ಎಸ್. ಎಮ್. ಹೆಗಡೆ ಮತ್ತು ಕೆ. ಎಲ್. ಕುಂಡಂತಾಯರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ
Posted On:
29-04-2022 01:58PM
ಉಡುಪಿ : ಇಲ್ಲಿನ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಹಿರಿಯ ಅರ್ಥಧಾರಿ ಎಸ್. ಎಮ್. ಹೆಗಡೆ ಹಾಗೂ ಅರ್ಥಧಾರಿ, ಲೇಖಕ, ಚಿಂತಕ ಕೆ. ಎಲ್. ಕುಂಡಂತಾಯ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 23 ರಿಂದ ಆರಂಭವಾಗಲಿದ್ದು, ಮೇ 29 ಭಾನುವಾರ ಸಂಜೆ 5 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಎಸ್. ಎಮ್. ಹೆಗಡೆ ಮುಡಾರೆಯವರು ಪ್ರಶಸ್ತಿಗೆ ಆಯ್ಕೆಯಾದ ನಂತರ ನಮ್ಮನ್ನಗಲಿದ್ದು ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು.
ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.