Updated News From Kaup
ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
Posted On: 26 Sep 2021, 10:35 PM
ಶಿರ್ವ: ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಬಹುಮಾನ ವಿತರಣೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ ಬ್ಯಾಚಿನ ಹಳೆ ವಿದ್ಯಾರ್ಥಿನಿ ಐರಿನ್ ಮೆಂಡೋನ್ಸಾ ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಡೆದ ಸತ್ಯ ಸುಬ್ರಹ್ಮಣ್ಯ ವಿ.ಎಸ್ (ಬಿ.ಸಿ.ಎ) 4ನೇ ರ್ಯಾಂಕ್, ಸ್ನಾತಕೋತ್ತರ ವಾಣಿಜ್ಯದಲ್ಲಿ 9ನೇ ರ್ಯಾಂಕ್ ಪಡೆದ ಲವಿಟಾ ಮೊರಾಸ್ ಹಾಗೂ ಸಾಧನೆ ಮಾಡಿದ ಅಧ್ಯಾಪಕ ವೃಂದದ ಅವರನ್ನು ಕಾಲೇಜಿನ ವತಿಯಿಂದ ಸಮ್ಮಾನಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಶ್ವನಾಥ್ ರವರು ಕಾಲೇಜಿನ ಸರ್ವತೋಮುಖ ಬೆಳವಣಿಗಾಗಿ ಸಂಘದ ವತಿಯಿಂದ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನಗದು ಮೂಲಕ ಕಾಲೇಜಿನ ಸಂಚಾಲಕರು ಹಾಗೂ ಪ್ರಾಂಶುಪಾಲರಿಗೆ ಹಸ್ತಾಂತರಿಸಿ ವಿದ್ಯೆ ಕಳಿಸಿದ ಸಂಸ್ಥೆಗಳಿಗೆ ತಾವು ಸದಾ ಋಣಿ, ಕಾಲೇಜಿನ ಕೀರ್ತಿ ಬೆಳೆಸಿದ ರ್ಯಾಂಕ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಇನ್ನು ತಮ್ಮಿಂದ ಆಗುವಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಆಯೋಜಿಸಲು ಕಾಲೇಜಿನ ವತಿಯಿಂದ ಅನುವುಮಾಡಿಕೊಡಬೇಕು ಎಂದು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೇನ್ನಿಸ್ ಅಲೆಕ್ಸಾಂಡರ್ ಡೇಸರವರು ನವೀಕೃತಗೊಂಡ ಸುಸಜ್ಜಿತ ಕಂಪ್ಯೂಟರುಗಳನ್ನು ಉದ್ಘಾಟಿಸಿ ಆಶೀರ್ವದಿಸಿದ್ದರು. ಕಾಲೇಜಿನ ದೊಡ್ಡ ಆಸ್ತಿ ಎಂದರೆ ಅದು ವಿದ್ಯಾರ್ಥಿಗಳೇ. ಎಲ್ಲಾ ವಿದ್ಯಾರ್ಥಿಗಳು ಅವರವರ ವಿವಿಧ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿರುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಬೆಳವಣಿಗೆಗಳಲ್ಲಿ ಶಿಕ್ಷಕರು, ಹೆತ್ತವರು ಹಾಗೂ ಪೋಷಕರ ಪಾತ್ರ ಮಹತ್ವದಾಗಿದೆ. ಹಳೆವಿದ್ಯಾರ್ಥಿ ಸಂಘ ವತಿಯಿಂದ ಕಲ್ಪಿಸುವ ಪ್ರತಿಯೊಂದು ಕೊಡುಗೆಯು ಶಿಕ್ಷಣ ಸಂಸ್ಥೆಯ ಬೆಳವಣಿಗೆ ಹಾಗೂ ಅವರ ಪ್ರೀತಿಪಾತ್ರ ದೊಡ್ಡದಾಗಿದೆ, ಎಲ್ಲರಿಗೂ ಒಳಿತಾಗಲಿ ಈ ಕೋವಿಡ್ ಅಂತ ಸಂಕಷ್ಟಗಳು ದೂರವಾಗಿ ಎಲ್ಲರೂ ನೆಮ್ಮದಿಯಿಂದ ಸುಖ ಜೀವನ ನಡೆಸಲಿ ಎಂದು ಹಾರೈಸಿದರು. ಕಾಲೇಜಿನ ವಾರ್ಷಿಕ ಚಟುವಟಿಕೆಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಾಚಿಸಿದರು. ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಬಗ್ಗೆ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಜಗದೀಶ್ ಆಚಾರ್ಯ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸನ್ಮಾನ ಪಡೆದ ವಿದ್ಯಾರ್ಥಿಗಳು ಮಾತನಾಡಿದರು. ಶೈಕ್ಷಣಿಕ ಬಹುಮಾನಗಳ ಪಟ್ಟಿಯನ್ನು ಶ್ರೀ ವಿಠಲ್ ನಾಯಕ್ ರವರು ವಾಚಿಸಿದರು. ದತ್ತಿ ಬಹುಮಾನಗಳ ಪಟ್ಟಿಯನ್ನು ದಿವ್ಯಶ್ರೀ ರವರು ವಾಚಿಸಿದರು.ಕ್ರೀಡೆ ಮತ್ತು ಆಟಗಳ ಬಹುಮಾನಗಳ ಪಟ್ಟಿಯನ್ನು ಜೆಫ್ ಡಿಸೋಜಾ ವಾಚಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಮುಖ್ಯ ಅತಿಥಿಗಳು ಹಾಗೂ ಅಧ್ಯಕ್ಷರು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿ ಅಧೀಕ್ಷಕಿ ಡೊರಿನ್ ಡಿ'ಸಿಲ್ವ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಜೆಸಿಂತಾ ಡಿಸೋಜ, ಆಡಳಿತ ಮಂಡಳಿಯ ಸದಸ್ಯ ಲೀನಾ ಮಚಾದೊ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶೈಲ ವಿಯೋಲ ಕ್ಯಾಸ್ಟಲಿನೋ ಹೆತ್ತವರು ಹಾಗೂ ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಕು.ಯಶೋದಾ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ನಾಯಕಿ ದಾಕ್ಷಾಯಿಣಿ ವಂದಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.
ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ, ಮಹಿಳಾ ವೇದಿಕೆ ಅಶೋಕನಗರ
Posted On: 26 Sep 2021, 10:25 PM
ಮಂಗಳೂರು : ರಾತ್ರಿ 10 ಗಂಟೆಗೆಯಿಂದ ಮಧ್ಯರಾತ್ರಿ 3.15 ರವರೆಗೂ ಉಬ್ಬು ( Humps ) ಗಳಿಗೆ ಪೈಂಟ್ ಕೊಡುವ ಕೆಲಸ ನಿನ್ನೆ ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಅಶೋಕನಗರ ವತಿಯಿಂದ ಲೇಡಿಹಿಲ್ ನಿಂದ ಉರ್ವಸ್ಟೋರ್ ವರೆಗೆ ನಡೆಯಿತು. ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಅಶೋಕ ನಗರ ವಲಯದ ಎಲ್ಲ ಮಹಿಳೆಯರು ಯಾವುದೇ ಕೆಲಸಕ್ಕೆ ಹಿಂಜರಿಯದೆ ಪ್ರತಿಯೊಂದು ಕೆಲಸಕ್ಕೂ ತುಂಬ ಉತ್ಸಾಹದಿಂದ ಭಾಗವಹಿಸಿದ್ದರು. M S Enterprises ಮಾಲೀಕರಾದ ಸಚಿನ್ ಹಾಗೂ ಉರ್ವ ಆರಕ್ಷಕ ಠಾಣೆ ಸಿಬ್ಬಂದಿ ವರ್ಗದವರು ಸಹಕರಿಸಿದ್ದರು. ಈ ಕೆಲಸದಲ್ಲಿ ಸುಮಾರು 15 ಮಹಿಳಾ ಸದಸ್ಯರು ಹಾಜರಿದ್ದು, ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ, ಬಿರುವೆರ್ ಕುಡ್ಲ ಕೇಂದ್ರೀಯ ಸಮಿತಿ ಸದಸ್ಯರಾದ ಸುನಿಲ್ ಮತ್ತು ಶರಣ್ ಕೂಡ ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆಗೆ ಚಾಲನೆ
Posted On: 26 Sep 2021, 09:22 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವ ತಯಾರಿಗಾಗಿ ಪುರಸಭಾ ವ್ಯಾಪ್ತಿಯ ೨೩ ವಾರ್ಡುಗಳ ವಾರ್ಡ್ ಸಮಿತಿ ರಚನೆಗೆ ಸೆ. ೨೬ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಅಮ್ಮನ ಪ್ರೇರಣೆಯಂತೆ ಪ್ರತಿಯೊಬ್ಬ ಭಕ್ತರು ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಪ್ರತೀ ಮನೆಗೆ ಜೀರ್ಣೋದ್ದಾರದ ಸುದ್ದಿ ತಲುಪಿಸಲು ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಗಳಲ್ಲಿಯೂ ಗ್ರಾಮ ಸಮಿತಿಯನ್ನು ರಚನೆ ಮಾಡಲಾಗುವುದು. ಈ ಸಮಿತಿಯಲ್ಲಿ ಪ್ರತಿಯೊಬ್ಬ ಭಕ್ತರು ತಮ್ಮನ್ನು ತಾವು ತೊಡಗಿಸಿಕೊಂಡು ದೇಗುಲದ ಜೀರ್ಣೋದ್ಧಾರಕ್ಕೆ ತನು ಮನ ಧನದ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾಪು ಪುರಸಭಾ ವ್ಯಾಪ್ತಿಯ ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ ಅವರ ಉಪಸ್ಥಿತಿಯಲ್ಲಿ ಮಲ್ಲಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಭಾರತ್ ನಗರ, ದಂಡತಿರ್ಥ, ಕಲ್ಯಾ ಮತ್ತು ಕೋತಲಕಟ್ಟೆ ವಾರ್ಡ್ಗಳಲ್ಲಿ ಸಮಿತಿ ರಚನೆ ನಡೆಸಲಾಯಿತು. ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗೌರವ ಸಲಹೆಗಾರ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ಮಾಧವ ಪಾಲನ್, ಪ್ರಮುಖರಾದ ನಿರ್ಮಲ್ ಕುಮಾರ್ ಹೆಗ್ಡೆ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಹಾಗೂ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಮೂಡುಬೆಳ್ಳೆ : ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗವಾಹಿನಿ ಘಟಕದ ವತಿಯಿಂದ ವನಮಹೋತ್ಸವ, ಭಗವಧ್ವಜ ಸ್ಥಾಪನೆ
Posted On: 26 Sep 2021, 09:14 PM
ಕಾಪು : ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಮಾತೃ ಶಕ್ತಿ ಹಾಗೂ ದುರ್ಗವಾಹಿನಿ ಮೂಡುಬೆಳ್ಳೆ ಘಟಕ ವತಿಯಿಂದ ಕುಂತಳ ನಗರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಹಾಗೂ ಭಗವಧ್ವಜ ಸ್ಥಾಪಿಸಲಾಯಿತು. ಈ ಸಂದರ್ಭದಲ್ಲಿ ಕಟ್ಟಿಂಗೇರಿ ದೇವಸ್ಥಾನದ ಧರ್ಮದರ್ಶಿಗಳಾದ ದೇವದಾಸ್ ಹೆಬ್ಬಾರ್ ಹಾಗೂ ಕಾಪು ತಾಲೂಕು ಕಾರ್ಯವಾಹ ಸಚಿನ್ ಶೆಟ್ಟಿ ವಿ.ಹಿಂ.ಪ ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು, ಕಾಪು ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಕುಮಾರ್ ಮೂಡುಬೆಳ್ಳೆ, ಶಿರ್ವ ವಿ.ಹಿಂ.ಪ ವಲಯ ಅಧ್ಯಕ್ಷರಾದ ವಿಖ್ಯಾತ್ ಭಟ್ ಮೂಡುಬೆಳ್ಳೆ ಹಾಗೂ ಬೆಳ್ಳೆ ಘಟಕದ ಅಧ್ಯಕ್ಷರಾದ ವಿಜೇತ್ ಭಟ್, ಸ್ಥಳೀಯ ಉದ್ಯಮಿ ಅಶೋಕ್ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಕಲಚೇತನ ಕಲಾವಿದ ಗಣೇಶ್ ಕುಲಾಲ್ ಪಂಜಿಮಾರ್ ಕೈ ಚಲಕದಿ ಮೂಡಿದ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಸಚಿವ ವಿ. ಸುನಿಲ್ ಕುಮಾರ್ ಚಿತ್ರ - ಹಸ್ತಾಂತರ
Posted On: 26 Sep 2021, 12:28 PM
ಕಾಪು : ಕಲೆಗೆ ಬೆಲೆ ಕಟ್ಟಲಾಗದು, ಚಿತ್ರಕಲೆಯಲ್ಲಿ ಸಾಧನೆಗೈದ ಮುಂದಿನ ಯುವ ಮನಸ್ಸುಗಳಿಗೆ ಮಾದರಿಯಾದ ವಿಕಲಚೇತನ ಕಲಾವಿದ ಗಣೇಶ್ ಕುಲಾಲ್ ಪಂಜಿಮಾರ್ ಇವರ ಕೈ ಚಲಕದಲ್ಲಿ ಮೂಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಕಾರ್ಕಳದ ಶಾಸಕರು ಹಾಗೂ ಸಚಿವರಾದ ವಿ ಸುನಿಲ್ ಕುಮಾರ್ ಅವರ ಚಿತ್ರವನ್ನ ಗಣೇಶ್ ಪಂಜಿಮಾರ್ ಅವರು ಅತಿಥಿ ಗಣ್ಯರ ಜೊತೆ ಅವರಿಗೆ ನೀಡಿದರು. ಈ ಸುಂದರ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಕಾಪು ವಲಯದ ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ ಶಂಕರಪುರ, ಕಾಪು ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಉದಯ ಕುಲಾಲ್, ಸರ್ವಜ್ಞ ಆಸರೆ ಕಿರಣ ಬಳಗ ಇದರ ಸಂಚಾಲಕರು ಪ್ರಭಾಕರ್ ಕುಲಾಲ್ ಇನ್ನ, ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಸುಹಾಸ್ ಶೆಟ್ಟಿ, ಅವಿನಾಶ್ ಶೆಟ್ಟಿ, ಸುರೇಂದ್ರ ವರಂಗ, ಸಂದೇಶ್ ಕುಲಾಲ್, ಸಂದೀಪ್ ಕುಲಾಲ್ ಮಂಜರಪಲ್ಕೆ ಬೋಳ, ಪ್ರಭಾಕರ್ ಕುಲಾಲ್ ಬೇಲಾಡಿ ಉಪಸ್ಥಿತರಿದ್ದರು.
ತಂತ್ರಜ್ಞಾನದೊಂದಿಗೆ ಸಂಶೋಧನಾ ಮನಸ್ಥಿತಿ ಬೆಳೆಸಿ ಉತ್ತಮ ಉದ್ಯೋಗ ಪಡೆಯಿರಿ : ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್
Posted On: 26 Sep 2021, 12:01 PM
ಮೂಡಬಿದ್ರಿ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ, ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಡಿಸಿಕೊಳ್ಳಬೇಕೆಂದು ಮೂಡಬಿದ್ರೆ ಧವಳಾ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಏರ್ಪಡಿಸಿದ ವೃತ್ತಿ ಮಾರ್ಗದರ್ಶನ ವೆಬಿನರ್ ನಲ್ಲಿ ಬಿಕಾಂ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗ-ಅವಕಾಶಗಳ ಕೌಶಲ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಸುದರ್ಶನ್ ಕುಮಾರ್ ರವರು ಎಲ್ಲರನ್ನೂ ಸ್ವಾಗತಿಸಿ ಸರಿಯಾದ ಶಿಕ್ಷಣ ಜೊತೆಗೆ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ವಿಪುಲ ಅವಕಾಶಗಳನ್ನು ಪಡೆಯಬಹುದು ಎಂದು ಪ್ರಾಸ್ತಾವಿಕವಾಗಿ ನುಡಿದರು. ಈ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಶಿಕ್ಷಕರು-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 30 ವಿದ್ಯಾರ್ಥಿಗಳು ಭಾಗವಹಿದ್ದರು. ವಿಭಾಗದ ಸಂಯೋಜಕರಾದ ಪ್ರವೀಣ್ ಕುಲಕರ್ಣಿಯವರು ಅತಿಥಿಗಳನ್ನು ಪರಿಚಯಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ರಾಜ್ಯದ ಐ.ಟಿ.ಐ. ಕಾಲೇಜುಗಳು 5000 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ : ಸಚಿವ ಡಾ.ಅಶ್ವಥ್ ನಾರಾಯಣ್
Posted On: 26 Sep 2021, 11:50 AM
ಉಡುಪಿ : ರಾಜ್ಯದಲ್ಲಿನ 150 ಐ.ಟಿ.ಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೆಲ್ದರ್ಜೆಗೆ ಏರಿಸಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ&ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಉಪ್ಪೂರುನಲ್ಲಿ ಸರಕಾರಿ ಉಪಕರಣಾಗಾರ ಮತ್ತು ನೂತನ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 1200 ಸರಕಾರಿ ಮತ್ತು ಖಾಸಗಿ ಐ.ಟಿ.ಐ ಕಾಲೇಜುಗಳಿದ್ದು, ಸರಕಾರಿ ಐಟಿಐ ಕಾಲೇಜುಗಳಲ್ಲಿ ಕೌಶಲ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ ರಾಜ್ಯ ಸರ್ಕಾರವು ನಿರ್ಧರಿಸಿದ್ದು, 1000 ಕೋಟಿ ಸರ್ಕಾರವು ಉಳಿದ 4000 ಕೋಟಿಗಳನ್ನು ಟಾಟಾ ಟೆಕ್ನಾಲಜಿ ಕಾನ್ ಸಲ್ಟೋಯಿಂ ಮೂಲಕ ರಾಜ್ಯದ ಪ್ರತಿ ತಾಲೂಕಿನಲ್ಲಿ ಒಂದೊಂದು ಐ.ಟಿ.ಐ ಕಾಲೇಜುಗಳಲ್ಲಿ , ವಿಶ್ವ ದರ್ಜೆಯು ಅಡ್ವಾನ್ಸ್ ಕೈಗಾರಿಕಾ 4.0 ತಂತ್ರಜ್ಞಾನ ತರಬೇತಿ ನೀಡಲು ಅಗತ್ಯವಿರುವ ವರ್ಕ್ಶಾಪ್, ಡಿಸೈನ್ ಲ್ಯಾಬ್ ಗಳ ನಿರ್ಮಾಣಕ್ಕೆ ಬಳಸಲಾಗುವುದು ಇದಕ್ಕಾಗಿ ಪ್ರತಿ ಕೇಂದ್ರಕ್ಕೆ 30 ಕೋಟಿ ರೂ ವೆಚ್ಚವಾಗಲಿದೆ. ಈ ಯೋಜನೆ ಅಕ್ಟೋಬರ್ 2 ರಂದು ಉದ್ಘಾಟನೆಗೊಳ್ಳಲಿದೆ ಎಂದರು. ಸರ್ಕಾರಿ ಉಪಕರಣಾಗಾರದಲ್ಲಿ ವಿದ್ಯಾರ್ಥಿಗಳಿಗೆ 21 ಶತಮಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ಎಮರ್ಜಿಂಗ್ ತಂತ್ರಜ್ಞಾನವನ್ನು ಕಲಿಸಲಾಗುತ್ತಿದೆ ಇದರಿಂದ 100% ಖಚಿತ ಉದ್ಯೋಗವಕಾಶಗಳಿದ್ದು, ಇಡೀ ವಿಶ್ವಕ್ಕೆ ಏರೊಸ್ಪೇಸ್ ಉಪಕರಣ ಉತ್ಪಾದನೆಯಲ್ಲಿ ಕರ್ನಾಟಕ ನಂ 1 ಸ್ಥಾನ ಪಡೆದಿದ್ದು , ಭಾರತ ಸರ್ಕಾರದಿಂದಲೇ 3 ಲಕ್ಷ ಕೋಟಿ ಮೊತ್ತದ ಆರ್ಡರ್ ದೊರೆತಿದೆ, ಇದಲ್ಲದೇ ಇತರೆ ಕಂಪೆನಿಗಳಿಂದ ಆರ್ಡರ್ ದೊರೆತಿದೆ.ರ ಈ ಕಾರ್ಯಗಳನ್ನು ನಿರ್ವಹಿಸಲು ಕೌಶಲ್ಯಯುತ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಜಿಟಿಟಿಸಿ ಕಾಲೇಜುಗಳಲ್ಲಿನ ತಂತ್ರಜ್ಞಾನ ಆಧರಿತ ಕೋರ್ಸ್ಗಳಿಗೆ ಸೇರ್ಪಡೆಯಾಗಬೇಕು ಎಂದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣರಾಜ ಕೋಟ್ಯಾನ್, ಜಿಟಿಟಿಸಿ ಮೈಸೂರು ನ ವ್ಯವಸ್ಥಾಪಕ ಲಿಂಗರಾಜ ಸಣ್ಣಮನಿ, ಜಿಟಿಟಿಸಿ ಉಪ್ಪೂರುನ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಟೊಯೋಟಾ ಸಂಸ್ಥೆಯ ರೋಶನ್, ಪ್ರಾಂಶುಪಾಲ ಮಂಜುನಾಥ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಸೆ.27 : ವಿಶ್ವ ಪ್ರವಾಸೋದ್ಯಮ ದಿನ - ಪ್ರವಾಸಿಗೆ ಪ್ರದರ್ಶಿಸಬೇಕಿದೆ ಸಾಂಸ್ಕೃತಿಕ ಸಂಪತ್ತು
Posted On: 26 Sep 2021, 11:38 AM
ಕರಾವಳಿ ಜಿಲ್ಲೆಗಳಲ್ಲಿ ವಿಫುಲವಾದ ಅವಕಾಶಗಳಿದ್ದರೂ ಪ್ರವಾಸೋದ್ಯಮ ಎಷ್ಟು ಅಭಿವೃದ್ಧಿಯಾಗಿದೆ ? ಇಲ್ಲಿರುವ ಪ್ರವಾಸಿ ಆಕರ್ಷಣೆಯ ಎಷ್ಟು ವಿಷಯಗಳು ಈಗಾಗಲೇ ತೆರೆದುಕೊಂಡಿವೆ - ತೆರೆಯಲಾಗಿದೆ ಅಥವಾ ಪರಿಚಯಿಸಲಾಗಿದೆ, ಗೊತ್ತಿಲ್ಲ ! . ಆದರೆ ನಮ್ಮ ಪ್ರವಾಸೋದ್ಯಮ ಸಂಬಂಧಿ ಚಟುವಟಿಕೆಗಳು ಕಡಲ ದಡವನ್ನು ಬಿಟ್ಟು ಪೂರ್ವಾಭಿಮುಖವಾಗಿ ನೋಡಿದ ಹಾಗೆ ಅನಿಸುವುದೇ ಇಲ್ಲ . ಹಾಗಾದರೆ ಕಡಲು - ಘಟ್ಟದ ನಡುವೆ ಏನಿದೆ ? ನಮ್ಮ ಉಭಯ ಜಿಲ್ಲೆಗಳಲ್ಲಿ ಸಮೃದ್ಧವಾಗಿ ಬೆಳೆದಿರುವ ಸಂಸ್ಕೃತಿಯು ವೈಶಿಷ್ಟ್ಯ ಪೂರ್ಣವಾದುದು . ಇಲ್ಲಿ ಜಾನಪದ ಮೂಲದ ಆಚರಣೆ , ನಂಬಿಕೆಗಳಿವೆ . ಆರಾಧನಾ ಕಲೆಗಳು ,ಪ್ರದರ್ಶನ ರಂಗ ಕಲೆಗಳಿವೆ . ಪರ್ವತ , ಗುಡ್ಡ , ಬೆಟ್ಟ , ಜಲಪಾತ , ಝರಿ , ನದಿ , ಹೊಳೆ , ಸಮುದ್ರ ಎಲ್ಲವೂಇದೆ . ಆಹಾರ ಪದಾರ್ಥಗಳ ವೈವಿಧ್ಯತೆ ಇದೆ . ಆಕರ್ಷಕ ಉತ್ಪನ್ನಗಳಿವೆ .ಇತಿಹಾಸ ಹೇಳುವ ಪುರಾತನ ನಿರ್ಮಿತಿಗಳಿವೆ . ವೀರರ , ಪ್ರತಿಭಾವಂತರ , ಸಾಧಕರ , ದೈವೀಪುರುಷರ ಆಡುಂಬೊಲವಿದೆ . ಭವ್ಯವಾಗಿ ಬೆಳೆದ ದೇವಾಲಯ ಸಂಸ್ಕೃತಿಯಿದೆ . ಒಟ್ಟಿನಲ್ಲಿ ಮನಮೋಹಕ ಪರಿಸರದಲ್ಲಿ ಹಾಡು - ಕುಣಿತಗಳಿಗೆ ಪೂರಕವಾಗಿ ವಾದ್ಯಗಳ ಘೋಷ - ಇದಕ್ಕೆ ಬಣ್ಣದ ಮೆರಗಿನೊಂದಿಗೆ ಪ್ರತಿದಿನ ದೈವ - ದೇವಲೋಕಗಳು , ನಾಗ - ಬ್ರಹ್ಮ ಸನ್ನಿಧಾನಗಳು ಸನ್ನಿಹಿತವಾಗುತ್ತವೆ ,ಪುರಾಣ ಪ್ರಪಂಚ ತೆರೆದುಕೊಳ್ಳುತ್ತದೆ .ರಾತ್ರಿಗಳು ಬೆಳ್ಳಂಬೆಳಗಾಗುತ್ತವೆ .ಲೌಕಿಕದಲ್ಲಿ ಅಲೌಕಿಕ ಸಂಭವಿಸುತ್ತದೆ . ಇದನ್ನೆಲ್ಲ ನಮ್ಮ ಸಂಸ್ಕೃತಿ ಎಂಬ ಗೌರವದೊಂದಿಗೆ ಪ್ರವಾಸಿಗೆ ತೋರಿಸಬೇಕು . ವಿವಿಧ ಸೌಲಭ್ಯಗಳೊಂದಿಗೆ ಈ ಸಾಂಸ್ಕೃತಿಕ ಸಂಪತ್ತಿನ ಖಜಾನೆಯ ಬಾಗಿಲು ತೆರೆಯಬೇಕು . ಆಗ ನಮ್ಮ ಸಂಸ್ಕೃತಿ ಜಗಜ್ಜಾಹೀರಾಗುತ್ತದೆ . ಬಹುತ್ವದ , ಬಹು ಆಯಾಮಗಳುಳ್ಳ ಒಂದು ಸಂಸ್ಕೃತಿ ಗೌರವಯುತವಾಗಿ ಪ್ರಸ್ತುತಪಡುವುದು ಹೆಮ್ಮೆಯಲ್ಲವೆ . ಆದರೆ ಪ್ರಸ್ತುತಿ ಹೇಗಾಗುತ್ತಿದೆ ಗೊತ್ತಿಲ್ಲ . ಅಂತಹ ಯಾವುದೇ ಮಾಹಿತಿ ಇಲ್ಲ . ನದಿಯಲ್ಲಿ ಸಾಹಸದ , ರೋಚಕ ದೋಣಿಪ್ರವಾಸದ ಬಗ್ಗೆ ಕೇಳಿ ಬರುತ್ತದೆ , ಸಮುದ್ರದಲ್ಲಿ ಬೋಟಿಂಗ್ ನೋಡ ಸಿಗುತ್ತದೆ . ರೆಸಾರ್ಟ್ ಗಳೂ ಇವೆ. ಬೇಕಾದಷ್ಟು ಬೀಚ್ ಉತ್ಸವಗಳು ಕಡಲ ಕಿನಾರೆಯ ಉದ್ದಕ್ಕೂ ನಡೆಯುತ್ತವೆ .ಬೈಕ್ ರಾಲಿಗಳು ಸಂಘಟಿಸಲ್ಪಡುತ್ತವೆ . ಅಷ್ಟಕ್ಕೆ ಸೀಮಿತವೇ ? ಸಮುದ್ರ ಕಿನಾರೆ : ಸಮುದ್ರ ಎಂದರೆ ಭಯ ಭವ್ಯತೆಯನ್ನು ಹೊಂದಿ ಮನೆಸೂರೆಗೊಳ್ಳುವ ಒಂದು ವಿಸ್ಮಯ . ನದಿಗಳು ಸಾಗರ ಸಂಗಮಿಸುವ ಅಳಿವೆಗಳು ಪ್ರಕೃತಿ ನಿರ್ಮಿಸಿದ ಸುಂದರ ಪ್ರದೇಶ . ನಿಸರ್ಗ ಸಹಜ ದ್ವೀಪಗಳು (ಕುದುರು) ಪ್ರವಾಸಿ ತಾಣಗಳು . ಹಿನ್ನೀರಿನ ನೋಟವು ಅಗಾಧ ಜಲರಾಶಿ . ಇಂತಹ ಆಕರ್ಷಣೀಯ ಪರಿಸರ ಪ್ರವಾಸಿ ತಾಣಗಳಾಗಿವೆ. ಧಾರ್ಮಿಕ ಕ್ಷೇತ್ರಗಳು : ಪ್ರಸಿದ್ಧ ದೇವಾಲಯಗಳು , ಪವಿತ್ರ ನದಿ ಸ್ನಾನ - ತೀರ್ಥಸ್ನಾನದ ನದಿ ದಡಗಳು , ನಾಗ ಸನ್ನಿಧಾನಗಳು , ಮಾರಿಗುಡಿಗಳು , ಬ್ರಹ್ಮಸ್ಥಾನಗಳು , ದೈವಸ್ಥಾನಗಳು , ಸಿರಿ ಕ್ಷೇತ್ರಗಳು (ಆಲಡೆಗಳು) ಧಾರ್ಮಿಕ ಮಹತ್ವಗಳೊಂದಿಗೆ ಯಾತ್ರಿಕರನ್ನು ಸೆಳೆಯುತ್ತವೆ . ಧಾರ್ಮಿಕ ಪ್ರವಾಸೋದ್ಯಮವನ್ನು ವಿಸ್ತರಿಸುವ ಸಾಧ್ಯತೆ ಇದೆ . ಇಂತಹ ದೇವಾಲಯ , ದೈವಸ್ಥಾನಗಳಲ್ಲಿ ಶಿಲ್ಪಕಲೆಯ ಬೆಡಗುಇದೆ .ಮೂರ್ತಿಗಳು , ಕಲ್ಲಿನ - ಲೋಹಗಳ ವಿಶಿಷ್ಟ ಕಲಾಕೃತಿಗಳು - ಕುಸುರಿ ಕೆಲಸದ ಮಣೆ ಮಂಚಗಳಿವೆ ,ದೈವಗಳ ಭಂಡಾರದಲ್ಲಿ ಅಪೂರ್ವ - ಪವಿತ್ರ ವಸ್ತುಗಳಿರುತ್ತವೆ . ಇವೆಲ್ಲದರ ಪ್ರದರ್ಶನಾವಕಾಶ ಒದಗಬೇಕು . ವಾರ್ಷಿಕ ಉತ್ಸವ ಸಂದರ್ಭಗಳಲ್ಲಿ ಇದು ಸಾಧ್ಯ . ಪ್ರಾಚೀನ ಚರ್ಚ್ , ಮಸೀದಿಗಳು ಉಭಯ ಜಿಲ್ಲೆಗಳಲ್ಲಿವೆ .ಇಲ್ಲಿ ನಡೆಯುವ ಉರೂಸ್ , ಚರ್ಚ್ ನ ವಾರ್ಷಿಕ ಹಬ್ಬಗಳು ಹಾಗೂ ವಿಶಿಷ್ಟ ಆಚರಣೆ ಗಳು ಪ್ರವಾಸಿಗೆ ಆಕರ್ಷಣೀಯವಾಗಬಹುದು . ಪುರಾತನ ಚರ್ಚ್ ,ಮಸೀದಿಗಳ ಐತಿಹಾಸಿಕ ಮಹತ್ವ , ರಚನಾ ಶೈಲಿಗಳು ಮಹತ್ವಪೂರ್ಣವಾದುವೇ. ಐತಿಹಾಸಿಕ ಸ್ಥಳಗಳು : ಚರಿತ್ರೆಗೆ ಸಾಕ್ಷಿಯಾಗಿ ಉಳಿದಿರುವ ಅರಮನೆಗಳು , ಕೋಟೆಗಳ ಅವಶೇಷಗಳು , ಅಪೂರ್ವ ದಾರುಶಿಲ್ಪಗಳಿರುವ ಪ್ರಾಚೀನ ಮಠ ಮತ್ತು ಗುತ್ತಿನಮನೆಗಳು , ಚೌಕಿಮನೆಗಳು , ಜಾನಪದ ವೀರರು ಹುಟ್ಟಿದ ಸ್ಥಳ - ನಡೆದಾಡಿದ ಪರಿಸರ - ಸಾಧಕ ವಿದ್ಯೆಕಲಿತ ಐಗಳಮಠ - ಗರಡಿಗಳು, ಪಾರ್ದನ - ಜಾನಪದಗಳಿಗೆ ಸಂಬಂಧಿಸಿದ ಸ್ಥಳಗಳು , ಇತಿಹಾಸ , ಸಂಸ್ಕೃತಿ ಪ್ರೀತಿಯ ಪ್ರವಾಸಿಗಳ ಗಮನ ಸೆಳೆಯದಿದ್ದೀತೆ ? ಆಚರಣೆ - ಆರಾಧನೆ - ಕ್ರೀಡೆ : ಪ್ರಖ್ಯಾತ ದೈವಸ್ಥಾನಗಳ ವಿಶಿಷ್ಟ ಕೋಲ- ನೇಮ - ಮೆಚ್ಚಿ - ಗೆಂಡ , ನಾಗಮಂಡಲ - ಡಕ್ಕೆಬಲಿ - ಪಾಣರಾಟಗಳು ನಡೆಯುವಲ್ಲಿಗೆ ಆಸಕ್ತ ಯಾತ್ರಿಗಳನ್ನು ಕರೆದೊಯ್ದು ತೋರಿಸುವ ಅವಕಾಶವಿದೆ . ದೇವಾಲಯಗಳ ವಾರ್ಷಿಕ ಜಾತ್ರೆ , ಕೋಲ - ನೇಮದ ಬಳಿಕ ವರ್ಷಂಪ್ರತಿ ವಾಡಿಕೆಯಂತೆ ನಡೆಯುವ ಸಾಂಪ್ರದಾಯಿಕ ಕೋಳಿ ಅಂಕ , ಕಂಬಳಗಳನ್ನೂ ಪ್ರವಾಸಿಗಳಿಗೆ ತೋರಿಸುವ ಸಾಧ್ಯತೆಇದೆ . ತೆಂಗಿನಕಾಯಿ ಕಟ್ಟುವ, ಬೇಟೆಯಾಡುವ (ಕೆಡ್ಡಸ ಬೋಂಟೆ) ಮುಂತಾದ ಜಾನಪದ ಕ್ರೀಡೆಗಳನ್ನೂ ಏರ್ಪಡಿಸಿ ಪ್ರದರ್ಶಿಸಬಹುದು . ವಾದನ - ನರ್ತನ ವೈಭವ : ವಾದನ - ನರ್ತನಗಳು ಸಂತೋಷ , ಸಂಭ್ರಮದ ಸಂಕೇತಗಳಾಗಿ , ದೈವ - ದೇವರ ಸೇವೆಯ ಪ್ರಧಾನ ಅಂಗವಾಗಿ ರೂಢಿಯಲ್ಲಿವೆ . ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೈಭವವನ್ನು ಒದಗಿಸಲು ವಾದನ - ನರ್ತನ ಪ್ರಮುಖವಾದುದು . ಜಾನಪದ ನಾಗಸ್ವರ , ಕೊಳಲು ಸಹಿತ ಬಾಯಿಯಿಂದ ಊದಿ ನುಡಿಸುವ ವಾದ್ಯಗಳು ,ಸಮ್ಮೇಳ ,ತಾಸ್ ಮಾರ್ , ದುಡಿ ತೆಂಬರೆ, ಡಕ್ಕೆ ,ದಿಡ್ಂಬು , ನಗರಿ , ದೋಲು ಮತ್ತು ಬ್ಯಾಂಡ್ ಸೆಟ್ ಮುಂತಾದ ಸಾಂಪ್ರದಾಯಿಕ ಜಾನಪದ ಚರ್ಮವಾದ್ಯಗಳು ನಮ್ಮ ಆಚರಣೆಗಳಲ್ಲಿದ್ದು ಆಕರ್ಷಣೀಯವಾಗಿವೆ , ಇವು ಪ್ರವಾಸಿಗರ ಮುಂದೆ ಪ್ರದರ್ಶಿಸುವಂತಹದ್ದು. ಕರಾವಳಿಯ ಗಂಡುಕಲೆ ಯಕ್ಷಗಾನದ ವರ್ಣ - ವಾದನ - ನರ್ತನ - ಸಾಹಿತ್ಯ ವೈಭವ, ಬೂತಾರಾಧನೆಯ ರಮ್ಯಾದ್ಭುತ ಸೊಗಸು , ನಂಬಿಕೆ ಆಧರಿಸಿದ ಉಪಾಸನಾ ಪದ್ಧತಿ ,ನಾಗಮಡಲ - ಡಕ್ಕೆಬಲಿಗಳಲ್ಲಿರುವ ನಾಟ್ಯ ,ವಾದನ ಮತ್ತು ಬಣ್ಣ ಹೀಗೆ ಬಣ್ಣದ ಬಣ್ಣನೆಗೆ ಬದಲಿಲ್ಲದ ಗಮನ ಸೆಳೆಯುವ ಆರಾಧನಾರಂಗಕಲೆಗಳು , ರಂಗಕಲೆಗಳು ನಮ್ಮಲಿವೆ . ಆಹಾರದ ವಿವಿಧತೆ ನಮ್ಮಲಿವೆ , ಅವುಗಳು ಅದರದ್ದೆ ಆದ ರುಚಿಯಿಂದ ವಿಶೇಷ ಖ್ಯಾತಿಯನ್ನು ಪಡೆದಿವೆ . ಕಡಲಿನಿಂದ ದೊರೆಯುವ ಫ್ರೆಶ್ ,ಶುದ್ದ ಮೀನು ಕರಾವಳಿಯ ವಿಶೇಷ .ಈ ಆಹಾರ ವೈವಿಧ್ಯವನ್ನು ಪ್ರವಾಸಿಗಳನ್ನು ಕರೆದೊಯ್ಯುವಲ್ಲಿ ಸುಲಭ ಲಭ್ಯವಾಗುವಂತೆ ಒದಗಿಸಬಹುದು . ಕರಾವಳಿಯ ಉತ್ಪನ್ನಗಳು : ನಮ್ಮ ಕರಾವಳಿ ಸೀಮೆಯ ಉತ್ಪನ್ನಗಳನ್ನು ಈ ಸಂದರ್ಭಗಳಲ್ಲಿ ಪ್ರದರ್ಶಿಸಿ ವ್ಯವಹಾರವನ್ನು ನಡೆಸುವ ಸಾಧ್ಯತೆಗಳಿವೆ . ಕೈಮಗ್ಗದ ಬಟ್ಟೆಗಳು , ಜಾನಪದ ಸೊಗಸುಳ್ಳ ಚಿನ್ನ - ಬೆಳ್ಳಿಯ ಆಭರಣಗಳು , ದೈವ ದೇವರ ಮುಖ , ಮೂರ್ತಿ, ಆಭರಣಗಳು , ಪಂಚಲೋಹ - ಕಂಚಿನ ಮೂರ್ತಿಗಳು ,ಪಾತ್ರೆಗಳು ಕಬ್ಬಿಣದ ಚೂರಿ ,ಕತ್ತಿ , ಕೊಡಲಿ , ಬೀಗಗಳು ಮತ್ತು ಮರದ ನಿತ್ಯೋಪಯೋಗಿ ವಸ್ತಗಳಾದ ಸಂಬಾರದ ಮರಿಗೆ , ಸೇರು , ಪಾವು , ಕಳಸೆ ,ಕಡೆಗೋಲು , ಮಣೆ , ಮೆಟ್ಟುಕತ್ತಿ ,ಹೆರೆಮಣೆ ಹಾಗೂ ಕರಾವಳಿಯ ಸೊಗಡಿನ ಪೀಠೋಪಕರಣಗಳನ್ನು ಪ್ರದರ್ಶಿಸಿ ಪ್ರವಾಸಿಗಳು ಖರೀದಿಸುವಂತೆ ಮಾಡ ಬಹುದು . ಪ್ರಕೃತಿ ಜನ್ಯ ಮೂಲವಸ್ತುಗಳಿಂದ ಸಿದ್ಧಗೊಳಿಸುವ ಹೆಡಿಗೆ ,ಗೆರಸೆ , ಬುಟ್ಟಿ, ಹುರಿಹಗ್ಗ , ನಾರಿನಹಗ್ಗ , ಬೀಳಿನ ಸಣ್ಣ ಹೆಡಿಗೆ ಮುಂತಾದುವುಗಳನ್ನು ಪ್ರವಾಸಿಗರು ನೆರೆಯುವ ಕಡಲಕಿನಾರೆಯಲ್ಲಿ , ಜಾತ್ರೆಗಳಲ್ಲಿ ,ಕೋಲ- ನೇಮಗಳಲ್ಲಿ ಸುಲಭವಾಗಿ ಲಭಿಸುವಂತೆ ಮಾಡಬಹುದು . ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸುವಂತಾಗುವುದಿಲ್ಲವೇ?. ಸಾಂಸ್ಕೃತಿಕ ಭವ್ಯತೆ : ಹೀಗೆ ವಿವಿಧ ಲಭ್ಯ ಆಕರಗಳನ್ನು ಬಳಸಿಕೊಂಡು ಪ್ರವಾಸಿಗಳನ್ನು ಆಕರ್ಷಿಸಬಹುದು .ನಮ್ಮದೆನ್ನುವ ಸಾಂಸ್ಕೃತಿಕ ಭವ್ಯತೆ ನಮ್ಮಲ್ಲಿವೆ. ಅವುಗಳನ್ನು ಪ್ರದರ್ಶಿಸಬೇಕು , ವಿವರಿಸಬೇಕು , ಯಾತ್ರಿಗಳನ್ನು ಸೆಳೆಯುವ ಕೆಲಸವಾಗಬೇಕು . [ಉಭಯ ಜಿಲ್ಲೆಗಳಲ್ಲಿರುವ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳು , ಆಸ್ಪತ್ರೆಗಳು ದೇಶದಲ್ಲಿ ಮಾದರಿ. ಇಂತಹವುಗಳ ಕುರಿತು ಅಧ್ಯಯನ ಅವಕಾಶವಿದೆ . ಈ ನೆವನವೂ ಪ್ರವಾಸೋದ್ಯಮವಾಗಬಹುದು. ಬ್ಯಾಂಕಿಂಗ್ ಸಹಿತ ಹಲವು ಉದ್ಯಮಗಳು ಬೆಳೆದು ನಿಂತಿವೆ.] ಇಂತಹ ಪ್ರದರ್ಶನಗಳಿಂದ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ನೋವಾಗಬಾರದು . ಇತಿಹಾಸವನ್ನು ತಿರುಚಬಾರದು .ಈ ಧಾರ್ಮಿಕ , ಐತಿಹಾಸಿಕ , ಜಾನಪದ ಸಂಪತ್ತನ್ನು ಗೌರವದಿಂದ ನಮ್ಮ ಪೂರ್ವಸೂರಿಗಳ ಸಾಂಸ್ಕೃತಿಕ ಕೊಡುಗೆ ಎಂದು ಪ್ರವಾಸಿಯ ಮುಂದೆ ಪ್ರದರ್ಶಿಸಬೇಕು . ವರ್ಣ, ವರ್ಗ ತಾರತಮ್ಯ ಪರಿಗಣಿಸದೆ ಪ್ರಶಸ್ತವಾದುದನ್ನು ಸ್ವೀಕರಿಸುವ , ಪ್ರಚುರಪಡಿಸುವ , ಅಳವಡಿಸಿಕೊಳ್ಳುವ ವಿಶಾಲಮನೋಭಾವ ಅಗತ್ಯವಿದೆ. ಪ್ರವಾಸೋದ್ಯಮ ವಿಶಾಲವಾಗಿ ಹರಡಿಕೊಳ್ಳಬೇಕಿದೆ . ಬರಹ : ಕೆ. ಎಲ್.ಕುಂಡಂತಾಯ.
ಸೈಬ್ರಕಟ್ಟೆ : ವಿಶ್ವ ಔಷಧಿಕಾರರ ದಿನಾಚರಣೆಯ ಅಂಗವಾಗಿ ಫಾರ್ಮಸಿಸ್ಟ್ ಸತೀಶ್ ಶೆಟ್ಟಿಗೆ ಸನ್ಮಾನ
Posted On: 26 Sep 2021, 11:18 AM
ಉಡುಪಿ : ವಿಶ್ವ ಔಷಧಿಕಾರರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಸರಕಾರಿ ಆಸ್ಪತ್ರೆ ಸೈಬ್ರಕಟ್ಟೆಯ ಫಾರ್ಮಸಿಸ್ಟ್ ಸತೀಶ್ ಶೆಟ್ಟಿ ಇವರನ್ನು ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಯು. ಪ್ರಸಾದ್ ಭಟ್ , ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯ ದಾಸ್, ರಾಮ್ ಪ್ರಕಾಶ್ , ಕಿರಣ್, ನೀಲಕಂಠ ರಾವ್ , ಇಶ್ರಿಮುಡಿ ರಾಜು, ರವೀಂದ್ರನಾಥ್ ಕಿಣಿ , ಪ್ರಶಾಂತ್ ಜೋಗಿ, ಪೂಜಾರಿ ಗಣೇಶ್ ನಾಯಕ್ ಮತ್ತು ರೋಟರಿ ಸಮುದಾಯ ದಳದ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಕಲ್ಬೆಟ್ಟು ಉಪಸ್ಥಿತರಿದ್ದರು.
ಪಾಲಿಟೆಕ್ನಿಕ್ ಶಿಕ್ಷಣದಿಂದ ಖಚಿತ ಉದ್ಯೋಗ : ಸಚಿವ ಡಾ. ಅಶ್ವಥ್ ನಾರಾಯಣ್
Posted On: 26 Sep 2021, 11:10 AM
ಕಾಪು : ಪಾಲಿಟೆಕ್ನಿಕ್ ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳಿಗೆ ಖಚಿತವಾಗಿ ಉದ್ಯೋಗ ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಂಡು ಅದರ ಪ್ರಯೋಜನ ಪಡೆಯುವಂತೆ , ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ & ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಇಂದು ಬೆಳಪುನಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 21 ನೇ ಶತಮಾನದ ಅವಶ್ಯಕತೆಗಳಿಗೆ ಅನುಗುಣವಾಗಿ ಕೋರ್ಸ್ ಗಳನ್ನು ಅಳವಡಿಸಿಕೊಂಡಿದ್ದು ,ಈ ಕೋಸ್೯ಗಳನ್ನು ಅಳವಡಿಸಿಕೊಳ್ಳುವ ಮೊದಲು ವಿವಿಧ ಪ್ರಸಿದ್ದ ಕೈಗಾರಿಕೆಗಳ ಮುಖ್ಯಸ್ಥರು ಮತ್ತು ಕೈಗಾರಿಕಾ ತಂತ್ರಜ್ಞರೊಂದಿಗೆ ಚರ್ಚಿಸಿ , ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಗೆ ಅಗತ್ಯವಿರುವ ಕೋಸ್೯ಗಳನ್ನು ಮಾರ್ಪಡಿಸಿ, ಮರು ಸಿದ್ದಪಡಿಸಿದ್ದು, ದೇಶದಲ್ಲಿ ಈ ರೀತಿ ಇಡೀ ಪಠ್ಯವನ್ನು ಮಾರ್ಪಡಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಮಲ್ಟಿ ಎಂಟ್ರಿ- ಮಲ್ಟಿ ಎಕ್ಸಿಟ್ ಮಾದರಿಯಲ್ಲಿ ಪಾಲಿಟೆಕ್ನಿಕ್ ಶಿಕ್ಷಣವನ್ನು ಸಿದ್ದಪಡಿಸಿದ್ದು,ಒಂದು ವರ್ಷ, 2 ವರ್ಷ ಮತ್ತು 3 ವರ್ಷ ಅಭ್ಯಾಸ ಮಾಡುವವರಿಗೆ ಅಗತ್ಯವಿರುವ ಶಿಕ್ಷಣವನ್ನು ರೂಪಿಸಿದ್ದು,ಇದು ಅಂತಾರಾಜ್ಯ ಮತ್ತು ದೇಶದ ಮಾನದಂಡಗಳಿಗೆ ಅನುಗುಣವಾಗಿ ರೂಪಿಸಿದೆ ಎಂದರು. ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಲಿಕೆಯಲ್ಲಿ ಗುಣಮಟ್ಟ ಹೆಚ್ಚಿಸಲು , ಕಾಂಪ್ರೆಂನ್ಸಿವ್ ಲರ್ನಿಂಗ್ ಮ್ಯಾನೇಜ್ ಮೆಂಟ್ ಸಿಸ್ಟಂ, ಎಲ್ಲಾ ಕ್ಸಾಸ್ ರೂಮ್ ಗಳಿಗೆ ಇಂಟರ್ನೆಟ್ ಎನೇಬಲ್ ಸ್ಮಾಟ್ ಕ್ಲಾಸ್ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ನ ನೀಡುವ ಮೂಲಕ , ಕಲಿಕೆಯಲ್ಲಿ ಸಂಪೂರ್ಣ ಡಿಜಿಟಲೈಸೇಶನ್ ಮಾಡಲಾಗುವುದು ಎಂದರು. ಬೆಳಪು ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಕೇಂದ್ರವನ್ನು 2022 ರ ಮಾರ್ಚ್ ನಲ್ಲಿ ಉದ್ಘಾಟಿಸಲಾಗುವುದು ಹಾಗೂ ಇಲ್ಲಿ ಸ್ನಾತಕೋತ್ತರ ವಿಜ್ಞಾನ ಕೇಂದ್ರ ಕೂಡಾ ಪ್ರಾರಂಭವಾಗಲಿದೆ ಎಂದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಬಹು ಬೇಡಿಕೆ ಇರುವ ಕೋರ್ಸ್ಗಳಿಗೆ ಮಾತ್ರ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದು, ಅಂತಹ ಕೋಸ್೯ಗಳನ್ನೇ ಕಾಪು ಪಾಲಿಟೆಕ್ನಿಕ್ ನಲ್ಲಿ ಆರಂಭಿಸಲಾಗಿದೆ, ನೂತನ ಶಿಕ್ಷಣ ನೀತಿಯಂತೆ ಆಯಾ ಭಾಗಗಳಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡಲು ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ ಎಂದರು. ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಅಗತ್ಯವಿರುವ ಇನ್ನಿತರ ಮೂಲಭೂತ ಸೌಕರ್ಯಗಳು ಹಾಗೂ ರಸ್ತೆ ಸಂಪರ್ಕ ಮತ್ತು ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು, ಬೆಳಪು ನಲ್ಲಿ ವಿಜ್ಞಾನ ಕೇಂದ್ರ ಕೂಡಾ ಶೀಘ್ರದಲ್ಲಿ ಆರಂಭಗೊಳ್ಳಿದ್ದು, ಬೆಳಪು ಶಿಕ್ಷಣ ಕ್ಷೇತ್ರದ ಸಮೂಹ ಕೇಂದ್ರವಾಗಲಿದೆ , ವಿದ್ಯಾರ್ಥಿಗಳು ಇದರ ಪ್ರಯೋಜನಗಳನ್ನು ಪಡೆಯಬೇಕು ಎಂದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಬಿ. ಭಟ್, ನಿವೃತ್ತ ಪ್ರಾಂಶುಪಾಲ ಗಣಪತಿ ಮತ್ತಿತರರು ಉಪಸ್ಥಿತರಿದ್ದರು. ಕಾಪು ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಸುನಿಲ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಪಾಲಿಟೆಕ್ನಿಕ್ ನ ವಿಶೇಷಾಧಿಕಾರಿ ಮಂಜುನಾಥ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
