ಕಾಪು ಮಾರಿಯಮ್ಮ ಕ್ಷೇತ್ರ ಭೇಟಿಯಾಗಿ ಘಂಟಾನಾದ ಸೇವೆ ಸಲ್ಲಿಸಿದ ನಟಿ ರಕ್ಷಿತಾ
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ ರಕ್ಷಿತಾ ಪ್ರೇಮ್ ಅವರು ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಗೌರವಿಸಿ, ಅನುಗ್ರಹ ಪ್ರಸಾದ ನೀಡಿದರು.
ರಕ್ಷಿತಾ ಪ್ರೇಮ್ ಅನ್ನದಾನ ಸೇವೆಯ ಜೊತೆಗೆ ಇಷ್ಟಾರ್ಥ ಸಿದ್ಧಿಗಾಗಿ ಘಂಟಾನಾದ ಸೇವೆಯನ್ನು ಸಲ್ಲಿಸಿದರು.
ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ವಾರವಷ್ಟೇ ನನ್ನ ತಾಯಿ ಇಲ್ಲಿಗೆ ಬಂದು ಹರಕೆ ಹೊತ್ತುಕೊಂಡಿದ್ದರು. ನಾನು ಕೂಡಾ ಬರಬೇಕೆಂದು ಅಂದುಕೊಂಡಿದ್ದೆ. ಆದರೆ ಅಮ್ಮ ನನ್ನನ್ನು ಇಷ್ಟು ಬೇಗ ಕರೆಸಿಕೊಳ್ಳುತ್ತಾಳೆ ಅಂದುಕೊಂಡಿರಲಿಲ್ಲ. ದೇವಸ್ಥಾನ ಬಹಳ ಸುಂದರವಾಗಿ ಮೂಡಿಬಂದಿದೆ ಎಂದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ, ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಚಾರ ಸಮಿತಿಯ ಸಂಚಾಲಕ ಜಯರಾಮ್ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
