Updated News From Kaup
ಕಾಪು : ಎಸ್ಕೆಪಿಎ ಫೋಟೋಗ್ರಾಫಿ ಕಾರ್ಯಾಗಾರ
Posted On: 29 Jan 2025, 09:42 AM
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ., ಉಡುಪಿ ಜಿಲ್ಲೆ ವತಿಯಿಂದ ಕಾಪುವಿನ ಪ್ಯಾಲೆಸ್ ಗಾರ್ಡನ್ನಲ್ಲಿ ಮಂಗಳವಾರ ನಡೆದ ಗಿಂಬಲ್ಸ್ ಹಾಗೂ ರೀಲ್ಸ್ ಕಾರ್ಯಾಗಾರವನ್ನು ಎಸ್ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನವನ್ನು ನಮ್ಮ ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು. ಈ ಕಾರ್ಯಾಗಾರದ ಮೂಲಕ ಕೌಶಲ್ಯವನ್ನು ಹೇಗೆ ವೃದ್ಧಿಸಬಹುದು, ಹೊಸ ಹೊಸ ತಂತ್ರಜ್ಞಾನದ ಬಳಕೆ ಹೇಗೆ ಬಳಸಬಹುದು ಎಂಬುದನ್ನು ಅರಿತು ತಮ್ಮ ವೃತ್ತಿ ಜೀವನದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಸಂಪನ್ಮೂಲ ವ್ಯಕ್ತಿಯಾಗಿ ಸುಮಂತ್ ಸುವರ್ಣ ಕಾರ್ಯಾಗಾರ ನಡೆಸಿಕೊಟ್ಟರು. ಎಸ್ಕೆಪಿಎ ಜಿಲ್ಲಾ ಸಂಚಾಲಕ ಕರುಣಾಕರ್ ಕಾನಂಗಿ, ಉಪಾಧ್ಯಕ್ಷರಾದ ರಮೇಶ್ ಕಲಾಶ್ರೀ ಮತ್ತು ಪ್ರವೀಣ್ ಕೊರಿಯ, ಕಾಪು ವಲಯ ಅಧ್ಯಕ್ಷ ಸಚಿನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಸ್ವಾಗತಿಸಿದರು. ಎಸ್ಕೆಪಿಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ
Posted On: 28 Jan 2025, 08:03 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಮಂಗಳವಾರ ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಮುಂದಾಳತ್ವದಲ್ಲಿ ಕುಂಕುಮ ಪ್ರಸಾದ ಮುಹೂರ್ತ ನೆರವೇರಿತು. ನವದುರ್ಗಾ ಲೇಖನವನ್ನು ಬರೆದು ಅರ್ಪಿಸಿ, ನವಚಂಡೀಯಾಗದ ದಿನದಂದು ಸಂಕಲ್ಪದಲ್ಲಿ ಭಾಗಿಯಾಗಲಿರುವ ಭಕ್ತರಿಗೆ ನೀಡುವ ಕುಂಕುಮವನ್ನು ಮಾರಿಯಮ್ಮನಿಗೆ ಅರ್ಪಿಸಿ ಬ್ರಾಹ್ಮಣ ಸಂಘದ ಮಹಿಳೆಯರು ನಿರಂತರ ಲಕ್ಷ್ಮಿ ಶೋಭಾನೆಯೊಂದಿಗೆ ಕುಂಕುಮ ಪ್ರಸಾದವನ್ನು ಪ್ಯಾಕೆಟ್ ಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷರಾದ ಬೀನಾ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ವಳಕಾಡು ಶಾಲಾ ಆವರಣದಲ್ಲಿ ಜೇನುನೊಣ ದಾಳಿ ವಿದ್ಯಾರ್ಥಿಗಳಿಗೆ ಗಾಯ
Posted On: 28 Jan 2025, 07:59 PM
ಉಡುಪಿ: ನಗರದ ವಳಕಾಡು ಶಾಲಾ ಆವರಣದಲ್ಲಿ ಜೇನುನೊಣ ದಾಳಿ ಮಾಡಿದ ಪರಿಣಾಮ 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಗಾಯಗೊಂಡ 40 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಒಬ್ಬರು ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 37 ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಎಲ್ಲರೂ ಆರೋಗ್ಯಕರವಾಗಿದ್ದು, ಯಾರಿಗೂ ಯಾವುದೇ ಅಪಾಯ ಇಲ್ಲ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ. ವಳಕಾಡು ಸಂಯುಕ್ತ ಪ್ರೌಢ ಶಾಲಾ ಆವರಣದಲ್ಲಿ ಆಡುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ, ಕಟ್ಟಡದಲ್ಲಿದ್ದ ಜೇನುಗೂಡಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ. ಇದರಿಂದ ಜೇನುನೊಣಗಳು ಅಲ್ಲಿದ್ದ ಮಕ್ಕಳ ಮೇಲೆ ದಾಳಿ ನಡೆಸಿತ್ತೆನ್ನಲಾಗಿದೆ. ಇದರಿಂದ ಮಕ್ಕಳು ಬೊಬ್ಬೆ ಹಾಕಿ ಓಡಿ ಹೋಗಿದ್ದು, ಕೂಡಲೇ ಶಿಕ್ಷಕರು, ಪೋಷಕರು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದಾರೆ.
ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ತಂಡ ಜಯ
Posted On: 28 Jan 2025, 07:58 PM
ಪಡುಬಿದ್ರಿ : ಎರಡು ದಶಕಗಳ ಕಾಲ ಅವಿರೋಧ ಆಯ್ಕೆಯ ಮೂಲಕ ನಡೆಯುತ್ತಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿಗೆ ಮಂಗಳವಾರ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ಜರಗಿದ ಚುನಾವಣೆಯಲ್ಲಿ ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯ ಗಳಿಸಿದೆ. ಒಟ್ಟು 13 ಆಡಳಿತ ಮಂಡಳಿಯ ಸದಸ್ಯರಲ್ಲಿ ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳಿದ್ದು, ಇಬ್ಬರು ಮೊದಲೇ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ ಎಂ ಚುನಾವಣಾಧಿಕಾರಿಯಾಗಿದ್ದು, ಆಯ್ಕೆಗೊಂಡ ಸದಸ್ಯರ ಹೆಸರನ್ನು ಘೋಷಿಸಿದರು. ಒಟ್ಟು 3,200 ಮತಗಳಲ್ಲಿ 1,935 ಮತದಾನವಾಗುವ ಮೂಲಕ ಶೇ.60. ಮತದಾನವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವೈ ಸುಧೀರ್ ಕುಮಾರ್, ಚುನಾವಣೆಗೆ ಮೊದಲು ಹಲವಾರು ಸುಳ್ಳು ಅಪಪ್ರಚಾರಗಳನ್ನು ಮಾಡಿದ್ದರೂ, ಇಂದಿನ ಗೆಲುವು ಸತ್ಯಕ್ಕೆ ಸಂದ ಜಯ. ಮತ ಚಲಾಯಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಮುಂದಿನ 5 ವರ್ಷಗಳ ಅವಧಿಗೆ ಗುರುರಾಜ ಪೂಜಾರಿ, ವೈ ಸುಧೀರ್ ಕುಮಾರ್, ಜಿತೇಂದ್ರ ಫುರ್ಟಾಡೊ, ಮಾಧವ ಆಚಾರ್ಯ, ವಾಸುದೇವ, ರಾಜಾರಾಮ ರಾವ್, ಹಸನ್ ಬಾವ, ರೋಹಿಣಿ ಎ., ಕುಸುಮಾ ಕರ್ಕೇರ, ಗಿರೀಶ್ ಫಲಿಮಾರು, ಶಿವರಾಮ ಎನ್ ಶೆಟ್ಟಿ, ಕೃಷ್ಣ ಬಂಗೇರ, ಕಾಂಚನಾ ಆಯ್ಕೆಯಾಗಿದ್ದಾರೆ.
ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ಹಲವು ವರ್ಷಗಳ ಅವಿರೋಧ ಆಯ್ಕೆಯ ಕಸರತ್ತಿಗೆ ಬ್ರೇಕ್ ಹಾಕಿದ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟ
Posted On: 28 Jan 2025, 02:23 PM
ಪಡುಬಿದ್ರಿ : ನಾಲ್ಕು ಶಾಖೆ ಹಾಗೂ ಒಂದು ಕೇಂದ್ರ ಕಚೇರಿಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸುಮಾರು ಎರಡು ದಶಕಗಳ ಕಾಲ ನಿರ್ದೇಶಕರ ಚುನಾವಣೆ ನಡೆಯದೆ ಕೆಲವು ಬಾರಿ ನಾಮಪತ್ರ ಸಲ್ಲಿಕೆಯಾದರೂ ಕೊನೆ ಕ್ಷಣದಲ್ಲಿ ಹಿಂತೆಗುವ ಪ್ರಕ್ರಿಯೆ ಮೂಲಕ ಅವಿರೋಧ ಆಯ್ಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಾಗುತ್ತಿತ್ತು. ಆದರೆ ಈ ಬಾರಿ ಮುಂದೆಯೂ ಅಧಿಕಾರದ ಹಪಾಹಪಿಯಲ್ಲಿರುವ ತಂಡಕ್ಕೆ ಟಕ್ಕರ್ ನೀಡಲು ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ನೇತೃತ್ವದಲ್ಲಿ ಜ.28ರಂದು ನಡೆಯಲಿರುವ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 13 ನಿರ್ದೇಶಕರ ಚುನಾವಣೆಯಲ್ಲಿ ಆಡಳಿತದಲ್ಲಿದ್ದ ತಂಡ 13, ಹೊಸ ತಂಡ ಕೊನೆ ಕ್ಷಣದಲ್ಲಿ ಕೇವಲ 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆ ಮೂಲಕ ಸಂಪೂರ್ಣ ಹಿಡಿತವಲ್ಲದಿದ್ದರೂ ಆಡಳಿತದಲ್ಲಿ ಸ್ವಲ್ಪ ಮಟ್ಟಿನ ಹಿಡಿತದ ಸಾಧನೆಗೆ ಮುಂದಾಗಿದೆ. ಪ್ರಸ್ತುತ ಆಡಳಿತದ ತಂಡದಲ್ಲಿ ಕಾಂಗ್ರೆಸ್, ಬಿಜೆಪಿ ಬೆಂಬಲಿತರಿದ್ದು ಕೆಲವು ಸದಸ್ಯರ ಬದಲಾವಣೆ ಮಾಡಿದ್ದು, ಚುನಾವಣೆಗಿಳಿದ ಹೊಸ ತಂಡದಲ್ಲಿ ಕಾಂಗ್ರೆಸ್ ನ ಬೆಂಬಲಿತರ ಜೊತೆಗೆ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಈ ಬಾರಿ ಸಾಮಾನ್ಯ ವರ್ಗದಲ್ಲಿ 11 ಮಂದಿ, ಮಹಿಳಾ ಮೀಸಲು, ಹಿಂದುಳಿದ ವರ್ಗ, ಸಾಮಾನ್ಯ ವರ್ಗಗಳಲ್ಲಿ 2-3 ಮಂದಿ ಸ್ಪರ್ಧಿಸಿದ್ದಾರೆ. ಈ ಬಾರಿಯು ಜನಪರ ಒಕ್ಕೂಟ ತಂಡದ ಮಹಿಳಾ ಅಭ್ಯರ್ಥಿಗಳು ನಾಮಪತ್ರ ವಾಪಾಸು ಪಡೆಯುವಂತೆ ಆಡಳಿತದಲ್ಲಿದ್ದ ತಂಡದ ಕೆಲವರು ಒತ್ತಡ ಹಾಕಿದ್ದಾರೆ. ಪೋಲಿಸ್ ವರಿಷ್ಠಾಧಿಕಾರಿಗೆ ದೂರು ನೀಡುವ ಬಗ್ಗೆಯೂ ಜನಪರ ಒಕ್ಕೂಟ ಎಚ್ಚರಿಸಿದೆ. ಹಾಲಿ ತಂಡದ ಪ್ರಕಾರ ಈ ಸಂಘವು ತಮ್ಮ ಅವಧಿಯಲ್ಲಿಯೇ ಪ್ರಗತಿ ಪಥ ಕಂಡಿದ್ದು, ಮುಂದೆಯೂ ಪ್ರಗತಿ ಸಾಧಿಸಲಿದೆ ಎಂದು ಹೇಳಿಕೊಂಡರೆ, ಹೊಸ ತಂಡವು ನಾವು ಪ್ರಗತಿ ಬಯಸುವವರು. ಅಲ್ಲಿಯ ಅವ್ಯವಹಾರಗಳನ್ನು ಜನರಿಗೆ ತಿಳಿಸುವ ಜೊತೆಗೆ ಅವೆಲ್ಲವುಗಳನ್ನು ಪ್ರಶ್ನಿಸಿ, ನ್ಯಾಯದ ದಾರಿಯಲ್ಲಿ ಸಾಗಲಿದ್ದೇವೆ ಎನ್ನುತ್ತಾರೆ. ಒಟ್ಟಿನಲ್ಲಿ ಹಾಲಿ ತಂಡಕ್ಕೆ ಪ್ರತಿಷ್ಟೆಯ ಕಣವಾಗಿದ್ದು, ಹೊಸ ತಂಡಕ್ಕೆ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸದಿದ್ದರೂ, ಕೆಲವು ಸ್ಥಾನಗಳನ್ನಾದರು ಪಡೆಯಲು ಕಾತುರರಾಗಿದ್ದಾರೆ. ಎರಡು ತಂಡಗಳು ಗೆಲುವು ನಮ್ಮದೆ ಎನ್ನುವ ವಿಶ್ವಾಸದಲ್ಲಿ ಪ್ರಚಾರ ನಿರತರಾಗಿದ್ದಾರೆ. ಭೃಷ್ಟಾಚಾರ ರಹಿತವಾಗಿ ಸಂಘಕ್ಕೆ ದುಡಿಯುವ, ಊರಿನ ಅಭಿವೃದ್ಧಿಯ ಚಿಂತನೆಯೊಂದಿಗೆ ಸದಸ್ಯರಿಗೆ ಅನುಕೂಲಕರವಾದ ಯೋಜನೆಯನ್ನು ರೂಪಿಸಿ, ಸಹಕಾರಿ ತತ್ವಗಳ ಆಶಯದಂತೆ ನಡೆಯಲಿ ಎಂದು ಸಾರ್ವಜನಿಕರ ಆಶಯವಾಗಿದೆ.
ಮಹಾಕುಂಭಮೇಳದ ಮಹಾ ಸಂವಾದದಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ
Posted On: 27 Jan 2025, 05:30 PM
ಶಿರ್ವ : ಶ್ರೀ ಕೃಷ್ಣನ ಜನ್ಮ ಭೂಮಿಯನ್ನು ಮುಕ್ತಗೊಳಿಸುವ ಬಗ್ಗೆ ಫೆ.1ರಂದು ಮಹಾಕುಂಭಮೇಳದಲ್ಲಿ ಜರಗಲಿರುವ ಮಹಾ ಸಂವಾದದಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ನ್ಯಾಸ್(ರಿ.) ಕರ್ನಾಟಕದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
ಕಸಾಪ ಉಡುಪಿ ತಾಲೂಕು : ಡಿಸಿ ಕಚೇರಿಯ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ
Posted On: 26 Jan 2025, 07:23 PM
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ರಾಜ್ಯದ ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಕಸಾಪ ಉಡುಪಿ ತಾಲೂಕಿನಿಂದ ಮತ್ತಷ್ಟು ಪುಸ್ತಕಗಳನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದಭ೯ದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು, ಕವಾ೯ಲು ಮುಂತಾದವರಿದ್ದರು.
ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ
Posted On: 26 Jan 2025, 07:18 PM
ಕಾಪು : ತಾಲೂಕು ಆಡಳಿತ ಸೌಧದಲ್ಲಿ ರವಿವಾರ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಧಾಕರ್ ಸಾಲಿಯಾನ್, ನೀಲಾನಂದ ನಾಯಕ್, ಸೂರಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾವ್ಕಂರ್, ಕಾಪು ಪುರಸಭೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜ.27 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಚಪ್ಪರ ಮೂಹೂರ್ತ
Posted On: 25 Jan 2025, 09:32 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಜನವರಿ 27, ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ. ಕಾಪುವಿನ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
Posted On: 24 Jan 2025, 06:25 PM
ಪಡುಬಿದ್ರಿ : ಬಡಾ ಗ್ರಾಮ ಉಚ್ಚಿಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರಂತರ ಅಪಘಾತ ಹಾಗೂ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು, ಇದರ ತಡೆಗೆ ಮುಂಜಾಗ್ರತಾ ಕ್ರಮ ಹಾಗೂ ಕೆಲವೊಂದು ತುರ್ತು ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ತಹಶೀಲ್ದಾರರಾದ ಪ್ರತೀಭಾ ಆರ್, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಇಲಾಖಾಧಿಕಾರಿಗಳು, ಉಚ್ಚಿಲ ನಾಗರಿಕ ಹೋರಾಟ ಸಮಿತಿಯವರು ಉಪಸ್ಥಿತರಿದ್ದರು.
