶಾಲೆಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಪು ಗ್ರಾ.ಪಂ.ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬೆಳಪುವಿನಲ್ಲಿ ಈಗಾಗಲೇ ಪಾಲಿಟೆಕ್ನಿಕ್ ಕಾಲೇಜು, ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ, ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಗತಿಯಲ್ಲಿದೆ. ಕೈಗಾರಿಕಾ ಪಾಕ್೯ ಕಾರ್ಯಾಚರಿಸುತ್ತಿದೆ. ಬೆಳಪು ಗ್ರಾಮ ಬಡ ಗ್ರಾಮವಾಗಿದ್ದು ಆರ್ಥಿಕವಾಗಿ ಹಿಂದುಳಿದ ಜನರಿಗೆ ಶೈಕ್ಷಣಿಕ, ಕೈಗಾರಿಕೆ, ಉದ್ಯೋಗ, ವಸತಿಯ ಯೋಜನೆಯ ಅವಕಾಶ ಸಿಗಬೇಕಾಗಿದೆ. ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಉತ್ತಮ ಮೌಲ್ಯಾಧಾರಿತ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವುದು ನಮ್ಮ ಉದ್ದೇಶ. ಇದರ ಪಕ್ಕದಲ್ಲಿಯೇ 17 ಎಕರೆಯಲ್ಲಿ ಐಪಿಎಲ್ ಮಾದರಿಯ ಕ್ರೀಡಾಂಗಣಕ್ಕೆ ಕ್ರಿಕೆಟ್ ಬೋರ್ಡ್ ಸಮ್ಮತಿಸಿದ್ದು, ಜಿಲ್ಲಾಧಿಕಾರಿ ಜಾಗವನ್ನು ಮೀಸಲಿರಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅವಕಾಶದ ಜೊತೆಗೆ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳು ಆಡುವ ಸನ್ನಿವೇಶ ನಿರ್ಮಾಣವಾಗುತ್ತದೆ ಎಂದರು. ಬೆಳಪು ಗ್ರಾ.ಪಂ. ಉಪಾಧ್ಯಕ್ಷರಾದ ಶೋಭಾ ಭಟ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಯು.ಸಿ. ಶೇಖಬ್ಬ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಮನೋಹರ್, ಪಂಚಾಯತ್ ಸದಸ್ಯರಾದ ಶರತ್ ಕುಮಾರ್ ಕುಮಾರ್, ಸುಲೇಮಾನ್, ಸೌಮ್ಯ, ರೂಪ, ನಫೀಸ ಮತ್ತಿತರರು ಉಪಸ್ಥಿತರಿದ್ದರು. ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಎಚ್ ಸ್ವಾಗತಿಸಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಪೂರ್ಣಿಮ ಚೂರಿ ಪ್ರಸ್ತಾವನೆಗೈದರು. ಸಂತೋಷ್ ಕುಮಾರ್ ನಿರೂಪಿಸಿ, ವಂದಿಸಿದರು. ಉಚ್ಚಿಲ ಮಹಾಲಕ್ಷ್ಮಿ ದೇವಳದ ಅರ್ಚಕ ಶ್ರೀನಿವಾಸ ಉಪಾಧ್ಯಾಯ ಭೂಮಿ ಪೂಜೆಯ ವಿಧಿ ವಿಧಾನ ನೆರವೇರಿಸಿ, ಬೆಳಪು ಖತೀಬ್ ಮಿನಾರ ಮಸೀದಿ ಧರ್ಮಗುರು ಎಂ.ಡಿ.ಅರ್ಷಾದ್ ರೇಝ ದುವಾ ನೆರವೇರಿಸಿದರು.
1 ಕೋಟಿ ಅನುದಾನದಲ್ಲಿ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಗುದ್ದಲಿ ಪೂಜೆ
Posted On: 20 May 2025, 07:08 PM
ಪಡುಬಿದ್ರಿ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ರಿಪ್ - ರ್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಮಂಗಳವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಶಾಂತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
Posted On: 19 May 2025, 06:17 PM
ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಸೋಮವಾರ ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಮೋನೆ 57 ಅಡಿಯಲ್ಲಿ ಸಲ್ಲಿಸಿದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಡಾ.ಪ್ರತಿಭಾ ಆರ್., ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೇ.29 - 30 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳ - ನೂತನ ಧ್ವಜಸ್ತಂಭದ ಮರದ ಆಗಮನ ಮೆರವಣಿಗೆ ; ನಿಧಿಕುಂಭ ಸ್ಥಾಪನೆ
Posted On: 19 May 2025, 12:51 PM
ಪಡುಬಿದ್ರಿ : ಸುಮಾರು 30 ಕೋಟಿ ವೆಚ್ಚದಲ್ಲಿ ಶಾಸ್ತ್ರೀಯ ನೆಲೆಗಟ್ಟಿನಲ್ಲಿ, ಶಿಲ್ಪ ವಿನ್ಯಾಸಗಳೊಂದಿಗೆ ಪರಿಷ್ಕೃತಗೊಳಿಸಿ ಪುನರಚಿಸಿ ಜೀರ್ಣೋದ್ಧಾರ ಕಾರ್ಯಗಳಿಗೆ ಸಂಕಲ್ಪಿಸಲಾಗಿರುವ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮೇ.29 ರಂದು ನೂತನ ಧ್ವಜಸ್ತಂಭದ ಮರದ ಆಗಮನ ಮೆರವಣಿಗೆ ಹಾಗೂ ಮೇ.30ರಂದು ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ನಿಧಿಕುಂಭ ಸ್ಥಾಪನೆಯು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ| ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಡುಬಿದ್ರಿಯಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರ್ಕಳ - ಹೆಬ್ರಿ ಪರಿಸರದಲ್ಲಿ ಶ್ರೀ ದೇಗುಲದ ಧ್ವಜಸ್ತಂಭಕ್ಕಾಗಿ ದಾನಿಗಳ ಸಹಕಾರದಿಂದ ಈಗಾಗಲೇ ಸುಮಾರು 65 ಅಡಿ ಎತ್ತರದ ಬೋಗಿಯ ಮರವೊಂದನ್ನು ಆರಿಸಲಾಗಿದೆ. ಮೇ. 29ರಂದು ಅಜೆಕಾರು, ಕಾರ್ಕಳ, ಜೋಡುರಸ್ತೆ, ಬೆಳ್ಮಣ್ ಮಾರ್ಗವಾಗಿ ಈ ನೂತನ ಧ್ವಜಸ್ತಂಭದ ಮರವು ಆಗಮಿಸಲಿದ್ದು ಭಕ್ತರು ಇದು ಸಾಗಿ ಬರುವ ಹಾದಿಯಲ್ಲಿ ಅಲ್ಲಲ್ಲಿ ಸ್ವಾಗತಿಸಿ ಬೀಳ್ಕೊಡಲಿರುವರು. ಅಂದು ಸಂಜೆಯ ವೇಳೆಗೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಅದನ್ನು ಸ್ವಾಗತಿಸಿ ವೈಭವದ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರ ಪಡುಬಿದ್ರಿಗೆ ತರಲಾಗುವುದು. ಮೇ 30ರಂದು ಶ್ರೀ ಕ್ಷೇತ್ರದಲ್ಲಿನ ಉಪಸ್ಥಾನ ಸಾನ್ನಿಧ್ಯ ಶ್ರೀ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಭಕ್ತರ ಭಕ್ತಿಯ ಸಂಕೇತವಾಗಿ ನಿಧಿ ಕುಂಭ ಸ್ಥಾಪನೆಯ ಕಾರ್ಯವು ಬೆಳಿಗ್ಗೆ ಗಂಟೆ 7:12ರ ಮುಹೂರ್ತದಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯುವ ಆಗಮೋಕ್ತ ವಿಧಿ ವಿಧಾನಗಳ ಸಂದರ್ಭದಲ್ಲಿ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಅನುಗ್ರಹ ಸಂದೇಶ ನೀಡಲಿರುವರು. ಈ ನಿಧಿಕುಂಭದಲ್ಲಿ ಭಕ್ತರಿಗೆ ಶುದ್ಧ ಚಿನ್ನ, ಬೆಳ್ಳಿ, ನವರತ್ನಗಳನ್ನು ಅರ್ಪಿಸುವ ಸದವಕಾಶಗಳಿದ್ದು ವಾರದ ಮುಂಚಿತವಾಗಿಯೇ ಈ ಚಿನ್ನ, ಬೆಳ್ಳಿಯ ನಾಣ್ಯಗಳನ್ನು ಶ್ರೀ ದೇವಸ್ಥಾನದಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಭಕ್ತರು ಮನೆಯಿಂದ ತರುವ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಶ್ರೀ ದೇಗುಲದ ಕಚೇರಿಗೆ ತೋರಿಸಿ ಅರ್ಪಿಸಬಹುದು. ಕಾರ್ಕಳದ ಗುತ್ತಿಗೆದಾರರಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖಾ ನಿಬಂಧನೆಗಳ ಅನುಸಾರವಾಗಿ ಲೋಕೋಪಯೋಗಿ ಇಲಾಖಾ ಅನುಮತಿ ಸಹಿತವಾಗಿ ಈಗಾಗಲೇ ನಿರ್ಮಾಣ ಕಾರ್ಯಗಳು ಆರಂಭಗೊಂಡಿದ್ದು ಸಾಮಾನ್ಯ ನೆಲಮಟ್ಟದಲ್ಲಿಯವರೆಗೆ ಕಾರ್ಯಗಳು ಪ್ರಗತಿಯಲ್ಲಿವೆ ಎಂದರು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ರವೀಂದ್ರನಾಥ ಜಿ.ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪಿ.ರಾಘವೇಂದ್ರ ನಾವಡ, ಕಾರ್ಯದರ್ಶಿ ಶ್ರೀನಾಥ ಹೆಗ್ಡೆ ನಡ್ಸಾಲು ಗುತ್ತು, ಶ್ರೀ ದೇವಳದ ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಅರ್ಚಕರಾದ ಗುರುರಾಜ್ ಭಟ್, ಜೀರ್ಣೋದ್ದಾರ ಸಮಿತಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕುಕ್ಕುಂಜ, ಮಲಂಗೋಳಿ ರಸ್ತೆ ದುರಸ್ತಿಗೊಳಿಸುವಂತೆ ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ಮನವಿ
Posted On: 18 May 2025, 04:58 PM
ಕಾಪು : ತಾಲೂಕಿನ ಕುತ್ಯಾರು ಗ್ತಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಜ, ಮಲಂಗೋಳಿ ಭಾಗದ ರಸ್ತೆ ದುರಸ್ತಿ ಸೇರಿದಂತೆ ಊರಿನ ಹಲವು ಬೇಡಿಕೆಗಳ ಕುರಿತು ಬಿಜೆಪಿ ಪಕ್ಷದ ಹಿರಿಯರಾದ ಪ್ರಭಾಕರ್ ಶೆಟ್ಟಿ ಪಡುಮನೆ ಕಳತ್ತೂರು ಮುಂದಾಳತ್ವದಲ್ಲಿ ಭಾನುವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಶಾಸಕರು ಶೀಘ್ರದಲ್ಲಿ ಎಲ್ಲಾ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಉದಯ ಕುಲಾಲ್, ಪ್ರದೀಶ್ ಶೆಟ್ಟಿ, ಪ್ರಥ್ವಿರಾಜ್ ಆರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣ : ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು
Posted On: 18 May 2025, 04:15 PM
ಕಟಪಾಡಿ : ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರನಾಡೆಂದು ಹೇಳಬಹುದು. ಪಾಜಕ ಕ್ಷೇತ್ರ, ದುರ್ಗಾದೇವಿ ಸನ್ನಿಧಾನ, ಪರಶುರಾಮ ಸನ್ನಿಧಾನವನ್ನು ಸುತ್ತುವರಿಯುವ ಮೂಲಕ ಕಟಪಾಡಿ ಏಣಗುಡ್ಡೆಯ ಪಂಪಾ ಕ್ಷೇತ್ರದ ಅಯ್ಯಪ್ಪ ಸನ್ನಿಧಾನವು ಪಾವಿತ್ರ್ಯ ತರುವ ಕಾರ್ಯವಾಗಿದೆ. ಹಿಂದು ಧರ್ಮದ ಉಳಿವಿನೊಂದಿಗೆ ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣವಾಗಿದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಹೇಳಿದರು. ಅವರು ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಕಟಪಾಡಿಯ ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ 40 ವರ್ಷಗಳ ನಂತರ ಸುಮಾರು 5 ಕೋಟಿ ವೆಚ್ಚದ ದೇವಳ ನಿರ್ಮಾಣದ ಕನಸು ಕಂಡಿದ್ದಾರೆ. ನನಸಾಗಲಿ ಎಂದರು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸಲು 30 ಸೆಂಟ್ಸ್ ನಿವೇಶನವನ್ನು ದಾನವಾಗಿ ನೀಡಿರುವ ಯುವ ಉದ್ಯಮಿ ರಿಶಾನ್ ಟಿ ಮತ್ತು ಪ್ರಮೀಳಾ ದಂಪತಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಚಂದ್ರಹಾಸ ಗುರುಸ್ವಾಮಿ ಮುಂಬೈ, ರಾಘು ಪೂಜಾರಿ ಕಲ್ಮಂಜೆ, ದಯಾನಂದ ವಿ ಬಂಗೇರ, ಪಲ್ಲಿ ಲಕ್ಮೀನಾರಾಯಣ ಹೆಗ್ಡೆ, ಶಶಿಧರ ವಾಗ್ಳೆ, ಶಶಿಧರ ಶೆಟ್ಟಿ ಮುಂಬೈ, ಯೋಧ ಸಚಿನ್ ಕರ್ಕೇರ, ನವೀನ್ ಅಮೀನ್ ಶಂಕರಪುರ, ಶಿವಪ್ರಸಾದ್ ಕಟಪಾಡಿ, ಸಂತೋಷ್ ಸುವರ್ಣ ಬೊಳ್ಜೆ, ರಾಧಾಕೃಷ್ಣ ಮೆಂಡನ್, ರಾಜೇಶ್ ಮಸ್ಕತ್, ಭುವನ್, ಗುರುಸ್ವಾಮಿ ಸುರೇಶ್ ಜತ್ತನ್ ಕಟಪಾಡಿ, ಅಧ್ಯಕ್ಷ ರಿಯಾನ್ ಟಿ ಕಟಪಾಡಿ, ಕಾರ್ಯಾಧ್ಯಕ್ಷ ಕೇಶವ ಕುಂದರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜಿ.ಸನಿಲ್ ಅಚ್ಚಡ ಕಟಪಾಡಿ ಉಪಸ್ಥಿತರಿದ್ದರು. ಕ್ಷೇತ್ರದ ತಂತ್ರಿಗಳಾದ ವೆ| ಬ್ರ| ಶ್ರೀ| ಪ್ರಕಾಶ ವಿ. ಹೊಳ್ಳ ಶಕ್ತಿನಗರ ಮಂಗಳೂರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಸಚಿನ್ ಕರ್ಕೇರ ಪ್ರಾರ್ಥಿಸಿ, ಪತ್ರಕರ್ತ ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿ, ನಿರೂಪಿಸಿದರು.
