Updated News From Kaup
ಉಡುಪಿ ಜಿಲ್ಲಾ ಮಟ್ಟದ ಕನ್ನಡ ಜಾನಪದ ರಾಜ್ಯೋತ್ಸವ 2025 ಕಾರ್ಯಕ್ರಮ
Posted On: 08 Jan 2025, 10:06 PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇದರ ವತಿಯಿಂದ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಡಾ.ಟಿ. ಎಂ. ಎ. ಪೈ ಪ್ರೌಢಶಾಲೆ ಕಲ್ಯಾಣಪುರ ಶಾಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾ ಮಟ್ಟದ ಕನ್ನಡ ಜಾನಪದ ರಾಜ್ಯೋತ್ಸವ 2025 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ, ಜಾನಪದವು ಪಠ್ಯಕ್ರಮವಾಗಬೇಕಾಗಿದೆ. ಜನಪದವು ಮುಂದಿನ ತಲೆಮಾರಿಗೆ ಉಳಿಯಬೇಕಾದರೆ ವಿದ್ಯಾರ್ಥಿಗಳಲ್ಲಿ ಜನಪದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಇದರಲ್ಲಿರುವ ಅಘಾತವಾದ ಜ್ಞಾನ ಸಂಪತ್ತು ಇದನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇಂದಿನ ಸಮಾಜಕ್ಕಿದೆ. ಈ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು. ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ದೈವನರ್ತಕರಾದ ಬಿರು ಪಾಣರ, ಸಂಗೀತ ಕಲಾವಿದರಾದ ವೇಣುಗೋಪಾಲ್ ಭಟ್ ಕೊಟೇಶ್ವರ, ಕನ್ನಡ ಅಧ್ಯಾಪಕಿ ಸುರೇಖಾ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರೇಯ ಮತ್ತು ಮಾನ್ಯ ಆಚಾರ್ಯ ಅವರನ್ನು ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಾನಪದವು ಜನರ ಜೀವನ ಪದ್ಧತಿಯಾಗಿತ್ತು. ಜನಪದರು ಯಾವುದೇ ಶಿಕ್ಷಣ ಇಲ್ಲದೆ ಸಾವಿರಾರು ಹಾಡನ್ನು ರಚನೆ ಮಾಡಿ ಹಾಡಿದ್ದರು. ಅವರ ಕೊಡುಗೆಯನ್ನು ನಾವು ಉಳಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಎಚ್.ಎನ್. ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜಿಲ್ಲಾ ಪದಾಧಿಕಾರಿಗಳಾದ ಚಂದ್ರ ಹಂಗಾರಕಟ್ಟೆ, ಫಾರೂಕ್ ಚಂದ್ರ ನಗರ, ತಾಲ್ಲೂಕು ಪದಾಧಿಕಾರಿಗಳಾದ ಪ್ರಭಾರಾವ್, ಸುಜಾತ ನಿತ್ಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು. ನಿಕಿತಾ ಮತ್ತು ತಂಡದವರು ಜಾನಪದ ಗೀತೆ ಹಾಡಿದರು. ಜಿಲ್ಲಾ ಪದಾಧಿಕಾರಿ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.
ವಿಶ್ವಮಾನವನಾಗಬೇಕೆಂಬುದು ಕುವೆಂಪುರವರ ಕನಸಾಗಿತ್ತು : ಕುಸುಮಾ ಕೆ.ಆರ್.
Posted On: 07 Jan 2025, 08:41 PM
ಮಂಗಳೂರು : ಹುಟ್ಟುವ ಪ್ರತಿ ಮಗು ವಿಶ್ವಮಾನವನೇ. ಆನಂತರ ಆ ಮಗುವನ್ನು ಜಾತಿ ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು. ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪುರವರಿಗಿತ್ತು ಎಂದು ಶಿಕ್ಷಕಿ ಕುಸುಮಾ ಕೆ. ಆರ್ ಹೇಳಿದರು. ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಾರಥ್ಯದಲ್ಲಿ ಜ5ರಂದು ಮಂಗಳೂರು ಪುರಭವನದ ಎದುರಿನ ರಾಜಾಜಿ ಪಾರ್ಕ್ನಲ್ಲಿ ಕುವೆಂಪು ಜನ್ಮ ದಿನದ ಪ್ರಯುಕ್ತ ನಡೆದ “ಕನ್ನಡವೇ ಸತ್ಯ” ವಿಚಾರಗೋಷ್ಠಿ-ಕವಿಗೋಷ್ಠಿ ಮತ್ತು ಗೀತಗಾಯನ ಉದ್ಘಾಟಿಸಿ ಮಾತನಾಡಿದರು. ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಕೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಅವರ ಕನಸನ್ನು ನನಸಾಗಿಸುವ ಪ್ರಯತ್ನ ನಮ್ಮದಾಗಬೇಕು. ಇಂದಿನ ಈ ಕನ್ನಡವೇ ಸತ್ಯ ಕಾರ್ಯಕ್ರಮವು ನಿಜಕ್ಕೂ ರಸಋಷಿಗೆ ಸಮರ್ಪಣೆ ಎಂದು ನುಡಿದರು. ಈ ಸಂದರ್ಭದಲ್ಲಿ ಹೊಸ ಕನ್ನಡ ಎಂಬ ಪತ್ರಿಕೆಯನ್ನು ಮಂಗಳೂರಿನ ಜನಪ್ರಿಯ ವೈದ್ಯ, ಸಾಹಿತಿ ಡಾ.ಸುರೇಶ್ ನೆಗಳಗುಳಿ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣ ಮತ್ತು ದೃಶ್ಯ ಮಾಧ್ಯಮಗಳು ಸಾಕಷ್ಟು ಇದ್ದರೂ ಪತ್ರಿಕೆ ಓದುವ ಹವ್ಯಾಸ ಈಗಲೂ ಇರುವುದರಿಂದ ಇಂತಹ ಪತ್ರಿಕೆಗಳು ಮೂಡಿಬರಲು ಸಾಧ್ಯ. ಪತ್ರಿಕೆ ತನ್ನ ವಸ್ತುನಿಷ್ಠತೆಯನ್ನು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮರೆಯದೆ ಕರ್ತವ್ಯ ನಿರ್ವಹಿಸಬೇಕು. ಹಾಗೇನೇ ಪತ್ರಿಕೆ ಬೆಳೆಯಬೇಕಾದರೆ ಪತ್ರಿಕೆಯನ್ನು ಕೊಂಡು ಓದುವ ಮನಸ್ಥಿತಿ ಹೆಚ್ಚಾಗಬೇಕು ಎಂದು ಮಾರ್ಮಿಕವಾಗಿ ನುಡಿದರು. ಅಧ್ಯಕ್ಷತೆ ವಹಿಸಿದ್ದ ಕೆಎಸ್ಎಸ್ಎಪಿ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮಾತನಾಡಿ, ಜ್ಞಾನಪೀಠ ಪ್ರಶಸ್ತಿ ಪಡೆದ ಕುವೆಂಪುರವರು ಒಂದು ದೊಡ್ಡ ಜ್ಞಾನ ಭಂಡಾರವೇ ಸರಿ. ಅವರ ಒಂದೊಂದು ಸಾಹಿತ್ಯವು ಕೂಡಾ ಒಂದೊಂದು ಗ್ರಂಥಗಳು ಎಂದು ಹೇಳಬಹುದು. ಅವರು ಒಂದು ಗ್ರಂಥಾಲಯವಲ್ಲ ಅವರು ಒಂದು ವಿಶ್ವವಿದ್ಯಾನಿಲಯವೇ ಸರಿ. ಅಂತಹ ಮಹಾನ್ ಚೇತನರನ್ನು ನೆನಯುವುದು ಕನ್ನಡಿಗರಾದ ನಮ್ಮ ಕರ್ತವ್ಯ ಮತ್ತು ಜವಾಬ್ಧಾರಿ ಎಂದು ಹೇಳಿದರು. ಮಂಗಳೂರು ಮಹಾನಗರಪಾಲಿಕೆ ನಗರ ಯೋಜನಾಧಿಕಾರಿ ಎನ್ ನಾಗೇಂದ್ರ, ಪುತ್ತೂರು ಸತ್ಯಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟಿನಿ, ಎನ್ಎಸ್ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ, ಮತ್ತು ಪತ್ರಕರ್ತ ಲೋಕಯ್ಯ ಶಿಶಿಲ ಉಪಸ್ಥಿತರಿದ್ದರು. ಕವಿಗೋಷ್ಟಿ : ಕಬಕ ಸರಕಾರಿ ಪದವಿಪೂರ್ವ ಕಾಲೇಜು ಶಿಕ್ಷಕಿ ಶ್ರೀಮತಿ ಶಾಂತ ಪುತ್ತೂರು ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಕವಿಗಳಾದ ಅನುರಾಧ ರಾಜೀವ ಸುರತ್ಕಲ್ , ಎಂ.ಎಸ್.ವೆಂಕಟೇಶ್ ಗಟ್ಟಿ , ದೀಪಾ ಚಿಲಿಂಬಿ, ಅನಿತಾ ಶೆಣೈ, ನಿಶಾನ್ ಅಂಚನ್, ವೀಣಾ ರಾವ್ ವಾಮಂಜೂರು, ಸಲೀಂ ಅನಾರ್ಕಲಿ, ಉಮೇಶ್ ಕಾರಂತ್, ಬದ್ರುದ್ದೀನ್ ಕೂಳೂರು, ಸುಕಲತ ಶೆಟ್ಟಿ, ಜುಲಿಯೆಟ್ ಫೆರ್ನಾಂಡಿಸ್ ತಮ್ಮ ಸ್ವರಚಿತ ಕವನ ವಾಚಿಸಿದರು. ಕೆಎಸ್ಎಸ್ಎಪಿ ಖಜಾಂಚಿ ವರ್ಷ ನಿಖಿಲ್ರಾಜ್ ಪ್ರಾರ್ಥನೆ ಗೈದರು. ಎನ್ಎಸ್ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ವಂದಿಸಿದರು, ದೀಪಾ ಚಿಲಿಂಬಿ ಕಾರ್ಯಕ್ರಮ ನಿರೂಪಿಸಿದರು. ಅ ಬಳಿಕ ಗಾಯನ ಕ್ಷೇತ್ರದಲ್ಲಿ ವಿಶ್ವದಾಖಲೆ ನಿರ್ಮಿಸಿದ ಗಂಗಾಧರ್ ಗಾಂಧಿ ಬಳಗದಿಂದ ಗೀತಗಾಯನ ನಡೆಯಿತು.
ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ ಸಂಪನ್ನ
Posted On: 07 Jan 2025, 06:00 PM
ಉಡುಪಿ : ವಿದ್ಯಾರ್ಥಿಗಳು ಮೊಬೈಲನ್ನು ದೂರವಿಟ್ಟು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು ಆ ಮೂಲಕ ಜ್ಞಾನ ಸಂಪಾದನೆ ಮಾಡಿ , ಉನ್ನತ ವ್ಯಾಸಂಗವನ್ನು ಮಾಡಿ ಉತ್ತಮ ನೌಕರಿಯನ್ನು ಆಯ್ಕೆ ಮಾಡಿ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬಾಳಿ-ಬದುಕಿ, ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದು ಉಡುಪಿ ಸರಕಾರಿ ಜಿಲ್ಲಾ ಆಸ್ಫತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ . ದಯಾಮಣಿ ಬಿ. ಇವರು ತಿಳಿಸಿದರು. ಅವರು ಕಲ್ಯಾಣಪುರದ ಶ್ರೀ ವೀರಭದ್ರ ದೇವಸ್ಥಾನದಲ್ಲಿ ಜರುಗಿದ ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಸಮುದಾಯ ಸಂಘದ ಅಧ್ಯಕ್ಷರಾದ ಬಾಲಕ್ರಷ್ಣ ನಾಯಕ ಮಾತನಾಡಿ, ನಮ್ಮ ಸಮುದಾಯವು ಒಗ್ಗಟ್ಟಿನಿಂದ ಇದ್ದು ಮುಂದೆ ಏನೇ ಸಮಸ್ಯೆ ಬಂದರೂ ನಾವೆಲ್ಲ ಒಂದಾಗಿ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಂಡು ಸರಕಾರದಿಂದ ನಮ್ಮ ಸಮುದಾಯಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಬೇಕು ಎಂದು ಹೇಳಿದರು. ಸಭೆಯನ್ನು ಉದ್ದೇಶಿಸಿ ಮುಖ್ಯ ಅತಿಥಿಗಳಾದ ಕಾರ್ಕಳ ನಗರ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಯಶವಂತ, ಜಿಲ್ಲಾ ನಾಯಕ ಸಮುದಾಯ ಸಂಘದ ಗೌರವ ಅಧ್ಯಕ್ಷರಾದ ಶೇಖರ್ ನಾಯಕ, ಕಾಪು ತಾಲೂಕು ನಾಯಕ ಸಮುದಾಯದ ಅಧ್ಯಕ್ಷರಾದ ನೀಲಾನಂದ ನಾಯಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸನ್ಮಾನ : ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳನ್ನು ,ನಿವೃತ್ತರನ್ನು ,ಸಾಧಕರನ್ನು ಹಾಗೂ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ನಾಯಕ, ಜಿಲ್ಲಾ ಸಂಘದ ಗೌರವ ಸಲಹೆಗಾರರಾದ ವಸಂತ ನಾಯಕ, ಕೋಶಾಧಿಕಾರಿ ಮಂಜುನಾಥ ನಾಯಕ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಸತೀಶ್ ನಾಯಕ ವರದಿ ವಾಚಿಸಿದರು. ಉಪನ್ಯಾಸಕಿ ಪ್ರತಿಮ ಸನ್ಮಾನ ಪತ್ರ ವಾಚಿಸಿದರು. ಸಂಶೋಧನಾ ವಿದ್ಯಾರ್ಥಿನಿ ಕುಮಾರಿ ನಿಶಾ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ನಾಯಕ ವಂದಿಸಿದರು.
ಕಾಪು : ಶ್ರೀ ನಾರಾಯಣಗುರು ಟ್ರೋಫಿ - ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ
Posted On: 07 Jan 2025, 05:54 PM
ಕಾಪು: ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ 25ನೇ ಶ್ರೀ ನಾರಾಯಣಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ ನೆರವೇರಿತು. ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್, ಬೆಂದೂರು ರೋಡ್ ಇಲ್ಲಿನ ಹೃದ್ರೋಗ ತಜ್ಞರಾದ ಡಾ. ಮುಕುಂದ ಕುಂಬಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭ ಕಾಪು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ, ಮಂಗಳೂರು ಸಾಮ್ರಾಟ್ ಚೆಸ್ ಯುನಿಟ್ ಕಾರ್ಯದರ್ಶಿ ನಾಗೇಶ್ ಕಾರಂತ್, SNG ಕೋಚಿಂಗ್ ಸೆಂಟರ್ ಹಳೆ ವಿದ್ಯಾರ್ಥಿನಿ ಕು. ನಮೃತಾ ಎಸ್. ಶೆಟ್ಟಿ, ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಧಾಕರ್ ಸಾಲ್ಯಾನ್ ಕಾಪು ಗುರಿಕಾರರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ಸಾಲ್ಯಾನ್ ಕಾರ್ಯದರ್ಶಿ ಬಿಲ್ಲವರ ಸಹಾಯಕರ ಸಂಘ (ರಿ.) ಕಾಪು, ಡಾ. ಅಜಿತ್ ಶೆಣೈ ಮಹಾಲಕ್ಷ್ಮೀ ಕಣ್ಣಿನ ಆಸ್ಪತ್ರೆ ಉಡುಪಿ, ಶ್ರೀ ಲಕ್ಷ್ಮೀ ನಾರಾಯಣ ಆಚಾರ್ಯ ಉಡುಪಿ ಮುಖ್ಯ ಸಲಹೆಗಾರರು ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ನಾಗೇಶ್ ಕಾರಂತ್ ಪಾಂಗಳ ಟೂರ್ನಮೆಂಟ್ ಡೈರೆಕ್ಟರ್, ಶ್ರೀ ಪ್ರಶಾಂತ್ ಎನ್ ಹಾಗೂ ಶಶೀಂದ್ರ ಎಮ್ ಮಾಸ್ಟರ್ ಚೆಸ್ ಅಕಾಡೆಮಿ ಬದಿಯಡ್ಕ, ಉಮಾನಾಥ ಕಾಪು ಅಧ್ಯಕ್ಷರು ಶ್ರೀ ನಾರಾಯಣ ಗುರು ಸ್ಪೋಟ್ಸ್ & ಎಜುಕೇಶನ್ ಟ್ರಸ್ಟ್ ಬಾಬು ಜೆ ಪೂಜಾರಿ ಉಪ್ಪುಂದ ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ರುದ್ರ ರಾಜೀವ್ ಮಂಗಳೂರು, ರನ್ನರ್ ಆಫ್ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ನ ವಿದ್ಯಾರ್ಥಿ ಲೀಲಾ ಜೈ ಕೃಷ್ಣ, ತೃತೀಯ ಚೆಸ್ ಕೋಚ್ ಹರೀಶ್ ಕುಮಾರ್ ಉಡುಪಿ ಪ್ರಶಸ್ತಿ ಗಳಿಸಿದರು. ಒಟ್ಟು 115 ಬಹುಮಾನ ವಿತರಿಸಲಾಯಿತು. ಫಿಡೇ ಆರ್ಬಿಟರ್ ಕೋಚ್, ಸ್ಥಾಪಕರಾದ ಸಾಕ್ಷಾತ್ ಯು.ಕೆ. ಸ್ವಾಗತಿಸಿದರು. ಫಿಡೇ ಆರ್ಬಿಟರ್ ಕೋಚ್ ನಿರ್ದೇಶಕಿ ಸೌಂದರ್ಯ ಯು.ಕೆ. ಕಾರ್ಯಕ್ರಮ ನಿರೂಪಿಸಿದರು. ಉಮಾನಾಥ ವಂದಿಸಿದರು.
ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆಯಲ್ಲಿ ಸಾಮಾನ್ಯ ಸದಸ್ಯರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ
Posted On: 06 Jan 2025, 05:12 PM
ಪಡುಬಿದ್ರಿ : ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ಮತದಾನ ನಡೆಯದಂತೆ ಪಾರದರ್ಶಕ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸುವಂತೆ ಹಾಗು ಆಡಳಿತ ಮಂಡಳಿಯು ದುರುದ್ದೇಶ ಪೂರಕವಾಗಿ, ಸ್ವಾರ್ಥಕ್ಕಾಗಿ ನಿಗದಿ ಪಡಿಸಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸದಸ್ಯನು ರೂ ರೂ.15,000 ಷೇರು ಮೊಬಲಗನ್ನು ಹೊಂದಿರ ಬೇಕೇಂಬ ನಿಯಮವನ್ನು ರದ್ದು ಪಡಿಸಿ , ಸರಕಾರದ ನಿರ್ದೇಶನದಂತೆ ಕನಿಷ್ಠ ರೂ. 500 ಷೇರು ಮೊತ್ತ ಹೊಂದಿರುವ ಸಾಮಾನ್ಯ ಸದಸ್ಯರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೂಂಡುವಂತೆ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಜಿಲ್ಲಾಧಿಕಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೃೆಗೊಳ್ಳುವುದಕ್ಕಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಶೇಖರ್ ಹೆಜ್ಮಾಡಿ, ಗೌರವ ಸಲಹೆಗಾರ ದಿನೇಶ್ ಕೋಟ್ಯಾನ್ ಪಲಿಮಾರು, ಉಪಾಧ್ಯಕ್ಷರಾದ ಮೈಯದ್ದಿ ಕನ್ನಂಗಾರು, ರಚನ್ ಸಾಲ್ಯಾನ್, ಲೀಲಾಧರ್.ಪಿ., ರೋಶನ್ ಕಾಂಚನ್ ಹೆಜ್ಮಾಡಿ, ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ರತ್ನಾಕರ್ ಕೋಟ್ಯಾನ್ ಉಪಸ್ಥಿತರಿದ್ದರು.
ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೃಷ್ಣ ಮತ್ತು ಧನ್ತಿ
Posted On: 05 Jan 2025, 07:20 PM
ಕಾಪು : ಬೈಂದೂರಿನಲ್ಲಿ ಜರಗಿದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರ್ ಇಲ್ಲಿನ ವಿದ್ಯಾರ್ಥಿ ಕೃಷ್ಣ ಇವರು ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಕುಮಾರಿ ಧನ್ತಿ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ವಿದ್ಯಾರ್ಥಿ ಕೃಷ್ಣ, ಬೆಂಗಳೂರಿನ ರಮೇಶ್ ಆಚಾರ್ ಮತ್ತು ಕವಿತಾ ಎಸ್ ಆಚಾರ್ ಇವರ ಮಗನಾಗಿದ್ದು, 9ನೇ ತರಗತಿ ವಿದ್ಯಾರ್ಥಿ. ಕುಮಾರಿ ಧನ್ತಿ, ಬೋಳ ಪದವಿನ ಸುರೇಶ್ ಮೂಲ್ಯ ಮತ್ತು ಅಮಿತಾ ದಂಪತಿಗಳ ಮಗಳು. 7ನೇ ತರಗತಿಯ ವಿದ್ಯಾರ್ಥಿನಿ.
ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾದ ಡಾ.ಯು.ಎಂ ಫಾರೂಕ್ ಚಂದ್ರನಗರ
Posted On: 05 Jan 2025, 06:56 PM
ಕಾಪು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಕೊಡಲ್ಪಡುವ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಕಲಾಗ್ರಾಮ ಜ್ಞಾನಭಾರತಿ ಯೂನಿವರ್ಸಿಟಿ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಚಿತ್ರದುರ್ಗ, ಕರ್ನಾಟಕ ಸರಕಾರದ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್. ಕೆ. ಸುಧೀಂದ್ರ, ಬಿ.ಎಂ.ಟಿ.ಎಫ್ ರೆವಿನ್ಯೂ ತಹಸೀಲ್ದಾರ್ ದೀಪಾ ಪ್ರಭಾಕರ್ ಮೈಶಾಲೆ, ಲೋಕಾಯುಕ್ತ ಸಿಪಿಐ ಹಾಲಪ್ಪ ವಾಯ್ ಭಾಲದಂಡಿ, ಬೆಳಗಾವಿ ವಿಜಯಕಾಂತ್ ಡೈರಿ ಮತ್ತು ಆಹಾರ ಉತ್ಪನ್ನಗಳ ಉಪಾಧ್ಯಕ್ಷರು ನಿವೇದಿತಾ ಶಿವಕಾಂತ್ ಸಿದ್ನಾಳ್, ಹೈಕೋರ್ಟ್ ವಕೀಲರಾದ ಅನಂತ್ ನಾಯ್ಕ್, ಕೆ.ಪಿ.ಸಿ.ಸಿ ಸದಸ್ಯರಾದ ಅರ್ಜುನ್ ನಾಯಕ್ ವಾಡಿ, ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಕು| ನಿತ್ಯ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆ : ಕಂಪ್ಯೂಟರ್, ಎಲ್.ಕೆ.ಜಿ, ಯು.ಕೆ.ಜಿ ತರಗತಿ ಕೊಠಡಿಗಳ ಉದ್ಘಾಟನೆ
Posted On: 05 Jan 2025, 05:16 PM
ಕಾಪು : ಆನೆಗುಂದಿ ಸರಸ್ವತಿ ಪೀಠ ಪಡುಕುತ್ಯಾರು ಅಸ್ಸೆಟ್ ಅಧೀನಕ್ಕೆ ಒಳಪಟ್ಟ ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ ನೂತನ ಕಂಪ್ಯೂಟರ್ ವಿಭಾಗ, ಎಲ್ ಕೆ ಜಿ ಹಾಗೂ ಯು ಕೆ ಜಿ ಕೊಠಡಿಗಳ ಉದ್ಘಾಟನೆಯನ್ನು ಪಡುಕುತ್ಯಾರು ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ಶ್ರೀಗಳು ವಿದ್ಯಾರ್ಥಿಗಳ ಹಸ್ತಪ್ರತಿ ಚೈತನ್ಯವಾಣಿ ಇದರ ದ್ವಿತೀಯ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಸಂಪಾದಕ ಮಂಡಳಿಯ ಶಿಕ್ಷಕಿ ಅನಿತಾ ಮತ್ತು ಅಮಿತಾ ಸಹಕರಿಸಿದರು. ಅಸ್ಸೆಟ್ ಅಧ್ಯಕ್ಷರಾದ ಬಿ ಸೂರ್ಯಕುಮಾರ ಹಳೆಯಂಗಡಿ, ಗೌರವಾಧ್ಯಕ್ಷ ಬಿ. ಮೋಹನ್ ಕುಮಾರ್ ಮಂಗಳೂರು, ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ ಶಿರ್ವ, ಜನಾರ್ದನ ಆಚಾರ್ಯ ಬಜಕೂಡ್ಲು, ಆನೆಗುಂದಿ ಮೂಲ ಮಠದ ಅಧ್ಯಕ್ಷರಾದ ದಿನೇಶ್ ಆಚಾರ್ಯ ಪಡುಬಿದ್ರೆ,ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿತಂತ್ರಿ, ಮಾತೃ ಮಂಡಳಿಯ ಅಧ್ಯಕ್ಷೆ ಶೋಭಾ ಆಚಾರ್ಯ, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಅಸೆಟ್ ಕಾರ್ಯದರ್ಶಿ ಗುರುರಾಜ. ಕೆ ಸ್ವಾಗತಿಸಿ, ಶಾಲಾ ಪ್ರಾಂಶುಪಾಲರಾದ ಸಂಗೀತ ರಾವ್ ವಂದಿಸಿದರು. ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
8 ಭಾಷೆಗಳಲ್ಲಿ 'ಸುಳ್ಳಿ' ಆಲ್ಬಂ ಸಾಂಗ್ ಬಿಡುಗಡೆ
Posted On: 05 Jan 2025, 07:30 AM
ಕಾಪು : ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ನಲ್ಲಿ ಶುಭ್ ದಾಸ್ ಶೆಟ್ಟಿ ನಿರ್ಮಾಣದ, ವಿಘ್ನೇಶ್ ದೇವನಾಥನ್ ಮತ್ತು ಶುಭ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿದ 'ಸುಳ್ಳಿ' ಆಲ್ಬಂ ಸಾಂಗ್ ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ವಿಭಿನ್ನ ರೀತಿಯ ಆಲ್ಬಮ್ ಸಾಂಗ್ ಇದಾಗಿದ್ದು, 8 ಭಾಷೆಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಲು ಲಭ್ಯವಿದೆ.
ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Posted On: 05 Jan 2025, 06:58 AM
ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಮಾಜಿ ನಾಗರಾಭಿವೃದ್ಧಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫರಾಸ್ಸಿನ ಮೇರೆಗೆ ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿರುವ ವಿಕ್ರಂ ಕಾಪುರವರನ್ನು ಅಧ್ಯಕ್ಷರನ್ನಾಗಿ, ಮೊಹಮ್ಮದ್ ಸಾದಿಕ್, ಲಕ್ಷ್ಮೀಶ ತಂತ್ರಿ ಮತ್ತು ಹರೀಶ್ ನಾಯಕ್ ರವರನ್ನು ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ. ನೇಮಕದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರ ಪ್ರಕಟಣೆಯು ತಿಳಿಸಿದೆ. ನೂತನ ಕಾಪು ನಗರ ಯೋಜನಾ ಪ್ರಾಧಿಕಾರದ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭವು ಜ. 6, ಸೋಮವಾರದಂದು ಪೂರ್ವಹ್ನ ಗಂಟೆ 10ಕ್ಕೆ ಕಾಪು ಪುರಸಭೆ ಕಟ್ಟಡದಲ್ಲಿರುವ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಜರುಗಲಿದೆ.
