ಬಿಡದಿ ಹಾರೋಹಳ್ಳಿ ಭೂಸ್ವಾಧೀನ ಯೋಜನೆಗೆ ಉಡುಪಿ ಜಿಲ್ಲಾ ಜೆಡಿಎಸ್ ವಿರೋಧ
Thumbnail

ಕಾಪು : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. 
  ಕಾಪು ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮೊದಲ ಹಂತದಲ್ಲಿ ಸುಮಾರು 498. 34 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯಿಂದ 755 ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿದ್ದು, ಇವರಲ್ಲಿ ಬಹುಪಾಲು ಸಣ್ಣ ಮತ್ತು ಅತಿಸಣ್ಣ ರೈತರು ಎಂದು ಆರೋಪಿಸಲಾಗಿದೆ.

   1 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ನೂರಾರು ರೈತರು ತಮ್ಮ ಜೀವನೋಪಾಯ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಮುಂದಿನ ಹಂತದಲ್ಲಿ 7,500 ಕ್ಕೂ ಹೆಚ್ಚು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ರೈತರು ಭೂಮಿ ಬಿಟ್ಟುಕೊಡಲು ಸಿದ್ಧರಿಲ್ಲದಿದ್ದರೂ ಸರ್ಕಾರ ಬಲವಂತದ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

  ಈ ಪ್ರದೇಶದಲ್ಲಿ ಹೈನುಗಾರಿಕೆ, ಕೃಷಿ, ರೇಷ್ಮೆ ಹುಳು ಸಾಕಾಣಿಕೆ ಹಾಗೂ ತೋಟಗಾರಿಕೆ ಪ್ರಮುಖ ಜೀವನಾಧಾರವಾಗಿದ್ದು, ಭೂಸ್ವಾಧೀನದಿಂದ ಇವುಗಳಿಗೆ ಭಾರೀ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ ತಿಂಗಳು ಲಕ್ಷಾಂತರ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವ ಹೈನುಗಾರಿಕೆ ವಲಯದ ಮೇಲೂ ಪರಿಣಾಮ ಉಂಟಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

  ಇದೇ ತಿಂಗಳು ಯೋಜನೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಉಡುಪಿ ಜಿಲ್ಲಾ ಜೆಡಿಎಸ್ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಅವರು ಹೇಳಿದರು. 

   ಈ ಕುರಿತು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಹಾಗೂ ಸರ್ಕಾರದ ಗಮನಕ್ಕೆ ರೈತರ ಆಕ್ಷೇಪಣೆಗಳನ್ನು ತಲುಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

 ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾರ್ಯದರ್ಶಿ ಜಯರಾಮ್ ಆಚಾರ್ಯ, ಉಡುಪಿ ಘಟಕದ ಅಧ್ಯಕ್ಷ ಜಯಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ, ದೇವರಾಜ್, ಬಿರ್ತಿ ಗಂಗಾಧರ ಭಂಡಾರಿ, ಸುಧಾಕರ ಶೆಟ್ಟಿ, ಅಶ್ರಫ್, ವೆಂಕಟೇಶ್ ಉಪಸ್ಥಿತರಿದ್ದರು.

20 Jun 2026, 08:41 AM
Category: Kaup
Tags: