ಕಾಪು : ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ - ಬೋಳ ಸದಾಶಿವ ಶೆಟ್ಟಿ
ಕಾಪು : ಕಳೆದ 45 ವರ್ಷಗಳಿಂದ
ಸಹಕಾರ ಭಾರತಿ ದೇಶಾದ್ಯಂತ ಸಂಘಟನಾತ್ಮಕವಾಗಿ 28 ರಾಜ್ಯಗಳ 650 ಕ್ಕಿಂತಲೂ ಹೆಚ್ಚಿನ ಜಿಲ್ಲೆಗಳಲ್ಲಿ ನಿರಂತರ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಕ್ರಿಯವಾದ ತಾಲೂಕು ಘಟಕಗಳ ಮೂಲಕ ಗ್ರಾಮೀಣ ಭಾಗದ ಎಲ್ಲಾ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ನಿರಂತರ ಸಂಪರ್ಕದ ಮೂಲಕ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಕಾಯೋನ್ಮುಖವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ತಿಳಿಸಿದರು.
ಅವರು ಕಾಪು ಕೆವನ್ ಹೋಟೆಲ್ ಸಭಾಂಗಣದಲ್ಲಿ ಜರುಗಿದ ತಾಲೂಕು ಅಭ್ಯಾಸ ವರ್ಗದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ, ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಮಾತನಾಡಿ ಹೈನುಗಾರರು ಸೊಸೈಟಿಗಳಿಗೆ ಪೂರೈಸುವ ಹಾಲಿಗೆ ವೈಜ್ಞಾನಿಕ ದರ ನಿಗದಿ, ದುಬಾರಿಯಾಗುತ್ತಿರುವ ನಂದಿನಿ ಪಶು ಆಹಾರಕ್ಕೆ ಸಬ್ಸಿಡಿ, ಆರು ತಿಂಗಳಿನಿಂದ ಬಾಕಿ ಇರುವ ಹೈನುಗಾರರ ಸಬ್ಸಿಡಿ ಹಣದ ಬಿಡುಗಡೆ, ಪಶು ವೈದ್ಯರ ಕೊರತೆ ನೀಗಿಸಲು ಖಾಲಿ ಇರುವ ಹುದ್ದೆಗಳ ಭರ್ತಿ, ಹಾಲು ಉತ್ಪಾದಕ ಸಂಘಗಳನ್ನು ವಿವಿಧೋದ್ದೇಶ ಸಂಘಗಳಾಗಿ ಕಾರ್ಯನಿರ್ವಹಿಸಲು ಯೋಜನೆ, ಯಶಸ್ವಿ ಯೋಜನೆ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಪ್ರಮುಖ ಖಾಸಗಿ ಆಸ್ಪತ್ರೆಗಳ ಸೇರ್ಪಡೆ ಮೊದಲಾದ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಹೈನುಗಾರರ ಪರವಾಗಿ ಮುಂದಿನ ದಿನಗಳಲ್ಲಿ ಆಂದೋಲನ, ಚಳವಳಿ ಹಾಗೂ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕಾಪು ತಾಲೂಕು ಸಹಕಾರ ಭಾರತೀಯ ಕೋಶಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಲ್ಲಾರು ಅಧ್ಯಕ್ಷತೆ ವಹಿಸಿದ್ದರು.
ಕಾಪು ತಾಲೂಕಿನ ಪ್ಯಾಕ್ಸ್, ಹಾಲು, ಸೌಹಾರ್ದ ಮತ್ತು ಮೀನುಗಾರಿಕಾ ಸೊಸೈಟಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪ್ಯಾಕ್ಸ್ ಪ್ರಕೋಷ್ಠದ ಸಂಚಾಲಕರಾದ ಕುತ್ಯಾರು ಪ್ರಸಾದ್ ಶೆಟ್ಟಿಯವರು ಸ್ವಾಗತಿಸಿದರು.
ಅವರಾಲು ಹಾಲು ಉತ್ಪಾದಕರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಕೇಶವ ಮೋಯ್ಲಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮೂಡಬಿದ್ರೆಯ ಸಹಕಾರಿ ಆಡಳಿತ ಕಾಲೇಜಿನ ಉಪನ್ಯಾಸಕಿ ಬಿಂದು ಬಿ. ನಾಯರ್ ಸಹಕಾರಿ ವ್ಯವಸ್ಥಾಪನೆ ಎನ್ನುವ ವಿಚಾರದ ಬಗ್ಗೆ, ಸಹಕಾರ ಭಾರತಿ ಮೈಸೂರು ವಿಭಾಗದ ಸಂಘಟನಾ ಪ್ರಮುಖ ಮೋಹನ್ ಕುಮಾರ್ ಕುಂಬಳೇಕರ್ ಸಹಕಾರ ಭಾರತಿ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು.
