ಉಚ್ಚಿಲ : ಯಶೋಭಿನಂದನ - ಸಹಕಾರ ರತ್ನ ಯಶ್ಪಾಲ್ ಸುವರ್ಣರಿಗೆ ಸನ್ಮಾನ ; ಮೊಗವೀರ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು : ಜಿ ಶಂಕರ್
ಉಚ್ಚಿಲ : ಮೀನುಗಾರಿಕಾ ಫೆಡರೇಷನ್ ಮತ್ತು ಸಹಕಾರಿ ಸಂಸ್ಥೆಯನ್ನು ಉತ್ತಮವಾಗಿ ನಿರ್ವಹಿಸಿದ ಯಶ್ಪಾಲ್ ಸುವರ್ಣರು ಇನ್ನು ರಾಜಕೀಯವಾಗಿ ಬೆಳೆಯಬೇಕಾಗಿದೆ. ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ದೊರಕಲಿ. ರಾಜಕೀಯ ಪಕ್ಷಗಳು ಮುಂದಿನ ದಿನಗಳಲ್ಲಿ ಮೊಗವೀರ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ನಾಡೋಜ ಜಿ ಶಂಕರ್ ಹೇಳಿದರು.
ಅವರು ಸಹಕಾರ ರತ್ನ ಯಶ್ಪಾಲ್ ಎ.ಸುವರ್ಣ ಅಭಿನಂದನಾ ಸಮಿತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ಪಾಲ್ ಎ. ಸುವರ್ಣ ಅವರಿಗೆ ಫೆ. 1ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಜರಗಿದ ಸಾರ್ವಜನಿಕ ಅಭಿನಂದನಾ ಸಮಾರಂಭ ಯಶೋಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೇದಿಕೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ಪಾಲ್ ಎ. ಸುವರ್ಣರನ್ನು ಸನ್ಮಾನಿಸಲಾಯಿತು.
ಉದ್ಯಮಿ ಆನಂದ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಆನೆಗುಂದಿ ಮಹಾಸಂಸ್ಥಾನ ಮಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಬೆಳಪು ದೇವಿ ಪ್ರಸಾದ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ ಮತ್ತಿತರರು ಉಪಸ್ಥಿತರಿದ್ದರು.
