ಪಕ್ಷದ ಕಾರ್ಯಕರ್ತರ ಸಂಘಟಿತ ಹೋರಾಟದಿಂದ ಗೆಲುವು : ಗುರ್ಮೆ ಸುರೇಶ್ ಶೆಟ್ಟಿ
ಕಾಪು : ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಹಿರಿಯರು ಮಾಡಿಕೊಟ್ಟ ಅವಕಾಶ, ಪಕ್ಷದ ಕಾರ್ಯಕರ್ತರ ಸಂಘಟಿತ ಹೋರಾಟ, ನಾಯಕರ ಸಂಕಲ್ಪದಿಂದ ಗೆಲುವಾಗಿದೆ ಎಂದು ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪುವಿನಲ್ಲಿ ಹೇಳಿದರು.
ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾಪುವಿನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದ್ದು, ಈಗಾಗಲೇ ಶಾಸಕರಾಗಿದ್ದ ಲಾಲಾಜಿ ಮೆಂಡನ್ ಅವರ ಮುಂದುವರಿದ ಕಾಮಗಾರಿಗಳನ್ನು ಮುಂದುವರಿಸಲಾಗುವುದು. ಹಲವಾರು ಯೋಜನೆಗಳಿವೆ ಆ ಮೂಲಕ ಕಾಪು ಕ್ಷೇತ್ರವನ್ನು ಸಾಮಾಜಿಕ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಮೇಲಕೆತ್ತುವ ಕೆಲಸವನ್ನು ಮಾಡುತ್ತೇನೆ ಎಂದರು.
ಸಮಾಜ ಸೇವೆ ಜೀವನದ ಒಂದು ಭಾಗ, ಶಾಸಕತ್ವದ ಮೂಲಕ ಜನಪರ ಕಾರ್ಯಗಳನ್ನು ಸಮಾಜಕ್ಕೆ ತಲುಪಲು ಸಾಧ್ಯವಿದೆ. ಅಧಿಕಾರಿಗಳು, ಸರ್ಕಾರದ ಮೇಲೆ ಒತ್ತಡ ಹಾಕಿ ಕೆಲಸ ಮಾಡುವ ಸೌಭಾಗ್ಯವನ್ನು ಭಗವಂತ ಒದಗಿಸಿದ್ದಾನೆ ಎಂದೂ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಈ ಸಂದರ್ಭ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಲಾಲಾಜಿ ಮೆಂಡನ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶಿಲ್ಪಾ ಸುವರ್ಣ, ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
