ಎಬಿವಿಪಿ ಉಡುಪಿ : ನಿಟ್ಟೆ ಭಾಗದಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಮನವಿ
Thumbnail
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ನಿಟ್ಟೆ ಭಾಗದಲ್ಲಿ ಅಸಮಪರ್ಕ ಬಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು. ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿಕೊಂಡು ಪ್ರಯಾಣಿಸುತ್ತಿದ್ದಾರೆ. ಈ ಮಾರ್ಗದಲ್ಲಿ ವಿಪರೀತವಾದ ಬಸ್ ಸಮಸ್ಯೆಯಿದ್ದು ಇದನ್ನು ತಕ್ಷಣದಲ್ಲಿ ಪರಿಹರಿಸುವ ಅವಶ್ಯಕತೆಯಿದೆ. ಪ್ರತಿನಿತ್ಯ ಬಸ್ಸಿನ ಫೂಟ್ ಬೋರ್ಡ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಪ್ರಯಾಣಿಸುತ್ತಿದ್ದು ಪರದಾಡುವಂತಾಗಿದೆ. ಈಗಾಗಲೇ ಈ ಮಾರ್ಗದಲ್ಲಿ ಸರ್ಕಾರಿ ಬಸ್ ಮಂಜೂರಾಗಿದ್ದರು ಖಾಸಗಿ ಬಸ್ ಮಾಲೀಕರು ಹೂಡಿದ ದಾವೆಯಿಂದಾಗಿ ಅದೂ ಇಲ್ಲದಂತಾಗಿದೆ ಮತ್ತು ಖಾಸಗಿ ಬಸ್ ಗಳು ಅಗತ್ಯಕ್ಕೆ ಬೇಕಾದಷ್ಟು ಇಲ್ಲದೆ ಇರುವುದರಿಂದ ಸಮಸ್ಯೆಯಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಒಬ್ಬ ವಿದ್ಯಾರ್ಥಿ ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸುವ ವೇಳೆ ಕಾಲು ಜಾರಿ ಬಿದ್ದು, ಏನು ಹೆಚ್ಚಿನ ಅಪಾಯವಾಗದೆ ಇರುವುದು ನಾವು ಗಮನಿಸಬೇಕು. ಮತ್ತೊಮ್ಮೆ ದೊಡ್ಡ ಅಪಾಯ ಆಗುವ ಮುಂಚೆ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಜನಿತ್ ಶೆಟ್ಟಿ ಎನ್ನುವ ವಿದ್ಯಾರ್ಥಿಯ ದುರ್ಮರಣದ ನಂತರ ಅನೇಕ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ ಪೊಲೀಸ್ ಇಲಾಖೆ ಬಸ್ಸುಗಳಲ್ಲಿ ಕಡ್ಡಾಯವಾಗಿ ಬಾಗಿಲನ್ನು ಅಳವಡಿಸಲು ಸೂಚಿಸುವುದಾಗಿ ತಿಳಿಸಿದ್ದರು ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಯಾವುದೇ ರೀತಿಯ ಪ್ರಯತ್ನ ನಡೆಯದೆ ಇರುವುದು ಶೋಚನೀಯ. ಹಾಗಾಗಿ ತಕ್ಷಣ ಈ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ಈ ಸಂದರ್ಭದಲ್ಲಿ ವಿವಿಧ ಮಾರ್ಗಗಳಲ್ಲಿ ನಿಟ್ಟೆಗೆ ಸಂಪರ್ಕಿಸುವ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ, ವಿಶೇಷವಾಗಿ ಸರಕಾರಿ ಬಸ್ಸುಗಳನ್ನು ಸೇರಿಸುವುದು, ಬಸ್ಸಿನಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಕೊಂಡೊಯ್ಯದಂತೆ ನೋಡಿಕೊಳ್ಳುವುದು ಎಲ್ಲಾ ಬಸ್ಸುಗಳಲ್ಲಿ ಕಡ್ಡಾಯವಾಗಿ ಬಾಗಿಲನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು. ಬಸ್ಸಿನ ವೇಗವನ್ನು ನಿಗ್ರಹದಲ್ಲಿ ಇಡಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶ್ರೇಯಸ್ ಅಂಚನ್ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
29 Aug 2025, 02:01 PM
Category: Kaup
Tags: