ಉಡುಪಿ : ಸರಕಾರಿ ಜಾಗ ಅಕ್ರಮ ಒತ್ತುವರಿ - ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ
Thumbnail

ಉಡುಪಿ : ಹೊಸುರು ಗ್ರಾಮದ ಸರ್ವೆ ನಂ. 141ರಲ್ಲಿ ಸರಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡುತ್ತಿರುವ ಪ್ರಕರಣದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ಬಳಕೆ ಆರೋಪಗಳು ಕೇಳಿಬಂದಿವೆ.
ಈ ಬಗ್ಗೆ ಹೊಸಕಿರಣ ನ್ಯೂಸ್ ಸಂಪಾದಕರಾದ ಕಿರಣ್ ಪೂಜಾರಿ ಅವರು ಉಪಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

 ಗಣಪು ಶೇಡ್ತಿ ಎಂಬವರು ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಮಾಡುತ್ತಿದ್ದರೂ ಸಂಬಂಧಿತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ದೂರು ಪ್ರಕಾರ, ಈ ಅಕ್ರಮ ನಿರ್ಮಾಣವನ್ನು ನಿಲ್ಲಿಸುವಂತೆ ಹಲವು ಬಾರಿ ಲಿಖಿತ ಹಾಗೂ ದೂರವಾಣಿ ಮೂಲಕ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕೇವಲ ನೋಟಿಸ್ ನೀಡುವುದರಲ್ಲೇ ಸೀಮಿತಗೊಂಡಿದ್ದು, ಕಾನೂನು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಅಲ್ಲದೆ, ಕಂದಾಯ ಕಾಯ್ದೆ 192(A) ಅಡಿಯಲ್ಲಿ ಯಾವುದೇ ಪ್ರಕರಣ ದಾಖಲಿಸದಿರುವುದು ಪ್ರಶ್ನೆಗೆ ಗ್ರಾಸವಾಗಿದೆ.
ಇದೇ ವೇಳೆ, ಮಾನ್ಯ ಉಚ್ಚ ನ್ಯಾಯಾಲಯದಿಂದ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದ್ದರೂ, ಅಧಿಕಾರಿಗಳು ನ್ಯಾಯಾಲಯಕ್ಕೆ ಅಗತ್ಯ ವರದಿ ಸಲ್ಲಿಸದಿರುವುದು ಗಂಭೀರ ವಿಷಯವಾಗಿದೆ. ಇದರಿಂದ ಅಕ್ರಮ ನಿರ್ಮಾಣ ಕಾರ್ಯ ಈಗ ಮುಕ್ತಾಯ ಹಂತಕ್ಕೆ ತಲುಪಿದೆ ಎಂದು ದೂರುದಾರರು ತಿಳಿಸಿದ್ದಾರೆ.
ಮತ್ತೊಂದು ಅಂಶವಾಗಿ, ಮಾರ್ಚ್ 31, 2026ರಂದು ಸರಕಾರಿ ಜಾಗದಿಂದ ಕೆಂಪು ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಲಾಗಿದೆ.

ಸ್ಥಳೀಯ ಅಧಿಕಾರಿಗಳಾದ ಗ್ರಾಮ ಲೆಕ್ಕಿಗ (V.A), ರಾಜಸ್ವ ನಿರೀಕ್ಷಕ (R.I) ಹಾಗೂ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ. ಅಲ್ಲದೆ, ರಾಜಕೀಯ ಒತ್ತಡದ ಕಾರಣದಿಂದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬುದೂ ದೂರುದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪಲೋಕಾಯುಕ್ತರನ್ನು ಮನವಿ ಮಾಡಲಾಗಿದೆ.

08 Apr 2026, 09:49 AM
Category: Kaup
Tags: