ಉಡುಪಿ : ಮನೆಯೇ ಗ್ರಂಥಾಲಯ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ
Thumbnail
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ "ಮನೆಯೇ ಗ್ರಂಥಾಲಯ" ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ರೋಗಿಗಳ ಮನಸ್ಥಿತಿಗೆ ಅನುಗುಣವಾಗಿ ವಿವಿಧ ರೀತಿಯ ಆರೋಗ್ಯಕ್ಕೆ, ಸಮಾಜಕ್ಕೆ, ಪರಿಸರಕ್ಕೆ ಸಂಬಂಧಿಸಿದ ವಿವಿದ ಬಗೆಯ ಪುಸ್ತಕಗಳು ಲಭ್ಯವಾಗಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರನ್ನು ಕ. ಸಾ. ಪ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು. ಉಡುಪಿ ಕರಾವಳಿ ಐ ಎಂ ಎ ಇದರ ಅಧ್ಯಕ್ಷೆ ಡಾ. ರಾಜಲಕ್ಷ್ಮೀ, ಕೋಶಾಧಿಕಾರಿ ಡಾ. ಆಮ್ನಾ ಹೆಗ್ಡೆ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ, ಕ ಸಾ ಪ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಪದ್ಮಾಸಿನಿ, ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಸಂಧ್ಯಾ ಶೆಣೈ, ಸತೀಶ್ ಕೊಡವೂರು, ಲಕ್ಷ್ಮಿ ಹರೀಶ್ಚಂದ್ರ, ಪಂಚಮಿ, ಹಫೀಜ್ ರಹೆಮಾನ್, ಸುಭೋದ್, ಶಶಿಕಾಂತ್ ಶೆಟ್ಟಿ, ಪ್ರಭಾಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.
16 Jul 2024, 11:12 AM
Category: Kaup
Tags: