ಉಡುಪಿ : ಮತಗಟ್ಟೆಗಳಲ್ಲಿ ಮಾಧ್ಯಮದವರಿಗಾದ ತೊಂದರೆ ಕುರಿತು ಎಸ್ಪಿಗೆ ಮನವಿ
Thumbnail
ಉಡುಪಿ : ಲೋಕ ಸಭಾ ಚುನಾವಣೆಯ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗಾದ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಅರುಣ್ ಕೆ. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಮನವಿ ಸಲ್ಲಿಸಲಾಯಿತು. ಈ ಬಾರಿಯ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಸಂದರ್ಭ ಮತಗಟ್ಟೆಗೆ ತೆರಳಿ ವಿಡಿಯೋ ಚಿತ್ರೀಕರಣ ಹಾಗೂ ಫೋಟೋಗ್ರಫಿ ಮಾಡಲು ಮಾಧ್ಯಮದವರಿಗೆ ಚುನಾವಣಾ ಆಯೋಗ ಪಾಸ್ ನೀಡಿತ್ತು. ಅದರಂತೆ ಸೀಮಿತ ಮತಗಟ್ಟೆಗಳಲ್ಲಿ ಸಲಬ್ರೆಟಿಗಳು ಮತದಾನ ಮಾಡುವ ಸಂದರ್ಭ ಕ್ಯಾಮೆರಾಮೆನ್‌ಗಳು ಹಾಗೂ ಫೋಟೋಗ್ರಾಫರ್‌ಗಳು ಚಿತ್ರೀಕರಣ/ ಫೋಟೋ ತೆಗೆಯಲು ಮುಂದಾಗಿದ್ದು, ಈ ವೇಳೆ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮಾಧ್ಯಮದವರಿಗೆ ಅಡ್ಡಿ ಪಡಿಸಿದ್ದಾರೆ. ಗ್ರಾಮೀಣ ಪ್ರದೇಶಗಳ ಪತ್ರಕರ್ತರಿಗೆ ಸರತಿ ಸಾಲಿನಲ್ಲಿ ನಿಂತ ಮತದಾರರ ಫೋಟೋ ತೆಗೆಯಲು ಕೂಡ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಈ ಬಗ್ಗೆ ಪರಿಶೀಲಿಸಿ ಮುಂದೆ ಈ ರೀತಿ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಜೂ.4ರಂದು ನಡೆಯುವ ಮತ ಎಣಿಕೆಗೆ ಸಂಬಂಧಿಸಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ ಆಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಇದಕ್ಕೆ ಸ್ಪಂದಿಸಿದ ಎಸ್ಪಿ ಡಾ.ಕೆ.ಅರುಣ್, ಈ ವಿಚಾರವನ್ನು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಮಾಹಿತಿ ನೀಡಬೇಕಾಗಿದ್ದು, ಮುಂದೆ ಈ ರೀತಿಯಾಗದಂತೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಮತ್ತು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಉಮೇಶ್ ಮಾರ್ಪಳ್ಳಿ, ರಹೀಂ ಉಜಿರೆ, ಪ್ರಮೋದ್ ಸುವರ್ಣ, ಜಯಕರ ಸುವರ್ಣ, ಮೈಕಲ್ ರೋಡ್ರಿಗಸ್, ಹರೀಶ್ ಕುಂದರ್, ಅಜಿತ್ ಆರಾಡಿ, ಪತ್ರಕರ್ತರಾದ ಶಶಿಧರ್ ಮಾಸ್ತಿಬೈಲು, ದೀಪಕ್ ಜೈನ್, ಪುಂಡಲೀಕ ಮರಾಠ, ಹರೀಶ್ ಪಾಲೇಚಾರ್‌, ಚೇತನ್ ಮಟಪಾಡಿ, ಪರೀಕ್ಷಿತ್ ಶೇಟ್, ಜಸ್ಟಿನ್ ಡಿಸಿಲ್ವ, ರಕ್ಷಿತ್ ಬೆಳಪು, ನಾಗರಾಜ್ ರಾವ್, ಅವಿನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
14 May 2024, 04:01 PM
Category: Kaup
Tags: