ಕ್ರಿಯೇಟಿವ್‌ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವ್‌-2023
Thumbnail
ಕಾರ್ಕಳ : ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನವೆಂಬರ್ 25 ರಂದು ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಖ್ಯಾತ ವಾಗ್ಮಿ ರಾಮಕೃಷ್ಣ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲರಾದ ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ ಜೀವನದ ಎಲ್ಲ ಹಂತಗಳಲ್ಲಿ ಹೋರಾಟ ಇರುತ್ತದೆ. ಕಠಿಣ ಪರಿಶ್ರಮ, ನಿರಂತರ ತೊಡಗಿಸಿಕೊಳ್ಳುವಿಕೆ, ಬಂದ ಸವಾಲುಗಳಿಗೆ ಎದೆಯೊಡ್ಡಿ ನಿಂತು ಎದುರಿಸಿ. ಆಗ ಯಶಸ್ಸು ಹಿಂಬಾಲಿಸಿ ಬರುತ್ತದೆ. ಸಾಧಕರ ಸಾಧನೆಗಳು ಕೇಳಲು ರೋಮಾಂಚನ ಉಂಟುಮಾಡುತ್ತದೆ. ಆದರೆ ಅದರ ಹಿಂದೆ ಬಹುದೊಡ್ಡ ತ್ಯಾಗವಿರುತ್ತದೆ. ಅದು ಕ್ರಿಯೇಟಿವ್‌ ನ ವಿದ್ಯಾರ್ಥಿಗಳಿಂದ ಸಾಧ್ಯವಾಗಲಿ ಎಂದು ಹಾರೈಸಿದರು. ಮತ್ತು ಕಳೆದ ವರ್ಷ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ “ಸಾಧಕ ಪುರಸ್ಕಾರ” ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್‌ ಕಾಲೇಜಿನಲ್ಲಿ ವಾಸಂಗ ಮಾಡಿ ರಾಜ್ಯದ ವಿವಿಧ ಪ್ರತಿಷ್ಠಿತ ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಸಂಸ್ಥಾಪಕರಲ್ಲೋರ್ವರಾದ ಡಾ. ಗಣನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರಿಯೇಟಿವ್‌ ಕಾಲೇಜು ಪ್ರಾರಂಭವಾದ ಮೂರೇ ವರ್ಷದ ಅವಧಿಯಲ್ಲಿ ಅನೇಕ ಹೊಸ ಸಾಧನೆಗಳನ್ನು ಮಾಡಿದೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಾಮಾಜಿಕವಾಗಿಯೂ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನವಚೇತನ ನೀಡುವ ಕಾರ್ಯ ವಿದ್ಯಾಸಂಸ್ಥೆಯ ವತಿಯಿಂದ ನಡೆಯುತ್ತಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌ ಅವರು ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಕಲೆ, ಸಂಸ್ಕೃತಿಯ ಮೂಲಕ ಶ್ರೀಮಂತ ಮೌಲ್ಯಗಳನ್ನು ತಿಳಿಸಲಾಗುತ್ತದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಾದ ವಿದ್ವಾನ್‌ ಗಣಪತಿ ಭಟ್‌, ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ. ಕೆ, ಅಶ್ವತ್‌ ಎಸ್.‌ ಎಲ್‌, ಹೆಚ್‌.ಕೆ.ಎಸ್‌ ನ ಪ್ರಾಂಶುಪಾಲರಾದ ವಿಮಲ್‌ ರಾಜ್.‌ ಜಿ, ಗಣಪತಿ ಕೆ. ಎಸ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಸ್ವಾಗತಿಸಿದರು. ಪ್ರಾಚಾರ್ಯರಾದ ವಿದ್ವಾನ್‌ ಗಣಪತಿ ಭಟ್‌ ಸಂಸ್ಥೆಯ ಸಾಧನೆಗಳನ್ನು ತಿಳಿಸುವ ವಾರ್ಷಿಕ ವರದಿ ವಾಚಿಸಿದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್‌ ಎಸ್‌. ಕೆ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವಿನಾಯಕ ಜೋಗ್‌ ವಂದಿಸಿದರು. “ಸಾಧಕರ ಸನ್ಮಾನ” ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
27 Nov 2023, 04:49 PM
Category: Kaup
Tags: