ಪಡುಬಿದ್ರಿ : ಆಟಿದ ಲೇಸ್ ಕಾರ್ಯಕ್ರಮ
Posted On:
25-07-2021 06:51PM
ಪಡುಬಿದ್ರಿ : ನಮ್ಮ ಹಿರಿಯರ ಆಚರಣೆ, ಸಂಪ್ರದಾಯಗಳನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಾದ ಅನಿವಾರ್ಯತೆ ಇದೆ. ಇದನ್ನು ತಾಯಂದಿರು ತಮ್ಮ ಮಕ್ಕಳಿಗೆ ತಿಳಿಸಬೇಕಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹೇಳಿದರು.
ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಆಶ್ರಯದಲ್ಲಿ ಜರಗಿದ ಆಟಿದ ಲೇಸ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಆಟಿದ ವನಸ್ : ಸಂಘದ ಮಹಿಳಾ ಮಂಡಳಿ ಮತ್ತು ಕಲ್ಪತರು ಸ್ವಸಹಾಯ ಗುಂಪಿನ ಸದಸ್ಯೆಯರಿಂದ ತಯಾರಿಸಿದ ಆಟಿ ವಿಶೇಷತೆಯ ಸುಮಾರು 20ಕ್ಕೂ ಅಧಿಕ ಬಗೆಯ ಆಹಾರ ಪದಾರ್ಥಗಳನ್ನು ಉಣಬಡಿಸಲಾಯಿತು.
ಇದೇ ಸಂದರ್ಭ ಮಹಿಳೆಯರಿಗಾಗಿ ಆಟ ಮತ್ತು ಸರಸ್ವತಿ ಕಲಾ ತಂಡದಿಂದ ನೃತ್ಯ ವೈವಿಧ್ಯ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ನಾರಾಯಣಗುರು ಮಹಿಳಾ ಮಂಡಳಿಯ ಅಧ್ಯಕ್ಷರಾದ ಸುಚರಿತ ಎಲ್. ಅಮೀನ್, ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಮಹಿಳಾ ಮಂಡಳಿಯ ಕಾರ್ಯದರ್ಶಿ ರೋಹಿಣಿ ಆನಂದ, ಮಹಿಳಾ ಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್, ನಾರಾಯಣಗುರು ಸೇವಾದಳದ ದಳಪತಿ ಯೋಗೀಶ್ ಪೂಜಾರಿ, ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು, ವಿವಿಧ ಸ್ವಸಹಾಯ ಗುಂಪಿನ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.