ಓಮನ್ ಬಿಲ್ಲವಾಸ್ - ಕ್ರೀಡಾಮಹೋತ್ಸವ 2024 ಸಂಪನ್ನ
ಮಸ್ಕತ್ : ಇಲ್ಲಿನ ಓಮನ್ ಬಿಲ್ಲವಾಸ್ ಸಂಘಟನೆಯಿಂದ ಒಂದು ದಿನದ ಹೊನಲು ಬೆಳಕಿನ ಕ್ರೀಡಾಕೂಟ ಸಂಘದ ಅಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಳ ಇವರ ನೇತೃತ್ವದಲ್ಲಿ ಶುಕ್ರವಾರ ಮಸ್ಕತ್ತಿನ ಅಲ್ ಹೈಲ್ ಕ್ರಿಕೆಟ್ ಮೈದಾನದಲ್ಲಿ
ಜರಗಿತು.
ಸಂಘಟನೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪಿ. ಬಿ. ಅಳಕೆ ಇವರ ಸ್ಮರಣಾರ್ಥ ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ಕ್ರಿಕೆಟ್ ಮತ್ತು ತ್ರೋಬಾಲ್. ಮಕ್ಕಳಿಗೆ, ಹಿರಿಯರಿಗೆ ವಿವಿದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪುರುಷರ ೮ ತಂಡಗಳು ಹಾಗೂ ಮಹಿಳೆಯರ ೪ ತಂಡಗಳು ಪ್ರಪ್ರಥಮವಾಗಿ ಆಯೋಜಿಸಲ್ಪಟ್ಟ 'Late Shri P. B. Alke Trophy 2024’ ಕ್ಕಾಗಿ ತಲಾ 5 ಓವರ್ ಗಳ ಲೀಗ್ ಮಾದರಿಯಲ್ಲಿ ರೋಚಕವಾಗಿ ಸೆಣಸಾಡಿದರು.
ಪುರುಷರ ತಂಡಗಳಾದ 'ಕುದ್ರೋಳಿ XI', 'ಬೆದ್ರ XI', 'ಬಿರ್ವ್ಹಾ ಸ್ಮ್ಯಾಶರ್ಸ್', 'ಜೇನುಗೂಡು', 'ಗೆಜ್ಜೆಗಿರಿ XI', 'ಕಟ್ಪಾಡಿ XI', 'ಸೋಹಾರ್ ವಾರಿಯರ್ಸ್', ಹಾಗೂ ‘ಕಾನ್ಸೆಪ್ಟ್ XI' ತಂಡಗಳು ಭಾಗವಹಿಸಿದ್ದವು. ಅಂತಿಮ ಸೆಣಸಾಟದಲ್ಲಿ ಸುಕುಮಾರ್ ಅಂಚನ್ ಪಾಂಗಾಳ ಇವರ ಮಾಲಕತ್ವದ ‘ಗೆಜ್ಜೆಗಿರಿ XI' ತಂಡವು ಸಂದೀಪ್ ಕರ್ಕೇರಾ ಮಾಲಕತ್ವದ 'ಬೆದ್ರ XI' ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯಭೇರಿಪಡೆದು ಪ್ರತಿಷ್ಠಿತ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು.
ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ‘ ಬಿರ್ವ್ಹಾ ಬೊಳ್ಳಿಲು’, ‘ಟೀಮ್ ಶಕ್ತಿ’, ‘ಸೋಹಾರ್ ವಾರಿಯರ್ಸ್' ಹಾಗೂ ‘ಟೀಮ್ ಭೈರವಿ’ ತಂಡಗಳು ಭಾಗವಹಿಸಿದ್ದವು. ಫೈನಲ್ ಹಣಾಹಣಿಯಲ್ಲಿ 'ಟೀಮ್ ಶಕ್ತಿ' ತಂಡವು 'ಟೀಮ್ ಭೈರವಿ' ವಿರುದ್ಧ 6 ವಿಕೆಟ್ ಗಳ ರೋಚಕ ಗೆಲುವಿನೊಂದಿಗೆ ಪ್ರಶಸ್ತಿಯನ್ನು ತನ್ನದಾಗಿಸಿತು.
ಇನ್ನೊಂದೊಡೆ ತ್ರೋಬಾಲ್ ಪಂದ್ಯದಲ್ಲಿ 'ಟೀಂ ಶಕ್ತಿ', 'ಬಿರ್ವ್ಹಾ ಬೊಳ್ಳಿಲು’ ಹಾಗೂ 'ಬ್ರಾಮರಿ' ತಂಡಗಳು ಭಾಗವಹಿಸಿದ್ದವು.
ಫೈನಲ್ ಮುಖಾಮುಖಿಯಲ್ಲಿ 'ಟೀಮ್ ಶಕ್ತಿ' ತಂಡವು ‘ಬಿರ್ವ್ಹಾ ಬೊಳ್ಳಿಲು’ ವಿರುದ್ಧ ಜಯಸಾಧಿಸಿ ಪ್ರಶಸ್ತಿಗಳಿಸುವಲ್ಲಿ ಸಫಲತೆಯನ್ನು ಕಂಡಿತು. ಉತ್ತಮ ಆಟಗಾರರಿಗೆ, ವಿಜೇತ ತಂಡಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ನವೀನ್ ಪೂಜಾರಿ, ಗಣೇಶ್ ಪೂಜಾರಿ ಮತ್ತು ನಿತೇಶ್ ತಂಡ ಊಟೋಪಚಾರದ ನೇತೃತ್ವವಹಿಸಿದ್ದರು.
ಈ ಕ್ರೀಡಾಮಹೋತ್ಸವದಲ್ಲಿ ಅಧ್ಯಕ್ಷ ಸುಜಿತ್ ಅಂಚನ್, ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳಾದ ಅಶೋಕ್ ಸುವರ್ಣ, ಎಸ್. ಕೆ. ಪೂಜಾರಿ, ಡಾ. ಅಂಚನ್ ಸಿ. ಕೆ, ಓಮನ್ ತುಳುವೆರ್ ಅಧ್ಯಕ್ಷ ರಮಾನಂದ ಶೆಟ್ಟಿ, ಮಸ್ಕತ್ ಮೊಗವೀರ್ಸ್ ಪ್ರತಿನಿಧಿ ಶ್ರೀಶ ಕಾಂಚನ್, ಕರಾವಳಿ ಫ್ರೆಂಡ್ಸ್ ನ ಹಿತೇಶ್, ಕಾರ್ಯಕಾರಿ ಸಮಿತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
